Home Blog Page 11

ಗದಗಕ್ಕೆ ‘ಲೋಕಲ್ ಟು ಗ್ಲೋಬಲ್’ ಟಚ್

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗದ ನಿಜವಾದ ಸಂಪತ್ತು ಇಲ್ಲಿನ ಜನರು. ಉದ್ಯಮಶೀಲತೆ, ಕೃಷಿ, ಕೌಶಲ್ಯ ಹಾಗೂ ಸಂಪನ್ಮೂಲಗಳಿರುವ ಗದಗ ಜಿಲ್ಲೆಯನ್ನು ಸ್ಥಳೀಯ ಮಾರುಕಟ್ಟೆಗೆ ಸೀಮಿತಗೊಳಿಸದೆ ರಫ್ತು ಆಧಾರಿತ ಅಗ್ರಿಟೆಕ್ ಹಬ್ ಆಗಿ ರೂಪಿಸಿ ಜಾಗತಿಕ ಮಾರುಕಟ್ಟೆಗೆ ಕೊಂಡೊಯ್ಯುವ ಸಂಕಲ್ಪ ಮಾಡಬೇಕು ಎಂದು ವಿಜಯನಗರದ ಜೆಎಸ್‌ಡಬ್ಲ್ಯು ಸ್ಟೀಲ್‌ನ ಉಪಾಧ್ಯಕ್ಷ ಹಾಗೂ ಹಿರಿಯ ಉದ್ಯಮಿ ಸಂಜಯ್ ಆಲಮೇಲಕರ್ ಕರೆ ನೀಡಿದರು.

ನಗರದ ಎಪಿಎಂಸಿ ಯಾರ್ಡ್‌ನ ಸ್ವಾಮಿ ವಿವೇಕಾನಂದ ಹಾಗೂ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಆ.14ರಿಂದ 18ರವರೆಗೆ ನಡೆಯುತ್ತಿರುವ ‘ಗದಗ ಉತ್ಸವ-2026’ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗದಗದ ಸಾಮರ್ಥ್ಯವನ್ನು ಸ್ಥಳೀಯ ಮಾರುಕಟ್ಟೆಗೆ ಸೀಮಿತಗೊಳಿಸಬಾರದು. ‘ಲೋಕಲ್ ಟು ಗ್ಲೋಬಲ್’ ಪರಿಕಲ್ಪನೆಯೊಂದಿಗೆ ಜಿಲ್ಲೆಯ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಸೃಷ್ಟಿಸಬೇಕು ಎಂದರು.

ಗುಜರಾತ್, ಆಂಧ್ರಪ್ರದೇಶ ಸೇರಿದಂತೆ ಹೊರರಾಜ್ಯಗಳ ಹೂಡಿಕೆದಾರರನ್ನು ಗದಗಕ್ಕೆ ಕರೆತಂದು ಅಗತ್ಯ ಕಚ್ಚಾ ವಸ್ತು, ತಂತ್ರಜ್ಞಾನ ಹಾಗೂ ಸಹಕಾರ ಒದಗಿಸಲು ಸಿದ್ಧವಿರುವುದಾಗಿ ಆಲಮೇಲಕರ್ ತಿಳಿಸಿದರು.

ಜೆಎಸ್‌ಡಬ್ಲ್ಯು ವತಿಯಿಂದ ಸ್ಥಳೀಯ ಉದ್ಯಮಿಗಳಿಗೆ ತಾಂತ್ರಿಕ, ಮೆಟೀರಿಯಲ್ ಹಾಗೂ ಮಾರುಕಟ್ಟೆ ನೆರವು ನೀಡುವ ಸಾಧ್ಯತೆಗಳನ್ನೂ ಅವರು ಪ್ರಸ್ತಾಪಿಸಿದರು.

ದೇಶದ ಜಿಡಿಪಿಗೆ ಶೇ.30 ಹಾಗೂ ರಫ್ತಿಗೆ ಶೇ.45ರಷ್ಟು ಕೊಡುಗೆ ನೀಡುತ್ತಿರುವುದು ಎಂಎಸ್‌ಎಂಇ ವಲಯ. ಕರ್ನಾಟಕದಲ್ಲಿ 26 ಲಕ್ಷಕ್ಕೂ ಅಧಿಕ ಎಂಎಸ್‌ಎಂಇಗಳಿದ್ದು, ಸ್ಥಳೀಯವಾಗಿ ನೋಂದಣಿಯಾಗುವ ಎಂಎಸ್‌ಎಂಇಗಳಿಗೆ ಕಂಪನಿ ವತಿಯಿಂದ ₹45 ಲಕ್ಷದವರೆಗೆ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆ ಜಾರಿಯಲ್ಲಿದೆ ಎಂದರು.

ಒಂದು ಕಾಲದಲ್ಲಿ ಹತ್ತಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದ ಗದಗದಲ್ಲಿ ಹತ್ತಿ ಉದ್ಯಮವನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ. ರೈಲ್ವೆ ಬೋಗಿಗಳ ಬಿಡಿಭಾಗಗಳನ್ನು ಪಶ್ಚಿಮ ಬಂಗಾಳದಿಂದ ತರಿಸುವ ಬದಲು ಗದಗದಲ್ಲೇ ಉತ್ಪಾದಿಸಲು ಅಪಾರ ಅವಕಾಶವಿದೆ. ಈ ಕುರಿತು ನೈಋತ್ಯ ರೈಲ್ವೆ ಮಹಾಪ್ರಬಂಧಕರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಅಗ್ರಿಟೆಕ್ ಹಬ್‌ಗೆ ಪಂಚಸೂತ್ರ

ಆಲಮೇಲಕರ್ ಸೂಚಿಸಿದ ಪಂಚಸೂತ್ರಗಳಲ್ಲಿ ಅಗ್ರಿಟೆಕ್ ಹಬ್, ಸೀಡ್ ಇನ್ನೋವೇಶನ್ ಸೆಂಟರ್, ಫುಡ್ ಪ್ರೊಸೆಸಿಂಗ್ ಡೆಸ್ಟಿನೇಷನ್, ಸ್ಟೀಲ್-ಇಂಜಿನಿಯರಿಂಗ್ ಕ್ಲಸ್ಟರ್ ಹಾಗೂ ರಫ್ತು ಆಧಾರಿತ ಜಿಲ್ಲೆ ಪ್ರಮುಖವಾಗಿವೆ.

ಯುವಕರು ಉದ್ಯೋಗ ಬೇಡುವವರಾಗದೆ ಉದ್ಯೋಗ ನೀಡುವವರಾಗಬೇಕು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಿ, ಉತ್ಸವದ ಎಲ್ಲ ಮಳಿಗೆಗಳಿಗೆ ಅವರನ್ನು ಕರೆತರಬೇಕು. ಗದಗದಲ್ಲಿ ಸ್ಟಾರ್ಟ್‌ಅಪ್ ಫೆಸಿಲಿಟೇಶನ್ ಸೆಂಟರ್, ಎಂಎಸ್‌ಎಂಇ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಯಾಗಬೇಕು. ಉದ್ಯಮ-ಶಿಕ್ಷಣ ಸಂಸ್ಥೆಗಳ ನಡುವೆ ಕೊಂಡಿ ಬೆಸೆಯಲು ಹಾಗೂ ಉತ್ತರ ಕರ್ನಾಟಕಕ್ಕೆ ಸಿಎಸ್‌ಆರ್ ನಿಧಿ ತರಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಮೈಂಡ್‌ಸೆಟ್ ಕೋಚ್ ಹಾಗೂ ಕಾರ್ಪೊರೇಟ್ ಟ್ರೇನರ್ ಮಹೇಶ ಮಾಶ್ಯಾಳ ಮಾತನಾಡಿ, 2030-32ರ ವೇಳೆಗೆ ತಂತ್ರಜ್ಞಾನದಿಂದ ಜಗತ್ತಿನಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಎಐ ಸೇರಿದಂತೆ ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಎಚ್ಚರಿಸಿದರು. ಆನ್‌ಲೈನ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದ್ದು, ಗ್ರಾಹಕರ ಮನಸ್ಥಿತಿಯೂ ಬದಲಾಗಿದೆ ಎಂದರು.

ಜ.ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಯುವಕರ ವಲಸೆ ತಡೆಯಲು ಅಲ್ಲಿಯೇ ಉದ್ಯೋಗ ಸೃಷ್ಟಿಸಬೇಕು. ಕೈಗಾರಿಕೆಗಳ ವಿಕೇಂದ್ರೀಕರಣದಿಂದ ಮಾತ್ರ ಹಳ್ಳಿಗಳ ಅಭಿವೃದ್ಧಿ ಸಾಧ್ಯ ಎಂದರು.

ಆಝಾದ್ ಬ್ಯಾಂಕ್ ಅಧ್ಯಕ್ಷ ಸರ್ಫರಾಜ ಉಮಚಗಿ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿದರು. ಉತ್ಸವ ಸಮಿತಿ ಅಧ್ಯಕ್ಷ ಮಧುಸೂಧನ ಪುಣೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಚೇಂಬರ್ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ಅಧ್ಯಕ್ಷತೆ ವಹಿಸಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಬಬರ್ಚಿ, ಚೇಂಬರ್ ಪದಾಧಿಕಾರಿಗಳು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷಿತಿ ಅಶ್ವಥ್ ಸುಲಾಖೆ ಪ್ರಾರ್ಥಿಸಿದರು. ಶಿವಬಸಯ್ಯ ಗಡ್ಡದಮಠ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಚಂದ್ರು ಬಾಳಿಹಳ್ಳಿಮಠ ಹಾಗೂ ಮುರುಗೇಶ ಬಡ್ನಿ ನಿರೂಪಿಸಿದರು. ಚೇಂಬರ್ ಕಾರ್ಯದರ್ಶಿ ಚನ್ನವೀರಪ್ಪ ಹುಣಶಿಕಟ್ಟಿ ವಂದಿಸಿದರು.

“ಗದಗದ ಸಾಮರ್ಥ್ಯವನ್ನು ಸ್ಥಳೀಯ ಮಾರುಕಟ್ಟೆಗೆ ಸೀಮಿತಗೊಳಿಸಬಾರದು. ‘ಲೋಕಲ್ ಟು ಗ್ಲೋಬಲ್’ ಪರಿಕಲ್ಪನೆಯೊಂದಿಗೆ ಜಿಲ್ಲೆಯ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಸೃಷ್ಟಿಸಬೇಕು.”
ಸಂಜಯ್ ಆಲಮೇಲಕರ್, ಹಿರಿಯ ಉದ್ಯಮಿ ಹಾಗೂ ಜೆಎಸ್‌ಡಬ್ಲ್ಯು ಸ್ಟೀಲ್ ಉಪಾಧ್ಯಕ್ಷ

ವರ್ಗಾವಣೆ ದಂಧೆಯಾಗಿ ಬದಲಾಗಿದೆ: ಸಚಿವ ಬಸವರಾಜ ರಾಯರೆಡ್ಡಿ

0
ವಿಜಯಸಾಕ್ಷಿ ಸುದ್ದಿ, ಗದಗ: ಕೆಲ ಅಧಿಕಾರಿಗಳು, ಶಾಸಕರು ಹಾಗೂ ಸಚಿವರ ಮೂಲಕ ಆಯಕಟ್ಟಿನ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿರುವುದರಿಂದ ವರ್ಗಾವಣೆ ವ್ಯವಸ್ಥೆಯೇ ದಂಧೆಯಾಗಿ ಮಾರ್ಪಟ್ಟಿದೆ ಎಂದು ಉನ್ನತ ಶಿಕ್ಷಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಕೆಲ ಇಲಾಖೆಗಳಲ್ಲಿ ಈಗಾಗಲೇ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಇಲಾಖೆಗಳಲ್ಲೂ ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ಜಾರಿಗೊಳಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇದರಿಂದ ವರ್ಗಾವಣೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂಬ ನಿರೀಕ್ಷೆಯಿದೆ ಎಂದರು.
ರಾಜ್ಯದಲ್ಲಿ 3,000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 180ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವ ಸಾಧ್ಯತೆ ಇದೆ. ಬರ ಪರಿಹಾರ ಹಾಗೂ ಉದ್ಯೋಗ ಭರವಸೆ ಕಾರ್ಯಗಳಿಗೆ ಪ್ರತಿ ಜಿಲ್ಲೆಗೆ ಸುಮಾರು ₹500 ಕೋಟಿ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ರಾಜ್ಯದಿಂದ ಕೇಂದ್ರ ಸರ್ಕಾರ ಸುಮಾರು ₹4.50 ಲಕ್ಷ ಕೋಟಿ ತೆರಿಗೆ ಪಡೆಯುತ್ತಿದ್ದು, ರಾಜ್ಯಕ್ಕೆ ಕೇವಲ ₹68 ಸಾವಿರ ಕೋಟಿಯಷ್ಟು ಮಾತ್ರ ವಾಪಸ್ ನೀಡುತ್ತಿದೆ. ಬರದಂತಹ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರವು ರಾಜ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಲ್ಲ ಅಧಿಕಾರವೂ ಇರುವುದಿಲ್ಲ. ಶಾಸಕ ಎಚ್‌.ಕೆ. ಪಾಟೀಲ, ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಸಲಹೆ ಪಡೆದು ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಲು ಈವರೆಗೆ ಕಡಿಮೆ ಸಮಯ ಸಿಕ್ಕಿದೆ. ಆಗಸ್ಟ್‌ 30ರ ನಂತರ ಇಡೀ ದಿನ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶೇ.80ರಷ್ಟು ಬೆಳೆ ಹಾನಿ; ₹218 ಕೋಟಿ ನಷ್ಟ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.32ರಷ್ಟು ಮಳೆ ಕೊರತೆಯಾಗಿದ್ದು, ಸುಮಾರು ಶೇ.80ರಷ್ಟು ಬೆಳೆಗಳು ಹಾನಿಗೊಳಗಾಗಿವೆ. ಪ್ರಾಥಮಿಕ ಅಂದಾಜಿನಂತೆ ₹218 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.

ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಲಹೆಯಂತೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಏಳು ತಾಲೂಕುಗಳಲ್ಲಿ ಸಭೆ ನಡೆಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ ಎಂದರು.

ನಾಲ್ಕು ಕ್ಷೇತ್ರಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ

ನರಗುಂದ ಹೊರತುಪಡಿಸಿ ಬಹುತೇಕ ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. ನರಗುಂದದಲ್ಲಿ ಜೂನ್‌ನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದ್ದರೂ, ಅಲ್ಲಿಯೂ ಬರ ಪರಿಸ್ಥಿತಿ ಕಂಡುಬಂದಿದೆ. ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಒಟ್ಟಾರೆ ಶೇ.32ರಷ್ಟು ಮಳೆ ಕೊರತೆಯಾಗಿದೆ ಎಂದು ಹೇಳಿದರು.

ಆಗಸ್ಟ್ 11ರಂದು ಜಿಲ್ಲಾಧಿಕಾರಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ತೆರಳಿ ಬೆಳೆ ಹಾನಿಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದಾರೆ. ಪ್ರಾಥಮಿಕ ವರದಿಯಂತೆ ಜಿಲ್ಲೆಯಲ್ಲಿ ₹218 ಕೋಟಿ ಮೌಲ್ಯದ ಬೆಳೆ ನಷ್ಟವಾಗಿರುವುದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

125 ದಿನ ಉದ್ಯೋಗಕ್ಕೆ ಒತ್ತು

ಬರ ಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ಅವಶ್ಯಕತೆ ಹೆಚ್ಚಾಗಿದೆ. ಹೊಸ ಖಾತ್ರಿ ಕಾಯ್ದೆಯಡಿ ಪ್ರತಿ ಕೆಲಸಗಾರರಿಗೆ 125 ದಿನಗಳವರೆಗೆ ಉದ್ಯೋಗ ಒದಗಿಸಲು ಅವಕಾಶವಿದ್ದು, ಶೀಘ್ರದಲ್ಲೇ ಮಾನವ ಸಂಪನ್ಮೂಲ ಆಧಾರಿತ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.

ಪ್ರತಿ ಜಿಲ್ಲೆಗೆ ₹500 ಕೋಟಿಗೂ ಅಧಿಕ ಅನುದಾನದ ಅಗತ್ಯವಿದೆ. ರಾಜ್ಯದ 180ಕ್ಕೂ ಹೆಚ್ಚು ಜಿಲ್ಲೆಗಳು ಬರ ಪರಿಸ್ಥಿತಿಗೆ ತುತ್ತಾಗಿವೆ ಎಂದು ಸಚಿವರು ಹೇಳಿದರು.

ಕೇಂದ್ರದ ನೆರವಿಗೆ ಮನವಿ

ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಸರ್ಕಾರಕ್ಕೆ ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಕೇವಲ ರಾಜ್ಯ ಸರ್ಕಾರದಿಂದಲೇ ಬರ ಪರಿಸ್ಥಿತಿ ಎದುರಿಸುವುದು ಕಷ್ಟಸಾಧ್ಯವಾಗಿದ್ದು, ಕೇಂದ್ರದಿಂದ ಅಗತ್ಯ ಆರ್ಥಿಕ ನೆರವು ಕೋರಲಾಗುವುದು ಎಂದರು.

ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ತೆರಿಗೆ ಹಣ ಹೋಗುತ್ತಿದೆ. ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದು ಬಸವರಾಜ ರಾಯರಡ್ಡಿ ಒತ್ತಾಯಿಸಿದರು.

ಅಭಿವೃದ್ಧಿಗೆ ಚುನಾಯಿತ ಪ್ರತಿನಿಧಿಗಳ ಸಲಹೆ

ಜಿಲ್ಲೆಯ ಆಡಳಿತ ಸುಗಮವಾಗಿ ನಡೆಯಲು ಹಾಗೂ ಸರ್ಕಾರದ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾಮಗಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತದೆ. ಜಿಲ್ಲೆಯ ಸಮಸ್ಯೆಗಳನ್ನು ಆಲಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಲ್ಪಿಸುವುದು ಉಸ್ತುವಾರಿ ಸಚಿವರ ಕರ್ತವ್ಯವಾಗಿದೆ ಎಂದರು.

ಗದಗ ಜಿಲ್ಲೆಯಲ್ಲಿ ಅನುಭವ ಹೊಂದಿರುವ ಚುನಾಯಿತ ಪ್ರತಿನಿಧಿಗಳಿದ್ದು, ಅವರ ಸಲಹೆ ಹಾಗೂ ವಿಚಾರಗಳನ್ನು ಪಡೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಜಿಲ್ಲೆಯ ಪಾತ್ರ ಮಹತ್ವದ್ದಾಗಿದೆ. 1947ರ ಆಗಸ್ಟ್ 15ರಂದು ಬ್ರಿಟಿಷರ ಆಡಳಿತ ಅಂತ್ಯಗೊಂಡು ದೇಶದಲ್ಲಿ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆ ಜಾರಿಗೆ ಬಂದಿದ್ದು, ಅಂದಿನಿಂದ ಜಾತಿ, ಧರ್ಮ ಹಾಗೂ ಪಕ್ಷಭೇದ ಮರೆತು ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ ಎಂದರು.

2023ರ ಮೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಸರ್ಕಾರ ಜನಪರ ಹಾಗೂ ಉತ್ತಮ ಆಡಳಿತ ನೀಡಿದ್ದು, ಉಳಿದ ಅವಧಿಯಲ್ಲಿಯೂ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು. ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿಯೂ ಸರ್ಕಾರ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕೆ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಎಸ್ಪಿ ರೋಹನ್ ಜಗದೀಶ್, ಡಿಸಿಎಫ್ ಸಂತೋಷ ಕುಮಾರ, ಎಡಿಸಿ ಡಾ. ದುರಗೇಶ್ ಕೆ.ಆರ್., ಜಿಪಂ ಡಿಎಸ್‌ಸಿ ಆರ್. ಮುಂಡರಗಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಹಾಗೂ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಉಪಸ್ಥಿತರಿದ್ದರು.

“ಕೇವಲ ರಾಜ್ಯ ಸರ್ಕಾರದಿಂದ ಬರ ಪರಿಸ್ಥಿತಿ ಎದುರಿಸುವುದು ಕಷ್ಟ. ಕೇಂದ್ರ ಸರ್ಕಾರ ವಾಸ್ತವಾಂಶಗಳನ್ನು ಅರಿತು ರಾಜ್ಯಕ್ಕೆ ಅಗತ್ಯ ಆರ್ಥಿಕ ನೆರವು ನೀಡಬೇಕು.”
ಬಸವರಾಜ ರಾಯರಡ್ಡಿ, ಉಸ್ತುವಾರಿ ಸಚಿವರು

ನೈತಿಕ ಹೊಣೆಗಾರಿಕೆ ಸ್ವೀಕರಿಸುವ ಪರಿಪಾಠ ಬೆಳೆಯಲಿ: ಅನಿಲ್ ಲಾಲ್ ಬಹದ್ದೂರ್ ಶಾಸ್ತ್ರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಸ್ವೀಕರಿಸುವ ಪರಿಪಾಠ ಹಿಂದಿನ ದಿನಗಳಲ್ಲಿತ್ತು. ಆದರೆ ಇಂದು ತಪ್ಪಿನ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಬದಲಾಗಿರುವ ರಾಜಕೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಅನಿಲ್ ಲಾಲ್ ಬಹದ್ದೂರ್ ಶಾಸ್ತ್ರಿ ವಿಷಾದಿಸಿದರು.

ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಎಚ್.ಕೆ. ಪಾಟೀಲ ಸೇವಾ ತಂಡ ಆಯೋಜಿಸಿದ್ದ ‘ನಿಮ್ಮ ಸೇವೆಗೆ ಅವಕಾಶ ಕೊಡಿ’ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ತಮ್ಮ ತಂದೆ ಲಾಲ್ ಬಹದ್ದೂರ್ ಶಾಸ್ತ್ರಿ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ರೈಲು ಅಪಘಾತ ಸಂಭವಿಸಿದಾಗ, ರೈಲನ್ನು ತಾವು ಚಲಾಯಿಸದಿದ್ದರೂ ಸಚಿವರಾಗಿ ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಆಗ ರಾಜೀನಾಮೆಗಾಗಿ ಯಾರೂ ಪ್ರತಿಭಟನೆ ನಡೆಸಬೇಕಾದ ಅಗತ್ಯವಿರಲಿಲ್ಲ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅದಕ್ಕಾಗಿ ವಿದ್ಯಾರ್ಥಿಗಳು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದರು.

ಹೇಳುವುದಕ್ಕೂ ಮಾಡುವುದಕ್ಕೂ ಇರುವ ಅಂತರ ಇಂದಿನ ವ್ಯವಸ್ಥೆಯಲ್ಲಿ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ವಿದೇಶ ಪ್ರವಾಸ ಮಾಡದಂತೆ ಕರೆ ನೀಡಿದರೂ ತಾವೇ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಮಾತು ಮತ್ತು ಕೃತ್ಯಗಳ ನಡುವೆ ಹೊಂದಾಣಿಕೆ ಇರಬೇಕು ಎಂದು ಅವರು ಹೇಳಿದರು.

ಎಚ್.ಕೆ. ಪಾಟೀಲ ಸೇವಾ ತಂಡವು 11 ಸಾವಿರ ಕುಟುಂಬಗಳನ್ನು ದತ್ತು ಪಡೆದು, 23ಕ್ಕೂ ಹೆಚ್ಚು ಜನಪರ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮುಂದಾಗಿರುವುದು ದೇಶದಲ್ಲೇ ಅಪರೂಪದ ಸಾಮಾಜಿಕ ಸೇವಾ ಕಾರ್ಯ ಎಂದು ಅನಿಲ್ ಶಾಸ್ತ್ರಿ ಶ್ಲಾಘಿಸಿದರು.

ಜನಪ್ರತಿನಿಧಿಯಾಗಿ ಆಯ್ಕೆಯಾದ ಬಳಿಕ ಜನರಿಂದ ದೂರವಾಗುವವರ ನಡುವೆ ಎಚ್.ಕೆ. ಪಾಟೀಲ ಅವರು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದು, ಅವರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವುದು ಮಾದರಿಯಾಗಿದೆ. ಕಳೆದ 20 ವರ್ಷಗಳಿಂದ ಎಚ್.ಕೆ. ಪಾಟೀಲ ಅವರ ಜನಸೇವೆಯನ್ನು ಗಮನಿಸುತ್ತಿದ್ದು, ಅವರ ಬದ್ಧತೆ, ಪ್ರಾಮಾಣಿಕತೆ ಹಾಗೂ ಸಮರ್ಪಣೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದರು.

ಕೆ.ಎಚ್. ಪಾಟೀಲ ಅವರು ಹಾಕಿಕೊಟ್ಟ ಜನಸೇವೆ ಮತ್ತು ಅಭಿವೃದ್ಧಿಯ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ. 73ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಎಚ್.ಕೆ. ಪಾಟೀಲ ಅವರಿಗೆ ಶುಭಾಶಯ ಕೋರಿದ ಅವರು, ಗದಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.

ಸೇವೆಗೆ 577 ಕ್ಯಾಪ್ಟನ್‌ಗಳ ಪಡೆ

ಸೇವಾ ತಂಡದ ಅಧ್ಯಕ್ಷ ಪ್ರಭು ಬುರಬುರೆ ಮಾತನಾಡಿ, ಗದಗ ಜಿಲ್ಲೆಯನ್ನು ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಗುರಿಯೊಂದಿಗೆ ತಂಡ ಕಾರ್ಯನಿರ್ವಹಿಸುತ್ತಿದೆ ಎಂದರು.

ಅಂಗಾಂಗ ದಾನ ನೋಂದಣಿಯಲ್ಲಿ ಹಿಂದೆ ಗದಗ ಜಿಲ್ಲೆ 21ನೇ ಸ್ಥಾನದಲ್ಲಿತ್ತು. ಸೇವಾ ತಂಡದ ಸಂಘಟಿತ ಪ್ರಯತ್ನದಿಂದ ಇದೀಗ ಮೂರನೇ ಸ್ಥಾನಕ್ಕೆ ಏರಿದೆ. ಅಕ್ಟೋಬರ್ 2ರ ವೇಳೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೇರಿಸುವ ಗುರಿ ಹೊಂದಿದ್ದು, ಅದಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಸೇವಾ ತಂಡದಿಂದ ಒಟ್ಟು 11 ಸಾವಿರ ಮನೆಗಳನ್ನು ದತ್ತು ಪಡೆಯಲಾಗಿದೆ. ತಂಡದಲ್ಲಿ 577 ಕ್ಯಾಪ್ಟನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ 283 ಕ್ಯಾಪ್ಟನ್‌ಗಳಿಗೆ ತಲಾ 50 ಮನೆಗಳ ಜವಾಬ್ದಾರಿ ವಹಿಸಲಾಗಿದೆ. ಅಗತ್ಯವಿರುವ ಕುಟುಂಬಗಳಿಗೆ 23ಕ್ಕೂ ಹೆಚ್ಚು ಸೇವೆಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸಲು ತಂಡ ಸಜ್ಜಾಗಿದೆ ಎಂದರು.

ಸೇವಾ ಕಾರ್ಯಗಳಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ನೂತನ ವೆಬ್‌ಸೈಟ್ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.

ಜನಸೇವೆಯೇ ತಂಡದ ಗುರಿ

ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಸೇವಾ ತಂಡದ ಯಶಸ್ಸು ಕ್ಯಾಪ್ಟನ್‌ಗಳ ಕಲ್ಪನೆ, ಬದ್ಧತೆ ಹಾಗೂ ಕಾರ್ಯನಿರ್ವಹಣೆಯ ಮೇಲೆ ಅವಲಂಬಿತವಾಗಿದೆ. ನಾವೆಲ್ಲರೂ ರಾಜಕೀಯ ಕಾರ್ಯಕರ್ತರು ಎಂಬುದನ್ನು ಅರಿತುಕೊಂಡು ನಾಯಕರನ್ನು ಬಲಪಡಿಸುವ ಮೂಲಕ ಜನಸೇವೆ ಮಾಡಲು ಸಿದ್ಧರಾಗಬೇಕು ಎಂದರು.

ಸೇವೆ ಮಾಡಬೇಕೆಂಬ ಮನೋಭಾವ ಹೊಂದಿರುವವರು ತಂಡದೊಂದಿಗೆ ಇದ್ದಾರೆ. ಸೇವೆಯ ಅಗತ್ಯವಿರುವವರು ನಮ್ಮ ನಡುವೆ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಂತಹವರ ನೆರವಿಗೆ ಸೇವಾ ತಂಡ ಸದಾ ಸಿದ್ಧವಿದೆ. ಕೊರೊನಾ ಸಂದರ್ಭದಲ್ಲಿ ನಿರಂತರವಾಗಿ ಜನಪರ ಕಾರ್ಯಗಳನ್ನು ಕೈಗೊಂಡಿದ್ದು, ಮುಂದೆಯೂ ಸೇವಾ ಕಾರ್ಯವನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಎಚ್. ಪಾಟೀಲ ಅವರು ಸೇವಾ ತಂಡದಿಂದ ಲಭ್ಯವಿರುವ 23 ಸೇವೆಗಳ ವಿವರ ಹಾಗೂ ವೆಬ್‌ಸೈಟ್ ಕಾರ್ಯವೈಖರಿಯನ್ನು ಪರಿಚಯಿಸಿದರು. ಶಾಸಕ ಎಚ್.ಕೆ. ಪಾಟೀಲ ಅವರು ಸೇವಾ ತಂಡದ ಕ್ಯಾಪ್ಟನ್‌ಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಅನಿಲ್ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸೇವಾ ತಂಡದ ವತಿಯಿಂದ ನಂದಿ ವಿಗ್ರಹ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್. ಕೋನರೆಡ್ಡಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಎ.ಎಂ. ಹಿಂಡಸಗೇರಿ, ವಾಸಣ್ಣ ಕುರುಡಗಿ, ನೀಲಮ್ಮ ಬೋಳನವರ, ಸಿದ್ಧಲಿಂಗೇಶ್ವರ ಪಾಟೀಲ, ಬಸವರಾಜ ಕಡೇಮನಿ, ಗುರಣ್ಣ ಬಳಗಾನೂರ, ಬಸವರಾಜ ಸುಂಕಾಪುರ, ಅಕ್ಬರಸಾಬ ಬಬರ್ಚಿ, ಕೊಟ್ರೇಶಪ್ಪ ಬಸೆಗಣ್ಣಿ, ಎಂ.ಸಿ. ಶೇಖ್, ಬರ್ಕತಲಿ ಮುಲ್ಲಾ, ಆನಂದಯ್ಯಸ್ವಾಮಿ ಗಡ್ಡದೇವರಮಠ ಸೇರಿದಂತೆ ಹಲವು ಮುಖಂಡರು, ಸೇವಾ ತಂಡದ ಕ್ಯಾಪ್ಟನ್‌ಗಳು ಹಾಗೂ ಕೋಆರ್ಡಿನೇಟರ್‌ಗಳು ಉಪಸ್ಥಿತರಿದ್ದರು.

ಬಿ.ಬಿ. ಅಸೂಟಿ ಸ್ವಾಗತಿಸಿದರು.

ಕೋಟ್

“ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರೈಲ್ವೆ ಸಚಿವರಾಗಿದ್ದಾಗ ನಡೆದ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ರೈಲನ್ನು ಅವರು ಚಲಾಯಿಸಿರಲಿಲ್ಲ. ಆದರೂ ಸಚಿವರಾಗಿ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಆಗ ಯಾರೂ ಪ್ರತಿಭಟನೆ ಮಾಡಬೇಕಾಗಿರಲಿಲ್ಲ. ಆದರೆ ಇಂದು ರಾಜೀನಾಮೆಗಾಗಿ ವಿದ್ಯಾರ್ಥಿಗಳು ಬೀದಿಗಿಳಿಯಬೇಕಾದ ಪರಿಸ್ಥಿತಿ ಬಂದಿದೆ. ಇದು ಬದಲಾಗಿರುವ ರಾಜಕೀಯ ಸಂಸ್ಕೃತಿಗೆ ಉದಾಹರಣೆ.”
ಅನಿಲ್ ಲಾಲ್ ಬಹದ್ದೂರ್ ಶಾಸ್ತ್ರಿ

ಕೋಟ್

“ಅಂಗಾಂಗ ದಾನ ನೋಂದಣಿಯಲ್ಲಿ ಗದಗ ಜಿಲ್ಲೆ ಹಿಂದೆ 21ನೇ ಸ್ಥಾನದಲ್ಲಿತ್ತು. ಸೇವಾ ತಂಡದ ಸಂಘಟಿತ ಪ್ರಯತ್ನದಿಂದ ಇದೀಗ ಮೂರನೇ ಸ್ಥಾನಕ್ಕೆ ಬಂದಿದೆ. ಅಕ್ಟೋಬರ್ 2ರ ವೇಳೆಗೆ ರಾಜ್ಯದಲ್ಲೇ ಮೊದಲ ಸ್ಥಾನಕ್ಕೇರುವ ಗುರಿ ಹೊಂದಿದ್ದು, ಅದಕ್ಕಾಗಿ ನಿರಂತರ ಪ್ರಯತ್ನ ಮಾಡಲಾಗುತ್ತಿದೆ.”
ಪ್ರಭು ಬುರಬುರೆ, ಅಧ್ಯಕ್ಷರು, ಎಚ್.ಕೆ. ಪಾಟೀಲ ಸೇವಾ ತಂಡ

ಲಕ್ಷ್ಮೇಶ್ವರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ, ಸಡಗರ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪಟ್ಟಣದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ. ಪ್ರಕಾಶ ಹೊಸಮನಿ, ದೇವಣ್ಣ ಬಳಿಗಾರ, ಮಾದೇವಪ್ಪ ಅಣ್ಣಿಗೇರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಆಡಳಿತಾಧಿಕಾರಿ ಹಾಗೂ ಇಒ ಮಂಜುಳಾ ಹಕಾರಿ ಧ್ವಜಾರೋಹಣ ನೆರವೇರಿಸಿದರು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಮಡಿವಾಳರ, ಕೃಷ್ಣಪ್ಪ ಧರ್ಮರ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

ನ್ಯಾಯಾಲಯದ ಆವರಣದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಭರತಯೋಗೀಶ ಕರಗುದರಿ ಧ್ವಜಾರೋಹಣ ನೆರವೇರಿಸಿದರು. ನ್ಯಾಯವಾದಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ನಗರ ಭೂ-ಮಾಪನ ಕಚೇರಿಯಲ್ಲಿ ಭೂ-ಮಾಪನ ಅಧಿಕಾರಿ ವಿದ್ಯಾ ತಳೇಕರ ಹಾಗೂ ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿ.ಎಸ್. ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಕಚೇರಿ ಸಿಬ್ಬಂದಿ ಹಾಗೂ ಮಾಜಿ ಸೈನಿಕರು ಭಾಗವಹಿಸಿದ್ದರು.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ನಾಗರಾಜ ಗಡದ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಶ್ರೀಕಾಂತ ಕಾಟೇವಾಲೆ ಹಾಗೂ ಪಟ್ಟಣದ ಗಾಂಧಿ ಮಂದಿರದಲ್ಲಿ ಹಿರಿಯ ವರ್ತಕ ಭರತರಾಜ ಬರಿಗಾಲಿ ಧ್ವಜಾರೋಹಣ ನೆರವೇರಿಸಿದರು.

ಶಾಲೆಯ ಹಳೆಯ ವಿದ್ಯಾರ್ಥಿಯಿಂದ ಧ್ವಜಾರೋಹಣ

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಲೋಕಾಯುಕ್ತ ನ್ಯಾಯಾಧೀಶ ರಮಾಕಾಂತ ಚವ್ಹಾಣ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಹಳೆಯ ವಿದ್ಯಾರ್ಥಿಯೊಬ್ಬರು ರಾಷ್ಟ್ರೀಯ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಹಾಗೂ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ, ದೇಶಭಕ್ತಿ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿಯೂ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

“ಏ ಎಕ್ಕಾ… ಅತ್ತಿ ರೊಟ್ಟಿ ತಗೊಂಡು ಬಂದೀನಿ, ತಗೋರಿ!”

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: “ಏ ಎಕ್ಕಾ… ಅತ್ತಿ ರೊಟ್ಟಿ ತಗೊಂಡು ಬಂದೀನಿ, ತಗೋರಿ…” — ಹಬ್ಬದ ದಿನ ಮನೆ ಬಾಗಿಲಿಗೆ ಬಂದು ಆತ್ಮೀಯತೆಯಿಂದ ರೊಟ್ಟಿ ನೀಡುವ ಈ ಮಾತುಗಳು ನರೇಗಲ್ಲ ಪಟ್ಟಣ ಸೇರಿದಂತೆ ಹೋಬಳಿಯ ಗ್ರಾಮೀಣ ಪ್ರದೇಶಗಳಲ್ಲಿ ಶುಕ್ರವಾರ ಕೇಳಿಬಂದವು. ಕೈಯಲ್ಲಿ ರೊಟ್ಟಿ-ಪಲ್ಯದ ಬುತ್ತಿ ಹಿಡಿದು ಮನೆ ಮನೆಗೆ ತೆರಳಿದ ಮಹಿಳೆಯರು, ಮಕ್ಕಳು ಪರಸ್ಪರ ರೊಟ್ಟಿ ವಿನಿಮಯ ಮಾಡಿಕೊಂಡು ರೊಟ್ಟಿ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಉತ್ತರ ಕರ್ನಾಟಕದ ಮಹಿಳೆಯರ ಅಚ್ಚುಮೆಚ್ಚಿನ ಹಬ್ಬವಾದ ರೊಟ್ಟಿ ಪಂಚಮಿ, ಆಧುನಿಕ ಜೀವನಶೈಲಿಯ ನಡುವೆಯೂ ತನ್ನ ಮಣ್ಣಿನ ಸೊಗಡನ್ನು ಕಳೆದುಕೊಂಡಿಲ್ಲ. ಕಳೆದ ಒಂದು ವಾರದಿಂದಲೇ ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದ ಮಹಿಳೆಯರು ಶುಕ್ರವಾರ ಮುಂಜಾನೆಯಿಂದಲೇ ವಿವಿಧ ಬಗೆಯ ರೊಟ್ಟಿ, ಚಪಾತಿ, ಪಲ್ಯ ಹಾಗೂ ಸಾಂಪ್ರದಾಯಿಕ ಖಾದ್ಯಗಳನ್ನು ಸಿದ್ಧಪಡಿಸಿ ಬಂಧು-ಬಳಗ ಹಾಗೂ ನೆರೆಹೊರೆಯವರ ಮನೆಗಳಿಗೆ ಕೊಂಡೊಯ್ದು ಹಂಚಿದರು.

ಜೋಳದ ರೊಟ್ಟಿ, ಸಜ್ಜೆ ರೊಟ್ಟಿ, ಎಳ್ಳು ರೊಟ್ಟಿ, ಚಪಾತಿ, ಉಂಡಿ ಸೇರಿದಂತೆ ಹಲವು ಬಗೆಯ ತಿನಿಸುಗಳೊಂದಿಗೆ ಹೆಸರುಕಾಳು, ಮಡಿಕೆಕಾಳು, ಬದನೆಕಾಯಿ, ಹಿಟ್ಟಿನ ಪಲ್ಯ, ಮೆಂತೆಪಲ್ಯ, ಮೂಲಂಗಿ ಸೊಪ್ಪು, ಹಕ್ಕರಕಿ, ಸವತೆಕಾಯಿ, ಗಜ್ಜರಿ ಸೇರಿದಂತೆ ವಿವಿಧ ತರಕಾರಿ ಹಾಗೂ ಸೊಪ್ಪಿನ ಖಾದ್ಯಗಳು ಮನೆಗಳಲ್ಲಿ ಸಿದ್ಧಗೊಂಡಿದ್ದವು. ಮನೆಯ ದೇವರಿಗೆ ನೈವೇದ್ಯ ಅರ್ಪಿಸಿದ ಬಳಿಕ ರೊಟ್ಟಿ-ಪಲ್ಯಗಳನ್ನು ತಟ್ಟೆಗಳಲ್ಲಿ ಸಿಂಗರಿಸಿ ಹಂಚಲಾಯಿತು.

ತವರು ಮನೆಯಲ್ಲೇ ಹೆಚ್ಚಿದ ಸಂಭ್ರಮ

ರೊಟ್ಟಿ ಪಂಚಮಿ ಎಂದರೆ ಕೇವಲ ರೊಟ್ಟಿ ಹಂಚುವ ಹಬ್ಬವಲ್ಲ. ಮದುವೆಯಾಗಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಸಹೋದರಿಯರು, ಅತ್ತೆ-ಸೊಸೆಯರು ಹಾಗೂ ಬಂಧುಗಳೊಂದಿಗೆ ಸೇರಿ ಅಡುಗೆ ತಯಾರಿಸಿ, ಪರಸ್ಪರ ಮನೆಗಳಿಗೆ ತೆರಳಿ ರೊಟ್ಟಿ ಹಂಚುವುದು ಈ ಹಬ್ಬದ ವಿಶೇಷತೆ.

ಸಮೀಪದ ಜಕ್ಕಲಿ ಗ್ರಾಮದಲ್ಲಿಯೂ ಮಹಿಳೆಯರು ಹಾಗೂ ಮಕ್ಕಳು ಹೊಸ ಉಡುಪು ಧರಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು. ಕೈಯಲ್ಲಿ ರೊಟ್ಟಿ-ಪಲ್ಯದ ಬುತ್ತಿ ಹಿಡಿದು ಮುಂಜಾನೆಯಿಂದಲೇ ಮನೆ ಮನೆಗೆ ತೆರಳಿದ ಮಹಿಳೆಯರ ದೃಶ್ಯ ಗ್ರಾಮೀಣ ಬದುಕಿನ ಆತ್ಮೀಯತೆಯನ್ನು ಬಿಂಬಿಸಿತು.

ಒಂದು ತಟ್ಟೆ ರೊಟ್ಟಿ… ಹಲವು ಮನೆಗಳ ಬಾಗಿಲು!

ಮೊಬೈಲ್, ಸಾಮಾಜಿಕ ಜಾಲತಾಣ ಹಾಗೂ ವೇಗದ ಜೀವನದ ನಡುವೆ ನೆರೆಹೊರೆಯವರೊಂದಿಗೆ ನೇರವಾಗಿ ಬೆರೆಯುವ ಸಂದರ್ಭಗಳು ಕಡಿಮೆಯಾಗುತ್ತಿರುವ ಈ ಕಾಲದಲ್ಲಿ ರೊಟ್ಟಿ ಪಂಚಮಿ ಜನರನ್ನು ಮತ್ತೆ ಮನೆಗಳಿಂದ ಹೊರಗೆ ಕರೆತರುತ್ತಿದೆ. ಒಂದು ತಟ್ಟೆ ರೊಟ್ಟಿಯ ನೆಪದಲ್ಲಿ ಹಲವು ಮನೆಗಳ ಬಾಗಿಲು ತಟ್ಟುವ ಮೂಲಕ ಹಳೆಯ ಪರಿಚಯಗಳು ಗಟ್ಟಿಯಾಗುತ್ತಿವೆ; ಹೊಸ ಸಂಬಂಧಗಳೂ ಬೆಸೆಯುತ್ತಿವೆ.

ಮಕ್ಕಳಿಗೆ ಸಂಸ್ಕೃತಿಯ ಪಾಠ

ರೊಟ್ಟಿ ಪಂಚಮಿ ಕೇವಲ ಆಹಾರ ಹಂಚಿಕೆಯ ಆಚರಣೆಯಲ್ಲ; ಇದು ಉತ್ತರ ಕರ್ನಾಟಕದ ಆಹಾರ ಪದ್ಧತಿ, ಸಂಸ್ಕೃತಿ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಸೇತುವೆಯಾಗಿದೆ. ಅಜ್ಜ-ಅಜ್ಜಿಯರು ಹಾಗೂ ತಾಯಿ-ತಂದೆಯರು ಆಚರಿಸಿಕೊಂಡು ಬಂದ ಸಂಪ್ರದಾಯವನ್ನು ಮಕ್ಕಳು ಕಣ್ಣಾರೆ ನೋಡಿ ಅದರ ಮಹತ್ವ ಅರಿಯುವ ಅವಕಾಶವೂ ಇದರಿಂದ ದೊರೆಯುತ್ತದೆ.

ಗ್ರಾಮದ ಮೆಣಸಗಿಯವರ ಓಣಿಯಲ್ಲಿ ಕೀರ್ತಿ ಮೆಣಸಗಿ, ವೈಷ್ಣವಿ ಹೂಗಾರ, ಲಕ್ಷ್ಮೀ ಮಡಿವಾಳರ, ಸಿದ್ದಲಿಂಗವ್ವ ಅಂಗಡಿ ಸೇರಿದಂತೆ ಅನೇಕ ಮಹಿಳೆಯರು ಹಾಗೂ ಮಕ್ಕಳು ರೊಟ್ಟಿ ಪಂಚಮಿ ಸಂಭ್ರಮದಲ್ಲಿ ಪಾಲ್ಗೊಂಡು, ಪರಸ್ಪರ ರೊಟ್ಟಿ, ಪಲ್ಯ ಹಾಗೂ ವಿವಿಧ ಖಾದ್ಯಗಳನ್ನು ಹಂಚಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

“ರೊಟ್ಟಿ ಕೊಟ್ಟರೆ ಸಂಬಂಧ ಬೆಳೆಯುತ್ತದೆ; ಮನೆಯಿಂದ ಮನೆಗೆ ಹೋದರೆ ಮನಸ್ಸುಗಳು ಹತ್ತಿರವಾಗುತ್ತವೆ” ಎಂಬ ಸರಳ ಗ್ರಾಮೀಣ ಬದುಕಿನ ಸಂದೇಶವನ್ನು ಸಾರಿದ ರೊಟ್ಟಿ ಪಂಚಮಿ, ಆಧುನಿಕತೆಯ ನಡುವೆಯೂ ಉತ್ತರ ಕರ್ನಾಟಕದ ಮಣ್ಣಿನ ಸೊಗಡು, ಆತ್ಮೀಯತೆ ಹಾಗೂ ಸಂಬಂಧಗಳ ಬೆಸುಗೆಯನ್ನು ಜೀವಂತವಾಗಿರಿಸಿತು.

“ಹಿಂದಿನ ಕಾಲದಲ್ಲಿ ರೊಟ್ಟಿ ಪಂಚಮಿ ಎಂದರೆ ಇಡೀ ಊರಿನ ಮನೆ ಮನೆಗೂ ಹೋಗಿ ರೊಟ್ಟಿ ಹಂಚಿಕೊಂಡು ಬರುವ ಸಂಭ್ರಮ ಇತ್ತು. ಕಾಲ ಬದಲಾಗಿದ್ದರೂ ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ನಾವು ಹಬ್ಬ ಆಚರಿಸುತ್ತಿದ್ದೇವೆ.”
— ಹಿರಿಯ ಮಹಿಳೆಯರು

ನರೇಗಲ್ಲ ಪಟ್ಟಣ ಪಂಚಾಯಿತಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು.

ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಗ್ರಂಥಾಲಯದಲ್ಲಿ ಪಟ್ಟಣ ಪಂಚಾಯಿತಿಯ ಕಿರಿಯ ಅಭಿಯಂತರ ಜಡೆಪ್ಪ ನಾಡಿಗರ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸಿ, ದೇಶದ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಶಾಂತಿಯಿಂದ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಎಂ.ಎಚ್. ಸೀತಿಮನಿ, ರಮೇಶ ಹಲಗಿ, ಶಂಕ್ರಪ್ಪ ದೊಡ್ಡಣ್ಣವರ, ಮಂಜುನಾಥ ಕೊಂಡಗುರಿ, ನೀಲಪ್ಪ ಚಳ್ಳಮರದ, ರಕ್ಷಿತ ಎಲ್., ಆರೀಫಬೇಗ ಮಿರ್ಜಾ, ನಾಜೀಮಾ ಬೇಲೆರಿ, ಎ.ಎಸ್. ಮೆಣಸಗಿ, ನೀರು ಸರಬರಾಜು ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ ಉಪ ತಹಶೀಲ್ದಾರ್ ನಾಡ ಕಚೇರಿ, ಗ್ರಂಥಾಲಯ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿಯೂ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಅಂಗನವಾಡಿ ಕಾರ್ಯಕರ್ತರು, ಮಕ್ಕಳು, ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಿಕ್ಷಕರು, ಪೊಲೀಸ್ ಸಿಬ್ಬಂದಿ ಮತ್ತು ಪಟ್ಟಣದ ಗ್ರಾಮಸ್ಥರು ಭಾಗವಹಿಸಿದ್ದರು.

ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಸಂಕಲ್ಪ ಮಾಡೋಣ: ತಹಸೀಲ್ದಾರ್ ರಾಘವೇಂದ್ರ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಾತಿ, ಧರ್ಮ, ಭಾಷೆಗಳನ್ನು ಮೀರಿ ಸುಖ, ಶಾಂತಿ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವು ಕರೆ ನೀಡಿದರು.

ಶನಿವಾರ ಶಿರಹಟ್ಟಿಯ ಎಸ್.ಎಂ. ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ಧ್ವಜವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರಾಷ್ಟ್ರದ ಸರ್ವತೋಮುಖ ಪ್ರಗತಿಗೆ ಯುವಶಕ್ತಿ ಹಾಗೂ ವಿದ್ಯಾರ್ಥಿಗಳು ದೇಶಭಕ್ತಿ, ನಿಷ್ಠೆ, ಶಿಸ್ತು, ಪ್ರಜ್ಞೆ, ವಿಶ್ವಾಸ ಮತ್ತು ಸ್ವಾವಲಂಬನೆಯಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸಹಸ್ರಾರು ವರ್ಷಗಳ ಗುಲಾಮಗಿರಿಯಿಂದ ಹೊರಬಂದು, ಲಕ್ಷಾಂತರ ಜನರ ತ್ಯಾಗ ಮತ್ತು ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ರಕ್ಷಿಸಿ, ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಆ.15ರ ಸ್ವಾತಂತ್ರ್ಯ ದಿನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಹಾಗೂ ಸಂಭ್ರಮದ ದಿನವಾಗಿದೆ. ಬ್ರಿಟಿಷರ ಆಳ್ವಿಕೆಯಿಂದ ದೇಶವನ್ನು ಮುಕ್ತಗೊಳಿಸಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರನ್ನು ಸ್ಮರಿಸುವ ಸುದಿನ ಇದಾಗಿದೆ. ಅನೇಕರು ಕುಟುಂಬ, ಆಸ್ತಿ, ಸುಖ-ಸಂತೋಷಗಳನ್ನು ತ್ಯಜಿಸಿ ಹೋರಾಟ ನಡೆಸಿದರೆ, ಕೆಲವರು ಸೆರೆವಾಸ ಅನುಭವಿಸಿದರು. ಇನ್ನು ಕೆಲವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಅವರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮದ ಫಲವಾಗಿ ಇಂದು ನಾವು ಸ್ವತಂತ್ರ ರಾಷ್ಟ್ರದಲ್ಲಿ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಕೇವಲ ಧ್ವಜಾರೋಹಣ ಹಾಗೂ ಸಿಹಿ ವಿತರಿಸುವ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಮಹತ್ವವನ್ನು ಯುವಜನರಿಗೆ ತಿಳಿಸುವುದು, ದೇಶದ ಏಕತೆ, ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಕಾಪಾಡುವ ಸಂಕಲ್ಪ ಮಾಡುವುದು ಈ ದಿನದ ನಿಜವಾದ ಆಶಯವಾಗಬೇಕು. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭೇದಗಳನ್ನು ಬದಿಗೊತ್ತಿ ದೇಶದ ಹಿತವೇ ಮುಖ್ಯ ಎಂಬ ಭಾವನೆಯೊಂದಿಗೆ ಪ್ರತಿಯೊಬ್ಬರೂ ಮುನ್ನಡೆಯಬೇಕು. ಮಹನೀಯರು ಕಂಡ ಕನಸಿನ ಭಾರತ ನಿರ್ಮಿಸುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದರು.

ನಂತರ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಾಸಕ ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐ ಬಿ.ವಿ. ನ್ಯಾಮಗೌಡ, ಬಿಇಒ ಶಿವರಾಜ ಸಿಮಿಕೇರಿ, ತಾಪಂ ಇಒ ರಾಮಣ್ಣ ದೊಡ್ಡಮನಿ, ಪಪಂ ಮುಖ್ಯಾಧಿಕಾರಿ ಎನ್.ಎಂ. ಹಾದಿಮನಿ, ವಿ.ಎ. ಮುಳಗುಂದಮಠ, ಬಸವರಾಜ ಕಾತರಾಳ, ಸಂತೋಷ ಅಸ್ಕಿ, ಎಚ್.ಜೆ. ಬಾವಿಕಟ್ಟಿ, ವೀರಯ್ಯ ಮಠಪತಿ, ಗಿರಿಜಾ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೇಶಪ್ರೇಮದೊಂದಿಗೆ ಸಾಮರಸ್ಯದಿಂದ ಬಾಳೋಣ: ಸುರೇಶ ಹಳ್ಳಿಕೇರಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹಿರಿಯರನ್ನು ಸ್ಮರಿಸುವ ದಿನವೇ ಆಗಸ್ಟ್ 15. ದೇಶಕ್ಕಾಗಿ ಹೋರಾಡಿದ ಮಹನೀಯರ ದೇಶಪ್ರೇಮವನ್ನು ನೆನೆಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಈ ದಿನ ಭಾರತೀಯರಿಗೆ ಸುದಿನವಾಗಿದೆ ಎಂದು ಗೃಹರಕ್ಷಕ ದಳದ ನರೇಗಲ್ಲ ಘಟಕದ ಅಧಿಕಾರಿ ಸುರೇಶ ಹಳ್ಳಿಕೇರಿ ಹೇಳಿದರು.

ನರೇಗಲ್ಲದ ಗೃಹರಕ್ಷಕ ದಳದ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ನಿಡಗುಂದಿ ಅನ್ನದಾನೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಬಿ. ಕೊಪ್ಪದ ಮಾತನಾಡಿ, ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಆದರೆ ವೃತ್ತಿಯ ಕರ್ತವ್ಯದ ಜೊತೆಗೆ ದೇಶಸೇವೆಯನ್ನೂ ಮಾಡುತ್ತಿರುವ ಗೃಹರಕ್ಷಕ ದಳದ ಸಿಬ್ಬಂದಿಯ ಸೇವೆ ಶ್ಲಾಘನೀಯ. ದೇಶದ ಶಾಂತಿ, ಸುರಕ್ಷತೆ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕ ದಳದ ಸೇವೆ ಮಹತ್ವದ್ದಾಗಿದೆ ಎಂದರು.

ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಸದಸ್ಯರು ಸಮಾನತೆ, ಸಹೋದರತ್ವ ಹಾಗೂ ಸಾಮರಸ್ಯದೊಂದಿಗೆ ಬಾಳುವುದರ ಜೊತೆಗೆ ದೇಶದ ಪ್ರಗತಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಂ.ಬಿ. ಗೋಡಿ, ಪಿ.ಎಸ್. ಸಾಬಳೆ, ಜೆ.ಡಿ. ಬಂಡೀವಡ್ಡರ, ವಿ.ವಿ. ಇಟಗಿ, ಕೆ.ವಿ. ಹಾಳಕೇರಿ, ಎಸ್.ವೈ. ಕುಂಬಾರ, ಎಂ.ಬಿ. ಕಡೆತೋಟದ, ಎಸ್.ವಿ. ಮುಸಿಗೇರಿ, ಬಿ.ಬಿ. ನೆಲ್ಲೂರ, ಎ.ಬಿ. ಕುರುಡಗಿ, ವಿರೂಪಾಕ್ಷ ಇಟಗಿ, ಎಂ.ಕೆ. ಅರಮನಿ, ಎಸ್.ಬಿ. ಸವಡಿ ಸೇರಿದಂತೆ ಹಲವಾರು ಗೃಹರಕ್ಷಕ ದಳದ ಸಿಬ್ಬಂದಿ ಉಪಸ್ಥಿತರಿದ್ದರು.

ವಚನಕಾರ್ತಿಯರ ನುಡಿಯಲ್ಲಿ ಸಮಾನತೆಯ ದೀವಿ; ಡಾ. ನೀಲಮ್ಮತಾಯಿ ಅಸುಂಡಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಚನ ಸಾಹಿತ್ಯ ಕೇವಲ ಸಾಹಿತ್ಯದ ಪ್ರಕಾರವಲ್ಲ, ಅದು ಸಾಮಾಜಿಕ ಪರಿವರ್ತನೆಯ ಶಕ್ತಿಶಾಲಿ ಮಾಧ್ಯಮ. ವಚನಕಾರ್ತಿಯರು ತಮ್ಮ ಅಂತರಂಗದ ಅನುಭವ, ಆತ್ಮಾಭಿಮಾನ ಹಾಗೂ ವೈಚಾರಿಕ ಪ್ರಜ್ಞೆಯ ಮೂಲಕ ಅಸಮಾನತೆ, ಕಂದಾಚಾರ ಮತ್ತು ತಾರತಮ್ಯಗಳನ್ನು ಪ್ರಶ್ನಿಸಿ, ಸಮಾನತೆ ಹಾಗೂ ಮಾನವೀಯತೆಯ ದೀವಿಗೆಯನ್ನು ಬೆಳಗಿಸಿದ್ದಾರೆ ಎಂದು ಪೂಜ್ಯ ಶಿವಶರಣೆ ಡಾ. ನೀಲಮ್ಮತಾಯಿ ಅಸುಂಡಿ ಹೇಳಿದರು.

ಲಕ್ಷ್ಮೇಶ್ವರದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ‘ಶ್ರಾವಣ ಸಂಜೆ’ ಕಾರ್ಯಕ್ರಮದಲ್ಲಿ ಶ್ರೀಮತಿ ಲಲಿತಾ ಕೆರಿಮನಿ ಹಾಗೂ ಶ್ರೀಮತಿ ಮೇಘಾ ಹುಕ್ಕೇರಿ ಸಂಪಾದಿಸಿರುವ ‘ಸಮಾನತೆ ಸಾರಿದ ವಚನಕಾರ್ತಿಯರು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಚನಕಾರ್ತಿಯರ ನುಡಿಗಳು ಅಂದಿನ ಸಾಮಾಜಿಕ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದಲ್ಲದೆ, ಮಹಿಳೆಯ ಅಸ್ತಿತ್ವ, ಸ್ವಾಭಿಮಾನ ಹಾಗೂ ಆತ್ಮಗೌರವದ ಪ್ರತೀಕವಾಗಿವೆ. ತಮ್ಮ ಅನುಭವದ ನೆಲೆಯಲ್ಲಿ ಕಟ್ಟಿಕೊಟ್ಟ ವಿಚಾರಗಳನ್ನು ಕಾಲದ ಗಡಿಯನ್ನು ದಾಟಿಸಿ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿಸಿದ್ದಾರೆ. ಮಹಿಳೆಯರಿಗೆ ಸಮಾನ ಅವಕಾಶ, ಗೌರವ ಹಾಗೂ ಸ್ವಾತಂತ್ರ್ಯ ದೊರೆಯಬೇಕೆಂಬ ಆಶಯವನ್ನು ಅವರು ಶತಮಾನಗಳ ಹಿಂದೆಯೇ ಪ್ರತಿಪಾದಿಸಿದ್ದರು ಎಂದರು.

‘ಶ್ರಾವಣ ಸಂಜೆ’ ಕಾರ್ಯಕ್ರಮ ಎರಡು ದಶಕಗಳನ್ನು ಪೂರೈಸಿರುವ ಸವಿನೆನಪಿನಲ್ಲಿ ‘ಸಮಾನತೆ ಸಾರಿದ ವಚನಕಾರ್ತಿಯರು’ ಕೃತಿ ಹೊರತಂದಿರುವುದು ಅರ್ಥಪೂರ್ಣ ಹಾಗೂ ಅಭಿನಂದನೀಯ ಕಾರ್ಯವಾಗಿದೆ. ವಚನಕಾರ್ತಿಯರ ಚಿಂತನೆಗಳನ್ನು ಒಂದೆಡೆ ದಾಖಲಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಕೃತಿಯ ಸಂಪಾದಕರು ಸಾಹಿತ್ಯಿಕ ಹಾಗೂ ಸಾಮಾಜಿಕ ಹೊಣೆಗಾರಿಕೆ ಮೆರೆದಿದ್ದಾರೆ ಎಂದು ಡಾ. ನೀಲಮ್ಮತಾಯಿ ಅಸುಂಡಿ ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರತಿಮಾ ಮಹಾಜನಶೆಟ್ಟರ ಮಾತನಾಡಿ, ವಚನಕಾರ್ತಿಯರ ಸಾಹಿತ್ಯದಲ್ಲಿರುವ ವೈಚಾರಿಕತೆ, ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಮೌಲ್ಯಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದರು.

ಕೃತಿ ಬಿಡುಗಡೆ ಸಮಾರಂಭದಲ್ಲಿ ಶಕುಂತಲಾ ತಟ್ಟಿ, ಕುಸುಮಾ ಮಲ್ಲಾಡದ, ನೀಲಕ್ಕ ಬೂದಿಹಾಳ, ಕಾಂಚನಮಾಲಾ ಹಸರೆಡ್ಡಿ, ಲತಾ ಎಸ್. ತಟ್ಟಿ, ಅರುಂಧತಿ ಬಿಂಕದಕಟ್ಟಿ, ನಿರ್ಮಲಾ ಅರಳಿ, ಶಾಂತಾ ಗುಳಗಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಚನಗಳ ವೈಚಾರಿಕ ಪರಂಪರೆ, ಮಹಿಳಾ ಸಮಾನತೆಯ ಆಶಯ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳ ಕುರಿತು ಚಿಂತನ-ಮಂಥನ ನಡೆಯಿತು. ವಚನಕಾರ್ತಿಯರ ವಿಚಾರಧಾರೆ ಇಂದಿನ ಸಮಾಜದಲ್ಲಿ ಮತ್ತಷ್ಟು ಪ್ರಸ್ತುತವಾಗಿದ್ದು, ಅವರ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಗಣ್ಯರು ಪ್ರತಿಪಾದಿಸಿದರು.

ಪೂಜ್ಯ ಶ್ರೀ ಸಿದ್ದೇಶ್ವರ ಸತ್ಸಂಗ ಬಳಗ, ಗದಗ ಜಿಲ್ಲಾ ಹಾಗೂ ಲಕ್ಷ್ಮೇಶ್ವರ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ರಾಜ-ರಾಜೇಶ್ವರಿ ಮಹಿಳಾ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಅಕ್ಕಮಹಾದೇವಿ ಬಳಗ, ಪ್ರೇಮಕ್ಕಾ ಅಭಿಮಾನ ಬಳಗ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.

ಮಹಿಳಾ ಸಾಹಿತ್ಯವನ್ನು ಕೇವಲ ಮಹಿಳೆಯರ ಸಾಹಿತ್ಯವೆಂದು ಸೀಮಿತಗೊಳಿಸದೆ, ಅದು ಸಮಾಜದ ಸಮಗ್ರ ಚಿಂತನೆಯ ಭಾಗ ಎಂಬ ಅರಿವು ಮೂಡಿಸಬೇಕು.
— ಪ್ರತಿಮಾ ಮಹಾಜನಶೆಟ್ಟರ