Home Blog Page 150

ನಿಜವಾದ ಮತದಾರರ ಹಕ್ಕು ರಕ್ಷಣೆ ಸರ್ಕಾರದ ಹೊಣೆ; ಮುಖ್ಯಮಂತ್ರಿ ಸಿದ್ದರಾಮಯ್ಯ!

0

ಬೆಳಗಾವಿ:- ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿಜವಾದ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂಬುದೇ ಸರ್ಕಾರದ ಮುಖ್ಯ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಆದರೆ ಮತದಾರರ ಹೆಸರುಗಳು ಪಟ್ಟಿಯಿಂದ ತಪ್ಪಿಹೋಗದಂತೆ ಎಚ್ಚರಿಕೆಯಿಂದ ಪ್ರಕ್ರಿಯೆ ನಡೆಯಬೇಕು ಎಂದು ಬಿಎಲ್‌ಒಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದೇ ವೇಳೆ ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿಗಿನ ಅನುಚಿತ ವರ್ತನೆ ಆರೋಪದ ಕುರಿತು ಮಾತನಾಡಿ, ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇನ್ನೂ ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಟೀಕಿಸಿದ ಅವರು, ಮಹಾರಾಷ್ಟ್ರ–ಕರ್ನಾಟಕ ಗಡಿವಿವಾದದ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯದ ಕಾನೂನು ತಂಡ ಸಿದ್ಧವಾಗಿದೆ ಎಂದರು.

ಡಿಜಿಪಿ ರಾಸಲೀಲೆ ವಿವಾದ: ಸಿಎಂ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳಲಿ – ಜೆಡಿಎಸ್ ಆಗ್ರಹ

0

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಗೃಹ ಸಚಿವ ಪರಮೇಶ್ವರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ಆಪ್ತರಾಗಿರುವ ಡಿಜಿಪಿ ರಾಮಚಂದ್ರ ರಾವ್ ಅವರ ಅಸಭ್ಯ ವರ್ತನೆಯ ವಿಡಿಯೋ ಬಯಲಾಗಿರುವುದು ರಾಜ್ಯ ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದಿದೆ ಎಂದು ಜೆಡಿಎಸ್ ಆರೋಪಿಸಿದೆ.

ಪೊಲೀಸ್ ಸಮವಸ್ತ್ರದ ಗೌರವ ಮರೆತು ಕಚೇರಿಯಲ್ಲೇ ಮಹಿಳೆಯರೊಂದಿಗೆ ಇಂತಹ ಕೃತ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಇದರಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಮಾನ ಹರಾಜಾಗಿದೆ ಎಂದು ಟೀಕಿಸಿದೆ. ಜೊತೆಗೆ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನೆರವು ನೀಡಿದ ಆರೋಪವೂ ಡಿಜಿಪಿ ಮೇಲಿದ್ದುದನ್ನು ನೆನಪಿಸಿದ ಜೆಡಿಎಸ್, ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ಮತ್ತು ಅಸಮರ್ಥ ಗೃಹ ಸಚಿವರ ಕಾರಣದಿಂದ ರಾಜ್ಯದ ಹೆಮ್ಮೆಯ ಪೊಲೀಸ್ ವ್ಯವಸ್ಥೆಗೆ ಮರುಮೆಚ್ಚುಗೆ ಬಾರದಂತಾಗಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

0

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಕೇಳಿದಾಗ, “ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ.

ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾವು ದೆಹಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದಾಗ, “ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ” ಎಂದರು.

ಏಪ್ರಿಲ್ ತಿಂಗಳಲ್ಲಿ ಒಳ್ಳೆಯ ಸುದ್ದಿ ಬರಲಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನೋಡೋಣ, ಈಗ ಆ ಮಾತು ಯಾಕೆ?” ಎಂದು ತಿಳಿಸಿದರು. ರಾಜಕೀಯಕ್ಕಾಗಿ ದಾವೋಸ್ ಪ್ರವಾಸ ಕೈಬಿಟ್ಟಿರುವುದು ಸರಿಯಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಅವರ ಮಾತಿನಲ್ಲಿ ಅರ್ಥವಿದೆ. ತಪ್ಪು ಎಂದು ನಾನು ಹೇಳುವುದಿಲ್ಲ. ನಾಳೆ ಬೆಳಗ್ಗೆ ಈ ಪ್ರಶ್ನೆ ಕೇಳಿ” ಎಂದು ಉತ್ತರಿಸಿದರು.

ನಮ್ಮ ಸರ್ಕಾರದಿಂದ ಇಡೀ ದೇಶವೇ ಮೆಚ್ಚುವಂತಹ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0

ಬೆಳಗಾವಿ: ದೇಶಕ್ಕಾಗಿ ತನ್ನ ಪ್ರಾಣವನ್ನೆ ತ್ಯಾಗ ಮಾಡಿದ ‌ವೀರ ಸಂಗೊಳ್ಳಿ ರಾಯಣ್ಣನ ಪುಣ್ಯ ಭೂಮಿ ನಂದಗಡದಲ್ಲಿ ವೀರ ಭೂಮಿಯನ್ನು ಲೋಕಾರ್ಪಣೆ ಮಾಡುವ ಮೂಲಕ ಇಡೀ ದೇಶವೇ ಮೆಚ್ಚುವಂಥ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ (ವೀರಭೂಮಿ) ಲೋಕಾರ್ಪಣೆ, ಸಮಾಧಿ ಬಳಿಯ ಕೆರೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭ ಮತ್ತು ವಿವಿಧ ಕಾಮಗಾರಿಗಳ ಭೂಮಿ ಪೂಜೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸರ್ಕಾರಕ್ಕೆ ಮತ್ತು ನಮ್ಮ ಮುಖ್ಯಮಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇಂದು ಇಡೀ ರಾಷ್ಟ್ರ ಹೆಮ್ಮೆ ಪಡುವ ಕೆಲಸ ಆಗಿದೆ ಎಂದರು.

ಸಂಗೊಳ್ಳಿ ರಾಯಣ್ಣ ಅಂದರೆ ಧೈರ್ಯ, ಸಂಗೊಳ್ಳಿ ರಾಯಣ್ಣ ಎಂದರೆ ವಿಶ್ವಾಸ, ಅವರ ತ್ಯಾಗ, ದೇಶ ಭಕ್ತಿ ನಮ್ಮ ಕಣ್ಣ ಮುಂದೆ ಕಾಣುತ್ತದೆ.‌ ಸಂಗೊಳ್ಳಿ ರಾಯಣ್ಣನವರ ಹೆಸರು ಹೇಳಿದರೆ ಸಾಕು ಮೈ ರೋಮಾಂಚನ ಆಗುತ್ತೆ. ಇಂಥ ಕ್ರಾಂತಿ ವೀರ‌‌ನನ್ನು 33ನೇ ವಯಸ್ಸಿನಲ್ಲಿ ಗಲ್ಲಿಗೆ ಏರಿಸಲಾಯಿತು. ‌ಕೇವಲ‌ 33ನೇ ವಯಸ್ಸಿನಲ್ಲಿ ತನ್ನ ಕೊರಳನ್ನು ಒಡ್ಡಿದ್ದಾರೆ ಅಂದರೆ ಎಂತಹ ಕ್ರಾಂತಿಕಾರಿ ಇರಬೇಕು ಎಂದು ಸಚಿವರು ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಹೋರಾಟವನ್ನು ಸ್ಮರಿಸಿದರು.

ಆಧುನಿಕ ಕಾಲದಲ್ಲಿ ಸ್ವಾತಂತ್ರ್ಯ ತಂದು ಕೊಟ್ಟುವರನ್ನು ನಾವು ಬೆಳಕಿಗೆ ತರಬೇಕು. ಇಂದು ಚುನಾವಣೆ ಸಂದರ್ಭದಲ್ಲಿ ಜಾತಿ ಜಾತಿ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಾವು ಅಭಿವೃದ್ಧಿ ಕೆಲಸದ ಕಡೆ ಮಾತ್ರ ಗಮನ ಕೊಡುತ್ತೇವೆ ಎಂದ ಅವರು, ಎರಡು ತಿಂಗಳ ಗೃಹ ಲಕ್ಷ್ಮೀ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಆದಷ್ಟು ಬೇಗ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದರು.‌

ರಾಮಚಂದ್ರರಾವ್ ರಾಸಲೀಲೆ ವಿಡಿಯೋ: ಗೃಹ ಇಲಾಖೆಗೆ ವರದಿ ನೀಡಲು ಸಿಎಂ ಸೂಚನೆ

0

ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ರಾಸಲೀಲೆ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಗೆ ತ್ವರಿತ ವರದಿ ನೀಡಲು ಸೂಚನೆ ನೀಡಿದ್ದಾರೆ.

ವೈರಲ್ ವಿಡಿಯೋದಲ್ಲಿ, ರಾಮಚಂದ್ರರಾವ್ ತನ್ನ ಕಚೇರಿಯೊಳಗೆ ಮಹಿಳೆಯನ್ನು ತಪ್ಪಿಕೊಂಡಿರುವ ದೃಶ್ಯಗಳು ದೃಢವಾಗಿದೆ. ಈ ಹಿನ್ನೆಲೆ, ಪ್ರಾಥಮಿಕ ತನಿಖೆ ನಡೆಸಿ ವರದಿ ತಯಾರಿಸಲು ಗೃಹ ಇಲಾಖೆ ನಿರ್ದೇಶನ ಪಡೆದಿದೆ. ವರದಿ ಬಂದ ತಕ್ಷಣಲೇ ರಾಮಚಂದ್ರರಾವ್ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯತೆ ಇದೆ.

ಹಿಂದೆಯೂ ರಾಮಚಂದ್ರರಾವ್ ಹೆಸರು ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಸರ್ಕಾರದ ಗಮನ ಸೆಳೆದಿದ್ದು, ಈಗ ಈ ಹೊಸ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ʼನಲ್ಲಿಯೇ ಇದ್ದೇನೆ, ಮುಂದಿನ ಚುನಾವಣೆಯಲ್ಲೂ ಅದೇ ಪಕ್ಷದಿಂದ ಸ್ಪರ್ಧೆ: ಜಿ.ಟಿ. ದೇವೇಗೌಡ ಸ್ಪಷ್ಟನೆ

0

ಮೈಸೂರು: ನಾನು ಜೆಡಿಎಸ್‌ನಲ್ಲಿಯೇ ಇದ್ದೇನೆ, ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಟಿಕೆಟ್ ಬೇರೆಯವರಿಗೆ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಜೆಡಿಎಸ್ ಪಕ್ಷವನ್ನು ಕಟ್ಟಿದ ವಿಚಾರವನ್ನು ಹೆಚ್.ಡಿ. ದೇವೇಗೌಡ ಹಾಗೂ ಹೆಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿದೆ. ನಾನು ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ. ಮುಂದೆಯೂ ಜೆಡಿಎಸ್‌ನಲ್ಲಿಯೇ ಇರುತ್ತೇನೆ ಮತ್ತು ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾರೂ ಆತಂಕಪಡುವ ಅಗತ್ಯವಿಲ್ಲ. ನನಗೂ ಆತಂಕವಿಲ್ಲ, ಕಾರ್ಯಕರ್ತರಿಗೂ ಇಲ್ಲ ಎಂದು ಹೇಳಿದರು.

ನಾನು ಎಲ್ಲಿಯೂ ಹೋಗುವುದಿಲ್ಲ. ನನ್ನ ಚಾಮುಂಡೇಶ್ವರಿ ಕ್ಷೇತ್ರ ದೊಡ್ಡ ಕ್ಷೇತ್ರವಾಗಿದ್ದು, ಇಲ್ಲಿನ ಅಭಿವೃದ್ಧಿ ಕಾರ್ಯಗಳಿಗಾಗಿ ನಿರಂತರವಾಗಿ ಕ್ಷೇತ್ರದಲ್ಲೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಕೆಲವು ಕಾರ್ಯಗಳಿಂದ ನಾನು ಏಕೆ ದೂರವಾಗಿದ್ದೇನೆ, ನನಗೆ ಏಕೆ ನೋವಾಗಿದೆ ಎಂಬುದು ನಮ್ಮ ಪಕ್ಷದ ವರಿಷ್ಠರಿಗೆ ಗೊತ್ತಿದೆ. ಆದರೂ ನಾನು ಪಕ್ಷದಲ್ಲಿಯೇ ಇದ್ದೇನೆ. ಎಲ್ಲದಕ್ಕೂ ಕಾಲ ಬರುತ್ತದೆ, ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಜಿ.ಟಿ. ದೇವೇಗೌಡ ಹೇಳಿದರು.

ನಾನು ಯಾವುದೇ ನಾಯಕರಿಗೂ ದ್ರೋಹ ಮಾಡಿಲ್ಲ. ಐದು ಬಾರಿ ಶಾಸಕನಾಗಿದ್ದೇನೆ. ಇದರಲ್ಲಿ ಎರಡು ಬಾರಿ ಹುಣಸೂರು ಹಾಗೂ ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿದ್ದೇನೆ. ಈಗಲೂ ಪಕ್ಷದಿಂದ ದೂರ ಉಳಿದಿಲ್ಲ. ಯಾರನ್ನೂ ಟೀಕಿಸಿಲ್ಲ, ಕ್ಷೇತ್ರದ ಕೆಲಸವನ್ನೇ ಮುಂದುವರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವುದು ನಿಶ್ಚಿತ: ಸಚಿವ ಬೋಸರಾಜು

0

ಬೆಂಗಳೂರು: ನೂರಕ್ಕೆ ನೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ರಾಜ್ಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಸಚಿವ ಬೋಸರಾಜು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬೋಸರಾಜು, ಇದು ಮುಗಿದ ಅಧ್ಯಾಯ ಅಂತಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಪ್ರಸ್ತುತ ಯಾವುದೇ ನಾಯಕತ್ವ ಬದಲಾವಣೆಯ ಪರಿಸ್ಥಿತಿ ಇಲ್ಲ. ಮುಂದೆ ಅಂತಹ ಸಂದರ್ಭ ಬಂದರೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಬಿಜೆಪಿಯವರು ಬೆಳಿಗ್ಗೆಯಿಂದ ಸಂಜೆ ತನಕ ಸುಳ್ಳು ಆರೋಪ ಮಾಡುತ್ತಿದ್ದಾರೆ. ಲೋಪದೋಷಗಳಿದ್ದರೆ ಸ್ಪಷ್ಟವಾಗಿ ಹೇಳಲಿ. ಸುಮ್ಮನೆ ಬೊಬ್ಬೆ ಹೊಡೆಯುವುದರಲ್ಲಿ ಅರ್ಥವಿಲ್ಲ. ಹೊಸದಾಗಿ ಆಯ್ಕೆಯಾದ ಕೆಲ ಶಾಸಕರು ಉತ್ಸಾಹದಲ್ಲಿ ಹೇಳಿಕೆ ನೀಡಿರಬಹುದು. ಆದರೆ ನೂರಕ್ಕೆ ನೂರು ಪರ್ಸೆಂಟ್ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಬೋಸರಾಜು ಪುನರುಚ್ಚರಿಸಿದರು.

ಬಿಜೆಪಿಯವರು ಪಾದಯಾತ್ರೆ ಮಾಡುವುದಕ್ಕೂ ತಮ್ಮ ಹೈಕಮಾಂಡ್ ಅನುಮತಿ ಪಡೆಯಬೇಕು. ಪಾದಯಾತ್ರೆಗೆ ಮ್ಯಾಪ್ ಕೂಡ ತಯಾರಿಸಿದ್ದರೂ ಅದು ನಡೆಯಲಿಲ್ಲ. ನಮ್ಮ ಹೈಕಮಾಂಡ್ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದರು.

ಸಿಎಂ ಬದಲಾಗುತ್ತಾರೆ ಎಂದು ವಿಜಯೇಂದ್ರ ನೂರಾರು ಬಾರಿ ಹೇಳಿದ್ದಾರೆ. ಅದರಿಂದ ಏನಾದರೂ ಆಯಿತಾ? ವಿಜಯೇಂದ್ರ ಕೇವಲ ಬಂಡಲ್ ಹೊಡೆಯುತ್ತಿದ್ದಾರೆ. ಅವರನ್ನೊಬ್ಬ ‘ಇಮ್ಯಾಚ್ಯುರ್ಡ್ ಅಧ್ಯಕ್ಷ’ ಎಂದು ಕಿಡಿಕಾರಿದರು.

2,500 ಕೋಟಿ ರೂ. ಅಬಕಾರಿ ಲಂಚ ಹಗರಣ ಆರೋಪ: ಸಿಎಂ ಸಿದ್ದರಾಮಯ್ಯ ನೇರ ಹೊಣೆ – ಆರ್. ಅಶೋಕ್

0

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ 2,500 ಕೋಟಿ ರೂ. ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆಗಾರರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್, ಸರ್ಕಾರವು ಇಲಾಖೆಗೆ ಆದಾಯ ಗುರಿ ನಿಗದಿಪಡಿಸುವ ನೆಪದಲ್ಲಿ ಅಬಕಾರಿ ಪರವಾನಗಿಗಳನ್ನು ಹರಾಜು ಮಾಡುವ ವ್ಯವಸ್ಥೆ ಜಾರಿಗೆ ತಂದಿದೆ ಎಂದು ಆರೋಪಿಸಿದರು. ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು 25 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವುದು ಈ ಭ್ರಷ್ಟಾಚಾರದ ಸ್ಪಷ್ಟ ಉದಾಹರಣೆ ಎಂದರು.

ತಿಮ್ಮಾಪುರ ರಾಜೀನಾಮೆ ನೀಡದಿದ್ದರೆ, ಈ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಹೊಣೆಗಾರರನ್ನಾಗಿ ಪರಿಗಣಿಸಬೇಕಾಗುತ್ತದೆ ಎಂದು ಅಶೋಕ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷವು ವಿಕಸಿತ್ ಭಾರತ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಗೆ ವಿರೋಧ ವ್ಯಕ್ತಪಡಿಸಲು ಮಹಾತ್ಮ ಗಾಂಧಿಯವರ ಹೆಸರನ್ನು ಬಳಸಿಕೊಳ್ಳುತ್ತಿದೆ. ಆದರೆ ಮತ್ತೊಂದೆಡೆ ರಾಜ್ಯವನ್ನು ವ್ಯಸನದ ಗೂಡಾಗಿಸುವ ಮೂಲಕ ಗಾಂಧಿಯವರ ಆದರ್ಶಗಳಿಗೆ ದ್ರೋಹ ಮಾಡುತ್ತಿದೆ ಎಂದು ಅವರು ಟೀಕಿಸಿದರು.

CL-7 ಪರವಾನಗಿಗೆ 1.25 ಕೋಟಿ ರೂ., CL-2 ಪರವಾನಗಿಗೆ 1.5 ಕೋಟಿ ರೂ. ಲಂಚ ವಸೂಲಿ ಮಾಡಲಾಗಿದೆ. CL-9 ಪರವಾನಗಿಗಳ ಮೂಲಕ 92 ಕೋಟಿ ರೂ. ಹಾಗೂ ಮೈಕ್ರೋಬ್ರೂವರಿ ಪರವಾನಗಿಗೆ 2.5 ಕೋಟಿ ರೂ. ಲಂಚ ಪಡೆಯಲಾಗಿದೆ ಎಂದು ಆರೋಪಿಸಿದರು.

ಒಟ್ಟಿನಲ್ಲಿ 2,500 ಕೋಟಿ ರೂ. ಲಂಚ ಸಂಗ್ರಹವಾಗಿದ್ದು, ಈ ಹಣವನ್ನು ಅಸ್ಸಾಂ ಚುನಾವಣೆಗೆ ಕಳುಹಿಸಲಾಗುತ್ತಿದೆ. ಸಚಿವರಿಗೆ ಅಥವಾ ಅವರ ಮಗನಿಗೆ ಹಣ ನೀಡಬೇಕೆಂದು ಉಲ್ಲೇಖಿಸುವ ಆಡಿಯೋ ದಾಖಲೆ ಬಹಿರಂಗವಾಗಿದೆ ಎಂದು ಅಶೋಕ್ ಆರೋಪಿಸಿದರು. ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ ಎಂದು ಸ್ಪಷ್ಟಪಡಿಸಿದರು.

ಮೈಸೂರಿನ ಹೋಟೆಲ್ʼನಲ್ಲಿ RFO ಶವ ಪತ್ತೆ: ಸರ್ಕಾರಿ ಅಧಿಕಾರಿ ಸಾವಿನ ಸುತ್ತ ಅನುಮಾನದ ಹುತ್ತ!

0

ಮೈಸೂರು: ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪದ ಖಾಸಗಿ ಹೋಟೆಲ್ ಒಂದರಲ್ಲಿ ಆರ್ಎಫ್ (ರೇಂಜ್ ಫಾರೆಸ್ಟ್ ಆಫೀಸರ್) ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಟಿ. ನರಸೀಪುರದ ಆರ್ಎಫ್ ಕಾಂತರಾಜ್ ಚೌಹಾಣ್ ಮೃತರಾಗಿರುವುದು ದೃಢಪಟ್ಟಿದೆ.

ಮೈಸೂರು ನಗರದ ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪ, ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ನಲ್ಲಿ ಕಾಂತರಾಜ್ ಚೌಹಾಣ್ ಅವರ ಶವ ಪತ್ತೆಯಾಗಿದೆ. ಘಟನೆ ಅವರ ಸಾವಿನ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂತರಾಜ್ ಚೌಹಾಣ್ ಕೇವಲ 15 ದಿನಗಳ ಹಿಂದಷ್ಟೇ ಟಿ. ನರಸೀಪುರಕ್ಕೆ ವರ್ಗಾವಣೆಯಾಗಿದ್ದರು. ನಿನ್ನೆ ಮಧ್ಯಾಹ್ನ ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ತಮ್ಮ ಸ್ನೇಹಿತ ಮಲ್ಲನಗೌಡ ಪಾಟೀಲ್ ಅವರೊಂದಿಗೆ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೆ ಅವರು ಏಕಾಏಕಿ ಮೃತಪಟ್ಟಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಇನ್ನೂ ಆತಂಕಕಾರಿ ಅಂಶವೆಂದರೆ, ಕಾಂತರಾಜ್ ಚೌಹಾಣ್ ಅವರೊಂದಿಗೆ ಇದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ಸದ್ಯ ನಾಪತ್ತೆಯಾಗಿದ್ದಾರೆ. ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಮತ್ತಷ್ಟು ತಿರುವು ದೊರೆತಿದ್ದು, ಪೊಲೀಸರು ಆತನ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ..! ವಿಡಿಯೋ ವೈರಲ್

0

ಬೆಂಗಳೂರು: ರಾಜ್ಯದ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗೆ ಸಂಬಂಧಿಸಿದಂತೆ ವೈರಲ್ ಆಗಿರುವ ವಿಡಿಯೋ ಒಂದು, ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿ ಡಾ. ರಾಮಚಂದ್ರ ರಾವ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕಚೇರಿ ಆವರಣದಲ್ಲೇ ಮಹಿಳೆಯರೊಂದಿಗೆ ಅನುಚಿತ ವರ್ತನೆ ನಡೆದಿದೆ ಎಂದು ಆರೋಪಿಸಲಾಗುತ್ತಿದೆ. ಈ ಘಟನೆಗಳು ಕರ್ತವ್ಯದ ವೇಳೆಯಲ್ಲೇ ನಡೆದಿವೆ ಎಂಬುದು ಜನರಲ್ಲಿ ಹೆಚ್ಚು ಆಕ್ರೋಶ ಹುಟ್ಟಿಸಿದೆ.

ಪೊಲೀಸ್ ಇಲಾಖೆ ಎಂಬುದು ಶಿಸ್ತು, ನೈತಿಕತೆ ಮತ್ತು ಜನರ ನಂಬಿಕೆಯ ಮೇಲೆ ನಿಂತಿರುವ ವ್ಯವಸ್ಥೆ. ಇಂತಹ ಆರೋಪಗಳು ಇಲಾಖೆ ಗೌರವಕ್ಕೆ ಧಕ್ಕೆ ತರುತ್ತವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇನ್ನೊಂದು ಕಡೆ, ಈ ವಿಡಿಯೋದ ಸತ್ಯಾಸತ್ಯತೆ ಕುರಿತು ಅಧಿಕೃತ ತನಿಖೆಯ ಅಗತ್ಯವಾಗಿದೆ. ಯಾವುದೇ ಅಂತಿಮ ತೀರ್ಮಾನ ತನಿಖೆಯ ನಂತರ ಮಾತ್ರ ಹೊರಬರಬೇಕು ಎಂಬುದು ಕಾನೂನು ತತ್ವ.

ಈ ಪ್ರಕರಣ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ತನಿಖೆ, ಸ್ಪಷ್ಟನೆ ಮತ್ತು ಕ್ರಮಗಳೇ ಈ ಪ್ರಕರಣದ ದಿಕ್ಕು ನಿರ್ಧರಿಸಲಿವೆ.

error: Content is protected !!