ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಈ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರನ್ನೇ ಕೊಲೆ ಮಾಡಿ, ಕಾರಿನಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆದಿಂದ ರಾಜು ಬೋಳಶೆಟ್ಟಿ ನಾಪತ್ತೆಯಾಗಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.
ರಾಜು ಬೋಳಶೆಟ್ಟಿ ಅವರಿಗೆ ಸೇರಿದ ಕಾರು ರಾಮಾಪುರದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಪತ್ತೆಯಾಗಿದೆ. ಕಾರಿನೊಳಗಿನ ಶವ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತಿಸಲು ಅಸಾಧ್ಯವಾಗಿರುವ ಸ್ಥಿತಿಯಲ್ಲಿದೆ. ಕಿಡಿಗೇಡಿಗಳು ಬೇರೆಡೆ ಕೊಲೆ ಮಾಡಿ, ಬಳಿಕ ಶವವನ್ನು ಇಲ್ಲಿ ತಂದು ಪೆಟ್ರೋಲ್ ಸುರಿದು ಸುಟ್ಟಿರಬಹುದೆಂದು ಶಂಕಿಸಲಾಗಿದೆ. ಘಟನೆಯು ಪೂರ್ವ ಯೋಜಿತವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಘಟನೆ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಗುಂಜನ್ ಆರ್ಯ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಬೆರಳಚ್ಚು ತಜ್ಞರ ತಂಡ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಕಾರಿನಲ್ಲಿದ್ದ ಶವ ಸಂಪೂರ್ಣ ಸುಟ್ಟುಹೋಗಿರುವುದರಿಂದ ಅದು ಯಾರದ್ದು ಎಂಬುದು ಇನ್ನೂ ಖಚಿತವಾಗಿಲ್ಲ. ವಿಧಿವಿಜ್ಞಾನ ವರದಿ ಬಂದ ಬಳಿಕವೇ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಕೀಯದಲ್ಲಿ ಸಕ್ರಿಯವಾಗಿರದ ರಾಜು ಬೋಳಶೆಟ್ಟಿ ಪ್ರಗತಿಪರ ರೈತನಾಗಿ ಗುರುತಿಸಿಕೊಂಡಿದ್ದರು. ಗ್ರಾಮದಲ್ಲಿ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆತು ಬದುಕುತ್ತಿದ್ದರು. ಮಕ್ಕಳ ವಿದ್ಯಾಭ್ಯಾಸಕ್ಕೂ ಸಹಾಯ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ರಾಜು ಬೋಳಶೆಟ್ಟಿ ಅವರ ಸ್ನೇಹಿತ ಶ್ರೀಧರ್, ಪತ್ತೆಯಾದ ಕಾರು ರಾಜು ಅವರದ್ದೇ ಎಂದು ದೃಢಪಡಿಸಿದ್ದಾರೆ. ಒಟ್ಟಾರೆ, ಈ ಘಟನೆ ಹತ್ಯೆಯೋ ಅಥವಾ ಇನ್ನಾವುದೋ ಕಾರಣವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಂಪೂರ್ಣ ತನಿಖೆ ಬಳಿಕವೇ ನಿಜಾಂಶ ಹೊರಬೀಳಲಿದೆ.

