Home Blog Page 10

ಬೆಂಗಳೂರು 7 ಕೋಟಿ ದರೋಡೆ ಪ್ರಕರಣದಲ್ಲಿ ಪೊಲೀಸ್ ಕೈವಾಡ? ರಾಬರಿಯ ಮಾಸ್ಟರ್ ಮೈಂಡ್ ಕಾನ್ಸ್ಟೇಬಲ್?

0

ಬೆಂಗಳೂರು:- ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 7 ಕೋಟಿ ದರೋಡೆ ಪ್ರಕರಣದಲ್ಲಿ ರೋಚಕ ಬೆಳವಣಿಗೆ ಬೆಳಕಿಗೆ ಬಂದಿದೆ.

ಇಡೀ ದರೋಡೆಯ ಮಾಸ್ಟರ್‌ಮೈಂಡ್ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ. ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬುವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದರು. ಹೇಗೆ ರಾಬರಿ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂ. ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದರೋಡೆಕೋರರ ಪತ್ತೆಗೆ ನಾಲ್ವರು ಜಂಟಿ ಪೊಲೀಸ್ ಆಯುಕ್ತರು, 18 ಡಿಸಿಪಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಇನ್ನೋವಾ ಕಾರು ಗುರುವಾರ ತಿರುಪತಿಯಲ್ಲಿ ಸಿಕ್ಕಿದೆ. ಅಲ್ಲದೇ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಮಧ್ಯೆ ಸಿದ್ದಾಪುರ ಪೊಲೀಸರು ಡೇವಿಡ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದೆರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು:- ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದೆರಡು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲೂ ಮಳೆಯಾಗಲಿದೆ. ಕಲಬುರಗಿ, ವಿಜಯಪುರ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ.

ಬೀದರ್​ನಲ್ಲಿ 10 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28. ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಐಕ್ಯತಾ ಸಪ್ತಾಹ ಪ್ರಮಾಣ ವಚನ ಸ್ವೀಕಾರ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಗದಗ ಜಿಲ್ಲಾಡಳಿತದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣವಚನವನ್ನು ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್ ಬೋಧಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್‌ಆರ್ ರುದ್ರಣ್ಣಗೌಡ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರಾದ ಪದ್ಮಾವತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸರ್ಕಾರ ರೈತರ ಬೇಡಿಕೆ ಈಡೇರಿಸಲಿ: ಶಾಸಕ ಡಾ. ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದ್ದು, ನಮ್ಮ ಭಾಗದ ರೈತರು ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸಬೇಕು ಎಂದು ದೊಡ್ಡಮಟ್ಟದ ಹೋರಾಟ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಗುರುವಾರ ಬೆಂಗಳೂರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ವಸ್ತುಸ್ಥಿತಿ ವಿವರಿಸಿದರು.

ಕೇಂದ್ರ ಸರ್ಕಾರ ಈಗಾಗಲೇ ಎಂಎಸ್‌ಪಿ 2400 ರೂ. ಘೋಷಣೆ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 1600 ರೂ ಬೆಲೆಯಿದೆ. ಈ ಬೆಲೆಗೆ ಮಾರಾಟ ಮಾಡಿದರೆ ರೈತರು ನಷ್ಟಕ್ಕೊಳಗಾಗುತ್ತಾರೆ. ಮೊದಲೇ ಮುಂಗಾರು ಕೈಕೊಟ್ಟಿಲ್ಲ. ಬೆಳೆವಿಮೆ, ಬೆಳೆಹಾನಿ ಪರಿಹಾರವೂ ಬಂದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಬೆಂಬಲ ಬೆಲೆಗೆ ಇನ್ನೂ ಪ್ರತಿ ಕ್ವಿಂಟಲ್‌ಗೆ 500 ರೂ ಸೇರಿಸಿ 3000 ರೂ.ನಂತೆ ಖರೀದಿಸಬೇಕು. ಇದನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಆಗ್ರಹಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತಪರ ನಿರ್ಧಾರ ಕೈಗೊಂಡು ಆದೇಶಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ರೈತ ಮುಖಂಡರು ಇದ್ದರು

ಜ್ಯೋತಿ ಕಬಾಡಿಗೆ `ಹೆಮ್ಮೆಯ ಕನ್ನಡತಿ’ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಿಯದರ್ಶಿನಿ ಗ್ರಾಮೀಣಾಭಿವೃದ್ಧಿ ಫೌಂಡೇಶನ್ ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ನಾಮಕರಣದ 52ನೇ ವರ್ಷದ ಸುವರ್ಣ ವರ್ಷಾಚರಣೆ ಸಂದರ್ಭದಲ್ಲಿ, 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಹೆಮ್ಮೆಯ ಕನ್ನಡಿಗ ಮತ್ತು ಕನ್ನಡತಿ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.24ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಸಮಾರಂಭದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಗಣ್ಯ ವ್ಯಕ್ತಿಗಳನ್ನು ಗೌರವಿಸಲಾಗುತ್ತದೆ. ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಉಜ್ವಲ್ ಕಬಾಡಿ ಇವರಿಗೆ `ಹೆಮ್ಮೆಯ ಕನ್ನಡತಿ ರಾಷ್ಟ್ರ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

ಸಂಸ್ಥೆಯ ಅಧ್ಯಕ್ಷೆ ಸುಮಾ ಎಸ್.ಕವಲ್ದಾರ್ ಕಲಬುರಗಿ, ಕಾರ್ಯದರ್ಶಿ ಸತೀಶ್ ಎನ್.ಜೆ ಬೆಂಗಳೂರು, ಖಜಾಂಚಿ ಅನಸೂಯ ವಿ ಬೆಂಗಳೂರು ಹಾಗೂ ಇತರರು ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.

ಶೈಕ್ಷಣಿಕ ಅಭಿವೃದ್ಧಿಗೆ ಅಂಗನವಾಡಿ ಪೂರಕ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಬಸವರಾಜ ಹಾರೋಗೇರಿ ಹೇಳಿದರು.

ಅವರು ಪಟ್ಟಣದ ವಾರ್ಡ್ ನಂ. 11 ಮತ್ತು 12ರ ಅಂಗನವಾಡಿ ಸಂಖ್ಯೆ 141ರಲ್ಲಿ ಅಂಗನವಾಡಿಯ 50ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೊದಲ ಪಾಠಶಾಲೆ ಮನೆಯಾದರೆ, ನಂತರದ ಪೂರ್ವ ಪ್ರಾಥಮಿಕ ಶಾಲೆ ಅಂಗನವಾಡಿಯಾಗಿದೆ. ಇಂದು ಅಂಗನವಾಡಿ ಕೇಂದ್ರದಲ್ಲಿ ಸರಕಾರದ ಸಾಕಷ್ಟು ಸೌಲಭ್ಯಗಳಿದ್ದು, ಈಗ ಅಂಗನವಾಡಿಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಪಾಲಕರು ಮಕ್ಕಳನ್ನು ತಪ್ಪದೇ ಅಂಗನವಾಡಿಗಳಿಗೆ ಕಳಿಸಬೇಕು. ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಬೀಬಿಜಾನ್ ಶೇಖ, ಶೋಭಾ ದಿವಟರ, ಸುಧಾ ವಡ್ನಕೊಪ್ಪ, ಗಂಗಮ್ಮಾ ಹೊರಪೇಟಿ, ಶ್ರೀದೇವಿ ದಿವಟರ, ರಾಜೇಶ್ವರಿ ಸಂಗನಪೇಟಿ, ದಾವಲಬಿ ಶೇಖ, ರವಿ ಹೊರಪೇಟಿ, ಪಾತೀಮಾ ಶೇಖ, ಋಕ್ಷಾನಾ ಕಿಂಡ್ರಿ, ಅಂಗನವಾಡಿ ಶಿಕ್ಷಕಿ ಸವಿತಾ ಮಾಡಳ್ಳಿ, ಕಾರ್ಯಕರ್ತೆ ನೀಲವ್ವ ಖಾನಾಪೂರ ಇದ್ದರು.

ದೌರ್ಜನ್ಯ ತಡೆಯುವ ಜವಾಬ್ದಾರಿ ನಮ್ಮೆಲ್ಲರದು: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

0

ವಿಜಯಸಾಕ್ಷಿ ಸುದ್ದಿ, ಗದಗ: ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕೇವಲ ಪುಸ್ತಕದಲ್ಲಿರಬಾರದು. ಅದರ ಅನುಷ್ಠಾನದ ಜವಾಬ್ದಾರಿ ನಮ್ಮ ಮೇಲಿದೆ. ದೌರ್ಜನ್ಯ ಪೀಡಿತರ ಮನಸ್ಸಿನಲ್ಲಿ ಭಯವಲ್ಲ, ಭರವಸೆ ಮೂಡುವಂತೆ ಪೊಲೀಸ್ ಮತ್ತು ಆಡಳಿತ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಜರುಗಿದ ಗದಗ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೂಕ್ತ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ, ಪ್ರಾಥಮಿಕ ತನಿಖೆಯ ಹಂತ, ಚಾರ್ಜ್‌ಶೀಟ್ ಸಲ್ಲಿಕೆ, ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಂದಾ ಹಣಬರಟ್ಟಿ ಸಭೆಗೆ ಮಂಡಿಸಿದರು.

ಎಸ್‌ಸಿ/ಎಸ್‌ಟಿ ಕಾಯ್ದೆ, ಪರಿಹಾರ ನಿಬಂಧನೆಗಳು, ದೂರನ್ನು ಹೇಗೆ ಸಲ್ಲಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬ ವಿಷಯದಲ್ಲಿ ಜನರಿಗೆ ತಿಳುವಳಿಕೆ ಕೊಡಿ. ಶಾಲೆ-ಕಾಲೇಜುಗಳಲ್ಲಿ ಸಂವಿಧಾನ ಮೌಲ್ಯಗಳ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮಗಳನ್ನು ನಡೆಸಿ, ಜಾತಿ ಆಧಾರಿತ ದ್ವೇಷ ತಡೆಯುವ ಮನೋಭಾವ ಬೆಳೆಸಬೇಕು ಎಂದು ಡಿಸಿ ಸಿ.ಎನ್. ಶ್ರೀಧರ ಹೇಳಿದರು.

ಸಭೆಯಲ್ಲಿ ದೂರನ್ನು ಸ್ವೀಕರಿಸುವ ಪೊಲೀಸ್ ಠಾಣೆ, ತಹಸೀಲ್ದಾರ ಕಚೇರಿ, ಸಮಾಜ ಕಲ್ಯಾಣ ಕಚೇರಿ ಮುಂತಾದ ಕಡೆಗಳಲ್ಲಿ ದೂರವಾಣಿ ಸಂಖ್ಯೆಗಳು, ತುರ್ತು ಸಂಪರ್ಕ ವಿವರಗಳನ್ನು ಗೋಚರವಾಗುವಂತೆ ಅಂಟಿಸುವಂತೆ ಸೂಚಿಸಲಾಯಿತು. ಸಮಿತಿಯ ಸದಸ್ಯರ ಕೋರಿಕೆಯ ಮೇರೆಗೆ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಹ ದೌರ್ಜನ್ಯ ನಿಯಂತ್ರಣ ಸಭೆಗಳು ಆಗಬೇಕು, ಈ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಶರೀಫ್ ಬಿಳೆಯಲಿ, ಸುರೇಶ್ ನಡುವಿನಮನಿ, ವಿನಾಯಕ ಬಳ್ಳಾರಿ, ತುಕ್ಕಪ್ಪ ಪೂಜಾರ, ಶ್ರೀನಿವಾಸ ದ್ಯಾವನೂರ, ದೃವರಾಜ ಹೊನ್ನಪ್ಪನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೆರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ.ಜಾ ಪ.ಪಂ ಜನರಿಗೆ ತಲುಪಬೇಕಾದ ವಸತಿ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿ ದೊರಕಬೇಕು. ಹೊಂಬಳ ನಾಕಾದ ಸ್ಮಶಾನ ಭೂಮಿಯಲ್ಲಿ ಬೆಳೆದಿರುವ ಮುಳ್ಳಿನ ಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕು. ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಗೆ ಅಧಿಕಾರಿಗಳು ತಪ್ಪದೇ ಸಕಾಲದಲ್ಲಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಜರತ್ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ

0

ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಗದಗ ಜಿಲ್ಲಾ ಘಟಕದಿಂದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತ್ಯುತ್ಸವವನ್ನು ಅವರ ನಾಮಫಲಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಮಹಾಸಭಾದ ಗದಗ ಜಿಲ್ಲಾ ಉಸ್ತುವಾರಿ ಎಂ.ಡಿ. ಜಾಫರ್ ಡಾಲಾಯತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ಎಸ್. ನಾಗರಕಟ್ಟಿ, ನಗರಸಭೆಯ ಸದಸ್ಯ ಜೂನ್‌ಸಾಬ್ ನಮಾಜಿ, ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಉಮರ ಫಾರೂಕ್ ಹುಬ್ಬಳ್ಳಿ, ಅಂಜುಮನ್ ಕಮಿಟಿ ಮಾಜಿ ಅಧ್ಯಕ್ಷ ಯೂಸುಫ್ ನಮಾಜಿ, ಮೆಹಬೂಬ್ ಮುಲ್ಲಾ, ರಹಿಂ ಸಾಬ್ ದೊಡ್ಡಮನಿ, ಬಾಬಾಜಾನ್ ಬಳಗಾನೂರು, ಚಾಂದಸಾಬ್ ಕೊಟ್ಟೂರು, ಮೊಹಮ್ಮದ್ ಅಸ್ಲಂ ದಂಡಿನ, ಇಮ್ತಿಯಾಜ್ ಪಠಾಣ ಮುಂತಾದವರು ಉಪಸ್ಥಿತರಿದ್ದರು.

ಜಾನಪದ ಕಲೆ ಉಳಿಸಿ-ಬೆಳೆಸುವ ಕಾರ್ಯ ಶ್ಲಾಘನೀಯ: ಸುಜಾತಾ ದೊಡ್ಡಮನಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮನದ ಕತ್ತಲೆಯನ್ನು ಕಳೆದು ಜ್ಞಾನದ ಬೆಳಕು ಚೆಲ್ಲುವ ಮೂಲಕ ಮನುಷ್ಯನ ಬಾಳಲ್ಲಿ ಹೊಸ ಚೈತನ್ಯ, ಹರುಷ ತರುವುದಕ್ಕಾಗಿ ಆಚರಿಸುವಂತಹ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಕಲೆ ಉಳಿಸಿ-ಬೆಳೆಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಹೇಳಿದರು.

ಅವರು ಶಿರಹಟ್ಟಿಯ ಶ್ರೀ ಬೀರೇಶ್ವರ ಸೇವಾ ಸಮಿತಿ ವತಿಯಿಂದ 20ನೇ ವರ್ಷದ ಶ್ರೀ ಬೀರೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಯುವ ಸಂಭ್ರಮದ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲೆ, ಸಂಸ್ಕೃತಿ, ಸಾಹಿತ್ಯ, ಪರಂಪರೆ ಅದ್ಭುತವಾಗಿದೆ. ಮಕ್ಕಳು ಓದಿನ ಜೊತೆ ಜಾನಪದ ಕಲೆಯನ್ನು ಕಲಿಯಬೇಕು. ಹಳ್ಳಿ ಜನರ ನರ-ನಾಡಿಗಳಲ್ಲಿ ಜಾನಪದ ಕಲೆ ಹಾಸುಹೊಕ್ಕಾಗಿದೆ. ತಮ್ಮ ಸುಖ-ದುಃಖ, ಸುಗ್ಗಿಯ ಕ್ಷಣಗಳು ಮತ್ತು ಗ್ರಾಮೀಣ ಬದುಕಿನ ಸೊಗಡನ್ನು ಇಂದಿಗೂ ಜಾನಪದ ಹಾಡುಗಳಲ್ಲಿ ಕಾಣಲು ಸಾಧ್ಯ. ಆಧುನಿಕತೆಯ ಭರಾಟೆಯಲ್ಲಿ ಜಾನಪದ ಕಲೆ ಕಣ್ಮರೆಯಾಗುತ್ತಿದೆ. ನಶಿಸುತ್ತಿರುವ ಜಾನಪದ ಕಲೆ, ಕಲಾವಿದರ ಉಳಿವಿಗಾಗಿ ಸತತ 20 ವರ್ಷದಿಂದ ಶ್ರೀ ಬೀರೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಅದ್ಧೂರಿ ಜಾನಪದ ಕಾರ್ಯಕ್ರಮ ಆಯೋಜಿಸಿ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವುದು ಮಹತ್ತರವಾಗಿದೆ ಎಂದರು.

ನಂತರ ಪ್ರಸಿದ್ಧ ಜಾನಪದ ಕಲಾವಿದರಾದ ಟ್ರೆಂಡಿಂಗ್ ಸ್ಟಾರ್ ಮ್ಯೂಸಿಕ್ ಮೈಲಾರಿ, ಎಚ್.ಬಿ. ಪರೀಟ, ಪರಸು ಕೊಲೂರ, ಲಕ್ಷ್ಮೇಶ್ವರ ಬಿಜಾಪುರ, ಹನುಮಂತ ಬಟ್ಟೂರ ಸೇರಿ ವಿವಿಧ ಕಲಾವಿದರಿಂದ ಜಾನಪದ ಹಾಡುಗಳ ಕಾರ್ಯಕ್ರಮ ನಡೆಯಿತು.

ಕಾಶಪ್ಪ ಸ್ವಾಮಿ, ಆನಂದ ಗಡ್ಡದೇವರಮಠ, ಪ.ಪಂ ಮಾಜಿ ಸದಸ್ಯ ಮಂಜುನಾಥ ಗಂಟಿ, ವಿರೂಪಾಕ್ಷಪ್ಪ ಪಡಿಗೇರ, ಹೊನ್ನೇಶ ಪೋಟಿ, ದೇವಪ್ಪ ಲಮಾಣಿ, ನಾಗರಾಜ ಲಕ್ಕುಂಡಿ, ಎಂ.ಕೆ. ಲಮಾಣಿ, ಹೊನ್ನಪ್ಪ ಶಿರಹಟ್ಟಿ, ದೇವಪ್ಪ ಬಟ್ಟೂರ, ಮಹೇಶ ಹಾರೋಗೇರಿ, ಆನಂದ ಮಾಳೆಕೋಪ್ಪ, ಭಾಗ್ಯಶ್ರೀ ಬಾಬಣ್ಣ, ಮಂಜುನಾಥ ಹಮ್ಮಿಗಿ, ಕರಿಯಪ್ಪ ಕುಳಗೇರಿ, ಆನಂದ ಕೋಳಿ, ಹೇಮಂತ ಕೆಂಗೊಂಡ, ಮಹೇಶ ಹಾರೋಗೇರಿ ಮುಂತಾದವರು ಉಪಸ್ಥಿತರಿದ್ದರು.

 

ಲಕ್ಷ್ಮೇಶ್ವರ ಬಂದ್‌ಗೆ ಅಭೂತಪೂರ್ವ ಬೆಂಬಲ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರ ಬೆಂಬಲ ಬೆಲೆಯೋಜನೆಯಡಿ ಗೋವಿನಜೋಳ ಖರೀದಿಸಬೇಕು ಎಂಬ ದಿಟ್ಟ ನಿಲುವಿನೊಂದಿಗೆ ಸಮಗ್ರ ರೈತ ಸಂಘಟನೆಗಳ ಒಕ್ಕೂಟ ಮತ್ತು ಎಲ್ಲ ಸಂಘಟನೆಗಳ ಸಹಯೋಗದಲ್ಲಿ ಗುರುವಾರ ನೀಡಿದ್ದ ಲಕ್ಷ್ಮೇಶ್ವರ ಬಂದ್ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.

ನ.15ರಿಂದ ರೈತರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ದಿನೇ ದಿನೇ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟಕ್ಕೆ ಸರ್ಕಾರದಿಂದ ಸ್ಪಷ್ಟ, ಸಮಾಧಾನಕರ ಉತ್ತರ ಸಿಗದಿರುವ ಕಾರಣ, ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ನೀಡಿದ್ದ ಬಂದ್ ಕರೆ ಸಂಪೂರ್ಣ ಯಶಸ್ವಿಯಾಯಿತು.

ಬಂದ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಡಳಿತ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ರೈತ ಸಂಘಟನೆಗಳ ಒಕ್ಕೂಟ ಕರೆನೀಡಿದ್ದ ಬಂದ್‌ಗೆ ಅನೇಕ ಮಠಾಧೀಶರು, ಕನ್ನಡಪರ ಸಂಘಟನೆಗಳು, ಬಜಾರ ವ್ಯಾಪಾರಸ್ಥರ ಸಂಘ, ಬೀದಿ ಬದಿ ವ್ಯಾಪಾರಸ್ಥರ ಸಂಘ, ವಿದ್ಯಾರ್ಥಿ ಸಂಘಟನೆಗಳು, ಶ್ರೀರಾಮ ಸೇನೆ, ವಕೀಲರ ಸಂಘ, ಮೆಕಾನಿಕ್ ಸಂಘ, ಮಾಜಿ ಸೈನಿಕರ ಸಂಘ, ಔಷಧ ವ್ಯಾಪಾರಸ್ಥರ ಸಂಘ, ವೈದ್ಯರ ಸಂಘ, ಅಂಜುಮನ್ ಕಮಿಟಿ ಮುಂತಾದ ಸಂಘಟನೆಗಳು ಸ್ವಯಂ ಪ್ರೇರಿತ ಬೆಂಬಲ ವ್ಯಕ್ತಪಡಿಸಿ ಪಾಲ್ಗೊಂಡಿದ್ದ ರಾಗಿ ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಅಮವಾಸ್ಯೆ ಇದ್ದರೂ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು, ಹೋಟೆಲ್, ಬೀದಿ ಬದಿ ವ್ಯಾಪಾರಸ್ಥರು, ಎಪಿಎಂಸಿ, ಬಜಾರ ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದರಿಂದ ಎಲ್ಲ ವ್ಯಾಪಾರ ವಹಿವಾಟು ಸ್ಥಗಿತಗೊಂಡು ಇಡೀ ದಿನ ಬಜಾರ್ ಬಿಕೋ ಎನ್ನುವಂತಿತ್ತು. ತಹಸೀಲ್ದಾರ ರಾಘವೇಂದ್ರ ರಾವ್, ಡಿವೈಎಸ್ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಪಟ್ಟಣದಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಹೋರಾಟದ ನೇತೃತ್ವ ವಹಿಸಿದ್ದ ಮಂಜುನಾಥ ಮಾಗಡಿ, ನಾಗರಾಜ ಚಿಂಚಲಿ, ರವಿಕಾಂತ ಅಂಗಡಿ, ಮಹೇಶ ಹೊಗೆಸೊಪ್ಪಿನ, ಶರಣು ಗೋಡಿ, ಪೂರ್ಣಾಜಿ ಖರಾಟೆ, ಬಸಣ್ಣ ಬೆಂಡಿಗೇರಿ ಸೇರಿ ಸಾವಿರಾರು ಜನರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಬೃಹತ್ ಪ್ರತಿಭಟನಾ ಮೆರವಣಿಗೆ
ಪಟ್ಟಣದ ಪೇಟೆ ಆಂಜನೇಯ ದೇವಸ್ಥಾನದಿಂದ ರೈತರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಹಲಗೆ, ಭಜನೆ, ಎತ್ತು, ಚಕ್ಕಡಿ ಸಮೇತರಾಗಿ ಸರಕಾರ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಘೋಷಣೆ ಕೂಗುತ್ತಾ ಶಿಗ್ಲಿ ನಾಕಾ ಬಳಿ ಸಂಗೊಳ್ಳಿ ರಾಯಣ್ಣ ವೃತ್ತದವರೆಗೂ ಸಾಗಿದರು. ಈ ವೇಳೆ ಪ್ರತಿಭಟನಾಕಾರರು ಸರಕಾರವು ತನ್ನ ಸ್ಪಷ್ಟ ನಿರ್ಧಾರ ಘೋಷಣೆ ಮಾಡದಿರುವದಕ್ಕೆ ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಹೂವಿನಶಿಗ್ಲಿ, ಕುಂದಗೋಳ, ಅತ್ತಿಮತ್ತೂರ, ಜಮಖಂಡಿ, ಮಳೆಮಲ್ಲಿಕಾರ್ಜುನ ಶ್ರೀಗಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.

error: Content is protected !!