ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯಲ್ಲಿ ಸರ್ಕಾರದ ಆದೇಶದಂತೆ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಭೀಮ ಶಕ್ತಿ ಸಂಘಟನೆ ವತಿಯಿಂದ ಗದಗ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಭೀಮ ಶಕ್ತಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ ಮುಗುಳಿ, ರಾಜ್ಯ ಸರ್ಕಾರವು 2026ರ ಮೇ 8ರಂದು ಹೊರಡಿಸಿರುವ ಆದೇಶದ ಪ್ರಕಾರ ಪರಿಶಿಷ್ಟ ಜಾತಿಗೆ ಮೂರು ಅಥವಾ ಅದಕ್ಕಿಂತ ಹೆಚ್ಚು ಹುದ್ದೆಗಳು ಇದ್ದರೆ ಒಳಮೀಸಲಾತಿ ಅನ್ವಯ ನೇಮಕಾತಿ ನಡೆಸುವುದು ಕಡ್ಡಾಯವಾಗಿದೆ. ಆದರೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಶಿಶು ಅಭಿವೃದ್ಧಿ ಯೋಜನೆಯಡಿ ಜೂನ್ 22ರಂದು ಪ್ರಕಟಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಈ ನಿಯಮ ಪಾಲನೆಯಾಗಿಲ್ಲ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿಗೆ ಮೂರುಕ್ಕಿಂತ ಹೆಚ್ಚು ಹುದ್ದೆಗಳಿದ್ದರೂ ಒಳಮೀಸಲಾತಿ ಅನ್ವಯಿಸದೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಿರುವುದು ಸರ್ಕಾರದ ಆದೇಶ ಹಾಗೂ ಸಾಮಾಜಿಕ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ. ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಒಳಮೀಸಲಾತಿ ಅನ್ವಯ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅದಕ್ಕೂ ಮುನ್ನ ಸರ್ಕಾರದ ಆದೇಶದಂತೆ ನೇಮಕಾತಿ ಪ್ರಕ್ರಿಯೆ ತಿದ್ದುಪಡಿ ಮಾಡಬೇಕು. ಇಲ್ಲವಾದರೆ ಕಾನೂನು ಹೋರಾಟದ ಜೊತೆಗೆ ಸಂಬಂಧಿಸಿದ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಕಾನೂನು ಸಲಹೆಗಾರ ಮೈಲಾರಪ್ಪ ಡಿ.ಎಚ್., ಅಣ್ಣಪ್ಪ ಗುತ್ತೇಮ್ಮನವರ, ಅನಿಲ ಸಣ್ಣತಂಗಿಯವರ, ಪ್ರವೀಣ ಅದರಗುಂಚಿ, ಶ್ಯಾಮಸುಂದರ, ಮನು ತುರಾಡಿ, ಸೋಮಣ್ಣ, ಶಿವು ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.

