Home Blog Page 2

ಕಪ್ಪತ್ತಗುಡ್ಡದ ಮಡಿಲಲ್ಲಿ ಕವಿತೆಗಳ ಕಂಪು: ಮಳೆಯ ನಡುವೆ ಕವಿ ಸಮ್ಮೇಳನಕ್ಕೆ ತೆರೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಳೆಯ ಸಿಂಚನದ ನಡುವೆಯೇ ಕವಿಗಳು ಕವಿತೆಗಳನ್ನು ವಾಚಿಸುವ ಮೂಲಕ ಕಪ್ಪತ್ತಗುಡ್ಡದ ಪರಿಸರದಲ್ಲಿ ನಡೆದ ಜಿಲ್ಲಾ ಮಟ್ಟದ ಕವಿ ಸಮ್ಮೇಳನದ ಸಮಾರೋಪ ಸಮಾರಂಭ ಗಮನ ಸೆಳೆಯಿತು.

ಕವಿಗಳು ಜನಮಾನಸವನ್ನು ತಿದ್ದುವ ಶಕ್ತಿ ಹೊಂದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಕವಿಗಳಿಗೆ ಅಪಾರ ಮನ್ನಣೆ ಇದೆ. ಕಪ್ಪತ್ತಗುಡ್ಡದ ಪರಿಸರ ಹೊಸ ಕವಿಗಳಿಗೆ ಬರವಣಿಗೆಯ ಚೈತನ್ಯ ಹಾಗೂ ಸ್ಫೂರ್ತಿ ನೀಡಲಿ ಎಂದು ಬಸವಬೆಟ್ಟ ಕಡಕೋಳ-ಕಪ್ಪತಗಿರಿಯ ಶರಣೆ ಓಂಕಾರೇಶ್ವರಿ ಮಾತಾಜಿ ಹೇಳಿದರು.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ತಾಲೂಕುಗಳ ಕನ್ನಡ ಸಾಹಿತ್ಯ ಪರಿಷತ್ತುಗಳ ಆಶ್ರಯದಲ್ಲಿ ಕಪ್ಪತ್ತಗುಡ್ಡದ ಸೆರಗಿನ ದೇವರೆಡ್ಡಿ ಅಗಸನಕೊಪ್ಪ ಕೃಷಿ ಆಶ್ರಮದಲ್ಲಿ ನಡೆದ ಜಿಲ್ಲಾ ಮಟ್ಟದ ಕವಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಸಮ್ಮೇಳನದಲ್ಲಿ ವಾಚಿಸಲಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಉತ್ತಮ ಕವಿತೆಗಳು ಅಧ್ಯಯನಶೀಲತೆಯಿಂದ ಮೂಡಿಬರುತ್ತವೆ. ಕಮ್ಮಟಗಳನ್ನು ಸಂಘಟಿಸುವ ಮೂಲಕ ಯುವ ಕವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ದೇವರೆಡ್ಡಿ ಅಗಸನಕೊಪ್ಪ, ಬಸವರಾಜ ಪಲ್ಲೇದ ಮಾಗಡಿ, ಸಮ್ಮೇಳನ ಸಂಯೋಜಕರಾದ ಸುರೇಶ ಕುಂಬಾರ, ರಮಾಕಾಂತ ಕಮತಗಿ, ಪಿ.ಆರ್. ಹಿರೇಮಠ, ನಿಂಗಪ್ಪ ಮಾಚೇನಹಳ್ಳಿ, ಶರಣಪ್ಪ ಹರ್ಲಾಪೂರ, ಪ್ರಗತಿಪರ ರೈತರಾದ ಯಲ್ಲಪ್ಪ ನಾವಿ, ಕಡಕೋಳ ಹಾಗೂ ತಿಪ್ಪಣ್ಣ ಕೆಳಗಡೆ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ರಾಷ್ಟ್ರಧ್ವಜಾರೋಹಣವನ್ನು ಸುಶೀಲಮ್ಮ ಅಗಸನಕೊಪ್ಪ, ನಾಡಧ್ವಜಾರೋಹಣವನ್ನು ಮಾಜಿ ಸಚಿವ ಎಸ್.ಎಸ್. ಪಾಟೀಲ ಕಲಕೇರಿ ಹಾಗೂ ಪರಿಷತ್ ಧ್ವಜಾರೋಹಣವನ್ನು ವಿವೇಕಾನಂದಗೌಡ ಪಾಟೀಲ ನೆರವೇರಿಸಿದರು.

ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಹಾಗೂ ಸಾಮರಸ್ಯ ನಡಿಗೆಯನ್ನು ನಂದಿವೇರಿಮಠದ ಶಿವಕುಮಾರಸ್ವಾಮಿಗಳ ಸಮ್ಮುಖದಲ್ಲಿ ಶ್ರೀ ಕಪ್ಪತ್ತಮಲ್ಲೇಶ್ವರ ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಶಿರಹಟ್ಟಿ-ಕಡಕೋಳ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ ಉದ್ಘಾಟಿಸಿದರು. ಕೆ.ಎ. ಬಳಿಗೇರ, ವೀರಣ್ಣ ಮಜ್ಜಗಿ, ರುದ್ರಣ್ಣ ಗುಳಗುಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವಿವಿಧ ಕಲಾ ತಂಡಗಳಿಂದ ಕಲಾ ಪ್ರದರ್ಶನ ನಡೆಯಿತು.

ಭಾವಗಳು ಅರಳಿದಾಗಲೇ ಜಗತ್ತಿನಲ್ಲಿ ಶಾಂತಿ ಸಾಧ್ಯ: ತೋಂಟದ ಸಿದ್ಧರಾಮ ಶ್ರೀ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತ ಅನೇಕತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಪ್ರತಿಯೊಂದರಲ್ಲೂ ವೈವಿಧ್ಯತೆಯನ್ನು ಒಳಗೊಂಡಿರುವ ವಿಶ್ವದ ಏಕೈಕ ದೇಶ ಭಾರತ. ಈ ಬಹುತ್ವವೇ ಭಾರತದ ಅಸ್ಮಿತೆಯಾಗಿದೆ ಎಂದು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ಹೇಳಿದರು.

ನಗರದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ನಡೆದ 2812ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯ ಡಾ. ಮಹಮ್ಮದ್ ಅಶ್ರಫ್ ದಸ್ತಗಿರಿಸಾಹೇಬ್ ಸಮುದ್ರಿ ಅವರು ರಚಿಸಿರುವ ‘ಭಾವೈಕ್ಯತೆಯ ಬೆಳಕು’ ಕೃತಿಯನ್ನು ಬಿಡುಗಡೆ ಮಾಡಲಾಯಿತು. ವಿಶ್ವ ಹಿರಿಯರ ದಿನಾಚರಣೆ ಅಂಗವಾಗಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ನಿವೃತ್ತ ಶಿಕ್ಷಕ ಚೆನ್ನಯ್ಯ ತೋಟಯ್ಯ ಹಿರೇಮಠ ಹಾಗೂ ನಿವೃತ್ತ ಶಿಕ್ಷಕ ಎಸ್.ಎಂ. ವಾಲಿ ಅವರನ್ನು ಗೌರವಿಸಿ ಆಶೀರ್ವದಿಸಲಾಯಿತು.

ಜಗತ್ತಿನ ಹಲವು ಭಾಗಗಳಲ್ಲಿ ಇಂದು ಯುದ್ಧಗಳು ನಡೆಯುತ್ತಿದ್ದು, ಜನರು ಭಯಗ್ರಸ್ತ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಜಗತ್ತಿನಲ್ಲಿ ಶಾಂತಿ, ನೆಮ್ಮದಿ ಮತ್ತು ಪ್ರೀತಿ ನೆಲೆಸಬೇಕಾದರೆ ಮನುಷ್ಯರ ನಡುವೆ ಭಾವನೆಗಳು ಅರಳಬೇಕು. ಪರಸ್ಪರ ಪ್ರೀತಿ, ದಯೆ ಮತ್ತು ಭ್ರಾತೃತ್ವದ ಭಾವನೆ ಬೆಳೆಸುವ ಅಗತ್ಯವಿದೆ ಎಂದರು.

ವಿವಿಧ ಕಾಲಘಟ್ಟಗಳಲ್ಲಿ ಸಮಾಜದ ಒಳಿತಿಗಾಗಿ ಅನೇಕ ಪ್ರವಾದಿಗಳು, ಸಮಾಜ ಸುಧಾರಕರು ಹಾಗೂ ಹೋರಾಟಗಾರರು ಜನ್ಮತಳೆದಿದ್ದಾರೆ. ಅವರು ತಮ್ಮ ಜೀವನದ ಮೂಲಕ ಇಡೀ ಮನುಕುಲದ ಬಗ್ಗೆ ಪ್ರೀತಿ ಮತ್ತು ದಯೆ ಬೆಳೆಸುವ ಸಂದೇಶ ನೀಡಿದ್ದಾರೆ. ಮುಹಮ್ಮದ್ ಪೈಗಂಬರ್, ಜಗಜ್ಯೋತಿ ಬಸವೇಶ್ವರ, ಬುದ್ಧ, ಮಹಾವೀರ ಸೇರಿದಂತೆ ಮಹನೀಯರ ಆದರ್ಶ ಮತ್ತು ಮೌಲ್ಯಗಳನ್ನು ಇಂದಿನ ಸಮಾಜ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ಇಂತಹ ಮಾನವೀಯ ಮೌಲ್ಯಗಳನ್ನು ‘ಭಾವೈಕ್ಯತೆಯ ಬೆಳಕು’ ಕೃತಿ ಒಳಗೊಂಡಿದೆ ಎಂದು ಹೇಳಿದರು.

ವಿಶ್ವ ಹಿರಿಯರ ದಿನಾಚರಣೆ ಅಂಗವಾಗಿ ಹಿರಿಯರನ್ನು ಗೌರವಿಸಿ ಮಾತನಾಡಿದ ಅವರು, ಕಣ್ಣಿಗೆ ಕಾಣದ ದೇವರಿಗಿಂತ ಕಣ್ಣಿಗೆ ಕಾಣುವ ತಂದೆ-ತಾಯಿ, ಹಿರಿಯರು ಹಾಗೂ ಗುರುಗಳನ್ನು ಗೌರವಿಸುವ ಸಮಾಜವೇ ಸುಸಂಸ್ಕೃತ ಸಮಾಜ. ಹೊಸ ತಲೆಮಾರು ಹಿರಿಯರನ್ನು ಗೌರವಿಸುವ ಹಾಗೂ ಅವರ ಅನುಭವಗಳನ್ನು ಅನುಸರಿಸುವ ಗುಣ ಬೆಳೆಸಿಕೊಳ್ಳಬೇಕು. ಹಳೆ ಬೇರು, ಹೊಸ ಚಿಗುರು ಇದ್ದಾಗಲೇ ಮರ ಸೊಬಗಾಗಿರುವಂತೆ, ಮನೆಯಲ್ಲಿ ಹಿರಿಯರು ಇದ್ದಾಗ ಕುಟುಂಬಕ್ಕೆ ಶೋಭೆ ಬರುತ್ತದೆ ಎಂದರು.

ಕೃತಿ ಪರಿಚಯ ಮಾಡಿದ ಗದಗ ಜಮಾತ್-ಎ-ಇಸ್ಲಾಂ ಅಧ್ಯಕ್ಷ ಎ.ಐ. ಶೇಖ ಮಾತನಾಡಿ, ‘ಭಾವೈಕ್ಯತೆಯ ಬೆಳಕು’ ಎಲ್ಲರನ್ನು ಒಂದುಗೂಡಿಸುವ ಹಾಗೂ ಏಕತೆಯನ್ನು ಸಾಧಿಸುವ ಅಪರೂಪದ ಕೃತಿಯಾಗಿದೆ. ಲೇಖಕ ಡಾ. ಸಮುದ್ರಿ ಅವರು ಭಾರತದ ಬಹುತ್ವವನ್ನು ಎತ್ತಿಹಿಡಿದಿರುವುದರ ಜೊತೆಗೆ, ಮೊದಲು ನಾವೆಲ್ಲರೂ ಭಾರತೀಯರು ಎಂಬ ಭಾವನೆಯನ್ನು ಪ್ರತಿಪಾದಿಸಿದ್ದಾರೆ. ಕೃತಿಯನ್ನು ಯುವಕರಿಗೆ ಅರ್ಪಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಕೃತಿಯ ಲೇಖಕ ಡಾ. ಎಂ.ಡಿ. ಸಮುದ್ರಿ ಮಾತನಾಡಿ, ಕೃತಿ ರಚನೆಗೆ ತಂದೆ-ತಾಯಿ, ಕುಟುಂಬ, ಗುರುಗಳು ಸೇರಿದಂತೆ ಅನೇಕರು ನೀಡಿದ ಸಹಾಯ-ಸಹಕಾರವನ್ನು ಸ್ಮರಿಸಿ, ಅವರಿಗೆ ಚಿರಋಣಿಯಾಗಿರುವುದಾಗಿ ಹೇಳಿದರು.

ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ, ಧರ್ಮಗ್ರಂಥ ಪಠಣವನ್ನು ಕುಮಾರಿ ಸ್ಫೂರ್ತಿ ಸೈದಾಪುರ ಹಾಗೂ ವಚನ ಚಿಂತನವನ್ನು ಪುಷ್ಪಾವತಿ ಮನೋಹರ ಮಾಲಿಪಾಟೀಲ ನೆರವೇರಿಸಿದರು. ದಾಸೋಹ ಸೇವೆಯನ್ನು ವಿವಿಧ ಕುಟುಂಬಗಳ ವತಿಯಿಂದ ಕೈಗೊಳ್ಳಲಾಯಿತು.

ಶರಣೆ ಗಿರಿಜಕ್ಕ ಧರ್ಮರಡ್ಡಿ ಅವರು ‘ಶರಣರು ಕಂಡ ಅನಾದಿ ಬಸವಣ್ಣ’ ವಿಷಯದ ಕುರಿತು ಪ್ರವಚನ ನೀಡಿದರು. ಹಿರಿಯರಾದ ಡಾ. ಜಿ.ಬಿ. ಪಾಟೀಲ, ಶಿವನಗೌಡ ಗೌಡರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ವೀ. ಪುರದ ಸ್ವಾಗತಿಸಿದರು. ಶಿವಾನುಭವ ಸಮಿತಿಯ ಚೇರ್ಮನ್ ಡಾ. ರಮೇಶ ಮ. ಕಲ್ಲನಗೌಡರ ಕಾರ್ಯಕ್ರಮ ನಿರೂಪಿಸಿದರು.

ಜಗತ್ತಿನಲ್ಲಿ ಶಾಂತಿ, ನೆಮ್ಮದಿ ಮತ್ತು ಪ್ರೀತಿ ಮೂಡಬೇಕಾದರೆ ಮನುಷ್ಯರ ಮಧ್ಯೆ ಭಾವಗಳು ಅರಳಬೇಕು. ಮುಹಮ್ಮದ್ ಪೈಗಂಬರ್, ಬಸವೇಶ್ವರ, ಬುದ್ಧ, ಮಹಾವೀರ ಸೇರಿದಂತೆ ಮಹನೀಯರ ಮಾನವೀಯ ಆದರ್ಶ ಮತ್ತು ಮೌಲ್ಯಗಳನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ.

— ಡಾ. ತೋಂಟದ ಸಿದ್ಧರಾಮ ಮಹಾಸ್ವಾಮೀಜಿ

ಆ. 26ರಂದು ಪೈಗಂಬರ್ ಜಯಂತಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಅವಳಿ ನಗರದ ಈದ್ ಮಿಲಾದ್ ಕಮಿಟಿ ವತಿಯಿಂದ ಆ. 26ರಂದು ಹಜರತ್ ಮಹಮ್ಮದ್ ಪೈಗಂಬರ್ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ನಗರದ ಉರ್ದು ಸೆಂಟ್ರಲ್ ಸ್ಕೂಲ್‌ನಲ್ಲಿ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂಜುಮನ್-ಏ-ಇಸ್ಲಾಂ ಕಮಿಟಿ ಸದಸ್ಯ ಬಾಷಾಸಾಬ್ ಮಲ್ಲಸಮುದ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ನೇತೃತ್ವವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ ವಹಿಸಲಿದ್ದು, ಜಮಿಯತೆ ಉಲ್ಮಾ ಕಮಿಟಿ ಅಧ್ಯಕ್ಷ ಮೌಲಾನಾ ಇನಾಯಿತುಲ್ಲಾಸಾಬ ಸಾನ್ನಿಧ್ಯ ವಹಿಸಲಿದ್ದಾರೆ. ಮೌಲಾನಾ ಅಬ್ದುಲ್ ರಹೀಂ ಚಂದುನವರ ಪ್ರಾರ್ಥನಾ ಗೀತೆ ಹಾಡಲಿದ್ದಾರೆ ಎಂದರು.

ಮಾಜಿ ಸಚಿವ, ಶಾಸಕ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಗಾವಿ ಜಮಿಯತೆ ಉಲ್ಮಾ ಜಿಲ್ಲಾ ಕಾರ್ಯದರ್ಶಿ ಹಜರತ್ ಮೌಲಾನಾ ಮಹಮ್ಮದ್ ಆರೀಫ್‌ಸಾಬ್ ಇನಾಮಿ ಉಪನ್ಯಾಸ ನೀಡಲಿದ್ದಾರೆ. ಎನ್‌ಡಬ್ಲ್ಯುಆರ್‌ಟಿಸಿ ಹುಬ್ಬಳ್ಳಿ ಮಾಜಿ ಉಪಾಧ್ಯಕ್ಷ ಪೀರಸಾಬ ಕೌತಾಳ ಬಟ್ಟೆ ವಿತರಿಸಲಿದ್ದಾರೆ. ಆಸೀಫ್ ದಂಡಿನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಜಯಂತ್ಯುತ್ಸವದ ಅಂಗವಾಗಿ ಪಠ್ಯಪುಸ್ತಕ ವಿತರಣೆ, ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅವಳಿ ನಗರದ ಎಲ್ಲ ಮುಸ್ಲಿಂ ಜಮಾತ್‌ಗಳ ಮುತವಲ್ಲಿಗಳ ಸಹಯೋಗದಲ್ಲಿ ಮಸೀದಿಗಳ ಮುಅಜ್ಜಿನ್‌ಗಳಿಗೆ ಒಂದು ಜೊತೆ ಬಟ್ಟೆ ನೀಡಿ ಗೌರವಿಸಲಾಗುವುದು. ಸೂಫಿ ಸಂತರೂ ಸೇರಿದಂತೆ ಗಣ್ಯರನ್ನು ಸ್ಥಳೀಯ ಶಾಸಕರ ಸಮ್ಮುಖದಲ್ಲಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಪೈಗಂಬರ್ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಆದರೆ ಜಯಂತ್ಯುತ್ಸವದ ಅಂಗವಾಗಿ ಯಾವುದೇ ಡಿಜೆ ಮೆರವಣಿಗೆ ಇರುವುದಿಲ್ಲ. ಸರ್ವಧರ್ಮೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಆಸೀಫ್ ದಂಡಿನ, ಯೂಸೂಫ್ ಡಂಬಳ, ಅಹ್ಮದ್ ಖಾಜಿ, ಆರೀಫ್ ಹುನಗುಂದ, ಯೂಸೂಫ್ ಕೊಟ್ಟೂರ, ಕರೀಮ್ ಸುಣಗಾರ, ಅಬೂಬಕರ್ ಅಣ್ಣಿಗೇರಿ, ಯೂಸೂಫ್ ನಮಾಜಿ, ರಝಾ ಡಂಬಳ, ಪಾಷಾ ಕಪಾಲಿ, ಶಮೀರ್ ಜಮಾದಾರ, ಶಬ್ಬಿರ ಅಹ್ಮದ್‌ಸಾಬ್ ಬೋದ್ಲೆಖಾನ್, ರಾಜು ಪೆಂಡಾರಿ, ಉಸ್ಮಾನ ಮಾಳೆಕೊಪ್ಪ, ಇಬ್ರಾಹಿಂ ಕಿಲ್ಲೇದಾರ, ಯಾಸೀನ್ ಖಾಜಿ ಸೇರಿದಂತೆ ಈದ್ ಮಿಲಾದ್ ಕಮಿಟಿ ಪದಾಧಿಕಾರಿಗಳು ಇದ್ದರು.

ಅಭಿವೃದ್ಧಿ ಹೆಸರಿನಲ್ಲಿ ರಿಯಲ್ ಎಸ್ಟೇಟ್‌ಗೆ ಅವಕಾಶ ಬೇಡ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ವಕಾರುಸಾಲು ಸೇರಿದಂತೆ ವಿವಿಧ ನಗರಸಭೆ ಆಸ್ತಿಗಳನ್ನು ಪ್ರಾಧಿಕಾರಕ್ಕೆ ಹಸ್ತಾಂತರಿಸಿ, ಅಭಿವೃದ್ಧಿಯ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಚಟುವಟಿಕೆಗಳಿಗೆ ಅವಕಾಶ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರು ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ಪ್ರದೇಶಗಳಲ್ಲಿರುವ ನಗರಸಭೆ ಆಸ್ತಿಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ಪ್ರಾಧಿಕಾರಕ್ಕೆ ನೀಡುವ ಬದಲು ಸ್ಥಳೀಯ ಜನರ ಹಿತಾಸಕ್ತಿಗೆ ಅನುಗುಣವಾಗಿ ಬಳಸಬೇಕು. ನಗರದಲ್ಲಿ ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಇದೆ. ಇಂತಹ ಸಮಸ್ಯೆಗಳು ಬಗೆಹರಿಯದೆ ಇರುವಾಗ ದೊಡ್ಡ ವಾಣಿಜ್ಯ ಕಟ್ಟಡ, ಹೋಟೆಲ್ ಹಾಗೂ ರಿಯಲ್ ಎಸ್ಟೇಟ್ ಯೋಜನೆಗಳಿಗೆ ಆದ್ಯತೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ನಗರಸಭೆಯ ಆಸ್ತಿಗಳು ಸಾರ್ವಜನಿಕರ ಆಸ್ತಿಗಳಾಗಿವೆ. ಅವುಗಳ ಅಭಿವೃದ್ಧಿಯಿಂದ ನಗರಸಭೆಗೆ ಆದಾಯ ಹೆಚ್ಚುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗ ಹಾಗೂ ವ್ಯಾಪಾರ ಅವಕಾಶಗಳು ಸೃಷ್ಟಿಯಾಗಬೇಕು. ಆದರೆ, ಸಾರ್ವಜನಿಕ ಆಸ್ತಿಗಳನ್ನು ಖಾಸಗಿ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿದರೆ ಸ್ಥಳೀಯ ಸಣ್ಣ ವ್ಯಾಪಾರಿಗಳು, ಮೆಕ್ಯಾನಿಕ್‌ಗಳು, ಗ್ಯಾರೇಜ್ ಮಾಲೀಕರು ಹಾಗೂ ಸಣ್ಣ ಉದ್ಯಮಿಗಳಿಗೆ ತೊಂದರೆಯಾಗಲಿದೆ ಎಂದರು.

ನಗರದಲ್ಲಿ ಸಣ್ಣ ಗ್ಯಾರೇಜ್, ಕಾರ್ ಪೇಂಟಿಂಗ್, ವೆಲ್ಡಿಂಗ್ ಸೇರಿದಂತೆ ವಿವಿಧ ವೃತ್ತಿಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದ ಅನೇಕ ಕುಟುಂಬಗಳನ್ನು ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಸ್ಥಳಾಂತರಿಸಿರುವುದು ಸರಿಯಲ್ಲ. ಅಭಿವೃದ್ಧಿ ಕಾಮಗಾರಿಗಳಿಂದ ಸ್ಥಳೀಯರಿಗೆ ಉದ್ಯೋಗ ಹಾಗೂ ವ್ಯಾಪಾರ ಅವಕಾಶಗಳು ದೊರೆಯುವಂತಿರಬೇಕು. ಹೊರಗಿನ ದೊಡ್ಡ ಕಂಪನಿಗಳಿಗೆ ಮಾತ್ರ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಬಾರದು ಎಂದು ಹೇಳಿದರು.

ಗದಗದ ಹತ್ತಿ ವ್ಯಾಪಾರ ಸೇರಿದಂತೆ ಸಾಂಪ್ರದಾಯಿಕ ವಾಣಿಜ್ಯ ಚಟುವಟಿಕೆಗಳಿಗೆ ಐತಿಹಾಸಿಕ ಹಿನ್ನೆಲೆಯಿದೆ. ಸ್ಥಳೀಯ ವ್ಯಾಪಾರ ಮತ್ತು ಉದ್ಯಮಗಳಿಗೆ ಉತ್ತೇಜನ ನೀಡುವ ಬದಲು ಸಾರ್ವಜನಿಕ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸುವುದು ಗದಗದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ವರ್ಷಗಳಿಂದ ವಿವಿಧ ಕಾಮಗಾರಿಗಳನ್ನು ಕೈಗೊಂಡರೂ ನಗರದ ಮೂಲಭೂತ ಸಮಸ್ಯೆಗಳು ಬಗೆಹರಿದಿಲ್ಲ. ಹೀಗಿರುವಾಗ ಸಾರ್ವಜನಿಕ ಆಸ್ತಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಜನರ ಅಭಿಪ್ರಾಯ ಪಡೆಯಬೇಕು. ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ಕೈಗೊಂಡು ಯೋಜನೆ ಮುಂದುವರಿಸಿದರೆ ಜನರನ್ನು ಸಂಘಟಿಸಿ ಹೋರಾಟ ನಡೆಸಲಾಗುವುದು. ಅಗತ್ಯಬಿದ್ದರೆ ಕಾನೂನು ಹೋರಾಟಕ್ಕೂ ಮುಂದಾಗಬೇಕಾಗುತ್ತದೆ ಎಂದು ವೆಂಕನಗೌಡ ಗೋವಿಂದಗೌಡ್ರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಮ್. ಎಸ್. ಪರ್ವತಗೌಡ್ರ, ಬಸವರಾಜ ಅಪ್ಪಣ್ಣವರ ಸೇರಿದಂತೆ ಅನೇಕರಿದ್ದರು.

‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನ

0

ವಿಜಯಸಾಕ್ಷಿ ಸುದ್ದಿ, ಗದಗ: ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ–ಪ್ರವಾದಿ ಮುಹಮ್ಮದ್ (ಸ)’ ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕದ ಗದಗ ಜಿಲ್ಲಾ ಅಧ್ಯಕ್ಷ ಕೆ.ಐ. ಶೇಖ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರು ಜಗತ್ತಿಗೆ ಸಾರಿದ ಸಂದೇಶವು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯನ್ನು ಆಧರಿಸಿತ್ತು. ಜನರ ಮನಸ್ಸುಗಳನ್ನು ಸಂಸ್ಕರಿಸಿ, ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ಧೀಕರಿಸುವ ಮೂಲಕ ವ್ಯಕ್ತಿ ಹಾಗೂ ಸಮಾಜದ ಪರಿವರ್ತನೆಗೆ ಅವರು ಕಾರಣರಾದರು ಎಂದರು.

ಪ್ರವಾದಿ ಮುಹಮ್ಮದ್ (ಸ) ಅವರ ಕ್ರಾಂತಿ ಅಪ್ಪಟ ಮಾನವೀಯ ಕ್ರಾಂತಿಯಾಗಿದ್ದು, ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಮಾನವ ಜೀವನದ ವಿವಿಧ ಕ್ಷೇತ್ರಗಳನ್ನು ಒಳಗೊಂಡಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣವೇ ಅವರ ಗುರಿಯಾಗಿತ್ತು. ಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶಗಳನ್ನು ಕನ್ನಡಿಗರಿಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಹಾಗೂ ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ಅಭಿಯಾನದ ಅಂಗವಾಗಿ ನಗರದ ನೌಕರ ಭವನ, ಶಹಾಪುರ ಪೇಟೆ, ರಾಜೀವಗಾಂಧಿ ನಗರ ಸೇರಿದಂತೆ ವಿವಿಧೆಡೆ ಸೀರತ್ ಅಭಿಯಾನದ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ರಾಜ್ಯದ ವಿವಿಧೆಡೆ ವೈಯಕ್ತಿಕ ಭೇಟಿ, ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ, ಚರ್ಚಾಗೋಷ್ಠಿ, ಸೀರತ್ ಪ್ರವಚನ, ಸೀರತ್ ಪ್ರದರ್ಶನ, ಸಮಾಜಸೇವಾ ಚಟುವಟಿಕೆ ಹಾಗೂ ಸೌಹಾರ್ದ ಸಂದೇಶ ರ‍್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಬರೆದ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್ (ಸ)’ ಹಾಗೂ ವಾರ್ತಾ ಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಕೆ.ಎಂ. ಬಿಲ್ಲಿವಾಲೆ, ಜುನೈದ್ ಉಮಚಗಿ, ಮಹಮ್ಮದ್ ಮುಲ್ಲಾ, ಯೂಸುಫ್ ನಮಾಜಿ, ಡಾ. ಪ್ಯಾರಾಅಲಿ, ರಿಯಾಜ್ ಶೇಖ್, ಜಿ.ಬಿ. ಖಾಜಿ, ರಾಜೀಸಾಬ್ ಕಲ್ಮನಿ ಹಾಗೂ ಶಬ್ಬೀರ ಮೌಲಾನಾ ಇದ್ದರು.

ಹರಿಪುರದಲ್ಲಿ ಸಂಭ್ರಮದ ವೀರಭದ್ರೇಶ್ವರ ಅಗ್ನಿಮಹೋತ್ಸವ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸಮೀಪದ ಹರಿಪುರದಲ್ಲಿ ಶ್ರೀ ವೀರಭದ್ರೇಶ್ವರ ದೇವರ 38ನೇ ವರ್ಷದ ಅಗ್ನಿಮಹೋತ್ಸವವು ಶ್ರಾವಣ ಮಾಸದ ದ್ವಾದಶಿ ದಿನವಾದ ಮಂಗಳವಾರ ಸಡಗರ ಸಂಭ್ರಮದಿಂದ ಜರುಗಿತು.

ಸಂಪ್ರದಾಯದಂತೆ ಬೆಳಿಗ್ಗೆ 6 ಗಂಟೆಗೆ ಶ್ರೀ ಶಂಕರಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವರಿಗೆ ಎಲೆಪೂಜೆ, ಮಹಾರುದ್ರಾಭಿಷೇಕ ನೆರವೇರಿಸಲಾಯಿತು. ಬಳಿಕ ಬೆಳಿಗ್ಗೆ 8 ಗಂಟೆಗೆ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವವು ನಂದಿಧ್ವಜ, ಸಮ್ಮಾಳಗಳು, ಮುತ್ತೈದೆಯರು ಹಾಗೂ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಪುರವಂತರು ವೀರಭದ್ರದೇವರ ಒಡಪುಗಳನ್ನು ಹೇಳುತ್ತಾ, ಶಸ್ತ್ರಗಳನ್ನು ಧರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಮಧ್ಯಾಹ್ನ 1 ಗಂಟೆಯ ಬಳಿಕ ದೇವಸ್ಥಾನದ ಮುಂಭಾಗದಲ್ಲಿ ಏರ್ಪಡಿಸಿದ್ದ ಅಗ್ನಿಕುಂಡದಲ್ಲಿ ಅಪಾರ ಸಂಖ್ಯೆಯ ಭಕ್ತರು ಅಗ್ನಿಹಾಯ್ದು ಭಕ್ತಿ ಸಮರ್ಪಿಸಿದರು. ಈ ವೇಳೆ ಮೊಳಗಿದ ‘ಹರ ಹರ ಮಹಾದೇವ’ ಘೋಷ ಮುಗಿಲು ಮುಟ್ಟಿತು. ನಂತರ ಮಹಾಪ್ರಸಾದ ವಿತರಿಸಲಾಯಿತು.

ಅಗ್ನಿಮಹೋತ್ಸವದ ನೇತೃತ್ವವನ್ನು ಬನ್ನಿಕೊಪ್ಪದ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ಸಮಿತಿ ಅಧ್ಯಕ್ಷ ಶಂಕ್ರಪ್ಪ ಕಾಳಗಿ, ಚಂದ್ರಶೇಖರ ಕಾಳಗಿ, ಬಸವರಾಜ ದೇಸಾಯಿಪಟ್ಟಿ, ಶಂಭು ಕಾಳಗಿ, ಬಸವರಾಜ ಮೂರಶಿಳ್ಳಿ, ವಿಜಯಕುಮಾರ ದೇಸಾಯಿಪಟ್ಟಿ, ಪ್ರಸನ್ನ ಮೂರಶಿಳ್ಳಿ, ದೇವಪ್ಪ ಗದಗಿನ, ನೀಲಕಂಠಪ್ಪ ಕಾಳಗಿ, ಮಂಜುನಾಥ ಸೊಂಟನೂರ, ವೀರೇಶ ದೇಸಾಯಿಪಟ್ಟಿ, ಗಂಗಪ್ಪ ದೇಸಾಯಿಪಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಿಗಳೂರು ಅಪಘಾತ: ಮೃತಪಟ್ಟ, ಗಾಯಗೊಂಡ ಕುಟುಂಬಗಳಿಗೆ ₹14 ಲಕ್ಷ ಪರಿಹಾರ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಜಿಗಳೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ₹14 ಲಕ್ಷ ಮಂಜೂರು ಮಾಡಿ ಗದಗ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಿರುವುದನ್ನು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಸ್ವಾಗತಿಸಿದೆ. ಸರ್ಕಾರ ಹಾಗೂ ಸ್ಥಳೀಯ ಶಾಸಕರಿಗೆ ಅಭಿನಂದನೆ ಸಲ್ಲಿಸಿರುವ ಸಂಘ, ಪರಿಹಾರದ ಮೊತ್ತವನ್ನು ಸಂತ್ರಸ್ತ ಕುಟುಂಬಗಳಿಗೆ ತ್ವರಿತವಾಗಿ ತಲುಪಿಸುವಂತೆ ಆಗ್ರಹಿಸಿದೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳು ಹಾಗೂ ಗಾಯಗೊಂಡವರ ಕುಟುಂಬಗಳು ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೆಲವರು ಚಿಕಿತ್ಸೆಗಾಗಿ ಹಣ ಹೊಂದಿಸಲು ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮಂಜೂರು ಮಾಡಿರುವ ಪರಿಹಾರದ ಮೊತ್ತವು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಉಳಿಯದೆ, ಅರ್ಹ ಫಲಾನುಭವಿಗಳ ವೈಯಕ್ತಿಕ ಖಾತೆಗಳಿಗೆ ಶೀಘ್ರವಾಗಿ ಜಮೆಯಾಗಬೇಕಾಗಿದೆ ಎಂದು ಸಂಘ ತಿಳಿಸಿದೆ.

ಪರಿಹಾರ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ, ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡಬಾರದು. ಪರಿಹಾರದ ಹಣ ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಲಭ್ಯವಾದರೆ, ಚಿಕಿತ್ಸಾ ವೆಚ್ಚ ಹಾಗೂ ಕುಟುಂಬದ ತುರ್ತು ಅಗತ್ಯಗಳನ್ನು ಪೂರೈಸಲು ಅನುಕೂಲವಾಗಲಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.

ಸರ್ಕಾರ ಈಗಾಗಲೇ ಪರಿಹಾರ ಮಂಜೂರು ಮಾಡಿರುವುದರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಅಗತ್ಯವಿಲ್ಲ. ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಅರ್ಹ ಎಲ್ಲ ಕುಟುಂಬಗಳ ಖಾತೆಗೆ ಪರಿಹಾರದ ಮೊತ್ತ ಜಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಆಗ್ರಹಿಸಿದೆ.

ಈ ಕುರಿತು ಸಂಘದ ಕಾರ್ಯದರ್ಶಿ ಎಂ.ಎಸ್. ಹಡಪದ ಹಾಗೂ ಮುಖಂಡರಾದ ಬಾಲು ರಾಠೋಡ, ಪೀರು ರಾಠೋಡ, ಫಯಾಜ್ ತೋಟದ, ದಾವಲಸಾಬ ತಾಳಿಕೋಟಿ, ರಾಜಪ್ಪ ಹೊಸಮನಿ, ಮೆಹಬೂಬ್ ಹುನಗುಂದ, ರಾಜಣ್ಣ ಕೇಶಣ್ಣವರ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಶಿಕ್ಷಣ ಪ್ರೇಮಿಗಳ ಆಕ್ರೋಶಕ್ಕೆ ಎಚ್ಚೆತ್ತ ಇಲಾಖೆ: ಬೀಗ ಹಾಕಿದ್ದ ಸರ್ಕಾರಿ ಶಾಲೆ ಮತ್ತೆ ಆರಂಭ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಕ್ಕಳ ಸಂಖ್ಯೆ ಕುಸಿದ ಹಿನ್ನೆಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಬೀಗ ಹಾಕಿದ್ದ ಪಟ್ಟಣದ ಕೆಂಚಲಾಪುರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಗಿಲು ಕೊನೆಗೂ ಮಂಗಳವಾರ ತೆರೆದು, ಮತ್ತೆ ಮಕ್ಕಳ ಕಲರವ ಮೊಳಗಿತು. ಶಾಲೆ ಮುಚ್ಚುವ ಹಂತ ತಲುಪಿರುವ ಕುರಿತು ಶಿಕ್ಷಣ ಪ್ರೇಮಿಗಳು ಹಾಗೂ ಪೋಷಕರು ಸೋಮವಾರ ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು, ಮಕ್ಕಳನ್ನು ಬೇರೆ ಶಾಲೆಗಳಿಗೆ ವರ್ಗಾಯಿಸಿದ್ದ ಪಾಲಕರ ಮನೆಗಳಿಗೆ ತೆರಳಿ ಮನವೊಲಿಸುವ ಮೂಲಕ ಐವರು ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಮೂರು ದಶಕಗಳಿಂದ ಕೆಂಚಲಾಪುರ ಬಡಾವಣೆಯ ಮಕ್ಕಳಿಗೆ ಶಿಕ್ಷಣದ ಬೆಳಕು ನೀಡುತ್ತಿದ್ದ ಈ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಾಖಲಾತಿ ಸಂಖ್ಯೆ ನಿರಂತರವಾಗಿ ಕುಸಿಯುತ್ತ ಬಂದಿದೆ. ಕಳೆದ ವರ್ಷ 1ರಿಂದ 7ನೇ ತರಗತಿವರೆಗೆ ಒಟ್ಟು 26 ಮಕ್ಕಳು ದಾಖಲಾಗಿದ್ದರೆ, 2026-27ನೇ ಸಾಲಿನಲ್ಲಿ ಈ ಸಂಖ್ಯೆ ಕೇವಲ 11ಕ್ಕೆ ಇಳಿದಿತ್ತು. ಈ ಪೈಕಿ ಕೆಲವರು ಬೇರೆ ಶಾಲೆಗಳಿಗೆ ವರ್ಗಾವಣೆಯಾಗಿದ್ದರಿಂದ ಶಾಲೆಯ ಭವಿಷ್ಯದ ಬಗ್ಗೆಯೇ ಆತಂಕ ಎದುರಾಗಿತ್ತು.

ಶಿಕ್ಷಕರ ಕೊರತೆಯೂ ಶಾಲೆ ಖಾಲಿಯಾಗಲು ಕಾರಣ

ಶಾಲೆಯಲ್ಲಿದ್ದ ಇಬ್ಬರು ಶಿಕ್ಷಕರನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಎಸ್‌ಐಆರ್‌ ಕಾರ್ಯಕ್ಕೆ ನಿಯೋಜಿಸಿದ್ದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗಿತ್ತು. ಮಕ್ಕಳಿಗೆ ಸಮರ್ಪಕ ಶಿಕ್ಷಣ ದೊರೆಯುತ್ತಿಲ್ಲ ಎಂಬ ಕಾರಣ ನೀಡಿ ಕೆಲವು ಪಾಲಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲಿಸಿದ್ದರು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಮತ್ತಷ್ಟು ಕುಸಿದು, ಶಾಲೆಯೇ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಅಧಿಕಾರಿಗಳು ಮಂಗಳವಾರ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಬಳಿಕ ಬೇರೆ ಶಾಲೆಗಳಿಗೆ ಮಕ್ಕಳನ್ನು ವರ್ಗಾಯಿಸಿದ್ದ ಪಾಲಕರ ಮನೆಗಳಿಗೆ ತೆರಳಿ, ಮಕ್ಕಳನ್ನು ಇದೇ ಶಾಲೆಯಲ್ಲಿ ಮುಂದುವರಿಸುವಂತೆ ಮನವಿ ಮಾಡಿದರು.

ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಪಾಲಕರಿಂದ ಐವರು ಮಕ್ಕಳು ಮಂಗಳವಾರವೇ ಶಾಲೆಗೆ ಮರಳಿದ್ದು, ತರಗತಿಗಳು ಪುನರಾರಂಭಗೊಂಡವು.

ಎರಡು ದಿನದಲ್ಲಿ ಪರಿಣಿತ ಶಿಕ್ಷಕರ ನಿಯೋಜನೆ

ಶಾಲೆಯ ಬೋಧನಾ ಗುಣಮಟ್ಟದ ಕುರಿತು ಪಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ ಭರವಸೆ ನೀಡಿದರು.

ಶಾಲೆಯ ಪುನರಾರಂಭದ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ, ಶಿಕ್ಷಣ ಸಂಯೋಜಕ ಆರ್.ಬಿ. ಜೋಶಿ, ಸಿಆರ್‌ಪಿಗಳಾದ ಉಮೇಶ ನೇಕಾರ, ಎನ್.ಎ. ಮುಲ್ಲಾ, ಎಸ್.ಎಚ್. ಮತ್ತೂರ, ಎಸ್‌ಡಿಎಂಸಿ ಅಧ್ಯಕ್ಷ ಸುಲೇಮಾನ್ ಮುಜಾವರ್, ಹೇಮಣ್ಣ ಬುರಡಿ, ತಿಪ್ಪಣ್ಣ ರೊಟ್ಟಿಗವಾಡ ಸೇರಿದಂತೆ ಶಿಕ್ಷಣ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗಳನ್ನು ಬಂದ್ ಮಾಡುವ ಯಾವುದೇ ಉದ್ದೇಶ ಶಿಕ್ಷಣ ಇಲಾಖೆಗೆ ಇಲ್ಲ. ಪಾಲಕರು ಆತಂಕಪಡುವ ಅಗತ್ಯವಿಲ್ಲ. ಎರಡು ದಿನಗಳಲ್ಲಿ ಓರ್ವ ಪರಿಣಿತ ಶಿಕ್ಷಕರನ್ನು ಶಾಲೆಗೆ ನಿಯೋಜಿಸಲಾಗುವುದು. ಇಂದಿನಿಂದ ಶಾಲೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಉಳಿದ ಮಕ್ಕಳನ್ನೂ ಮರಳಿ ಶಾಲೆಗೆ ಕರೆತರಲು ಕ್ರಮ ಕೈಗೊಳ್ಳಲಾಗುವುದು. ಪಾಲಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಸಾರ್ವಜನಿಕರನ್ನು ಒಳಗೊಂಡ ಸಭೆ ನಡೆಸಿ, ಶಾಲೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆಯಲಾಗುವುದು.

— ಶಿವರಾಜ ಸೀಮಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ಆದೇಶ!

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆ ನಡೆಸಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲು ಅಧಿಕೃತವಾಗಿ ಶಿಫಾರಸು ಮಾಡಿತ್ತು. ಈ ಶಿಫಾರಸಿನ ಆಧಾರದ ಮೇಲೆ ರಾಜ್ಯಪಾಲರು ಇದೀಗ ಅಮಾನತು ಆದೇಶ ಹೊರಡಿಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲರು ಅಮಾನತುಗೊಳಿಸಿರುವುದು ಇದು ಎರಡನೇ ಬಾರಿಯಾಗಿದೆ. ರಾಷ್ಟ್ರಪತಿಗಳು ಮುಂದಿನ ಆದೇಶ ಹೊರಡಿಸುವವರೆಗೆ ಅಮಾನತು ಆದೇಶ ಜಾರಿಯಲ್ಲಿರಲಿದೆ.

ರಾಜ್ಯ ಸಚಿವ ಸಂಪುಟದ ಅನುಮತಿ ಪಡೆಯದೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಈ ಹಿಂದೆ ಅಭಿಪ್ರಾಯಪಟ್ಟಿತ್ತು. ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಸರ್ಕಾರ ಮತ್ತೊಮ್ಮೆ ಸಚಿವ ಸಂಪುಟದ ಅನುಮತಿ ಪಡೆದು ಅಮಾನತಿಗೆ ಶಿಫಾರಸು ಮಾಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರ ಅಮಾನತಿಗೆ ಅನುಮೋದನೆ ನೀಡಲಾಗಿತ್ತು. ಇದೀಗ ರಾಜ್ಯಪಾಲರ ಆದೇಶದೊಂದಿಗೆ ಅಮಾನತು ಪ್ರಕ್ರಿಯೆ ಜಾರಿಗೊಂಡಿದೆ.

ಜಮಖಂಡಿಯಲ್ಲಿ ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ; 67 ವರ್ಷದ ವೃದ್ಧೆಗೆ ಗಾಯ

0

ಬಾಗಲಕೋಟೆ: ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 67 ವರ್ಷದ ವೃದ್ಧೆಯೊಬ್ಬರು ಗಾಯಗೊಂಡಿರುವ ಘಟನೆ ಜಮಖಂಡಿಯ ಚೌಡಯ್ಯನಗರದ ಮಾವಿನ ಮಸಾರಿ ಬಡಾವಣೆಯಲ್ಲಿ ನಡೆದಿದೆ.

ಲಕ್ಷ್ಮೀಬಾಯಿ ಪತ್ತಾರ (67) ಗಾಯಗೊಂಡವರು. ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಲಕ್ಷ್ಮೀಬಾಯಿ ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ.

ಘಟನೆ ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಮಖಂಡಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಬಳಿಕ ಗಾಯಗೊಂಡ ಲಕ್ಷ್ಮೀಬಾಯಿ ಅವರನ್ನು ರಕ್ಷಿಸಿ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಮನೆಯ ಇತರೆ ಭಾಗಗಳಿಗೆ ಹರಡುವ ಮುನ್ನವೇ ನಿಯಂತ್ರಣಕ್ಕೆ ಬಂದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.