ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹೆಚ್ಚಾಗಿದ್ದ ಬೀದಿ ನಾಯಿಗಳು ಹಾಗೂ ಹಂದಿಗಳ ಹಾವಳಿಗೆ ಕಡಿವಾಣ ಹಾಕಲು ಪುರಸಭೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಎರಡು ದಿನಗಳಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳು ಹಾಗೂ 80 ಹಂದಿಗಳನ್ನು ಹಿಡಿದು ಸ್ಥಳಾಂತರಿಸಿದೆ.
ಇತ್ತೀಚೆಗೆ ಬೀದಿ ನಾಯಿಗಳು ಮಕ್ಕಳು, ಆಕಳ ಕರುಗಳು, ಆಡು-ಕುರಿ ಮರಿಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದವು. ಕಳೆದ ಏಳು ತಿಂಗಳಲ್ಲಿ 1,100 ನಾಯಿ ಕಡಿತ ಪ್ರಕರಣಗಳು ನಡೆದಿರುವ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಗುಂಪು ಗುಂಪಾಗಿ ಸಂಚರಿಸುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪುರಸಭೆಗೆ ಒತ್ತಾಯಿಸಿದ್ದರು.
ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದ ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಅವರು ಪರಿಣಿತ ತಂಡವನ್ನು ಕರೆಯಿಸಿ ಮಂಗಳವಾರ ಹಾಗೂ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿದರು. ಪಟ್ಟಣದ ಮುಖ್ಯ ಬಜಾರ್ ರಸ್ತೆ, ಕೆಂಚಲಾಪುರ ಹಳ್ಳ, ದೂದಪೀರಾಂ ದರ್ಗಾ, ಶಾದಿಮಹಲ್, ಚಿಕನ್ ಮಾರ್ಕೆಟ್, ಹೂವಿನ ಬಜಾರ್, ಶಿಗ್ಲಿ ಕ್ರಾಸ್, ಪೊಲೀಸ್ ಠಾಣೆ, ಇಂದಿರಾನಗರ, ಬಸ್ ನಿಲ್ದಾಣ, ಪುರಸಭೆ ಕಚೇರಿ, ಸೋಮೇಶ್ವರ ಗುಡಿ, ಅಂಬೇಡ್ಕರ್ ನಗರ, ಮಂಜಲಾಪುರ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಯಿತು.
ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಪಟ್ಟಣದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪ್ರತ್ಯೇಕ ಶೆಡ್ ನಿರ್ಮಿಸಿ ಸಂತಾನಹರಣ ಚಿಕಿತ್ಸೆ ನೀಡಲು ಪುರಸಭೆ ಮುಂದಾಗಿದೆ. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ ತಿಳಿಸಿದ್ದಾರೆ.
ಬೀದಿ ನಾಯಿಗಳ ನಿಯಂತ್ರಣಕ್ಕೆ ನಿರಂತರ ಕಾರ್ಯಾಚರಣೆ, ಸಂತಾನಹರಣ ಚಿಕಿತ್ಸೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಅಗತ್ಯವಾಗಿದೆ. ಪುರಸಭೆಯ ಕ್ರಮಕ್ಕೆ ಸಾರ್ವಜನಿಕರಿಂದಲೂ ಸಹಕಾರ ದೊರೆತರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ. ಸದ್ಯದ ಕಾರ್ಯಾಚರಣೆಯಿಂದ ಸಾರ್ವಜನಿಕರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಪುರಸಭೆ ನಿರಂತರ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.



