ಬೆಂಗಳೂರು:- ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.
ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಪ್ರಕರಣ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಹೇಳಿದ ಕೆಲವೇ ಗಂಟೆಗಳಲ್ಲಿ ಆದೇಶ ಹೊರಬಿದ್ದಿದೆ. ಈ ಹಿಂದೆ ಎಡಿಜಿಪಿ ಅವರು ಪೊಲೀಸರ ಗನ್ನಿಂದ ಫೈರಿಂಗ್ ಆಗಿಲ್ಲ, ಖಾಸಗಿ ಗನ್ನಿಂದ ಗುಂಡಿನ ದಾಳಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದರು.
ಪ್ರಕರಣದಲ್ಲಿ ಪೆಟ್ರೋಲ್ ಬಾಂಬ್ ಬಳಕೆಯ ಆರೋಪವೂ ಕೇಳಿಬಂದಿದ್ದು, ತನಿಖೆಯ ಬಳಿಕ ಸತ್ಯ ಹೊರಬರಲಿದೆ ಎಂದು ಗೃಹ ಸಚಿವರು ತಿಳಿಸಿದ್ದರು. ಇನ್ನೂ ಶಾಸಕ ಜನಾರ್ದನ ರೆಡ್ಡಿ ಪ್ರಕರಣದ ತನಿಖೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಸಕ ಭರತ್ ರೆಡ್ಡಿ ನಿರ್ದೇಶನದಂತೆ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆ ನಡೆದ 9 ದಿನಗಳಾದರೂ ಒಬ್ಬ ಗನ್ಮ್ಯಾನ್ ಮಾತ್ರ ಬಂಧನವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಭರತ್ ರೆಡ್ಡಿ ಬಂಧನ ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದರು.

