Home Blog Page 10

ಅಧಿಕಾರಿಗಳು ಜನ ಮಿತ್ರರಾಗಿದ್ದಲ್ಲಿ ಮಾತ್ರ ಅಭಿವೃದ್ಧಿ ಸಾಧ್ಯ: ಸಚಿವ ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿನ ಕಟ್ಟಕಡೆಯ ವ್ಯಕ್ತಿಯ ಅಭಿಪ್ರಾಯವನ್ನು ಗ್ರಾಮ ಸಭೆಗಳ ಮೂಲಕ ಮೇಲಿನ ಹಂತಕ್ಕೆ ಕೊಂಡೊಯ್ಯಬೇಕು. ಗ್ರಾಮ ಸಭೆಗಳಲ್ಲಿನ ಅಭಿಪ್ರಾಯಗಳನ್ನು ಯೋಜನೆ ರೂಪದಲ್ಲಿ ಜಾರಿಗೆ ತರುವ ಕಾರ್ಯವಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಜನರ ಅಭಿಪ್ರಾಯದಂತೆ ಯೋಜನೆಗಳನ್ನು ರೂಪಿಸಬೇಕಾಗಿದೆ. ಗ್ರಾಮ ಸ್ವರಾಜ್ಯ ಹಾಗೂ ಪಂಚಾಯತ್ ರಾಜ್ ಕಾನೂನು ಜಾರಿಗೆ ತರುವುದರಲ್ಲಿ ಗದಗ ಜಿಲ್ಲೆಯ ಪಾತ್ರ ಬಹುಮುಖ್ಯವಾಗಿದೆ. ಗ್ರಾಮ ಮಟ್ಟದಿಂದಲೇ ಯೋಜನೆಗಳನ್ನು ರೂಪಿಸುವ ಕಾನೂನಿದೆ. ಈ ಕಾನೂನು ಸಮರ್ಪಕವಾಗಿ ಅನುಷ್ಠಾನವಾದಲ್ಲಿ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಕೆಳಹಂತದಿಂದ ಮೇಲಿನ ಹಂತದವರೆಗೆ ಯೋಜನೆಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರುವ ಕಾರ್ಯದಲ್ಲಿ ಜಿಲ್ಲೆ ಯಾವುದೇ ಕಾರಣಕ್ಕೂ ಹಿಂದುಳಿಯಬಾರದು. ಯೋಜನೆಗಳನ್ನು ರೂಪಿಸುವಲ್ಲಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಡುವೆ ಸಂಘರ್ಷವಿದ್ದು, ದೇಶದಲ್ಲಿ ಜನರ ಅಭಿಪ್ರಾಯದಂತೆ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತಿಲ್ಲ.

ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಶೇಂಗಾ, ಮಾವು ಸೇರಿದಂತೆ ಇತರೆ ಬೆಳೆಗಳ ಇಳುವರಿ ಕಡಿಮೆಯಾಗುತ್ತಿರುವ ಕುರಿತು ಕಾರಣ ತಿಳಿದುಕೊಂಡು ಮಾಹಿತಿ ನೀಡುವುದರ ಜೊತೆಗೆ ಜಿಲ್ಲೆಯ ಮೂಲಭೂತ ಅವಶ್ಯಕತೆಗಳು, ಶಾಲೆಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕುರಿತು ವಿವರವಾದ ಮಾಹಿತಿ ಕ್ರೋಢೀಕರಿಸಿ ಪ್ರಸ್ತಾವನೆಯನ್ನು ಸಲ್ಲಿಸಲು ಸಚಿವರಾದ ಎಚ್.ಕೆ. ಪಾಟೀಲ ಸೂಚಿಸಿದರು.

ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ಜನರ ಭಾವನೆಗಳು ಯೋಜನೆಯ ರೂಪದಲ್ಲಿ ಜಾರಿಯಾಗಬೇಕು. ಜನರ ಮಾತಿಗೆ ಗೌರವ ದೊರಕುವ ನಿಟ್ಟಿನಲ್ಲಿ ಅಧಿಕಾರಿ ವರ್ಗ ಕಾರ್ಯ ನಿರ್ವಹಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿಪ್ರಾಯ ಪಡೆದು ಯೋಜನೆ ರೂಪಿಸುವ ಕಾನೂನು ಗದಗ ಜಿಲ್ಲೆಯಿಂದಲೇ ಪ್ರಾರಂಭಿಸಲಾಗಿದ್ದು, ಈ ಕಾನೂನನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕಾರ್ಯವಾಗಬೇಕಾಗಿದೆ ಎಂದರು.

ಗ್ರಾಮಸಭೆಗಳ ಮೂಲಕ ಆಯ್ಕೆ ಮಾಡುವ ಯೋಜನೆಗಳನ್ನು ಆದ್ಯತೆ ಮೂಲಕ ಅನುಷ್ಠಾನಕ್ಕೆ ಕ್ರಮ ವಹಿಸಿ, ಆಯಾ ಯೋಜನೆಗಳನ್ನು ಗ್ರಾಮ ಪಂಚಾಯಿತಿ ಮೂಲಕವೇ ಅನುಷ್ಠಾನಗೊಳಿಸುವ ಕಾರ್ಯವಾಗಬೇಕು. ಯೋಜನೆಗಳ ತಯಾರಿಕೆಯಲ್ಲಿ ಗ್ರಾಮೀಣ ವಾರ್ಡ್ ಸಭೆ, ಗ್ರಾಮ ಸಭೆ, ಗ್ರಾಮ ಅಭಿವೃದ್ಧಿ ಯೋಜನೆ ಮೂಲಕ ಕೆಳಮಟ್ಟದಿಂದಲೇ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳಾದ ಕೃಷ್ಣಾ ಪರಾಪೂರ, ಬರಕತ್ ಅಲಿಮುಲ್ಲಾ ಅಬ್ದುಲ್, ಚಂದ್ರಶೇಖರಗೌಡ ಕರಿಸೋಮನಗೌಡ, ವಿಜಯಕುಮಾರ ನೀಲಗುಂದ, ರಾಚಯ್ಯ ಮಾಲಗಿತ್ತಿ, ರಾಜೇಸಾಬ ಸಾಂಗ್ಲಿಕರ, ರಾಜಶೇಖರ ಮಾಲಗಿತ್ತಿ, ಸುರೇಶ ಕಟ್ಟಿಮನಿ, ರಾಜೇಸಾಬ ಬೆಟಗೇರಿ, ರಾಜೇಶ್ವರಿ ವೀರನಗೌಡ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ ಚೌದರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಜಿಲ್ಲಾ ಅಂಕಿ ಸಂಖ್ಯೆ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ 2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಯೋಜನೆಯನ್ನು ಮಂಡಿಸಿದರು.

ಅಧಿಕಾರಿಗಳು ಜನ ಮಿತ್ರರಾಗಿದ್ದಲ್ಲಿ ಮಾತ್ರ ಅಭಿವೃದ್ಧಿ ಸಾಧ್ಯ. ಯೋಜನೆಗಳನ್ನು ರೂಪಿಸುವ ಸಂದರ್ಭದಲ್ಲಿ ಗ್ರಾಮಸಭೆ, ಜನಪ್ರತಿನಿಧಿಗಳ ಸಲಹೆಗಳನ್ನು ಪಡೆಯಬೇಕಾಗಿದೆ. ಗ್ರಾಮ ಪಂಚಾಯಿತಿಗಳ ಮೂಲಕ ಆದ್ಯತೆ ಪ್ರಕಾರ ಯೋಜನೆಗಳ ಪಟ್ಟಿಯನ್ನು ತಯಾರಿಸಬೇಕು. ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿ ಗ್ರಾಮಸಭೆ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುವ ಮಾದರಿ ಕಾರ್ಯವನ್ನು ಮಾಡಿದಲ್ಲಿ ಗ್ರಾಮಸಭೆಗೆ ಹೆಚ್ಚಿನ ಮಹತ್ವ ನೀಡಿದಂತಾಗುತ್ತದೆ.

  • ಎಚ್.ಕೆ. ಪಾಟೀಲ.
    ಜಿಲ್ಲಾ ಉಸ್ತುವಾರಿ ಸಚಿವರು.

ಸಾಂಪ್ರದಾಯಿಕ ಕೃಷಿ ಇಂದಿನ ಅಗತ್ಯ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾವಯವ ಕೃಷಿ ರೈತ ಸಮುದಾಯಕ್ಕೆ ಸಂಜೀವಿನಿಯಾಗಿದ್ದು, ರೈತರು ರಾಸಾಯನಿಕ ಕೃಷಿಯಿಂದ ದೂರ ಸರಿದು ಸಾವಯವ, ಸಾಂಪ್ರದಾಯಿಕ ಕೃಷಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಲಕ್ಷ್ಮೇಶ್ವರದ ಸಾವಯವ ಪ್ರಗತಿ ರೈತ ಬಸವರಾಜ ಬೆಂಡಿಗೇರಿ ಹೇಳಿದರು.

ಯಳವತ್ತಿ ಗ್ರಾಮದಲ್ಲಿ ಜರುಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕೃಷಿಗೋಷ್ಠಿಯಲ್ಲಿ ಸಾವಯವ ಕೃಷಿ ಮಹತ್ವ ಕುರಿತು ಅವರು ಮಾತನಾಡಿದರು.

ಹಸಿರು ಕ್ರಾಂತಿಯ ನಂತರ ನಮ್ಮ ಪುರಾತನ ಕೃಷಿ ಪದ್ಧತಿಗೆ ಹೊಡೆತ ಬಿದ್ದಿದೆ. ರಾಸಾಯನಿಕ ಗೊಬ್ಬರ ಇಲ್ಲದೆ ಇಂದು ಕೃಷಿ ಇಲ್ಲ ಎನ್ನುವಷ್ಟರಮಟ್ಟಿಗೆ ರೈತರು ಹೊಂದಿಕೊಂಡುಬಿಟ್ಟಿದ್ದಾರೆ. ಆದರೆ ನಿರಂತರವಾಗಿ ರಾಸಾಯನಿಕ ಗೊಬ್ಬರ ಬಳಕೆಯಿಂದಾಗಿ ಬಿತ್ತನೆ ಭೂಮಿ ಬರಡಾಗುವ ಪರಿಸ್ಥಿತಿ ಬಂದಿದೆ. ಬಿತ್ತನೆ ಭೂಮಿಯೇ ಹಾಳಾದರೆ ಮುಂದೆ ಕೃಷಿಗೆ ದೊಡ್ಡ ಪೆಟ್ಟು ಬೀಳುವ ಅಪಾಯ ಇದೆ. ಕಾರಣ ಈಗಿನಿಂದಲೇ ರೈತರು ಸಾವಯವ ಕೃಷಿಗೆ ಮಹತ್ವ ನೀಡಬೇಕು ಎಂದು ತಿಳಿಸಿದರು.

ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಮಹಿಳಾ ಚಿಂತಕಿ ಮಾಲಾದೇವಿ ದಂಧರಗಿ, ಇಂದಿಗೂ ಸಮಾಜದಲ್ಲಿ ಮಹಿಳೆಯರ ಶೋಷಣೆ ತಪ್ಪಿಲ್ಲ. ಹೆಸರಿಗಷ್ಟೇ ಸಮಾನತೆ ಎನ್ನುತ್ತಾರೆ. ಆದರೆ ಎಲ್ಲ ಕ್ಷೇತ್ರಗಳಲ್ಲೂ ಈಗಲೂ ಹೆಣ್ಣಿನ ಶೋಷಣೆ, ನಿರ್ಲಕ್ಷ್ಯ ನಡೆದೇ ಇದೆ. ಅದರಲ್ಲೂ ರಾಜಕೀಯ ರಂಗದಲ್ಲಂತೂ ಶೋಷಣೆ ಇನ್ನಷ್ಟು ಹೆಚ್ಚಾಗಿದೆ. ಮಹಿಳೆ ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಪ್ರಗತಿ ಸಾಧಿಸಬಲ್ಲಳು. ಆದರೆ ಅದಕ್ಕೆ ಸಮಾಜದ ಪ್ರೋತ್ಸಾಹ, ಸಹಕಾರ ಅಗತ್ಯ ಎಂದರು.

ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳ ಸಾಹಿತ್ಯದ ಅಗತ್ಯತೆ ಕುರಿತು ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹಣಗಿ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯವೂ ಬಹಳ ಮಹತ್ವದ್ದು. 20ನೇ ಶತಮಾನದ ಪಂಜೆ ಮಂಗೇಶರಾಯರು ಮಕ್ಕಳ ಸಾಹಿತ್ಯದ ಜನಕರು. ಮಕ್ಕಳ ಕವಿಗಳು, ಬರಹಗಾರರು ಸ್ವತಃ ಮಕ್ಕಳೇ ಆದಾಗ ಮಾತ್ರ ಅವರಿಂದ ಉತ್ತಮ ಮಕ್ಕಳ ಸಾಹಿತ್ಯ ರಚನೆ ಆಗಲು ಸಾಧ್ಯ. ದರ‍್ಗಸಿಂಹನ ಪಂಚತಂತ್ರ ಕಥೆಗಳು ವಿಶ್ವದ ಶ್ರೇಷ್ಠ ಮಕ್ಕಳ ಸಾಹಿತ್ಯದ ರಚನೆಯಾಗಿದೆ. ಇಂಗ್ಲೀಷ್‌ನ ವ್ಯಾಮೋಹದಿಂದಾಗಿ ಇಂದು ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಾಹಿತ್ಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಮಕ್ಕಳು ಕನಿಷ್ಠ ಎಸ್‌ಎಸ್‌ಎಲ್‌ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಬರಬೇಕು ಎಂದು ತಿಳಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷರಾದ ಲಲಿತಕ್ಕ ಕೆರಿಮನಿ, ಪರ್ಣಾಜಿ ಖರಾಟೆ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಬಿ.ಎಸ್. ಬಾಳೇಶ್ವರಮಠ ಆಶಯ ನುಡಿ ಹೇಳಿದರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಉದ್ಘಾಟನಾ ನುಡಿಗಳನ್ನಾಡಿದರು.
ಈ ವೇಳೆ ಫಕ್ಕೀರೇಶ ಮ್ಯಾಟಣ್ಣವರ, ಕೋಟೆಪ್ಪ ರ‍್ದಿ, ಶಕುಂತಲಾ ಹೊರಟ್ಟಿ, ಲತಾ ತಟ್ಟಿ, ಶಕುಂತಲಾ ಅಳಗವಾಡಿ, ಸಿದ್ಧಲಿಂಗೇಶ ರಗಟಿ, ಡಿ.ವೈ. ಹುನಗುಂದ ಮತ್ತಿತರರು ಇದ್ದರು. ಶೇಖರ ಚಿಕ್ಕಣ್ಣವರ, ಆರ್.ಎಫ್. ಕಪ್ಪತ್ತನವರ, ನಾಗರಾಜ ಶಿಗ್ಲಿ, ಫಕ್ಕಿರೇಶ ಚಕಾರದ ನಿರೂಪಿಸಿದರು.

ಡಿಡಿಪಿಐ ಆರ್.ಎಸ್. ಬುರುಡಿ ಮಾತನಾಡಿ, ಇಂದು ಸಾವಯವ ಕೃಷಿಯ ಅಗತ್ಯ ಇದೆ. ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆಯನ್ನು ರೈತರು ಕಡಿಮೆ ಮಾಡಬೇಕು. ಸಾವಯವ ಕೃಷಿಯಿಂದ ವಿಷಮುಕ್ತ ಆಹಾರ ಬೆಳೆದರೆ ದೇಶದ ಜನರ ಆರೋಗ್ಯಕ್ಕೂ ಒಳ್ಳೆಯದಾಗುತ್ತದೆ. ಕೃಷಿ ಭೂಮಿ ಸಕಲ ಜೀವರಾಶಿಗಳ ಬದುಕಿನ ಆಧಾರವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಬಗೆಗಿನ ಚಿಂತನೆ ಅಗತ್ಯ ಎಂದು ತಿಳಿಸಿದರು.

ಲಂಬಾಣಿ ಸಮುದಾಯ ಸ್ವಾಭಿಮಾನದ ಸಂಕೇತ: ಸಚಿವ ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಜಾಗತಿಕ ಯುಗದಲ್ಲಿ ಶಿಕ್ಷಣ ಬಹು ಮುಖ್ಯವಾಗಿದ್ದು, ಲಂಬಾಣಿ ಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಮೂಲಕ ಉತ್ತಮ ಸಮಾಜ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಕರೆ ನೀಡಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತಿ, ನಾಗರಿಕ ಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವುದನ್ನು ನಾವು ತಾಂಡಾಗಳಲ್ಲಿ ಕಾಣಬಹುದಾಗಿದೆ. ಲಂಬಾಣಿ ಸಮುದಾಯ ಬಹುದೊಡ್ಡ ಸಮುದಾಯ. ದೇಶದಲ್ಲಿ ಸುಮಾರು 12 ಕೋಟಿಯಷ್ಟು ಜನಸಂಖ್ಯೆ ಹೊಂದಿದೆ. ಜಿಲ್ಲೆಯಲ್ಲಿ ಅನೇಕ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿದೆ. ಇತ್ತೀಚೆಗೆ 19 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ಲಂಬಾಣಿ ಸಮುದಾಯವು ಇಂದಿಗೂ ಸಹ ತಮ್ಮ ಸಂಸ್ಕೃತಿಯನ್ನು ಬಿಟ್ಟುಕೊಡದೆ ಅದನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯವಾಗಿದ್ದು, ಇದಕ್ಕೆ ಸಂತ ಸೇವಾಲಾಲರು ಪ್ರೇರಣೆಯಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನಪ್ರಾತಿನಿಧ್ಯ ವ್ಯವಸ್ಥೆಯಡಿ ಲಂಬಾಣಿ ಸಮುದಾಯ ತಮ್ಮದೇ ಆದ ವ್ಯವಸ್ಥೆಯನ್ನು ಹೊಂದಿದೆ. ತಮ್ಮ ಸಮುದಾಯದ ಹಿರಿಯರಿಗೆ ನೀಡುವ ಗೌರವ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಲಂಬಾಣಿ ಸಮುದಾಯ ಕೊಟ್ಟ ಮಾತನ್ನು ಉಳಿಸಿಕೊಳ್ಳುವ, ಸ್ವಾಭಿಮಾನದ ಸಂಕೇತಕ್ಕೆ ಮಾದರಿಯಾದ ಸಮುದಾಯವಾಗಿದ್ದು, ಪ್ರತಿ ವರ್ಷವು ಇದೇ ರೀತಿ ಒಗ್ಗಟ್ಟಿನಿಂದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಹಿರಿಯರಾದ ಶಿವಪ್ಪ ನಾಯಕ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ಬಾಬು ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಅಲಕೋಡ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಹರಿಲಾಲ ಪವಾರ ಸಂತ ಸೇವಾಲಾಲರ ಕುರಿತು ಉಪನ್ಯಾಸ ನೀಡಿ, ಮುಂಬರುವ ದಿನಗಳಲ್ಲಿ ಸಂತ ಸೇವಾಲಾಲರ ಜಯಂತಿಯನ್ನು ರಾಷ್ಟ್ರದ್ಯಂತ ಆಚರಿಸಲು ಹಾಗೂ ಲಂಬಾಣಿ ಸಮುದಾಯಕ್ಕೆ ಉತ್ತಮ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ವಲಸೆ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದರು.

ಅವ್ಯವಸ್ಥೆಗಳ ಆಗರವಾದ ಪುರಸಭೆ ಮಳಿಗೆಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಪುರಸಭೆಗೆ ವಾಣಿಜ್ಯ ಮಳಿಗೆಗಳ ಸಂಕೀರ್ಣ ಅವ್ಯವಸ್ಥೆ, ಅಧ್ವಾನದ ಆಗರವಾಗಿದೆ. ಪಟ್ಟಣದ ಹೊಸ ಬಸ್‌ನಿಲ್ದಾಣದ ಹತ್ತಿರ ಸಣ್ಣ ಮತ್ತು ಮಧ್ಯಮ ಪಟ್ಟಣ ಅಭಿವೃದ್ಧಿ ಯೋಜನೆಯಡಿ ಸುಮಾರು 25 ವರ್ಷಗಳ ಹಿಂದೆ ವಾಣಿಜ್ಯ ಮಳಿಗೆ ನಿರ್ಮಿಸಲಾಗಿದೆ. ಈ ವಾಣಿಜ್ಯ ಮಳಿಗೆಯಲ್ಲಿ ಒಟ್ಟು 29 ಮಳಿಗೆಗಳಿದ್ದು, ಇದರಲ್ಲಿ 25 ಮಳಿಗೆಗಳನ್ನು 20 ವರ್ಷದ ಲೀಜ್ ಆಧಾರದ ಮೇಲೆ ಮತ್ತು 4 ಮಳಿಗೆಗಳನ್ನು 12 ವರ್ಷದ ಲೀಜ್ ಆಧಾರದ ಮೇಲೆ ನೀಡಲಾಗಿದೆ.

ಟೆಂಡರ್ ಪಡೆದವರು ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದೇ ಅಂಗಡಿಗಳನ್ನು ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ನಿಯಂತ್ರಣದಲ್ಲಿರುವ ಐಡಿಎಸ್‌ಎಂಟಿ ಮಳಿಗೆಗಳು ಅವರ ಸೂಚನೆಯಂತೆ ನಡೆಯುತ್ತವೆ. ಆದರೆ ಇಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೂ ತರದೆ, ಪುರಸಭೆಯ ಯಾವುದೇ ಅನುಮತಿಯೂ ಇಲ್ಲದೆ, ಯಾರದೋ ಹಿತಾಸಕ್ತಿಯಿಂದಾಗಿ ಮಳಿಗೆಯಲ್ಲಿ ಕಾನೂನು ಬಾಹಿರವಾಗಿ ನಡೆದುಕೊಳ್ಳಲಾಗುತ್ತಿದೆ. 20 ವರ್ಷಗಳಿಂದ ಯಾವ ಅವಧಿಯ ಚುನಾಯಿತ ಮಂಡಳಿ ಮತ್ತು ಅಧಿಕಾರಿಗಳು ಈ ಬಗ್ಗೆ ಚಕಾರವೆತ್ತದಿರುವುದು ಅಚ್ಚರಿಗೆ ಕಾರಣವಾಗಿದೆ.

ಸಂಕೀರ್ಣದಲ್ಲಿ ಮಾಂಸಾಹಾರಿ ಹೋಟೆಲ್, ಎಗ್ ರೈಸ್ ಅಂಗಡಿಗಳಿರುವುದರಿಂದ ಪಾನಮತ್ತರು ಮದ್ಯ ಸೇವಿಸಿ ಈ ಅಂಗಡಿಗಳ ಮುಂದೆ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುತ್ತಾರೆ. ಇದರಿಂದಾಗಿ ಈ ವಾಣಿಜ್ಯ ಮಳಿಗೆಯಲ್ಲಿನ ಎಸ್‌ಬಿಐನ ಎಟಿಎಂ, ಔಷಧಿ ಅಂಗಡಿ, ಬೇಕರಿ ಹಾಗೂ ಹೂವು-ಹಣ್ಣು ಮಾರಾಟ ಮಳಿಗೆಗಳಿಗೆ ಬರುವ ಮಹಿಳೆಯರು, ಮಕ್ಕಳು, ಸಂಪ್ರದಾಯಸ್ಥರು ಭಯದಿಂದಲೇ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಬಾಡಿಗೆಯಿಂದ ಲಕ್ಷಾಂತರ ರೂಪಾಯಿ ಪುರಸಭೆಗೆ ಸಂದಾಯವಾಗುತ್ತಿದ್ದರೂ ಕಳೆದ 15 ವರ್ಷಗಳಿಂದ ಇಲ್ಲಿನ ಮಳಿಗೆಗಳ ಸ್ಥಿತಿ ಅಧೋಗತಿಗೆ ತಲುಪಿದೆ. ಇದು ಪುರಸಭೆಯ ಜವಾಬ್ದಾರಿಯನ್ನು ಪ್ರಶ್ನಿಸುವಂತಾಗಿದೆ.

ಸಂಕೀರ್ಣದ ಮುಂದೆ ನಾಲ್ಕೈದು ತಳ್ಳುಗಾಡಿಯ ಎಗ್‌ರೈಸ್, ಟಿಫನ್, ಚಹಾದ ಅಂಗಡಿಗಳಿಗೆ ಪರವಾನಿಗೆ ಕೊಟ್ಟಿದ್ದಾರೆ. ಇಲ್ಲಿನ ವ್ಯಾಪಾರಸ್ಥರು ತ್ಯಾಜ್ಯವನ್ನು ಚರಂಡಿಗೆ ಹಾಕುವುದರಿಂದ ಈ ಪ್ರದೇಶ ಗಬ್ಬು ನಾರುತ್ತಿದೆ. ಇಲ್ಲಿ ಕ್ಷಣ ಹೊತ್ತು ನಿಲ್ಲಲು ಆಗುವುದಿಲ್ಲ. ಆದರೂ ಸಂಬಂಧಿಸಿದ ಪುರಸಭೆ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ. ಸರ್ಕಾರದ ನಿಯಮದ ಪ್ರಕಾರ ವಾಣಿಜ್ಯ ಮಳಿಗೆಯ ಕಟ್ಟಡದಲ್ಲಿ ಮಾಂಸ, ಎಗ್ ರೈಸ್ ಮಾರಾಟ ನಿಷಿದ್ಧ. ಆದರೆ ಇಲ್ಲಿ ಸರ್ಕಾರದ ಆದೇಶಕ್ಕೆ ಯಾವುದೇ ಕಿಮ್ಮತ್ತು ಇಲ್ಲ.

ವಾಣಿಜ್ಯ ಸಂಕೀರ್ಣದಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳ ಕುರಿತು ಪುರಸಭೆಯವರನ್ನು ಪ್ರಶ್ನಿಸಿದಾಗ ಯಾವುದೇ ಅನುಮತಿ ಕೊಟ್ಟಿಲ್ಲವೆಂದು ಹೇಳುತ್ತಾರೆ. ಹಾಗಾದರೆ ಕಾನೂನು ಬಾಹಿರವಾಗಿ ನಡೆಯುತ್ತಿರುವ ವ್ಯಾಪಾರಕ್ಕೆ ರಕ್ಷಣೆ ಯಾರದು ಎಂಬುದಕ್ಕೆ ಜಿಲ್ಲಾಧಿಕಾರಿಗಳೇ ಉತ್ತರಿಸಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ವಾಣಿಜ್ಯ ಮಳಿಗೆಗಳಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವನ್ನು ಪತ್ತೆಹಚ್ಚಿ ಅವರನ್ನು ಅಲ್ಲಿಂದ ತೆರವುಗೊಳಿಸಲಾಗುವುದು. ಅಲ್ಲದೆ ಮಾಂಸ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ವ್ಯಾಪಾರಸ್ಥರು ಚರಂಡಿಯಲ್ಲಿ ಕಸ-ಮುಸುರೆ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ವರ್ಷ ಮಳಿಗೆ ಟೆಂಡರ್ ಅವಧಿ ಮುಗಿಯಲಿದ್ದು, ಮರು ಟೆಂಡರ್ ವೇಳೆ ನಿಯಮಾವಳಿಯಂತೆ ಮಳಿಗೆ ನೀಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಇಲ್ಲಿ ಸಿದ್ಧಪಡಿಸಿ ಮಾರಾಟ ಮಾಡುವ ಆಹಾರದ ಗುಣಮಟ್ಟ, ಸ್ವಚ್ಛತೆ, ಕುಡಿಯುವ ನೀರು, ಡಸ್ಟ್ಬಿನ್‌ಗಳ ಬಗ್ಗೆ ಕಿಂಚಿತ್ತೂ ಗಮನ ಹರಿಸುವುದಿಲ್ಲ. ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ಅನಧಿಕೃತ ವ್ಯಾಪಾರಸ್ಥರೇ ತುಂಬಿಕೊಂಡಿದ್ದು, ಮೂಲ ಮಾಲೀಕರೇ ಇಲ್ಲ. ನಿಯಮಾನುಸಾರ ಟೆಂಡರ್ ಪಡೆದವರು ಬೇರೆಯವರಿಗೆ ಬೇರೆ ಉದ್ದೇಶಕ್ಕೆ ಅಂಗಡಿ ಕೊಡುವಂತಿಲ್ಲ. ಅಲ್ಲದೆ ಇಡೀ ಕಟ್ಟಡದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದ್ದು, ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದಕ್ಕೆ ಪ್ರಭಾವಿಗಳ ಶ್ರೀರಕ್ಷೆ ಇದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗೋಡಿ ಆರೋಪಿಸಿದ್ದಾರೆ.

ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತದಲ್ಲಿ SIT ತನಿಖೆ 

0

ಬೆಂಗಳೂರು: ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ (ಎಸ್ಐಟಿ) ಶೀಘ್ರದಲ್ಲೇ ಪೊಲೀಸ್ ಕಮಿಷನರ್‌ಗೆ ಸಮಗ್ರ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ಸಿ.ಜೆ. ರಾಯ್ ಆತ್ಮಹತ್ಯೆಯ ಹಿಂದಿನ ನಿಜಾಂಶಗಳು ಎಸ್ಐಟಿ ವರದಿಯಿಂದ ಬಹಿರಂಗವಾಗುವ ಸಾಧ್ಯತೆ ಇದೆ. ಎಸ್ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ.

ಈ ಸಂಬಂಧ ಹಲವು ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸಿರುವ ಎಸ್ಐಟಿ, ಕಚೇರಿ ಸಿಬ್ಬಂದಿ, ಅಧಿಕಾರಿಗಳು, ಐಟಿ ಅಧಿಕಾರಿಗಳು ಹಾಗೂ ರಾಯ್ ಕುಟುಂಬದ ಸದಸ್ಯರು ಮತ್ತು ಆಪ್ತರು ಸೇರಿದಂತೆ ಹಲವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ರಾಯ್ ಅವರ ಆತ್ಮಹತ್ಯೆ ನಿರ್ಧಾರ ಕುಟುಂಬದ ಸದಸ್ಯರಿಗೂ ಅಚ್ಚರಿ ಮೂಡಿಸಿದೆ. ಉದ್ಯಮ ಕ್ಷೇತ್ರದಲ್ಲಿ ದಿಟ್ಟ ಮತ್ತು ಧೈರ್ಯಶಾಲಿ ನಿರ್ಧಾರಗಳಿಗೆ ಹೆಸರಾಗಿದ್ದ ರಾಯ್, ಇಂತಹ ಕಠಿಣ ಹೆಜ್ಜೆ ಏಕೆ ಇಟ್ಟರು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಅಂತಿಮ ಹಂತದ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ತಂಡ ಕೆಲವೇ ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದ್ದು, ಆ ವರದಿ ಮೂಲಕವೇ ಆತ್ಮಹತ್ಯೆಯ ಹಿಂದಿನ ಸತ್ಯಾಂಶಗಳು ಬೆಳಕಿಗೆ ಬರಲಿವೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

 

ಬೆಂಗಳೂರಿನಲ್ಲಿ ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಕಳ್ಳಿ ಅರೆಸ್ಟ್.!‌ 

0

ಬೆಂಗಳೂರು: ಮನೆಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಮಾಲೀಕರ ಮನೆದಲ್ಲೇ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಕೋಣನಕುಂಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ದೀಪ ಎಂಬ ಮಹಿಳೆ ಬಂಧಿತಳಾಗಿದ್ದಾಳೆ.

ಕೋಣನಕುಂಟೆ ನಿವಾಸಿ ಜಗದೀಶ್ ಅವರ ಮನೆಯಲ್ಲಿ ಸುಮಾರು ಒಂದು ವರ್ಷದಿಂದ ಮನೆಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ಕೆಲಸ ಮಾಡುತ್ತಿದ್ದ ಅವಧಿಯಲ್ಲೇ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಒಂದೇ ಬಾರಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ ಮಾಡದೇ, ಆಗಾಗ ಒಂದೊಂದೇ ಚಿನ್ನದ ಆಭರಣ ಕದ್ದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆದಲ್ಲಿದ್ದ ಚಿನ್ನಾಭರಣಗಳು ಕಾಣೆಯಾಗಿರುವುದು ಗಮನಕ್ಕೆ ಬಂದ ನಂತರ ಜಗದೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ದೀಪ ಕೃತ್ಯ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನದಿಂದ ಪಡೆದ ಹಣದಲ್ಲಿ ತಮಿಳುನಾಡಿನಲ್ಲಿ ಸೈಟ್ ಖರೀದಿ ಮಾಡಿರುವುದಾಗಿ ಆರೋಪಿಯು ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ಆರೋಪಿ ಬಂಧನಕ್ಕೊಳಗಾಗಿದ್ದು, ಸುಮಾರು 200 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

ಮಹದೇವಪ್ಪ ದೊಡ್ಡವರು, ಈಗ ಅವರು ನಮ್ಮ ಹೈಕಮಾಂಡ್ ನ ಭಾಗ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಹೆಚ್.ಸಿ ಮಹದೇವಪ್ಪ ಅವರು ಅಧಿಕಾರ ಹಂಚಿಕೆ ವಿಚಾರವಾಗಿ ನೀಡಿರುವ ಹೇಳಿಕೆ ಬಗ್ಗೆ ಕೇಳಿದಾಗ, “ನಾಯಕರ ಹೇಳಿಗೆ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ನಾಯಕರು ಕ್ರಮ ಕೈಗೊಳ್ಳುತ್ತಾರೆ. ನಾನು ಮಹದೇವಪ್ಪನಿಗೆ ಹಾಗೂ ಬೇರೆಯವರಿಗೆ ಉತ್ತರ ನೀಡಲು ತಯಾರಿಲ್ಲ.

ನಾಯಕತ್ವ ವಿಚಾರವಾಗಿ ಈ ಹಿಂದೆ ಹೇಳಿರುವಂತೆ ನಾನು, ಸಿದ್ದರಾಮಯ್ಯನವರು ಹಾಗೂ ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ. ಈ ತೀರ್ಮಾನ ಏನು ಎಂಬುದು ಸಮಯ ಬಂದಾಗ ತಿಳಿಯುತ್ತದೆ. ಇದು ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟು ವ್ಯವಹಾರವಲ್ಲ. ಸಿದ್ದರಾಮಯ್ಯ ಅವರೇ ಸಮಯ ಬಂದಾಗ ರಾಜ್ಯದ ಜನಕ್ಕೆ ಸಂದೇಶ ನೀಡುತ್ತಾರೆ” ಎಂದು ತಿಳಿಸಿದರು.

ನನಗೆ ಶಾಸಕರ ವಿದೇಶ ಪ್ರವಾಸ ಗೊತ್ತಿಲ್ಲ

ಶಾಸಕರ ವಿದೇಶ ಪ್ರವಾಸದ ಬಗ್ಗೆ ಕೇಳಿದಾಗ, “ನನಗೆ ಯಾವ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಮಾಧ್ಯಮಗಳಿಂದಷ್ಟೇ ತಿಳಿದಿದೆ. ಇದು ಅವರ ವೈಯಕ್ತಿಕ ಪ್ರವಾಸವೋ, ಬೇರೆಯವರು ಅವರನ್ನು ಪ್ರವಾಸಕ್ಕೆ ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಇದು ಪ್ರವಾಸ ಕಳುಹಿಸುತ್ತಿರುವವರು ಉಂಟು ಹಾಗೂ ಪ್ರವಾಸ ಹೋಗುತ್ತಿರುವವರು ಉಂಟು. ಪಕ್ಷದ ಅಧ್ಯಕ್ಷನಾಗಿ ನಾನು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ: ನಾಲ್ಕು ವಾಹನಗಳು ಭಸ್ಮ!

0

ದಾವಣಗೆರೆ: ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ನಾಲ್ಕು ವಾಹನಗಳು ಭಸ್ಮವಾಗಿರುವ ಘಟನೆ ನಗರದ ಹಳೆ ಪಿ.ಬಿ. ರಸ್ತೆಯಲ್ಲಿರುವ LIC ಕಚೇರಿ ಸಮೀಪದ ಮಾರುತಿ ಗ್ಯಾರೇಜ್‌ನಲ್ಲಿ

ಅರುಣ್ ಅವರಿಗೆ ಸೇರಿದ ಗ್ಯಾರೇಜ್‌ ಆಗಿದ್ದು, ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಗ್ಯಾರೇಜ್‌ನಲ್ಲಿದ್ದ ಮೂರು ಕಾರುಗಳು ಹಾಗೂ ಒಂದು ಕ್ರೂಸರ್ ವಾಹನ ಸಂಪೂರ್ಣವಾಗಿ  ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಇನ್ನೂ ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಶ್ರಮಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ಮುಂದುವರಿದಿದೆ.

ಮಹಿಳೆಯರು, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ʼನಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: ಡಿಜಿಪಿ ಸಲೀಂ ಆದೇಶ

0

ಬೆಂಗಳೂರು: ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಗುರುತನ್ನು ರಕ್ಷಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ.

ಇನ್ನು ಮುಂದೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಅಥವಾ ಅಪ್ರಾಪ್ತ ಸಂತ್ರಸ್ತರ ಹೆಸರು, ವಿಳಾಸ ಸೇರಿದಂತೆ ಯಾವುದೇ ರೀತಿಯ ಗುರುತು ಸಾರ್ವಜನಿಕವಾಗಿ ಅಥವಾ ಅಧಿಕೃತ ದಾಖಲೆಗಳಲ್ಲಿ ಬಹಿರಂಗಪಡಿಸುವಂತಿಲ್ಲ ಎಂದು ಆದೇಶಿಸಲಾಗಿದೆ.

ದೂರು ಸ್ವೀಕರಿಸಿದ ಬಳಿಕ ಠಾಣಾಧಿಕಾರಿ ಅಥವಾ ತನಿಖಾಧಿಕಾರಿಯು ಸಂತ್ರಸ್ತರ ಮೂಲ ಹೆಸರನ್ನು ಬದಲಾಯಿಸಿ, ಸಾಂಕೇತಿಕ ಹೆಸರನ್ನು ಬಳಸಬೇಕು. ಎಫ್‌ಐಆರ್‌ನಲ್ಲೂ ಬದಲಾದ ಹೆಸರನ್ನೇ ನಮೂದಿಸಿ, “ಹೆಸರು ಬದಲಿಸಲಾಗಿದೆ” ಎಂದು ಸ್ಪಷ್ಟವಾಗಿ ದಾಖಲಿಸಬೇಕು.

ನ್ಯಾಯಾಲಯಕ್ಕೆ ಸಲ್ಲಿಸುವ ದೂರು ಪ್ರತಿ, ಮಹಜರು ವರದಿ, ಚಾರ್ಜ್‌ಶೀಟ್ ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳನ್ನು ಇನ್ನು ಮುಂದೆ ‘ಮುಚ್ಚಿದ ಲಕೋಟೆಯಲ್ಲಿ’ (Sealed Cover) ಸಲ್ಲಿಸುವುದು ಕಡ್ಡಾಯವಾಗಿದೆ.
ತನಿಖೆಯ ಯಾವುದೇ ಹಂತದಲ್ಲೂ ಸಂತ್ರಸ್ತರ ವಿವರಗಳು ಸೋರಿಕೆಯಾಗದಂತೆ ತನಿಖಾಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.

ಅನೇಕ ಪ್ರಕರಣಗಳಲ್ಲಿ ಸಂತ್ರಸ್ತರ ಗುರುತು ಬಹಿರಂಗವಾಗುವುದರಿಂದ ಸಾಮಾಜಿಕ ಮುಜುಗರ ಹಾಗೂ ಮಾನಸಿಕ ಕಿರುಕುಳ ಉಂಟಾಗುತ್ತಿತ್ತು. ಇದರಿಂದ ನ್ಯಾಯಾಂಗ ಹೋರಾಟದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿತ್ತು. ಸುಪ್ರೀಂಕೋರ್ಟ್ ಆಶಯದಂತೆ ಸಂತ್ರಸ್ತರಿಗೆ ಸಂಪೂರ್ಣ ಸುರಕ್ಷತೆ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಡಿ.ಕೆ. ಸುರೇಶ್ ತಿರುಗೇಟು

0

ಬೆಂಗಳೂರು:“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಬಾಲ ನಾಯಿಯನ್ನೇ ಅಲ್ಲಡಿಸಬಾರದು ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಯಾರನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ. ನಿಯತ್ತಿನ ನಾಯಿಗಳು” ಎಂದರು.

ಹಾಗಾದರೆ ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ ಎಂದು ಕೇಳಿದಾಗ, “ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ.

ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೇರೆಯವರು ನಮ್ಮ ಋಣ ತೀರಿಸುತ್ತಾರೋ ಇಲ್ಲವೋ, ನಾಯಿ ನಮ್ಮ ಋಣ ತೀರಿಸುತ್ತದೆ ಎಂಬ ಕಾರಣಕ್ಕೆ ನಾಯಿ ಸಾಕುತ್ತಾರೆ. ಬೀದಿ ನಾಯಿಗೆ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ನುಡಿಗಳಿವೆ” ಎಂದು ಸ್ಪಷ್ಟನೆ ನೀಡಿದರು.

ಶಾಸಕರ ವಿದೇಶ ಪ್ರವಾಸ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ

ಶಾಸಕರ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಶಾಸಕರಾಗಿರುವುದರಿಂದ ಅವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ನೀವು ಶಾಸಕರಾಗಿ ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ. ನೀವು ಶಾಸಕರಾಗಲು ಪ್ರಯತ್ನಿಸಿ. ಕೆಲವರು ವಿಶ್ವಾಸಕ್ಕೆ ಹೋಗುತ್ತಾರೆ, ಮತ್ತೆ ಕೆಲವರು ದೇಶ ನೋಡಲು ಹೋಗುತ್ತಾರೆ,

ಇನ್ನು ಕೆಲವರು ಅಧ್ಯಯನಕ್ಕಾಗಿ ಹೋಗುತ್ತಾರೆ. ಇಲ್ಲಿ ವ್ಯಾಖ್ಯಾನ ಮಾಡುವಂತದ್ದು ಇಲ್ಲ. ಆಗಾಗ್ಗೆ ಶಾಸಕರುಗಳು ವಿದೇಶಕ್ಕೆ ಹೋಗಿ ಬರುತ್ತಾರೆ. ಇದರಲ್ಲಿ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಲಸಗಳ ಒತ್ತಡ, ಗೊಂದಲಗಳ ಮಧ್ಯೆ ಕುಟುಂಬ ಹಾಗೂ ಸ್ನೇಹಿತರ ವಿದೇಶ ಪ್ರವಾಸ ಎಲ್ಲರಿಗೂ ನೆಮ್ಮದಿ ನೀಡುತ್ತದೆ” ಎಂದು ತಿಳಿಸಿದರು.

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಗ್ಗೆ ಕೇಳಿದಾಗ, “ಪಂದ್ಯ ಚೆನ್ನಾಗಿತ್ತು, ಭಾರತ ಗೆದ್ದಿದೆ, ಇನ್ನು ಅನೇಕ ಪಂದ್ಯ ಗೆಲ್ಲಬೇಕಿದೆ” ಎಂದು ತಿಳಿಸಿದರು. ಆರ್ ಎಸ್ಎಸ್ ನೋಂದಣಿಯಾಗಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರದ ಬಗ್ಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು.

error: Content is protected !!