ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ನಡೆದ ಮತದಾನದ ಬಳಿಕ, 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಸುಮಾರು 92.7% ರಿಂದ 92.88% ರಷ್ಟು ದಾಖಲೆ ಮತದಾನವಾಗಿರುವುದು ರಾಜ್ಯದಲ್ಲಿ ಪರಿವರ್ತನೆಯ ಸ್ಪಷ್ಟ ಸೂಚನೆ ಎಂದು ಹೇಳಿದರು. ಇದು ಬಿಜೆಪಿಗೆ ಪೂರಕವಾದ ಜನಮತವೆಂದು ಅವರು ಅಭಿಪ್ರಾಯಪಟ್ಟರು.
ಈ ಬಾರಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಗೆಲುವು ಸಾಧಿಸಲಿದೆ. “ಭಯ ಹೊರ ಹೋಗಿ, ಭರವಸೆ ಬರಲಿದೆ” ಎಂದು ಹೇಳಿದ ಅವರು, ಬಂಗಾಳ ಜನತೆ ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಮೊದಲ ಹಂತದ ಮುನ್ನಡೆಯನ್ನೇ ಆಧಾರವಾಗಿಸಿಕೊಂಡು, ಎರಡನೇ ಹಂತದ ವೇಳೆಗೆ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೊದಲ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ಬಂಗಾಳದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಚುನಾವಣೆ ನಡೆದಿದೆ ಎಂದು ಹೇಳಿದರು. ಇದಕ್ಕೆ ಭಾರತ ಚುನಾವಣಾ ಆಯೋಗ ಹಾಗೂ ಭದ್ರತಾ ಪಡೆಗಳಿಗೆ ಧನ್ಯವಾದ ಸಲ್ಲಿಸಿದರು.
ಇನ್ನೂ, “ದೀದಿ ಹೋಗಲಿದ್ದಾರೆ, ಬಿಜೆಪಿ ಬರಲಿದೆ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಬದಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ರಾಜ್ಯದ ಗಡಿಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.

