-
ವಿಜಯಸಾಕ್ಷಿ ಸುದ್ದಿ, ಧಾರವಾಡ: ಪ್ರಸಕ್ತ ಸಾಲಿನ ಮಾರ್ಚ್ನಿಂದ ಮೇ ತಿಂಗಳವರೆಗೆ ಬೇಸಿಗೆ ಹೆಚ್ಚಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆಯು ಈಗಾಗಲೇ ನೀಡಿರುವದರಿಂದ ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನಚ್ಚರಿಕೆ ವಹಿಸಿ, ಅಗತ್ಯ ದಾಸ್ತಾನು ಮತ್ತು ಪರಿಹಾರ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್ ತಿಳಿಸಿದರು.
ಅವರು ಶನಿವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ 2026ನೇ ಸಾಲಿನ ಬೇಸಿಗೆ ಅವಧಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಂಗ್ರಹಣೆ ಹಾಗೂ ಅತಿಯಾದ ಬಿಸಿಲಿನಿಂದ ಕೈಗೊಳ್ಳುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ ಮಾತನಾಡಿದರು.
ಈಗಾಗಲೇ ಧಾರವಾಡ ತಾಲೂಕಿನ ಹೊಸಟ್ಟಿ, ಮಂಡಿಹಾಳ, ಮನಗುಂಡಿ ಮತ್ತು ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮಗಳಿಗೆ ಬಾಡಿಗೆ ಬೋರ್ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಇರುವ ಮೇವು ದಾಸ್ತಾನು ಹೊಂದಲಾಗಿದೆ. ಬೇಸಿಗೆ ಅವಧಿಯಲ್ಲಿ ಸರಬರಾಜು ಮಾಡಲು ಮುಂದಿನ 28 ವಾರಗಳಿಗೆ ಅಗತ್ಯವಿರುವಷ್ಟು ಮೇವನ್ನು ಜಿಲ್ಲೆಯಲ್ಲಿ ದಾಸ್ತಾನು ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ತಿಳಿಸಿದರು.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಬಿಸಿಗಾಳಿ ಹೆಚ್ಚಾಗಿರಲಿದೆ. ವಿಶೇಷವಾಗಿ ಏಪ್ರಿಲ್, ಮೇ ತಿಂಗಳಿನಲ್ಲಿ ಉಷ್ಣಾಂಶವು 35ರಿಂದ 40 ಡಿಗ್ರಿ ಸೆಲ್ಸಿಯಸ್ ಇರುವ ಬಗ್ಗೆ ವರದಿ ಇದೆ. ಈ ಕುರಿತು ನಗರ ಮತ್ತು ಗ್ರಾಮಗಳಲ್ಲಿ ಐಇಸಿ ಕಾರ್ಯ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 82 ವಾರ್ಡ್ಗಳು ಇದ್ದು, 13 ವಾರ್ಡ್ಗಳಿಗೆ ನಿರಂತರ ನೀರು ಯೋಜನೆಯಡಿ ದಿನದ 24 ಗಂಟೆ ನೀರು ಸರಬರಾಜು ವ್ಯವಸ್ಥೆ ಇದೆ ಎಂದು ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ, ಪಶು ಪಾಲನೆ ಇಲಾಖೆಯ ಉಪನಿರ್ದೇಶಕ ಡಾ. ಎಸ್.ವಿ. ಸಂತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ, ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಮಹೇಶ ಗಸ್ತಿ, ಜಿ.ಬಿ. ಮಜ್ಜಗಿ, ಸುಧೀರ ಸಾವುಕಾರ, ಬಸವರಾಜ ಹೊಂಕಣನವರ, ಎಮ್.ಜಿ. ದಾಸಪ್ಪನವರ, ರಾಜು ಮಾವರಕರ್ ಬೇಸಿಗೆ ಅವಧಿಯ ಸುರಕ್ಷತಾ ಕ್ರಮಗಳನ್ನು ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಸಮಾಲೋಚಕ ವೆಂಕಟೇಶ ಗುಳ್ಳಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕಿನ 160 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು 60 ಕೆರೆಗಳು ಇವೆ. ಈ ಪೈಕಿ 40 ಕೆರೆಗಳನ್ನು ಈಗಾಗಲೇ ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ತುಂಬಿಸಲಾಗಿದೆ. ಮತ್ತು 10 ಕೆರೆಗಳು ಶೇ. 75ಕ್ಕಿಂತ ಹೆಚ್ಚು ನೀರು ತುಂಬಿವೆ. ನವಲಗುಂದ ತಾಲೂಕಿನ ಗೊಬ್ಬರಗುಂಪಿ ಗ್ರಾಮದ ಕೆರೆ ಹೂಳೆತ್ತುವ ಕಾರ್ಯದ ನಿಮಿತ್ತ ನೀರು ಹರಿಸಿರಲಿಲ್ಲ. ಮುಂದಿನ ದಿನಗಳಲ್ಲಿ ಈ ಕೆರೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
-
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಇನ್ನು ಮುಂದೆ ನಿಮ್ಮ ಟ್ರಾಕ್ಟರ್ಗಳಲ್ಲಿ ಟೇಪ್ ಹಾಕಿಕೊಂಡು ಜೋರಾಗಿ ಹಾಡುಗಳನ್ನು ಕೂಗಿಸುತ್ತ ಪಟ್ಟಣದಲ್ಲಿ, ಊರುಗಳಲ್ಲಿ, ಗ್ರಾಮಗಳಲ್ಲಿ ತಿರುಗಾಡುತ್ತಿದ್ದರೆ ಈಗಲೇ ಎಚ್ಚೆತ್ತುಕೊಳ್ಳಿ. ಇನ್ನು ಮುಂದೆ ನರೇಗಲ್ಲ ಪೊಲೀಸರು ನಿಮ್ಮ ಟೇಪ್ಗಳನ್ನು ವಶಪಡಿಸಿಕೊಳ್ಳುತ್ತಾರೆ, ನಿಮಗೆ ದಂಡ ಹಾಕುತ್ತಾರೆ, ಇದಕ್ಕೂ ನೀವು ಬಗ್ಗದಿದ್ದರೆ ನಿಮ್ಮ ಗಾಡಿಯನ್ನೇ ಸೀಜ್ ಮಾಡುತ್ತಾರೆ.
ನರೇಗಲ್ಲ ಪಟ್ಟಣ ಮತ್ತು ಗ್ರಾಮಗಳಲ್ಲಿ ಟ್ರಾಕ್ಟರ್ ಹಾಡಿನ ಹಾವಳಿ ಹೆಚ್ಚಾಗಿದೆ. ಹಿಂದೆ ಬರುವ ವಾಹನದವರು ಎಷ್ಟೇ ಹಾರ್ನ್ ಮಾಡಿದರೂ ಕೇಳಿಸದ ಟ್ರಾಕ್ಟರ್ ಚಾಲಕರು ಹಾಗೇ ಸಾಗುತ್ತ ಅನೇಕ ಅನಾಹುತಗಳಿಗೆ ಮತ್ತು ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಅದಕ್ಕಾಗಿ ಈ ಕಠಿಣ ಕ್ರಮವನ್ನು ತೆಗೆದುಕೊಳ್ಳಲೇಬೇಕಾಗಿದೆ ಎಂದು ಪಿಎಸ್ಐ ಐಶ್ವರ್ಯ ನಾಗರಾಳ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಜೋರಾಗಿ ಹಾಡುಗಳನ್ನು ಹಾಕಿಕೊಂಡು ಓಡಾಡುವುದರಿಂದ ಹೃದಯ ರೋಗಿಗಳಿಗೆ, ಚಿಕ್ಕ ಮಕ್ಕಳಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಇನ್ನಿಲ್ಲದ ತೊಂದರೆಯಾಗುತ್ತಿರುವುದನ್ನು ಮನಗಂಡು ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.
ಇದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ಮೂರು ದಿನಗಳಿಂದ ತಾವು ಮತ್ತು ತಮ್ಮ ಸಿಬ್ಬಂದಿಯವರು ಇಂತಹ ಟ್ರಾಕ್ಟರ್ ಚಾಲಕರನ್ನು ಹಿಡಿದು ಜಾಗೃತಿ ಮೂಡಿಸುತ್ತಿದ್ದೇವೆ. ಇನ್ನು ಎರಡು ಮೂರು ದಿನದೊಳಗೆ ಎಲ್ಲ ಟ್ರಾಕ್ಟರ್ ಚಾಲಕರು ಅಥವಾ ಮಾಲೀಕರು ತಮ್ಮ ಟೇಪ್ಗಳನ್ನು ಪಟ್ಟಣದೊಳಗೆ ಬಂದ್ ಮಾಡಿಕೊಳ್ಳದಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದರು.

