ನೆಲಮಂಗಲ: ನಿಂತಿದ್ದ ಲಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ 26 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ನಡೆದಿದೆ.
ಮೃತರನ್ನು ಯಡಿಯೂರು ನಿವಾಸಿ ದರ್ಶನ್ (26) ಎಂದು ಗುರುತಿಸಲಾಗಿದೆ. ತಾಯಿ ಇಲ್ಲದ ಕುಟುಂಬದಲ್ಲಿ ತಂದೆ ವೆಂಕಟೇಶ್ ಅವರೊಂದಿಗೆ ವಾಸವಿದ್ದ ದರ್ಶನ್ ರೈತನಾಗಿ ಕೆಲಸ ಮಾಡುತ್ತಿದ್ದರು. ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಕಳೆದ 5–6 ತಿಂಗಳಿಂದ ಡೈರಿಗೆ ಹಾಲು ಹಾಕುವ ಕೆಲಸವನ್ನೂ ಮಾಡುತ್ತಿದ್ದರು ಎನ್ನಲಾಗಿದೆ.
ಗುರುವಾರ ಬೆಳಗಿನ ಜಾವ ನೆಲಮಂಗಲಕ್ಕೆ ಹಾಲು ಹಾಕಿ ಓಮಿನಿ ಕಾರಿನಲ್ಲಿ ಯಡಿಯೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಸುಮಾರು 4.30ರ ಸಮಯದಲ್ಲಿ ಯಂಟಗಾನಹಳ್ಳಿ ಬಳಿ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದರ್ಶನ್ ಅವರಿಗೆ ಸಂಬಂಧಿಕರಲ್ಲಿಯೇ ಯುವತಿಯನ್ನು ನೋಡಿ ಮದುವೆ ಮಾತುಕತೆ ಕೂಡ ನಡೆದಿತ್ತು ಎನ್ನಲಾಗಿದೆ. ಆದರೆ ಮದುವೆ ನಿಶ್ಚಯವಾಗುವ ಮುನ್ನವೇ ದುರಂತ ಸಂಭವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕುಟುಂಬಕ್ಕೆ ಆಧಾರವಾಗಿದ್ದ ದರ್ಶನ್ ಅವರನ್ನು ಕಳೆದುಕೊಂಡು ಮನೆಯ ದೀಪವೇ ಆರಿದಂತಾಗಿದೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇನ್ನು ಹೆದ್ದಾರಿ ಬದಿಯಲ್ಲಿ ರಾತ್ರಿ ವೇಳೆ ಲಾರಿ ಸೇರಿದಂತೆ ಭಾರೀ ವಾಹನಗಳನ್ನು ನಿಲ್ಲಿಸುವುದರಿಂದ ಇಂತಹ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆದ್ದಾರಿ ಬದಿಯಲ್ಲಿ ವಾಹನಗಳ ಪಾರ್ಕಿಂಗ್ ನಿಯಂತ್ರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



