Home Blog Page 17

ಪಂಚಮಸಾಲಿ ಪೀಠಾಧಿಪತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಬೆಂಗಳೂರು ಮೂಲದ ಮಹಿಳೆಯೊಬ್ಬರು ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಪ್ರಕರಣ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಸಂಬಂಧ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ, ಸ್ವಾಮೀಜಿ ತಮ್ಮ ಖಾಸಗಿ ವಿಡಿಯೋ ಮಾಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆಯ ಹೇಳಿಕೆಯ ಪ್ರಕಾರ, ಅವರು ಸ್ವಾಮೀಜಿಯ ಭಕ್ತೆಯಾಗಿದ್ದು, ಪರಿಚಯದ ನೆಪದಲ್ಲಿ ಮಠಕ್ಕೆ ಕರೆಸಿ ವಿಶ್ವಾಸ ದುರುಪಯೋಗ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರಂತೆ. ಅಲ್ಲದೆ, ಅವರ ತಿಳುವಳಿಕೆಯಿಲ್ಲದೆ ಖಾಸಗಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಡಿಯೋವನ್ನು ಆಧಾರ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಾ, ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ತಾನು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ಮಹಿಳೆ ತಿಳಿಸಿದ್ದಾರೆ.

ಇತ್ತೀಚೆಗೆ ಸ್ವಾಮೀಜಿಯದ್ದೆನ್ನಲಾದ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ, ಪ್ರಕರಣ ಮತ್ತಷ್ಟು ಗಂಭೀರತೆ ಪಡೆದುಕೊಂಡಿದೆ. ದೂರು ಆಧರಿಸಿ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಗುಂಡೇಟಿಗೆ ಬಲಿಯಾದ ಚಿರತೆ: ಕಳ್ಳಬೇಟೆ ಶಂಕೆ, ತನಿಖೆಗೆ ಸಚಿವರ ಆದೇಶ

ಮೈಸೂರು: ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಪಿರಿಯಾಪಟ್ಟಣ ತಾಲೂಕಿನ ಗುಳೆದಹಳ್ಳದ ಪ್ರದೇಶದಲ್ಲಿ ಸುಮಾರು 2 ವರ್ಷದ ಹೆಣ್ಣು ಚಿರತೆಯ ಶವ ಪತ್ತೆಯಾಗಿದ್ದು, ಇದು ಕಳ್ಳಬೇಟೆಯ ಪ್ರಕರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸೋಮವಾರ ಪತ್ತೆಯಾದ ಈ ಪ್ರಕರಣಕ್ಕೆ ಸಂಬಂಧಿಸಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೇಟೆಗಾರರು ನಾಡಬಂದೂಕಿನಿಂದ ಗುಂಡು ಹಾರಿಸಿ ಚಿರತೆಯನ್ನು ಕೊಂದಿರಬಹುದೆಂದು ಶಂಕಿಸಲಾಗಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆ ವೇಳೆ ಚಿರತೆಯ ದೇಹದೊಳಗೆ ಮೂರು ಗುಂಡುಗಳು ಪತ್ತೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ಸಾವಿನ ನಿಖರ ಕಾರಣ ತಿಳಿಯಲು ಅಂಗಾಂಗಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಬಂಧಿತ ವಲಯದ ಮುಖ್ಯ ಅರಣ್ಯಾಧಿಕಾರಿಗಳಿಗೆ ಸಚಿವರು ಲಿಖಿತ ಸೂಚನೆ ನೀಡಿದ್ದು, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಅರಣ್ಯ ಪ್ರದೇಶಗಳಲ್ಲಿ ಗಸ್ತು ವೈಫಲ್ಯ ಕಂಡುಬಂದರೆ ಸಂಬಂಧಿತ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಘಟನೆ ವನ್ಯಜೀವಿ ಕಳ್ಳಬೇಟೆ ಇನ್ನೂ ನಡೆಯುತ್ತಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದ್ದು, ಅರಣ್ಯ ಅಪರಾಧ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂಬ ಚರ್ಚೆಗೆ ಕಾರಣವಾಗಿದೆ.

Gold Rate Today: ಮತ್ತೆ ಕುಸಿದ ಚಿನ್ನದ ಬೆಲೆ! ಹೀಗಿದೆ ಇಂದಿನ ಬಂಗಾರ-ಬೆಳ್ಳಿ ದರ ವಿವರ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿದ್ದರೂ, ಮೂಲ್ಯ ಲೋಹಗಳ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡುಬಂದಿದೆ. ವಿಶೇಷವಾಗಿ ಚಿನ್ನದ ದರ ಕುಸಿದರೆ, ಬೆಳ್ಳಿ ಬೆಲೆ ತಟಸ್ಥವಾಗಿಯೇ ಉಳಿದಿದೆ.

ಏಪ್ರಿಲ್ 7, 2026ರ ಮಂಗಳವಾರದಂದು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 10 ಗ್ರಾಂಗೆ 820 ರೂ ಇಳಿಕೆಯಾಗಿದ್ದು, ಪ್ರಸ್ತುತ ದರ 1,49,840 ರೂಪಾಯಿಗೆ ತಲುಪಿದೆ. 1 ಗ್ರಾಂ ಚಿನ್ನದ ಬೆಲೆ 82 ರೂ ಇಳಿಕೆಯಾಗಿದ್ದು, 14,984 ರೂ ಆಗಿದೆ.

ಇನ್ನೊಂದೆಡೆ 22 ಕ್ಯಾರೆಟ್ ಚಿನ್ನದ ದರದಲ್ಲೂ ಇಳಿಕೆ ದಾಖಲಾಗಿದೆ. 1 ಗ್ರಾಂಗೆ 75 ರೂ ಇಳಿಕೆಯಾಗಿದ್ದು, 13,735 ರೂ ಆಗಿದೆ. 10 ಗ್ರಾಂಗೆ 750 ರೂ ಇಳಿಕೆಯಾಗಿದ್ದು, 1,37,350 ರೂಪಾಯಿಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. 1 ಗ್ರಾಂ ಬೆಲೆ 250 ರೂ ಇದ್ದು, 1 ಕೆಜಿ ಬೆಲೆ 2,50,000 ರೂಪಾಯಿಯಾಗಿ ಮುಂದುವರಿದಿದೆ.

ಇರಾನ್–ಅಮೆರಿಕ ಸಂಘರ್ಷದ ಪರಿಣಾಮವಾಗಿ ಡಾಲರ್ ಮೌಲ್ಯದಲ್ಲಿ ಏರಿಳಿತ ಉಂಟಾಗುತ್ತಿದ್ದು, ಇದರ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅನಿಶ್ಚಿತತೆ ಮುಂದುವರಿದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ವೀರಶೈವರ, ಶ್ರೀಮಂತರ ಪಾಲಾದ ಅಖಿಲ ಭಾರತ ವೀರಶೈವ ಮಹಾಸಭಾ: ಬಿ.ಪಿ.ಹರೀಶ್ ಟೀಕೆ

ದಾವಣಗೆರೆ: ನಿನ್ನೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರು ವೀರಶೈವ ಸಮಾಜದ ಸಭೆ ನಡೆಸಿ ದಾವಣಗೆರೆಯ ಜನತೆಗೆ ಬಹಳಷ್ಟು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಬಿ.ಪಿ.ಹರೀಶ್ ಅವರು ಆಕ್ಷೇಪಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾವು ದುಡ್ಡಿದ್ದಂತ, ಕೇವಲ ಕಾಂಗ್ರೆಸ್ ವೀರಶೈವರ ಹಾಗೂ ಶ್ರೀಮಂತರ ಪಾಲಾಗಿದೆ ಎಂದು ಟೀಕಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಇಂದು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ ಮಾಡಲು, ರಾಜಕೀಯ ಪಕ್ಷಗಳನ್ನು ಹೆದರಿಸಿ ಮಂತ್ರಿ ಸ್ಥಾನ ಪಡೆಯಲು ಈ ಮಹಾಸಭಾವನ್ನು ಇವರು ದುರುಪಯೋಗ ಪಡಿಸಿಕೊಂಡಿದ್ದಾರೆ. ಬಡ ವೀರಶೈವರಿಗೆ ಇವರ ಕೊಡುಗೆ ಇಲ್ಲ ಎಂದು ಟೀಕಿಸಿದರು.

ಈಶ್ವರ ಖಂಡ್ರೆ ಅವರು ಬಹಳ ಮುಜುಗರದಿಂದ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಭ್ಯರ್ಥಿ ಸಮರ್ಥ ಅವರ ತಂದೆಯ ಒಡೆತನದ ಸಕ್ಕರೆ ಕಾರ್ಖಾನೆ, ಡಿಸ್ಟಿಲರೀಸ್‍ನಿಂದ ಕೈಗಾರಿಕಾ ತ್ಯಾಜ್ಯವನ್ನು ಸರಿಯಾಗಿ ಸಂಸ್ಕರಿಸದೇ ನೇರವಾಗಿ ತುಂಗಭದ್ರಾ ನದಿಗೆ ಬಿಡಲಾಗುತ್ತಿದೆ. ಅರಣ್ಯ ಸಚಿವರಾದ ತಮ್ಮ ಅಡಿಯಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಯೂ ಇದೆ. ಇಂಥ ಅಭ್ಯರ್ಥಿ ಪರವಾಗಿ ತಾವು ಮಾತನಾಡಿದ್ದು ಸರಿಯೇ ಎಂದು ಕೇಳಿದರು.

ರೈತರ ಜಮೀನಿನ ಬೆಳೆಗಳ ಮೇಲೆ ಹಾರು ಬೂದಿ ದೂಳು ಬೀಳುತ್ತಿದೆ. ಬಡ ರೈತರಿಗೆ ಅನ್ಯಾಯ ಮಾಡುತ್ತಿರುವ ಬಗ್ಗೆ ಸದನದಲ್ಲಿ ಎತ್ತಿದಾಗ ಖಂಡ್ರೆಯವರು ಸುಳ್ಳು ಮಾಹಿತಿ ಕೊಟ್ಟಿದ್ದರು. ಖಂಡ್ರೆಯವರೇ, ಮಲ್ಲಿಕಾರ್ಜುನ್ ಅವರ ದುರಾಡಳಿತ, ಕುಡಿಯುವ ನೀರಿನ ಮೇಲಿನ ದುಷ್ಪರಿಣಾಮ ನಿಮಗೆಲ್ಲ ಗೊತ್ತಿದೆ. ಎವಿಕೆ ಕಾಲೇಜು ಸ್ಥಾಪಿಸಿ ಯುವತಿಯರಿಗೆ ಶಿಕ್ಷಣ ಸಿಗುವಂತೆ ಮಾಡಿದ್ದಾಗಿ ಹೇಳಿದ್ದೀರಿ.

ಖಂಡ್ರೆಯವರೇ, ಸುಳ್ಳು ಮಾಹಿತಿ ಕೊಡದಿರಿ. ದಾವಣಗೆರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಲು ರಾಜನಳ್ಳಿ, ಅಜ್ಜಂಪುರ ಮನೆತನದವರು, ದಾನಿಗಳು ದೊಡ್ಡ ಕೊಡುಗೆ ನೀಡಿದ್ದಾರೆ. ಚಿಗಟೇರಿ ಆಸ್ಪತ್ರೆಯನ್ನು ಆ ಮನೆತನದವರ ಕೊಡುಗೆ ಮೂಲಕ ಸ್ಥಾಪಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಆ ಕೊಡುಗೆ ನೀಡಿದ್ದಾಗಿ ಸುಳ್ಳು ಹೇಳಿದ್ದೀರಲ್ಲವೇ ಎಂದು ಕೇಳಿದರು.

ದ್ವಿತೀಯ PUC ಫಲಿತಾಂಶಕ್ಕೆ ಮುಹೂರ್ತ ನಿಗದಿ: ರಿಸಲ್ಟ್​ ಯಾವಾಗ ಗೊತ್ತಾ?

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಫಲಿತಾಂಶ ಪ್ರಕಟಣೆ ಮುಂದೂಡಲ್ಪಟ್ಟಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ಕೆಲವು ತಾಂತ್ರಿಕ ಅಡಚಣೆಗಳಿಂದ ಪ್ರಕಟಣೆ ವಿಳಂಬವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದೀಗ ಲಭ್ಯವಾಗಿರುವ ಹೊಸ ಮಾಹಿತಿಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 9ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದು, ಸುಮಾರು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೊದಲಿಗೆ ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದರೂ, ಅಧಿಕೃತ ಘೋಷಣೆ ಆಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿತ್ತು.

ಇನ್ನೂ ಫಲಿತಾಂಶ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.

ಇದಲ್ಲದೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ರಾಜ್ಯದ ಕೆಲವು ಭಾಗಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ಪರಿಣಾಮವಾಗಿ ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದ ಅನುಮತಿ ಅಗತ್ಯವಿದ್ದು, ಇದೇ ಕಾರಣದಿಂದ ಪ್ರಕಟಣೆ ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಕಾಳ ಸಂತೆಯಲ್ಲಿ IPL ಟಿಕೆಟ್ ಮಾರಾಟ ಮಾಡುತ್ತಿದ್ದ 11 ಆರೋಪಿಗಳ ಬಂಧನ!

0

ಬೆಂಗಳೂರು: ಟಾಟಾ ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, 11 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಈಗಾಗಲೇ 7 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಬಂಧಿತರಿಂದ ಸುಮಾರು ₹4 ಲಕ್ಷ 53 ಸಾವಿರ ಮೌಲ್ಯದ 28 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 7 ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಟಿಕೆಟ್‌ಗಳನ್ನು ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಆರೋಪಿಗಳು, ಅಭಿಮಾನಿಗಳನ್ನು ಮೋಸಗೊಳಿಸುತ್ತಿದ್ದರೆಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಕುರಿತು ಕಬ್ಬನ್ ಪಾರ್ಕ್ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಡೆಲಿವರಿ, ಆಟೋ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ!

0

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಾಹುಲ್ ಮತ್ತು ಪ್ರೇಮ್ ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು 7 ಕೆಜಿ 500 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 3 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ತಮಿಳುನಾಡಿನಿಂದ ಗಾಂಜಾ ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು. ರಾಹುಲ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಪ್ರೇಮ್ ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದನು.

ಈ ಕೆಲಸಗಳನ್ನು ನೆಪ ಮಾಡಿಕೊಂಡು ಗಾಂಜಾ ಪೆಡ್ಲಿಂಗ್ ನಡೆಸುತ್ತಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಸದ್ಯ ಇಬ್ಬರನ್ನೂ ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾವಣಗೆರೆ ಉಪಚುನಾವಣೆ: ಸ್ವಾಮೀಜಿ ಹೆಸರಿನಲ್ಲಿ ನಕಲಿ ಸಂದೇಶ ವೈರಲ್, ಮಠದಿಂದ ಸ್ಪಷ್ಟನೆ

0

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಹೆಚ್ಚಾಗಿದೆ.

ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡುವಂತೆ ಕರೆ ನೀಡಿರುವ ಸಂದೇಶ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿತ್ತು.

ಈ ಕುರಿತು ತರಳುಬಾಳು ಗುರುಪೀಠ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಸ್ವಾಮೀಜಿಯವರ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಸಂದೇಶ ರವಾನಿಸಲಾಗುತ್ತಿದೆ ಎಂದು ತಿಳಿಸಿದೆ. ಈ ರೀತಿಯ ಸಂದೇಶಗಳು ಶ್ರೀಗಳ ನಿಲುವನ್ನು ತಪ್ಪಾಗಿ ಪ್ರತಿಬಿಂಬಿಸುತ್ತವೆ ಎಂದು ಹೇಳಲಾಗಿದೆ.

ಪ್ರಕರಣದ ಗಂಭೀರತೆಯನ್ನು ಮನಗಂಡ ಮಠದ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮತದಾರರನ್ನು ತಪ್ಪು ದಾರಿಗೆಳೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕಾಗಿದೆ.

ಕಾವೇರಿ ನದಿಯಲ್ಲಿ ಅನುಮಾನಾಸ್ಪವಾಗಿ ಕಂಟ್ರಾಕ್ಟರ್ ಶವ ಪತ್ತೆ! ಕೊಲೆ ಶಂಕೆ

0

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಪವನ್ (27) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಅವರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದರು. ನಾಲ್ಕು ದಿನಗಳ ಹಿಂದೆ “ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ” ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ ಅವರು ಬಳಿಕ ಮನೆಗೆ ವಾಪಸ್ಸಾಗಿರಲಿಲ್ಲ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದಲ್ಲದೆ, ಸಾಮಾಜಿಕ ಜಾಲತಾಣ ಖಾತೆಗಳೂ ಡಿ-ಆಕ್ಟಿವ್ ಆಗಿದ್ದವು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ನಿನ್ನೆ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿಯಲ್ಲಿ ಪವನ್ ಮೃತದೇಹ ಪತ್ತೆಯಾಗಿದೆ. ದೇಹದ ಮೇಲೆ ಗಾಯಗಳಿರುವುದು ಗಮನಕ್ಕೆ ಬಂದಿದ್ದು, ಇದು ಕೊಲೆ ಆಗಿರಬಹುದೆಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸ್ಥಳೀಯರಲ್ಲಿ ಭೀತಿ ಮೂಡಿಸಿದ್ದು, ಪವನ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

ಬಾಂಗ್ಲಾದೇಶದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್..!

0

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗ (ಡಿಬಿ) ಬಂಧಿಸಿದೆ. ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಧಿಕಾರಿಗಳು ಬಂಧನ ಕ್ರಮ ಕೈಗೊಂಡಿದ್ದಾರೆ.

ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದ ಪ್ರಕರಣದಡಿ ಅವರನ್ನು ಬಂಧಿಸಲಾಗಿದೆ ಎಂದು ಪತ್ತೇದಾರಿ ವಿಭಾಗದ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ತಿಳಿಸಿದ್ದಾರೆ.

ಶಿರಿನ್ ಶರ್ಮಿನ್ ಚೌಧರಿ ಅವರು 2013ರಿಂದ 2024ರ ಆಗಸ್ಟ್ ವರೆಗೆ ಬಾಂಗ್ಲಾದೇಶ ಸಂಸತ್ತಿನ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ದೇಶದ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

2025ರ ಆಗಸ್ಟ್ 5ರಂದು ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ 27 ದಿನಗಳ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಅವರ ದೀರ್ಘಕಾಲದ ರಾಜಕೀಯ ಪಯಣ ಅಂತ್ಯಗೊಂಡಿತ್ತು.

error: Content is protected !!