Home Blog Page 195

ಖರೀದಿ ಕೇಂದ್ರದಲ್ಲಿ ರೈತರಿಗೆ ಅನ್ಯಾಯ: ಮಹೇಶ ಹೊಗೆಸೊಪ್ಪಿನ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನಿಂದ ನಡೆಯುತ್ತಿರುವ ಮೆಕ್ಕೆಜೋಳ ಖರೀದಿ ಕೇಂದ್ರದಲ್ಲಿ ಪ್ರಾಮಾಣಿಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸಂಘದ ಸದಸ್ಯ, ಪಕ್ಷಾತೀತ ರೈತಪರ ಹೋರಾಟ ವೇದಿಕೆ ತಾಲೂಕಾಧ್ಯಕ್ಷ ಮಹೇಶ ಹೊಗೆಸೊಪ್ಪಿನ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತರ ಹೋರಾಟದ ಫಲವಾಗಿ ರಾಜ್ಯದಲ್ಲಿಯೇ ಪ್ರಥಮವಾಗಿ ಆರಂಭಗೊಂಡ ಟಿಎಪಿಸಿಎಂಎಸ್‌ನ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಮಾರಾಟಕ್ಕಾಗಿ ನೋಂದಣಿ ಮಾಡಿಸಿದ ರೈತರಿಗೆ ಒಂದು ತಿಂಗಳಾದರೂ ಮಾರಾಟಕ್ಕೆ ಅವಕಾಶ ಸಿಗುತ್ತಿಲ್ಲ. ತಡವಾಗಿ ನೋಂದಣಿ ಮಾಡಿಸಿದ ಕೆಲ ಪ್ರಭಾವಿ ರೈತರು ಈಗಾಗಲೇ ಮಾರಾಟ ಮಾಡಿದ್ದಾರೆ. ಮಾರಾಟ ಮಹಾಮಂಡಳದ ಅಧಿಕಾರಿಗಳ ಸೂಚನೆಯಂತೆ ಕೆಲ ರೈತರ ಮೆಕ್ಕೆಜೋಳ ಖರೀದಿಸಿದ್ದೇವೆ ಮತ್ತು ಸರದಿಯಲ್ಲಿದ್ದ ರೈತರು ಬಂದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಈ ಬಗ್ಗೆ ರೈತ ಸಂಘಟನೆಯವರು ಮಾಡುತ್ತಿರುವ ಕೆಲ ಆರೋಪಗಳನ್ನು ಅಲ್ಲಗಳೆಯುವಂತಿಲ್ಲ. ಈ ಬಗ್ಗೆ ತನಿಖೆಯಾಗಬೇಕು. ಅಲ್ಲದೇ ಈಗಾಗಲೇ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿದ ಎಲ್ಲ ರೈತರಿಗೂ ಸರ್ಕಾರದ 250 ರೂ ಸಹಾಯಧನ ಸಿಗುವಂತಾಗಬೇಕು. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಮಾರಾಟ ಮಾಡಿ 1 ತಿಂಗಳಾಗಿದ್ದು, ಕೂಡಲೇ ರೈತರ ಖಾತೆಗೆ ಹಣ ಜಮೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ಮುಂದೆ ರಸ್ತೆಬದಿ ಗಾಡಿ ನಿಲ್ಲಿಸಿದ್ರೆ ಕಟ್ಬೇಕು ದುಡ್ಡು; ಬೆಂಗಳೂರು ವಾಹನ ಸವಾರರಿಗೆ ಶಾಕಿಂಗ್ ಸುದ್ದಿ!

0

ಬೆಂಗಳೂರು: ನಗರದಲ್ಲಿ ರಸ್ತೆಬದಿ ಅಕ್ರಮ ಪಾರ್ಕಿಂಗ್‌ಗೆ ಕಡಿವಾಣ ಹಾಕುವ ಉದ್ದೇಶದಿಂದ ಜಿಬಿಎ (GBA) ಪೇ ಅಂಡ್ ಪಾರ್ಕಿಂಗ್ ನಿಯಮವನ್ನು ಜಾರಿ ಮಾಡಿದೆ.

ಇನ್ಮುಂದೆ ರಸ್ತೆಬದಿ ವಾಹನ ನಿಲ್ಲಿಸಲು ಶುಲ್ಕ ಪಾವತಿ ಕಡ್ಡಾಯವಾಗಲಿದೆ. ಈ ಹೊಸ ವ್ಯವಸ್ಥೆಯನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಪಾರ್ಕಿಂಗ್ ನಿರ್ವಹಣೆಗೆ ಶನಿವಾರ (ಜ.10) ಟೆಂಡರ್ ಕರೆಯಲಾಗಿದೆ ಎಂದು ಜಿಬಿಎ ಕಮಿಷನರ್ ತಿಳಿಸಿದ್ದಾರೆ.

ಬೆಂಗಳೂರು ಸೆಂಟ್ರಲ್ ಪಾಲಿಕೆ ವ್ಯಾಪ್ತಿಯಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಮರ್ಷಿಯಲ್ ರೋಡ್, ಡಿಕೆನ್ಸನ್ ರೋಡ್, ಮಿಲ್ಲರ್ಸ್ ರೋಡ್ ಸೇರಿದಂತೆ ಹಲವೆಡೆ ಪೇ ಅಂಡ್ ಪಾರ್ಕಿಂಗ್ ಜಾಗಗಳನ್ನು ಗುರುತಿಸಲಾಗಿದೆ. ದ್ವಿಚಕ್ರ ವಾಹನಗಳಿಗೆ ಗಂಟೆಗೆ 15 ರೂ. ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಗಂಟೆಗೆ 30 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ತಿಂಗಳ ಪಾಸ್ ವ್ಯವಸ್ಥೆಯೂ ಲಭ್ಯವಾಗಲಿದೆ.

ಪ್ರದೀಪ ಹಿರೇಮಠರಿಗೆ ಪಿಎಚ್‌ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿದ್ಯಾರ್ಥಿ ಪ್ರದೀಪ ಹಿರೇಮಠ ಸ್ವಾಮಿ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹಾಗೂ ಸ್ವಾಮಿ ಜಗನ್ನಾಥಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಸ್ಪೂರ್ತಿಗೊಂಡು ಶೈಕ್ಷಣಿಕ ಹಂತದಲ್ಲಿ ಹಲವಾರು ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸನ್ನು ಕಂಡಿದ್ದಾರೆ.

ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಗಣಿತ ವಿಭಾಗದ ಪ್ರಾಧ್ಯಾಪಕ ಡಾ. ಭಾರತಿ ಶೆಟ್ಟರ್ ಹಾಗೂ ಡಾ. ರಮೇಶ ಜಿ.ಕೆ ಅವರ ಮಾರ್ಗದರ್ಶನದಲ್ಲಿ ‘ಕಾಂಪಿಟೇಷನಲ್ ಸ್ಟಡಿ ಆನ್ ಹೀಟ್ ಟ್ರಾನ್ಸ್‌ಫರ್ ಇನ್ ಮ್ಯಾಗ್ನಟೈಸ್ಡ್ ಫ್ಲುಯಿಡ್ ಫ್ಲೋ’ ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪಡೆದಿದ್ದಾರೆ.

ಪ್ರದೀಪ ಹಿರೇಮಠರನ್ನು ರಾಮಕೃಷ್ಣ ವಿವೇಕಾನಂದ ಆಶ್ರಮದ ಸಮಸ್ತ ಭಕ್ತರ ಪರವಾಗಿ ಹಾಗೂ ಸ್ವಾಮಿ ವಿವೇಕಾನಂದರ ಅಧ್ಯಯನ ಕೇಂದ್ರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕಾಡ್ಗಿಚ್ಚು ತಡೆಗಟ್ಟಲು ಅರಣ್ಯಾಧಿಕಾರಿಗಳ ವಿಭಿನ್ನ ಪ್ರಯತ್ನಕ್ಕೆ ಪ್ರಶಂಸೆ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಕರೆಯಲ್ಪಡುವ ಕಪ್ಪತಗುಡ್ಡವನ್ನು ಬೇಸಿಗೆಯ ಕಾಡ್ಗಿಚ್ಚಿನಿಂದ ರಕ್ಷಿಸಲು ಗದಗ ಅರಣ್ಯ ಇಲಾಖೆ ವಿನೂತನ ಕ್ರಮವನ್ನು ಕೈಗೊಂಡಿದೆ. ಬೆಟ್ಟಕ್ಕೆ ಬೆಂಕಿ ಹಚ್ಚುವವರನ್ನು ತಡೆಯಬೇಕು ಎನ್ನುವ ದೂರದೃಷ್ಟಿಯಿಂದ ಕಾಡಿನ ಒಡನಾಡಿಗಳಾದ ಕುರಿಗಾಯಿಗಳನ್ನು ಬೆಟ್ಟದ ರಕ್ಷಕರನ್ನಾಗಿ ಪರಿವರ್ತಿಸಲು ವಿಶೇಷ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಕಪ್ಪತಗುಡ್ಡದ ಹುಲ್ಲು ಅಥವಾ ಭೂಮಿ ಸುಟ್ಟುಹೋದರೆ, ಆ ವರ್ಷ ಮಳೆ ಮತ್ತು ಬೆಳೆಗಳು ಸಮೃದ್ಧವಾಗಿರುತ್ತವೆ ಎಂಬ ಬಲವಾದ ಮೂಢನಂಬಿಕೆ ಈ ಪ್ರದೇಶದ ಜನರಲ್ಲಿದೆ. ಈ ಕಾರಣಕ್ಕಾಗಿ ಕೆಲವರು ಉದ್ದೇಶಪೂರ್ವಕವಾಗಿ ಬೆಟ್ಟಕ್ಕೆ ಬೆಂಕಿ ಹಚ್ಚುತ್ತಾರೆ. ಇಲಾಖೆಯು ಬೆಂಕಿ ತಡೆಗಾಗಿ ಕುರಿಗಾಯಿಗಳ ವಿಶ್ವಾಸ ಗಳಿಸಲು ಉಪಯುಕ್ತ ವಸ್ತುಗಳನ್ನು ಒಳಗೊಂಡಿರುವ ವಿಶೇಷ ಕಿಟ್‌ಗಳನ್ನು ಒದಗಿಸುತ್ತಿದೆ. ಈ ಕಿಟ್‌ಗಳಲ್ಲಿ ಗಟ್ಟಿಮುಟ್ಟಾದ ಬೆನ್ನುಹೊರೆ, ಉಕ್ಕಿನ ನೀರಿನ ಬಾಟಲಿ, ರಾತ್ರಿಯಲ್ಲಿ ಬಳಸಲು ಗುಣಮಟ್ಟದ ಬ್ಯಾಟರಿ ಮತ್ತು ಕಪ್ಪತಗುಡ್ಡದ ಮಹತ್ವವನ್ನು ಎತ್ತಿ ತೋರಿಸುವ ಕರಪತ್ರಗಳು ಸೇರಿವೆ. ಇವುಗಳನ್ನು ಉಚಿತವಾಗಿ ವಿತರಿಸಲಾಗಿದೆ.

ಅರಣ್ಯ ಇಲಾಖೆಯಿಂದ ಕಳೆದ ವರ್ಷ, ಕುರಿಗಾಯಿಗಳ ಗುಡಿಸಲುಗಳಿಗೆ ಭೇಟಿ ನೀಡುವ ಮೂಲಕ ಕಪ್ಪತಗುಡ್ಡದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಆದರೆ ಈ ಬಾರಿ, ನಾವು ಪ್ರತಿಯೊಬ್ಬ ಕುರಿಗಾಯಿಯವರನ್ನು ವೈಯಕ್ತಿಕವಾಗಿ ತಲುಪುತ್ತಿದ್ದೇವೆ ಮತ್ತು ಅವರಿಗೆ ಮನವರಿಕೆ ಮಾಡಿಕೊಡುತ್ತಿರುವ ಕಾರಣ ನಮಗೆ ಕುರಿಗಾಯಿಗಳಿಂದ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಾರಿ 31 ಹಳ್ಳಿಗಳ ಕುರಿಗಾಯಿಗಳ ಹಟ್ಟಿಗೆ ತೆರಳಿ 700 ಕಿಟ್‌ಗಳನ್ನು ನೀಡಲಾಗಿದೆ ಎನ್ನುತ್ತಾರೆ ಮುಂಡರಗಿ ವಿಭಾಗದ ಆರ್‌ಎಫ್‌ಒ ಮಂಜುನಾಥ ರಾಮಣ್ಣ ಮೇಗಲಮನಿ.

ಕಪ್ಪತಗುಡ್ಡ ಸುತ್ತಮುತ್ತ ಇಲಾಖೆಯು ಕುರುಬರನ್ನು ಮಾತ್ರವಲ್ಲದೆ ಕಪ್ಪತಗುಡ್ಡದ ಸುತ್ತಮುತ್ತಲಿನ ಹಳ್ಳಿಗಳ ಯುವಕರನ್ನು ಆಕರ್ಷಿಸಲು ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಸಹ ಆಯೋಜಿಸಿತ್ತು. 28 ಹಳ್ಳಿಗಳಿಂದ 600ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿದ್ದರು. ಕಪ್ಪತಗುಡ್ಡದ ಮಡಿಲಿನಲ್ಲಿರುವ ಹಳ್ಳಿಗಳ ಸಮಾಜ ಸೇವೆ, ಜಾನಪದ ಕಲಾವಿದರನ್ನು, ರೈತ ಸಾಧಕರನ್ನು ಹೀಗೆ ವಿವಿಧ ರಂಗದಲ್ಲಿ ಸಾಧನೆ ಮಾಡಿದ 200ಕ್ಕೂ ಹೆಚ್ಚು ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಕಪ್ಪತಗುಡ್ಡದ ರಕ್ಷಣೆಗಾಗಿ ಇಡೀ ಸಮುದಾಯವನ್ನು ಒಗ್ಗೂಡಿಸುವ ಪ್ರಯತ್ನ ಮಾಡಲು ಶ್ರಮಿಸಿರುವ ಆರ್‌ಎಫ್‌ಒ ಮಂಜುನಾಥ ರಾಮಣ್ಣ ಮೇಗಲಮನಿ ಮತ್ತು ಮುಂಡರಗಿ ಭಾಗದ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಮೇಲಾರಪ್ಪ ಮಡಿವಾಳರ, ಶರಣಪ್ಪ ನೀರಲಗಿ, ಸೋಮನಗೌಡ ಪಾಟೀಲ, ರಾಮಪ್ಪ ಕಿಚಡಿ, ಸಂತೋಷ ಕಗದಾಳ, ಮೌಲಾಸಾಬ ಬನ್ನಿಕೊಪ್ಪ, ರಾಘವೇಂದ್ರ ಹೊಸಮನಿ, ರಾಹುಲ ಬಮ್ಮನಪಾಡ, ಈಶ್ವರ ಮರತೂರ, ಬಸವರಾಜ ಬಾಲವ್ವಗೊಳ, ಐಯ್ಯನಗೌಡರ, ಗಂಗಮ್ಮ ಪೂಜಾರ, ಮಂಜುನಾಥ ದೊಡ್ಡವಾಡ, ಕೃಷ್ಣಾ ಫಮ್ಮಾರ, ಬಸುರಾಜ ಕುರಬರ, ನೂರಹಮ್ಮದ ಲೈನ ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಹಿರಿಯ ಅಧಿಕಾರಿಗಳ ಸಲಹೆ-ಸೂಚನೆಯ ಮೇರೆಗೆ ಮುಂಡರಗಿ ಭಾಗದ ಸಾಧಕರನ್ನು ಸನ್ಮಾನಿಸಲಾಯಿತು. ಯುವಕರು ಪರಿಸರ ಪ್ರಿಯರಾಗಬೇಕು ಎನ್ನುವ ಹಿನ್ನೆಲೆ ವಾಲಿಬಾಲ್ ಪಂದ್ಯಾವಳಿ ಆಯೋಜನೆ ಮತ್ತು ಕಪ್ಪತಗುಡ್ಡ ಬೆಂಕಿ ತಡೆಗಾಗಿ ಕುರಿಗಾಯಿಗಳಿಗೆ ವಿಶೇಷ ಕಿಟ್ ವಿತರಿಸಲಾಯಿತು. ಈ ಕಾರ್ಯಕ್ರಮ ಯಶಸ್ವಿಯಾಗಲು ಈ ಭಾಗದ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ಪರಿಸರವಾದಿಗಳ ಸಹಕಾರದಿಂದ ಸಾಧ್ಯವಾಗಿದೆ”

  • ಮಂಜುನಾಥ ಮೇಗಲಮನಿ
    ಅರಣ್ಯ ವಲಯಾಧಿಕಾರಿ, ಮುಂಡರಗಿ.

ತಂದೆ-ತಾಯಿಯ ಋಣವನ್ನು ತೀರಿಸುವ ಕೆಲಸ ಮಾಡಿ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ತಾಯಿಗಿಂತ ಮಿಗಿಲು ಯಾರೂ ಇಲ್ಲ. ತಂದೆ-ತಾಯಿಯೇ ದೇವರು. ಮಾತು ಬಾರದ ಮಗುವಿಗೆ ಮಾತು ಕಲಿಸುವವಳು ಅವ್ವ. ಪ್ರತಿಯೊಬ್ಬರೂ ಬದುಕಿನಲ್ಲಿ ತಂದೆ-ತಾಯಿಯ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.

ಲಿಂಗಾಯತ ಪ್ರಗತಿಶೀಲ ಸಂಘದ 2779ನೇ ಶಿವಾನುಭವದಲ್ಲಿ ಮಾತನಾಡಿದ ಶ್ರೀಗಳು, ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎಂಬ ಮಾತು ಸತ್ಯ. ಕೆಟ್ಟ ಮಕ್ಕಳು ಹುಟ್ಟಬಹುದು, ಕೆಟ್ಟ ತಾಯಿ ಇರಲಾರಳು. ಮಕ್ಕಳ ಲಾಲನೆ-ಪಾಲನೆ ಮಾಡುವ ಮೂಲಕ ಮನೆಯ ಎಲ್ಲಾ ಜವಾಬ್ದಾರಿಗಳನ್ನು ಅವ್ವ ಹೊರುತ್ತಾಳೆ. ಮಕ್ಕಳಲ್ಲಿ ಬೇಧ-ಭಾವ ಮಾಡದೇ ಸಮಾನವಾಗಿ ಬೆಳೆಸುವ ಅವ್ವ ಮಕ್ಕಳ ಪಾಲಿನ ದೇವರು. ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವ್ವನ ಋಣವನ್ನು ಅವ್ವ ಸೇವಾ ಟ್ರಸ್ಟ್ ಮೂಲಕ ತೀರಿಸುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ ಹುಬ್ಬಳ್ಳಿಯ ಎಸ್‌ಜೆಎಂ ಕಾಲೇಜಿನ ಡಾ. ಸುಪ್ರಿಯಾ ಮಾಲಶೆಟ್ಟಿ ಮಾತನಾಡಿ, ಸಾವಿರಾರು ತಂದೆಗಿಂತ ಒಬ್ಬ ತಾಯಿ ಶ್ರೇಷ್ಠ. ಸಕಲರಿಗೂ ಪೂಜ್ಯನೀಯ ತಾಯಿ. ಅವ್ವ ಬದುಕು ನೀಡುವುದರ ಜೊತೆಗೆ ಬದುಕುವ ಕಲೆಯನ್ನು ಕಲಿಸುತ್ತಾಳೆ. ಅವ್ವಳ ಪ್ರೀತಿಯಲ್ಲಿ ಅಪೇಕ್ಷೆ ಇಲ್ಲ. ಮಕ್ಕಳಿಗೋಸ್ಕರ ಏನು ಬೇಕಾದರೂ ಮಾಡುವಳು. ಜೀವನದ ಪಾಠ ಕಲಿಸುತ್ತಾಳೆ. ತಾಯಿಯ ಶ್ರದ್ಧೆ, ಸಹನೆ, ಪ್ರಾಮಾಣಿಕತೆ, ಪ್ರೀತಿ ವರ್ಣಿಸಲಸಾಧ್ಯ. ಬಸವಣ್ಣನವರ ವಚನಗಳು ಅವ್ವನ ಸೆರಗು ಇದ್ದಂತೆ ಎಂದರು.

ಎಲ್‌ಎಲ್‌ಎಂ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಹನಾ ಅನಂತ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಸನ್ಮಾನೋತ್ತರವಾಗಿ ಮಾತನಾಡಿದ ಸಹನಾ ಕಾರ್ಕಳ, ಮಕ್ಕಳ ಜೀವನದಲ್ಲಿ ಅವ್ವ-ಅಪ್ಪನ ಪಾತ್ರ ಬಹು ದೊಡ್ಡದು ಎಂದರು.

ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಶಶಿ ಸಾಲಿ ಮಾತನಾಡಿ, ಸಭಾಪತಿಗಳಾದ ಬಸವರಾಜ ಹೊರಟ್ಟಿಯವರಿಗೆ ತಾಯಿಯ ಬಗ್ಗೆ ಅಪಾರವಾದ ಪ್ರೀತಿ ಇದ್ದುದರಿಂದ ಅವ್ವನ ನೆನಪು ಸದಾ ಇರಲೆಂದು ಅವ್ವ ಸೇವಾ ಟ್ರಸ್ಟ್ ಸ್ಥಾಪಿಸಿ ಅನೇಕ ಸಮಾಜಮುಖಿ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ ಎಂದರು.

ಅತಿಥಿಗಳಾಗಿ ಆಗಮಿಸಿದ ಮಾಜಿ ಸಹಕಾರ ಸಚಿವ ಎಸ್.ಎಸ್. ಪಾಟೀಲ, ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಕ.ಸಾ.ಪ ಧಾರವಾಡ ಅಧ್ಯಕ್ಷ ಲಿಂಗರಾಜ ಅಂಗಡಿ, ಮಾಧ್ಯಮ ಪ್ರತಿನಿಧಿಗಳಾದ ಅನಂತ ಕಾರ್ಕಳ ಉಪಸ್ಥಿತರಿದ್ದರು. ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಹಿಳಾ ಪೌರ ಕಾರ್ಮಿಕರಿಗೆ ಗೌರವ ಸಮರ್ಪಣೆಯನ್ನು ಗದಗ ಅವ್ವ ಸೇವಾ ಟ್ರಸ್ಟ್ ಸಂಚಾಲಕರಾದ ಡಾ. ಬಸವರಾಜ ಧಾರವಾಡರವರು ಮಾಡಿದರು. ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ವಚನಸಂಗೀತ ನಡೆಸಿಕೊಟ್ಟರು. ಧಾರ್ಮಿಕ ಗ್ರಂಥಪಠಣವನ್ನು ಅವನಿ ಎಂ. ಪುಣೇಕರ, ವಚನ ಚಿಂತನವನ್ನು ಶ್ರೇಯಾ ಡಿ. ವಿಠ್ಠಲ್ಕರ ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ಜಗದ್ಗುರು ತೋಂಟದಾರ್ಯ ಶಿಕ್ಷಣ ಸಂಸ್ಥೆಗಳ ನೌಕರರ ಪತ್ತಿನ ಸಹಕಾರ ಸಂಘ ಗದಗ ಹಾಗೂ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಇವರು ವಹಿಸಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದ, ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮಶೇಖರ ಪುರಾಣಿಕ, ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹ ಚೇರಮನ್ ಶಿವಾನಂದ ಹೊಂಬಳ, ಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರಮನ್ ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

ಅತಿಥಿಗಳಾಗಿ ಆಗಮಿಸಿದ ಗದಗಿನ ಅವ್ವ ಸೇವಾ ಟ್ರಸ್ಟ್‌ನ ಸಂಚಾಲಕರಾದ ಡಾ. ಬಸವರಾಜ ಧಾರವಾಡ ಮಾತನಾಡಿ, ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಲಿಂ. ಜಗದ್ಗುರು ಸಿದ್ದಲಿಂಗ ಮಹಾಸ್ವಾಮಿಗಳ ಅಮೃತ ಹಸ್ತದಿಂದ 2011ರಲ್ಲಿ ಉದ್ಘಾಟನೆಯಾದ ಅವ್ವ ಸೇವಾ ಟ್ರಸ್ಟ್ ಹತ್ತು ಹಲವಾರು ವಿಧಾಯಕ ಕಾರ್ಯಕ್ರಮಗಳನ್ನು ಹಾಕಿಕೊಂಡು ದೀನ-ದಲಿತರಿಗೆ, ದಿವ್ಯಾಂಗರಿಗೆ, ಮಹಿಳೆಯರಿಗೆ, ಶಾಲಾ ವಿದ್ಯಾರ್ಥಿಗಳಿಗೆ, ವಿಶೇಷ ಸಾಧನೆ ಮಾಡಿದವರಿಗೆ ಗೌರವ ಸಲ್ಲಿಸುತ್ತ ಬಂದಿದೆ. ಶ್ರೀಮಠವು ಶಿವಾನುಭವದ ಮೂಲಕ ಉತ್ತಮ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಎಲ್ಲ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಮುಖ್ಯ: . ಎಸ್.ಪಿ. ಬಳಿಗಾರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ಹೆತ್ತ ತಂದೆ-ತಾಯಿ, ವಿದ್ಯೆ ನೀಡಿದ ಗುರುಗಳು ದೇವರ ಸಮಾನ ಮತ್ತು ಸದಾ ಸ್ಮರಣೀಯರು ಎಂದು ಪ್ರಖ್ಯಾತ ಮೆದುಳು ಮತ್ತು ನರರೋಗ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಎಸ್.ಪಿ. ಬಳಿಗಾರ ಹೇಳಿದರು.

ಅವರು ಶುಕ್ರವಾರ ತಾಲೂಕಿನ ಶಿಗ್ಲಿಯ ಗ್ರಾಮ ಭಾರತಿ ಶಿಕ್ಷಣ ಸಮಿತಿಯ ಎಸ್.ಎಸ್. ಕೂಡ್ಲಮಠ ಕನ್ನಡ ಆಂಗ್ಲ ಮಾಧ್ಯಮ ಪ್ರಾಥಮಿಕ-ಪ್ರೌಢಶಾಲೆ, ಶ್ರೀಮತಿ ಜಾನಕಿಬಾಯಿ ರಜಪೂತ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಪುಟ್ಟಯ್ಯ ಸಂಗಯ್ಯ ಕೂಡ್ಲಮಠ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಮತ್ತು ವೈದ್ಯರುಗಳಿಂದ ಅಗಲಿದ ಶಿಕ್ಷಕರ ಸ್ಮರಣಾರ್ಥ ಎಸ್.ಎಸ್. ಕೂಡ್ಲಮಠ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.

ನಾಲ್ಕೈದು ದಶಕಗಳ ಹಿಂದೆ ಗುರು-ಶಿಷ್ಯರ ಸಂಬಂಧ ಅತ್ಯಂತ ಶ್ರೇಷ್ಠವಾಗಿತ್ತು. ಶಿಕ್ಷಣ ಸೇವೆಗಾಗಿಯೇ ಬದುಕನ್ನು ಮೀಸಲಿರಿಸಿದ್ದ ಅವರು ಶಿಕ್ಷಣದ ಜತೆಗೆ ಮಕ್ಕಳಿಗೆ ಮಾನವೀಯ ಮೌಲ್ಯ, ಸಂಸ್ಕಾರ ನೀಡಿ ಪರಿಪೂರ್ಣ ಬದುಕಿಗೆ ಅಣಿಯಾಗಿಸುತ್ತಿದ್ದರು. ಮನುಷ್ಯನಿಗೆ ಎಲ್ಲ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಮುಖ್ಯವಾಗಿದ್ದು, ನಿತ್ಯದ ಬದುಕಿನಲ್ಲಿ ದುಶ್ಚಟ, ದುರ್ಗುಣಗಳಿಂದ ದೂರವಿದ್ದು ಸತ್ಸಂಗ, ಸದ್ವಿಚಾರ, ಸಾತ್ವಿಕ ಆಹಾರ, ವ್ಯಾಯಾಮ ರೂಢಿಸಿಕೊಳ್ಳಬೇಕು. ಅಗಲಿದ ಶಿಕ್ಷಕರ ಸ್ಮರಣಾರ್ಥವಾಗಿ ಗ್ರಾಮೀಣ ಭಾಗದ ಬಡವರ ಆರೋಗ್ಯ ಸೇವೆಗೆ ಅವಕಾಶ ಕಲ್ಪಿಸಿರುವುದು ಸಂತಸ ತಂದಿದೆ ಎಂದರು.

ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಸ್.ಪಿ. ಬಳಿಗಾರ ಮಾತನಾಡಿ, ಎಸ್.ಎಸ್. ಕೂಡ್ಲಮಠ ಶಾಲೆಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಇಂದು ಎಲ್ಲ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.

ಈ ಶಾಲೆಯಲ್ಲಿ ಕಲಿತ ಹೃದಯರೋಗ ತಜ್ಞರಾದ ಡಾ. ರವಿ ಸಾಲ್ಮನಿ, ಡಾವಣಗೆರೆ ಎಸ್.ಎಸ್. ಆಸ್ಪತ್ರೆಯ ಮಾಜಿ ನಿರ್ದೇಶಕರಾದ ಡಾ. ಎನ್.ಕೆ. ಕಾಳಪ್ಪನವರ, ತಜ್ಞ ವೈದ್ಯರಾದ ಪ್ರದೀಪ ಕಲ್ಲೊಳ್ಳಿಮಠ ಸೇರಿ ಸ್ಥಳೀಯ ವೈದ್ಯರುಗಳ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಿತು. ಶಿಗ್ಲಿ ಸೇರಿ ಸುತ್ತಲಿನ ಗ್ರಾಮಗಳ 800ಕ್ಕೂ ಹೆಚ್ಚು ರೋಗಿಗಳಿಗೆ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಮತ್ತು ಔಷಧೋಪಚಾರ ನೀಡಲಾಯಿತು.

ಈ ವೇಳೆ ಶಿಕ್ಷಣ ಸಂಸ್ಥೆಯ ಎಫ್.ಡಿ. ಹುನಗುಂದ, ಜಿ.ಎಫ್. ಘಂಟಾಮಠ, ಸಿ.ಎಂ. ರಾಗಿ, ಎಚ್.ಎಫ್. ತಳವಾರ, ಬಿ.ಎಂ. ಕಳಸದ, ಎನ್.ಬಿ. ಪಾಟೀಲ, ವೀರಣ್ಣ ಪವಾಡದ, ಪ್ರವೀಣ ಕಾಳಪ್ಪನವರ, ಡಿ.ವೈ. ಹುನಗುಂದ, ಸೋಮಣ್ಣ ಡಾಣಗಲ್, ಸಿದ್ದಣ್ಣ ಯಲಿಗಾರ, ಸಿ.ಬಿ. ಮುಗಳಿ, ಎಲ್.ಪಿ. ಲಮಾಣಿ, ಪಿ.ಸಿ. ಹಿರೇಮಠ, ಎಸ್.ಎ. ಪಾಟೀಲ, ಎಸ್.ಎಸ್. ಕಳ್ಳಳ್ಳಿ ಮುಂತಾದವರಿದ್ದರು. ಆರ್.ಎಂ. ಜಂಬೇರಾಳ, ಬಿ.ಬಿ. ಚಿಟಗಿ, ಆರ್.ಎಂ. ಬಸಾಪುರ ನಿರೂಪಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ, ಮನುಷ್ಯ ಸಮಾಜ ಜೀವಿಯಾಗಿದ್ದು, ಸಮಾಜಕ್ಕಾಗಿ ಸೇವೆ ಮಾಡುವ ಮನೋಗುಣ ಬೆಳೆಸಿಕೊಳ್ಳಬೇಕು. ಶಿಕ್ಷಣ, ಆರೋಗ್ಯ, ಕೃಷಿ, ರಾಜಕೀಯ ಯಾವುದೇ ಕ್ಷೇತ್ರದಲ್ಲಿ ಪ್ರಾವೀಣ್ಯತೆ ಹೊಂದಿದ ವಿದ್ಯಾರ್ಥಿಗಳು ತಾವು ಕಲಿತ ಶಾಲೆ, ಕಲಿಸಿದ ಗುರುಗಳು, ಹೆತ್ತವರ ಸ್ಮರಣೆಯ ನೆಪದಲ್ಲಿ ಸಮಾಜ ಸೇವೆ ಮಾಡುವುದು ಅವರಿಗೆ ಸಲ್ಲಿಸುವ ಗೌರವವಾಗಿದೆ. ಆ ಮೂಲಕ ಬದುಕನ್ನು ಸಾರ್ಥಕಗೊಳಿಸೋಣ. ಶಿಕ್ಷಣ ಕ್ಷೇತ್ರಕ್ಕೆ ಜಿಲ್ಲೆಯಲ್ಲಿಯೇ ಶಿಗ್ಲಿ ಗ್ರಾಮದ ಕೊಡುಗೆ ಶ್ರೇಷ್ಠವಾಗಿದೆ ಎಂದರು.

ಜ. 21ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

0

ವಿಜಯಸಾಕ್ಷಿ ಸುದ್ದಿ, ಗದಗ: 12ನೇ ಶತಮಾನದಲ್ಲಿ ಶರಣರ ಅನುಭವ ಮಂಟಪದಲ್ಲಿ ನಿಷ್ಠುರವಾಗಿ ಮಾತನಾಡುವ ಶರಣ ಎಂದರೆ ಅಂಬಿಗರ ಚೌಡಯ್ಯ. ಎಲ್ಲ ಶರಣರಲ್ಲಿ ನಿಜಶರಣ ಎಂದು ಖ್ಯಾತಿ ಪಡೆದ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಈ ಬಾರಿ ಜನವರಿ 21ರಂದು ಅದ್ಧೂರಿಯಾಗಿ ಆಚರಿಸಲು ಗದಗ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಸಂಘಟನೆಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಗದಗ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಸಂಘಟನೆಯ ಜಿಲ್ಲಾಧ್ಯಕ್ಷ ರಾಮಣ್ಣ ಇರಕಲ್ಲ ಸಭೆಯಲ್ಲಿ ಮಾತನಾಡಿ, ಈ ಬಾರಿ ಜಯಂತಿಗೆ ನಗರದ ಗಣ್ಯ ಮಹನೀಯರನ್ನು ಆಹ್ವಾನಿಸಲಾಗುವುದು. ಬೈಕ್ ರ‍್ಯಾಲಿ, ಡೊಳ್ಳಿನ ಮೆರವಣಿಗೆ, ಕುಂಭ ಮೇಳ ಜರುಗುವುದು. ಕಾರಣ, ಸಮುದಾಯದ ಎಲ್ಲರೂ ಭಾಗವಹಿಸುವಂತೆ ಕರೆ ನೀಡಿದರು.

ಸಮಾಜ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಗದಗ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ, ದೌರ್ಜನ್ಯ ಸಮಿತಿ ಸದಸ್ಯರಾದ ಸಂಗಮೇಶ ಹಾದಿಮನಿ ಮಾತನಾಡಿ, ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಜಯಂತಿಯನ್ನು 2020ರಿಂದ 2025ರವರೆಗೆ ಸರಳ ರೀತಿಯಲ್ಲಿ ಆಚರಿಸಿಕೊಂಡು ಬರಲಾಗಿತ್ತು. ಪ್ರಸ್ತುತ ಜನವರಿ 21ರಂದು ಅದ್ಧೂರಿ ಜಯಂತಿ ಆಚರಿಸಲು ತೀರ್ಮಾನಿಸಲಾಗಿದ್ದು, ಸಮಾಜದ ಯುವಕರು, ಹಿರಿಯರು, ಮಹಿಳೆಯರು ಭಾಗವಹಿಸಿ ಯಶಸ್ವಿಗೊಳಿಸಲು ವಿನಂತಿಸಿದರು.

ಈ ಸಂದರ್ಭದಲ್ಲಿ ಆನಂದ ಸುಣಗಾರ, ಬಸವರಾಜ ಗುಡಿಸಾಗರ, ಸುಜಾತಾ ಗುಡಿಸಾಗರ, ಪ್ರವೀಣ ನೀಲಣ್ಣವರ, ರವಿಕುಮಾರ ಗುಡಿಸಾಗರ, ಮಂಜುನಾಥ ಗುಡಿಸಾಗರ, ರಾಜು ಪೂಜಾರ, ಶಿವದೇವ ಹಾದಿಮನಿ, ಮುತ್ತು ಅಂಬಿಗೇರ, ಮಲ್ಲು ಬಾರಕೇರ, ಸುದೀಪ ಕಮತರ, ರಾಜು ಬಿನ್ನಾಳ, ದೇವು ನವಲಗುಂದ, ಹರೀರ ಬಾರಕೇರ, ಗುರು ತಿರ್ಲಾಪೂರ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ

0

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತಿನ ಅರಿವು ಮೂಡಿಸುವ ಉದ್ದೇಶದಿಂದ ಜಿ.ಎನ್.ಟಿ.ಟಿ.ಎಫ್ ಹಾಗೂ ಎಚ್.ಕೆ. ಪಾಟೀಲ ಪ್ರತಿಷ್ಠಾನದ ಸಹಯೋಗದಲ್ಲಿ ಜಿಲ್ಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೃಷ್ಣಗೌಡ ಪಾಟೀಲ ತಿಳಿಸಿದರು.

ನಗರದ ಜಿ.ಎನ್.ಟಿ.ಟಿ.ಎಫ್ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಮುಖಿ ಕಾರ್ಯಗಳ ಭಾಗವಾಗಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಾಗುತ್ತಿದೆ. ಜಿಲ್ಲೆಯ 138 ಪ್ರೌಢಶಾಲೆಗಳ ಸುಮಾರು 13,500 ವಿದ್ಯಾರ್ಥಿಗಳನ್ನು ಈ ಸ್ಪರ್ಧೆಯು ತಲುಪಲಿದೆ ಎಂದರು.

ವಿವಿಧ ಹಂತಗಳಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನ 5 ಸಾವಿರ ರೂ, ದ್ವಿತೀಯ 3 ಸಾವಿರ ರೂ, ತೃತೀಯ ಬಹುಮಾನ 2 ಸಾವಿರ ರೂ ನಿಗದಿಪಡಿಸಲಾಗಿದೆ. ಬೆಳಗಾವಿಯ ವಿನೋದ ದೇಶಪಾಂಡೆ ನೇತೃತ್ವದ ತಜ್ಞರ ತಂಡವು ಸ್ಪರ್ಧೆಯನ್ನು ವ್ಯವಸ್ಥಿತವಾಗಿ ನಡೆಸಿಕೊಡಲಿದೆ ಎಂದು ತಿಳಿಸಿದರು.

ಹಿರಿಯ ಲೆಕ್ಕ ಪರಿಶೋಧಕ ಆನಂದ ಪೊತ್ನಿಸ್ ಮಾತನಾಡಿ, ಜ. 17 ಮತ್ತು ಜ. 24ರಂದು ಜಿ.ಎನ್.ಟಿ.ಟಿ.ಎಫ್ ಆವರಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪಾಲಕರಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಪಾಲ್ಗೊಳ್ಳುವ ಎಲ್ಲರಿಗೂ ಉಪಾಹಾರ ಮತ್ತು ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಇಂತಹ ರಸಪ್ರಶ್ನೆಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿವೆ. ಆದ್ದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದರು.

ರಾಜಕೀಯ ಹಿನ್ನಲೆ ಇಲ್ಲದೆ ಇರೋರು ರಾಜಕೀಯಕ್ಕೆ ಬರಬೇಕು: ನಿಖಿಲ್ ಕುಮಾರಸ್ವಾಮಿ

0

ಬೆಂಗಳೂರು:- ರಾಜಕೀಯ ಹಿನ್ನಲೆ ಇಲ್ಲದೆ ಇರೋರು ರಾಜಕೀಯಕ್ಕೆ ಬರಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರೆಸ್ ಕ್ಲಬ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಮತ್ತೆ ಸ್ಟೂಡೆಂಟ್ ಎಲೆಕ್ಷನ್ ಮಾಡಲು ಮುಂದಾಗಿರೋ ಸರ್ಕಾರದ ನಡೆಯನ್ನ ಸ್ವಾಗತ ಮಾಡಿದ್ದಾರೆ. ಯುವಕರಿಗೆ ಇತ್ತೀಚೆಗೆ ಅವಕಾಶಗಳು ಸಿಕ್ತಿಲ್ಲ. ಹಿಂದೆ ಕಾಲೇಜು ಚುನಾವಣೆ ಇತ್ತು. ಅನೇಕ ಯುವಕರಿಗೆ ಅವಕಾಶ ಸಿಕ್ತಾ ಇತ್ತು. ಸಮಾಜದ ಬಗ್ಗೆ ಕಾಳಜಿ ಇಟ್ಟಿಕೊಂಡಿರೋ ಯುವ ಸಮೂಹ ಬರಬೇಕು. ಕಾಲೇಜ್ ಎಲೆಕ್ಷನ್ ಮರು ಕಳಿಸಬೇಕು ಎಂದು ತಿಳಿಸಿದರು.

ರಾಜಕೀಯ ಹಿನ್ನಲೆ ಇಲ್ಲದೆ ಇರೋರು ರಾಜಕೀಯಕ್ಕೆ ಬರಬೇಕು. ಕಾಲೇಜು ಎಲೆಕ್ಷನ್ ಒಳ್ಳೆ ವೇದಿಕೆ ಎಂದು ಕಾಲೇಜುಗಳಲ್ಲಿ ಚುನಾವಣೆ ಮಾಡೋ ಸರ್ಕಾರದ ನಿಲುವು ಸ್ವಾಗತ ಮಾಡಿದರು.

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿಗೆ ವರ್ಗಾವಣೆ! ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

0

ಬೆಂಗಳೂರು:- ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.

ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಪ್ರಕರಣ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಹೇಳಿದ ಕೆಲವೇ ಗಂಟೆಗಳಲ್ಲಿ ಆದೇಶ ಹೊರಬಿದ್ದಿದೆ. ಈ ಹಿಂದೆ ಎಡಿಜಿಪಿ ಅವರು ಪೊಲೀಸರ ಗನ್‌ನಿಂದ ಫೈರಿಂಗ್ ಆಗಿಲ್ಲ, ಖಾಸಗಿ ಗನ್‌ನಿಂದ ಗುಂಡಿನ ದಾಳಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದರು.

ಪ್ರಕರಣದಲ್ಲಿ ಪೆಟ್ರೋಲ್ ಬಾಂಬ್ ಬಳಕೆಯ ಆರೋಪವೂ ಕೇಳಿಬಂದಿದ್ದು, ತನಿಖೆಯ ಬಳಿಕ ಸತ್ಯ ಹೊರಬರಲಿದೆ ಎಂದು ಗೃಹ ಸಚಿವರು ತಿಳಿಸಿದ್ದರು. ಇನ್ನೂ ಶಾಸಕ ಜನಾರ್ದನ ರೆಡ್ಡಿ ಪ್ರಕರಣದ ತನಿಖೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಸಕ ಭರತ್ ರೆಡ್ಡಿ ನಿರ್ದೇಶನದಂತೆ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆ ನಡೆದ 9 ದಿನಗಳಾದರೂ ಒಬ್ಬ ಗನ್‌ಮ್ಯಾನ್ ಮಾತ್ರ ಬಂಧನವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಭರತ್ ರೆಡ್ಡಿ ಬಂಧನ ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದರು.

error: Content is protected !!