ವಿಜಯಸಾಕ್ಷಿ ಸುದ್ದಿ, ಗದಗ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಕನಕದಾಸ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ರವಿ ದಂಡಿನ ಅವರಿಗೆ ಟಿಕೆಟ್ ನೀಡಬೇಕು ಎಂದು ನಿವೃತ್ತಿ ಪ್ರಾಚಾರ್ಯ ಉಮೇಶ ಹಿರೇಮಠ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ಈ ನಾಲ್ಕು ಜಿಲ್ಲೆಯನ್ನೊಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕನಕದಾಸ ಶಿಕ್ಷಣ ಸಮಿತಿ ಸಂಸ್ಥೆ ದಶಕಗಳಿಂದ ಶಿಕ್ಷಣದಲ್ಲಿ ಸೇವೆ ಸಲ್ಲಿಸುತ್ತಿದೆ. ಕೆಎಸ್ಎಸ್ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಕಾಲೇಜುಗಳಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿಯನ್ನು ಪಡೆದು ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ರವಿ ದಂಡಿನ ಅವರಿಗೆ ಟಿಕೆಟ್ ನೀಡಿದರೆ ಗೆಲವು ಸುಲಭವಾಗಲಿದೆ ಎಂದರು.
ರವಿ ದಂಡಿನ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ, ಸಂಘಟಕರಾಗಿ, ಹೋರಾಟಗಾರರಾಗಿ, ಯುವಕರ ಕಣ್ಮಣಿಯಾಗಿ, ನಿರಂತರವಾಗಿ, ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪದವೀಧರರ ಹಾಗೂ ಶಿಕ್ಷಕರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಹಗಲಿರುಳು ಶ್ರಮಿಸಿ ಯಶಸ್ವಿಯಾಗಿದ್ದಾರೆ. ಭಾರತೀಯ ಜನತಾ ಪಕ್ಷದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿಯವರೆಗೂ ಹಳೆ ಧಾರವಾಡ ಜಿಲ್ಲೆಯ ಭಾಗದಲ್ಲಿ ಹಿಂದುಳಿದ ವರ್ಗದವರಿಗೆ ಪ್ರಾತಿನಿಧ್ಯ ನೀಡಿಲ್ಲ. ಹಣ ಬಲ, ರಾಜಕೀಯ ಬಲ ಇದ್ದವರಿಗೆ ಮಾತ್ರ ಈವರೆಗೆ ಟಿಕೆಟ್ ನೀಡಲಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಎಲ್ಲಾ ವರ್ಗದ ಜನರ ಅವಶ್ಯಕತೆ ಇರುವುದರಿಂದ ಹಿಂದುಳಿದ ವರ್ಗಕ್ಕೆ ಸೇರಿದ ರವಿ ದಂಡಿನ ಅವರಿಗೆ ಬಿಜೆಪಿ ಪಕ್ಷದಿಂದ ಈ ಬಾರಿ ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ನೀಡಲು ಈ ಮೂಲಕ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ ಎಂದರು.
ನಿವೃತ್ತ ಪ್ರಾಚಾರ್ಯ ವಿ.ಎಸ್. ದಲಾಲಿ, ಬಿ.ಎಸ್. ಕಂಠಿ, ನಿವೃತ್ತ ಉಪ ಪ್ರಾಚಾರ್ಯ ಡಾ. ಜೆ.ಸಿ. ಜಂಪಣ್ಣನವರ, ಮಲ್ಲಿಕಾರ್ಜುನ ಕಿರೇಸೂರ ಮುಂತಾದವರು ಇದ್ದರು.


