Home Blog Page 179

ಬೆಂಗಳೂರು: ಮಹದೇವಪುರದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು!

0

ಬೆಂಗಳೂರು: ನಗರದ ಮಹದೇವಪುರ ಪ್ರದೇಶದ ಗರುಡಚಾರ್ಯ ಪಾಳ್ಯದಲ್ಲಿ ನಿನ್ನೆ ರಾತ್ರಿ ನಡುರಸ್ತೆಯಲ್ಲೇ ಕಾರೊಂದು ಅಚಾನಕ್‌ ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಕಾರಿನ ಮುಂಭಾಗದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಕಾರನ್ನು ನಿಲ್ಲಿಸಿ ಪರಿಶೀಲನೆ ನಡೆಸಲು ಮುಂದಾದಾಗ, ಕ್ಷಣಾರ್ಧದಲ್ಲಿ ಬೆಂಕಿ ಸಂಪೂರ್ಣ ಕಾರಿಗೆ ವ್ಯಾಪಿಸಿದೆ ಎನ್ನಲಾಗಿದೆ.

ಘಟನೆಯ ಸಮಯದಲ್ಲಿ ಕಾರಿನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಹೊರಬಂದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಬೆಂಕಿಗೆ ಆಹುತಿಯಾದ ಕಾರು ಲೋಕೇಶ್ ಎಂಬುವರಿಗೆ ಸೇರಿದ್ದು, KA-03 AL-5589 ನೋಂದಣಿ ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರು ಎಂದು ತಿಳಿದುಬಂದಿದೆ. ಈ ಕಾರನ್ನು ಸುಮಾರು ಎರಡು ವರ್ಷಗಳ ಹಿಂದೆ ಖರೀದಿಸಲಾಗಿತ್ತು ಎನ್ನಲಾಗಿದೆ.

ಘಟನೆಯ ಸಂಬಂಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯಶ್ ಬರ್ತಡೇ ಸಂಭ್ರಮಕ್ಕೆ ಕಾನೂನು ತಿರುಗುಬಾಣ: ಬ್ಯಾನರ್ ವಿವಾದದಲ್ಲಿ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್

ಬೆಂಗಳೂರು: ನಟ ಯಶ್ ಹುಟ್ಟುಹಬ್ಬದ ಸಂಭ್ರಮ ಇದೀಗ ಕಾನೂನು ವಿವಾದವಾಗಿ ತಿರುಗಿದೆ. ರಸ್ತೆಯಲ್ಲಿ ಅನಧಿಕೃತವಾಗಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ವೇಣು ಕ್ರಿಯೇಶನ್ ವಿರುದ್ಧ ಪೊಲೀಸ್ ಎಫ್‌ಐಆರ್ ದಾಖಲಾಗಿದೆ.

ಜ.8ರಂದು ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಗಾಲ್ಫ್ ಕ್ಲಬ್ ಎದುರು, ಅವರ ಮನೆ ಬಳಿಯ ರಸ್ತೆಯಲ್ಲಿ ಹುಟ್ಟುಹಬ್ಬ ಶುಭಾಶಯ ಕೋರಿ ಹಲವು ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೆ ಬ್ಯಾನರ್ ಹಾಕಲಾಗಿದೆ ಎಂಬ ಆರೋಪದ ಮೇರೆಗೆ ಜಿಬಿಎ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ವೇಣು ಕ್ರಿಯೇಶನ್ ಅವರನ್ನು ಆರೋಪಿಯಾಗಿ ಉಲ್ಲೇಖಿಸಲಾಗಿದೆ. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಾಗಿದೆ.

ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ?: ಪರಮೇಶ್ವರ್ ಪ್ರಶ್ನೆ

0

ತುಮಕೂರು: ಒಳಾಂಗಣ ಕ್ರೀಡಾಂಗಣಕ್ಕೆ ಡಾ.ಜಿ. ಪರಮೇಶ್ವರ್ ಹೆಸರು ಇಟ್ಟಿರುವುದರ ಬಗ್ಗೆ ರಾಜಕೀಯ ಚರ್ಚೆ ತೀವ್ರವಾಗಿರುವ ನಡುವೆಯೇ, ಗೃಹಸಚಿವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
“ನಾನು ಕ್ರೀಡಾಪಟು. ತುಮಕೂರಿಗೆ ಕೀರ್ತಿ ತಂದಿದ್ದೇನೆ. ಕ್ರೀಡಾಪಟುಗಳೇ ಸೇರಿ ನನ್ನ ಹೆಸರು ಇಟ್ಟಿದ್ದಾರೆ. ಇದಕ್ಕೆ ಯಾಕೆ ಕೆಲವರಿಗೆ ಹೊಟ್ಟೆ ಉರಿ?” ಎಂದು ಅವರು ಪ್ರಶ್ನಿಸಿದರು.

ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಜಿ. ಪರಮೇಶ್ವರ್ ಹೆಸರಿನ ನಾಮಫಲಕ ಅನಾವರಣಗೊಂಡಿತು. ಈ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯೋಜಿಸಿತ್ತು. ಕರ್ನಾಟಕ ಒಲಂಪಿಕ್ ಅಧ್ಯಕ್ಷ ಗೋವಿಂದರಾಜು ನಾಮಫಲಕ ಅನಾವರಣಗೊಳಿಸಿದರು. ಆಯುಕ್ತ ಚೇತನ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಎಸ್ಪಿ ಅಶೋಕ್ ಕೆ.ವಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಪತ್ರಕರ್ತರೊಂದಿಗೆ ಮಾತನಾಡಿದ ಪರಮೇಶ್ವರ್,
“ನಾನು ಹೆಸರು ಇಡಲು ಯಾರಿಗೂ ಕೇಳಿಕೊಂಡಿಲ್ಲ. ಕ್ರೀಡಾಪಟುಗಳು ಸೇರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ನನಗೆ ಗೊತ್ತೇ ಇಲ್ಲದೆ ಈ ನಿರ್ಧಾರ ಆಗಿದೆ. ಒಂದು ಶೆಡ್‌ಗೆ ನನ್ನ ಹೆಸರು ಇಟ್ಟಿದ್ದರೂ ಅದನ್ನು ಸಹಿಸಲ್ಲಾ ಅಂದರೆ, ಎಂಥಾ ಜನ ನೀವು?” ಎಂದು ಬೇಸರ ವ್ಯಕ್ತಪಡಿಸಿದರು.

ಅವರು ತುಮಕೂರಿನ ಕ್ರೀಡಾ ಅಭಿವೃದ್ಧಿ ಕುರಿತು ಮಾತನಾಡುತ್ತ, ಜನವರಿ 16ರಿಂದ 22ರವರೆಗೆ ಕ್ರೀಡಾ ಕೂಟ ನಡೆಯಲಿದ್ದು, 16ರಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ, 22ರಂದು ರಾಜ್ಯಪಾಲರು ಸಮಾರೋಪಕ್ಕೆ ಬರಲಿದ್ದಾರೆ ಎಂದರು. ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ 27 ಕ್ರೀಡೆಗಳು ನಡೆಯಲಿದ್ದು, ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

ಇನ್ನೊಂದು ಮಹತ್ವದ ಘೋಷಣೆಯಲ್ಲಿ, ತುಮಕೂರಿನಲ್ಲಿ 40 ಎಕರೆ ಭೂಮಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುತ್ತಿದ್ದು, ಇನ್ನೊಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಜೊತೆಗೆ, “ತುಮಕೂರಿಗೆ ಮೆಟ್ರೋ ತರಬೇಕೆಂಬ ಸಂಕಲ್ಪ ನನ್ನದು” ಎಂದು ಹೇಳಿದರು.

‘ಈ ಬಂಗಾರ ನಮ್ಮದಲ್ಲ’ ಎಂದ 14 ವರ್ಷದ ಬಾಲಕ… ಲಕ್ಕುಂಡಿಯಲ್ಲಿ ಪ್ರಾಮಾಣಿಕತೆ ಇತಿಹಾಸ, ಸರ್ಕಾರದಿಂದ ಮನೆ–ಜಾಬ್ ಭರವಸೆ

0

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದ ನಿಧಿ ಪತ್ತೆ ಪ್ರಕರಣವನ್ನು ಸಚಿವ ಎಚ್.ಕೆ. ಪಾಟೀಲ್ ‘ದೊಡ್ಡ ಇತಿಹಾಸ ಸೃಷ್ಟಿ’ ಎಂದು ಬಣ್ಣಿಸಿದ್ದಾರೆ.

ಲಕ್ಕುಂಡಿ ರಾಷ್ಟ್ರಕೂಟರು ಮತ್ತು ಚಾಲುಕ್ಯರ ಆಳ್ವಿಕೆಗೆ ಒಳಪಟ್ಟ ಐತಿಹಾಸಿಕ ನಾಡಾಗಿದ್ದು, ಇಲ್ಲಿ ಅನೇಕ ಅದ್ಭುತ ಘಟನೆಗಳು ನಡೆದಿವೆ ಎಂದು ಅವರು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ಪ್ರತೀ ಮಳೆಗಾಲದಲ್ಲಿ ಮುತ್ತು, ರತ್ನ, ಹವಳಗಳು ಸಿಗುವಷ್ಟು ಶ್ರೀಮಂತ ಪರಂಪರೆ ಇದೆ. ಈ ಹಿನ್ನೆಲೆ ಲಕ್ಕುಂಡಿಯನ್ನು ವಿಶ್ವಪಾರಂಪರ್ಯ ಪಟ್ಟಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದ್ದು, ಅದಕ್ಕೆ ಅಗತ್ಯವಿರುವ ಎಲ್ಲಾ ಸಾಮರ್ಥ್ಯವೂ ಲಕ್ಕುಂಡಿಗೆ ಇದೆ ಎಂದು ಅವರು ಸ್ಪಷ್ಟಪಡಿಸಿದರು.

ಎರಡು ದಿನಗಳ ಹಿಂದೆ ಲಕ್ಕುಂಡಿಯಲ್ಲಿ 466 ಗ್ರಾಂ ಬಂಗಾರ ಹಾಗೂ 634 ಗ್ರಾಂ ತಾಮ್ರದ ತಂಬಿಗೆ ಪತ್ತೆಯಾಗಿದ್ದು, ಅದನ್ನು ಜಿಲ್ಲಾಡಳಿತಕ್ಕೆ ಕಾನೂನುಬದ್ಧವಾಗಿ ಒಪ್ಪಿಸಲಾಗಿದೆ. 14 ವರ್ಷದ ಪ್ರಜ್ವಲ್ ರಿತ್ತಿ ಎಂಬ ಬಾಲಕ ಮನೆ ನಿರ್ಮಾಣದ ಸಂದರ್ಭದಲ್ಲಿ ತಂಬಿಗೆ ಕಂಡು ತಕ್ಷಣ ತಾಯಿಗೆ ಮಾಹಿತಿ ನೀಡಿದ್ದು, ನಂತರ ಸಿದ್ದು ಪಾಟೀಲ್ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಆ ಬಾಲಕ ತಂಬಿಗೆಯನ್ನು ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಇಟ್ಟು ಬೀಗ ಹಾಕಿ ಕಾಯ್ದುಕೊಂಡಿದ್ದನು. ನಂತರ ಜಿಲ್ಲಾಡಳಿತ ಕಾನೂನು ಪ್ರಕಾರ ಅದನ್ನು ವಶಕ್ಕೆ ಪಡೆದಿದೆ.

ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತಂದಾಗ, ಬಾಲಕ “ಸರ್ಕಾರಕ್ಕೆ ಕೊಡುತ್ತೇನೆ” ಎಂದು ಹೇಳಿದ ಗುಣವೇ ನಿಧಿಗಿಂತ ದೊಡ್ಡ ಮೌಲ್ಯ ಎಂದು ಮುಖ್ಯಮಂತ್ರಿ ಪ್ರಶಂಸಿಸಿದ್ದಾರೆ. ಪ್ರಜ್ವಲ್ ಈ ಮೂಲಕ ಗದಗ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಎಂದು ಸಚಿವರು ಹೇಳಿದರು.

ಸಚಿವ ಎಚ್.ಕೆ. ಪಾಟೀಲ್ ಲಕ್ಕುಂಡಿಯ ನಿಧಿ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಸ್ತೂರವ್ವ ರಿತ್ತಿ ಕುಟುಂಬಕ್ಕೆ ಭೇಟಿ ನೀಡಿ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಲಕ್ಕುಂಡಿ ಗ್ರಾಮದ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲಾಡಳಿತದ ವತಿಯಿಂದ ಕಸ್ತೂರವ್ವ ರಿತ್ತಿ ಮತ್ತು ಪ್ರಜ್ವಲ್ ರಿತ್ತಿಗೆ ಸನ್ಮಾನ ನೆರವೇರಿಸಿದ್ದಾರೆ. ಪ್ರಜ್ವಲ್ ಮೇಲೆ ಹೂವಿನ ಸುರಿಮಳೆಗೈದು ಗೌರವ ಸಲ್ಲಿಸಿದ್ದು, ಬಳಿಕ ಕುಟುಂಬವನ್ನು ಪಕ್ಕದಲ್ಲಿ ಕೂರಿಸಿಕೊಂಡು ಸುದ್ದಿಗೋಷ್ಠಿ ನಡೆಸಿದರು.

ಈ ನಿಧಿಯನ್ನು ಕಾನೂನುಬದ್ಧವಾಗಿ ಎಲ್ಲಿ ಇರಿಸಬೇಕು ಎಂಬ ಕುರಿತು ಚರ್ಚೆ ನಡೆಯುತ್ತಿದೆ. ಪ್ರಜ್ವಲ್ ಕುಟುಂಬಕ್ಕೆ ವಿಶೇಷ ನೆರವು ನೀಡುವಂತೆ ಗ್ರಾಮದ ಹಿರಿಯರು ಮನವಿ ಸಲ್ಲಿಸಿದ್ದು, ಮನೆ, ಜಾಗ ಹಾಗೂ ತಾಯಿಗೆ ಉದ್ಯೋಗ ನೀಡುವ ಬೇಡಿಕೆ ಇಟ್ಟಿದ್ದಾರೆ. ಈ ಮೂರು ವಿಷಯಗಳನ್ನು ಮುಖ್ಯಮಂತ್ರಿ ಜೊತೆ ಚರ್ಚಿಸಿ, ಸಂಪುಟ ಸಭೆಯಲ್ಲಿ ಮಂಡಿಸಿ ನಾಳೆ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಲಕ್ಕುಂಡಿಯಲ್ಲಿ ಇದುವರೆಗೂ 1100ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಗ್ರಾಮಸ್ಥರು ಸರ್ಕಾರಕ್ಕೆ ನೀಡಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ದಾಖಲೆ ಎಂದು ಸಚಿವರು ಹೇಳಿದರು. ಅದಕ್ಕೆ ಕಿರೀಟವೆಂಬಂತೆ ಈಗ ನಿಧಿಯನ್ನೂ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಉತ್ಖನನ ಕಾರ್ಯ ಆರಂಭವಾಗಲಿದೆ. ಈಗಾಗಲೇ 16 ದೇವಸ್ಥಾನ ಮತ್ತು ಬಾವಿಗಳನ್ನು ರಕ್ಷಿತ ಸ್ಮಾರಕಗಳಾಗಿ ಸರ್ಕಾರ ಘೋಷಿಸಿದೆ. 165 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ, ಆರು ದೇವಸ್ಥಾನಗಳ ಅಭಿವೃದ್ಧಿ ಪ್ರಗತಿಯಲ್ಲಿ ಇದೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣದಲ್ಲಿ ತಪ್ಪು ಮಾಹಿತಿಯಿಂದ ಕೆಲ ಗೊಂದಲ ಉಂಟಾಗಿದ್ದರೂ, ಜಿಲ್ಲಾಧಿಕಾರಿಗಳು ಅದನ್ನು ಬಗೆಹರಿಸಿದ್ದಾರೆ. ಕಾನೂನು ಪ್ರಕಾರ ಕುಟುಂಬಕ್ಕೆ ಯಾವ ನೆರವು ಕೊಡಬೇಕು, ಅದನ್ನೆಲ್ಲ ಮಾಡಲಾಗುತ್ತದೆ. ಪ್ರಾಮಾಣಿಕತೆಗೆ ಗೌರವ ನೀಡುವ ಉದ್ದೇಶದಿಂದ ಮನೆ ಮತ್ತು ಉದ್ಯೋಗ ನೀಡುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಎಚ್.ಕೆ. ಪಾಟೀಲ್ ಹೇಳಿದರು. ಹೂವಿನ ಹಾರ ಕಟ್ಟಿಕೊಂಡು ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಈ ಬಡ ಕುಟುಂಬ, ಇಂತಹ ಸ್ಥಿತಿಯಲ್ಲಿಯೂ ‘ಈ ಬಂಗಾರ ನಮ್ಮದಲ್ಲ’ ಎಂದು ಸರ್ಕಾರಕ್ಕೆ ಒಪ್ಪಿಸಿದ್ದು, ಅವರ ಪ್ರಾಮಾಣಿಕತೆಗೆ ಸಂಪೂರ್ಣ ಗೌರವ ನೀಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಜಿಬಿಎ ಪಾಲಿಕೆ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

0

ಬೆಂಗಳೂರು:“ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಪಾಲಿಕೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗಡುವು ನೀಡಿರುವ ಬಗ್ಗೆ ಕೇಳಿದಾಗ, “ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ” ಎಂದು ತಿಳಿಸಿದರು.

ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಳಿದಾಗ, “ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ.

ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ. ಇದನ್ನು ನಾನು ಗಮನಿಸಿಲ್ಲ. ಇದನ್ನು ಪರಿಶೀಲಿಸಿ ತಪ್ಪಾಗಿದ್ದರೆ ಸರಿಪಡಿಸಲು ಅವರಿಗೆ ಸೂಚಿಸಲಾಗುವುದು. ನಾವು ಯಾವುದರಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.ಚುನಾವಣೆ ನಡೆಸಲು ನ್ಯಾಯಾಲಯದ ಬಳಿ ಕಾಲಾವಕಾಶ ಕೇಳುತ್ತೀರಾ ಎಂದು ಕೇಳಿದಾಗ, “ಇಲ್ಲ, ನಾವು ಯಾವುದೇ ಕಾಲಾವಕಾಶ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಕಲಬುರಗಿ ಸೆಂಟ್ರಲ್ ಜೈಲಿಗೆ ನಿಷೇಧಿತ ವಸ್ತು ಎಸೆಯಲು ಯತ್ನ: ಮೂವರ ಬಂಧನ

0

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲಿನೊಳಗೆ ಅಕ್ರಮವಾಗಿ ಬೀಡಿ, ಸಿಗರೇಟ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಮೂವರನ್ನು ಜೈಲು ಭದ್ರತಾ ಪಡೆ ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.

ಜೈಲಿನೊಳಗೆ ಬಿಡಿ, ಸಿಗರೇಟ್ ಮತ್ತು ಇತರೆ ಪ್ಯಾಕ್ ಮಾಡಿದ ವಸ್ತುಗಳನ್ನು ಎಸೆಯುವ ಉದ್ದೇಶದಿಂದ ಮೂವರು ವ್ಯಕ್ತಿಗಳು ಜೈಲು ಆವರಣದ ಬಳಿ ಬಂದಿದ್ದರು. ಜೈಲು ಕಾಂಪೌಂಡ್ ಮೇಲಿಂದ ವಸ್ತುಗಳನ್ನು ಎಸೆಯಲು ಯತ್ನಿಸುವಾಗ ಜೈಲು ಭದ್ರತಾ ಪಡೆ ಗಮನಿಸಿ ತಕ್ಷಣ ವಶಕ್ಕೆ ಪಡೆದುಕೊಂಡಿದೆ.

ಬಂಧಿತರನ್ನು ಪಿಂಟು, ಅನಿಲ್ ಹಾಗೂ ವಿಜಯ್ ಜಾಧವ್ ಎಂದು ಗುರುತಿಸಲಾಗಿದೆ. ಮೂವರೂ ಕಲಬುರಗಿ ನಗರದ ಬಸವ ನಗರ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಲು ಭದ್ರತೆಗೆ ನಿಯೋಜನೆಯಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಮೂವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ವಿಚಾರಣೆ ನಡೆಸಿದ್ದಾರೆ. ನಂತರ ಬಂಧಿತ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಫರಹತಬಾದ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಫರಹತಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು!

0

ತುಮಕೂರು: ಜಿಲ್ಲೆಯ ಏಕೈಕ ಜಿಲ್ಲಾ ಮಟ್ಟದ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್  ಹೆಸರು ನಾಮಕರಣ ಮಾಡಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಹಾತ್ಮಾ ಗಾಂಧೀಜಿ ಹೆಸರಿನ ಬದಲಿಗೆ ಡಾ.ಜಿ.ಪರಮೇಶ್ವರ ಹೆಸರು ಇಟ್ಟಿರುವುದನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಈ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲಾಗಿದೆ. ಹೊರಾಂಗಣ ಕ್ರೀಡಾಂಗಣದ ಮುಂಭಾಗದಲ್ಲೇ ಒಳಾಂಗಣ ಸ್ಟೇಡಿಯಂ ಇದ್ದು, ಇದುವರೆಗೆ ಪ್ರತ್ಯೇಕ ನಾಮಫಲಕ ಇಲ್ಲದಿದ್ದರೂ ಅದನ್ನು ‘ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂ’ ಎಂದೇ ಕರೆಯಲಾಗುತ್ತಿತ್ತು.

ಆದರೆ ಮೂರು ದಿನಗಳ ಹಿಂದೆ ದಿಢೀರ್ ಆಗಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಹೆಸರನ್ನು ‘ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ’ ಎಂದು ನಾಮಫಲಕ ಅಳವಡಿಸಲಾಗಿದೆ. ಇದರಿಂದ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ.

ಈ ವಿಚಾರ ವಿರೋಧಿಸಿ ಸೋಮವಾರ ಸಂಜೆ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕ್ರೀಡಾಂಗಣದ ಬಳಿ ಧರಣಿ ಕುಳಿತರು. ಪರಮೇಶ್ವರ್ ಹೆಸರಿನ ನಾಮಫಲಕ ತೆರವುಗೊಳಿಸಲು ಯತ್ನಿಸಿದ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಬ್ಯಾರಿಕೇಡ್‌ಗಳನ್ನು ತಳ್ಳಿ ಒಳನುಗ್ಗಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ಬಳಿಕ ಪೊಲೀಸರು ಬಿಜೆಪಿ ಮುಖಂಡರು ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಈ ಸಂದರ್ಭ ಬಿಜೆಪಿ ಶಾಸಕ ಸುರೇಶ್ ಗೌಡ ಮಾತನಾಡಿ, ಇದು ಗೃಹ ಸಚಿವರ ಹಿಂಬಾಲಕರನ್ನು ಮೆಚ್ಚಿಸಲು ಮಾಡಿರುವ ಕಾರ್ಯ ಎಂದು ಆರೋಪಿಸಿದರು. ಈ ತಪ್ಪನ್ನು ಪರಮೇಶ್ವರ್ ಅವರೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಸ್ಥಳೀಯ ಸಂಸ್ಥೆ ಅಥವಾ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಠರಾವು ಪಡೆಯದೇ ಹೆಸರು ಬದಲಾವಣೆ ಮಾಡಿರುವುದು ಸರಿಯಲ್ಲ ಎಂದರು.

ಇದೇ ತಿಂಗಳ 16ರಿಂದ ಇದೇ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಸರ್ಕಾರದ ಸ್ಪಷ್ಟ ಆದೇಶ ಇಲ್ಲದಿದ್ದರೂ ಅಧಿಕಾರಿಗಳು ಆತುರದಲ್ಲಿ ಮಹಾತ್ಮಾ ಗಾಂಧೀಜಿ ಹೆಸರನ್ನು ಬದಲಿಸಿ ಡಾ.ಜಿ.ಪರಮೇಶ್ವರ ಹೆಸರಿನ ನಾಮಫಲಕ ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ ಮಧ್ಯಪ್ರವೇಶಿಸಿ ವಿವಾದಕ್ಕೆ ತೆರೆ ಎಳೆಯಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ಮುಂದೆ 7 ಗಂಟೆ ವಿಚಾರಣೆಗೆ ಹಾಜರಾದ ನಟ ವಿಜಯ್

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಸೋಮವಾರ (ಜ.12) ಸಿಬಿಐ ಮುಂದೆ ವಿಚಾರಣೆಗೆ ಹಾಜರಾದರು. ಈ ವೇಳೆ ಅಧಿಕಾರಿಗಳು ಅವರನ್ನು ಏಳು ಗಂಟೆಗಳಿಗೂ ಅಧಿಕ ಕಾಲ ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ.

ಸಿಬಿಐ ಅಧಿಕಾರಿಗಳು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ವಿಜಯ್ ತಮ್ಮ ಪಕ್ಷ ಹಾಗೂ ಪಕ್ಷದ ಕಾರ್ಯಕರ್ತರು ಘಟನೆಗೆ ಕಾರಣರಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಕಾಲ್ತುಳಿತದ ಬಳಿಕ ನಾನು ಅಲ್ಲಿಯೇ ಉಳಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಎಂಬ ಕಾರಣಕ್ಕೆ ಸ್ಥಳದಿಂದ ತೆರಳಿದ್ದೆ ಎಂದು ಅವರು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ವಿಜಯ್ ನೀಡಿದ ಹೇಳಿಕೆಯನ್ನು ಸಿಬಿಐ ಅಧಿಕೃತವಾಗಿ ದಾಖಲಿಸಿಕೊಂಡಿದೆ.

ವಿಜಯ್ ಆಗಮನದ ಹಿನ್ನೆಲೆಯಲ್ಲಿ ಸಿಬಿಐ ಕಚೇರಿ ಎದುರು ಭಾರಿ ಭದ್ರತೆ ಏರ್ಪಡಿಸಲಾಗಿತ್ತು. ಆದರೂ ಅಭಿಮಾನಿಗಳು ಪ್ರತಿಭಟನೆ ನಡೆಸಿ ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಸೋಮವಾರ ಬೆಳಿಗ್ಗೆ 10:30ರ ಸುಮಾರಿಗೆ ವಿಜಯ್ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದರು.

ಕಳೆದ ವರ್ಷ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಪಕ್ಷ ಆಯೋಜಿಸಿದ್ದ ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ನೀಡಿತ್ತು.

ಈ ನಡುವೆ ‘ಜನನಾಯಗನ್’ ಚಿತ್ರದ ಬಿಡುಗಡೆ ಕುರಿತ ವಿವಾದವೂ ಮುಂದುವರಿದಿದ್ದು, ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ತುರ್ತು ವಿಚಾರಣೆ ನಡೆಸುವಂತೆ ಚಿತ್ರದ ನಿರ್ಮಾಪಕರು ನ್ಯಾಯಾಲಯ ಮೊರೆ ಹೋಗಿದ್ದಾರೆ.

ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು: ಸಂತಾಪ ಸೂಚಿಸಿದ ಸಚಿವ ಈಶ್ವರ ಖಂಡ್ರೆ

0

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 40 ವರ್ಷದ ಮಹಿಳೆಯ ಜೀವ ಹೋದ ಸುದ್ದಿ ತಿಳಿದ ಸಚಿವ ಈಶ್ವರ ಖಂಡ್ರೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ತಕ್ಷಣ ಕಾರ್ಯಾಚರಣೆಗೆ ಇಳಿಯುವಂತೆ ಕಠಿಣ ಸೂಚನೆ ನೀಡಿದ್ದಾರೆ.

ಆನೆಯನ್ನು ತಕ್ಷಣವೇ ಮರಳಿ ಕಾಡಿಗೆ ಕಳುಹಿಸುವುದು ಅಥವಾ ಸೆರೆಗೆ ಪಡೆಯುವಂತೆ ವನ್ಯಜೀವಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಸನದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಬೇಕು ಎಂದು ಆದೇಶಿಸಲಾಗಿದೆ.

“ಹೋದ ಜೀವ ಮರಳಿ ತರಲು ಸಾಧ್ಯವಿಲ್ಲ, ಆದರೆ ಕುಟುಂಬಕ್ಕೆ ಸರ್ಕಾರ ಆಸರೆಯಾಗಬೇಕು” ಎಂದು ಸಚಿವರು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಆನೆ ಕಾರ್ಯಪಡೆ ನಿಯೋಜನೆ, ಎಚ್ಚರಿಕೆ ಸಂದೇಶ ಮತ್ತು ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಬಿಎಂಐಸಿ ಯೋಜನೆ ಮರುಪರಿಶೀಲನೆಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

0

ಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.

ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ಪರಿಹಾರ ವಿತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರಿನ ಮಾರಪ್ಪ ಗಾರ್ಡನ್ ನಿವಾಸಿ ಚಂದ್ರಿಕಾ ಸಲ್ಲಿಸಿದ್ದ ಅರ್ಜಿಯನ್ನು, ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಅರ್ಜಿದಾರರು ಈಗಾಗಲೇ ಪರಿಹಾರ ಪಡೆದಿರುವುದನ್ನು ಗಮನಿಸಿ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ನ್ಯಾಯಪೀಠ, ಬಿಎಂಐಸಿ ಯೋಜನೆಯಡಿ ಫೆರಿಫೆರಲ್ ರಸ್ತೆಗಳು ಹಾಗೂ ಟೋಲ್ ಪ್ಲಾಜಾಗಳನ್ನು ನಿರ್ಮಿಸಿ ಭಾರಿ ಪ್ರಮಾಣದ ಸುಂಕ ಸಂಗ್ರಹಿಸಲಾಗುತ್ತಿದೆ. ಆದರೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಹಾಗೂ ಮೂಲಸೌಕರ್ಯ ಕಾರಿಡಾರ್ ಯೋಜನೆ ಕೇವಲ ಕಾಗದಗಳಲ್ಲೇ ಉಳಿದಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಯೋಜನಾ ನಿರ್ಮಾಣಕಾರರು ದೊಡ್ಡ ಪ್ರಮಾಣದ ಭೂಮಿಯನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದರೂ, ಎಕ್ಸ್‌ಪ್ರೆಸ್‌ವೇ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಭವಿಷ್ಯದಲ್ಲಿಯೂ ಅದನ್ನು ಪೂರ್ಣಗೊಳಿಸುವ ಯಾವುದೇ ಸ್ಪಷ್ಟ ಸೂಚನೆ ಇಲ್ಲ. ಭೂಮಿ ಸಮರ್ಪಕವಾಗಿ ಬಳಸಲಾಗದೇ ಇರುವುದೇ ಇದಕ್ಕೆ ಕಾರಣ ಎಂದು ಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ಯೋಜನೆಯನ್ನು ಮರುಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ನಗರದ ಜನದಟ್ಟಣೆ ಕಡಿಮೆ ಮಾಡುವುದು, ಉತ್ತಮ ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ಮತ್ತು ವ್ಯಾಪಾರ ಹಾಗೂ ವೃತ್ತಿಪರರಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಬಿಎಂಐಸಿ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಈ ಉದ್ದೇಶಗಳು ಈಡೇರದೇ ದೂರದ ಕನಸಾಗಿಯೇ ಉಳಿದಿವೆ ಎಂದು ಪೀಠ ತಿಳಿಸಿದೆ. ಟೋಲ್ ಪ್ಲಾಜಾ ಮತ್ತು ಫೆರಿಫೆರಲ್ ರಸ್ತೆಗಳ ಹೊರತು, ಸುಮಾರು 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್ ಎಕ್ಸ್‌ಪ್ರೆಸ್‌ವೇ ಮಾತ್ರ ನಿರ್ಮಾಣವಾಗಿದೆ ಎಂದು ನ್ಯಾಯಪೀಠ ಉಲ್ಲೇಖಿಸಿದೆ.

ಪಿಟಿಆರ್ ಅಡಿಯಲ್ಲಿ ಕಲ್ಪಿಸಲಾದ ನಗರ ದಟ್ಟಣೆ ಕಡಿಮೆ ಮಾಡುವ ಭವಿಷ್ಯಮುಖಿ ಪರಿಕಲ್ಪನೆ ವಿಫಲವಾಗಿದೆ. ಒಪ್ಪಂದವೂ ಯಶಸ್ವಿಯಾಗಿಲ್ಲ. ಇಂತಹ ಸ್ಥಿತಿಯಲ್ಲಿ ಯೋಜನೆಯನ್ನು ಜೀವಂತವಾಗಿಡುವ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದ ಪೀಠ, ನಗರ, ನಾಗರಿಕರು, ಪರಿಸರ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಹಳೆಯ ಯೋಜನೆಯನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಅಗತ್ಯವಿದ್ದರೆ ಹಳೆಯ ಯೋಜನೆಯನ್ನು ಕೈಬಿಟ್ಟು ಹೊಸ ಯೋಜನೆ ರೂಪಿಸುವುದೇ ಉತ್ತಮ ಎಂದು ಸರ್ಕಾರಕ್ಕೆ ಸಲಹೆ ನೀಡಿದೆ.

ಇಂದಿನ ಬೆಂಗಳೂರು ನಗರದ ಜನಸಂಖ್ಯೆ 1.40 ಕೋಟಿಗೂ ಅಧಿಕವಾಗಿದೆ. ದಿನನಿತ್ಯದ ಸಂಚಾರ ದಟ್ಟಣೆ, ಮೂಲಸೌಕರ್ಯಗಳ ಕುಸಿತ ಹಾಗೂ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ಗಮನಿಸಿದರೆ, ರಾಜ್ಯ ಸರ್ಕಾರವು ನಗರದ ಜೀವನ ಪರಿಸ್ಥಿತಿಗಳನ್ನು ಸುಧಾರಿಸಲು ಹೊಸ ಮತ್ತು ಪರಿಣಾಮಕಾರಿ ಯೋಜನೆಗಳ ಬಗ್ಗೆ ತಕ್ಷಣ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

error: Content is protected !!