Home Blog Page 107

ಹಿರಿಯರಿಗೆ ಪೊಲೀಸ್ ಇಲಾಖೆ `ಆಸರೆ’

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಮಿಲ್ ಆವರಣದಲ್ಲಿ ತಾಲೂಕಾ ಹಿರಿಯ ನಾಗರಿಕರು ಮತ್ತು ನಿವೃತ್ತ ನೌಕರರ ಸಂಘದ ವಿಶೇಷ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಹಿರಿಯ ನಾಗರಿಕರಿಗೆ ಇರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿ, ಹಿರಿಯರು ಸಮಾಜದ ಆಧಾರ ಸ್ತಂಭಗಳಿದ್ದಂತೆ. ಅವರಿಗಿರುವ ಜ್ಞಾನ, ಅನುಭವ ಈಗಿನವರಲ್ಲಿ ಕಾಣಲು ಸಾಧ್ಯವಿಲ್ಲ. ಆದರೆ ವಯಸ್ಸಾಗುತ್ತಿದ್ದಂತೆ ಅವರನ್ನು ಮಕ್ಕಳು ಕಡೆಗಣಿಸುವ ಕಾರ್ಯಗಳು ಬಹಳಷ್ಟು ಕಡೆಗಳಲ್ಲಿ ಕಾಣುತ್ತಿರುವುದು ವಿಷಾದದ ಸಂಗತಿಯಾಗಿದೆ. ಅವರ ಕೊನೆಗಾಲದಲ್ಲಿಯೂ ಸಹ ಅವರ ಬೇಡಿಕೆಗಳನ್ನು ಈಡೇರಿಸುವವರು ಇಲ್ಲದಂತಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆಯ ಬಗ್ಗೆ ಸದಾ ಆತಂಕ ಇದ್ದೇ ಇರುತ್ತದೆ. ಕೆಲವು ಕಡೆ ಸಮಾಜ ಕಂಟಕರಿಂದ ಕಿರುಕುಳ, ಮತ್ತೆ ಕೆಲವು ಕಡೆ ಸ್ವತಃ ಕುಟುಂಬದವರಿಂದಲೇ ನಿರ್ಲಕ್ಷ್ಯ. ಇಂತಹ ಆತಂಕವನ್ನು ದೂರ ಮಾಡಲು ಮತ್ತು ಅವರಿಗೆ ಧೈರ್ಯ ತುಂಬಲು ಕರ್ನಾಟಕ ಪೊಲೀಸ್ ಇಲಾಖೆ `ಆಸರೆ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಬಗ್ಗೆ ಹಿರಿಯ ನಾಗರಿಕರು ತಿಳಿದುಕೊಂಡು ಅದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯಡಿ ಪೊಲೀಸರೇ ಅಂತಹ ಮನೆಗಳಿಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸುವುದು, ತುರ್ತು ವೈದ್ಯಕೀಯ ಸೇವೆ, ಸರ್ಕಾರಿ ಸೇವೆ ಇತ್ಯಾದಿಗಳ ಬಗ್ಗೆ ನೆರವಾಗುತ್ತಾರೆ ಎಂದರು.

ಹಿರಿಯರ ಬಗ್ಗೆ ನಿರ್ಲಕ್ಷ್ಯ ತೋರುವ ಕುಟುಂಬದ ಸದಸ್ಯರಿಗೆ ಪೊಲೀಸರು ತಿಳುವಳಿಕೆ ನೀಡುವ ಕಾರ್ಯವನ್ನು ಸಹ ಮಾಡುತ್ತಾರೆ. ಅದಕ್ಕಾಗಿ ಹಿರಿಯರು ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ಇಲಾಖೆಯ ಆಸರೆ ಸದಾ ಇರುತ್ತದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಿ.ಆರ್. ಲಕ್ಕುಂಡಿಮಠ ವಹಿಸಿದ್ದರು. ಸಿ.ಪಿ.ಐ ಬಿ.ವೈ. ನ್ಯಾಮಗೌಡ್ರ, ಚನ್ನಪ್ಪ ಕೋಲಕಾರ, ಚಂಬಣ್ಣ ಬಾಳಿಕಾಯಿ, ಐ.ಎಸ್. ಮಡಿವಾಳರ, ಎಸ್.ಸಿ. ಅಳಗವಾಡಿ, ಡಾ. ಪಿ.ಡಿ. ತೋಟದ, ದೇವಣ್ಣ ಬಳಿಗಾರ, ಕುಬೇರಪ್ಪ ಮಹಾಂತಶೆಟ್ಟರ, ಅಶೋಕ ಪಡ್ನೀಸ್, ಎಸ್.ಎಸ್. ಪವಾಡಶೆಟ್ಟರ, ಸೂಗಿರಪ್ಪ ವಾಲಿಶೆಟ್ಟರ, ಶಿವಣ್ಣ ಕುಮಸಿ, ತೋಟಪ್ಪ ಸೂರಣಗಿ, ನಿಂಗಪ್ಪ ಬನ್ನಿ, ನೀಲಪ್ಪ ಕರ್ಜೆಕಣ್ಣವರ ಮುಂತಾದವರು ಹಾಜರಿದ್ದರು.

ಧಾರವಾಡ ಪ್ರತಿಭಟನೆಗೆ ಫಲ: 56 ಸಾವಿರ ಹುದ್ದೆ ಭರ್ತಿಗೆ ಕ್ಯಾಬಿನೆಟ್ ಒಪ್ಪಿಗೆ

0

ಬೆಂಗಳೂರು: ಇತ್ತೀಚೆಗೆ ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ Dharwad Protest ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ಇದನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೇಮಕಾತಿಗೆ ಸಂಬಂಧಿಸಿದ ಸಾಧಕ–ಬಾಧಕಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದ್ದು, ಅಂತಿಮವಾಗಿ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿ ನಡೆಸಲು ತೀರ್ಮಾನಿಸಲಾಗಿದೆ. ಇದರಂತೆ, ಕರ್ನಾಟಕದ ವಿವಿಧ ಇಲಾಖೆಗಳಲ್ಲಿರುವ ಸುಮಾರು 56 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದರಿಂದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಸ್ಪಷ್ಟ ಫಲ ದೊರಕಿದಂತಾಗಿದೆ.

ರಾಜ್ಯ ಸರ್ಕಾರವು ಹಲವು ಸವಾಲುಗಳ ನಡುವೆಯೇ 15% ಎಸ್‌ಸಿ ಮೀಸಲಾತಿಗೆ ಒಳಮೀಸಲಾತಿ ನೀಡಿ ತಾತ್ಕಾಲಿಕ ಪರಿಹಾರವಾಗಿ ನೇಮಕಾತಿಗೆ ಮುಂದಾಗಿದ್ದು, ಎಸ್‌ಸಿ ಮೀಸಲಾತಿಯನ್ನು 17%ಕ್ಕೆ ಹೆಚ್ಚಿಸಿ ತಕ್ಷಣ ಜಾರಿಗೆ ತರುವುದು ಕಾನೂನು ಅಡೆತಡೆಗಳ ಕಾರಣ ಅಸಾಧ್ಯವಾಗಿದೆ. ರಾಜ್ಯಪಾಲರು ಒಳಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದ್ದರೂ, ಕಾನೂನು ಹೋರಾಟ ಮುಂದುವರಿಸಬೇಕಿರುವುದರಿಂದ ಹಳೆಯ ಸೂತ್ರದ ಅನ್ವಯವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿನಿಯರ ಪ್ರತಿಭಟನೆಗೆ ಪ್ರೇರಣೆ? ಪುತ್ತೂರು ಕಾಲೇಜು ಪ್ರಾಂಶುಪಾಲೆ ಸಸ್ಪೆಂಡ್

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿಯರ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾರನ್ನು ಅಮಾನತು ಮಾಡಿ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಾಲೂಕು ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿರುವ ಕಾಲೇಜಿನಲ್ಲಿ ನಡೆಯುತ್ತಿರುವ ಆಸ್ಪತ್ರೆ ಕಾಮಗಾರಿಯಿಂದಾಗಿ ತರಗತಿಗಳಲ್ಲಿ ಧೂಳು ತುಂಬಿ ಶಿಕ್ಷಣಕ್ಕೆ ಅಡಚಣೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಕಾಲೇಜಿನ ಅವ್ಯವಸ್ಥೆ ಖಂಡಿಸಿ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯರು ರಸ್ತೆ ತಡೆದು ಧರಣಿ ನಡೆಸಿದ್ದರು. ಈ ಪ್ರತಿಭಟನೆಗೆ ಪ್ರಾಂಶುಪಾಲೆ ಪ್ರೇರೇಪಿಸಿದ್ದಾರೆ ಹಾಗೂ ಕಾನೂನು ಉಲ್ಲಂಘನೆಯಾಗಿದೆ ಎಂಬ ಆರೋಪದಡಿ ಇಲಾಖೆ ಕ್ರಮ ಕೈಗೊಂಡಿದೆ.

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಮಸ್ಯೆಗಳನ್ನು ತನ್ನ ಗಮನಕ್ಕೆ ಏಕೆ ತರಲಿಲ್ಲ ಎಂದು ಪ್ರಾಂಶುಪಾಲೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವೇಳೆ ಇಬ್ಬರ ನಡುವೆ ವಾಗ್ವಾದವೂ ನಡೆದಿತ್ತು. ಈ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಮತ್ತಷ್ಟು ರಾಜಕೀಯ ಮತ್ತು ಆಡಳಿತಾತ್ಮಕ ತಿರುವು ನೀಡಿದೆ.

ಕಲಬೆರಕೆ ಹಾಲಿನ ವಿರುದ್ಧ ಕಠಿಣ ಕ್ರಮ: ಕೆಜಿಎಫ್‌ನಲ್ಲಿ 8 ಮಂದಿ ಬಂಧನ

0

ಕೋಲಾರ: ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಇದೀಗ ಕಲಬೆರಕೆ ಹಾಲಿನ ದಂಧೆ ತಲೆದೋರಿದ್ದು ಆತಂಕಕ್ಕೆ ಕಾರಣವಾಗಿದೆ.

ಮುಳಬಾಗಿಲು, ಕೆಜಿಎಫ್ ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ಸುಮಾರು 32 ಸ್ಥಳಗಳಲ್ಲಿ ಕಲಬೆರಕೆ ಹಾಲು ಮಾರಾಟವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕೆಜಿಎಫ್‌ನಲ್ಲಿ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಎಂಟು ಮಂದಿಯನ್ನು ಬಂಧಿಸಲಾಗಿದೆ.

ಕಲಬೆರಕೆ ಹಾಲಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಖಾಸಗಿ ಹಾಗೂ ಅನಧಿಕೃತ ಡೇರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

188 ಕೋಟಿ ರೂ. ಆದಾಯ ಕೊರತೆ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ

0

ಹುಬ್ಬಳ್ಳಿ: ಜನರಿಂದ ತಪ್ಪದೇ ವಿದ್ಯುತ್ ಬಿಲ್ ವಸೂಲಿ ಮಾಡುವ ಹೆಸ್ಕಾಂ, ಸೇವೆ ನೀಡುವಲ್ಲಿ ವಿಫಲವಾಗುತ್ತಿದೆ ಎಂಬ ಆರೋಪಗಳ ನಡುವೆ, ಸಂಸ್ಥೆಯ ಆರ್ಥಿಕ ಸಂಕಷ್ಟದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

2024–25 ಸಾಲಿನಲ್ಲಿ 188 ಕೋಟಿ ರೂ. ಆದಾಯ ಕೊರತೆ ಎದುರಾಗಿದೆ ಎಂದು ಹೆಸ್ಕಾಂ ತಿಳಿಸಿದ್ದು, ಈ ನಷ್ಟವನ್ನು ಸರಿದೂಗಿಸಲು ಅವಕಾಶ ನೀಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆ ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಏಳು ಜಿಲ್ಲೆಗಳಿಂದ ಬಂದ ಗ್ರಾಹಕರು, ರೈತರು ಮತ್ತು ಕೈಗಾರಿಕೋದ್ಯಮಿಗಳು ಹೆಸ್ಕಾಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಕ್ರಮ ವೆಚ್ಚ, ಹಗರಣಗಳು, ಸರಿಯಾದ ಬಿಲ್ ವಸೂಲಿ ಆಗದಿರುವುದು ಹಾಗೂ ಸೇವಾ ವೈಫಲ್ಯವೇ ನಷ್ಟಕ್ಕೆ ಕಾರಣ ಎಂದು ಆರೋಪಿಸಿದ ಸಾರ್ವಜನಿಕರು, ಯಾವುದೇ ಕಾರಣಕ್ಕೂ ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕಬಾರದು ಎಂದು ಒತ್ತಾಯಿಸಿದರು. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ, ಟ್ರಾನ್ಸ್‌ಫಾರ್ಮರ್ ದುರಸ್ತಿಯಲ್ಲಿ ವಿಳಂಬ ಸೇರಿದಂತೆ ಹಲವು ದೂರುಗಳು ಸಭೆಯಲ್ಲಿ ಕೇಳಿಬಂದವು. ಈ ವೇಳೆ ಮಾತನಾಡಿದ ಆಯೋಗದ ಅಧ್ಯಕ್ಷ ಪಿ. ರವಿಕುಮಾರ್, ಇದು ವಿದ್ಯುತ್ ದರ ಹೆಚ್ಚಳಕ್ಕೆ ಸಂಬಂಧಿಸಿದ ಸಭೆಯಲ್ಲ ಎಂದು ಸ್ಪಷ್ಟಪಡಿಸಿ, ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಗ್ಯಾರಂಟಿಗಳು ಹೊರೆಯಾದರೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

0

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂಬ ಚರ್ಚೆಗಳ ನಡುವೆಯೂ, ಯಾವುದೇ ಗ್ಯಾರಂಟಿಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಅನಾವಶ್ಯಕ ಊಹಾಪೋಹಗಳು ಹರಡಲಾಗುತ್ತಿವೆ. ಕೆಲವು ಪ್ರಕರಣಗಳಲ್ಲಿ ಮೃತಪಟ್ಟಿರುವವರ ಬ್ಯಾಂಕ್ ಖಾತೆಗಳಿಗೆ ಗ್ಯಾರಂಟಿ ಯೋಜನೆಯ ಹಣ ಜಮೆಯಾಗಿರುವುದು ಮತ್ತು ಪಡಿತರ ಅಕ್ಕಿಯನ್ನೂ ಸಹ ಮೃತರ ಹೆಸರಿನಲ್ಲಿ ಪಡೆಯಲಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಗೃಹಜ್ಯೋತಿ ಯೋಜನೆಯಲ್ಲಿ ಇಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದ ಅವರು, ಇತರ ಯೋಜನೆಗಳಲ್ಲಿ ದುರುಪಯೋಗವಾಗಿರುವುದು ಸತ್ಯವಾಗಿದ್ದು, ಮೃತರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಪಡೆದಿರುವ ಪ್ರಕರಣಗಳಿವೆ ಎಂದು ಹೇಳಿದರು. ಈ ರೀತಿಯ ಅಕ್ರಮಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಮೃತಪಟ್ಟವರ ನಿಖರ ಲೆಕ್ಕ ಸಿಗದೆ ಇರುವುದೇ ದೊಡ್ಡ ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂಬ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದರು. ಸ್ಥಿತಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬಾರದು ಎಂಬ ಸಲಹೆ ಕುರಿತು ಕೇಳಿದಾಗ, ಆ ವಿಷಯವನ್ನೂ ಪರಿಶೀಲಿಸಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

ಗ್ಯಾರಂಟಿಗಳ ಭಾರ! 2.30 ಲಕ್ಷ ಮೃತರ ಖಾತೆಗೆ ಹಣ ಜಮೆ – ಸರ್ಕಾರಕ್ಕೆ ಆರ್ಥಿಕ ಸಂಕಷ್ಟ

0

ಬೆಂಗಳೂರು: ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಆರ್ಥಿಕ ಒತ್ತಡಕ್ಕೆ ಸಿಲುಕಿರುವುದಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಅಂಶ ಬಹಿರಂಗವಾಗಿದ್ದು, ಒಟ್ಟು 2.30 ಲಕ್ಷ ಮೃತ ಫಲಾನುಭವಿಗಳ ಖಾತೆಗಳಿಗೆ ಸುಮಾರು 79 ಕೋಟಿ ರೂ. ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಈ ಮೊತ್ತವನ್ನು ವಾಪಸ್ ಪಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದ್ದು, ಈಗಾಗಲೇ 2.30 ಕೋಟಿ ರೂ. ಮರುಪಡೆಯಲಾಗಿದೆ. ಈ ಬೆಳವಣಿಗೆಯ ನಡುವೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವೇ ಸರ್ಕಾರಕ್ಕೆ ಭಾರವಾಗುತ್ತಿದೆ ಎಂಬ ಮಾತುಗಳು ಆಡಳಿತ ವಲಯದಿಂದಲೇ ಕೇಳಿಬರುತ್ತಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ ಉಂಟಾಗಿದೆ ಎಂದು ಸ್ವಪಕ್ಷದ ಶಾಸಕರು ಹಾಗೂ ಜನಪ್ರತಿನಿಧಿಗಳೇ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲೇ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೂಡ ಉಚಿತ ಹಾಗೂ ಗ್ಯಾರಂಟಿ ಯೋಜನೆಗಳು ದೇಶದ ಆರ್ಥಿಕತೆಗೆ ಮಾರಕವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿತ್ತು. ಇದಾದ ಬಳಿಕ ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಬರ್ಡನ್ ಆಗಿವೆ ಎಂದು ಹೇಳಿದ್ದು, ಸಿಎಂ ಸಿದ್ದರಾಮಯ್ಯ ವರ್ಷಕ್ಕೆ 52 ಸಾವಿರ ಕೋಟಿ ರೂ.ಕ್ಕಿಂತ ಹೆಚ್ಚು ಹಣ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಕೂಡ ಸರ್ಕಾರಕ್ಕೆ ಎಲ್ಲವೂ ಹೊರೆಯಾಗಿದೆ ಎಂಬ ಮಾತು ಆಡಿದ್ದು, ಗ್ಯಾರಂಟಿಗಳ ಆರ್ಥಿಕ ಪರಿಣಾಮವನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ.

ಆದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಅವುಗಳನ್ನು ಮುಂದುವರಿಸಲಾಗುವುದು ಎಂದು ಸಿಎಂ, ಡಿಸಿಎಂ ಹಾಗೂ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲರೂ ಸೇರಿಯೇ ಗ್ಯಾರಂಟಿ ಘೋಷಣೆ ಮಾಡಿದ್ದೇವೆ, ಈಗ ಅವು ಹೊರೆಯಾಗಿವೆ ಎಂದು ಭಾಸವಾಗಿರಬಹುದು ಎಂದಿದ್ದಾರೆ. ಇದೇ ವೇಳೆ ಗ್ಯಾರಂಟಿ ಯೋಜನೆಗಳು ಹೊರೆಯಲ್ಲ ಎಂದು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

ಇತ್ತ ಆಡಳಿತ ಪಕ್ಷದ ಈ ಹೇಳಿಕೆಗಳ ವಿರುದ್ಧ ಭಾಜಪ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಅಶ್ವಥ್ ನಾರಾಯಣ್, ಗ್ಯಾರಂಟಿಗಳ ಮೇಲೆಯೇ ಸರ್ಕಾರಕ್ಕೆ ನಂಬಿಕೆ ಇಲ್ಲದಂತಾಗಿದೆ, ಗೊಂದಲ ಮೂಡಿಸದೆ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗೃಹಲಕ್ಷ್ಮಿ ಯೋಜನೆಯಲ್ಲಿ 5,000 ಕೋಟಿ ರೂ. ನಾಪತ್ತೆಯಾಗಿದೆ ಎಂದು ಆರೋಪಿಸಿದ್ದು, ಖಾಲಿ ಹುದ್ದೆಗಳಿದ್ದರೂ ಯುವ ನಿಧಿ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸಿಟಿ ರವಿ, ಜನ ಉದ್ಯೋಗ ಕೇಳುತ್ತಿದ್ದಾರೆ, ಭಿಕ್ಷೆ ಅಲ್ಲ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕೇಂದ್ರ ಸಚಿವ ಕುಮಾರಸ್ವಾಮಿ, ಗ್ಯಾರಂಟಿಗಳ ಭರವಸೆಯೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ನಾಡಿನ ಅಭಿವೃದ್ಧಿಗೆ ಪೂರಕವಾದ ಸ್ಪಷ್ಟ ಕಾರ್ಯಕ್ರಮಗಳು ಕಾಣುತ್ತಿಲ್ಲ. ಜನರಿಂದ ಸಂಗ್ರಹಿಸಿದ ತೆರಿಗೆ ಹಣದ ಸಮರ್ಪಕ ಬಳಕೆ ಆಗುತ್ತಿಲ್ಲ ಎಂಬುದೇ ಇಂದಿನ ಸ್ಥಿತಿಗೆ ಕಾರಣ ಎಂದು ಟೀಕಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಭವಿಷ್ಯ ಮತ್ತು ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿವೆ.

ಫ್ರಿಡ್ಜ್ ನೀರಿಗಿಂತ ಮಣ್ಣಿನ ಮಡಕೆ ನೀರೇ ಬೆಸ್ಟ್: ಬೇಸಿಗೆಯಲ್ಲಿ ಆರೋಗ್ಯ ಕಾಪಾಡುವ ಸರಳ ಉಪಾಯ!

0

ಹಿಂದಿನ ಕಾಲದಲ್ಲಿ ಮಣ್ಣಿನ ಮಡಕೆಯಲ್ಲೇ ನೀರನ್ನು ಸಂಗ್ರಹಿಸಿ ಕುಡಿಯುವ ಪದ್ಧತಿ ಸಾಮಾನ್ಯವಾಗಿತ್ತು. ಅಡುಗೆಗೆ, ಕುಡಿಯಲು ಹಾಗೂ ದೇಹವನ್ನು ತಂಪಾಗಿಸಲು ಮಣ್ಣಿನ ಮಡಕೆ ನೀರನ್ನೇ ಬಳಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫ್ರಿಡ್ಜ್ ಬಳಕೆ ಹೆಚ್ಚಾಗುತ್ತಿದ್ದಂತೆ ಮಣ್ಣಿನ ಮಡಕೆಗಳು ನಮ್ಮ ಬದುಕಿನಿಂದ ನಿಧಾನವಾಗಿ ಮಾಯವಾಗಿವೆ.

ಆರೋಗ್ಯ ತಜ್ಞರ ಅಭಿಪ್ರಾಯದಂತೆ, ಅತಿಯಾಗಿ ತಣ್ಣನೆಯ ಫ್ರಿಡ್ಜ್ ನೀರು ದೇಹಕ್ಕೆ ಎಲ್ಲ ಸಂದರ್ಭದಲ್ಲೂ ಸೂಕ್ತವಲ್ಲ. ಅದರ ಬದಲು ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರು ದೇಹಕ್ಕೆ ನೈಸರ್ಗಿಕವಾಗಿ ಹೊಂದಿಕೊಳ್ಳುವ ತಾಪಮಾನದಲ್ಲಿದ್ದು, ಆರೋಗ್ಯಕ್ಕೆ ಹೆಚ್ಚು ಲಾಭಕಾರಿ.

ಮಣ್ಣಿನ ಮಡಕೆ ಜೇಡಿಮಣ್ಣಿನಿಂದ ತಯಾರಾಗಿರುವುದರಿಂದ ಅದರಲ್ಲಿ ಸಂಗ್ರಹಿಸಿದ ನೀರು ಸ್ವಾಭಾವಿಕವಾಗಿ ತಂಪಾಗುತ್ತದೆ. ಜೇಡಿಮಣ್ಣಿನ ರಂಧ್ರಗಳ ಮೂಲಕ ನೀರು ನಿಧಾನವಾಗಿ ವಾಷ್ಪೀಕರಣಗೊಂಡು ತಾಪಮಾನ ಕಡಿಮೆಯಾಗುತ್ತದೆ. ಈ ಪ್ರಕ್ರಿಯೆಯಿಂದ ನೀರು ಅತಿಯಾಗಿ ತಣ್ಣಗಾಗದೆ ದೇಹಕ್ಕೆ ಅನುಕೂಲಕರವಾಗಿರುತ್ತದೆ. ಮಣ್ಣಿನ ಮಡಕೆ ನೀರಿನ pH ಮಟ್ಟವು ಸಮತೋಲನದಲ್ಲಿರುವುದರಿಂದ ದೇಹದಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಗ್ಯಾಸ್ಟ್ರಿಕ್, ಆಮ್ಲೀಯತೆ, ಮಲಬದ್ಧತೆ ಹಾಗೂ ಇತರ ಹೊಟ್ಟೆ ಸಂಬಂಧಿತ ಸಮಸ್ಯೆಗಳು ನಿಯಂತ್ರಣಕ್ಕೆ ಬರುತ್ತವೆ.

ಇದಲ್ಲದೆ, ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರು ದೇಹದ ನಿರ್ವಿಷೀಕರಣಕ್ಕೆ ಸಹಕಾರಿ. ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶಗಳು ಹೊರಹಾಕಲ್ಪಡುತ್ತವೆ ಮತ್ತು ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಣ್ಣಿನ ಮಡಕೆಯಲ್ಲಿರುವ ನೈಸರ್ಗಿಕ ಖನಿಜಗಳು ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ದೇಹವನ್ನು ಚುರುಕಾಗಿಡುತ್ತವೆ. ಬೇಸಿಗೆಯ ತೀವ್ರ ಬಿಸಿಲಿನ ಸಮಯದಲ್ಲಿ ಶಾಖದ ಹೊಡೆತದಿಂದ ರಕ್ಷಣೆ ನೀಡಲು ಮಣ್ಣಿನ ಮಡಕೆ ನೀರು ಅತ್ಯಂತ ಪರಿಣಾಮಕಾರಿಯಾಗಿದೆ. ಇದು ದೇಹವನ್ನು ತ್ವರಿತವಾಗಿ ಪುನರ್ಜಲೀಕರಣಗೊಳಿಸಿ ದೌರ್ಬಲ್ಯವನ್ನು ಕಡಿಮೆ ಮಾಡುತ್ತದೆ.

ಫ್ರಿಡ್ಜ್ ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ಗಂಟಲು ನೋವು, ಶೀತ, ಜ್ವರ ಸೇರಿದಂತೆ ಕೆಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದರೆ ಮಣ್ಣಿನ ಮಡಕೆ ನೀರು ಕುಡಿಯುವುದರಿಂದ ಇಂತಹ ಸಮಸ್ಯೆಗಳ ಅಪಾಯ ಕಡಿಮೆ. ಜೊತೆಗೆ ಮಣ್ಣಿನ ಮಡಕೆಯ ನೀರಿಗೆ ಇರುವ ಸಹಜ ಮಣ್ಣಿನ ವಾಸನೆ ಮತ್ತು ಶುದ್ಧೀಕರಣ ಗುಣಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಹೀಗಾಗಿ ಪಾರಂಪರಿಕ ಜ್ಞಾನವನ್ನು ಮರಳಿ ಅಳವಡಿಸಿಕೊಂಡು, ಈ ಬೇಸಿಗೆಯಲ್ಲಿ ಫ್ರಿಡ್ಜ್ ನೀರಿನ ಬದಲು ಮಣ್ಣಿನ ಮಡಕೆ ನೀರನ್ನು ಆಯ್ಕೆ ಮಾಡುವುದು ಆರೋಗ್ಯಕರ ಮತ್ತು ಸುರಕ್ಷಿತ ನಿರ್ಧಾರವಾಗುತ್ತದೆ.

ಕಣ್ಣು ನೋವಿನ ಹಿಂದೆ ಇರಬಹುದು ಮೈಗ್ರೇನ್ ಸಮಸ್ಯೆ!? ತಕ್ಷಣ ವೈದ್ಯರನ್ನು ಸಂಪರ್ಕಿಸಿ

0

ಇತ್ತೀಚಿನ ದಿನಗಳಲ್ಲಿ ಕಣ್ಣುಗಳ ಮೇಲೆ ನೋವು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದ್ದು, ಬಹುತೇಕರು ಅದನ್ನು ತಲೆನೋವಿನ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ.

ನೋವು ಹೆಚ್ಚಾದಾಗ ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿಸಿಕೊಂಡರೂ ವರದಿಯಲ್ಲಿ ಯಾವುದೇ ಗಂಭೀರ ಸಮಸ್ಯೆ ಕಂಡುಬರದ ಸಂದರ್ಭಗಳೂ ಇವೆ. ಆದರೆ ವೈದ್ಯರ ಪ್ರಕಾರ ಕಣ್ಣುಗಳ ಮೇಲಿನ ನೋವು ದೃಷ್ಟಿ ದುರ್ಬಲತೆ, ಕನ್ನಡಕದ ಪಾಯಿಂಟ್ ಬದಲಾವಣೆಯ ಅಗತ್ಯ, ಮೈಗ್ರೇನ್ ಅಥವಾ ಕಣ್ಣಿನ ಮೇಲಿನ ಹೆಚ್ಚಿದ ಒತ್ತಡದ ಲಕ್ಷಣವಾಗಿರಬಹುದು. ವಿಶೇಷವಾಗಿ ಕನ್ನಡಕದ ಪ್ರಿಸ್ಕ್ರಿಪ್ಷನ್ ಸರಿಯಾಗಿಲ್ಲದಿದ್ದರೆ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಹಣೆಯ ಭಾಗದವರೆಗೆ ನೋವು ವಿಸ್ತರಿಸಬಹುದು. ಕಣ್ಣುಗಳ ಮೇಲೆ ಮಾತ್ರ ನೋವು ಕಂಡುಬಂದರೆ ಅದು ಸಾಮಾನ್ಯವಾಗಿ ಮೆದುಳಿನ ಸಮಸ್ಯೆಯ ಸೂಚಕವಾಗಿರುವುದು ಅಪರೂಪ.

ಆದರೆ ತಲೆತಿರುಗುವಿಕೆ, ಪದೇಪದೇ ವಾಂತಿ, ಹಣೆಯಿಂದ ಕತ್ತಿನವರೆಗೆ ತೀವ್ರ ತಲೆನೋವು, ದೇಹದ ಭಾಗಗಳಲ್ಲಿ ಹಠಾತ್ ಮರಗಟ್ಟುವಿಕೆ ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಕಣ್ಣು ಪರೀಕ್ಷೆ ಮಾಡಿಸಿಕೊಳ್ಳುವುದು, ಮೊಬೈಲ್ ಹಾಗೂ ಟಿವಿ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡುವುದು ಬಹಳ ಮುಖ್ಯ.

ದಂಪತಿಗಳ ಐಟಿ ವಿವರಗಳು RTI ಅಡಿಯಲ್ಲಿ ನೀಡಲು ಸಾಧ್ಯವಿಲ್ಲ: ಹೈಕೋರ್ಟ್

0

ಬೆಂಗಳೂರು: ಆದಾಯ ತೆರಿಗೆ ಪಾವತಿಸುವುದು ವ್ಯಕ್ತಿಯ ಗೌಪ್ಯತೆಯ ವಿಷಯವಾಗಿದ್ದು, ವೈವಾಹಿಕ ವಿವಾದಗಳಲ್ಲಿ ದಂಪತಿಗಳ ಆದಾಯ ತೆರಿಗೆ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಪಡೆಯಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಸಂಬಂಧ ಸಮಗ್ರ ಮಾರ್ಗಸೂಚಿಗಳನ್ನು ಕೂಡ ನ್ಯಾಯಾಲಯ ಹೊರಡಿಸಿದೆ.

ಪತಿಯ ಆದಾಯ ತೆರಿಗೆ ಪಾವತಿ ವಿವರಗಳನ್ನು ಪತ್ನಿಗೆ ಒದಗಿಸುವಂತೆ ಕೇಂದ್ರ ಮಾಹಿತಿ ಆಯೋಗ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಆಯೋಗದ ಆದೇಶವನ್ನು ರದ್ದುಪಡಿಸಿದೆ.

ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಜೀವನಾಂಶ ಅಥವಾ ನಿರ್ವಹಣಾ ವೆಚ್ಚ ನಿಗದಿ ಮಾಡುವಾಗ ಪಕ್ಷಗಾರರ ಆದಾಯದ ದಾಖಲೆಗಳನ್ನು ಪರಿಶೀಲಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯಗಳು ಎರಡೂ ಪಕ್ಷಗಳ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಆದಾಯ ತೆರಿಗೆ ಇಲಾಖೆ ಅಥವಾ ಇತರೆ ಪ್ರಾಧಿಕಾರಗಳಿಗೆ ಮನವಿ ಮಾಡಬಹುದು ಎಂದು ನ್ಯಾಯಪೀಠ ಹೇಳಿದೆ.

ಪಕ್ಷಗಾರರ ಆದಾಯ ಕುರಿತ ವಿವಾದಗಳಿದ್ದರೆ, ಆದಾಯ ತೆರಿಗೆ ಇಲಾಖೆ, ಬ್ಯಾಂಕ್‌ಗಳು ಹಾಗೂ ಇತರೆ ಆರ್ಥಿಕ ಸಂಸ್ಥೆಗಳಿಗೆ ಸಮನ್ಸ್ ಜಾರಿ ಮಾಡುವ ಅಧಿಕಾರ ವಿಚಾರಣಾ ನ್ಯಾಯಾಲಯಗಳಿಗೆ ಇದೆ ಎಂದು ತಿಳಿಸಿದೆ.

ಆದಾಯ ತೆರಿಗೆ ಪಾವತಿ, ಮೌಲ್ಯಮಾಪನ ಹಾಗೂ ಇತರೆ ಹಣಕಾಸು ವಿವರಗಳು RTI ಕಾಯ್ದೆಯ ಸೆಕ್ಷನ್ 8(1)(ಜೆ) ಅಡಿಯಲ್ಲಿ ವೈಯಕ್ತಿಕ ಮಾಹಿತಿಯಾಗಿದ್ದು, ಅವುಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ ಎಂದು ನ್ಯಾಯಾಲಯ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ಅಡಗಿದ್ದಲ್ಲಿ ಮಾತ್ರ ಸೂಕ್ತ ಪ್ರಾಧಿಕಾರದ ಸೂಚನೆಯ ಮೇರೆಗೆ ಮಾಹಿತಿ ನೀಡಬಹುದಾಗಿದೆ.

ವೈವಾಹಿಕ ವಿವಾದಗಳು ಅಥವಾ ಜೀವನಾಂಶದ ಪ್ರಕರಣಗಳಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿರುವುದಿಲ್ಲ. ಆದ್ದರಿಂದ ಸಂಗಾತಿಯ ಆದಾಯ ತೆರಿಗೆ ವಿವರಗಳನ್ನು ಪಡೆಯಲು RTI ಮಾರ್ಗ ಬದಲಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ನಿಜವಾದ ಆದಾಯ ಮಾಹಿತಿ ಪಡೆಯಲು ಎದುರಾಗುವ ಸಮಸ್ಯೆಗಳನ್ನು ನಿವಾರಿಸಲು ವಿಚಾರಣಾ ನ್ಯಾಯಾಲಯಗಳು ಮತ್ತು ಆದಾಯ ತೆರಿಗೆ ಇಲಾಖೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನೂ ಹೈಕೋರ್ಟ್ ಪ್ರಕಟಿಸಿದೆ.

error: Content is protected !!