ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವ ರಾಜ್ಯ ಸರ್ಕಾರ, ಎಲ್ಲ ಹುದ್ದೆಗಳನ್ನೂ ಕೇವಲ ಕೆಪಿಎಸ್ ಶಾಲೆಗಳಿಗೆ ಮೀಸಲಿಟ್ಟಿರುವುದನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಎಐಡಿಎಸ್ಓ ಗದಗ ಜಿಲ್ಲಾ ಸಂಚಾಲಕಿ ಎಂ. ಶಾಂತಿ, ಇತ್ತೀಚೆಗೆ ನೇಮಕಗೊಂಡ 11 ಸಾವಿರ ಅತಿಥಿ ಶಿಕ್ಷಕರ ಹುದ್ದೆಗಳಲ್ಲೂ ಕೆಪಿಎಸ್ ಶಾಲೆಗಳಿಗೆ ಪ್ರಧಾನ ಆದ್ಯತೆ ನೀಡಲಾಗಿದೆ. ವರ್ಗಾವಣೆ ಪ್ರಕ್ರಿಯೆಯಲ್ಲೂ ಇದೇ ಧೋರಣೆ ಮುಂದುವರಿದಿದೆ ಎಂದು ಆರೋಪಿಸಿದ್ದಾರೆ.
ದಶಕಗಳಿಂದ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಕಡೆಗಣಿಸಿ, ಇತ್ತೀಚೆಗೆ ಆರಂಭವಾದ ಕೆಪಿಎಸ್ ಶಾಲೆಗಳನ್ನು ಮಾತ್ರ ಸರ್ಕಾರ ಪ್ರೋತ್ಸಾಹಿಸುತ್ತಿದೆ. ಹಳ್ಳಿಯ ಶಾಲೆಗಳ ವಿಲೀನಕ್ಕೆ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೂ, ಈಗ ಸೌಲಭ್ಯ ಹಾಗೂ ನೇಮಕಾತಿಗಳ ಮೂಲಕ ಗ್ರಾಮೀಣ ಶಾಲೆಗಳನ್ನು ದುರ್ಬಲಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 7 ಸಾವಿರ ಏಕೋಪಾಧ್ಯಾಯ ಶಾಲೆಗಳಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳು ಶಿಕ್ಷಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಇಂತಹ ಶಾಲೆಗಳಿಗೆ ಸರ್ಕಾರ ತಕ್ಷಣ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಎಐಡಿಎಸ್ಓ ಆಗ್ರಹಿಸಿದೆ.
“ನಮ್ಮೂರ ಶಾಲೆ ಉಳಿಸಿ” ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆ ಮುಂದಾಗಬೇಕು ಎಂದು ಎಐಡಿಎಸ್ಓ ಕರೆ ನೀಡಿದೆ.
“ನೇರವಾಗಿ ಶಾಲೆ ಮುಚ್ಚದೇ, ಶಿಕ್ಷಕರನ್ನೂ ಸೌಲಭ್ಯವನ್ನೂ ನಿರಾಕರಿಸಿ ಹಳ್ಳಿಯ ಶಾಲೆಗಳನ್ನು ಸಾಯಿಸುವ ಕೆಲಸ ಸರ್ಕಾರ ಮಾಡುತ್ತಿದೆ”
ಎಂ. ಶಾಂತಿ



