Home Blog Page 154

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರ: ಸಚಿವ ತಿಮ್ಮಾಪುರ ವಜಾಗೊಳಿಸಬೇಕು – ಆರ್. ಅಶೋಕ್ ಆಗ್ರಹ

0

ಬೆಂಗಳೂರು: ಇದು ಸಿದ್ದರಾಮಯ್ಯನವರ ನಿದ್ದೆ ಸರ್ಕಾರ. ಸರ್ಕಾರ ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ತಕ್ಷಣವೇ ವಜಾಗೊಳಿಸಬೇಕು. ಇಲ್ಲವಾದರೆ, ಈ ಭ್ರಷ್ಟಾಚಾರದಲ್ಲಿ ಸಿಎಂಗೆ 85% ಕಮಿಷನ್ ಹೋಗುತ್ತಿದೆ ಎಂಬುದಕ್ಕೆ ಅರ್ಥವಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಗೆ ವರ್ಷದಿಂದ ವರ್ಷಕ್ಕೆ ಕಲೆಕ್ಷನ್ ಟಾರ್ಗೆಟ್ ನೀಡಲಾಗುತ್ತಿದ್ದು, ಅದರ ಪರಿಣಾಮವಾಗಿ ಸನ್ನದುಗಳು ಹರಾಜಿನ ಸರಕಾಗಿವೆ ಎಂದು ಹೇಳಿದರು. ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡ ತಿಮಿಂಗಿಲವೊಂದನ್ನು ಬಂಧಿಸಿದ್ದಾರೆ. ಒಂದೇ ಒಂದು ಸನ್ನದಿಗೆ 2.30 ಕೋಟಿ ರೂ. ಲಂಚ ಕೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಶೋಕ್ ಆರೋಪಿಸಿದರು.

ಅಬಕಾರಿ ಇಲಾಖೆ ಆರ್ಥಿಕ ಇಲಾಖೆಯಡಿ ಬರುತ್ತದೆ. ಈ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಹೇಳಿದರು. ನಕಲಿ ಗಾಂಧಿಗಳು ಇವರು. ಗಾಂಧಿ ಹೆಸರು ಹೇಳಲು ಇವರಿಗೆ ನೈತಿಕತೆ ಇಲ್ಲ. ಜನರನ್ನು ಕುಡಿಸಿ ಹಾಳು ಮಾಡುತ್ತಿದ್ದಾರೆ.

ಇನ್ನೊಂದು ಕಡೆ ಬೆಂಗಳೂರನ್ನು ನಶೆಯಲ್ಲಿ ಮುಳುಗಿಸಿದ್ದಾರೆ. ಅಬಕಾರಿ ಸಚಿವ ತಿಮ್ಮಾಪುರ ಒಂದು ಕ್ಷಣವೂ ಅಧಿಕಾರದಲ್ಲಿ ಇರಬಾರದು. ಅವರು ರಾಜೀನಾಮೆ ನೀಡಬೇಕು. ಇಲ್ಲವಾದರೆ, ಸಿಎಂ ಅವರನ್ನು ಸಂಪುಟದಿಂದ ತೆಗೆಯಬೇಕು ಎಂದು ಒತ್ತಾಯಿಸಿದರು.

ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ: CM ಸಿದ್ದರಾಮಯ್ಯ

0

ಮೈಸೂರು: ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿ ವಿಚಾರಸಂಕಿರಣ ಉದ್ಘಾಟನೆ ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ.ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬರಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು.

ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು

ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನ: ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ಕೊಡುಗೆ ಎಂದರು.

ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!

0

ಗದಗ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯ ಮೂರನೇ ದಿನಕ್ಕೆ ಕಾಲಿಟ್ಟಿದೆ. ಉತ್ಖನನ ಸ್ಥಳಕ್ಕೆ ಪುರಾತತ್ವ ಇಲಾಖೆ ಮೈಸೂರು, ಹಂಪಿ ಹಾಗೂ ಧಾರವಾಡ ವಲಯದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ನಾಗರ ಹೆಡೆ ಕೆತ್ತನೆಯ ಮತ್ತೊಂದು ಅಪರೂಪದ ಶಿಲ್ಪಕಲಾಕೃತಿ ಪತ್ತೆಯಾಗಿದೆ. ಹೌದು ನಿನ್ನೆ ಉತ್ಖನನ ವೇಳೆ ಪತ್ತೆಯಾದ ಶಿವಲಿಂಗ ಮತ್ತು ಪಾನಿ ಪೀಠದ ಶಿಲಾನ್ಯಾಸವನ್ನು ಅಧಿಕಾರಿಗಳು ವೀಕ್ಷಿಸಿದರು. ಇದೇ ವೇಳೆ ಉತ್ಖನನದ ಸಂದರ್ಭದಲ್ಲಿ ನಾಗರ ಹೆಡೆ ಕೆತ್ತನೆಯ ಮತ್ತೊಂದು ಅಪರೂಪದ ಶಿಲ್ಪಕಲಾಕೃತಿ ಪತ್ತೆಯಾಗಿದೆ.

ಈ ಕುರಿತು ಮಾತನಾಡಿದ ಪುರಾತತ್ವ ಇಲಾಖೆ ಮೈಸೂರು ವಲಯ ಆಯುಕ್ತ ಎ. ದೇವರಾಜು, ಉತ್ಖನನ ಕಾರ್ಯ ಪೂರ್ವನಿಗದಿತವಾಗಿದ್ದು, ಮೇ 15ರಂದು ಅನುಮತಿ ದೊರೆತಿತ್ತು. ಜೂನ್ 3ರಂದು ಮುಖ್ಯಮಂತ್ರಿ ಭೂಮಿ ಪೂಜೆ ನೆರವೇರಿಸಿದ್ದರು. ಮಳೆಗಾಲದ ಕಾರಣ ಆ ವೇಳೆ ಉತ್ಖನನ ಕಾರ್ಯ ಆರಂಭವಾಗಿರಲಿಲ್ಲ. ಕಳೆದ ಮೂರು ದಿನಗಳಿಂದ ಉತ್ಖನನ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿಸಿದರು.

ದೇವಾಲಯ ಹಾಗೂ ಮುಂದಿನ ಕೊಳದ ನಡುವೆ ಸಂಪರ್ಕವಿದ್ದ ಮಾಹಿತಿ ಲಭ್ಯವಾಗಿದೆ. ಇಲ್ಲಿ ಸಾಕಷ್ಟು ಚಿನ್ನ ಸಿಗಬಹುದು ಎಂದು ಕೆಲವರು ಹೇಳುತ್ತಿದ್ದರೂ, ಚಿನ್ನ ಅಥವಾ ಬೆಳ್ಳಿ ಅನ್ವೇಷಣೆ ನಮ್ಮ ಉದ್ದೇಶವಲ್ಲ. ಇತಿಹಾಸದ ಕುರುಹುಗಳ ಅನ್ವೇಷಣೆಯೇ ಮುಖ್ಯ ಎಂದು ಅವರು ಸ್ಪಷ್ಟಪಡಿಸಿದರು. ನಿಧಿ ಸಿಕ್ಕಿರುವುದು ಕೇವಲ ಆಕಸ್ಮಿಕವಾಗಿದ್ದು, ನಿಧಿ ಹುಡುಕಾಟ ನಡೆಯುತ್ತಿಲ್ಲ. ಇದು ಶಿಲ್ಪಕಲೆ ಮತ್ತು ಪುರಾತತ್ವ ಅವಶೇಷಗಳ ಹುಡುಕಾಟವಾಗಿದೆ ಎಂದು ಹೇಳಿದರು.

ಲಕ್ಕುಂಡಿಯಲ್ಲಿ ಹಿಂದೆ ಟಂಕಸಾಲೆ ಇತ್ತು ಎಂಬುದನ್ನು ಇತಿಹಾಸ ಹೇಳುತ್ತದೆ. ಅದಕ್ಕೆ ದಾಖಲೆ ರೂಪದಲ್ಲಿ ಮುತ್ತು, ರತ್ನ, ಹವಳ ಹಾಗೂ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಿಂದ ಇಲ್ಲಿ ಟಂಕಸಾಲೆ ಇತ್ತು ಎಂಬುದು ನಿರೂಪಣೆಯಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನೇನು ಪತ್ತೆಯಾಗಬಹುದು ಎಂಬ ಕುತೂಹಲವಿದೆ ಎಂದು ತಿಳಿಸಿದರು.

ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ತಾಂತ್ರಿಕ ಸಮಿತಿಯನ್ನು ರಚಿಸಿ ಪತ್ತೆಯಾದ ಅವಶೇಷಗಳ ಕಾಲಘಟ್ಟವನ್ನು ನಿರ್ಧರಿಸಲಾಗುತ್ತದೆ. ಜೊತೆಗೆ ಸಂಬಂಧಿತ ಕುಟುಂಬಗಳಿಗೆ ಪರಿಹಾರ ನಿಗದಿ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಯುಕ್ತ ಎ. ದೇವರಾಜು ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

0

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ ದುರ್ಘಟನೆ ಭಟ್ಕಳ ತಾಲ್ಲೂಕಿನ ವೆಂಕಟಾಪುರದ ಬಳಿ ನಡೆದಿದೆ.

ಮೃತರನ್ನು ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನುದ್ದೀನ್ ಶಿಪಾಯಿ ಅವರ ಪುತ್ರರಾದ ಬಿಲಾಲ್ (15) ಹಾಗೂ ಆಯಾನ್ (20) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಕಾರು ಚಾಲನೆ ಮಾಡುತ್ತಿದ್ದ ಆಯಾನ್ ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆಯಾನ್ ಸಾವನ್ನಪ್ಪಿದ್ದಾರೆ.ಶಿರಾಲಿಯಿಂದ ಭಟ್ಕಳದ ಕಡೆಗೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಕುರಿತು ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ

0

ಅಸ್ಸಾಂ: ಬಿಜೆಪಿ ದೇಶದ ಜನರ ಮೊದಲ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ನಕಾರಾತ್ಮಕ ರಾಜಕೀಯವನ್ನು ದೇಶದ ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದರು. ಮುಂಬೈನಲ್ಲಿ ಕಾಂಗ್ರೆಸ್ ಈಗ ನಾಲ್ಕನೇ ಅಥವಾ ಐದನೇ ಸ್ಥಾನಕ್ಕೆ ಕುಸಿದಿದೆ. ವರ್ಷಗಳ ಆಡಳಿತದ ನಂತರವೂ ಮಹಾರಾಷ್ಟ್ರವನ್ನು ಕಾಂಗ್ರೆಸ್ ಹಾಳು ಮಾಡಿದೆ. ಯಾವುದೇ ಅಭಿವೃದ್ಧಿ ದೃಷ್ಟಿಕೋನವಿಲ್ಲದ ಕಾಂಗ್ರೆಸ್ ಅಸ್ಸಾಂಗೆ ಅಥವಾ ಕಾಜಿರಂಗಕ್ಕೆ ಒಳಿತನ್ನು ತರಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಳೆದ ಒಂದೂವರೆ ವರ್ಷಗಳಲ್ಲಿ ಬಿಜೆಪಿಯ ಮೇಲಿನ ಜನರ ವಿಶ್ವಾಸ ನಿರಂತರವಾಗಿ ಹೆಚ್ಚಾಗಿದೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಚುನಾವಣೆಯಲ್ಲಿ, 20 ವರ್ಷಗಳ ನಂತರವೂ ಜನರು ಬಿಜೆಪಿಗೆ ದಾಖಲೆಯ ಮತಗಳನ್ನು ನೀಡಿದ್ದು, ಪಕ್ಷ ದಾಖಲೆಯ ಸ್ಥಾನಗಳನ್ನು ಗಳಿಸಿದೆ ಎಂದು ಮೋದಿ ಹೇಳಿದರು.

ಕಾಜಿರಂಗ ಅಸ್ಸಾಂನ ಆತ್ಮವಾಗಿದ್ದು, ಕೇವಲ ರಾಷ್ಟ್ರೀಯ ಉದ್ಯಾನವಲ್ಲ ಎಂದು ಪ್ರಧಾನಿ ಹೇಳಿದರು. ಇದು ಭಾರತದ ಜೀವವೈವಿಧ್ಯದ ಅಮೂಲ್ಯ ಸಂಪತ್ತಾಗಿದ್ದು, ಯುನೆಸ್ಕೋ ವಿಶ್ವ ಪರಂಪರಾ ತಾಣವಾಗಿ ಗುರುತಿಸಿದೆ. ಬೋಡೋ ಸಮುದಾಯದ ಯುವತಿಯರು ಬಾಗೂರುಂಬಾ ನೃತ್ಯದ ಮೂಲಕ ಹೊಸ ದಾಖಲೆ ನಿರ್ಮಿಸಿದ್ದು, 10,000ಕ್ಕೂ ಹೆಚ್ಚು ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದರು.

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

0

ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ. ಮೃತನನ್ನು ಶಶಿಕುಮಾರ್ ಶಿವಾನಂದ (19) ಎಂದು ಗುರುತಿಸಲಾಗಿದೆ.

ಆತ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಶಶಿಕುಮಾರ್ ಖಾಸಗಿ ಕಾಲೇಜಿನ ಕಟ್ಟಡದ ಮೇಲ್ಭಾಗದಲ್ಲಿ ಗಾಳಿಪಟ ಹಾರಿಸುತ್ತಿದ್ದನು. ಈ ವೇಳೆ ಗಾಳಿಪಟದ ದಾರ ತುಂಡಾಗಿ ಹಾರಿಹೋಗಿದ್ದು,

ಅದನ್ನು ಹಿಡಿಯಲು ಮುಂದಾದಾಗ ಆಯತಪ್ಪಿ ಕಟ್ಟಡ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿಲ್ಲ: CM ಸಿದ್ದರಾಮಯ್ಯ ವಾಗ್ದಾಳಿ

0

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧ ಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದರು.

ಶ್ರೀರಾಮುಲು, ಜನಾರ್ಧನ ರೆಡ್ಡಿ ಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದರು.

ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಚಿನ್ನಸ್ವಾಮಿ ಮೈದಾನದಲ್ಲಿ IPL ಆಟಕ್ಕೆ ಷರತ್ತುಬದ್ಧ ಅನುಮತಿ: ಸಚಿವ ಜಿ. ಪರಮೇಶ್ವರ್

0

ಬೆಂಗಳೂರು: ಜನರಿಗೆ ನಿರಾಶೆ ಉಂಟಾಗಬಾರದು ಎಂಬ ಉದ್ದೇಶದಿಂದ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುನ್ಹಾ ಸಮಿತಿ ಕೆಲವು ಶಿಫಾರಸ್ಸುಗಳನ್ನು ಮಂಡಿಸಿದ್ದರು. ಆ ಶಿಫಾರಸ್ಸಿನ ಪ್ರಕಾರ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚಿಸಿ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಲಾಗಿತ್ತು. “ನಾವು ಶಿಫಾರಸ್ಸುಗಳನ್ನು ಕೆಎಸ್ಸಿಎಗೆ ಕಳಿಸಿ ಸರಿಪಡಿಸಲು ಸೂಚಿಸಿದ್ದೇವೆ.

ಬಳಿಕ ಕೆಎಸ್ಸಿಎ ಮನವಿ ಮಾಡಿ, ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿತು. ಮಾರ್ಚ್‌ನಲ್ಲಿ ಐಪಿಎಲ್ ಆರಂಭವಾಗುತ್ತದೆ. ಅದಕ್ಕಾಗಿ ಶಾರ್ಟ್ಟೈಮ್ ಕಂಡೀಷನ್ ಪೂರೈಸಬೇಕು, ಅದಕ್ಕೆ ಅನುಮತಿ ನೀಡಲಾಗಿದೆ” ಎಂದರು.

“ಕೆಎಸ್ಸಿಎ ಎಲ್ಲವನ್ನೂ ಸರಿಪಡಿಸಲಿದೆ. ನಾವು ಮತ್ತೆ ಪರಿಶೀಲನೆ ನಡೆಸಿ, ಎಲ್ಲಾ ಸರಿಯಾದರೆ ಅನುಮತಿ ನೀಡಲಾಗುತ್ತದೆ. ಜನರಿಗೆ ನಿರಾಶೆ ಮಾಡಬಾರದು” ಎಂದರು. ಅವರ ಹೇಳಿಕೆಯಲ್ಲಿ ಗೇಟ್ ಮುಕ್ತಾಯಗೊಂಡಿದ್ದು, ದಾರಿಯಲ್ಲಿ ಪರಿಶೀಲನೆ ನಡೆಸಿದುದರ ಬಗ್ಗೆ ವಿವರ ನೀಡಲಾಗಿದೆ.

ರಾಜೀವ್ ಗೌಡ ಅರೆಸ್ಟ್ ಮತ್ತು ರಾಜ್ಯದ ಡ್ರಗ್ಸ್ ಸಮಸ್ಯೆಗಳ ಕುರಿತು ಸಹ ಅವರು ಮಾತನಾಡಿ, ಸಿಎಂ ಸೂಚನೆಗಳ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳಲು ತಂಡ ರಚಿಸಲಾಗಿದೆ. “ಸಿಎಂ ಎಚ್ಚರಿಕೆಯಿಂದ ನೋಡುತ್ತಾರೆ, ಸರ್ಕಾರ ಮತ್ತು ಪೊಲೀಸರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಧಾನವಾಗಿ ಇರಲು ಇದು ಅಗತ್ಯ” ಎಂದರು.

ಮರಣಪೂರ್ವ ಹೇಳಿಕೆ ವಿಶ್ವಾಸಾರ್ಹವಾಗಿರಬೇಕು: ಜೀವಾವಧಿ ಶಿಕ್ಷೆ ರದ್ದುಗೊಳಿಸಿ ಆರೋಪಿಗೆ ಖುಲಾಸೆ – ಹೈಕೋರ್ಟ್

0

ಬೆಂಗಳೂರು: ಮರಣಪೂರ್ವ ಹೇಳಿಕೆಯು ಮೃತರು ಹೇಳುವ ನಿಖರ ಪದಗಳೊಂದಿಗೆ ಪ್ರಶ್ನೋತ್ತರ ರೂಪದಲ್ಲಿದ್ದು, ಸಂಕ್ಷಿಪ್ತ ಹಾಗೂ ಸಂಪೂರ್ಣ ವಿಶ್ವಾಸಾರ್ಹವಾಗಿರಬೇಕು ಎಂದು ಮಹತ್ವದ ಮಾರ್ಗಸೂಚಿ ನೀಡಿರುವ ಹೈಕೋರ್ಟ್, ಮಹಿಳೆಯನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿಯ ಪೋಷಕರು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಸೋಮಶೇಖರ್ ಎಂಬ ಆರೋಪಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ. ಅವರಿದ್ದ ವಿಭಾಗೀಯ ಪೀಠ, ಮರಣಪೂರ್ವ ಹೇಳಿಕೆಯ ಸ್ವರೂಪ ಮತ್ತು ದಾಖಲಿಸುವ ವಿಧಾನದಲ್ಲಿ ಗಂಭೀರ ಲೋಪಗಳಿವೆ ಎಂದು ಅಭಿಪ್ರಾಯಪಟ್ಟಿತು.

ಮರಣಪೂರ್ವ ಹೇಳಿಕೆ ಪ್ರಶ್ನೋತ್ತರ ರೂಪದಲ್ಲಿದ್ದು, ಸಂತ್ರಸ್ತರು ಹೇಳಿರುವ ಪದಗಳು ನಿಖರವಾಗಿರಬೇಕು. ಜೊತೆಗೆ ಅದು ಚಿಕ್ಕದಾಗಿ, ಸಂಕ್ಷಿಪ್ತವಾಗಿ ಮತ್ತು ವಿಷಯಕ್ಕೆ ಸೀಮಿತವಾಗಿರಬೇಕು. ಆದರೆ ಈ ಪ್ರಕರಣದಲ್ಲಿ ಮರಣಪೂರ್ವ ಹೇಳಿಕೆ ಎರಡು ಪುಟಗಳಷ್ಟು ವಿಸ್ತಾರವಾಗಿದ್ದು, ಅದರಲ್ಲಿನ ಅಂಶಗಳು ಸಂಪೂರ್ಣ ವಿಶ್ವಾಸಾರ್ಹವಾಗಿಲ್ಲವೆಂದು ಪೀಠ ತಿಳಿಸಿದೆ.

ಇನ್ನೂ, ಮೃತರ ಮುಖ, ತುಟಿ ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ವ್ಯಾಪಕ ಸುಟ್ಟ ಗಾಯಗಳಾಗಿದ್ದ ಸಂದರ್ಭದಲ್ಲಿ ಮರಣಪೂರ್ವ ಹೇಳಿಕೆ ದಾಖಲಿಸಲಾಗಿದೆ. ಇಂತಹ ಸ್ಥಿತಿಯಲ್ಲಿ ಹೇಳಿಕೆ ನೀಡಲು ಮೃತರ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಇತ್ತೇ ಎಂಬುದರ ಬಗ್ಗೆ ಗಂಭೀರ ಸಂದೇಹವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮರಣಪೂರ್ವ ಹೇಳಿಕೆಯನ್ನು ವೈದ್ಯರು ಮತ್ತು ತನಿಖಾಧಿಕಾರಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ದಾಖಲಿಸಿಕೊಂಡಿದ್ದು, ಹೇಳಿಕೆ ದಾಖಲಿಸಿದ ವಿಧಾನವೂ ಅನುಮಾನಾಸ್ಪದವಾಗಿದೆ ಎಂದು ನ್ಯಾಯಪೀಠ ಸೂಚಿಸಿದೆ.

ಮರಣಪೂರ್ವ ಹೇಳಿಕೆಯೊಂದರ ಆಧಾರ ಮಾತ್ರದಿಂದ ಆರೋಪಿಗೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಉಲ್ಲೇಖಿಸಿದ ಪೀಠ, ಈ ಪ್ರಕರಣದಲ್ಲಿ ಮರಣಪೂರ್ವ ಹೇಳಿಕೆ ನಿಯಮಬದ್ಧವಾಗಿ ದಾಖಲಿಸಿಕೊಳ್ಳಲಾಗಿಲ್ಲ. ಹೀಗಾಗಿ ಈ ಸಾಕ್ಷ್ಯವನ್ನು ತಿರಸ್ಕರಿಸಿ, ಆರೋಪಿಯನ್ನು ಖುಲಾಸೆಗೊಳಿಸಲಾಗುತ್ತಿದೆ ಎಂದು ಆದೇಶಿಸಿದೆ.

ಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

0

ದಾವಣಗೆರೆ: ಜನರು ತಮ್ಮ ಮೇಲಿನ ಅಭಿಮಾನದಿಂದ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಾರೆ. ಆದರೆ ಅದು ಅವಧಿಗೆ ಸಂಬಂಧಪಟ್ಟದ್ದಲ್ಲ, ಮುಂದಿನ 2028 ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರುಮುಂದಿನ ಸಿಎಂ ಸತೀಶ್ ಜಾರಕಿಹೊಳಿಎಂದು ಘೋಷಣೆ ಕೂಗುವುದು ನಮ್ಮ ಮೇಲಿನ ಅಭಿಮಾನದ ಪ್ರತಿಫಲ. ಆದರೆ ಈಗಲೇ ನಾನು ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ಅವಧಿಯಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದು ಪಕ್ಷದ ನಿರ್ಧಾರ. ನಾವು ಮುಂದಿನ ಚುನಾವಣೆಗೆ ಸಿಎಂ ಸ್ಥಾನದ ಆಕಾಂಕ್ಷಿಗಳು ಮಾತ್ರ ಎಂದು ಹೇಳಿದರು.

ಪ್ರಸ್ತುತ ಅಸ್ಸಾಂ ವಿಧಾನಸಭಾ ಚುನಾವಣೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗಳು ಎದುರಿವೆ. ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆ ನಡೆಸುವುದು ಸೂಕ್ತವಲ್ಲ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಸಾಕಷ್ಟು ಜವಾಬ್ದಾರಿಗಳಿದ್ದು,

ಕಾರಣಕ್ಕಾಗಿ ಅವರು ದೆಹಲಿಗೆ ಆಗಾಗ ಭೇಟಿ ನೀಡುತ್ತಾರೆ ಎಂದು ತಿಳಿಸಿದರು.ಯಾವುದೇ ವಿಷಯದಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ವೇ ಆಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

error: Content is protected !!