Home Blog Page 115

‘ವಿಡಿಯೋ ತಿರುಚಿ ವೈರಲ್ ಮಾಡಿದ್ದಾರೆ’ – ಮಲ್ಲಿಕಾರ್ಜುನ ಮುತ್ಯಾ ಪ್ರಕರಣದಲ್ಲಿ ಬಾಲಕಿ ಪೋಷಕರ ಪ್ರತಿಕ್ರಿಯೆ

0

ಯಾದಗಿರಿ: ಪೋಕ್ಸೋ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಲ್ಲಿಕಾರ್ಜುನ ಮುತ್ಯಾ ಸಂಬಂಧಿಸಿದಂತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಲ್ಲಿರುವ ಮುತ್ಯಾ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿರುವ ಬಾಲಕಿಯ ಪೋಷಕರೂ ತಮ್ಮ ಆವೃತ್ತಿಯನ್ನು ಸಾರ್ವಜನಿಕಗೊಳಿಸಿದ್ದಾರೆ.

ಪೋಷಕರ ಪ್ರಕಾರ, ಅವರು ಹಲವು ವರ್ಷಗಳಿಂದ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರಾಗಿದ್ದು, ಮಗಳ ಹುಟ್ಟುಹಬ್ಬದ ದಿನ ಆಶೀರ್ವಾದ ಪಡೆಯಲು ಮಠಕ್ಕೆ ತೆರಳಿದ್ದರು. ಆಶೀರ್ವಾದದ ಕ್ಷಣವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದೇವೆ. ಆದರೆ ಅದನ್ನು ಕಿಡಿಗೇಡಿಗಳು ತಿರುಚಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಮುತ್ಯಾ ವಿರುದ್ಧದ ಆರೋಪಗಳನ್ನು ನಾವು ಒಪ್ಪುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಇದೀಗ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ.

ನಿರುದ್ಯೋಗ ವಿಚಾರದಲ್ಲಿ ಬಿಜೆಪಿ ಪ್ರಧಾನಿ ಮೋದಿಗೆ ಪ್ರಶ್ನಿಸಲಿ: ಹರಿಪ್ರಸಾದ್ ಸವಾಲು

0

ನವದೆಹಲಿ: ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಪರಿಷತ್ ಸದಸ್ಯ B. K. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ 2014ರಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. 11 ವರ್ಷಗಳಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಾಗಿತ್ತು. ನಿರುದ್ಯೋಗ ಸಮಸ್ಯೆ ಬಗ್ಗೆ ಪ್ರಶ್ನಿಸುವ ಬಿಜೆಪಿ ನಾಯಕರು ಮೊದಲು ಪ್ರಧಾನಿ ಮೋದಿಯವರನ್ನೇ ಪ್ರಶ್ನಿಸಲಿ ಎಂದು ಸವಾಲು ಹಾಕಿದರು.

ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ನಿರುದ್ಯೋಗಿಗಳ ಪ್ರತಿಭಟನೆ ಕುರಿತು ಮಾತನಾಡಿದ ಅವರು, Gen-Z ಯುವ ಸಮುದಾಯ ನಿರುದ್ಯೋಗ ಸಮಸ್ಯೆ ಕುರಿತು ಹೋರಾಟ ನಡೆಸುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅವರಿಗೆ ಹಕ್ಕಿದೆ. ಆದರೆ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಸಹಿಸಲಾರದೆ ಬಿಜೆಪಿ ಈ ಹೋರಾಟಕ್ಕೆ ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.

2023-24ರ ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಸುಮಾರು 40 ಲಕ್ಷ ಹುದ್ದೆಗಳು ಖಾಲಿ ಇವೆ. ಗೃಹ, ರೈಲ್ವೆ ಹಾಗೂ ರಕ್ಷಣಾ ಇಲಾಖೆಯಲ್ಲಿ ಒಟ್ಟು 9.79 ಲಕ್ಷ ಹುದ್ದೆಗಳು ಭರ್ತಿಯಾಗಿಲ್ಲ. ಸೈನ್ಯದಲ್ಲಿ 1.55 ಲಕ್ಷ ಹುದ್ದೆಗಳು ಖಾಲಿ ಇದ್ದು, ಶಸ್ತ್ರಾಸ್ತ್ರ ಪಡೆಗಳಲ್ಲಿ 92,414 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.

ದೇಶಭಕ್ತಿ ಹಾಗೂ ದೇಶಸೇವೆ ಬಗ್ಗೆ ಭಾಷಣ ಮಾಡುವವರು ಈ ಖಾಲಿ ಹುದ್ದೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಕುರಿತು ಬಿಜೆಪಿ ನಾಯಕರು ಮೊದಲು ತಮ್ಮ ‘ವಿಶ್ವಗುರು’ರನ್ನು ಪ್ರಶ್ನಿಸಲಿ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು.

ಹಾವೇರಿಯಲ್ಲಿ ಲಂಚದ ಬಲೆ: 8,500 ರೂ. ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಾಧಿಕಾರಿ !

0

ಹಾವೇರಿ: ಜಿಲ್ಲೆಯಲ್ಲಿ ಮತ್ತೊಂದು ಲಂಚ ಪ್ರಕರಣ ಬೆಳಕಿಗೆ ಬಂದಿದೆ. ನೆಗಳೂರು ಗ್ರಾಮದ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಪಕ್ಕೀರೇಶ ಬಾರ್ಕಿ, ಖಾತೆ ಬದಲಾವಣೆಯ ಪ್ರಕ್ರಿಯೆಗಾಗಿ ಹಣ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ.

ಬಸಾಪುರ ಗ್ರಾಮದ ರೈತ ಕರಿಯಲ್ಲಪ್ಪ ಕೆಸರಳ್ಳಿ ಅವರ ಬಳಿ 63 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದು, 30 ಸಾವಿರ ರೂಪಾಯಿ ಮೊತ್ತ ಈಗಾಗಲೇ ಪಡೆದಿದ್ದನೆಂದು ತಿಳಿದುಬಂದಿದೆ. ಇಂದು 8,500 ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ದಾಳಿಯ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

ವಾಹನ ಮಾಲೀಕರೇ ಗಮನಿಸಿ.. ಏ.1ರಿಂದ ಇ20 ಮಿಶ್ರಿತ RON 95 ಪೆಟ್ರೋಲ್ ಮಾರಾಟ ಕಡ್ಡಾಯ!

0

ನವದೆಹಲಿ: ಏಪ್ರಿಲ್ 1ರಿಂದ ದೇಶದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಕಡ್ಡಾಯವಾಗಿ 20% ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಮಾರಾಟ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿದೆ.ಫೆಬ್ರವರಿ 17ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಿರ್ದಿಷ್ಟತೆಗಳ ಪ್ರಕಾರ ಮತ್ತು ರಿಸರ್ಚ್ ಆಕ್ಟೇನ್ ನಂಬರ್ (RON) 95 ಹೊಂದಿರುವ 20% ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ ಮಾಡಬೇಕು ಎಂದು ತಿಳಿಸಲಾಗಿದೆ.

RON ಎನ್ನುವುದು ಎಂಜಿನ್ ಕಾರ್ಯಕ್ಷಮತೆಯನ್ನು ಅಳೆಯುವ ಪ್ರಮುಖ ಮಾನದಂಡವಾಗಿದೆ. ಎಥೆನಾಲ್ ಸ್ವಭಾವಿಕವಾಗಿ ಸುಮಾರು 108ಕ್ಕಿಂತ ಹೆಚ್ಚಿನ ಆಕ್ಟೇನ್ ರೇಟಿಂಗ್ ಹೊಂದಿದೆ. ಎಥೆನಾಲ್ ಮಿಶ್ರಣದಿಂದ ಎಂಜಿನ್‌ಗೆ ತೊಂದರೆ ಉಂಟಾಗದಂತೆ RON 95 ಮಾನದಂಡದ ಇಂಧನವನ್ನು ಮಾರಾಟ ಮಾಡಲು ಸರ್ಕಾರ ಅನುಮತಿ ನೀಡಿದೆ.

RON 95 ಪೆಟ್ರೋಲ್ ಆಧುನಿಕ ಹಾಗೂ ಉನ್ನತ ಕಾರ್ಯಕ್ಷಮತೆಯ ಎಂಜಿನ್‌ಗಳಿಗೆ ಸೂಕ್ತವೆಂದು ಪರಿಗಣಿಸಲಾಗುತ್ತದೆ. ಇದು ಹೆಚ್ಚು ಸ್ವಚ್ಛವಾಗಿ ಉರಿಯುವ ಮೂಲಕ ಇಂಗಾಲದ ಮಾನಾಕ್ಸೈಡ್ ಮತ್ತು ಹೈಡ್ರೋಕಾರ್ಬನ್ ಹೊರಸೂಸುವಿಕೆಯನ್ನು 30ರಿಂದ 44 ಶೇಕಡಾವರೆಗೆ ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ.

ಇದಕ್ಕೂ ಮುನ್ನ 2003ರೊಳಗೆ ಭಾರತದಲ್ಲಿ ಕಚ್ಚಾ ತೈಲದಿಂದ ಸಂಸ್ಕರಣೆಗೊಂಡ ಪೆಟ್ರೋಲ್ ನೇರವಾಗಿ ಬಂಕ್‌ಗಳಿಗೆ ಬರುತ್ತಿತ್ತು. ಈಗ ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಮಾಡುವ ಪದ್ಧತಿ ಅನುಸರಿಸಲಾಗುತ್ತಿದೆ. 20% ಎಥೆನಾಲ್ ಮತ್ತು 80% ಪೆಟ್ರೋಲ್ ಮಿಶ್ರಿತ ಇಂಧನವನ್ನು ‘ಇ20’ ಎಂದು ಕರೆಯಲಾಗುತ್ತದೆ. ಕಬ್ಬು, ಜೋಳ ಅಥವಾ ಹೆಚ್ಚುವರಿ ಧಾನ್ಯಗಳಿಂದ ತಯಾರಿಸಲಾದ ಜೈವಿಕ ಇಂಧನವೇ ಎಥೆನಾಲ್ ಆಗಿದೆ.

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ಆರೋಪ: ಯಾದಗಿರಿ ಶಹಾಪುರದಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ – ನಾಪತ್ತೆ ಬಗ್ಗೆ ಚರ್ಚೆ!

0

ಯಾದಗಿರಿ: ಜಿಲ್ಲೆಯಲ್ಲಿ ಧಾರ್ಮಿಕ ವಲಯಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಘಟನೆ ಬೆಳಕಿಗೆ ಬಂದಿದೆ. ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣದ ಬಳಿಕ ಮುತ್ಯಾ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ.

ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮಠದಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಆರೋಪಿಗೆ ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುತ್ಯಾ ಬೆಂಬಲಿಗರು, ವಿಡಿಯೋವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಹೇಳಿದ್ದು, ಮಲ್ಲಿಕಾರ್ಜುನ ಮುತ್ಯಾ ಎಲ್ಲೂ ಪರಾರಿ ಆಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಸ್ಪಷ್ಟಪಡಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ.

ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈ ಟೆನ್ಷನ್ ಕಂಬ ಏರಿ ಆತ್ಮಹತ್ಯೆಗೆ ಯತ್ನಸಿದ ರೈತ.!

0

ತುಮಕೂರು: 120 ಅಡಿ ಎತ್ತರದ ವಿದ್ಯುತ್ ಹೈ ಟೆನ್ಷನ್ ಕಂಬ ಏರಿ ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿ.ಕೆ. ಹಳ್ಳಿ–ದಳವೆಹಳ್ಳಿ ರಸ್ತೆಯಲ್ಲಿ ನಡೆದಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸುಮಾರು ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ರೈತನನ್ನು ರಕ್ಷಿಸಿದ್ದಾರೆ.

ಬಿ.ಕೆ. ಹಳ್ಳಿ ಗ್ರಾಮದ ಗೋಪಾಲ್ (53) ಆತ್ಮಹತ್ಯೆಗೆ ಯತ್ನಿಸಿದ ರೈತ. ಮದ್ಯ ಸೇವಿಸಿದ ಸ್ಥಿತಿಯಲ್ಲಿ ವಿದ್ಯುತ್ ಹೈ ಟೆನ್ಷನ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳೀಯರು ಈ ದೃಶ್ಯ ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಟ್ಟು ಕಾರ್ಯಾಚರಣೆ ನಡೆಸಿದರು. ಸುಮಾರು ಮೂರು ಗಂಟೆಗಳ ಪ್ರಯತ್ನದ ಬಳಿಕ ಯಾವುದೇ ಅನಾಹುತವಾಗದಂತೆ ಗೋಪಾಲ್ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಗೋಪಾಲ್ ತಿಳಿಸಿದ್ದಾರೆ. ಜಮೀನಿಗೆ ಬೋರ್‌ವೆಲ್ ಕೊರೆಸಲು ಹಾಗೂ ಮಗಳ ಮದುವೆಗಾಗಿ ಸುಮಾರು 6 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದಾಗಿ ಹೇಳಿದ್ದಾರೆ. ಸಾಲಗಾರರ ಒತ್ತಡ ಹೆಚ್ಚಾಗಿದ್ದರಿಂದ ಮನನೊಂದು ಮದ್ಯ ಸೇವಿಸಿ ಕಂಬ ಏರಿದ್ದಾಗಿ ತಿಳಿಸಿದ್ದಾರೆ. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಗೋಪಾಲ್ ಅವರನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಯಾಂಡಲ್ ವುಡ್ ನಿರ್ದೇಶಕನ ಕಿಡ್ನ್ಯಾಪ್ ಕೇಸ್: ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್!

0

ಬೆಂಗಳೂರು: ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

ಅನೀಶ್ “ಜೀವನದ ಭಾಷೆ” ಎಂಬ ಸಿನಿಮಾವನ್ನು ನಿರ್ದೇಶಿಸುತ್ತಿದ್ದರು. ಇದಕ್ಕೂ ಮುನ್ನ “ಭರವಸೆಯ ಜೀವನ” ಎಂಬ ಶಾರ್ಟ್ ಮೂವಿ ನಿರ್ಮಿಸಿದ್ದರು. ಕೆಲವು ಕಾರಣಗಳಿಂದ ಸಿನಿಮಾ ನಿಲ್ಲಿಸಿ ಬಳಿಕ ಮುಂಬೈಗೆ ಸ್ಥಳಾಂತರವಾಗಿದ್ದರು.

ಈ ನಡುವೆ, ತಮ್ಮ ಕಾರು ಮಾರಾಟದ ಬಗ್ಗೆ ನಟಿ ಐಶ್ವರ್ಯ ಅವರಿಗೆ ಮಾಹಿತಿ ನೀಡಿದ್ದರು. ದುನಿಯಾ ವಿಜಯ್ ಅಭಿನಯದ “ಭೀಮ” ಸಿನಿಮಾದಲ್ಲಿ ನಟಿಸಿದ್ದ ಐಶ್ವರ್ಯ ಮೂಲಕ ಆರೋಪಿಗಳು ಮಾಹಿತಿ ಕಲೆಹಾಕಿದ್ದಾರೆ. ಕಾರು ಖರೀದಿ ಮಾಡುವುದಾಗಿ ಹೇಳಿ ಅನೀಶ್ ಅವರನ್ನು ಸಂಪರ್ಕಿಸಿ, ನಟಿಯ ಮೂಲಕ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.

ಬೆಂಗಳೂರಿಗೆ ಬಂದ ಬಳಿಕ ಕಾರು ಖರೀದಿ ನೆಪದಲ್ಲಿ ಅನೀಶ್ ಅವರನ್ನು ಕಿಡ್ನ್ಯಾಪ್ ಮಾಡಲಾಗಿದೆ. ನಿರ್ದೇಶಕನೊಂದಿಗೆ ಐದು ಲಕ್ಷ ರೂಪಾಯಿ ಹಣದ ವಿಚಾರವಾಗಿ ಉಂಟಾದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ 11 ಆರೋಪಿಗಳನ್ನು ಬಂಧಿಸಿರುವ ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳ ಬಳಿಕ ಮಹತ್ವದ ಕಾನೂನು ಬೆಳವಣಿಗೆ ಸಂಭವಿಸಿದೆ. ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ಕೆಳ ನ್ಯಾಯಾಲಯದ ಖುಲಾಸೆ ತೀರ್ಪನ್ನು ಎತ್ತಿಹಿಡಿದಿದೆ.

2000ರ ಜುಲೈ 30ರಂದು ದೊಡ್ಡಗಾಜನೂರಿನ ಫಾರ್ಮ್‌ಹೌಸ್‌ನಿಂದ ಡಾ. ರಾಜ್‌ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. 108 ದಿನಗಳ ಕಾಲ ನಡೆದ ಈ ನಾಟಕೀಯ ಘಟನೆ ಕರ್ನಾಟಕ ಮತ್ತು ತಮಿಳುನಾಡಿನ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು.

ಪ್ರಕರಣದಲ್ಲಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಸೇರಿ ನಾಲ್ವರು ಸಾವನ್ನಪ್ಪಿದ ಬಳಿಕ, ಉಳಿದ ಒಂಬತ್ತು ಮಂದಿಯ ವಿರುದ್ಧ ದೀರ್ಘಾವಧಿ ವಿಚಾರಣೆ ನಡೆದಿತ್ತು. ಸುಮಾರು 10 ನ್ಯಾಯಮೂರ್ತಿಗಳು ಬದಲಾಗಿದ್ದ ಈ ಪ್ರಕರಣ 18 ವರ್ಷಗಳ ಬಳಿಕ 2018ರಲ್ಲಿ ಖುಲಾಸೆ ತೀರ್ಪಿನಿಂದ ಅಂತ್ಯಗೊಂಡಿತ್ತು.

ಆ ತೀರ್ಪಿಗೆ ವಿರೋಧವಾಗಿ 2019ರಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಇದೀಗ ಹೈಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಎರಡು ದಶಕಗಳಿಗೂ ಅಧಿಕ ಕಾಲ ಮುಂದುವರಿದ ಕಾನೂನು ಹೋರಾಟಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.

ಪಿ. ಲಂಕೇಶ್ ಪರಂಪರೆಗೆ ಮೂರನೇ ಕಿರೀಟ: ಸಮರ್ಜಿತ್ ಲಂಕೇಶ್ ಗೆ ಫಿಲ್ಮ್‌ಫೇರ್ ಗೌರವ

70ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭವು ಲಂಕೇಶ್ ಕುಟುಂಬಕ್ಕೆ ಮತ್ತೊಮ್ಮೆ ಗೌರವ ತಂದಿದೆ. ಸಮರ್ಜಿತ್ ಲಂಕೇಶ್ ಅವರು ‘ಗೌರಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನವನಟ ಪ್ರಶಸ್ತಿ ಗೆದ್ದು ಕುಟುಂಬದ ಸಾಧನೆಯನ್ನು ಮುಂದುವರಿಸಿದ್ದಾರೆ.

ಕನ್ನಡ ಸಾಹಿತ್ಯ ಹಾಗೂ ಚಿತ್ರರಂಗದಲ್ಲಿ ವಿಶಿಷ್ಟ ಗುರುತು ಮೂಡಿಸಿದ ಪಿ. ಲಂಕೇಶ್ ಅವರು ಎಲ್ಲಿಂದಲೋ ಬಂದವರು ಚಿತ್ರದ ಮೂಲಕ ಫಿಲ್ಮ್‌ಫೇರ್ ಗೌರವ ಪಡೆದಿದ್ದರು. ಅವರ ಪುತ್ರ ಇಂದ್ರಜಿತ್ ಲಂಕೇಶ್ ನಿರ್ದೇಶನ ಕ್ಷೇತ್ರದಲ್ಲಿ ‘ಐಶ್ವರ್ಯ’ ಚಿತ್ರದಿಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದಿದ್ದರು.

ಈಗ ಸಮರ್ಜಿತ್ ಲಂಕೇಶ್ ‘ಗೌರಿ’ ಮೂಲಕ ಯಶಸ್ವಿ ಆರಂಭ ಮಾಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವೃಷಭ ಚಿತ್ರದಲ್ಲಿ ಮೋಹನ್ಲಾಲ್ ಜೊತೆ ಅಭಿನಯಿಸಿದ್ದು ಅವರ ಕರಿಯರ್‌ಗೆ ಹೊಸ ಆಯಾಮ ನೀಡಿದೆ. ಒಂದು ಕನ್ನಡ ಹಾಗೂ ಒಂದು ಹಿಂದಿ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ.

ಲಂಕೇಶ್ ಕುಟುಂಬದ ಚಿತ್ರಯಾನ ಮೂರನೇ ತಲೆಮಾರಿನೊಂದಿಗೆ ಮತ್ತಷ್ಟು ಬಲ ಪಡೆಯುತ್ತಿದೆ.

ತೆಲುಗು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ

ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಸಮಾರಂಭ ಭಾರಿ ಗಮನ ಸೆಳೆದಿದೆ. ರಾಜಸ್ಥಾನದ ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ಇಂದು ಬೆಳಗ್ಗೆ ಈ ಜೋಡಿ ಅಧಿಕೃತವಾಗಿ ವಿವಾಹವಾಗಿದ್ದಾರೆ.

ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆದ ವಿವಾಹವು ತೆಲುಗು ಸಂಪ್ರದಾಯದಂತೆ ನೆರವೇರಿತು. ಕಳೆದ ವರ್ಷ ನಡೆದ ನಿಶ್ಚಿತಾರ್ಥದ ನಂತರ ಈ ಜೋಡಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದೆ. ಮದುವೆಗೆ ಮುನ್ನ ಮೆಹಂದಿ, ಹಳದಿ ಮತ್ತು ಸಂಗೀತ್ ಕಾರ್ಯಕ್ರಮಗಳು ನಡೆಯುವ ಮೂಲಕ ಮದುವೆ ಸಂಭ್ರಮ ಆರಂಭವಾಗಿತ್ತು.

ಈ ಜೋಡಿ ವಿಭಿನ್ನ ಸಂಪ್ರದಾಯಗಳಿಗೆ ಸೇರಿದ ಕುಟುಂಬಗಳಿಂದ ಬಂದಿರುವ ಕಾರಣ, ತೆಲುಗು ಮತ್ತು ಕೊಡವ ಸಂಪ್ರದಾಯಗಳನ್ನು ಸಮನಾಗಿ ಪಾಲಿಸುವ ರೀತಿಯಲ್ಲಿ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ ವೇಳೆಗೆ ಕೊಡವ ಸಂಪ್ರದಾಯದ ಶಾಸ್ತ್ರಗಳು ನಡೆಯುವ ನಿರೀಕ್ಷೆಯಿದೆ.

ಚಿತ್ರರಂಗ ಮತ್ತು ರಾಜಕೀಯ ವಲಯದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು, ಮಾರ್ಚ್ ಮೊದಲ ವಾರದಲ್ಲಿ ಹೈದರಾಬಾದ್‌ನಲ್ಲಿ ಭರ್ಜರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

error: Content is protected !!