ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಬಳಿಕ ರಣಜಿ ಟ್ರೋಫಿಯಲ್ಲೂ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದ್ದು, ಅಭಿಮಾನಿಗಳು ಬೇಸರಗೊಂಡಿದ್ದಾರೆ.
ರಣಜಿ ಟ್ರೋಫಿಯಲ್ಲಿ ತವರು ಮುಂಬೈ ಪರ ಇಂದು ಜಮ್ಮುಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿದಿದ್ದಾರೆ. ಆದರೆ ರಣಜಿ ಪಂದ್ಯದಲ್ಲೂ ಅವರ ಕಳಪೆ ಫಾರ್ಮ್ ಮುಂದುವರಿದಿದ್ದು, ಹೀಗಾದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಏನು ಕತೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರುವ ಹಿಟ್ಮ್ಯಾನ್ ಕೇವಲ 3 ರನ್ಗಳಿಸಿ ಔಟಾಗಿದ್ದಾರೆ. ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ 6 ಓವರ್ಗಳ ಒಳಗೆ ಪೆವಿಲಿಯನ್ ಸೇರಿದ್ದಾರೆ.
ಔಕಿಬ್ ನಬಿ ಎಸೆತದಲ್ಲಿ ಜೈಸ್ವಾಲ್ (4) ಎಲ್ಬಿಡಬ್ಲ್ಯೂ ಆಗಿ ಹೊರನಡೆದರೆ, ಇದರ ಬೆನ್ನಲ್ಲೇ ರೋಹಿತ್ ಶರ್ಮಾ (3) ಉಮರ್ ನಝೀರ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ.
ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 5 ಇನಿಂಗ್ಸ್ ಆಡಿದ್ದ ಹಿಟ್ಮ್ಯಾನ್ ಕೇವಲ 31 ರನ್ಗಳು ಮಾತ್ರ ಕಲೆಹಾಕಿದ್ದರು. ಅಂದರೆ ಕೇವಲ 6.20 ಸರಾಸರಿಯಲ್ಲಿ ಮಾತ್ರ ರನ್ ಗಳಿಸಲಷ್ಟೇ ಶಕ್ತರಾಗಿದ್ದರು.
ಇದೀಗ ಫಾರ್ಮ್ ಕಂಡುಕೊಳ್ಳಲು 10 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ರೋಹಿತ್ ಶರ್ಮಾ ಮೊದಲ ಇನಿಂಗ್ಸ್ನಲ್ಲಿ 3 ರನ್ಗಳಿಸಿ ನಿರಾಸೆ ಮೂಡಿಸಿದ್ದಾರೆ.