Home Blog Page 119

ಬಾಹ್ಯಾಕಾಶ ಸಾಧನೆಗೆ ಮಹಾ ಗೌರವ: ಶುಭಾಂಶು ಶುಕ್ಲಾಗೆ “ಅಶೋಕ ಚಕ್ರ” ಪ್ರದಾನ

0

ನವದೆಹಲಿ: 2026ರ ಗಣರಾಜ್ಯೋತ್ಸವದ ಸಂಭ್ರಮದಂದು ದೇಶವು ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು.

ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸುವ ಮೂಲಕ ಇತಿಹಾಸ ನಿರ್ಮಿಸಿದ ಮಹತ್ತರ ಸಾಧನೆಗಾಗಿ ಮತ್ತು ತೋರಿದ ಅಪಾರ ಧೈರ್ಯಕ್ಕಾಗಿ ಈ ಗೌರವವನ್ನು ಶುಭಾಂಶು ಶುಕ್ಲಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿ ಅವರು ರಾಷ್ಟ್ರಕ್ಕಾಗಿ ನೀಡಿದ ಅಪ್ರತಿಮ ಕೊಡುಗೆಯನ್ನು ಸ್ಮರಿಸುತ್ತದೆ.

ಅಶೋಕ ಚಕ್ರವು ಯುದ್ಧಭೂಮಿಯ ಹೊರಗೆ ತೋರಿದ ಅದ್ಭುತ ಸಾಹಸ, ಆತ್ಮತ್ಯಾಗ ಅಥವಾ ಧೈರ್ಯಕ್ಕಾಗಿ ಸೈನಿಕರು ಮತ್ತು ನಾಗರಿಕರಿಗೆ ನೀಡಲಾಗುವ ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾಗಿದೆ. ಇದು ಯುದ್ಧಕಾಲದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಪರಮವೀರ ಚಕ್ರಕ್ಕೆ ಸಮಾನವಾಗಿದೆ.

ಶುಭಾಂಶು ಶುಕ್ಲಾ ಅವರು ಆಕ್ಸಿಯಮ್–4 (Axiom-4) ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿ 2025ರ ಜೂನ್ 25ರಂದು ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿದ್ದರು. ಅಲ್ಲಿ ಸುಮಾರು 18 ದಿನಗಳ ಕಾಲ ಉಳಿದು, ಜುಲೈ 15ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು.

ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಅವರು ಇತರ ವಿಜ್ಞಾನಿಗಳೊಂದಿಗೆ 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದು, ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಮಾಹಿತಿಯನ್ನು ಒದಗಿಸಿದ್ದಾರೆ. ಈ ಮಿಷನ್‌ನಲ್ಲಿ ಶುಭಾಂಶು ಶುಕ್ಲಾ ಅವರೊಂದಿಗೆ ಕಮಾಂಡರ್ ಪೆಗ್ಗಿ ವಿಟ್ಸನ್ (ಅಮೆರಿಕ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ–ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಕೂಡ ಭಾಗವಹಿಸಿದ್ದರು. ಎಲ್ಲಾ ಸದಸ್ಯರು ಯಶಸ್ವಿಯಾಗಿ ಭೂಮಿಗೆ ವಾಪಸ್ ಆಗಿದ್ದಾರೆ.

ಪ್ರವಾಸಿ ವಾಹನ ಡಿಕ್ಕಿ: ಕೃಷಿ ಪತ್ತಿನ ಸಹಕಾರ ಸಂಘದ ಮಹಿಳಾ ಸಿಬ್ಬಂದಿ ಸಾವು!

0

ಚಿಕ್ಕಮಗಳೂರು: ಆಲ್ದೂರು ಸಮೀಪ ಪ್ರವಾಸಿ ವಾಹನ ಡಿಕ್ಕಿಯಾಗಿ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ಬಳಿಕ ವಾಹನವನ್ನು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದ್ದು, ಅವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು.

ಅಪಘಾತಕ್ಕೆ ಕಾರಣವಾದ ವಾಹನವು ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಹಿನ್ನೆಲೆ, ಆಲ್ದೂರು ಹೋಬಳಿಯಲ್ಲಿ ನಡೆಯಬೇಕಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕರಾಳ ಕೃಷಿ ಕಾಯ್ದೆ ಹಿಂಪಡೆದಂತೆ G RAM G ಕಾಯ್ದೆ ಹಿಂಪಡೆಯುವವರೆಗೂ ಹೋರಾಟ: ಡಿ.ಕೆ. ಶಿವಕುಮಾರ್

0

ಬೆಂಗಳೂರು: “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು.

“20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ” ಎಂದರು.

“ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ” ಎಂದರು‌.

“ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು” ಎಂದರು.

ಕೃಷಿ ಕರಾಳ ಕಾಯ್ದೆ ಹಿಂಪಡೆದಂತೆ ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ

ಯಾವ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕೇಳಿದಾಗ, “ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು” ಎಂದರು.

ಜೆಡಿಎಸ್ ಮನರೇಗಾ ಬದಲಾವಣೆ ಬಗ್ಗೆ ವಿರೋಧ ವ್ಯಕ್ತಪಡಿಸದೇ ಇರುವ ಬಗ್ಗೆ ಕೇಳಿದಾಗ, “ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ” ಎಂದರು.

“ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ” ಎಂದರು.

2028 ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನ್ನಾಡುವುದು, ಆ ವಿಚಾರ ಬೇಡ ಬಿಡಿ” ಎಂದರು.

Republic Day Parade: ಕರ್ತವ್ಯ ಪಥದಲ್ಲಿ ಭಾರತೀಯ ಸೇನೆಯ ‘ಸೈಲೆಂಟ್ ವಾರಿಯರ್ಸ್’ ಪ್ರಾಣಿಗಳ ಶಕ್ತಿಯ ಪ್ರದರ್ಶನ!

0

ನವದೆಹಲಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಇಂದು ನಡೆದ ಪರೇಡ್ ಹಲವು ವಿಶೇಷತೆಗಳಿಂದ ಗಮನ ಸೆಳೆದಿದೆ. ಪರೇಡ್ಆರಂಭದಲ್ಲೇ ಬ್ಯಾಕ್ಟ್ರಿಯನ್ ಒಂಟೆಗಳು, ಶಿಕಾರಿ ಪಕ್ಷಿ ಬ್ಲ್ಯಾಕ್ ಕೈಟ್ಸ್, ಸೈನಿಕ ಶ್ವಾನಗಳು ಸೇರಿದಂತೆ ರಕ್ಷಣಾ ವಲಯದ ವಿವಿಧ ಘಟಕಗಳು ಭಾರತೀಯ ಸೇನೆಯ ಶಕ್ತಿಯನ್ನೆತ್ತಿ ತೋರಿಸಿವೆ.
ಭಾರತೀಯ ಸೇನೆಯ ರಿಮೌಂಟ್ ಮತ್ತು ಪಶುವೈದ್ಯಕೀಯ ದಳ (RVC) ತನ್ನ ಸಮರ್ಪಿತ ಪ್ರಾಣಿ ತಂಡವನ್ನು ಪರೇಡ್ ನಲ್ಲಿ ಪರಿಚಯಿಸಿದ್ದು, ಕಠಿಣ ಭೂಪ್ರದೇಶಗಳಲ್ಲಿ ಸೇನೆಗೆ ಸೌಲಭ್ಯ ನೀಡುವ ಪ್ರಾಣಿಗಳ ಸೇವೆಯನ್ನು ಅನಾವರಣಗೊಳಿಸಿದೆ.

ʻಸೈಲೆಂಟ್ ವಾರಿಯರ್ಸ್ʼ ಎಂದೇ ಗುರುತಿಸಿಕೊಂಡ ತಂಡವು ಕಠಿಣ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸುತ್ತಾ ಶತ್ರುಗಳ ಮೇಲೆ ನಿಗಾ ವಹಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಬಾರಿ ಪರೇಡ್ ನಲ್ಲಿ ಪ್ರದರ್ಶಿತ ಪ್ರಾಣಿಗಳಲ್ಲಿ ಬ್ಯಾಕ್ಟ್ರಿಯನ್ ಒಂಟೆಗಳು, ಜನ್ಸ್ಕಾರ್ ಪೋನಿಗಳು, ಬ್ಲ್ಯಾಕ್ ಕೈಟ್ಸ್, ವಿಜಿಲೆಂಟ್ ಬರ್ಡ್ಸ್, ಭಾರತೀಯ ತಳಿಯ ಸೇನಾ ನಾಯಿಗಳು (ಮುಧೋಳ ಹೌಂಡ್, ರಾಂಪುರ್ ಹೌಂಡ್, ಚಿಪ್ಪಿಪರೈ, ಕೊಂಬೈ ಮತ್ತು ರಾಜಪಾಳಯಂ) ಮತ್ತು ಸಾಂಪ್ರದಾಯಿಕ ಮಿಲಿಟರಿ ಶ್ವಾನಗಳು ಸೇರಿದ್ದರು.
ಪ್ರದರ್ಶನವು ಪ್ರಾಣಿಗಳ ಮಹತ್ವಪೂರ್ಣ ಪಾತ್ರ ಹಾಗೂ ಭಾರತೀಯ ಸೇನೆಯ ನವೀನತೆಯನ್ನು ಜನತೆಗೆ ತೋರಿಸುವುದರ ಜೊತೆಗೆ, ಗಣರಾಜ್ಯೋತ್ಸವದ ಸಾಂಸ್ಕೃತಿಕ ಮತ್ತು ಸೇನಾ ವೈಭವವನ್ನು ಹೆಚ್ಚಿಸಿದೆ.

ಗಣರಾಜ್ಯೋತ್ಸವ ವೇದಿಕೆ ಅಂಗಳದಲ್ಲೇ ಬಿಜೆಪಿ–ಕಾಂಗ್ರೆಸ್ ಜಟಾಪಟಿ; ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಜಕೀಯ ಬಣ್ಣ!

0

ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮ ರಾಜಕೀಯ ಗದ್ದಲಕ್ಕೆ ವೇದಿಕೆಯಾದ ಘಟನೆ ಬೆಳಕಿಗೆ ಬಂದಿದೆ. ಸಚಿವ ಎಚ್‌ ಕೆ ಪಾಟೀಲ್ ಭಾಷಣದ ಮಧ್ಯೆ ಬಿಜೆಪಿ ಎಂಎಲ್ಸಿ ಎಸ್‌ವಿ ಸಂಕನೂರ ವೇದಿಕೆಗೆ ಆಗಮಿಸಿ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸಂಚಲನ ಮೂಡಿಸಿದೆ.

ಗಣರಾಜ್ಯೋತ್ಸವ ಭಾಷಣದಲ್ಲಿ ಸಚಿವ ಎಚ್‌ ಕೆ ಪಾಟೀಲ್ ಅವರು ವಿಬಿ ರಾಮ್ ಜಿ ಯೋಜನೆ ಕುರಿತು ಪ್ರಸ್ತಾಪ ಮಾಡುತ್ತಿದ್ದಂತೆಯೇ ಎಂಎಲ್ಸಿ ಸಂಕನೂರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೇದಿಕೆಯ ಸಮೀಪಕ್ಕೆ ಬಂದು ಭಾಷಣವನ್ನು ತಡೆಹಿಡಿಯಲು ಪ್ರಯತ್ನಿಸಿದ್ದು, ಕಾರ್ಯಕ್ರಮ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆದರೆ ಸಚಿವ ಎಚ್‌ ಕೆ ಪಾಟೀಲ್ ಯಾವುದೇ ಪ್ರತಿಕ್ರಿಯೆ ನೀಡದೆ ಭಾಷಣ ಮುಂದುವರೆಸಿದರು. ಇದರಿಂದ ಕೋಪಗೊಂಡ ಸಂಕನೂರ ಅವರು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿ ವೇದಿಕೆಯಿಂದ ಹೊರನಡೆದರು.

“ಕಾನೂನು ಸಚಿವರಿಗೆ ಕಾನೂನು ಗೊತ್ತಿಲ್ಲ” – ಸಂಕನೂರ ಕಿಡಿ

ಕಾರ್ಯಕ್ರಮದ ಬಳಿಕ ಮಾತನಾಡಿದ ಎಸ್‌ವಿ ಸಂಕನೂರ, “ಎಚ್‌ ಕೆ ಪಾಟೀಲ್ ಅವರ ಭಾಷಣವನ್ನು ನಾನು ಖಂಡಿಸುತ್ತೇನೆ. ಕಾನೂನು ಸಚಿವರು ಮೊದಲು ಕಾನೂನು ತಿಳಿದುಕೊಳ್ಳಬೇಕು. ಹಿಂದೆಯೇ 100 ದಿನ ಉದ್ಯೋಗ ಯೋಜನೆ ಇತ್ತು. ನಾವು ಅದನ್ನು 125 ದಿನಗಳಿಗೆ ಹೆಚ್ಚಿಸಿದ್ದೇವೆ. ವಾರಕ್ಕೆ ಕೂಲಿ ಕಾರ್ಮಿಕರಿಗೆ ವೇತನ ಕೊಡುತ್ತಿದ್ದೇವೆ. ಆದರೆ ಸಚಿವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ” ಎಂದು ತೀವ್ರ ಆಕ್ರೋಶ ಹೊರಹಾಕಿದರು.
ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಈ ರೀತಿಯ ರಾಜಕೀಯ ಗದ್ದಲ ನಡೆದಿರುವುದು ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಸ್ವಿಮ್ಮಿಂಗ್ ಪೂಲ್‌ನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು: ಪತಿಯ ಮೇಲೆ ಗಂಭೀರ ಆರೋಪ

0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಅನುಮಾನ ಹುಟ್ಟಿಸುವ ಭೀಕರ ಘಟನೆ ನಡೆದಿದೆ. 32 ವರ್ಷದ ಗೃಹಿಣಿ ಪ್ರತಿಭಾ ಅವರ ಮೃತದೇಹ ಮನೆಯ ಸ್ವಿಮ್ಮಿಂಗ್ ಪೂಲ್‌ನಲ್ಲಿ ಪತ್ತೆಯಾಗಿದ್ದು, ಈ ಪ್ರಕರಣ ಇದೀಗ ಕೊಲೆನಾ? ಆತ್ಮಹತ್ಯೆಯಾ? ಎಂಬ ಗಂಭೀರ ಅನುಮಾನಗಳನ್ನು ಹುಟ್ಟಿಸಿದೆ.

ಮೃತ ಮಹಿಳೆಯ ಪತಿ ನಂಜೇಗೌಡ ಮೇಲೆ ಕುಟುಂಬಸ್ಥರು ನೇರವಾಗಿ ಕೊಲೆ ಆರೋಪ ಮಾಡಿದ್ದಾರೆ. ಆದರೆ ನಂಜೇಗೌಡ ಮಾತ್ರ, “ಪತ್ನಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು” ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಅನುಮಾನಕ್ಕೆ ಮತ್ತಷ್ಟು ಬಲ ನೀಡಿದೆ.

ಮನೆ ಒಳಗೇ ನಡೆದಿದೆಯೇ ಕ್ರೈಂ?

ಇಂದು ಬೆಳಿಗ್ಗೆ ನಂಜೇಗೌಡ ತನ್ನ ಅತ್ತಿಗೆ ಮನೆಯ ಬಳಿ ಬಂದು, “ಪ್ರತಿಭಾ ರೂಮ್ ಬಾಗಿಲು ತೆಗೆಯುತ್ತಿಲ್ಲ” ಎಂದು ಮಾಹಿತಿ ನೀಡಿದ್ದಾನೆ. ತಕ್ಷಣವೇ ಪ್ರತಿಭಾ ಸಹೋದರ ಪರಮೇಶ್ ಮನೆಗೆ ತೆರಳಿ ಪರಿಶೀಲಿಸಿದಾಗ ಮನೆಯೊಳಗೆ ಪ್ರತಿಭಾ ಎಲ್ಲಿಯೂ ಕಾಣಿಸಿಲ್ಲ. ನಂತರ ಮನೆಯ ಆವರಣದಲ್ಲಿದ್ದ ಸ್ವಿಮ್ಮಿಂಗ್ ಪೂಲ್ ಪರಿಶೀಲಿಸಿದಾಗ, ನೀರಿನೊಳಗೆ ಪ್ರತಿಭಾ ಮೃತದೇಹ ಪತ್ತೆಯಾಗಿದೆ. ಈ ದೃಶ್ಯ ಕಂಡ ಕುಟುಂಬಸ್ಥರು ಶಾಕ್ ಆಗಿದ್ದು, ಘಟನೆ ಸ್ಥಳದಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ನಂಜೇಗೌಡಗೆ ಪ್ರತಿಭಾ ಎರಡನೇ ಪತ್ನಿ. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಮೊದಲ ಪತ್ನಿ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ. ಇದೇ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಇದು ಪೂರ್ವ ಯೋಜಿತ ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಸಂಶಯ ಹೆಚ್ಚಿಸುವ ಸಂಗತಿ ಎಂದರೆ – ನಿನ್ನೆ ರಾತ್ರಿ ಪ್ರತಿಭಾ ತನ್ನ ಮನೆಯಲ್ಲಿದ್ದ ಕುಟುಂಬಸ್ಥರನ್ನು ಏಕಾಏಕಿ ಮನೆಗೆ ವಾಪಸ್ ಕಳುಹಿಸಿದ್ದಾಳೆ. ಆ ನಂತರ ರಾತ್ರಿ ಏನಾಯ್ತು ಎಂಬುದು ಇನ್ನೂ ರಹಸ್ಯವಾಗಿಯೇ ಉಳಿದಿದೆ.

ಘಟನೆಯ ಗಂಭೀರತೆಯನ್ನು ಗಮನಿಸಿ ಕೋಡಿಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ತೀವ್ರಗೊಳಿಸಿದ್ದಾರೆ. ಪ್ರತಿಭಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರವೇ ಸತ್ಯ ಬಹಿರಂಗವಾಗಲಿದೆ.

ಚಿನ್ನ ಕೊಟ್ಟ ಪ್ರಾಮಾಣಿಕತೆಗೆ ಸರ್ಕಾರದ ಬಂಪರ್ ಬಹುಮಾನ: ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಸೈಟ್, ₹5 ಲಕ್ಷ ಮತ್ತು ಸರ್ಕಾರಿ ಉದ್ಯೋಗ!

0

ಗದಗ: ಚಿನ್ನದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಬಾಲಕ ಪ್ರಜ್ವಲ್ ರಿತ್ತಿ ಮತ್ತು ಅವರ ಕುಟುಂಬಕ್ಕೆ ಸರ್ಕಾರದಿಂದ ಗಣರಾಜ್ಯೋತ್ಸವದ ಬಂಪರ್ ಗಿಫ್ಟ್ ಘೋಷಿಸಲಾಗಿದೆ. ಸಚಿವ ಎಚ್ ಕೆ ಪಾಟೀಲ್ ಅವರು ಗದಗ ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಜನವರಿ 10 ರಂದು ಮನೆ ಪಾಯ ಅಗೆಯುವ ವೇಳೆ ಗದಗ ಜಿಲ್ಲೆಯ 466 ಗ್ರಾಮದ ಪುರಾತನ ಚಿನ್ನದ ಒಡವೆಗಳ ತಂಬಿಗೆ ಪತ್ತೆಯಾಗಿತ್ತು. ಈ ಅಮೂಲ್ಯ ಚಿನ್ನವನ್ನು ಪ್ರಜ್ವಲ್ ರಿತ್ತಿ ಕುಟುಂಬ ಸರ್ಕಾರಕ್ಕೆ ಪ್ರಾಮಾಣಿಕವಾಗಿ ಒಪ್ಪಿಸಿತ್ತು. ಈ ಪ್ರಾಮಾಣಿಕತೆಗೆ ಸರ್ಕಾರ ವಿಶೇಷ ಗೌರವ ತೋರಿದೆ.

ಸಚಿವ ಎಚ್ ಕೆ ಪಾಟೀಲ್ ಅವರು ಘೋಷಣೆ ಮಾಡಿದಂತೆ, ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30×40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ ₹5 ಲಕ್ಷ ನಗದು ಸಹಾಯ ಮತ್ತು ತಾಯಿ ಕಸ್ತೂರೆವ್ವ ಅವರಿಗೆ ಹೊರಗುತ್ತಿಗೆ ಆಧಾರದ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ.

ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಕ ಪ್ರಜ್ವಲ್ ರಿತ್ತಿ ಮತ್ತು ತಾಯಿ ಕಸ್ತೂರೆವ್ವ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಈ ವೇಳೆ ಸಚಿವರು ನಿವೇಶನದ ಪ್ರಮಾಣ ಪತ್ರ ಮತ್ತು ಕಸ್ತೂರೆವ್ವ ಅವರಿಗೆ ಉದ್ಯೋಗ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಸರ್ಕಾರದ ಈ ನಿರ್ಧಾರವನ್ನು ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಪ್ರಾಮಾಣಿಕತೆಗೆ ದೊರಕಿದ ಅತ್ಯುತ್ತಮ ಗೌರವ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Republic Day: ಕರ್ತವ್ಯ ಪಥದಲ್ಲಿ ಭಾರತದ ಸೇನಾ ಶಕ್ತಿ ಅನಾವರಣ: ಮೊದಲ ಬಾರಿಗೆ ಡ್ರೋನ್ ಪ್ರದರ್ಶನ!

0

ನವದೆಹಲಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ಭಾರತೀಯ ಸೇನೆಯ ಶಕ್ತಿಯುತ ಸಾಮರ್ಥ್ಯವನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆ ನಡೆಯಿತು. ದೇಶದ ರಕ್ಷಣಾ ಶಕ್ತಿ, ಆಧುನಿಕ ಶಸ್ತ್ರಾಸ್ತ್ರಗಳು ಹಾಗೂ ತಂತ್ರಜ್ಞಾನ ಸಾಮರ್ಥ್ಯವನ್ನು ಈ ಮೆರವಣಿಗೆಯಲ್ಲಿ ಜನತೆಗೆ ಪರಿಚಯಿಸಲಾಯಿತು.

ಮೆರವಣಿಗೆಯಲ್ಲಿ ಆಪರೇಷನ್ ಸಿಂಧೂರ್ ಟ್ಯಾಬ್ಲೋ ವಿಶೇಷ ಆಕರ್ಷಣೆಯಾಗಿ ಕಾಣಿಸಿಕೊಂಡಿತು. ಇದೇ ಮೊದಲ ಬಾರಿಗೆ ಸೇನೆಯ ಡ್ರೋನ್ ತಂತ್ರಜ್ಞಾನವನ್ನು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶಿಸಲಾಗಿದ್ದು, ಸೇನೆಯ ಆಧುನಿಕೀಕರಣದ ಸಂಕೇತವಾಗಿ ಗಮನ ಸೆಳೆಯಿತು.

ಗರುಡಾ ಫಾರ್ಮೇಷನ್‌ನಲ್ಲಿ ಅಪಾಚೆ ಮತ್ತು ಧ್ರುವ ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಕೌಶಲ್ಯ ಪ್ರದರ್ಶಿಸಿದರೆ, ಭೂಮಿಯಲ್ಲಿ T-90 ಭೀಷ್ಮ ಟ್ಯಾಂಕ್, ನಾಗ್ ಕ್ಷಿಪಣಿ ವ್ಯವಸ್ಥೆ, ಶಕ್ತಿಬಾನ್ ಮತ್ತು ದಿವ್ಯಾಸ್ತ್ರ, ಧನುಷ್ ಹಾಗೂ ಅಮೋಘ್ ಸಿಸ್ಟಮ್, ಸೂರ್ಯಾಸ್ತ್ರ ರಾಕೆಟ್ ಲಾಂಚರ್, ಬ್ರಹ್ಮೋಸ್ ಸೂಪರ್ ಸಾನಿಕ್ ಮಿಸೈಲ್ ವೆಪನ್ ಸಿಸ್ಟಮ್, ಆಕಾಶ್ ಹಾಗೂ ಅಭರ ಮಧ್ಯಮ ಶ್ರೇಣಿಯ ಕ್ಷಿಪಣಿ ವ್ಯವಸ್ಥೆಗಳ ಪ್ರದರ್ಶನ ನಡೆಯಿತು.

ಇದರ ಜೊತೆಗೆ ವಂದೇ ಮಾತರಂ ಗೀತೆಯ 150ನೇ ವರ್ಷದ ಆಚರಣೆ, ದೇಶದ ಅಭಿವೃದ್ಧಿ ಪಯಣ ಹಾಗೂ ಭಾರತದ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನೂ ಪ್ರದರ್ಶಿಸಲಾಯಿತು.

ಈ ಭವ್ಯ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್

0

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಗೆಲುವಿನ ಸರಣಿ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದ್ದು, ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡದ ಮೂರನೇ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದುವರೆಗೆ ಈ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದರು. ಇದೀಗ ಸೂರ್ಯ, ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಟ್ಟು 52 ಟಿ20 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 32 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. 18 ಪಂದ್ಯಗಳಲ್ಲಿ ಸೋಲು ಕಂಡಿದ್ದರೆ, 2 ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿದ್ದವು. ಅಲ್ಲದೆ 2 ಪಂದ್ಯಗಳು ರದ್ದಾಗಿದ್ದವು.

ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಟ್ಟು 41 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ಪೈಕಿ ಭಾರತ ತಂಡ 33 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಕೇವಲ 6 ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿದೆ. ಇನ್ನು 2 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ.

ಭಾರತ ಟಿ20 ತಂಡದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಭಾರತ ತಂಡ 62 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 50 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

ಇನ್ನು ದ್ವಿತೀಯ ಸ್ಥಾನದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದು, ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 72 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದು 41 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಮಾನವೀಯತೆಯ ಸೂಪರ್‌ಸ್ಟಾರ್: 15 ವರ್ಷಗಳಿಂದ ₹5ಗೆ ಪರೋಟ ಮಾರುವ ವ್ಯಾಪಾರಿಗೆ ರಜನೀಕಾಂತ್ ವಿಶೇಷ ಗೌರವ

ಚೆನ್ನೈ: ನಟ ರಜನೀಕಾಂತ್ ಅವರು ಮತ್ತೊಮ್ಮೆ ತಮ್ಮ ಮಾನವೀಯತೆಯ ಮೂಲಕ ಜನಮನ ಗೆದ್ದಿದ್ದಾರೆ. ಮಧುರೈ ಮೂಲದ ರಸ್ತೆ ಬದಿ ವ್ಯಾಪಾರಿ ಶೇಖರ್ ಅವರನ್ನು ಕುಟುಂಬ ಸಮೇತ ತಮ್ಮ ನಿವಾಸಕ್ಕೆ ಆಹ್ವಾನಿಸಿ ಗೌರವಿಸಿದ ಘಟನೆ ಇದೀಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಶೇಖರ್ ಕಳೆದ 15 ವರ್ಷಗಳಿಂದಲೂ ಕೇವಲ 5 ರೂಪಾಯಿಗೆ ಪರೋಟ ಮಾರಾಟ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ರಸ್ತೆ ಬದಿ ಹೋಟೆಲ್‌ಗಳಲ್ಲಿ ಪರೋಟ ಬೆಲೆ 30ರಿಂದ 50 ರೂಪಾಯಿ ಇದ್ದರೂ, ಶೇಖರ್ ಮಾತ್ರ ಬೆಲೆ ಏರಿಸದೇ ಸೇವಾ ಮನೋಭಾವದಿಂದ ವ್ಯಾಪಾರ ನಡೆಸುತ್ತಿದ್ದಾರೆ. ಈ ಕಾರ್ಯವೇ ರಜನೀಕಾಂತ್ ಗಮನ ಸೆಳೆದಿದೆ.

ಶೇಖರ್ ಅವರನ್ನು ಮನೆಗೆ ಕರೆಸಿದ ರಜನೀಕಾಂತ್, ಆತಿಥ್ಯ ನೀಡಿ, ಚಿನ್ನದ ಚೈನ್ ನೀಡುವ ಮೂಲಕ ಸನ್ಮಾನ ಮಾಡಿದ್ದಾರೆ. ಜೊತೆಗೆ ಶೇಖರ್ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಲಾಗಿದೆ ಎನ್ನಲಾಗಿದೆ.

ಶೇಖರ್ ರಜನೀಕಾಂತ್ ಅವರ ಅಪ್ಪಟ ಅಭಿಮಾನಿ. ರಜನೀಕಾಂತ್ ಹುಟ್ಟುಹಬ್ಬದ ನೆನಪಿಗಾಗಿ 5 ರೂಪಾಯಿ ಪರೋಟ ಮಾರಾಟ ಆರಂಭಿಸಿದ್ದ ಶೇಖರ್, ತಮ್ಮ ಹೋಟೆಲಿನಲ್ಲಿ ನಟನ ಫೋಟೋಗಳನ್ನು ಅಳವಡಿಸಿಕೊಂಡಿದ್ದು, ಕೈ ಮೇಲೆ ಟ್ಯಾಟೂ ಕೂಡ ಹಾಕಿಸಿಕೊಂಡಿದ್ದಾರೆ.

ಈ ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಜನೀಕಾಂತ್ ಅವರ ವ್ಯಕ್ತಿತ್ವಕ್ಕೆ ಜನರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

error: Content is protected !!