Home Blog Page 15

ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು? ಜಾಸ್ತಿ ಸೇವನೆ ಮಾಡಿದ್ರೆ ಆಗುವ ಅಡ್ಡಪರಿಣಾಮಗಳೇನು..?

0

ಬಾದಾಮಿ (Almonds) ಅತ್ಯಂತ ಪೌಷ್ಟಿಕಾಂಶಯುಕ್ತ ಒಣಫಲಗಳಲ್ಲಿ ಒಂದಾಗಿದೆ. ಉತ್ತಮ ಕೊಬ್ಬು (Healthy Fats), ಪ್ರೋಟೀನ್, ನಾರಿನಂಶ, ವಿಟಮಿನ್ ಇ ಮತ್ತು ಮೆಗ್ನೀಸಿಯಮ್ ಸೇರಿದಂತೆ ಹಲವು ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ಬಾದಾಮಿ ಹೃದಯದ ಆರೋಗ್ಯ,

ಮೆದುಳಿನ ಕಾರ್ಯಕ್ಷಮತೆ ಮತ್ತು ದೇಹದ ಒಟ್ಟಾರೆ ಆರೋಗ್ಯಕ್ಕೆ ಸಹಕಾರಿಯಾಗಿದೆ. ಆದರೆ ಆರೋಗ್ಯಕರ ಆಹಾರವೆಂದ ಮಾತ್ರಕ್ಕೆ ಮಿತಿಮೀರಿದ ಪ್ರಮಾಣದಲ್ಲಿ ಸೇವಿಸುವುದು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ದಿನಕ್ಕೆ ಎಷ್ಟು ಬಾದಾಮಿ ಸೇವಿಸಬೇಕು?

ಪೌಷ್ಟಿಕಾಂಶ ತಜ್ಞರ ಪ್ರಕಾರ, ಸಾಮಾನ್ಯ ಆರೋಗ್ಯವಂತ ವ್ಯಕ್ತಿಯು ದಿನಕ್ಕೆ ಸುಮಾರು 28 ಗ್ರಾಂ, ಅಂದರೆ 20 ರಿಂದ 23 ಬಾದಾಮಿಗಳನ್ನು ಸೇವಿಸಬಹುದು. ಬಾದಾಮಿ ತಿನ್ನುವ ಅಭ್ಯಾಸ ಇಲ್ಲದವರು ಅಥವಾ ಜೀರ್ಣಕ್ರಿಯೆ ಸೂಕ್ಷ್ಮವಾಗಿರುವವರು ಆರಂಭದಲ್ಲಿ 6 ರಿಂದ 8 ಬಾದಾಮಿಗಳನ್ನು ಸೇವಿಸಿ, ನಂತರ ಕ್ರಮೇಣ ಪ್ರಮಾಣವನ್ನು ಹೆಚ್ಚಿಸುವುದು ಉತ್ತಮ.

ಅತಿಯಾಗಿ ತಿಂದರೆ ಏನಾಗಬಹುದು?

ಬಾದಾಮಿಯಲ್ಲಿ ಕ್ಯಾಲೊರಿ ಮತ್ತು ಕೊಬ್ಬಿನಾಂಶ ಹೆಚ್ಚಿರುವುದರಿಂದ ದಿನಕ್ಕೆ 30 ರಿಂದ 40ಕ್ಕಿಂತ ಹೆಚ್ಚು ಬಾದಾಮಿ ಸೇವಿಸಿದರೆ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.

  • ತೂಕ ಹೆಚ್ಚಳ: ಹೆಚ್ಚುವರಿ ಕ್ಯಾಲೊರಿ ದೇಹದಲ್ಲಿ ಸಂಗ್ರಹವಾಗಿ ತೂಕ ಹೆಚ್ಚಾಗಬಹುದು.
  • ಜೀರ್ಣಕ್ರಿಯೆ ಸಮಸ್ಯೆ: ಹೆಚ್ಚಿನ ನಾರಿನಂಶದಿಂದ ಹೊಟ್ಟೆ ಉಬ್ಬರ, ಗ್ಯಾಸ್, ಮಲಬದ್ಧತೆ ಅಥವಾ ಭೇದಿಯಂತಹ ತೊಂದರೆಗಳು ಕಾಣಿಸಿಕೊಳ್ಳಬಹುದು.
  • ವಿಟಮಿನ್ ಇ ಅಧಿಕವಾಗುವುದು: ಮಿತಿಮೀರಿದ ಸೇವನೆಯಿಂದ ವಿಟಮಿನ್ ಇ ಪ್ರಮಾಣ ಹೆಚ್ಚಾಗಿ ತಲೆನೋವು ಅಥವಾ ಆಯಾಸದಂತಹ ಸಮಸ್ಯೆಗಳು ಉಂಟಾಗಬಹುದು.

ನೆನೆಸಿದ ಬಾದಾಮಿ ಉತ್ತಮವೇ?

ಬಾದಾಮಿಯನ್ನು ನೀರಿನಲ್ಲಿ ನೆನೆಸಿ, ಸಿಪ್ಪೆ ತೆಗೆದು ತಿನ್ನುವುದು ಹೆಚ್ಚು ಪ್ರಯೋಜನಕಾರಿ ಎಂದು ಹಲವರು ನಂಬುತ್ತಾರೆ. ನೆನೆಸುವುದರಿಂದ ಬಾದಾಮಿಯ ಸಿಪ್ಪೆಯಲ್ಲಿರುವ ಟ್ಯಾನಿನ್ (Tannin) ಎಂಬ ಅಂಶದ ಪರಿಣಾಮ ಕಡಿಮೆಯಾಗಬಹುದು ಎಂದು ಹೇಳಲಾಗುತ್ತದೆ. ಇದರಿಂದ ಕೆಲವು ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಸಹಕಾರಿಯಾಗಬಹುದು. ಆದರೆ ಈ ವಿಷಯದಲ್ಲಿ ಲಭ್ಯವಿರುವ ವೈಜ್ಞಾನಿಕ ಸಾಕ್ಷ್ಯಗಳು ಸೀಮಿತವಾಗಿವೆ.

ಇನ್ನೊಂದೆಡೆ, ತೂಕ ಇಳಿಸುವ ಪ್ರಯತ್ನದಲ್ಲಿರುವವರು ಸಿಪ್ಪೆಯೊಂದಿಗೆ ಬಾದಾಮಿ ಸೇವಿಸಬಹುದು. ಏಕೆಂದರೆ ಸಿಪ್ಪೆಯಲ್ಲಿರುವ ನಾರಿನಂಶ ಹೊಟ್ಟೆ ತುಂಬಿರುವ ಅನುಭವ ನೀಡಲು ನೆರವಾಗುತ್ತದೆ.

ಬಾದಾಮಿ ತಿನ್ನಲು ಸೂಕ್ತ ಸಮಯ

ಬೆಳಿಗ್ಗೆ: ರಾತ್ರಿ ನೆನೆಸಿದ ಬಾದಾಮಿಯನ್ನು ಬೆಳಿಗ್ಗೆ ಸೇವಿಸುವುದು ದೇಹಕ್ಕೆ ಶಕ್ತಿ ನೀಡುವುದರ ಜೊತೆಗೆ ದಿನದ ಆರಂಭವನ್ನು ಆರೋಗ್ಯಕರವಾಗಿಸುತ್ತದೆ.

ಸಂಜೆ: ಸಂಜೆ 4 ರಿಂದ 5 ಗಂಟೆಯ ವೇಳೆಗೆ ಜಂಕ್ ಫುಡ್ ಸೇವಿಸುವ ಬದಲು ಒಂದು ಮುಷ್ಟಿ ಬಾದಾಮಿ ತಿನ್ನುವುದರಿಂದ ಹಸಿವು ನಿಯಂತ್ರಣದಲ್ಲಿರಲು ಹಾಗೂ ಆರೋಗ್ಯಕರ ಆಹಾರ ಪದ್ಧತಿ ಪಾಲಿಸಲು ನೆರವಾಗುತ್ತದೆ.

ದಿನಕ್ಕೆ ಸುಮಾರು 15 ರಿಂದ 20 ಬಾದಾಮಿಗಳನ್ನು ಮಿತವಾಗಿ ಸೇವಿಸುವುದು ಹೃದಯ, ಮೆದುಳು, ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಸಹಕಾರಿಯಾಗಬಹುದು. ಆದರೆ ಸೇವಿಸಬೇಕಾದ ಪ್ರಮಾಣವು ವ್ಯಕ್ತಿಯ ವಯಸ್ಸು, ಆರೋಗ್ಯ ಸ್ಥಿತಿ, ದೈಹಿಕ ಚಟುವಟಿಕೆ ಮತ್ತು ಆಹಾರ ಪದ್ಧತಿಯನ್ನು ಅವಲಂಬಿಸಿರುತ್ತದೆ.

ಕೊಡಗಿನಲ್ಲಿ ಮಳೆ ಅಬ್ಬರ; ಕಾವೇರಿ ನದಿ ನೀರಿನ ಮಟ್ಟ ಏರಿಕೆ, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಪ್ರವಾಹದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕಳೆದ ಎರಡು ದಿನಗಳಿಂದ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ.

ನಿರಂತರ ಮಳೆಯಿಂದಾಗಿ ಜಿಲ್ಲೆಯ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿ-ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ.

ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯ ನೀರಿನ ಹರಿವು ಹೆಚ್ಚಾಗಿದೆ. ಭಾಗಮಂಡಲದ ಪ್ರಸಿದ್ಧ ತ್ರಿವೇಣಿ ಸಂಗಮದಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.

ಇತ್ತ ಹಾರಂಗಿ ಜಲಾನಯನ ಪ್ರದೇಶದಲ್ಲೂ ಮಳೆ ಚುರುಕುಗೊಂಡಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಸದ್ಯ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು ಬರುತ್ತಿದ್ದು, 3,700 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುತ್ತಿದೆ.

ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕೊಡಗಿನ ರೈತರಲ್ಲಿ ಸಂತಸ ಮೂಡಿದೆ. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

ಮುಂದಿನ ಕೆಲವು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನದಿ, ಹಳ್ಳ-ಕೊಳ್ಳಗಳ ಬಳಿ ತೆರಳದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

BREAKING: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ; ಚರ್ಚ್ ಎದುರು ವ್ಯಕ್ತಿ ಹತ್ಯೆ

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಮೃತಪಟ್ಟ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಈ ಘಟನೆ ನಡೆದಿದ್ದು, ಮುಂಜಾನೆ ಸುಮಾರು 3:30ರ ವೇಳೆಯಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ಮುಂಜಾನೆ ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಚರ್ಚ್ ರಸ್ತೆಗೆ ಬಂದಿದ್ದ ವೇಳೆ ಅಪರಿಚಿತ ವ್ಯಕ್ತಿ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.

ಗುಂಡಿನ ದಾಳಿಯಿಂದ ತೀವ್ರ ರಕ್ತಸ್ರಾವಗೊಂಡ ಐವನ್ ರಿಚರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ವೇಳೆ ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ನಗರ ಪೊಲೀಸರು ಹಾಗೂ ಸೊಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿದ್ದಾರೆ.

ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Murder Case: ಇಂದು ವಿನಯ್ ಕುಲಕರ್ಣಿಗೆ ಜಾಮೀನು ಸಿಗುತ್ತಾ? ಹೈಕೋರ್ಟ್ ಆದೇಶದತ್ತ ರಾಜ್ಯದ ಚಿತ್ತ!

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಹಾಗೂ ಶಿಕ್ಷೆ ಅಮಾನತು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯ ಆದೇಶವನ್ನು ರದ್ದುಪಡಿಸುವಂತೆ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೊತೆಗೆ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರ ಪೀಠ, ವಿನಯ್ ಕುಲಕರ್ಣಿ ಪರ ಹಾಗೂ ಸಿಬಿಐ ಪರ ವಕೀಲರ ವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು ಆದೇಶ ಪ್ರಕಟವಾಗಲಿದೆ.

ಜೀವಾವಧಿ ಶಿಕ್ಷೆ ವಿಧಿಸಿದ್ದ ನ್ಯಾಯಾಲಯ

2016ರಲ್ಲಿ ನಡೆದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಬಳಿಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಈ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಶಿಕ್ಷೆ ಮುಂದುವರಿದರೆ ಶಾಸಕ ಸ್ಥಾನಕ್ಕೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಮಹತ್ವ ಪಡೆದುಕೊಂಡಿದೆ.

ಏನಿದು ಯೋಗೀಶ್ ಗೌಡ ಕೊಲೆ ಪ್ರಕರಣ?

2016ರ ಜೂನ್‌ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 21 ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು.

ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು, ತನಿಖೆ ನಡೆಸಿದ ಸಿಬಿಐ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ವಿಚಾರಣೆ ಬಳಿಕ ಕೆಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದ್ದು, ಉಳಿದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿತ್ತು.

ಇದೀಗ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಕುರಿತು ಹೈಕೋರ್ಟ್ ನೀಡುವ ಆದೇಶದತ್ತ ರಾಜ್ಯದ ರಾಜಕೀಯ ವಲಯದ ಗಮನ ನೆಟ್ಟಿದೆ.

ಕಾವೇರಿ ಕಿಚ್ಚು ತೀವ್ರ; KRS ಮುತ್ತಿಗೆಗೆ ಬಿಜೆಪಿ ಸಜ್ಜು, ಮಂಡ್ಯದಲ್ಲಿ 1500 ಪೊಲೀಸರ ಭದ್ರತೆ!

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಇಂದು ಕೆಆರ್‌ಎಸ್‌ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಬಿಜೆಪಿ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಲಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಕೆಆರ್‌ಎಸ್‌ ಜಲಾಶಯದ ಬಳಿ ಪ್ರತಿಭಟನೆ ಆರಂಭವಾಗಲಿದ್ದು, ಬಳಿಕ ಅಣೆಕಟ್ಟಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಬಿಜೆಪಿ ನಾಯಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕೆಆರ್‌ಎಸ್‌ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಒಟ್ಟು 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮಾಹಿತಿ ಪ್ರಕಾರ, ಇಬ್ಬರು ಎಸ್‌ಪಿ, 9 ಡಿವೈಎಸ್‌ಪಿ, 27 ಇನ್ಸ್‌ಪೆಕ್ಟರ್‌ಗಳು, 45 ಪಿಎಸ್‌ಐ ಹಾಗೂ 78 ಎಎಸ್‌ಐ ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕೆಆರ್‌ಎಸ್‌ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೃಂದಾವನ ಉದ್ಯಾನವನಕ್ಕೂ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತ ಮಂಡ್ಯ ಜಿಲ್ಲಾದ್ಯಂತ ರೈತ ಸಂಘಟನೆಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಕೂಡ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ಮುಂದುವರಿಸಿವೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಕೌಟುಂಬಿಕ ಕಲಹಕ್ಕೆ ಎರಡು ಜೀವ ಬಲಿ; ಬಳ್ಳಾರಿಯಲ್ಲಿ ಪತ್ನಿ-ಮಗು ಕೊಂದು ಪತಿ ಪರಾರಿ!

0

ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಹೊನ್ನೂರಸ್ವಾಮಿ ಎಂಬಾತ ತನ್ನ ಪತ್ನಿ ರಾಜೇಶ್ವರಿ ಹಾಗೂ ಏಳು ತಿಂಗಳ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಆರೋಪಿ ಸುತ್ತಿಗೆಯಿಂದ ಹೊಡೆದು ಇಬ್ಬರನ್ನೂ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮಹಾರಾಷ್ಟ್ರದ ಭಿವಂಡಿಯಲ್ಲಿ ಭೀಕರ ದುರಂತ; 4 ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

0

ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಎನ್‌ಡಿಆರ್‌ಎಫ್‌ ತಂಡ, ಭಿವಂಡಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 8 ರಿಂದ 10 ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಟ್ಟಡ ಕುಸಿತದಿಂದ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್‌ ಹೆಚ್ಚಿಸಲಾಗಿದೆ.

ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗದಂತೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಸಾವುನೋವುಗಳ ಕುರಿತು ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಸೋಮವಾರ ಬಿಲ್ವಪತ್ರೆ ಕೀಳಬಹುದಾ? ಶಿವಪೂಜೆ ಮಾಡುವವರು ತಿಳಿಯಲೇಬೇಕಾದ ಮಹತ್ವದ ನಿಯಮಗಳು

0

ಶಿವಪೂಜೆಯಲ್ಲಿ ಬಿಲ್ವಪತ್ರೆ ಅಥವಾ ಬೇಲ್ಪತ್ರೆಗೆ ಅತ್ಯಂತ ವಿಶೇಷವಾದ ಸ್ಥಾನವಿದೆ.

ಶಿವಲಿಂಗಕ್ಕೆ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ ಭಗವಾನ್ ಶಿವನು ಪ್ರಸನ್ನನಾಗಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎಂಬ ಧಾರ್ಮಿಕ ನಂಬಿಕೆ ಇದೆ.

ಆದರೆ ಶಿವ ಮಹಾಪುರಾಣದ ಪ್ರಕಾರ ಶಿವಲಿಂಗಕ್ಕೆ ಬಿಲ್ವಪತ್ರೆ ಅರ್ಪಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ಹೇಳಲಾಗಿದೆ. ಸರಿಯಾದ ವಿಧಾನದ ಮೂಲಕ ಬಿಲ್ವಪತ್ರೆ ಅರ್ಪಿಸಿದರೆ ಪೂಜೆಯ ಸಂಪೂರ್ಣ ಫಲ ದೊರೆಯುತ್ತದೆ ಎಂಬ ನಂಬಿಕೆ ಇದೆ.

ಸೋಮವಾರ, ಚತುರ್ದಶಿಯಂದು ಬಿಲ್ವಪತ್ರೆ ಕೀಳಬಾರದು:

ಧಾರ್ಮಿಕ ನಂಬಿಕೆಗಳ ಪ್ರಕಾರ ಸೋಮವಾರ ಅಥವಾ ಚತುರ್ದಶಿ ತಿಥಿಯಂದು ಬಿಲ್ವಪತ್ರೆಯನ್ನು ಮರದಿಂದ ಕೀಳಬಾರದು. ಈ ದಿನಗಳಲ್ಲಿ ಬಿಲ್ವಪತ್ರೆ ಕೀಳುವುದು ಅಶುಭ ಎಂದು ಪರಿಗಣಿಸಲಾಗುತ್ತದೆ.

ಹೀಗಾಗಿ ಸೋಮವಾರ ಶಿವನಿಗೆ ಬಿಲ್ವಪತ್ರೆ ಅರ್ಪಿಸಬೇಕಿದ್ದರೆ ಹಿಂದಿನ ದಿನವೇ ಎಲೆಗಳನ್ನು ಕಿತ್ತು ಇಟ್ಟುಕೊಳ್ಳಬೇಕು. ಒಂದು ದಿನ ಮುಂಚಿತವಾಗಿ ಕಿತ್ತು ಇಟ್ಟ ಬಿಲ್ವಪತ್ರೆಯನ್ನೂ ಪೂಜೆಗೆ ಬಳಸಬಹುದು ಎಂದು ನಂಬಲಾಗಿದೆ.

ಯಾವ ಬಿಲ್ವಪತ್ರೆಯನ್ನು ಅರ್ಪಿಸಬೇಕು?

ಬಿಲ್ವಪತ್ರೆ ಕೀಳುವಾಗ ಮೂರು ಎಲೆಗಳು ಒಂದೇ ತೊಟ್ಟಿನಲ್ಲಿ ಇರುವ ಎಲೆಯನ್ನು ಆಯ್ಕೆ ಮಾಡಬೇಕು. ಈ ಮೂರು ಎಲೆಗಳು ಬ್ರಹ್ಮ, ವಿಷ್ಣು, ಮಹೇಶ್ವರರ ಸಂಕೇತ ಹಾಗೂ ಶಿವನ ತ್ರಿಶೂಲದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ.

ಹರಿದಿರುವ, ಕೀಟಗಳು ತಿಂದಿರುವ ಅಥವಾ ಅಪೂರ್ಣವಾಗಿರುವ ಬಿಲ್ವಪತ್ರೆಯನ್ನು ಶಿವಲಿಂಗಕ್ಕೆ ಅರ್ಪಿಸಬಾರದು ಎಂಬ ನಂಬಿಕೆ ಇದೆ. ಹಾಗೆಯೇ ಬಿಲ್ವಮರದ ಕೊಂಬೆಗಳನ್ನು ಮುರಿಯದೆ ಎಲೆಗಳನ್ನು ಮಾತ್ರ ಕೀಳಬೇಕು.

ಶಿವಲಿಂಗಕ್ಕೆ ಎಷ್ಟು ಬಿಲ್ವಪತ್ರೆ ಅರ್ಪಿಸಬೇಕು?

ಶಿವಪೂಜೆಯಲ್ಲಿ ಬಿಲ್ವಪತ್ರೆಗಳ ಸಂಖ್ಯೆಯೂ ಮಹತ್ವ ಹೊಂದಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಬೆಸ ಸಂಖ್ಯೆಯಲ್ಲಿ ಬಿಲ್ವಪತ್ರೆಗಳನ್ನು ಅರ್ಪಿಸುವುದು ಶುಭ.

3, 5, 7, 11, 21, 51 ಅಥವಾ 101 ಬಿಲ್ವಪತ್ರೆಗಳನ್ನು ಅರ್ಪಿಸುವುದು ವಿಶೇಷ ಎಂದು ಹೇಳಲಾಗಿದೆ. ಶಿವಲಿಂಗಕ್ಕೆ ಅರ್ಪಿಸುವ ಮೊದಲು ಬಿಲ್ವಪತ್ರೆಯನ್ನು ಶುದ್ಧ ನೀರಿನಿಂದ ತೊಳೆಯಬೇಕು.

ಬಿಲ್ವಪತ್ರೆ ಅರ್ಪಿಸುವ ಸರಿಯಾದ ವಿಧಾನ

ಶಿವಲಿಂಗಕ್ಕೆ ಬಿಲ್ವಪತ್ರೆ ಅರ್ಪಿಸುವಾಗ ಅದರ ಮೃದುವಾದ ಭಾಗವು ಶಿವಲಿಂಗಕ್ಕೆ ತಾಗುವಂತೆ ಕೆಳಮುಖವಾಗಿ ಇಡಬೇಕು. ಎಲೆಯ ಒರಟಾದ ಭಾಗವು ಮೇಲ್ಮುಖವಾಗಿರಬೇಕು ಎಂಬುದು ಧಾರ್ಮಿಕ ಪದ್ಧತಿ.

ಈ ರೀತಿಯಲ್ಲಿ ಭಕ್ತಿಯಿಂದ ಬಿಲ್ವಪತ್ರೆ ಅರ್ಪಿಸುವುದರಿಂದ ಶಿವನ ಅನುಗ್ರಹ ದೊರೆಯುತ್ತದೆ ಮತ್ತು ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂಬ ನಂಬಿಕೆ ಇದೆ.

ಆಷಾಢ 3ನೇ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ!

ಮೈಸೂರು: ಆಷಾಢ ಮಾಸದ 3ನೇ ಶುಕ್ರವಾರದ ಹಿನ್ನೆಲೆ ನಾಡದೇವತೆ ತಾಯಿ ಚಾಮುಂಡೇಶ್ವರಿ ಇಂದು ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.

ವಿಶೇಷ ಪೂಜೆ ಹಾಗೂ ಅಲಂಕಾರದ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಬೆಳಗಿನ ಬ್ರಾಹ್ಮಿ ಮುಹೂರ್ತದಿಂದಲೇ ಭಕ್ತರು ಚಾಮುಂಡಿ ಬೆಟ್ಟದತ್ತ ಆಗಮಿಸಿದರು. ಕೆಲವರು ವಾಹನಗಳ ಮೂಲಕ ಬಂದರೆ, ಇನ್ನೂ ಕೆಲ ಭಕ್ತರು ಮೆಟ್ಟಿಲುಗಳ ಮಾರ್ಗವಾಗಿ ತೆರಳಿ ತಾಯಿ ಚಾಮುಂಡಿಯ ದರ್ಶನ ಪಡೆದರು.

ಆಷಾಢದ 3ನೇ ಶುಕ್ರವಾರದ ಪ್ರಯುಕ್ತ ತಾಯಿ ಚಾಮುಂಡಿಗೆ ಲಕ್ಷ್ಮಿ ದೇವಿಯ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಒಳಾಂಗಣವನ್ನು ಚೆಂಡು ಹೂ, ಕಮಲ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಜೊತೆಗೆ ಕಿತ್ತಳೆ, ಮಾವು ಸೇರಿದಂತೆ ಹಲವು ಬಗೆಯ ಹಣ್ಣುಗಳನ್ನು ಅಲಂಕಾರಕ್ಕೆ ಬಳಸಲಾಗಿತ್ತು.

ದೇವಸ್ಥಾನದ ಆವರಣ ಕರ್ಪೂರ, ಗಂಧ ಹಾಗೂ ಧೂಪದ ಪರಿಮಳದಿಂದ ಆಧ್ಯಾತ್ಮಿಕ ವಾತಾವರಣದಿಂದ ಕೂಡಿತ್ತು. ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಆಷಾಢ ಮಾಸದ ಮೊದಲ ಶುಕ್ರವಾರ ತಾಯಿ ಚಾಮುಂಡಿಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಎರಡನೇ ಶುಕ್ರವಾರ ಲಕ್ಷ್ಮಿ ಅಲಂಕಾರ ನೆರವೇರಿಸಲಾಗಿತ್ತು. ಇದೀಗ ಮೂರನೇ ಶುಕ್ರವಾರವೂ ಲಕ್ಷ್ಮಿ ದೇವಿಯ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡಿದ್ದಾಳೆ.

ವಿಶೇಷ ದರ್ಶನಕ್ಕಾಗಿ 2 ಸಾವಿರ ರೂಪಾಯಿ ಮೌಲ್ಯದ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಅಭಿಷೇಕ, ಕುಂಕುಮಾರ್ಚನೆ ಹಾಗೂ ಮಹಾಮಂಗಳಾರತಿ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 5.30ರಿಂದ 10 ಗಂಟೆಯವರೆಗೆ ವಿವಿಐಪಿ ದರ್ಶನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಝೀರೋ ಟ್ರಾಫಿಕ್‌ನಲ್ಲೂ ಉಳಿಯಲಿಲ್ಲ 4 ತಿಂಗಳ ಕಂದಮ್ಮ; ಶ್ವಾಸಕೋಶ ಸೋಂಕಿಗೆ ಮಗು ಬಲಿ!

ದಾವಣಗೆರೆ: ಅಂಬುಲೆನ್ಸ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ತುರ್ತಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಯತ್ನ ಫಲಿಸದೆ, ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಹಸುಗೂಸು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಂಡಿ ಗ್ರಾಮದ ಹನುಮೇಶ್ ಹಾಗೂ ಪವಿತ್ರಾ ದಂಪತಿಯ ಹೆಣ್ಣು ಮಗು ಮೃತಪಟ್ಟಿದೆ. ಮೂರು ತಿಂಗಳ ಹಿಂದೆ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಪವಿತ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ಕೆಲವು ದಿನಗಳಿಂದ ಮಗು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿತ್ತು.

ಕಳೆದ ಒಂದು ವಾರದಿಂದ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದ್ದರು.

ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಂಬುಲೆನ್ಸ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ದಾರಿ ಮಧ್ಯೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಬಳಿ ಅಂಬುಲೆನ್ಸ್‌ನ ಟೈರ್ ಪಂಕ್ಚರ್ ಆಗಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಗುವಿನ ಜೀವ ಉಳಿಸಲು ಪೋಷಕರು, ಪೊಲೀಸರು ಹಾಗೂ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾದರು. ಹೊನ್ನಾಳಿ ಸಿಪಿಐ ಸುನೀಲ್ ಕುಮಾರ್ ಹಾಗೂ ಸ್ಥಳೀಯರ ಸಹಕಾರದಿಂದ ಅಂಬುಲೆನ್ಸ್ ಟೈರ್ ಬದಲಾಯಿಸಲಾಯಿತು. ಬಳಿಕ ಮಗುವಿನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ, ಪೊಲೀಸರ ಹಾಗೂ ವೈದ್ಯರ ಸತತ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಹಸುಗೂಸನ್ನು ಉಳಿಸಲು ನಡೆಸಿದ ಪ್ರಯತ್ನಗಳ ನಡುವೆಯೇ ನಡೆದ ಈ ಘಟನೆ ಪೋಷಕರಲ್ಲಿ ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.