ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿಯನ್ನು ಡ್ರ್ಯಾಗರ್ ನಿಂದ ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬ ಮಹಿಳೆಯನ್ನು ಹಫೀಜ್ ಎಂಬ ಯುವಕ ಹತ್ಯೆಗೈದಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ತನಿಖೆ ವೇಳೆ, ಮಹಿಳೆ ಮತ್ತು ಆರೋಪಿಯ ನಡುವೆ ಪರಿಚಯವಿದ್ದು, ಇತ್ತೀಚೆಗೆ ಆಕೆ ಆರೋಪಿಯನ್ನು ದೂರ ಮಾಡಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಫೆಬ್ರವರಿ 28ರಂದು ಇಬ್ಬರ ನಡುವೆ ಗಲಾಟೆಯೂ ನಡೆದಿದ್ದು, ಆ ಸಂದರ್ಭದಲ್ಲಿ ಫೀರ್ದೋಸ್ ಕುಟುಂಬಸ್ಥರು ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಆರೋಪಿಗೆ ಬುದ್ಧಿವಾದ ಹೇಳಿ ಮುಚ್ಚಳಿಕೆ ಬರೆಸಿಕೊಂಡು ರಾಜಿ ಮಾಡಿಸಿದ್ದರು.
ಆದರೆ, ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಫೀರ್ದೋಸ್ ಬಾನು ಅವರನ್ನು ಹಿಂಬಾಲಿಸಿಕೊಂಡು ಬಂದ ಹಫೀಜ್, ಮಾರಕಾಸ್ತ್ರದಿಂದ ಹಲವು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪಶ್ಚಿಮ ವಲಯ ಡಿಸಿಪಿ ಯತೀಶ್ ಅವರು, ಮೃತ ಮಹಿಳೆ ಮತ್ತು ಆರೋಪಿಗೆ ಪ್ರತ್ಯೇಕವಾಗಿ ಮದುವೆಯಾಗಿದ್ದು, ಮಕ್ಕಳೂ ಇದ್ದಾರೆ ಎಂದು ತಿಳಿಸಿದ್ದಾರೆ. ಆರೋಪಿ ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

