Home Blog Page 160

‘ಗೌರನಾಯ್ಡು’ ಅಸಲಿ ರೋಲ್ ಏನು? ಒಂದೇ ನಗುವಿನಿಂದ ‘ಪೆದ್ದಿ’ ರಹಸ್ಯ ಮತ್ತಷ್ಟು ಗಾಢ ಮಾಡಿದ ಶಿವಣ್ಣ!

‘ಪೆದ್ದಿ’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ನಿರ್ವಹಿಸಿರುವ ‘ಗೌರನಾಯ್ಡು’ ಪಾತ್ರವೇ ಈಗ ಚಿತ್ರದ ಅತಿದೊಡ್ಡ ಸಸ್ಪೆನ್ಸ್ ಆಗಿ ಪರಿಣಮಿಸಿದೆ. ಟ್ರೈಲರ್‌ನಲ್ಲಿ ಪಾತ್ರದ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ನೀಡದ ಚಿತ್ರತಂಡ, ಕುತೂಹಲವನ್ನು ಉದ್ದೇಶಪೂರ್ವಕವಾಗಿ ಜೀವಂತವಾಗಿಟ್ಟಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಶಿವಣ್ಣ, ಈ ಪಾತ್ರ ತಮ್ಮ ವೃತ್ತಿಜೀವನದಲ್ಲೇ ವಿಭಿನ್ನ ಅನುಭವ ನೀಡಿದ ಪಾತ್ರಗಳಲ್ಲಿ ಒಂದು ಎಂದು ಹೇಳಿದ್ದಾರೆ. ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಕಥೆ ಬರೆಯುವ ಹಂತದಲ್ಲೇ ತಮ್ಮನ್ನು ಗಮನದಲ್ಲಿಟ್ಟುಕೊಂಡು ಪಾತ್ರ ರೂಪಿಸಿದ್ದಾಗಿ ಅವರು ತಿಳಿಸಿದ್ದಾರೆ.

ಇದೇ ವೇಳೆ, ಟ್ರೈಲರ್‌ನಲ್ಲಿ ಪಾತ್ರದ ನೈಜ ಸ್ವರೂಪವನ್ನು ಮುಚ್ಚಿಟ್ಟಿರುವ ಕುರಿತು ಪ್ರಶ್ನೆ ಎದುರಾದಾಗ ಶಿವಣ್ಣ ನೀಡಿದ ನಗುವಿನ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಹೊಸ ಕುತೂಹಲ ಹುಟ್ಟುಹಾಕಿದೆ. ಪಾತ್ರ ಹೀರೋ ಪರವೇ? ವಿರೋಧಿಯೇ? ಅಥವಾ ಎರಡರ ಮಧ್ಯೆ ಸಾಗುವ ಗ್ರೇ ಶೇಡ್ ಪಾತ್ರವೇ? ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ.

ಜೂನ್ 4ರಂದು ಬಿಡುಗಡೆಯಾಗಲಿರುವ ‘ಪೆದ್ದಿ’ ಸಿನಿಮಾದಲ್ಲಿ ರಾಮ್ ಚರಣ್, ಜಾನ್ವಿ ಕಪೂರ್, ಜಗಪತಿ ಬಾಬು, ದಿವ್ಯೇಂದು ಶರ್ಮಾ ಮತ್ತು ಬೊಮನ್ ಇರಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಶಿವಣ್ಣ ಅವರ ‘ಗೌರನಾಯ್ಡು’ ಪಾತ್ರವೇ ಪ್ರೇಕ್ಷಕರಿಗೆ ದೊಡ್ಡ ಸರ್ಪ್ರೈಸ್ ನೀಡುವ ಸಾಧ್ಯತೆ ಇದೆ.

GT-RR ನಡುವೆ ಇಂದು ಮಾಡು ಇಲ್ಲವೇ ಮಡಿ ಕದನ: ಗೆದ್ದ ತಂಡಕ್ಕೆ RCB ವಿರುದ್ಧ ಫೈನಲ್ ಟಿಕೆಟ್

ಚಂಡೀಗಢ: ಐಪಿಎಲ್ 2026ರ ಫೈನಲ್ ಪ್ರವೇಶಕ್ಕಾಗಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 31ರಂದು ನಡೆಯಲಿರುವ ಫೈನಲ್‌ನಲ್ಲಿ ಆರ್ಸಿಬಿ ವಿರುದ್ಧ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.

ನ್ಯೂ ಚಂಡೀಗಢದ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳ ಪಾಲಿಗೆ ‘ಮಾಡು ಇಲ್ಲವೇ ಮಡಿ’ ಹೋರಾಟವಾಗಿದೆ. ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದ್ದು, ಗೆದ್ದ ತಂಡ ಮಾತ್ರ ಫೈನಲ್‌ಗೆ ಹೆಜ್ಜೆ ಇಡಲಿದೆ.

ಟೂರ್ನಿಯ ಆರಂಭದಲ್ಲಿ ಏರುಪೇರು ಕಂಡಿದ್ದ ಗುಜರಾತ್ ಟೈಟನ್ಸ್, ನಂತರದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ 18 ಅಂಕಗಳೊಂದಿಗೆ ಪ್ಲೇ-ಆಫ್ ಪ್ರವೇಶಿಸಿತ್ತು. ಮತ್ತೊಂದೆಡೆ, ಆರಂಭಿಕ ನಾಲ್ಕು ಪಂದ್ಯಗಳನ್ನು ಗೆದ್ದು ಅಬ್ಬರಿಸಿದ್ದ ರಾಜಸ್ಥಾನ್ ರಾಯಲ್ಸ್ ಮಧ್ಯದಲ್ಲಿ ಫಾರ್ಮ್ ಕಳೆದುಕೊಂಡರೂ, ಮಹತ್ವದ ಪಂದ್ಯಗಳಲ್ಲಿ ಮತ್ತೆ ಲಯ ಕಂಡುಕೊಂಡಿದೆ.

ಈ ಸೀಸನ್‌ನಲ್ಲಿ ಉಭಯ ತಂಡಗಳು ಈಗಾಗಲೇ ಎರಡು ಬಾರಿ ಮುಖಾಮುಖಿಯಾಗಿವೆ. ಏಪ್ರಿಲ್ 4ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 6 ರನ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು. ಬಳಿಕ ಮೇ 9ರಂದು ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 77 ರನ್‌ಗಳ ಭರ್ಜರಿ ಗೆಲುವಿನ ಮೂಲಕ ಸೇಡು ತೀರಿಸಿಕೊಂಡಿತ್ತು.

ಗುಜರಾತ್‌ಗೆ ಬ್ಯಾಟಿಂಗ್-ಬೌಲಿಂಗ್ ಬಲ:

ಗುಜರಾತ್ ಟೈಟನ್ಸ್ ತಂಡದ ಪ್ರಮುಖ ಶಕ್ತಿ ಆರಂಭಿಕ ಜೋಡಿಯಾದ ನಾಯಕ ಶುಭ್ಮನ್ ಗಿಲ್ ಹಾಗೂ ಸಾಯಿ ಸುದರ್ಶನ್. ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್, ಜೇಸನ್ ಹೋಲ್ಡರ್ ಹಾಗೂ ರಾಹುಲ್ ತೇವಾಟಿಯಾ ತಂಡಕ್ಕೆ ಬಲ ತುಂಬಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಕಗಿಸೋ ರಬಾಡಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ರಶೀದ್ ಖಾನ್ ಅವರ ಅನುಭವ ರಾಜಸ್ಥಾನ್ ಬ್ಯಾಟರ್‌ಗಳಿಗೆ ಸವಾಲಾಗಲಿದೆ.

ರಾಜಸ್ಥಾನ್‌ಗೆ ವೈಭವ್ ಸೂರ್ಯವಂಶಿ ಆಸರೆ:

ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಈ ಸೀಸನ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 29 ಎಸೆತಗಳಲ್ಲಿ 97 ರನ್ ಸಿಡಿಸಿ ಮಿಂಚಿದ್ದರು. ಯಶಸ್ವಿ ಜೈಸ್ವಾಲ್ ಹಾಗೂ ಧ್ರುವ್ ಜುರೆಲ್ ಅವರೂ ಉತ್ತಮ ಬೆಂಬಲ ನೀಡುತ್ತಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಜೋಫ್ರಾ ಆರ್ಚರ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಈಗಾಗಲೇ ಈ ಸೀಸನ್‌ನಲ್ಲಿ 21 ವಿಕೆಟ್ ಪಡೆದು ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆರ್ಚರ್, ಪವರ್‌ಪ್ಲೇನಲ್ಲೇ ಗುಜರಾತ್ ಆರಂಭಿಕರನ್ನು ಕಟ್ಟಿಹಾಕುವ ಜವಾಬ್ದಾರಿ ಹೊತ್ತಿದ್ದಾರೆ.

ಮುಲ್ಲಾನ್ಪುರ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲಕರವಾಗಿದ್ದು, ಮತ್ತೊಮ್ಮೆ ರನ್ ಮಳೆಯ ನಿರೀಕ್ಷೆ ಇದೆ. ಇತ್ತೀಚೆಗೆ ಇದೇ ಮೈದಾನದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 243 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಪ್ರತಿಯಾಗಿ ಸನ್‌ರೈಸರ್ಸ್ ಹೈದರಾಬಾದ್ 196 ರನ್‌ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಹೈ ಸ್ಕೋರಿಂಗ್ ಕದನ ನಿರೀಕ್ಷಿಸಲಾಗಿದೆ.

ಸಂಭವನೀಯ ತಂಡಗಳು:

ಗುಜರಾತ್ ಟೈಟನ್ಸ್:
ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ, ಕಗಿಸೋ ರಬಾಡಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಪ್ಯಾಕ್ಟ್ ಸಬ್:
ರಾಹುಲ್ ತೇವಾಟಿಯಾ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ, ಸಾಯಿ ಕಿಶೋರ್.

ರಾಜಸ್ಥಾನ್ ರಾಯಲ್ಸ್:
ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ದಸುನ್ ಶನಕ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಯಶ್ ರಾಜ್ ಪುಂಜಾ, ಬ್ರಿಜೇಶ್ ಶರ್ಮಾ.

ಇಂಪ್ಯಾಕ್ಟ್ ಸಬ್:
ಶುಭಂ ದುಬೆ, ಸುಶಾಂತ್ ಮಿಶ್ರಾ, ಅಮನ್ ರಾವ್ ಪೆರಾಲ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.

ರೌಡಿ ಶೀಟ್ ಬಳಿಕವೂ ನಿಲ್ಲದ ಗಾಂಜಾ ದಂಧೆ: ಮಾರುತಿ ಕಾಳೆಗೆ ಈಗ PIT NDPS ಅಸ್ತ್ರ!

ಗದಗ: ಗದಗ-ಬೆಟಗೇರಿ ಭಾಗದಲ್ಲಿ ಹಲವಾರು ವರ್ಷಗಳಿಂದ ಗಾಂಜಾ ಮಾರಾಟ ಜಾಲ ಹಬ್ಬಿಸಿ ಯುವಕರನ್ನು ಮಾದಕ ವ್ಯಸನದತ್ತ ತಳ್ಳುತ್ತಿದ್ದಾನೆ ಎನ್ನಲಾದ ಕುಖ್ಯಾತ ಆರೋಪಿಯ ವಿರುದ್ಧ ಇದೀಗ ಪೊಲೀಸ್ ಇಲಾಖೆ ಕಠಿಣ ಹೆಜ್ಜೆ ಇಟ್ಟಿದೆ. ಬೆಟಗೇರಿ ಗಣೇಶನಗರ ನಿವಾಸಿ ಮಾರುತಿ @ ಮಾರಯ್ಯ ಶೇಖಪ್ಪ ಕಾಳೆ @ ಹರಣಶಿಕಾರಿ ವಿರುದ್ಧ PIT NDPS ಕಾಯ್ದೆಯಡಿ ಕ್ರಮ ಕೈಗೊಳ್ಳಲು ಬೆಟಗೇರಿ ಪೊಲೀಸರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಪೊಲೀಸ್ ದಾಖಲೆಗಳ ಪ್ರಕಾರ, ಮಾರುತಿ ಕಾಳೆ ಹಲವು ವರ್ಷಗಳಿಂದ ಗಾಂಜಾ ಸಾಗಾಟ ಮತ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಯುವಕರು, ಬಡವರು ಮತ್ತು ಸಾಮಾನ್ಯ ಜನರನ್ನು ಗುರಿಯಾಗಿಸಿಕೊಂಡು ಅಕ್ರಮ ಮಾದಕ ವಸ್ತುಗಳ ಜಾಲ ಹಬ್ಬಿಸಿದ್ದಾನೆ ಎಂಬ ಗಂಭೀರ ಆರೋಪ ಈತನ ಮೇಲಿದೆ. ಈತನ ವಿರುದ್ಧ ಈಗಾಗಲೇ ಬೆಟಗೇರಿ ಹಾಗೂ ಗದಗ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿವೆ.

2017ರಲ್ಲಿ ಮೊದಲ ಬಾರಿಗೆ 160 ಗ್ರಾಂ ಗಾಂಜಾ ಜಪ್ತಿ ಪ್ರಕರಣ ದಾಖಲಾಗಿದ್ದರೆ, ಬಳಿಕ 2019, 2021, 2023, 2025 ಹಾಗೂ 2026ರಲ್ಲೂ ಗಾಂಜಾ ಮಾರಾಟ ಮತ್ತು ಸಾಗಾಟ ಪ್ರಕರಣಗಳಲ್ಲಿ ಈತನ ಹೆಸರು ಕೇಳಿಬಂದಿದೆ. ಇತ್ತೀಚಿನ ಪ್ರಕರಣದಲ್ಲಿ 1051 ಗ್ರಾಂ ಹಾಗೂ 52 ಗ್ರಾಂ ಗಾಂಜಾ ಜಪ್ತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಹೇಳುವಂತೆ, ಮಾರುತಿ ಕಾಳೆ ವಿರುದ್ಧ ರೌಡಿ ಶೀಟ್ ತೆರೆಯಲಾಗಿದ್ದರೂ ಆತ ತನ್ನ ಅಕ್ರಮ ಚಟುವಟಿಕೆ ನಿಲ್ಲಿಸಿರಲಿಲ್ಲ. ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಿರಂತರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದ ಹಿನ್ನೆಲೆ ಸಾಮಾನ್ಯ ಕಾನೂನು ಕ್ರಮಗಳು ಪರಿಣಾಮಕಾರಿಯಾಗುತ್ತಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ “Prevention of Illicit Traffic in Narcotic Drugs and Psychotropic Substances Act-1988 (PIT NDPS)” ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ಪೊಲೀಸ್ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಈ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಗದಗ ಉಪವಿಭಾಗದ ಡಿವೈಎಸ್ಪಿ ಮುರ್ತುಜಾ ಖಾದ್ರಿ, ಸಿಪಿಐ ಸಿಂಧೆ, ಪಿಎಸ್‌ಐ ಆರಿ ಹಾಗೂ ಸಿಬ್ಬಂದಿ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಫ್ಲಾಪ್‌ಗಳ ಸುಳಿಯಲ್ಲಿ ಸಿಲುಕಿದ ಪೂಜಾ ಹೆಗ್ಡೆ! ‘ಲಕ್ಕಿ ಹೀರೋಯಿನ್’ ಇಮೇಜ್ ಮರಳಿ ತರುತ್ತಾ ಈ ಸಿನಿಮಾ?

ದಕ್ಷಿಣ ಭಾರತ ಮತ್ತು ಬಾಲಿವುಡ್‌ನಲ್ಲಿ ಹಲವು ವರ್ಷಗಳ ಕಾಲ ಯಶಸ್ಸಿನ ಪರ್ಯಾಯವಾಗಿದ್ದ ನಟಿ ಪೂಜಾ ಹೆಗ್ಡೆ ಇದೀಗ ಸತತ ಸೋಲುಗಳಿಂದ ಸಂಕಷ್ಟದ ಹಾದಿಯಲ್ಲಿ ಸಾಗುತ್ತಿದ್ದಾರೆ. ದೊಡ್ಡ ಸ್ಟಾರ್‌ಗಳ ಜೊತೆ ನಟಿಸಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಅವರ ಬಹುತೇಕ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ವಿಫಲವಾಗಿವೆ.

‘ರಾಧೆ ಶ್ಯಾಮ್’, ‘ಆಚಾರ್ಯ’, ‘ಬೀಸ್ಟ್’, ‘ಸರ್ಕಸ್’, ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’, ‘ದೇವ’ ಹಾಗೂ ‘ರೆಟ್ರೋ’ ಸೇರಿದಂತೆ ಹಲವು ನಿರೀಕ್ಷಿತ ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ವಿಫಲವಾಗಿವೆ. ಪರಿಣಾಮ, ಒಮ್ಮೆ ನಿರ್ಮಾಪಕರ ಮೊದಲ ಆಯ್ಕೆಯಾಗಿದ್ದ ಪೂಜಾ ಹೆಗ್ಡೆ ಈಗ ಮತ್ತೊಂದು ದೊಡ್ಡ ಗೆಲುವಿಗಾಗಿ ಕಾಯುವಂತಾಗಿದೆ.

ಈ ಸಂದರ್ಭದಲ್ಲಿ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ನಟಿಯ ಪಾಲಿಗೆ ಟರ್ನಿಂಗ್ ಪಾಯಿಂಟ್ ಆಗುವ ನಿರೀಕ್ಷೆ ಮೂಡಿಸಿದೆ. ಡೇವಿಡ್ ಧವನ್ ನಿರ್ದೇಶನದ ಈ ಚಿತ್ರದಲ್ಲಿ ವರುಣ್ ಧವನ್ ಜೊತೆಗೆ ಪೂಜಾ ಹೆಗ್ಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಜೂನ್ 5ರಂದು ತೆರೆಗೆ ಬರಲಿರುವ ಈ ಸಿನಿಮಾ ಯಶಸ್ವಿಯಾದರೆ, ಪೂಜಾ ಹೆಗ್ಡೆ ಅವರ ವೃತ್ತಿಜೀವನಕ್ಕೆ ಹೊಸ ಚೈತನ್ಯ ಸಿಗಬಹುದು. ಇಲ್ಲವಾದರೆ, ಸತತ ಸೋಲಿನ ಒತ್ತಡ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಬಾಲಿವುಡ್‌ನಲ್ಲಿ ಎಲ್ಲರ ಕಣ್ಣು ಈ ಚಿತ್ರದ ಫಲಿತಾಂಶದ ಮೇಲೆಯೇ ನೆಟ್ಟಿದೆ.

ಸಿದ್ದರಾಮಯ್ಯ–ಖರ್ಗೆ ಆಶೀರ್ವಾದ ಇಲ್ಲದೆ ಕಾಂಗ್ರೆಸ್ ಬೆಳೆಯದು: ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರ ಆಶೀರ್ವಾದ ಇಲ್ಲದೆ ಕಾಂಗ್ರೆಸ್ ಪಕ್ಷ ಬೆಳೆಯಲು ಸಾಧ್ಯವಿಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಶ್ಲಾಘಿಸಿ, ಮುಂದಿನ ಮುಖ್ಯಮಂತ್ರಿ ಆಗುತ್ತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಸಿದ್ದರಾಮಯ್ಯ ಹಾಗೂ ಖರ್ಗೆ ಅವರಂತಹ ಹಿರಿಯ ನಾಯಕರ ಮಾರ್ಗದರ್ಶನ ಪಕ್ಷಕ್ಕೆ ಅತ್ಯಗತ್ಯ. ಅವರ ಆಶೀರ್ವಾದವಿಲ್ಲದೆ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದ ಅವರು, ಇದು ಹೊಸ ಜವಾಬ್ದಾರಿಯ ಆರಂಭ ಎಂದು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಯಾವುದೇ ಗೊಂದಲವಿಲ್ಲದೆ ಅಧಿಕಾರ ಹಸ್ತಾಂತರವಾಗಿದೆ. ವಿರೋಧ ಪಕ್ಷಗಳು ಏನೋ ಆಗುತ್ತದೆ ಎಂದು ನಿರೀಕ್ಷಿಸಿದ್ದವು, ಆದರೆ ಅವರಿಗೆ ನಿರಾಸೆಯಾಗಿದೆ ಎಂದು ಅವರು ಹೇಳಿದರು.

ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ದೀರ್ಘಕಾಲದಿಂದ ಶ್ರಮಿಸುತ್ತಿದ್ದಾರೆ ಎಂದು ಹೇಳಿದ ಬಾಲಕೃಷ್ಣ, ಕಷ್ಟಗಳನ್ನು ಎದುರಿಸಿದರೂ, ಜೈಲು ಶಿಕ್ಷೆ ಸೇರಿದಂತೆ ಅನೇಕ ಸವಾಲುಗಳನ್ನು ಎದುರಿಸಿದರೂ ಅವರು ಪಕ್ಷನಿಷ್ಠೆ ಬಿಟ್ಟಿಲ್ಲ, ಎಂದು ಕೊಂಡಾಡಿದರು.

ಅಲ್ಲದೆ, ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕೆಂಬ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಅವರು, ಅದರ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಹೈಪ್ರೊಫೈಲ್ ನಿಂದನೆ ಪ್ರಕರಣಕ್ಕೆ ತಾತ್ಕಾಲಿಕ ಬ್ರೇಕ್! ತಿಮರೋಡಿಗೆ ಜಾಮೀನು, ಹೈಕೋರ್ಟ್‌ನಿಂದ ಕಟ್ಟುನಿಟ್ಟಿನ ಷರತ್ತು

0

ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಜಾಕಾಲದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಆರ್. ನಟರಾಜ್ ಅವರು ಅರ್ಜಿಯ ವಿಚಾರಣೆ ನಡೆಸಿ, ಎರಡೂ ಪಕ್ಷಗಳ ವಾದಗಳನ್ನು ಪರಿಶೀಲಿಸಿದ ಬಳಿಕ ಷರತ್ತುಬದ್ಧ ಜಾಮೀನು ನೀಡುವಂತೆ ಆದೇಶಿಸಿದ್ದಾರೆ.

ನ್ಯಾಯಾಲಯದ ಆದೇಶದಂತೆ, ತಿಮರೋಡಿ ಅವರು ವಾರಕ್ಕೊಮ್ಮೆ ಪುತ್ತೂರು ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ತನಿಖಾ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುವುದು ಕಡ್ಡಾಯವಾಗಿದ್ದು, ಯಾವುದೇ ರೀತಿಯಲ್ಲಿ ಸಾಕ್ಷ್ಯ ನಾಶಪಡಿಸುವ ಅಥವಾ ಪ್ರಕರಣದ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ದೂರುದಾರರು ಹಾಗೂ ಸಾಕ್ಷಿದಾರರಿಗೆ ಬೆದರಿಕೆ ಅಥವಾ ಒತ್ತಡ ಹೇರಿದರೆ ಜಾಮೀನು ಸೌಲಭ್ಯಕ್ಕೆ ಧಕ್ಕೆ ಉಂಟಾಗಬಹುದು ಎಂಬ ಸಂದೇಶವನ್ನೂ ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಕರಾವಳಿ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಮಧ್ಯಂತರ ರಿಲೀಫ್ ಸದ್ಯ ಪ್ರಕರಣದ ದಿಕ್ಕನ್ನೇ ಬದಲಾಯಿಸಿರುವ ಮಹತ್ವದ ಬೆಳವಣಿಗೆಯಾಗಿ ಕಾಣಲಾಗುತ್ತಿದೆ.

‘ಗೋಲ್ಡನ್ ಅವರ್’ನಲ್ಲಿ ಪೊಲೀಸ್ ಹೀರೋಯಿಸಂ! ಉಸಿರಾಟ ನಿಂತಿದ್ದ ಕಾರ್ಮಿಕನಿಗೆ ಸಿಪಿಆರ್ ನೀಡಿ ಜೀವ ಉಳಿಸಿದ ಕಾನ್‌ಸ್ಟೆಬಲ್

ಹೈದರಾಬಾದ್: ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕನೊಬ್ಬ ಭೀಕರ ವಿದ್ಯುತ್ ಆಘಾತಕ್ಕೆ ಒಳಗಾಗಿ ಪ್ರಜ್ಞಾಹೀನನಾದ ಘಟನೆ ಹೈದರಾಬಾದ್‌ನ ಕಾರ್ವಾನ್ ಪ್ರದೇಶದಲ್ಲಿ ನಡೆದಿದೆ. ಆದರೆ ಸಮಯಪ್ರಜ್ಞೆ ಮೆರೆದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಸ್ಥಳದಲ್ಲೇ ಸಿಪಿಆರ್ ನೀಡಿ ಕಾರ್ಮಿಕನ ಜೀವ ಉಳಿಸುವ ಮೂಲಕ ಮಾನವೀಯತೆಯ ಮಾದರಿಯಾಗಿದ್ದಾರೆ.

ಕಾರ್ವಾನ್‌ನ ಕುಮ್ಮರವಾಡಿ ಹನುಮಾನ್ ದೇವಸ್ಥಾನದ ಸಮೀಪ TGPDCL ಗುತ್ತಿಗೆ ಕಾರ್ಮಿಕನೊಬ್ಬ ವಿದ್ಯುತ್ ದುರಸ್ತಿ ಕಾರ್ಯ ನಡೆಸುತ್ತಿದ್ದ ವೇಳೆ ಶಾಕ್ ತಗುಲಿ ಕೆಳಗೆ ಬಿದ್ದಿದ್ದಾನೆ. ಘಟನೆಯ ವೇಳೆ ಗಸ್ತು ಕರ್ತವ್ಯದಲ್ಲಿದ್ದ ಟಪ್ಪಾಚಬುತ್ರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಬಿ. ಸುರೇಶ್ ಸ್ಥಳಕ್ಕೆ ಧಾವಿಸಿ ಕಾರ್ಮಿಕನ ಸ್ಥಿತಿ ಪರಿಶೀಲಿಸಿದ್ದಾರೆ.

ಕಾರ್ಮಿಕನ ನಾಡಿಮಿಡಿತ ಮತ್ತು ಉಸಿರಾಟ ಸ್ಥಗಿತಗೊಂಡಿರುವುದನ್ನು ಗಮನಿಸಿದ ಸುರೇಶ್ ಯಾವುದೇ ವಿಳಂಬ ಮಾಡದೆ ಸ್ಥಳದಲ್ಲೇ ಸಿಪಿಆರ್ ನೀಡಲು ಆರಂಭಿಸಿದ್ದಾರೆ. ಕೆಲ ನಿಮಿಷಗಳ ನಿರಂತರ ಪ್ರಯತ್ನದ ಬಳಿಕ ಕಾರ್ಮಿಕನ ಉಸಿರಾಟ ಹಾಗೂ ನಾಡಿಮಿಡಿತ ಪುನಃ ಆರಂಭವಾಗಿದೆ.

ಬಳಿಕ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಡಿಕೆಶಿ ಪ್ರಮಾಣವಚನದ ದಿನಾಂಕದತ್ತ ರಾಜ್ಯದ ಕಣ್ಣು: ಎಲ್ಲಿ? ಯಾವಾಗ

ಬೆಂಗಳೂರು: ರಾಜ್ಯ ರಾಜಕೀಯದ ಅತ್ಯಂತ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಸುಗಮವಾಗಿದೆ. ಈಗ ರಾಜ್ಯದ ಗಮನ ಸಂಪೂರ್ಣವಾಗಿ ಮುಂದಿನ ಮುಖ್ಯಮಂತ್ರಿ ಹಾಗೂ ಪ್ರಮಾಣವಚನ ಸಮಾರಂಭದತ್ತ ನೆಟ್ಟಿದೆ.

ಕಾಂಗ್ರೆಸ್ ನಾಯಕತ್ವದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲವಾದರೂ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆ ಬಹುತೇಕ ಖಚಿತ ಎನ್ನುವ ವಾತಾವರಣ ಪಕ್ಷದೊಳಗೆ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಎಐಸಿಸಿ ನಾಯಕರೊಂದಿಗೆ ನಿರ್ಣಾಯಕ ಸಭೆ ನಡೆಸಲಿದ್ದಾರೆ.

ಸಚಿವ ಸಂಪುಟದ ಸ್ವರೂಪ, ಸಚಿವ ಸ್ಥಾನಗಳ ಹಂಚಿಕೆ, ಪ್ರಾದೇಶಿಕ ಹಾಗೂ ಜಾತಿ ಸಮೀಕರಣ ಸೇರಿದಂತೆ ಹಲವು ಸೂಕ್ಷ್ಮ ವಿಷಯಗಳ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಚರ್ಚೆಗಳು ನಡೆಯಲಿವೆ. ಈ ಸಭೆಯ ಬಳಿಕವೇ ಮುಖ್ಯಮಂತ್ರಿ ಹಾಗೂ ಸಂಪುಟದ ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಇದೇ ವೇಳೆ, ಪ್ರಮಾಣವಚನ ಕಾರ್ಯಕ್ರಮಕ್ಕೆ ಸೂಕ್ತ ಮುಹೂರ್ತದ ಹುಡುಕಾಟವೂ ಜೋರಾಗಿದೆ. ಡಿ.ಕೆ. ಶಿವಕುಮಾರ್ ಜ್ಯೋತಿಷಿಗಳ ಸಲಹೆ ಪಡೆದಿದ್ದು, ಶುಭ ಸಮಯದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾಗವಹಿಸುವಂತೆ ವೇಳಾಪಟ್ಟಿ ರೂಪಿಸಲಾಗುತ್ತಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಸೇರಿದಂತೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ದೆಹಲಿಯಲ್ಲಿ ನಡೆಯುವ ಇಂದಿನ ಸಭೆಯ ಬಳಿಕ ಕರ್ನಾಟಕದ ಮುಂದಿನ ರಾಜಕೀಯ ಅಧ್ಯಾಯಕ್ಕೆ ಅಧಿಕೃತ ಚಾಲನೆ ಸಿಗುವ ಸಾಧ್ಯತೆ ಹೆಚ್ಚಾಗಿದೆ.

‘40 ದಿನಗಳ ಸಂಕಲ್ಪ’ ಫಲಿಸಿತೇ? ಮುಕ್ತಿಮಂದಿರ ಭೇಟಿ ಬಳಿಕ ಡಿಕೆಶಿಗೆ ಸಿಎಂ ಪಟ್ಟ

ಲಕ್ಷ್ಮೇಶ್ವರ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರ ಬೆನ್ನಲ್ಲೇ ಗದಗ ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರ ಮುಕ್ತಿಮಂದಿರ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದೆ. ಉಪಮುಖ್ಯಮಂತ್ರಿಯಾಗಿದ್ದ ವೇಳೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಈ ಕ್ಷೇತ್ರಕ್ಕೆ ರಹಸ್ಯ ಭೇಟಿ ನೀಡಿ ವಿಶೇಷ ಸಂಕಲ್ಪ ಮಾಡಿದ್ದರು ಎಂಬ ಮಾಹಿತಿ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಳೆದ ಏಪ್ರಿಲ್ 19ರಂದು ಯಾವುದೇ ರಾಜಕೀಯ ಪ್ರಚಾರವಿಲ್ಲದೆ, ತಮ್ಮ ಆಪ್ತರಿಗೂ ಮಾಹಿತಿ ನೀಡದೇ ಮುಕ್ತಿಮಂದಿರಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಲಿಂಗೈಕ್ಯ ವೀರ ಗಂಗಾಧರ ಮಹಾಸ್ವಾಮಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಕಟ್ಟುನಿಟ್ಟಿನ ಭದ್ರತೆಯ ನಡುವೆ ನಡೆದ ಈ ಭೇಟಿ ವೇಳೆ ಗರ್ಭಗುಡಿಗೆ ಮಾಧ್ಯಮಗಳು ಹಾಗೂ ಸ್ಥಳೀಯ ಮುಖಂಡರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಮುಕ್ತಿಮಂದಿರದ ಪೀಠಾಧಿಪತಿಗಳಾದ ಶ್ರೀ ವಿಮಲರೇಣುಕಾ ವೀರಮುಕ್ತಿ ಮುನಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಡಿಕೆಶಿ ವಿಶೇಷ ಪೂಜೆ, ಜಪ ಮತ್ತು ಧ್ಯಾನದಲ್ಲಿ ತೊಡಗಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ರಾಜ್ಯದ ಉನ್ನತ ಹುದ್ದೆ ಪ್ರಾಪ್ತಿಗಾಗಿ ಅವರು ಸಂಕಲ್ಪ ಮಾಡಿದ್ದರು ಎನ್ನುವ ಮಾತುಗಳು ಇದೀಗ ಮತ್ತೆ ಮುನ್ನೆಲೆಗೆ ಬಂದಿವೆ.

ಈ ಭೇಟಿಯ ನಂತರ ಕೇವಲ 40 ದಿನಗಳೊಳಗೆ ರಾಜ್ಯ ರಾಜಕೀಯದಲ್ಲಿ ನಡೆದ ಬೆಳವಣಿಗೆಗಳ ಪರಿಣಾಮವಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವುದು ಕ್ಷೇತ್ರದ ಭಕ್ತರು ಮತ್ತು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇದರಿಂದ ಮುಕ್ತಿಮಂದಿರದ ಆಧ್ಯಾತ್ಮಿಕ ಪ್ರಭಾವ ಹಾಗೂ ಕ್ಷೇತ್ರದ ಮಹಿಮೆಯ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.

‘ಕಾಲ ಹತ್ತಿರ ಬಂದಿದೆ’… ಡಿಕೆಶಿ ಸಿಎಂ ಆಗುವ ಕುರಿತು ಇಕ್ಬಾಲ್ ಹುಸೇನ್ ರಹಸ್ಯ ಸಂಕೇತ!

ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ರಾಜಕೀಯ ಬೆಳವಣಿಗೆಗಳ ನಡುವೆ ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ದೊರೆಯುವ ಕುರಿತು ಮಾತನಾಡಿದ ಅವರು, ಬಹುಕಾಲದ ನಿರೀಕ್ಷೆ ಈಡೇರುವ ಹಂತಕ್ಕೆ ಬಂದಿದೆ ಎಂದು ಸೂಚನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಗರ ಬಹುಕಾಲದ ಆಸೆ ಒಂದಿತ್ತು. ಆ ಆಸೆಯನ್ನು ಭಗವಂತ ಈಡೇರಿಸುವ ಕೆಲಸ ಮಾಡುತ್ತಿದ್ದಾನೆ. ನಾನು ಈ ಹಿಂದೆ ಬಹಿರಂಗವಾಗಿ ಹೇಳಿದ್ದೆ. ಇನ್ನು ಕೆಲವರು ಮೌನವಾಗಿ ಪ್ರಾರ್ಥನೆ ಮಾಡಿದ್ದರು. ಆ ಪ್ರಾರ್ಥನೆ ನೆರವೇರುವ ಸಮಯ ಈಗ ಸಮೀಪಿಸಿದೆ” ಎಂದು ಹೇಳಿದ್ದಾರೆ.

“ನಮ್ಮ ನಾಯಕರಿಗೆ ಅವಕಾಶ ಸಿಗುತ್ತಿರುವುದರಿಂದ ಭಗವಂತನಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಇಂದು ಬಕ್ರೀದ್ ಹಬ್ಬದ ದಿನವಾಗಿರುವುದರಿಂದ ರಾಜಕೀಯ ಚರ್ಚೆಗಳನ್ನು ಹೆಚ್ಚಿಸಲು ಇಷ್ಟಪಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಪರಮೇಶ್ವರ್ ಅವರ ಮುಖ್ಯಮಂತ್ರಿ ಹುದ್ದೆ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ನಮ್ಮ ಹಿರಿಯ ನಾಯಕರು. ಅವಕಾಶ ಕೇಳುವುದು ಅವರ ಹಕ್ಕು. ಅವರು ಪಕ್ಷಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದರೆ ನಮ್ಮ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ಎಂಬುದು ನಮ್ಮ ಜಿಲ್ಲೆಯ ಜನರ ಹಾಗೂ ಬೆಂಬಲಿಗರ ಅಭಿಲಾಷೆ” ಎಂದು ಹೇಳಿದ್ದಾರೆ.

ಈ ಹೇಳಿಕೆಗಳ ಮೂಲಕ ಕಾಂಗ್ರೆಸ್‌ನ ಮುಂದಿನ ನಾಯಕತ್ವದ ಕುರಿತು ಮತ್ತೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.