ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಿದ್ಯಾರ್ಥಿಗಳಲ್ಲಿ ಶಿಸ್ತು, ಶ್ರದ್ಧೆ, ಪ್ರಾಮಾಣಿಕ ಪ್ರಯತ್ನ, ಸಹಬಾಳ್ವೆ, ಸೇವಾ ಮನೋಭಾವನೆ, ಭ್ರಾತೃತ್ವ ಭಾವನೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅತ್ಯವಶ್ಯವಾಗಿದೆ ಎಂದು ಅಗಡಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ ಅಭಿಪ್ರಾಯಪಟ್ಟರು.
ಅವರು ಶನಿವಾರ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮ ಶತಮಾನೋತ್ಸವದ ಅಂಗವಾಗಿ ವಿಶ್ವವಿದ್ಯಾಲಯ, ಶಾಲಾ-ಕಾಲೇಜುಗಳಲ್ಲಿ ಪ್ರಾರಂಭಿಸಿದ ಎನ್ಎಸ್ಎಸ್ ಘಟಕಗಳಲ್ಲಿ ಇಂದು ಲಕ್ಷಾಂತರ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಎನ್ಎಸ್ಎಸ್ ಸೇವಾ ಮನೋಭಾವನೆಯನ್ನು ಬೆಳೆಸುವದರ ಜೊತೆಗೆ ವೇಳೆಯ ಮಹತ್ವ, ಪರಸ್ಪರ ಸಹಾಯ-ಸಹಕಾರದ ಗುಣಗಳನ್ನು ಬೆಳೆಸಿಕೊಳ್ಳುವಂತೆ ಮಾಡುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದಿಂದ ಅನೇಕ ಹಳ್ಳಿಗಳಲ್ಲಿ ಹಾಗೂ ಸ್ಥಳೀಯವಾಗಿ ಸ್ವಚ್ಛತೆ, ಪರಿಸರ ಕಲ್ಪನೆ, ದುಶ್ಚಟಗಳಿಂದ ಆಗುವ ಕೆಟ್ಟ ಪರಿಣಾಮಗಳು, ಆರೋಗ್ಯ ಶಿಬಿರ ಸೇರಿದಂತೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಇದರಲ್ಲಿ ಪ್ರಾಮಾಣಿಕತೆಯಿಂದ ಕಾರ್ಯ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್ಎಸ್ಎಸ್ ಸೇರಲು ಮುಂದಾಗಿ ಎಂದು ಕರೆ ನೀಡಿದರು.
ಶನಿವಾರ ಸೇವಾ ದಿನಾಚರಣೆ ಅಂಗವಾಗಿ ಬೆಳಿಗ್ಗೆ ಕಾಲೇಜಿನ ಆವರಣದಲ್ಲಿ ಎನ್ಎಸ್ಎಸ್ ದ್ವಜಾರೋಹಣ ನೆರವೇರಿಸಲಾಯಿತು. ಆವರಣದಲ್ಲಿ ಸಸಿಗಳನ್ನು ನೆಡಲಾಯಿತು ಅಲ್ಲದೇ ಎನ್ಎಸ್ಎಸ್ ವಿದ್ಯಾರ್ಥಿಗಳು ಉದ್ಯಾನವನದ ಸಿಬ್ಬಂದಿ ವರ್ಗಕ್ಕೆ ಟಿ-ಶರ್ಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಆಡಳಿತಾಧಿಕಾರಿ ಪ್ರೊ. ವಿಕ್ರಂ ಶಿರೋಳ, ಎನ್ಎಸ್ಎಸ್ ಅಧಿಕಾರಿ ಪ್ರೊ. ಸೋಮಶೇಖರ ಕೆರಿಮನಿ, ಪ್ರೊ. ಷಣ್ಮುಖ, ಪ್ರೊ. ಕಿರಣ ಕೋತಿನ, ಪ್ರೊ. ಮಂಜುನಾಥ, ಪ್ರೊ. ಸೋಮಶೇಖರ ನವಲಗುಂದ, ಪ್ರೊ. ರವಿ ದುರಗಣ್ಣವರ, ಪ್ರೊ. ಅನಿಲ ನಾರಾಯಣಪುರ, ರಮೇಶರೆಡ್ಡಿ ಮುಂತಾದವರು ಇದ್ದರು.


