ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಪ್ರಮುಖ ಸ್ಥಳಗಳನ್ನು ಭದ್ರತೆಯ ದೃಷ್ಟಿಯಿಂದ ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಬಾಹ್ಯ ದಾಳಿ ಹಾಗೂ ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಶುಕ್ರವಾರ ಬೆಳಿಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾಡಳಿತ, ಮೆ|| ಹೆಚ್.ಪಿ.ಸಿ.ಎಲ್., ಎಲ್.ಪಿ.ಜಿ ಕಂಪನಿ ಸಹಯೋಗದಲ್ಲಿ ಸಾರ್ವಜನಿಕರ ತಿಳುವಳಿಕೆಗಾಗಿ `ಆಪರೇಶನ್ ಅಭ್ಯಾಸ್’ ಅಣಕು ಪ್ರದರ್ಶನ ಕಾರ್ಯಕ್ರಮದ ನೇತೃತ್ವ ವಹಿಸಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಮುಖ್ಯ ಸ್ಥಳಗಳಾದ ರೈಲು ನಿಲ್ದಾಣ, ಬಸ್ನಿಲ್ದಾಣ, ವಿಮಾನ ನಿಲ್ದಾಣ ಹಾಗೂ ಪೆಟ್ರೊಲಿಯಂ ದಾಸ್ತಾನು ಸಂಗ್ರಹಾರ (ಡಿಪೊ)ಗಳು ಇವೆ. ಯಾವುದೇ ಅವಘಡ ಸಂಭವಿಸಿದಾಗ ತುರ್ತು ಚಿಕಿತ್ಸೆಗೆ 7 ಸರಕಾರಿ, 31 ಖಾಸಗಿ ಆಸ್ಪತ್ರೆಗಳಿದ್ದು, ಒಟ್ಟು 2841 ಬೆಡ್ಗಳ ಸೌಲಭ್ಯವಿದೆ. 1740 ಆಕ್ಸಿಜನ್ ಬೆಡ್, 399 ಐಸಿಯು ಬೆಡ್ ಹಾಗೂ 207 ವೆಂಟಿಲೇಟರ್ ಸೌಲಭ್ಯದ ಬೆಡ್ಗಳಿವೆ ಎಂದು ತಿಳಿಸಿದರು.
ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿ: 0836-2445308, 2441077, ಪೊಲೀಸ್ ಆಯುಕ್ತ ಕಚೇರಿ ಸಹಾಯವಾಣಿ ಸಂಖ್ಯೆ: 0836-2233555 ಹಾಗೂ ಧಾರವಾಡ ಪೊಲೀಸ್ ಅಧೀಕ್ಷಕರ ಕಚೇರಿ ಸಹಾಯವಾಣಿ ಸಂಖ್ಯೆ: 0836-2233201ಗೆ ಕರೆ ಮಾಡಬಹುದು ಎಂದು ತಿಳಿಸಿದರು.
ದೇಶದಲ್ಲಿ ತುರ್ತು ಪರಿಸ್ಥಿತಿಯ ಬಂದಾಗ ಸಾರ್ವಜನಿಕರಿಗೆ ಮತ್ತು ಪ್ರಾಣಿ ಪಕ್ಷಿಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಅಣಕು ಪ್ರದರ್ಶನವನ್ನು ಕೈಗೊಂಡಿದ್ದು, ಅದರಲ್ಲಿ ಅನಿಲ ಸ್ಪೋಟವಾದಾಗ ಸಿಬ್ಬಂದಿಯವರು ಕಾರ್ಯಾಚರಣೆ ಮಾಡುವುದನ್ನು ಮತ್ತು ಅಗ್ನಿಶಾಮಕದಳದವರು ಅನಿಲ ಸೋರಿಕೆಯಾದಾಗ ತಮ್ಮ ಕೆಲಸವನ್ನು ಕಾರ್ಯರೂಪಕ್ಕೆ ತರುವುದನ್ನು ಪ್ರದರ್ಶನದಲ್ಲಿ ತೊರಿಸಿದರು.
ಪೊಲೀಸ್ ಇಲಾಖೆಯಲ್ಲಿ ಹೋಂ ಗಾರ್ಡ್, ನಾಗರಿಕ ರಕ್ಷಣಾ ಘಟಕ ಮತ್ತು ಅಗ್ನಿಶಾಮಕದಳ ಹೇಗೆ ಸಾರ್ವಜನಿಕರನ್ನು ಮತ್ತು ಪ್ರಾಣಿ, ಪಕ್ಷಿಗಳನ್ನು ರಕ್ಷಿಸುತ್ತಾರೆ ಎಂಬುದನ್ನು ವೀಕ್ಷಿಸಿ, ಈ ಸಂದರ್ಭದಲ್ಲಿ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅನಿಲ ಸೋರಿಕೆ ಅನಾಹುತ ಘಟಿಸಿದಾಗ ಜನಸಾಮಾನ್ಯರನ್ನು ಹೇಗೆ ರಕ್ಷಿಸಬೇಕೆಂದು ಅಣಕು ಪ್ರದರ್ಶನದ ಮೂಲಕ ವೀಕ್ಷಿಸಲಾಯಿತು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಎಂ.ಬ್ಯಾಕೋಡ ಮಾತನಾಡಿ, ಬೇಲೂರು ಕೈಗಾರಿಕಾ ಪ್ರದೇಶದ ಹಿಂದೂಸ್ಥಾನ ಪೆಟ್ರೋಲಿಯಮ್ ಕಾರ್ಪೋರೇಶನ್ ಲಿಮಿಟೆಡ್ ಆವರಣದಲ್ಲಿ ಅಣುಕು ಪ್ರದರ್ಶನವನ್ನು ಮಾಡಿದ್ದೇವೆ. ಕರ್ನಾಟಕ ಸರ್ಕಾರದ ಸೂಚನೆಯಂತೆ ಪೊಲೀಸ್ ಇಲಾಖೆಯವರು, ಬೇಲೂರು ಕೈಗಾರಿಕಾ ಸಂಸ್ಥೆಯವರು, ಮತ್ತು ಬೇರೆ ಬೇರೆ ಕಾರ್ಖಾನೆಯವರು ನಮ್ಮ ಜೊತೆ ಕೈಜೋಡಿಸಿದ್ದಾರೆ ಎಂದು ಹೇಳಿದರು.
ರಕ್ಷಣಾ ಕಾರ್ಯಾಚರಣೆಯಲ್ಲಿ ಕಂದಾರ ಪೊಲೀಸ್, ಅಗ್ನಿಶಾಮಕ ದಳ, ಕೈಗಾರಿಕಾ ಭದ್ರತಾ ಪಡೆ, ಆರೋಗ್ಯ, ಪಶುವಿದ್ಯಕೀಯ, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಎಎಸ್ಪಿ ನಾರಾಯಣ ಬರಮಣಿ, ಖಾರ್ಕಾನೆ ಮತ್ತು ಬೈಲರ್ ಇಲಾಖೆ ಜಂಟಿ ನಿರ್ದೇಶಕ ರವಿಂದ್ರ ರಾಠೋಡ, ಉಪನಿರ್ದೇಶಕ ವೆಂಕಟೇಶ ರಾಠೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ರವಿ ಸಾಲಿಗೌಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಮ್. ಹೊನಕೇರಿ, ಧಾರವಾಡ ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಎಚ್.ಪಿ.ಸಿ.ಎಲ್ ಪ್ಲಾಂಟ್ ಹೆಡ್ ರಾಜಕುಮಾರ, ಕೃಷಿ, ಆರೋಗ್ಯ, ಸಾರಿಗೆ ಇಲಾಖೆ ಅಧಿಕಾರಿಗಳು, ಇತರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಹುಬ್ಬಳ್ಳಿ ಧಾರವಾಡ ಭಾಗಗಳಲ್ಲಿ 1947ರಿಂದ ಹಿಡಿದು ಇಲ್ಲಿಯವರೆಗೆ ಯಾವುದೇ ರೀತಿಯ ಘಟನೆಗಳು ನಡೆದಿಲ್ಲ. ಆದರೆ ಮುಂದೆ ಸಂಭವಿಸಿದರೆ ನಾವು ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸೂಚನೆ ನೀಡಿದ್ದರಿಂದ ಈ ಅಣಕು ಪ್ರದರ್ಶನ ಮಾಡುತ್ತಿದ್ದೇವೆ ಎಂದರು.



