ಬೆಂಗಳೂರು: ಸಾರ್ವಜನಿಕ ಕಾಮಗಾರಿಗಳಿಗೆ ಬಿಡ್ ಸಲ್ಲಿಸುವ ವೇಳೆ ಅಸ್ತಿತ್ವದಲ್ಲಿರುವ ಇ–ಖರೀದಿ ಪ್ರಕ್ರಿಯೆಯಲ್ಲಿನ ನ್ಯೂನತೆಗಳನ್ನು ಗುರುತಿಸಿ, ರಾಜ್ಯದ ಇ–ಖರೀದಿ ವ್ಯವಸ್ಥೆಯನ್ನು ತಾಂತ್ರಿಕವಾಗಿ ಪರಿಷ್ಕರಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಜತೆಗೆ, ಪ್ರಸ್ತುತ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ವಂಚನೆಯನ್ನು ತೊಡೆದುಹಾಕುವ ಉದ್ದೇಶದಿಂದ ಉನ್ನತ ಮಟ್ಟದ ಸ್ವಯಂಚಾಲಿತ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಟೆಂಡರ್ ದಾಖಲೆಗಳ ರಿಯಲ್–ಟೈಮ್ ಪರಿಶೀಲನೆಯನ್ನು ಕಡ್ಡಾಯಗೊಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ನಿಯಮ–2000ರ ನಿಯಮ 26ಎ ಅಡಿಯಲ್ಲಿ, ಮಂಗಳೂರು ಮಹಾನಗರ ಪಾಲಿಕೆಗೆ ಬಿಡ್ ಸಲ್ಲಿಸುವ ವೇಳೆ ನಕಲಿ ಪರವಾನಗಿಗಳು, ಅಸ್ತಿತ್ವದಲ್ಲಿಲ್ಲದ ಕಾಮಗಾರಿ ಆದೇಶಗಳು ಹಾಗೂ ನಿಗದಿಗಿಂತ ಅಧಿಕ ವೆಚ್ಚದ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದ ಆರೋಪದ ಮೇಲೆ ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ನಿಷೇಧಿಸಿರುವುದನ್ನು ಪ್ರಶ್ನಿಸಿ ಮಂಗಳೂರು ಮೂಲದ ಗುತ್ತಿಗೆದಾರ ಅನಂತಕೃಷ್ಣ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಮಹತ್ವದ ನಿರ್ದೇಶನಗಳನ್ನು ನೀಡಿದೆ.
ರಾಜ್ಯದ ಎಲ್ಲಾ ಸಾರ್ವಜನಿಕ ಖರೀದಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇ–ಪ್ರಕ್ಯೂರ್ಮೆಂಟ್ ಪೋರ್ಟಲ್ ಮೂಲಕವೇ ನಡೆಯಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಬಿಡ್ಡರ್ಗಳು ಸಲ್ಲಿಸುವ ಟೆಂಡರ್ ದಾಖಲೆಗಳನ್ನು ಮುಖಾಮುಖಿ ಹಸ್ತಕ್ಷೇಪವಿಲ್ಲದೆ ಸ್ವಯಂ ಪರಿಶೀಲಿಸಲು, ಇ–ಪ್ರಕ್ಯೂರ್ಮೆಂಟ್ ಪೋರ್ಟಲ್ ಮತ್ತು ವಿವಿಧ ಸರ್ಕಾರಿ ಡೇಟಾಬೇಸ್ಗಳ ನಡುವೆ ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್ಫೇಸ್ (ಎಪಿಐ) ಏಕೀಕರಣವನ್ನು ಸ್ಥಾಪಿಸಿ ಕಾರ್ಯಗತಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಇದು ಒಂದೇ ಒಂದು ಪ್ರಕರಣಕ್ಕೆ ಸೀಮಿತವಲ್ಲ; ನಕಲಿ ಟೆಂಡರ್ ದಾಖಲೆಗಳನ್ನು ಸಲ್ಲಿಸುವ ಪ್ರವೃತ್ತಿ ಸಾರ್ವಜನಿಕ ಬೊಕ್ಕಸಕ್ಕೆ ಭಾರಿ ನಷ್ಟ ಉಂಟುಮಾಡಿದ್ದು, ಬಿಡ್ಡಿಂಗ್ ವ್ಯವಸ್ಥೆಯ ಸಮಗ್ರತೆಗೆ ಗಂಭೀರ ಧಕ್ಕೆ ತಂದಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಸಾರ್ವಜನಿಕ ಖರೀದಿ ಪ್ರಕ್ರಿಯೆಯ ಪಾರದರ್ಶಕತೆ ಸಾರ್ವಜನಿಕ ಕಾಮಗಾರಿಗಳ ಗುಣಮಟ್ಟ, ನಿಯಮಗಳ ಅನುಸರಣೆ, ವ್ಯಾಪಾರ–ವೃತ್ತಿಯ ಸ್ವಾತಂತ್ರ್ಯ ಹಾಗೂ ಸಾರ್ವಜನಿಕ ಸಂಪನ್ಮೂಲಗಳ ರಕ್ಷಣೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಇದು ಕೇವಲ ಆಡಳಿತಾತ್ಮಕ ಕಡ್ಡಾಯವಲ್ಲ; ಸಂವಿಧಾನದ ವಿಧಿ 14 (ಸಮಾನತೆ) ಮತ್ತು ವಿಧಿ 19 ರಲ್ಲಿ ಅಡಕವಾದ ತತ್ವಗಳನ್ನು ಆಧರಿಸಿದ ಸಾಂವಿಧಾನಿಕ ಆದೇಶವಾಗಿದೆ ಎಂದು ಪೀಠ ಹೇಳಿದೆ.
ಕಂಪನಿಗಳ ನೋಂದಣಿ ಸಂಸ್ಥೆ, ಜಿಎಸ್ಟಿ ಇಂಡಿಯಾ ಪೋರ್ಟಲ್, ಭಾರತೀಯ ರಿಸರ್ವ್ ಬ್ಯಾಂಕ್, ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು, ನಿಗಮ–ಮಂಡಳಿಗಳು, ಪರಿಸರ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಉದ್ಯಮಗಳು, ಸ್ಮಾರ್ಟ್ ಸಿಟಿ ಘಟಕಗಳು, ಮೂಲಸೌಕರ್ಯ ಅಭಿವೃದ್ಧಿ ಮಂಡಳಿಗಳು, ಪುರಸಭೆಗಳು, ಗ್ರಾಮ ಪಂಚಾಯಿತಿಗಳು ಹಾಗೂ ಜಿಲ್ಲಾಡಳಿತಗಳೊಂದಿಗೆ ಸಮಾಲೋಚನೆ ನಡೆಸಿ ಎಪಿಐ ಏಕೀಕರಣ ಜಾರಿಗೆ ತರಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

