Home Blog Page 2

RSS ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಎಲ್ ಸಂತೋಷ್ ತಿರುಗೇಟು

0

ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಬಿಎಲ್ ಸಂತೋಷ್, ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್‌ನ ಕೊಡುಗೆಗಳ ಬಗ್ಗೆ ದೇಶಾಭಿಮಾನಿಗಳಿಗೆ ತಿಳಿದಿದೆ ಎಂದು ಹೇಳಿದರು.

“ಆರ್‌ಎಸ್‌ಎಸ್ ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ. ನೋಂದಣಿ ಮಾಡಿಕೊಂಡಿರುವ ಸಂಘಟನೆಗಳು ಏನೇನು ಮಾಡುತ್ತಿವೆ ಎಂಬುದು ನಮಗೆ ಗೊತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ತಾವು ಬಿಜೆಪಿ ಕಾರ್ಯಕರ್ತರಾಗಿದ್ದರೂ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಲು ಬಂದಿಲ್ಲ ಎಂದು ಹೇಳಿದ ಬಿಎಲ್ ಸಂತೋಷ್, ಬೆಂಗಳೂರಿನ ಶಿವಾಜಿನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 20 ವರ್ಷಗಳಿಂದ ಹಿಂದೂ ಪ್ರತಿನಿಧಿಯನ್ನು ಶಾಸಕರನ್ನಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.

“ಈ ಎರಡು ಕ್ಷೇತ್ರಗಳಲ್ಲಿ ಹಿಂದೂ ನಾಯಕನನ್ನು ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ನೋಡೋಣ” ಎಂದು ಸವಾಲು ಹಾಕಿದರು.

ಆರ್‌ಎಸ್‌ಎಸ್ ನೋಂದಣಿ ಮಾಡಿಕೊಂಡಿದೆಯೇ ಎಂಬುದು ಸಂಘಟನೆಯ ಕಾರ್ಯವನ್ನು ಅಳೆಯುವ ಮಾನದಂಡವಲ್ಲ. ಅದೇ ರೀತಿ ಪ್ರಿಯಾಂಕ್ ಖರ್ಗೆ ಅವರೂ ಎಲ್ಲದಕ್ಕೂ ಮಾನದಂಡವಲ್ಲ ಎಂದು ಸಂತೋಷ್ ಟೀಕಿಸಿದರು.

ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಹಿನ್ನೆಲೆಯನ್ನು ಉಲ್ಲೇಖಿಸಿದ ಬಿಎಲ್ ಸಂತೋಷ್, ರಜಾಕರ ದಾಳಿಯ ಸಂದರ್ಭದಲ್ಲಿ ಅವರ ಕುಟುಂಬ ಕಲಬುರಗಿಗೆ ಬಂದಿದ್ದ ವಿಚಾರವನ್ನು ಪ್ರಸ್ತಾಪಿಸಿದರು.

ರಜಾಕರ ದಾಳಿಗೆ ಹೆದರಿ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಬಂದಿದ್ದರು. ಆ ಸಂದರ್ಭದಲ್ಲಿ ರಜಾಕರ ವಿರುದ್ಧ ನಿಂತಿದ್ದು ಆರ್‌ಎಸ್‌ಎಸ್ ಕಾರ್ಯಕರ್ತರು ಎಂದು ಸಂತೋಷ್ ಹೇಳಿದರು.

“ನಿಮ್ಮ ಕುಟುಂಬ ಇಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಹಿಂದೂಗಳು ಕಾರಣ. ಆಗ ರಜಾಕರ ವಿರುದ್ಧ ನಿಂತಿದ್ದು ಇದೇ ಆರ್‌ಎಸ್‌ಎಸ್. ಅಂದು ನಿಮ್ಮ ಪೊಲೀಸರು ಬಂದಿಲ್ಲ, ನಿಮ್ಮ ರಾಜಕಾರಣಿಗಳು ಬಂದಿಲ್ಲ. ಆರ್‌ಎಸ್‌ಎಸ್‌ನ ಯುವಕರು ರಸ್ತೆಗಳಲ್ಲಿ ನಿಂತಿದ್ದರು. ಇದನ್ನು ನೀವು ನೆನಪಿಟ್ಟುಕೊಳ್ಳಬೇಕು” ಎಂದು ಬಿಎಲ್ ಸಂತೋಷ್ ಹೇಳಿದರು.

ಆರ್‌ಎಸ್‌ಎಸ್‌ನ ನೋಂದಣಿ ವಿಚಾರಕ್ಕಿಂತ ಅದರ ಸಾಮಾಜಿಕ ಹಾಗೂ ರಾಷ್ಟ್ರೀಯ ಕಾರ್ಯಚಟುವಟಿಕೆಗಳನ್ನು ಗಮನಿಸಬೇಕು ಎಂದು ಅವರು ಪ್ರತಿಪಾದಿಸಿದರು.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 72,000 ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಡಿಕೆಶಿ

0

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆರು ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಶಿಕ್ಷಣ, ಆರ್ಥಿಕತೆ ಹಾಗೂ ಆಡಳಿತ ಕ್ಷೇತ್ರದಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಯುವಕರಿಗೆ ನೆರವಾಗುವ ‘ಯುವ ಉದ್ಯೋಗ ಸೇತು’ ಯೋಜನೆ ಜಾರಿಗೆ ತರಲಾಗುವುದು. ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮಾಸಿಕ ₹2,500 ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ AIಗೆ ಆದ್ಯತೆ

ಶಿಕ್ಷಣ ಕ್ಷೇತ್ರದಲ್ಲೂ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ ಡಿ.ಕೆ. ಶಿವಕುಮಾರ್, ಆರನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5ರಷ್ಟು ವಿಶೇಷ ಮೀಸಲಾತಿ ನೀಡಲಾಗುವುದು. ಯುವಕರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಒಕ್ಕೂಟ ತತ್ವ ಮತ್ತಷ್ಟು ಗಟ್ಟಿಯಾಗಲಿ

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ, ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ದೇಶದ ಅಭಿವೃದ್ಧಿಗೆ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಗಡಿಗಳನ್ನು ಕಾಯುತ್ತಿರುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸಿದ ಅವರು, ಕಾಯಕ, ಸಮಾನತೆ ಮತ್ತು ದಾಸೋಹದ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವುದು ತಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದು ತಿಳಿಸಿದರು.

2047ರ ವೇಳೆಗೆ ₹320 ಲಕ್ಷ ಕೋಟಿ ಆರ್ಥಿಕತೆಯ ಗುರಿ

ಪಂಡಿತ್ ಜವಾಹರಲಾಲ್ ನೆಹರೂ ಅವರ ‘ನವ ಭಾರತ’ದ ಕಲ್ಪನೆಯಂತೆ ‘ಯುವ ಕರ್ನಾಟಕ–ನವ ಭಾರತ’ ಎಂಬ ಧ್ಯೇಯದೊಂದಿಗೆ ರಾಜ್ಯವನ್ನು ಮುನ್ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ₹320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಯುವಕರಿಗೆ ಹೆಚ್ಚಿನ ಅವಕಾಶಗಳು, ಉದ್ಯೋಗ ಸೃಷ್ಟಿ ಹಾಗೂ ಸಮಗ್ರ ಅಭಿವೃದ್ಧಿಯ ಮೂಲಕ ಈ ಗುರಿ ಸಾಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜನರ ಮನೆಬಾಗಿಲಿಗೆ ಆಡಳಿತ

ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲಾಗಿದ್ದು, ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಪರ ಹಾಗೂ ಸರ್ವರನ್ನೂ ಒಳಗೊಂಡ ಆಡಳಿತ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

‘ನಾವೇ ಆಸ್ತಿ ಮಾಲೀಕರು’ ಎಂದು ನಕಲಿ ದಾಖಲೆ ಸೃಷ್ಟಿಸಿದ ಆರೋಪ: ಮೂವರು ಮಹಿಳೆಯರು ಪೊಲೀಸರ ಬಲೆಗೆ

0

ಬೆಳಗಾವಿ: ನಕಲಿ ದಾಖಲೆಗಳ ಮೂಲಕ ಬೇರೆಯವರ ಆಸ್ತಿಯನ್ನು ತಮ್ಮದೆಂದು ಬಿಂಬಿಸಿಕೊಂಡು ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಮೂವರು ಮಹಿಳೆಯರನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಛಾಯಾ ಅರುಣ ಕದಮ್, ಭಾಗ್ಯಶ್ರೀ ಸಂತೋಷ ಅತಿವಾಡಕರ್ ಹಾಗೂ ಜಾನ್ವಿ ವಿನಾಯಕ ಭೋಸಲೆ ಬಂಧಿತರು.

ಹೊನ್ನಾವರ ತಾಲೂಕಿನ ದುರ್ಗಕೇರಿ ಗ್ರಾಮದ ಅಶೋಕ್ ಬಾಳಪ್ಪ ಯರಗುದ್ದಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳಗಾವಿಯ ಎಂ.ಎಂ. ಎಕ್ಸ್‌ಟೆನ್ಶನ್-2ರಲ್ಲಿರುವ ತಮ್ಮ ಹಾಗೂ ಸಹೋದರಿಯರಿಗೆ ಸೇರಿದ ನಿವೇಶನವನ್ನು ಕಬಳಿಸುವ ಉದ್ದೇಶದಿಂದ ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ತಾವೇ ಆಸ್ತಿಯ ಮೂಲ ಮಾಲೀಕರು ಎಂಬಂತೆ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ವರ್ಗಾವಣೆ ಮಾಡಿಕೊಳ್ಳಲು ಯತ್ನಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಚಟುವಟಿಕೆಗಳ ಕುರಿತು ತನಿಖೆ ನಡೆಸಿದರು. ಶುಕ್ರವಾರ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆಸ್ತಿ ಕಬಳಿಸುವ ಉದ್ದೇಶದಿಂದ ವಂಚನೆ ನಡೆಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಕಲಂ 416, 417, 419, 420, 461, 465, 468, 474 ಹಾಗೂ ಸಹಕಲಂ 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನಿಖೆಯ ಬಳಿಕ ಮೂವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ನಡೆಸಿದ ಮಾರ್ಕೆಟ್ ಠಾಣೆ ಪಿಐ ಜೆ.ಎಂ. ಕಾಲಿಮಿರ್ಚಿ, ಪಿಎಸ್‌ಐ ಹೆಚ್.ಎಲ್. ಕೆರೂರ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪರೇಡ್‌ನಿಂದ ಸಂಗೀತ ರಸಸಂಜೆಯವರೆಗೆ: ವಿಧಾನಸೌಧದ ಮುಂದೆ ಇಂದು ಅದ್ಧೂರಿ ‘ಫ್ರೀಡಂ ಹಬ್ಬ’

0

ಬೆಂಗಳೂರು, ಆ.15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಇಂದು ಅದ್ಧೂರಿ ‘ಫ್ರೀಡಂ ಹಬ್ಬ’ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 10 ಗಂಟೆಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಮಕ್ಕಳ ಸಾಂಸ್ಕೃತಿಕ ಪ್ರದರ್ಶನ, ಫ್ರೀಡಂ ಪರೇಡ್ ಹಾಗೂ ಸಂಗೀತ-ನೃತ್ಯ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಲಿವೆ.

ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಶಾಲಾ ಮಕ್ಕಳಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಪ್ರತಿಭೆಗಳನ್ನು ಪ್ರದರ್ಶಿಸುವ ಮೂಲಕ ಮಕ್ಕಳು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಮೆರುಗು ನೀಡಲಿದ್ದಾರೆ.

ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ವಿಧಾನಸೌಧ ಮತ್ತು ಹೈಕೋರ್ಟ್ ನಡುವಿನ ಅಂಬೇಡ್ಕರ್ ರಸ್ತೆಯಲ್ಲಿ ‘ಫ್ರೀಡಂ ಪರೇಡ್’ ನಡೆಯಲಿದೆ. ವಿಧಾನಸೌಧದ ಮುಂಭಾಗದ ಐಪಿಒ ಸರ್ಕಲ್, ಅಂದರೆ ಗೋಪಾಲಗೌಡ ಸರ್ಕಲ್‌ನಿಂದ ಆರಂಭವಾಗುವ ಮೆರವಣಿಗೆ ತಿಮ್ಮಯ್ಯ ವೃತ್ತದವರೆಗೆ ಸಾಗಲಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 15 ತಂಡಗಳು ಹಾಗೂ ವಿವಿಧ ರಾಜ್ಯಗಳ 10 ಪ್ರಮುಖ ಕಲಾತಂಡಗಳು ಪರೇಡ್‌ನಲ್ಲಿ ಭಾಗವಹಿಸಿ ತಮ್ಮ ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸಲಿವೆ.

ಸಂಜೆ 5.30ರಿಂದ ರಾತ್ರಿ 10 ಗಂಟೆಯವರೆಗೆ ವಿಧಾನಸೌಧದ ಮುಂಭಾಗದಲ್ಲಿರುವ ಬೃಹತ್ ವೇದಿಕೆಯಲ್ಲಿ ಸಂಗೀತ ರಸಸಂಜೆ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. ಖ್ಯಾತ ಗಾಯಕರಾದ ಎಂ.ಡಿ. ಪಲ್ಲವಿ, ಸಂಜಿತ್ ಹೆಗ್ಡೆ, ರಘು ದೀಕ್ಷಿತ್ ಸೇರಿದಂತೆ 20ಕ್ಕೂ ಹೆಚ್ಚು ಕಲಾವಿದರು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಂಚಿತವಾಗಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಈಗಾಗಲೇ 20 ಸಾವಿರಕ್ಕೂ ಅಧಿಕ ಮಂದಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ.

‘ಫ್ರೀಡಂ ಹಬ್ಬ’ದ ಹಿನ್ನೆಲೆಯಲ್ಲಿ ಭದ್ರತೆಗೂ ವಿಶೇಷ ಒತ್ತು ನೀಡಲಾಗಿದೆ. ಡಿಸಿಪಿ ಹಾಗೂ ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

‘ಅಶ್ಲೀಲತೆ ಇದ್ದರೆ ತಪ್ಪು, ಆದರೆ ಗೆರೆ ದಾಟಿಲ್ಲ’: ‘ತಬಾಹಿ’ ವಿವಾದಕ್ಕೆ ಯಶ್ ಸ್ಪಷ್ಟನೆ

ಬೆಂಗಳೂರು: ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡಿನ ಬೋಲ್ಡ್ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸೃಷ್ಟಿಸಿದ್ದ ವಿವಾದಕ್ಕೆ ರಾಕಿಂಗ್ ಸ್ಟಾರ್ ಯಶ್ ಇದೀಗ ನೇರ ಉತ್ತರ ನೀಡಿದ್ದಾರೆ. ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ಯಾವುದೇ ಮಿತಿಯನ್ನು ಮೀರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ಅಶ್ಲೀಲತೆಯನ್ನು ತಾವು ತಪ್ಪು ಎಂದು ಪರಿಗಣಿಸುತ್ತಾರೆ. ಆದರೆ ‘ತಬಾಹಿ’ ಹಾಡಿನ ದೃಶ್ಯಗಳನ್ನು ಆ ರೀತಿಯಲ್ಲಿ ನೋಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

‘ನಾವು ಯಾವುದೇ ಗೆರೆ ದಾಟಿಲ್ಲ. ನಾನು ಕಿಯಾರಾಗೆ ಕಿಸ್ ಕೂಡ ಮಾಡಿಲ್ಲ. ಹಾಡಿನ ಪ್ರತಿಯೊಂದು ದೃಶ್ಯವನ್ನು ಕಲಾತ್ಮಕ ದೃಷ್ಟಿಕೋನದಿಂದ ಚಿತ್ರೀಕರಿಸಲಾಗಿದೆ’ ಎಂದು ಯಶ್ ಸ್ಪಷ್ಟಪಡಿಸಿದ್ದಾರೆ.

ಸಿನಿಮಾದಲ್ಲಿ ಯಾವುದೇ ದೃಶ್ಯವನ್ನು ಸುಮ್ಮನೆ ಸೇರಿಸುವುದಿಲ್ಲ. ಪ್ರತಿಯೊಂದು ದೃಶ್ಯಕ್ಕೂ ಕಥೆಯೊಳಗೆ ಒಂದು ಉದ್ದೇಶ ಮತ್ತು ಭಾವನಾತ್ಮಕ ಅರ್ಥವಿರುತ್ತದೆ. ಸಂಪೂರ್ಣ ಸಿನಿಮಾವನ್ನು ನೋಡಿದಾಗ ಈ ದೃಶ್ಯಗಳ ಹಿಂದಿನ ಉದ್ದೇಶ ಪ್ರೇಕ್ಷಕರಿಗೆ ಅರ್ಥವಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ಟಾಕ್ಸಿಕ್’ ಕೇವಲ ಮನರಂಜನೆಯ ಸಿನಿಮಾ ಮಾತ್ರವಲ್ಲ. ಇಂದಿನ ಯುವಜನರ ಮನಸ್ಥಿತಿ, ಹಿರಿಯರೊಂದಿಗೆ ಅವರ ಸಂಭಾಷಣೆ, ಸಮಾಜದ ಹಳೆಯ ಕಟ್ಟುಪಾಡುಗಳ ಕುರಿತು ಅವರು ಕೇಳುವ ಪ್ರಶ್ನೆಗಳು ಹಾಗೂ ಹೊಸ ತಲೆಮಾರಿನ ಆಲೋಚನೆಗಳನ್ನು ಕಥೆಯ ಮೂಲಕ ಪ್ರತಿಬಿಂಬಿಸುವ ಪ್ರಯತ್ನ ಮಾಡಲಾಗಿದೆ ಎಂದು ಯಶ್ ತಿಳಿಸಿದ್ದಾರೆ.

ಹೀಗಾಗಿ ‘ತಬಾಹಿ’ ಹಾಡಿನ ಕೆಲ ದೃಶ್ಯಗಳನ್ನು ಆಧರಿಸಿ ಸಿನಿಮಾವನ್ನು ನಿರ್ಧರಿಸಬಾರದು. ಸಿನಿಮಾದ ಸಂಪೂರ್ಣ ಕಥೆ ಮತ್ತು ಅದರ ಸೃಜನಶೀಲ ಉದ್ದೇಶವನ್ನು ಗಮನಿಸಿದಾಗ ವಿವಾದಕ್ಕೆ ಕಾರಣವಾದ ದೃಶ್ಯಗಳ ಹಿನ್ನೆಲೆ ಸ್ಪಷ್ಟವಾಗಲಿದೆ ಎಂಬುದು ಯಶ್ ಅವರ ನಿಲುವಾಗಿದೆ.

ನಡುರಾತ್ರಿಯಲ್ಲೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಸಿಗಂದೂರು ಸೇತುವೆಯಲ್ಲಿ ತಿರಂಗಾ ಹಿಡಿದು ‘ವಂದೇ ಮಾತರಂ’ ಘೋಷಣೆ

0

ಶಿವಮೊಗ್ಗ: ಮಧ್ಯರಾತ್ರಿ 12 ಗಂಟೆ. ಸಿಗಂದೂರು ಸೇತುವೆ ಮೇಲೆ ತಿರಂಗಾ. ಕೈಯಲ್ಲಿ ರಾಷ್ಟ್ರಧ್ವಜ ಹಿಡಿದ ಗ್ರಾಮಸ್ಥರು. ಮೊಳಗಿದ ‘ವಂದೇ ಮಾತರಂ’ ಘೋಷಣೆ. ಹೀಗೆ ಕರೂರು ಗ್ರಾಮಸ್ಥರು 80ನೇ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟವಾಗಿ ಬರಮಾಡಿಕೊಂಡಿದ್ದಾರೆ.

ಕಳೆದ ವರ್ಷ ಲೋಕಾರ್ಪಣೆಗೊಂಡ ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸಿದ ಗ್ರಾಮಸ್ಥರು, ಬಳಿಕ ತಿರಂಗಾ ಹಿಡಿದು ಸೇತುವೆ ಮೇಲೆ ಮೆರವಣಿಗೆ ನಡೆಸಿದರು. ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದರ ಜತೆಗೆ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ದೇವರ ಸನ್ನಿಧಿಯಲ್ಲಿ ರಾಷ್ಟ್ರಧ್ವಜವಿಟ್ಟು ಪೂಜೆ ಸಲ್ಲಿಸಲಾಯಿತು. ದೇವಾಲಯದ ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ದೇಶಭಕ್ತಿ ಮತ್ತು ಧಾರ್ಮಿಕ ಆಚರಣೆಯನ್ನು ಒಟ್ಟುಗೂಡಿಸಿ ಮಧ್ಯರಾತ್ರಿಯಲ್ಲೇ ಸ್ವಾತಂತ್ರ್ಯೋತ್ಸವ ಆಚರಿಸಿದ ಕರೂರು ಗ್ರಾಮಸ್ಥರ ವಿಭಿನ್ನ ಪ್ರಯತ್ನ ಗಮನ ಸೆಳೆದಿದೆ.

ತಮಿಳುನಾಡು ಸಿಎಂ ಧ್ವಜಾರೋಹಣ: ಮುಂದಿನ ಸಾಲಿನಲ್ಲಿ ವಿಜಯ್ ಪೋಷಕರ ಪಕ್ಕದಲ್ಲೇ ಕುಳಿತ ತ್ರಿಶಾ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಚೆನ್ನೈನ ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಉಪಸ್ಥಿತಿ ವಿಶೇಷ ಗಮನ ಸೆಳೆಯಿತು.

ಹಳದಿ ಸೀರೆ ಧರಿಸಿ, ಮಲ್ಲಿಗೆ ಹೂ ಮುಡಿದು ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ತ್ರಿಷಾ, ವೇದಿಕೆಯ ಮುಂಭಾಗದ ಸಾಲಿನಲ್ಲಿ ಕುಳಿತು ಮುಖ್ಯಮಂತ್ರಿ ವಿಜಯ್ ಅವರ ಆಗಮನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ತ್ರಿಷಾ ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕಾರ್ಯಕ್ರಮದಲ್ಲಿ ತ್ರಿಷಾ ಅವರ ತಾಯಿ ಉಮಾ ಕೃಷ್ಣನ್ ಕೂಡ ಭಾಗವಹಿಸಿದ್ದರು. ಇದೇ ವೇಳೆ ಮುಖ್ಯಮಂತ್ರಿ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಅವರನ್ನು ತ್ರಿಷಾ ಆತ್ಮೀಯವಾಗಿ ಅಪ್ಪಿಕೊಂಡಿದ್ದಾರೆ. ಈ ಕ್ಷಣದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಗಮನ ಸೆಳೆದಿದೆ.

ಮುಖ್ಯಮಂತ್ರಿ ವಿಜಯ್ ಅವರ ಪೋಷಕರ ಪಕ್ಕದಲ್ಲೇ ತ್ರಿಷಾ ಕುಳಿತಿದ್ದರು. ಸ್ವಾತಂತ್ರ್ಯೋತ್ಸವದ ಪರೇಡ್ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಅವರಿಗೆ ತ್ರಿಷಾ ವಂದನೆ ಸಲ್ಲಿಸಿದ ದೃಶ್ಯವೂ ಕಾರ್ಯಕ್ರಮದ ಪ್ರಮುಖ ಕ್ಷಣಗಳಲ್ಲಿ ಒಂದಾಗಿತ್ತು.

ಇನ್ನು ಕಾರ್ಯಕ್ರಮದಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, ತಮಿಳುನಾಡಿನ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಎಂದಿಗೂ ಕೈಬಿಡುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕ ಹಿತಾಸಕ್ತಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. 2036ರ ವೇಳೆಗೆ ತಮಿಳುನಾಡಿನ ಆರ್ಥಿಕತೆಯನ್ನು 1.5 ಟ್ರಿಲಿಯನ್ ಡಾಲರ್‌ಗೆ ಏರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ವಿಜಯ್ ಹೇಳಿದರು.

ಲಂಚದ ಹಣವನ್ನು ವಿಚಾರಣೆ ಮುಗಿಯುವವರೆಗೆ ವರ್ಷಗಟ್ಟಲೆ ಕೋರ್ಟ್ʼನಲ್ಲಿ ಇಡುವಂತಿಲ್ಲ: ದೂರುದಾರರಿಗೆ ಹಣ ಮರುಪಾವತಿಗೆ ಹೈಕೋರ್ಟ್

0

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ಕಾರ್ಯಾಚರಣೆ ವೇಳೆ (ಟ್ರಾಪ್) ವಶಪಡಿಸಿಕೊಳ್ಳುವ ಲಂಚದ ಹಣವನ್ನು ದೂರುದಾರರಿಗೆ ಮರುಪಾವತಿಸಲು ವಿಚಾರಣೆ ಪೂರ್ಣಗೊಳ್ಳುವವರೆಗೆ ವರ್ಷಗಟ್ಟಲೆ ಕಾಯಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದೂರುದಾರರಿಗೆ ಹಣವನ್ನು ಸರ್ಕಾರದ ಖಜಾನೆಯಿಂದ ಸಮಾನ ಮೊತ್ತದಲ್ಲಿ ಪಾವತಿಸಲು ಕಾನೂನಿನಲ್ಲಿ ಅಡ್ಡಿಯಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಬಳ್ಳಾರಿಯ ಗುತ್ತಿಗೆದಾರ ಜಿ. ಈಶ್ವರಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಧಿಕಾರಿಗಳು ಲಂಚ ಕೇಳಿದ ಹಿನ್ನೆಲೆಯಲ್ಲಿ, ಟ್ರಾಪ್ ಕಾರ್ಯಾಚರಣೆಯಲ್ಲಿ ಅಧಿಕಾರಿಗೆ ನೀಡಲಾಗಿದ್ದ ಹಣವನ್ನು ಮರುಪಾವತಿಸುವಂತೆ ಈಶ್ವರಯ್ಯ ಅವರು ಮನವಿ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಹಾಗೂ ವಿವಿಧ ಹೈಕೋರ್ಟ್‌ಗಳ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಕಾನೂನಿಗೆ ನೆರವಾಗುವ ಪ್ರಾಮಾಣಿಕ ನಾಗರಿಕನ ಕಷ್ಟದ ದುಡಿಮೆಯ ಹಣವನ್ನು ಸುದೀರ್ಘ ಕಾಲ ನ್ಯಾಯಾಂಗ ವಶದಲ್ಲಿ ಇರಿಸಿ ಆತನನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಪ್ರಕರಣಗಳ ವಿಚಾರಣೆ ಪೂರ್ಣಗೊಳ್ಳಲು ಹಲವು ವರ್ಷಗಳು ಬೇಕಾಗಬಹುದು. ಹಲವು ಸಂದರ್ಭಗಳಲ್ಲಿ ದೂರುದಾರರು ಸಾಲ ಮಾಡಿ ಅಥವಾ ತಮ್ಮ ಕಷ್ಟದ ಗಳಿಕೆಯಿಂದ ಹಣವನ್ನು ವ್ಯವಸ್ಥೆ ಮಾಡಿ ಲಂಚದ ರೂಪದಲ್ಲಿ ಅಧಿಕಾರಿಗಳಿಗೆ ನೀಡಿರುತ್ತಾರೆ. ಭ್ರಷ್ಟ ಅಧಿಕಾರಿಯನ್ನು ಕಾನೂನಿನ ಬಲೆಗೆ ಬೀಳಿಸಲು ನೆರವಾದ ದೂರುದಾರನೇ ಕೊನೆಗೆ ಆರ್ಥಿಕವಾಗಿ ಸಂಕಷ್ಟ ಅನುಭವಿಸುವಂತಾಗಬಾರದು ಎಂದು ಹೈಕೋರ್ಟ್‌ ಹೇಳಿದೆ.

ಸಾಕ್ಷ್ಯದ ದೃಷ್ಟಿಯಿಂದ ಅಸಲಿ ನೋಟುಗಳನ್ನು ನ್ಯಾಯಾಲಯದಲ್ಲಿ ಇರಿಸಿಕೊಳ್ಳಬೇಕಾದ ಸಂದರ್ಭದಲ್ಲೂ, ಸರ್ಕಾರದ ಖಜಾನೆಯಿಂದ ಅದೇ ಮೊತ್ತದ ಹಣವನ್ನು ದೂರುದಾರರಿಗೆ ಬಿಡುಗಡೆ ಮಾಡಲು ಕಾನೂನಿನಲ್ಲಿ ಯಾವುದೇ ಅಡ್ಡಿಯಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಇದರೊಂದಿಗೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿ ವಿಶೇಷ ನ್ಯಾಯಾಲಯಕ್ಕೆ ಸೂಕ್ತ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್‌ ಸ್ವಾತಂತ್ರ್ಯ ನೀಡಿದೆ. ಅರ್ಜಿ ಸಲ್ಲಿಕೆಯಾದ ನಾಲ್ಕು ವಾರಗಳೊಳಗೆ ನಿಯಮಾನುಸಾರ ಪರಿಶೀಲನೆ ನಡೆಸಿ, ಸಮಾನ ಮೊತ್ತದ ಹಣವನ್ನು ಅರ್ಜಿದಾರರಿಗೆ ಬಿಡುಗಡೆ ಮಾಡುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಇದೇ ವೇಳೆ ಪೊಲೀಸ್ ಠಾಣೆಗಳು ಮತ್ತು ನ್ಯಾಯಾಲಯಗಳಲ್ಲಿ ದೀರ್ಘಕಾಲದಿಂದ ಉಳಿದುಕೊಂಡಿರುವ ನಗದು, ವಾಹನಗಳು, ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ ಸಾಧನಗಳ ವಿಲೇವಾರಿ ಕುರಿತಂತೆಯೂ ಹೈಕೋರ್ಟ್‌ ಕೆಲವು ಪ್ರಮುಖ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಆಧರಿಸಿ, ಯಾವುದೇ ವಶಪಡಿಸಿಕೊಂಡ ಸೊತ್ತನ್ನು ಅನಗತ್ಯವಾಗಿ ಪೊಲೀಸ್ ಠಾಣೆಗಳಲ್ಲಿ ದೀರ್ಘಕಾಲ ಇರಿಸಬಾರದು ಎಂದು ಕೆಳಹಂತದ ನ್ಯಾಯಾಲಯಗಳು ಮತ್ತು ತನಿಖಾ ಸಂಸ್ಥೆಗಳಿಗೆ ಸೂಚಿಸಿದೆ. ಮಾಲೀಕತ್ವವನ್ನು ಪರಿಶೀಲಿಸಿದ ಬಳಿಕ ಅಗತ್ಯ ಬಾಂಡ್ ಪಡೆದು ಸೊತ್ತುಗಳನ್ನು ಶೀಘ್ರವಾಗಿ ಬಿಡುಗಡೆ ಮಾಡುವ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು?

ಬಳ್ಳಾರಿಯ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (CGST) ವಿಭಾಗದ ಸೂಪರಿಂಟೆಂಡೆಂಟ್ ಆಗಿದ್ದ ಕೆ. ಮಧುಸೂದನ ಅವರು, ಅರ್ಜಿದಾರ ಜಿ. ಈಶ್ವರಯ್ಯ ಅವರ ಜಿಎಸ್‌ಟಿ ಬಾಕಿ ಮೊತ್ತವನ್ನು ಚುಕ್ತಾ ಮಾಡುವುದಕ್ಕಾಗಿ ₹80,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ನೀಡಲು ಇಚ್ಛಿಸದ ಈಶ್ವರಯ್ಯ ಅವರು ಸಿಬಿಐ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಇದರ ಆಧಾರದ ಮೇಲೆ 2022ರ ಜೂನ್ 5ರಂದು ಸಿಬಿಐ ಅಧಿಕಾರಿಗಳು ಟ್ರಾಪ್ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ₹80,000 ಲಂಚ ಪಡೆಯುತ್ತಿದ್ದ ಮಧುಸೂದನ ಅವರು ಸಿಬಿಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು.

ಬಳಿಕ ಲಂಚದ ಹಣವನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡು, ಪ್ರಕರಣದ ಪ್ರಮುಖ ಸಾಕ್ಷ್ಯಾಧಾರವಾಗಿ ವಿಶೇಷ ನ್ಯಾಯಾಲಯದಲ್ಲಿ ಇರಿಸಿದ್ದರು. ತಮ್ಮ ಕಷ್ಟದ ದುಡಿಮೆಯ ಹಣವನ್ನು ಮರಳಿ ನೀಡುವಂತೆ ಕೋರಿ ಈಶ್ವರಯ್ಯ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಸಿಬಿಐ ನಿಯಮಾವಳಿಗಳ ಪ್ರಕಾರ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವ ಮುನ್ನ ಟ್ರಾಪ್ ಹಣವನ್ನು ದೂರುದಾರರಿಗೆ ಮರಳಿ ನೀಡಲು ಅವಕಾಶವಿಲ್ಲ. ವಿಚಾರಣೆ ಮುಗಿದ ಬಳಿಕವಷ್ಟೇ ಹಣವನ್ನು ಹಿಂದಿರುಗಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಆದರೆ, ದೂರುದಾರರ ಆರ್ಥಿಕ ಹಿತಾಸಕ್ತಿಯನ್ನು ಪರಿಗಣಿಸಿದ ಹೈಕೋರ್ಟ್‌, ಅಸಲಿ ಹಣವನ್ನು ಸಾಕ್ಷ್ಯವಾಗಿ ಉಳಿಸಿಕೊಂಡು, ಅದಕ್ಕೆ ಸಮಾನ ಮೊತ್ತವನ್ನು ಸರ್ಕಾರದ ಖಜಾನೆಯಿಂದ ದೂರುದಾರರಿಗೆ ಬಿಡುಗಡೆ ಮಾಡುವ ವ್ಯವಸ್ಥೆಗೆ ಕಾನೂನಿನಲ್ಲಿ ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಇನ್ನು ಐವರು ಪೊಲೀಸ್ ಕಮಿಷನರೇಟ್‌ಗಳಡಿ: ಸ್ವಾತಂತ್ರ್ಯೋತ್ಸವದ ವೇದಿಕೆಯಲ್ಲಿ ಡಿಕೆಶಿ ಮಹತ್ವದ ಘೋಷಣೆ

0

ಬೆಂಗಳೂರು: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಾಣೆಕ್‌ ಶಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದರು.

ಬೆಂಗಳೂರಿಗೆ ಪ್ರತ್ಯೇಕವಾಗಿ ಐದು ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸುವುದಾಗಿ ಡಿ.ಕೆ. ಶಿವಕುಮಾರ್ ಘೋಷಿಸಿದರು. 10 ಲಕ್ಷ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡಿದ್ದ ಪ್ರಸ್ತುತ ಕಮಿಷನರೇಟ್ ವ್ಯವಸ್ಥೆಯನ್ನು ವಿಂಗಡಿಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮೂಲಕ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ನಗರದ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಜಿಬಿಎ ಹಾಗೂ ಟ್ರಾಫಿಕ್ ಪೊಲೀಸ್ ವಿಭಾಗದ ಮೂಲಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಮಹಿಳೆಯರು ಹಾಗೂ ಬಾಲಕಿಯರು ಭಯವಿಲ್ಲದೆ ಬೆಂಗಳೂರಿನಲ್ಲಿ ಸಂಚರಿಸುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ಬೆಂಗಳೂರಿಗೆ ಪ್ರತ್ಯೇಕ ಆ್ಯಂಟಿ ರೌಡಿ ಸ್ಕ್ವಾಡ್ ರಚಿಸಲಾಗುವುದು ಎಂದು ಸಿಎಂ ಘೋಷಿಸಿದರು.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ₹1.50 ಲಕ್ಷ ಕೋಟಿ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ₹26 ಸಾವಿರ ಕೋಟಿ ವೆಚ್ಚದಲ್ಲಿ 117 ಕಿ.ಮೀ ಉದ್ದದ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ನಿರ್ಮಾಣ, ಲಾಲ್‌ಬಾಗ್ ಮಾದರಿಯ ಐದು ಬೃಹತ್ ಟ್ರೀ ಪಾರ್ಕ್‌ಗಳ ನಿರ್ಮಾಣ ಹಾಗೂ ಏಳು ಕೆರೆಗಳ ಪುನಶ್ಚೇತನಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ₹20 ಸಾವಿರ ಕೋಟಿ ವೆಚ್ಚದ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್, ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ಐದು ಜಿಲ್ಲೆಗಳಲ್ಲಿ ಗ್ಲೋಬಲ್ ಟೆಕ್ ಸೆಂಟರ್‌ಗಳು ಹಾಗೂ ‘ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ’ ಸ್ಥಾಪಿಸುವ ಯೋಜನೆಯನ್ನೂ ಪ್ರಕಟಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಘೋಷಣೆ ಮಾಡಿರುವ ಸಿಎಂ, ಮುಂದಿನ ಆರು ತಿಂಗಳಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು. ಖಾಸಗಿ ಉದ್ಯೋಗಾವಕಾಶಗಳಿಗೆ ‘ಯುವ ಉದ್ಯೋಗ ಸೇತು’ ಯೋಜನೆ ಹಾಗೂ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಗಳಿಗೆ ಮಾಸಿಕ ₹2,500 ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನು ಘೋಷಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಆರನೇ ತರಗತಿಯಿಂದಲೇ AI ಶಿಕ್ಷಣ ಪರಿಚಯಿಸುವುದು, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪಿಸುವುದು, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ವಿಶೇಷ ಮೀಸಲಾತಿ ಹಾಗೂ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಘೋಷಿಸಿದರು.

ರೈತರಿಗಾಗಿ ಡ್ರೋನ್ ಆಧಾರಿತ ಬೆಳೆ ಸಮೀಕ್ಷೆಯ ‘ಮುಖ್ಯಮಂತ್ರಿ ರೈತ ಚೈತನ್ಯ’ ಹಾಗೂ ಸಣ್ಣ ರೈತರಿಗೆ ಯಂತ್ರೋಪಕರಣಗಳನ್ನು ಬಾಡಿಗೆಗೆ ಪಡೆಯಲು ಶೇ.50 ಸಬ್ಸಿಡಿ ನೀಡುವ ‘ರೈತ ಮಿತ್ರ’ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯ ಮೊದಲ ಹಂತ ಸೇರಿದಂತೆ ₹16 ಸಾವಿರ ಕೋಟಿ ಮೊತ್ತದ ಜಲಸಂಪನ್ಮೂಲ ಯೋಜನೆಗಳು ಪ್ರಗತಿಯಲ್ಲಿವೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೂ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ಎನ್‌ಕೌಂಟರ್: ಮೂವರು ಸಾವು, ಗ್ರಾಮಸ್ಥರಿಂದ DRFO ಕಚೇರಿ ಧ್ವಂಸ

0

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಬಳಿಕ ಚಾಮರಾಜನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿದ್ದಾರೆ. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಶಾಗ್ಯ DRFO ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

ಅರಣ್ಯ ಇಲಾಖೆ ಮೂಲಗಳ ಪ್ರಕಾರ, ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶಕ್ಕೆ ಮೂವರು ನುಗ್ಗಿ ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎನ್ನಲಾಗಿದೆ. ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಈ ವಿಚಾರ ತಿಳಿದು ಸ್ಥಳಕ್ಕೆ ತೆರಳಿದ್ದರು ಎನ್ನಲಾಗಿದೆ.

ಅರಣ್ಯ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸೂಚಿಸಿದರೂ, ಮೂವರು ಸಿಬ್ಬಂದಿ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ನಡೆಸಿದ ಕೌಂಟರ್ ಫೈರಿಂಗ್‌ನಲ್ಲಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಹನೂರು ತಾಲೂಕಿನ ತೋಮಿಯರ್‌ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ.

ಎನ್‌ಕೌಂಟರ್ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಶಾಗ್ಯ DRFO ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.

ಇತ್ತ ಮೃತರ ಕುಟುಂಬಸ್ಥರು ಎನ್‌ಕೌಂಟರ್ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಮೃತರು ಕೃಷಿಕರಾಗಿದ್ದು, ದನ ಮೇಯಿಸಲು ಅರಣ್ಯ ಪ್ರದೇಶಕ್ಕೆ ಹೋಗಿದ್ದರು. ಅವರು ವನ್ಯಜೀವಿಗಳನ್ನು ಬೇಟೆಯಾಡಿದ್ದರು ಎಂಬುದಕ್ಕೆ ಸಾಕ್ಷ್ಯವೇನು ಎಂದು ಪ್ರಶ್ನಿಸಿರುವ ಕುಟುಂಬಸ್ಥರು, ಬೇಟೆಯ ಆರೋಪವಿದ್ದರೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಗುಂಡು ಹಾರಿಸುವ ಅಗತ್ಯವೇನಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತರಬೇತಿಯಲ್ಲಿರುವ ಅರಣ್ಯ ಸಿಬ್ಬಂದಿಯಿಂದ ಈ ಕಾರ್ಯಾಚರಣೆ ನಡೆದಿದೆ ಎಂಬ ಆರೋಪವನ್ನೂ ಮಾಡಿರುವ ಕುಟುಂಬಸ್ಥರು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.