Home Blog Page 19

ಸೇತುವೆ ಕಾಮಗಾರಿ ತ್ವರಿತಗೊಳಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದ ಸಮೀಪ ಗದಗ-ಲಕ್ಷ್ಮೇಶ್ವರ ಸಂಪರ್ಕ ಕಲ್ಪಿಸುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿ 41 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಶಿವರಾಜಗೌಡ ಪಾಟೀಲ ಆಗ್ರಹಿಸಿದ್ದಾರೆ.

ಮಳೆಗಾಲದಲ್ಲಿ ಹಳ್ಳದ ನೀರು ಸೇತುವೆ ಮೇಲೆ ಹರಿದು ವಾಹನ ಸವಾರರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಿರು ಸೇತುವೆ ನಿರ್ಮಾಣ ಕಾರ್ಯ ಆರಂಭಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸೇತುವೆ ಪಕ್ಕದ ಕಚ್ಚಾ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ. ಮಳೆ ಬಂದರೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿರುವುದರಿಂದ ಗುತ್ತಿಗೆದಾರರು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಚಿವಗಿರಿಯ ಕನಸಿಗೆ ಅಭಿಮಾನಿಯ ಹರಕೆ

0

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಸಮೀಪದ ಜಕ್ಕಲಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಶಿವರಾಜ ಮುಗಳಿ ವಿಶೇಷ ಹರಕೆ ಹೊತ್ತಿದ್ದಾರೆ.

ಜಿ.ಎಸ್. ಪಾಟೀಲರು ಸಚಿವರಾಗುವವರೆಗೆ ಗಡ್ಡ, ಮೀಸೆ ಹಾಗೂ ತಲೆಯ ಕೂದಲನ್ನು ಕತ್ತರಿಸಿಕೊಳ್ಳುವುದಿಲ್ಲ ಎಂದು ಸಂಕಲ್ಪ ಮಾಡಿರುವ ಶಿವರಾಜ ಮುಗಳಿ, ಬಳಿಕ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಹರಕೆ ತೀರಿಸುವುದಾಗಿ ತಿಳಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿ, ರೈತರ ಸಮಸ್ಯೆಗಳ ಪರಿಹಾರ ಹಾಗೂ ಜನಸಂಪರ್ಕದ ಮೂಲಕ ಜನರ ವಿಶ್ವಾಸ ಗಳಿಸಿದ್ದು, ಸಚಿವ ಸ್ಥಾನಕ್ಕೆ ಅರ್ಹರು ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ರೋಣ ಕ್ಷೇತ್ರದಲ್ಲಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ವಿವಿಧ ರೀತಿಯಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ.

ಪರಿಸರದ ಮೇಲಿನ ಅತಿಕ್ರಮಣ ನಿಲ್ಲಲಿ: ಡಾ. ಎಸ್.ಸಿ. ಚವಡಿ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪರಿಸರದ ಮೇಲೆ ಮಾನವನು ಮಾಡುತ್ತಿರುವ ಅತಿಕ್ರಮಣದಿಂದ ಪ್ರಕೃತಿ ಹಾನಿಗೊಳಗಾಗಿ ಮಾನವ ಬದುಕಿನ ಮೇಲೆಯೇ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಡಾ. ಎಸ್.ಸಿ. ಚವಡಿ ಹೇಳಿದರು.

ಪಟ್ಟಣದ ಎಸ್‌ಜೆಜೆಎಂ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಕೈಗಾರಿಕರಣ, ಯಾಂತ್ರೀಕರಣ, ಪ್ಲಾಸ್ಟಿಕ್ ಬಳಕೆ ಹಾಗೂ ಪರಿಸರ ಮಾಲಿನ್ಯದಿಂದ ಪ್ರಕೃತಿಗೆ ಹಾನಿಯಾಗುತ್ತಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪುನಿತ ಓಲೇಕಾರ ಮಾತನಾಡಿ, ಪರಿಸರ ಸಂರಕ್ಷಣೆ ಸಂಸ್ಥೆಯ ಪ್ರಮುಖ ಉದ್ದೇಶವಾಗಿದ್ದು, ಪರಿಸರ ಉಳಿವಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಂತಾ ಬೆನಕನಹಳ್ಳಿ, ಪ್ರಕಾಶ ಮದ್ದಿನ, ಎ.ಎಂ. ಅಂಗಡಿ, ಇ.ಎಂ. ಗುಳೆದಗುಡ್ಡ, ವೀರುಪಾಕ್ಷಪ್ಪ ಕಣವಿ, ಶೈಲಾ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗಿಡಮರಗಳೇ ಜೀವ ಸಂಕುಲದ ಉಸಿರು: ಶಿವನಗೌಡ ಗೌಡರ

0

ವಿಜಯಸಾಕ್ಷಿ ಸುದ್ದಿ, ಗದಗ: “ಗಿಡಮರಗಳು ವಿಶ್ವದ ಸಕಲ ಜೀವರಾಶಿಗಳ ಜೀವಾಳವಾಗಿದ್ದು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ನಿವೃತ್ತ ಪ್ರಾಧ್ಯಾಪಕ ಶಿವನಗೌಡ ಗೌಡರ ಹೇಳಿದರು.

ನಗರದ ಬಸವ ಯೋಗ ಮಹಾವಿದ್ಯಾಲಯ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಲಿಂಬೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ನಾಶದಿಂದ ಭವಿಷ್ಯದಲ್ಲಿ ಮಾನವ ಸಂಕುಲ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು, “ಹಸಿರೇ ಉಸಿರು” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿದ್ಯಾ ಬಿ. ಸ್ವಾಮಿ ಪರಿಸರ ಸಂರಕ್ಷಣೆಯಲ್ಲಿ ರೈತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಂ. ವ್ಹಿ. ಐಹೊಳಿ, ಸಸಿ ನೆಡುವುದರ ಜೊತೆಗೆ ಅವುಗಳನ್ನು ಪೋಷಿಸಿ ಬೆಳೆಸುವ ಕಾರ್ಯವೂ ಅಗತ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಕೆ.ಎಸ್. ಪಲ್ಲೇದ, ಬಿ.ಬಿ. ಇಬ್ರಾಹಿಂಪೂರ, ವಿಜಯಲಕ್ಷ್ಮೀ ಆನೆಹೊಸೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಖೇತ ಬಚಾವೊ” ಅಭಿಯಾನಕ್ಕೆ ರೈತರ ಸ್ಪಂದನೆ

0

ವಿಜಯಸಾಕ್ಷಿ ಸುದ್ದಿ, ಗದಗ: 2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಪೂರ್ವಸಿದ್ಧತೆ ಅಂಗವಾಗಿ “ಕೃಷಿ ಭೂಮಿ ಉಳಿಸಿ ಮತ್ತು ಜಮೀನು ಸಂರಕ್ಷಿಸಿ” (ಖೇತ ಬಚಾವೊ) ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಆತ್ಮ ಯೋಜನೆ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಜೂನ್ 1ರಿಂದ 30ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಅಭಿಯಾನದ ಅಂಗವಾಗಿ ಜೂನ್ 8ರಂದು ಮುಂಡರಗಿ ತಾಲೂಕಿನ ಕದಾಂಪೂರ ಹಾಗೂ ಚುರ್ಚಿಹಾಳ, ಗದಗ ತಾಲೂಕಿನ ಹೊಸಳ್ಳಿ ಮತ್ತು ಬೆಳಧಡಿ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ಪಶು ಸಖಿಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪ್ರಗತಿಪರ ರೈತರು ಭಾಗವಹಿಸಿದ್ದರು.

ರೈತರಿಗೆ ಬೀಜೋಪಚಾರ, ಮಣ್ಣಿನ ಸಂರಕ್ಷಣೆ, ನೈಸರ್ಗಿಕ ಕೃಷಿ, ಪರ್ಯಾಯ ಬೆಳೆ ಪದ್ಧತಿ, ಜೈವಿಕ ಗೊಬ್ಬರ ಬಳಕೆ, ಕೊಟ್ಟಿಗೆ ಗೊಬ್ಬರ, ಸಾವಯವ ಗೊಬ್ಬರ ಹಾಗೂ ಎರೆಹುಳು ಗೊಬ್ಬರ ಬಳಕೆಯ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ಕಡಿಮೆ ಅಡುಗೆ ಎಣ್ಣೆ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ಲಾಭಗಳ ಬಗ್ಗೆಯೂ ಜಾಗೃತಿ ಮೂಡಿಸಲಾಯಿತು.

ರಸಗೊಬ್ಬರಗಳನ್ನು ಸಮತೋಲಿತವಾಗಿ ಬಳಸುವ ಮೂಲಕ ಜಮೀನು ಮತ್ತು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದರು. ಇದೇ ವೇಳೆ ಬೀಜೋಪಚಾರದ ಪ್ರಾತ್ಯಕ್ಷಿಕೆ ನಡೆಸಿ ರೈತರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯಿಂದ ಉದ್ದಿನ ಕಾಳಿನ ಮಿನಿ ಕಿಟ್‌ಗಳನ್ನು ವಿತರಿಸಲಾಗಿದ್ದು, ಬಿತ್ತನೆ ಕುರಿತ ಮಾರ್ಗದರ್ಶನ ನೀಡಲಾಯಿತು. ಜಿಲ್ಲೆಯ ವಿವಿಧ ಗ್ರಾಮಗಳ 300ಕ್ಕೂ ಹೆಚ್ಚು ರೈತರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ರೈತರ ಹಿತ ಕಾಪಾಡುವ ಸಂಘಗಳೇ ನಿಜವಾದ ಶಕ್ತಿ: ಅಂಬಾಡಿ ಮಹೇಶ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಯಾವುದೇ ಸಂಘ-ಸಂಸ್ಥೆಗಳು ಕೇವಲ ಸದಸ್ಯರ ಹಿತಕ್ಕಷ್ಟೇ ಸೀಮಿತವಾಗದೆ ರೈತರ ಹಾಗೂ ಸಮಾಜದ ಹಿತವನ್ನು ಕಾಪಾಡುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಆಹಾರ ಧಾನ್ಯ ವರ್ತಕರ ಸಂಘದ ನೂತನ ಅಧ್ಯಕ್ಷ ಅಂಬಾಡಿ ಮಹೇಶ್ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ಆಹಾರ ಧಾನ್ಯ ವರ್ತಕರ ಸಂಘದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಘಟನೆಗಳು ಸದುದ್ದೇಶ ಮತ್ತು ಒಗ್ಗಟ್ಟಿನ ಮೂಲಮಂತ್ರದೊಂದಿಗೆ ಕೆಲಸ ಮಾಡಿದಾಗ ಮಾತ್ರ ಯಾವುದೇ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದರು.

ವ್ಯಾಪಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಜಾಣ್ಮೆಯಿಂದ ನಿಭಾಯಿಸುವ ಸಾಮರ್ಥ್ಯ ಪ್ರತಿಯೊಬ್ಬ ವರ್ತಕರಲ್ಲಿರಬೇಕು. ಪಟ್ಟಣದಲ್ಲಿ ಬಲಿಷ್ಠ ಚೇಂಬರ್ ಆಫ್ ಕಾಮರ್ಸ್ ಇದ್ದು, ಅದು ಎಲ್ಲಾ ವ್ಯಾಪಾರಿಗಳ ಹಿತವನ್ನು ಕಾಪಾಡಲು ಸದಾ ಸಿದ್ಧವಾಗಿದೆ. ಹಿರಿಯ ವರ್ತಕರ ಅನುಭವ ಮತ್ತು ಮಾರ್ಗದರ್ಶನದಿಂದ ಸಂಘ ಇನ್ನಷ್ಟು ಯಶಸ್ಸಿನ ಹಾದಿಯಲ್ಲಿ ಸಾಗಲಿದೆ ಎಂದು ತಿಳಿಸಿದರು.

ಚೇಂಬರ್ ಆಫ್ ಕಾಮರ್ಸ್‌ನ ಹಿರಿಯ ವರ್ತಕರಾದ ಅಕ್ಕಿ ಶಿವಣ್ಣ ಮಾತನಾಡಿ, ಪಟ್ಟಣದ ಇತರೆ ಸಂಘಗಳಿಗಿಂತ ಆಹಾರ ಧಾನ್ಯ ವರ್ತಕರ ಸಂಘ ಹೆಚ್ಚು ಒಗ್ಗಟ್ಟನ್ನು ಹೊಂದಿದ್ದು, ಹಿರಿಯ ವರ್ತಕರ ಪರಿಶ್ರಮದಿಂದಲೇ ಈ ಹಂತಕ್ಕೆ ಬೆಳೆದಿದೆ ಎಂದು ಹೇಳಿದರು.

ನಿಕಟ ಪೂರ್ವ ಉಪಾಧ್ಯಕ್ಷ ಬಸವರಾಜ್ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಶ್ರಮ, ಶಿಸ್ತು ಮತ್ತು ಗುರಿ ಮುಖ್ಯ. ಉದಯಿಸುವ ಸೂರ್ಯ, ಓಡುವ ಸಪ್ತ ಕುದುರೆಗಳು, ದುಡಿಯುವ ಕತ್ತೆ ಹಾಗೂ ನರಿಗಳ ಚಿತ್ರಗಳು ಜೀವನದ ಪಾಠಗಳನ್ನು ಸಾರುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ವರ್ತಕರನ್ನು ನೂತನ ಅಧ್ಯಕ್ಷ ಅಂಬಾಡಿ ಮಹೇಶ್ ಹಾಗೂ ನಿಕಟ ಪೂರ್ವ ಅಧ್ಯಕ್ಷ ಶ್ರೀಧರ ಶೆಟ್ರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಉಪಾಧ್ಯಕ್ಷ ಒಂಟಿಗೋಡಿ ಕಲ್ಲೇಶ್, ಖಜಾಂಚಿ ಚಿಂತರಪಳ್ಳಿ ಪ್ರಕಾಶ್, ಬಂಡಿಹಳ್ಳಿ ರಾಮಣ್ಣ, ಗಂಗಾವತಿ ಸುದರ್ಶನ್, ಎಪಿಎಂಸಿ ಕಾರ್ಯದರ್ಶಿ ಎನ್. ಶೈಲಜಾ, ಬಾದಾಮಿ ರಾಜಣ್ಣ, ಬಾದಾಮಿ ಪ್ರಭು, ಉಲವತ್ತಿ ಬಸಣ್ಣ, ಪೋತಗುಳಿ ನಾಗರಾಜ, ಕೆ. ದೇವೇಂದ್ರ ಸೇರಿದಂತೆ ಅನೇಕ ವರ್ತಕರು ಹಾಗೂ ರೈತರು ಭಾಗವಹಿಸಿದ್ದರು.

ಶಾರದಾ ಮಂಜುನಾಥ್ ಪ್ರಾರ್ಥಿಸಿದರು. ದೇವರೆಡ್ಡಿ ಸ್ವಾಗತ ಹಾಗೂ ನಿರೂಪಣೆ ನೆರವೇರಿಸಿದರು.

“ವ್ಯಾಪಾರ ದ್ರೋಹದ ಚಿಂತನೆ ಆಗದೆ, ದ್ರವ್ಯ ಸೃಷ್ಟಿಯ ಚಿಂತನೆ ಆಗಬೇಕು”
ಅಂಬಾಡಿ ಮಹೇಶ್

ಕೆಪಿಎಸ್‌ಗೆ ಮಾತ್ರ ಶಿಕ್ಷಕರ ನೇಮಕಕ್ಕೆ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವ ರಾಜ್ಯ ಸರ್ಕಾರ, ಎಲ್ಲ ಹುದ್ದೆಗಳನ್ನೂ ಕೇವಲ ಕೆಪಿಎಸ್ ಶಾಲೆಗಳಿಗೆ ಮೀಸಲಿಟ್ಟಿರುವುದನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಎಐಡಿಎಸ್ಓ ಗದಗ ಜಿಲ್ಲಾ ಸಂಚಾಲಕಿ ಎಂ. ಶಾಂತಿ, ಇತ್ತೀಚೆಗೆ ನೇಮಕಗೊಂಡ 11 ಸಾವಿರ ಅತಿಥಿ ಶಿಕ್ಷಕರ ಹುದ್ದೆಗಳಲ್ಲೂ ಕೆಪಿಎಸ್ ಶಾಲೆಗಳಿಗೆ ಪ್ರಧಾನ ಆದ್ಯತೆ ನೀಡಲಾಗಿದೆ. ವರ್ಗಾವಣೆ ಪ್ರಕ್ರಿಯೆಯಲ್ಲೂ ಇದೇ ಧೋರಣೆ ಮುಂದುವರಿದಿದೆ ಎಂದು ಆರೋಪಿಸಿದ್ದಾರೆ.

ದಶಕಗಳಿಂದ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಕಡೆಗಣಿಸಿ, ಇತ್ತೀಚೆಗೆ ಆರಂಭವಾದ ಕೆಪಿಎಸ್ ಶಾಲೆಗಳನ್ನು ಮಾತ್ರ ಸರ್ಕಾರ ಪ್ರೋತ್ಸಾಹಿಸುತ್ತಿದೆ. ಹಳ್ಳಿಯ ಶಾಲೆಗಳ ವಿಲೀನಕ್ಕೆ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೂ, ಈಗ ಸೌಲಭ್ಯ ಹಾಗೂ ನೇಮಕಾತಿಗಳ ಮೂಲಕ ಗ್ರಾಮೀಣ ಶಾಲೆಗಳನ್ನು ದುರ್ಬಲಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 7 ಸಾವಿರ ಏಕೋಪಾಧ್ಯಾಯ ಶಾಲೆಗಳಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳು ಶಿಕ್ಷಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಇಂತಹ ಶಾಲೆಗಳಿಗೆ ಸರ್ಕಾರ ತಕ್ಷಣ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಎಐಡಿಎಸ್ಓ ಆಗ್ರಹಿಸಿದೆ.

“ನಮ್ಮೂರ ಶಾಲೆ ಉಳಿಸಿ” ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆ ಮುಂದಾಗಬೇಕು ಎಂದು ಎಐಡಿಎಸ್ಓ ಕರೆ ನೀಡಿದೆ.

“ನೇರವಾಗಿ ಶಾಲೆ ಮುಚ್ಚದೇ, ಶಿಕ್ಷಕರನ್ನೂ ಸೌಲಭ್ಯವನ್ನೂ ನಿರಾಕರಿಸಿ ಹಳ್ಳಿಯ ಶಾಲೆಗಳನ್ನು ಸಾಯಿಸುವ ಕೆಲಸ ಸರ್ಕಾರ ಮಾಡುತ್ತಿದೆ”

 ಎಂ. ಶಾಂತಿ

ಮೋದಿ ಆಡಳಿತಕ್ಕೆ ಐತಿಹಾಸಿಕ ಮೈಲುಗಲ್ಲು: ವಿಶೇಷ ಪೂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಸತತ 4,399 ದಿನಗಳ ಆಡಳಿತ ಪೂರ್ಣಗೊಳಿಸುವ ಮೂಲಕ ದೇಶದ ಅತ್ಯಧಿಕ ಅವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯ ದಾಖಲೆಯನ್ನು ನಿರ್ಮಿಸಿದ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಬಿಜೆಪಿ ವತಿಯಿಂದ ನಗರದ ವೀರ ನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮಾಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, 1952ರ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ಜವಾಹರಲಾಲ್ ನೆಹರು 4,398 ದಿನಗಳ ಕಾಲ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ಆ ದಾಖಲೆಯನ್ನು ಹಿಂದಿಕ್ಕಿ ದೇಶದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ ಎಂದು ಹೇಳಿದರು.

ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ ಜಾರಿಗೆ ತಂದ ನೂರಾರು ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿವೆ. ಮಹಿಳೆಯರು, ರೈತರು, ಯುವಕರು ಹಾಗೂ ಕಾರ್ಮಿಕರ ಬದುಕಿನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಮಹತ್ವದ ಬದಲಾವಣೆ ತಂದಿವೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಸಂದರ್ಭೋಚಿತವಾಗಿ ಮಾತನಾಡಿದರು.

ಇದಕ್ಕೂ ಮುನ್ನ ವೀರ ನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಕ್ತರಿಗೆ ಸಿಹಿ ವಿತರಿಸಲಾಯಿತು. ನಂತರ ಪೇಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿಯೂ ವಿಶೇಷ ಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಎಂ.ಎಸ್. ಕರೀಗೌಡ್ರ, ಮೋಹನ ಮಾಳಶೆಟ್ಟಿ, ಎಂ.ಎಮ್. ಹಿರೇಮಠ, ಲಿಂಗರಾಜ ಪಾಟೀಲ, ಜಗನ್ನಾಥಸಾ ಭಾಂಡಗೆ, ವಿಜಯಕುಮಾರ ಗಡ್ಡಿ, ಭರತ್ ಬೊಮ್ಮಾಯಿ, ವಿನಾಯಕ ಮಾನ್ವಿ, ಅನಿಲ ಅಬ್ಬಿಗೇರಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 “ಪ್ರತಿ ದಿನ 18 ಗಂಟೆಗಳ ಕಾಲ ದುಡಿದು ಭಾರತವನ್ನು ವಿಶ್ವದ ನಾಲ್ಕನೇ ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ”

ಬಸವರಾಜ ಬೊಮ್ಮಾಯಿ, ಸಂಸದ

 

ಮತದಾರರ ಪಟ್ಟಿಗೆ ಮಹಾ ಸರ್ಜರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಚುರುಕುಗೊಂಡಿದ್ದು, ಈಗಾಗಲೇ ಶೇ.94.14ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಐ.ಆರ್ ಕುರಿತು ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಪಾರದರ್ಶಕವಾಗಿ ಪ್ರಕ್ರಿಯೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಜೂನ್ 30ರಿಂದ ಮನೆ-ಮನೆ ಸಮೀಕ್ಷೆ

ಕಳೆದ ಆರು ತಿಂಗಳಿಂದ ಎಸ್.ಐ.ಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಿದ್ಧತೆ ನಡೆಸಲಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವನ್ನಾಗಿ ಮಾಡಿಕೊಂಡು, ಪ್ರಸ್ತುತ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಈಗಾಗಲೇ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯ ಒಟ್ಟು 9,04,994 ಮತದಾರರಲ್ಲಿ 8,51,991 ಮತದಾರರನ್ನು ಗುರುತಿಸಿ ಕುಟುಂಬ ಲಿಂಕೇಜ್‌ನೊಂದಿಗೆ ಮ್ಯಾಪಿಂಗ್ ಮಾಡಲಾಗಿದೆ ಎಂದರು.

ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ಹಾಗೂ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದರು.

ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಇನ್ನೂ ಪತ್ತೆಯಾಗದ 53,004 ಮತದಾರರ ಕುರಿತು ವಿಶೇಷ ಪರಿಶೀಲನೆ ಕೈಗೊಳ್ಳಲಾಗುತ್ತಿದೆ. ಕೆಲವರು ಮೃತಪಟ್ಟಿರಬಹುದು, ವಲಸೆ ಹೋಗಿರಬಹುದು ಅಥವಾ ಹೆಸರು ಎರಡು ಬಾರಿ ಸೇರ್ಪಡೆಯಾಗಿರಬಹುದು. ಆದರೆ ಯಾರ ಹೆಸರನ್ನೂ ಏಕಾಏಕಿ ತೆಗೆದುಹಾಕುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಪತ್ತೆಯಾಗದ ಮತದಾರರಿಗೆ ನೋಟಿಸ್ ನೀಡಿ ಪರಿಶೀಲನೆ ನಡೆಸಲಾಗುವುದು. ವಿಶೇಷ ಕಾರ್ಯಾಚರಣೆಯ ಮೂಲಕ ಪ್ರತಿಯೊಬ್ಬರನ್ನೂ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮುಂದಿನ ಹಂತದಲ್ಲಿ ಪ್ರತಿಯೊಬ್ಬ ಮತದಾರರ ಮನೆಗೆ ಬಿಎಲ್‌ಒಗಳು ಅರ್ಧದಷ್ಟು ಮಾಹಿತಿ ಭರ್ತಿಯಾಗಿರುವ ಗಣತಿ ನಮೂನೆ ತಲುಪಿಸಲಿದ್ದಾರೆ. ಅದರಲ್ಲಿ ಮತದಾರರ ಹೆಸರು, ಎಪಿಕ್ ಸಂಖ್ಯೆ, ಸಂಬಂಧಿಕರ ವಿವರ ಹಾಗೂ ವಿಧಾನಸಭಾ ಕ್ಷೇತ್ರದ ಮಾಹಿತಿ ನಮೂದಿರುತ್ತದೆ.

ಬಿಎಲ್‌ಒಗಳು ಕನಿಷ್ಠ ಮೂರು ಬಾರಿ ಮನೆಗಳಿಗೆ ಭೇಟಿ ನೀಡಿ ನಮೂನೆ ವಿತರಿಸಲಿದ್ದು, ಮತದಾರರು ಮಾಹಿತಿಯನ್ನು ಪರಿಶೀಲಿಸಿ ಸಹಿ ಮಾಡಿ ಕಡ್ಡಾಯವಾಗಿ ಮರಳಿ ನೀಡಬೇಕು. ಇಲ್ಲದಿದ್ದರೆ ಹೆಸರು ಕೈಬಿಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ರಾಜಕೀಯ ಪಕ್ಷಗಳು ಕೂಡ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಿ ಎಸ್.ಐ.ಆರ್ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಕೋರಿದರು.

2002ರ ಮತದಾರರ ಪಟ್ಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಇದ್ದರೆ, ಕುಟುಂಬದ ಇತರ ಸದಸ್ಯರ ಸೇರ್ಪಡೆ ಸುಲಭವಾಗಲಿದೆ. ಮದುವೆ ಅಥವಾ ವಲಸೆ ಕಾರಣದಿಂದ ಹೊಸದಾಗಿ ನೆಲೆಸಿರುವವರಿಗೆ ಕುಟುಂಬ ಲಿಂಕೇಜ್ ಇಲ್ಲದಿದ್ದರೆ ಅಗತ್ಯ ದಾಖಲೆಗಳ ಆಧಾರದಲ್ಲಿ ಹೆಸರು ಸೇರ್ಪಡೆ ಮಾಡಲಾಗುತ್ತದೆ ಎಂದರು.

ಗುರುತಿನ ಚೀಟಿ, ಪಿಂಚಣಿ ಆದೇಶ, ಜನನ ಪ್ರಮಾಣ ಪತ್ರ, ಪಾಸ್‌ಪೋರ್ಟ್, ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರ, ಶಾಶ್ವತ ನಿವಾಸ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಕುಟುಂಬ ನೋಂದಣಿ, ಭೂಮಿ ಅಥವಾ ಮನೆ ಹಂಚಿಕೆ ದಾಖಲೆ ಸೇರಿದಂತೆ ವಿವಿಧ ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಮಾತ್ರ ಪರಿಗಣಿಸಲಾಗುತ್ತದೆ ಎಂದು ಹೇಳಿದರು.

ಚುನಾವಣೆ ಆಯೋಗದ ನಿಯಮಾವಳಿಯಂತೆ ಒಂದು ಮತಗಟ್ಟೆಗೆ ಗರಿಷ್ಠ 1,200 ಮತದಾರರ ಮಿತಿ ನಿಗದಿಯಾಗಿದ್ದು, ಹೆಚ್ಚಿನ ಮತದಾರರಿರುವ ಪ್ರದೇಶಗಳಲ್ಲಿ ಹೊಸ ಮತಗಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜುಲೈ 29ರೊಳಗೆ ಮರುಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಚುನಾವಣಾ ಶಾಖೆಯ ತಹಶೀಲ್ದಾರ್ ಸಂತೋಷಕುಮಾರ ಹಿರೇಮಠ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

 “ಅರ್ಹ ಯಾವೊಬ್ಬ ಮತದಾರನೂ ಮತಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು ಎಂಬುದು ನಮ್ಮ ಪ್ರಮುಖ ಉದ್ದೇಶ”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಅಕ್ಟೋಬರ್ 7ಕ್ಕೆ ಅಂತಿಮ ಮತಪಟ್ಟಿ

ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅಕ್ಟೋಬರ್ 3ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಆಕ್ಷೇಪಣೆಗಳ ಪರಿಶೀಲನೆ ಬಳಿಕ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಗದಗ| ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ದಾಳಿ: 43ಜನರ ತಪಾಸಣೆ

0

ಗದಗ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ತಪಾಸಣೆ ನಡೆಸಿ, ಒಟ್ಟು 43 ರೌಡಿಶೀಟರ್‌ಗಳನ್ನು ಪರಿಶೀಲನೆಗೆ ಒಳಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನಿರ್ದೇಶನದಂತೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬೆಟಗೇರಿ ಬಡಾವಣೆ, ಗದಗ ಶಹರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ರೌಡಿಶೀಟರ್‌ಗಳ ಇತ್ತೀಚಿನ ಚಟುವಟಿಕೆಗಳು, ಸಂಪರ್ಕಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.

ಸಮಾಜದಲ್ಲಿ ಶಾಂತಿ ಕದಡುವ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.

error: Content is protected !!