ಬೆಂಗಳೂರು:- ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓಮ್ನಿ ಕಾರುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ ಖದೀಮರ ಗ್ಯಾಂಗ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಉಮೇಶ್, ತಬ್ರೇಜ್, ಜಬೀರ್ ಖಾನ್ ಎಂದು ಗುರುತಿಸಲಾಗಿದೆ. ಕಳೆದ ಮೇ ತಿಂಗಳಿನಲ್ಲಿ ಆರೋಪಿಗಳು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಓಮ್ನಿ ಕಾರನ್ನು ಕಳ್ಳತನ ಮಾಡಿದ್ದರು. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಪೊಲೀಸರು 12 ಲಕ್ಷ ರೂ. ಮೌಲ್ಯದ 6 ಓಮ್ನಿ ಕಾರುಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂವರನ್ನು 2020ರಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಕಳ್ಳತನ ಕೇಸ್ನಲ್ಲಿ ಬಂಧಿಸಲಾಗಿತ್ತು. ಜೈಲಿಂದ ಹೊರಬಂದ ಮೇಲೆ ಟ್ರ್ಯಾಕ್ಟರ್ ಬಿಟ್ಟು ಕಾರು ಕಳ್ಳತನಕ್ಕಿಳಿದಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.