Home Blog Page 195

ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿ.ಕೆ. ಶಿವಕುಮಾರ್

0

ಮಂಗಳೂರು: “ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ.

ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

“ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ.

ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು.

“ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು.

ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು.

“ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ” ಎಂದರು.

ಕೌಟುಂಬಿಕ ಕಲಹಕ್ಕೆ: 10 ತಿಂಗಳ ಮಗುವಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತ 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತಾಯಿಮಗು ಸಾವಿನ ಆಘಾತದಿಂದ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದುಬಂದಿದೆ.

ಮೃತ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಯಶವಂತ್ ರೆಡ್ಡಿ ಅವರನ್ನು ವಿವಾಹವಾಗಿದ್ದ ಸುಷ್ಮಾ, ಇತ್ತೀಚಿನ ದಿನಗಳಲ್ಲಿ ಪತಿಯೊಂದಿಗೆ ಆಗಾಗ ಜಗಳವಾಗುತ್ತಿತ್ತು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದ ಶಾಪಿಂಗ್ ನೆಪದಲ್ಲಿ ಸುಷ್ಮಾ ತನ್ನ ತಾಯಿ ಲಲಿತಾ (44) ಮನೆಗೆ ಮಗುವಿನೊಂದಿಗೆ ತೆರಳಿದ್ದರು. ಅಲ್ಲಿ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪತಿ ಕೆಲಸ ಮುಗಿಸಿ ಮನೆಗೆ ಬಂದಾಗ ಕೋಣೆ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಬಾಗಿಲು ಒಡೆದು ಒಳಗೆ ಪ್ರವೇಶಿಸಿದ್ದಾರೆ. ವೇಳೆ ಸುಷ್ಮಾ ಮತ್ತು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಘಟನೆ ಕಂಡು ತಾಯಿ ಲಲಿತಾ ತೀವ್ರ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

2028ರವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಜಮೀರ್ ಅಹ್ಮದ್ ಸ್ಪಷ್ಟನೆ

0

ಚಿಕ್ಕಬಳ್ಳಾಪುರ: 2028ರವರೆಗೂ ಸಿದ್ದರಾಮಯ್ಯ ಅವರೇ ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ರಾಜ್ಯ ಸರ್ಕಾರದ ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಸ್ಥಾನ ಬದಲಾವಣೆ ಮಾಡಬೇಕಾದರೆ ನಮ್ಮಿಂದಲೂ ನಿಮ್ಮಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ, ಅದನ್ನು ನಾವು ಎಲ್ಲರೂ ಪಾಲಿಸುತ್ತೇವೆ. ನನ್ನ ಅಭಿಪ್ರಾಯವನ್ನು ನಾನು ಈಗಾಗಲೇ ಹೇಳಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ ಜಮೀರ್, “ಡಿ.ಕೆ. ಶಿವಕುಮಾರ್ ಅವರಿಗೆ ದೇಶದ ಅನೇಕ ರಾಜ್ಯಗಳಲ್ಲಿ ಡಿಮ್ಯಾಂಡ್ ಇದೆ. ಚುನಾವಣೆ ನಡೆಸುವ ತಂತ್ರ ಅವರಿಗೆ ಚೆನ್ನಾಗಿ ಗೊತ್ತಿದೆ. ಅದಕ್ಕಾಗಿಯೇ ಅವರನ್ನು ಅಸ್ಸಾಂ ಚುನಾವಣೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ” ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “2019ರಿಂದ 2023ರವರೆಗೆ ಬಿಜೆಪಿ ಸರ್ಕಾರ ಆಡಳಿತದಲ್ಲಿತ್ತು. ಅವರ ಆಡಳಿತಾವಧಿಯಲ್ಲಿ ಸ್ಲಂ ಬೋರ್ಡ್ ಮೂಲಕ ಒಂದು ಮನೆ ಕೊಟ್ಟಿದ್ದರೆ, ನಾನು ರಾಜಕೀಯದಿಂದ ನಿವೃತ್ತಿ ಪಡೆದು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದೆ” ಎಂದು ಸವಾಲು ಹಾಕಿದರು.

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸಿಹಿ ಸುದ್ದಿ: ಗಣರಾಜ್ಯೋತ್ಸವ ದಿನವೇ ಸರ್ಕಾರಿ ಉದ್ಯೋಗ ಆದೇಶ

0

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಕೊನೆಗೂ ನ್ಯಾಯ ಒದಗಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ನಿರ್ಧರಿಸಿದ್ದು, ಜನವರಿ 26ರ ಗಣರಾಜ್ಯೋತ್ಸವದ ದಿನವೇ ನೇಮಕಾತಿ ಆದೇಶಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

2021ರ ಮೇ 3ರಂದು ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಕೋವಿಡ್ ರೋಗಿಗಳು ಮೃತಪಟ್ಟಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಸಂತ್ರಸ್ತ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ನ್ಯಾಯಕ್ಕಾಗಿ ಸುದೀರ್ಘ ಹೋರಾಟ ನಡೆಸುತ್ತಿದ್ದರು.

ಅಂದು ವಿಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷವು ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವ ಭರವಸೆ ನೀಡಿದ್ದು, ವಿಶೇಷವಾಗಿ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವುದಾಗಿ ಘೋಷಿಸಿತ್ತು. ಇದೇ ಭರವಸೆಯನ್ನು ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪುನರುಚ್ಚರಿಸಿದ್ದರು.

ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆ, ನೀಡಿದ್ದ ಭರವಸೆಯನ್ನು ಈಡೇರಿಸಿ ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗ ನೀಡುವ ಮೂಲಕ ಸರ್ಕಾರ ಆಶಾಕಿರಣ ಮೂಡಿಸಿದೆ.

ಸಿಎಂ ಬದಲಾವಣೆ ಸಾಧ್ಯವೇ ಇಲ್ಲ! ಯುಗಾದಿವರೆಗೂ ಸ್ಥಿರ ಸರ್ಕಾರ – ಕೋಡಿಮಠ ಶ್ರೀಗಳ ಭವಿಷ್ಯ

0

ಬೀದರ್: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವಾಗಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ನುಡಿದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, “ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟುಕೊಡುವುದಿಲ್ಲ. ಅವರಾಗಿಯೇ ಅಧಿಕಾರ ಬಿಟ್ಟರೆ ಮಾತ್ರ ಬದಲಾವಣೆ ಸಾಧ್ಯ. ಇಲ್ಲದಿದ್ದರೆ ಯುಗಾದಿವರೆಗೂ ಯಾವುದೇ ಬದಲಾವಣೆ ನಡೆಯದು” ಎಂದು ನೇರವಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಹಾಲುಮತ ಸಮಾಜದ ಹಿನ್ನೆಲೆ ಕುರಿತು ಮಾತನಾಡಿದ ಶ್ರೀಗಳು, “ಹಾಲುಮತ ಸಮಾಜದವರಿಗೆ ಅಧಿಕಾರ ಸಿಕ್ಕರೆ ಅದನ್ನು ಬಿಡಿಸಿಕೊಳ್ಳುವುದು ಸುಲಭವಲ್ಲ. ಹಕ್ಕ-ಬುಕ್ಕ, ಛತ್ರಪತಿ ಶಿವಾಜಿ, ಅಹಲ್ಯಾಬಾಯಿ ಹೋಳ್ಕರ್ ಇದೇ ಸಮಾಜದವರು. ಸಿದ್ದರಾಮಯ್ಯ ಈ ಸಮಾಜದ ಮೊದಲ ಸಿಎಂ. ಅವರನ್ನು ಕೆಳಗಿಳಿಸುವುದು ಸುಲಭವಲ್ಲ” ಎಂದು ವಿಶ್ಲೇಷಣೆ ನೀಡಿದರು.

ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ ಅವರು, “ಅವರು ನಮಗೆ ಆತ್ಮೀಯರು. ಆದರೆ ಈಗಲೇ ಅವರ ಸಿಎಂ ಪಟ್ಟದ ಬಗ್ಗೆ ಮಾತನಾಡುವ ಸಮಯ ಬಂದಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ಇನ್ನು ರಾಜಕೀಯದ ಹೊರತಾಗಿ ದೇಶದ ಭವಿಷ್ಯ ಕುರಿತು ಆತಂಕಕಾರಿ ಮುನ್ಸೂಚನೆ ನೀಡಿದ ಶ್ರೀಗಳು,
“ದೇಶಕ್ಕೆ ಮುಂದಿನ ದಿನಗಳಲ್ಲಿ ದೊಡ್ಡ ಅಪಾಯ ಕಾದಿದೆ. ಜನಸಾಮಾನ್ಯರಿಗೆ ಸಾವು-ನೋವು ಸಂಭವಿಸುವ ಸೂಚನೆಗಳಿವೆ. ಜೊತೆಗೆ ದೇಶದ ಇಬ್ಬರು ಮಹಾನ್ ವ್ಯಕ್ತಿಗಳು ಮರಣ ಹೊಂದುವ ಸಾಧ್ಯತೆ ಇದೆ” ಎಂದು ಹೇಳಿ ಜನರಲ್ಲಿ ಆತಂಕ ಹಾಗೂ ಕುತೂಹಲ ಮೂಡಿಸಿದ್ದಾರೆ.

ನೆಹರೂ ವಿರೋಧದ ನಡುವೆಯೂ ಸೋಮನಾಥ ಮಂದಿರ ಪುನರ್ ನಿರ್ಮಾಣ: ಗೋವಿಂದ ಕಾರಜೋಳ

0

ಬೆಂಗಳೂರು: ಪಂಡಿತ್ ಜವಾಹರಲಾಲ್ ನೆಹರೂ ಅವರ ಒಪ್ಪಿಗೆಗೆ ವಿರುದ್ಧವಾಗಿಯೇ ಐತಿಹಾಸಿಕ ಸೋಮನಾಥ ಮಂದಿರದ ಪುನರ್ ನಿರ್ಮಾಣ ನಡೆದಿತ್ತು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

“ಐತಿಹಾಸಿಕ ಸೋಮನಾಥ ಮಂದಿರಕ್ಕೆ 75 ವರ್ಷ” ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಲ್ಲೇಶ್ವರದ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾರಜೋಳ ಅವರು, ಸೋಮನಾಥ ದೇವಾಲಯವು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಮತ್ತು ಮಹತ್ವದ ದೇವಾಲಯ ಎಂದು ಹೇಳಿದರು.

ಸೋಮನಾಥ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ 1951ರಲ್ಲಿ ದೇವಾಲಯವನ್ನು ಪುನರ್ ಸ್ಥಾಪಿಸಿ ಲೋಕಾರ್ಪಣೆ ಮಾಡಲಾಗಿದೆ. ಇಂದಿನ ದಿನದಲ್ಲಿ ದೇಶದ 140 ಕೋಟಿ ಜನರು ಸೋಮನಾಥ ದೇವಾಲಯಕ್ಕೆ ಭಕ್ತಿ ಹಾಗೂ ಶ್ರದ್ಧೆಯಿಂದ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಇಂದು ಬಿಜೆಪಿ ಮಾತ್ರವಲ್ಲದೆ, ದೇಶಾದ್ಯಂತ ಹಿಂದೂ ಸಮುದಾಯವು ಸೋಮನಾಥ ಮಂದಿರದ ಪುನರ್ ನಿರ್ಮಾಣದ ಸ್ಮರಣಾರ್ಥವಾಗಿ ತಮ್ಮ ತಮ್ಮ ಊರುಗಳಲ್ಲಿ ಶಿವನ ಪೂಜೆ ನಡೆಸುತ್ತಿದೆ. ಅದೇ ರೀತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ ಇಂದು ವಿಶೇಷ ಪೂಜೆ ನಡೆಸಿದ್ದೇವೆ ಎಂದು ಕಾರಜೋಳ ತಿಳಿಸಿದರು.

ಶ್ರದ್ಧೆ ಮತ್ತು ಭಕ್ತಿಯಿಂದ “ಓಂ ನಮಃ ಶಿವಾಯ” ಧ್ಯಾನ ಮಾಡಿದ್ದು, ಭಗವಂತನು ಎಲ್ಲರಿಗೂ ಒಳಿತನ್ನು ನೀಡಲಿ, ಲೋಕ ಕಲ್ಯಾಣವಾಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.

ಮುಂಬೈಗೆ ಸೋಲುಣಿಸಿ RCBಗೆ ರೋಚಕ ಜಯ: ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು?

0

ವುಮೆನ್ಸ್ ಪ್ರೀಮಿಯರ್ ಲೀಗ್ (WPL) 4ನೇ ಆವೃತ್ತಿಯ ಮೊದಲ ಪಂದ್ಯವೇ ಅಭಿಮಾನಿಗಳಿಗೆ ಭರ್ಜರಿ ರೋಮಾಂಚನ ನೀಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೀಸನ್‌ಗೆ ಶುಭಾರಂಭ ಮಾಡಿದೆ.

ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು. 155 ರನ್ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಕೊನೆಯ ಓವರ್‌ನಲ್ಲಿ 18 ರನ್ ಅಗತ್ಯವಿತ್ತು.

ಅಂತಿಮ ಓವರ್‌ನಲ್ಲಿ ನಾಟ್ ಸ್ಕೀವರ್ ಬ್ರಂಟ್ ಎಸೆದ ಬೌಲಿಂಗ್‌ನ್ನು ಸಮರ್ಥವಾಗಿ ಎದುರಿಸಿದ ನಡಿನ್ ಡಿ ಕ್ಲರ್ಕ್ 6, 4, 6, 4 ಎಂಬ ಅಬ್ಬರದ ಶಾಟ್‌ಗಳ ಮೂಲಕ ಆರ್‌ಸಿಬಿಗೆ 3 ವಿಕೆಟ್‌ಗಳ ರೋಚಕ ಜಯ ತಂದುಕೊಟ್ಟರು.

ಪಂದ್ಯ ನಂತರ ಮಾತನಾಡಿದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ, “ವುಮೆನ್ಸ್ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯವೇ ಇಷ್ಟೊಂದು ರೋಮಾಂಚಕರಾಗಿದ್ದುದು ಖುಷಿ ನೀಡಿದೆ. ಇಂತಹ ಪಂದ್ಯದಲ್ಲಿ ಗೆದ್ದಿರುವುದು ತಂಡಕ್ಕೆ ದೊಡ್ಡ ಆತ್ಮವಿಶ್ವಾಸ ನೀಡುತ್ತದೆ” ಎಂದು ಹೇಳಿದರು.

“ಆರ್‌ಸಿಬಿ ಎಂದರೆ ಥ್ರಿಲ್ಲರ್‌ಗಳಿಗೆ ಹೆಸರುವಾಸಿ. ಇಂದು ಕೂಡ ಅಂತಹದೇ ರೋಚಕ ಪಂದ್ಯವನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ನಡಿನ್ ಡಿ ಕ್ಲರ್ಕ್‌ಗೆ ಸಲ್ಲಬೇಕು. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅಪಾರ ಜವಾಬ್ದಾರಿ ನಿಭಾಯಿಸಿದ್ದಾರೆ” ಎಂದು ಮಂಧಾನ ಪ್ರಶಂಸಿಸಿದರು.

ನಡಿನ್ ಡಿ ಕ್ಲರ್ಕ್ ಈ ಹಿಂದೆ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಆಡಿದ ಅದ್ಭುತ ಇನಿಂಗ್ಸ್‌ನ್ನು ನೆನಪಿಸಿಕೊಂಡ ಮಂಧಾನ, “ಅದೇ ರೀತಿ ಈ ಪಂದ್ಯದಲ್ಲೂ ಅವರು ಆರ್‌ಸಿಬಿಗಾಗಿ ನಿರ್ಣಾಯಕ ಪ್ರದರ್ಶನ ನೀಡಿದ್ದಾರೆ” ಎಂದರು. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ WPL 4ನೇ ಸೀಸನ್‌ಗೆ ಆತ್ಮವಿಶ್ವಾಸದ ಆರಂಭ ನೀಡಿದೆ.

ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್!

0

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಮೂಡಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಯುವತಿ ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್‌ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಆಕ್ಷೇಪ ವ್ಯಕ್ತಪಡಿಸಿದರೂ, ಚಾಲಕ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಹಾಗೂ ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಿಂದ ಬೆಚ್ಚಿಬಿದ್ದ ಯುವತಿ ಕಿರುಚಾಡಿ ಸ್ಥಳೀಯರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿ ವಿವೇಕ್‌ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ಈ ಘಟನೆ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆ ಬಳಸುವ ಮಹಿಳೆಯರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಸಾರ್ವಜನಿಕರು ಹಾಗೂ ಮಹಿಳಾ ಸಂಘಟನೆಗಳು ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಚಾರ್ಮಾಡಿ ಘಾಟ್​​ನಲ್ಲಿ ಲಾರಿಗೆ ಬೆಂಕಿ: ಸಂಪೂರ್ಣ ಸುಟ್ಟು ಕರಕಲಾದ ಮೆಕ್ಕೆಜೋಳ ತುಂಬಿದ ಲಾರಿ

0

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಜ.9 ಮಧ್ಯರಾತ್ರಿ ಈ ಅವಘಡ ಸಂಭವಿಸಿದೆ.

ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳ ಲೋಡ್ ತೆಗೆದುಕೊಂಡು ಹೋಗುತ್ತಿದ್ದ KA-13-AA-4758 ಸಂಖ್ಯೆಯ ಲಾರಿಗೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಎರಡನೇ ತಿರುವಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿಯ ಟಯರ್ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ, ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಲಾರಿಯೂ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಬೆಂಕಿಯ ತೀವ್ರತೆಯಿಂದ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯ ಯುವಕರು ಬೆಳ್ತಂಗಡಿ ಅಗ್ನಿಶಾಮಕ ದಳ ಮತ್ತು ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಧಾವಿಸಿ ಬೆಂಕಿ ನಂದಿಸಿದ್ದಾರೆ. ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸರು ಸಂಚಾರ ಪುನರ್ ವ್ಯವಸ್ಥೆ ಮಾಡಿದರು.

ಲಾರಿ ಬೆಂಕಿಗಾಹುತಿಯಾದ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪದೇ ಪದೇ ಚಾರ್ಮಾಡಿ ಘಾಟ್‌ನಲ್ಲಿ ಈ ರೀತಿಯ ಘಟನೆಗಳು ಸಂಭವಿಸುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಬಡಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ ಖಂಡನೀಯ: ಬಿ.ವೈ. ವಿಜಯೇಂದ್ರ

0

ಬೆಂಗಳೂರು: ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿರುವ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಕೈ ಹಾಕಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ಕ್ರಮವನ್ನು ಪ್ರಬಲವಾಗಿ ಖಂಡಿಸುತ್ತಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಎಲ್ಲ ಕನ್ನಡಪರ ಸಂಘಟನೆಗಳು ಕೂಡ ಈ ವಿಷಯದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿರುವುದಾಗಿ ತಿಳಿಸಿದರು.

ಕೇರಳದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವ ವಿಚಾರದಲ್ಲಿ ಕೇವಲ ಹೇಳಿಕೆಗಳು ಅಥವಾ ಪತ್ರ ಬರೆಯುವುದರಿಂದ ಪ್ರಯೋಜನವಿಲ್ಲ. ಕನ್ನಡಿಗರಿಗೆ ಅನ್ಯಾಯವಾಗಬಾರದು ಎಂಬುದಾದರೆ, ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಮೇಲೆ ಒತ್ತಡ ತರುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಅವರು ಹೇಳಿದರು. ಕೇರಳದಲ್ಲಿರುವ ಕನ್ನಡ ಶಾಲೆಗಳ ರಕ್ಷಣೆ ಮಾಡಬೇಕು ಹಾಗೂ ಮಲೆಯಾಳ ಭಾಷೆ ಹೇರಿಕೆಗೆ ಅವಕಾಶ ಕೊಡಬಾರದು ಎಂಬುದಾಗಿ ಸಿದ್ದರಾಮಯ್ಯ ಸರ್ಕಾರ ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಎಐಸಿಸಿ) ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕದ ವಿಚಾರಗಳಲ್ಲಿ ಪದೇಪದೇ ಮೂಗು ತೂರಿಸುವುದಾಗಿ ಆರೋಪಿಸಿದ ವಿಜಯೇಂದ್ರ, ವಯನಾಡಿನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹಲವು ಬಾರಿ ಸಹಾಯಹಸ್ತ ಚಾಚಿರುವುದು ಎಲ್ಲರಿಗೂ ತಿಳಿದ ವಿಚಾರ ಎಂದರು.

error: Content is protected !!