Home Blog Page 2

ಒಳಮೀಸಲಾತಿ ಜಾರಿಗೊಳಿಸಿ ಅಂಗನವಾಡಿ ನೇಮಕಾತಿ ನಡೆಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯಲ್ಲಿ ಸರ್ಕಾರದ ಆದೇಶದಂತೆ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಭೀಮ ಶಕ್ತಿ ಸಂಘಟನೆ ವತಿಯಿಂದ ಗದಗ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಭೀಮ ಶಕ್ತಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ ಮುಗುಳಿ, ರಾಜ್ಯ ಸರ್ಕಾರವು 2026ರ ಮೇ 8ರಂದು ಹೊರಡಿಸಿರುವ ಆದೇಶದ ಪ್ರಕಾರ ಪರಿಶಿಷ್ಟ ಜಾತಿಗೆ ಮೂರು ಅಥವಾ ಅದಕ್ಕಿಂತ ಹೆಚ್ಚು ಹುದ್ದೆಗಳು ಇದ್ದರೆ ಒಳಮೀಸಲಾತಿ ಅನ್ವಯ ನೇಮಕಾತಿ ನಡೆಸುವುದು ಕಡ್ಡಾಯವಾಗಿದೆ. ಆದರೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಶಿಶು ಅಭಿವೃದ್ಧಿ ಯೋಜನೆಯಡಿ ಜೂನ್ 22ರಂದು ಪ್ರಕಟಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಈ ನಿಯಮ ಪಾಲನೆಯಾಗಿಲ್ಲ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿಗೆ ಮೂರುಕ್ಕಿಂತ ಹೆಚ್ಚು ಹುದ್ದೆಗಳಿದ್ದರೂ ಒಳಮೀಸಲಾತಿ ಅನ್ವಯಿಸದೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಿರುವುದು ಸರ್ಕಾರದ ಆದೇಶ ಹಾಗೂ ಸಾಮಾಜಿಕ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ. ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಒಳಮೀಸಲಾತಿ ಅನ್ವಯ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅದಕ್ಕೂ ಮುನ್ನ ಸರ್ಕಾರದ ಆದೇಶದಂತೆ ನೇಮಕಾತಿ ಪ್ರಕ್ರಿಯೆ ತಿದ್ದುಪಡಿ ಮಾಡಬೇಕು. ಇಲ್ಲವಾದರೆ ಕಾನೂನು ಹೋರಾಟದ ಜೊತೆಗೆ ಸಂಬಂಧಿಸಿದ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಕಾನೂನು ಸಲಹೆಗಾರ ಮೈಲಾರಪ್ಪ ಡಿ.ಎಚ್., ಅಣ್ಣಪ್ಪ ಗುತ್ತೇಮ್ಮನವರ, ಅನಿಲ ಸಣ್ಣತಂಗಿಯವರ, ಪ್ರವೀಣ ಅದರಗುಂಚಿ, ಶ್ಯಾಮಸುಂದರ, ಮನು ತುರಾಡಿ, ಸೋಮಣ್ಣ, ಶಿವು ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ: ಮಿಥುನ್ ಜಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹಾಲಕೆರೆ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಿರ್ಮಿಸಲಾಗುತ್ತಿರುವ ಜಲಸಂಗ್ರಹಾಗಾರದ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಿ ಗ್ರಾಮಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಹೇಳಿದರು.

ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಜಲಸಂಗ್ರಹಾಗಾರಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ನೀರು ಸಂಗ್ರಹಿಸುವ ವ್ಯವಸ್ಥೆ ಇಲ್ಲದಿರುವುದನ್ನು ಮನಗಂಡು ಶಾಸಕ ಜಿ.ಎಸ್. ಪಾಟೀಲ ಅವರು ತಮ್ಮ ಶಾಸಕರ ಅನುದಾನದಿಂದ ₹20 ಲಕ್ಷ ಮಂಜೂರು ಮಾಡಿದ್ದು, ಗ್ರಾಮ ಪಂಚಾಯಿತಿಯಿಂದ ₹20 ಲಕ್ಷ ನೀಡಲಾಗುತ್ತಿದೆ. ಒಟ್ಟು ₹40 ಲಕ್ಷ ವೆಚ್ಚದಲ್ಲಿ ಜಲಸಂಗ್ರಹಾಗಾರ ನಿರ್ಮಾಣವಾಗಲಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಲಕೆರೆ ಗ್ರಾಮಕ್ಕೆ ಜಲಸಂಗ್ರಹಾಗಾರದ ಅವಶ್ಯಕತೆ ಬಹಳಷ್ಟಿದ್ದು, ಶಾಸಕ ಜಿ.ಎಸ್. ಪಾಟೀಲ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದರು. ಗ್ರಾಮದಲ್ಲಿ ನೆಡುವ ಸಸಿಗಳನ್ನು ಮರಗಳಾಗುವವರೆಗೆ ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಾಲಕೆರೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂದನಗೌಡ ಪಾಟೀಲ, ರೋಣ ಎಇ ರಶ್ಮಿ, ಗಜೇಂದ್ರಗಡ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿದರು.

ಈ ಸಂದರ್ಭದಲ್ಲಿ ಗಿರೀಶಗೌಡ ಮುಲ್ಕಿಪಾಟೀಲ, ಸಿದ್ದನಗೌಡರ ಇನಾಮತಿ, ಸೊಪ್ಪಯ್ಯ ಸ್ವಾಮಿ ಸೊಪ್ಪಿಹಿರೇಮಠ, ಹೊನ್ನಪ್ಪಗೌಡ ಪಾಟೀಲ, ಪಿಡಿಒ ಶರಣಪ್ಪ ನರೇಗಲ್ಲ, ಶಿವಕುಮಾರ ನಂದಿ, ಅಂದನಗೌಡ ಪಾಟೀಲ, ವೀರಣ್ಣ ಹಳ್ಳಿ, ಅಶೋಕ ಮಾಳಗೌಡರ, ಮಹೇಶ್ ಕುರಿ, ಆನಂದ ಹಳ್ಳಿ, ಪರಶುರಾಮ ತೆಲೆಖಾನ, ರಾಮಪ್ಪ ಪೂಜಾರ, ಶರಣಪ್ಪ ಪೂಜಾರ, ನವೀನ್ ಮಾದಿನೂರ, ಪ್ರವೀಣ ಭೈರಗೊಂಡ, ಬಾಳಪ್ಪ ಕುರಿ, ಮಾಂತೇಶ್ ಪ್ರಭಣ್ಣವರ, ಸಿದ್ದಪ್ಪ ಗೆದಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೇವೆಯಲ್ಲೇ ಸಾರ್ಥಕತೆ ಕಂಡ ಇನ್ನರ್ ವೀಲ್!

0

ವಿಜಯಸಾಕ್ಷಿ ಸುದ್ದಿ, ಗದಗ: ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಂಗವಾಗಿ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಆರ್ಥಿಕವಾಗಿ ಹಿಂದುಳಿದ ಶ್ರವಣ ದೋಷವುಳ್ಳ ವಿದ್ಯಾರ್ಥಿನಿ ಪಲ್ಲವಿ ಭಾನಾಪುರ ಅವರಿಗೆ ಶಿಕ್ಷಣ ಮುಂದುವರಿಸಲು ಅಗತ್ಯ ಪಠ್ಯಪೂರಕ ಸಾಮಗ್ರಿಗಳನ್ನು ವಿತರಿಸಲಾಯಿತು. ಬಡ ರೈತ ಮಹಿಳೆ ಪದ್ಮಾವತಿ ಡೊಂಗಡೆ ಅವರಿಗೆ ಕೃಷಿಗೆ ನೆರವಾಗುವಂತೆ ಬೀಜಗಳನ್ನು ವಿತರಿಸಿದರೆ, ಮತ್ತೊಬ್ಬ ಮಹಿಳೆ ಶೈಲಾ ಅಂಗಡಿ ಅವರಿಗೆ ದೈನಂದಿನ ಜೀವನಕ್ಕೆ ನೆರವಾಗುವ ಉದ್ದೇಶದಿಂದ ಮಿಕ್ಸರ್ ಗ್ರೈಂಡರ್ ನೀಡಲಾಯಿತು.

ಈ ಸಂದರ್ಭದಲ್ಲಿ ಡಿಇಎಸ್‌ಒ ವಿರಾಜ ಕೋಟಕ್ ಅವರು ಕ್ಲಬ್‌ನ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪಿಡಿಸಿ ಪ್ರೇಮಾ ಗುಳಗೌಡರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಅಶ್ವಿನಿ ಜಗತಾಪ್ ಸ್ವಾಗತಿಸಿದರು. ರೇಣುಕಾ ಅಮಾತ್ಯ ಪ್ರಾರ್ಥನೆ ನಡೆಸಿದರೆ, ಸುವರ್ಣ ಮದರಿಮಠ ಇನ್ನರ್ ವೀಲ್ ಪ್ರಾರ್ಥನೆ ನೆರವೇರಿಸಿದರು.

ಪ್ರಸಕ್ತ ಸಾಲಿನ ಅಧ್ಯಕ್ಷೆ ಮಂಜುಳಾ ಅಕ್ಕಿ ವಾರ್ಷಿಕ ಸೇವಾ ಯೋಜನೆಗಳನ್ನು ವಿವರಿಸಿದರು. ಕಾರ್ಯದರ್ಶಿ ಪೂಜಾ ಭೂಮಾ ವಂದಿಸಿದರು. ಜ್ಯೋತಿ ದಾನಪ್ಪಗೌಡರ ಹಾಗೂ ಸ್ಮಿತಾ ಹೊಸೂರ್ ಕಾರ್ಯಕ್ರಮ ನಿರ್ವಹಿಸಿದರು.

ಮೊಸಳೆಯೋ… ಆನೆಯೋ? ಪ್ರಕೃತಿಯ ಈ ಕಲಾಕೃತಿ ನೋಡಿ ಜನ ಅಚ್ಚರಿ!

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪ್ರಕೃತಿಯ ಸೃಷ್ಟಿಯ ಮುಂದೆ ಮನುಷ್ಯನ ಕಲ್ಪನೆಯೂ ಕೆಲವೊಮ್ಮೆ ಮಂಕಾಗುತ್ತದೆ. ಅಂತಹ ಅಪರೂಪದ ಪ್ರಕೃತಿ ವೈಚಿತ್ರ್ಯವೊಂದು ನರೇಗಲ್ಲ–ಗದಗ ರಸ್ತೆಯ ಪೆಟ್ರೋಲ್ ಬಂಕ್ ಸಮೀಪದ ಪ್ರಶಾಂತ ಮೇಸ್ತ್ರಿ ಅವರ ಕಾರ್ ಗ್ಯಾರೇಜ್ ಎದುರು ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಗಿಡ ಮತ್ತು ಜಾಲಿಗಿಡಗಳ ಸಹಜ ಬೆಳವಣಿಗೆಯಿಂದ ರೂಪುಗೊಂಡಿರುವ ಈ ಆಕಾರ ನೋಡಿದವರಿಗೆ ಒಂದೇ ರೀತಿಯಾಗಿ ಕಾಣುವುದಿಲ್ಲ. ಕೆಲವರಿಗೆ ಅದು ಬಾಯಿ ತೆರೆದು ಬೇಟೆಗೆ ಹೊಂಚು ಹಾಕಿರುವ ಮೊಸಳೆಯಂತೆ ಭಾಸವಾದರೆ, ಮತ್ತೂ ಕೆಲವರಿಗೆ ಸೊಂಡಿಲೆತ್ತಿ ಘೀಳಿಡುತ್ತಿರುವ ಆನೆಯಂತೆ ಕಾಣುತ್ತಿದೆ. ಅದರ ತಲೆ, ಬಾಯಿ ಮತ್ತು ಕೋರೆ ಹಲ್ಲುಗಳಂತಿರುವ ಆಕಾರ ಪ್ರಕೃತಿಯ ಅದ್ಭುತ ಕಲಾಕೃತಿಯಂತೆ ಗೋಚರಿಸುತ್ತಿದೆ.

ವಿಶೇಷವೆಂದರೆ, ಈ ರಚನೆಯನ್ನು ಯಾರೂ ಕೃತಕವಾಗಿ ಸೃಷ್ಟಿಸಿಲ್ಲ. ಯಾವುದೇ ಕೊಂಬೆಗಳನ್ನು ಕತ್ತರಿಸಿ ಅಥವಾ ರೂಪಿಸಿ ಮಾಡದೇ, ಗಿಡಗಳ ಸಹಜ ಬೆಳವಣಿಗೆಯಿಂದಲೇ ಈ ವಿಶಿಷ್ಟ ಆಕಾರ ಮೂಡಿದೆ. ಇದೇ ಕಾರಣಕ್ಕೆ ಈ ಮಾರ್ಗದಲ್ಲಿ ಸಂಚರಿಸುವ ಅನೇಕರು ವಾಹನಗಳನ್ನು ನಿಲ್ಲಿಸಿ ಕೆಲ ಹೊತ್ತು ಈ ಪ್ರಕೃತಿ ವೈಚಿತ್ರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಸ್ಥಳೀಯ ನಿವಾಸಿ ಈರಪ್ಪ ಮಣ್ಣೊಡ್ಡರ ಮಾತನಾಡಿ, “ನಾವು ಇಲ್ಲಿಯೇ ಕೆಲಸ ಮಾಡುತ್ತಿದ್ದರೂ ಈ ರಚನೆ ನಮ್ಮ ಗಮನಕ್ಕೆ ಬಂದಿರಲಿಲ್ಲ. ದಾರಿಹೋಕರು ಪದೇಪದೇ ವಾಹನ ನಿಲ್ಲಿಸಿ ನೋಡುತ್ತಿರುವುದನ್ನು ಕಂಡು ಕುತೂಹಲದಿಂದ ಗಮನಿಸಿದಾಗ ಈ ಅಪರೂಪದ ಆಕಾರ ಕಾಣಿಸಿತು. ಇದು ಪ್ರಕೃತಿಯೇ ಮೂಡಿಸಿರುವ ಅದ್ಭುತ ಶಿಲ್ಪ,” ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಸೃಷ್ಟಿಯ ರಹಸ್ಯಗಳನ್ನು ಅರಿಯಲು ದೊಡ್ಡ ಕಣ್ಣಲ್ಲ, ಗಮನಿಸುವ ಕಣ್ಣು ಸಾಕು ಎನ್ನುವುದನ್ನು ಈ ಪ್ರಕೃತಿ ಕಲಾಕೃತಿಯೇ ಸಾಬೀತುಪಡಿಸುತ್ತಿದೆ.

ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ! ಸಂಗೀತ ಲೋಕಕ್ಕೆ ಆಘಾತ

0

ಮೈಸೂರು: ತಮ್ಮ ಸುಮಧುರ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ನಿಧನರಾಗಿದ್ದಾರೆ.

ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. 1938ರ ಏಪ್ರಿಲ್ 23ರಂದು ಜನಿಸಿದ್ದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಧ್ವನಿಯ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದರು.

ಹಳ್ಳಿಯ ಸೊಗಡಿನ ಜನಪದ ಗೀತೆಗಳಿಂದ ಹಿಡಿದು ಶಾಸ್ತ್ರೀಯ, ಭಾವಗೀತೆ ಹಾಗೂ ವಿವಿಧ ಪ್ರಕಾರದ ಹಾಡುಗಳಿಗೆ ತಮ್ಮ ಧ್ವನಿ ನೀಡಿದ್ದ ಎಸ್. ಜಾನಕಿ ಅವರು ಹಲವು ಭಾಷೆಗಳ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರರಂಗದಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ.

ಎಸ್. ಜಾನಕಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಂಗೀತ ಪ್ರೇಮಿಗಳು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಜೀವನದ ಯಶಸ್ಸು ಹುದ್ದೆಯಲ್ಲ, ಆತ್ಮತೃಪ್ತಿಯಲ್ಲಿ: ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಜೀವನದ ನಿಜವಾದ ಮೌಲ್ಯವು ಹುದ್ದೆ, ಅಧಿಕಾರ ಅಥವಾ ಸಂಪತ್ತಿನಲ್ಲಿ ಅಡಗಿಲ್ಲ. ಬದುಕಿನ ಕೊನೆಯಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲದೆ ಆತ್ಮತೃಪ್ತಿಯಿಂದ ಬದುಕುವುದೇ ನಿಜವಾದ ಯಶಸ್ಸು ಎಂದು ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು.

ನಗರದ ವಾಣಿಜ್ಯ ಭವನದ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾಭವನದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಲಿಂ. ಪಂಚಾಕ್ಷರಯ್ಯ ಎಸ್. ಸಂಶಿಮಠ ಅವರ ಸ್ಮರಣಾರ್ಥ ಆಯೋಜಿಸಿದ್ದ ಸಂಶಿಮಠ ದತ್ತಿ ಉಪನ್ಯಾಸ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಯುವಕರು ಸರ್ಕಾರಿ ಉದ್ಯೋಗವನ್ನೇ ಅಂತಿಮ ಗುರಿಯಾಗಿಸಿಕೊಳ್ಳದೆ, ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗದತ್ತ ಮುಖ ಮಾಡಬೇಕು. ಸರ್ಕಾರ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ಹೀಗಾಗಿ ಸ್ವಾವಲಂಬನೆ, ಧೈರ್ಯ ಹಾಗೂ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯೋದ್ಯಮ ಸಂಸ್ಥೆಗಳು ವ್ಯಾಪಾರಕ್ಕೆ ಮಾತ್ರ ಸೀಮಿತವಾಗದೆ, ಸಮಾಜಮುಖಿ ಚಟುವಟಿಕೆಗಳು, ಪ್ರತಿಭೆಗಳ ಪ್ರೋತ್ಸಾಹ ಹಾಗೂ ಯುವಜನರಿಗೆ ಮಾರ್ಗದರ್ಶನ ನೀಡುವ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. “ದೇಹಸಂಪತ್ತು, ವಿಚಾರಸಂಪತ್ತು ಮತ್ತು ಚೈತನ್ಯವೇ ವ್ಯಕ್ತಿಯ ನಿಜವಾದ ಸಂಪತ್ತು” ಎಂದು ಶ್ರೀಗಳು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಸಿದ್ರಾಮಯ್ಯ ಸಂಶಿಮಠ, ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವ ಉದ್ದೇಶದಿಂದ ಈ ದತ್ತಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ಹಿರಿಯರ ಮಾರ್ಗದರ್ಶನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಉದ್ಯಮ, ಶಿಕ್ಷಣ, ಕ್ರೀಡೆ ಹಾಗೂ ಸಮಾಜಸೇವೆಯಲ್ಲಿ ಇನ್ನಷ್ಟು ಸಾಧನೆ ಮಾಡಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳು, ಸೈಕ್ಲಿಸ್ಟ್‌ಗಳು, ತರಬೇತುದಾರರು, ಚಾರ್ಟರ್ಡ್ ಅಕೌಂಟೆಂಟ್‌ಗಳು, ರಕ್ತದಾನ, ಶಿಕ್ಷಣ, ವಿಶೇಷಚೇತನರ ಸೇವೆ, ಆರೋಗ್ಯ ಜಾಗೃತಿ, ರೋಟರಿ ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸಮಾಜಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನಿತರ ಪರವಾಗಿ ಶ್ರೀಧರ ಧರ್ಮಾಯತ, ಪ್ರವೀಣ ವಾರಕರ, ರಮೇಶ ಶಿಗ್ಲಿ, ಸರೋಜಾ ಕುಲಕರ್ಣಿ, ಮಾಲತಿ ಇನಾಮತಿ, ಪೂಜಾ ಗುಗ್ಗರಿ ಹಾಗೂ ಕವಿತಾ ದಂಡಿನ ಮಾತನಾಡಿದರು.

ಚನ್ನವೀರಪ್ಪ ಹುಣಸಿಕಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈಶಣ್ಣ ಮುನವಳ್ಳಿ, ವಿ.ಕೆ. ಗುರುಮಠ, ವಿಜಯಕುಮಾರ ಮಾಟಲದಿಣ್ಣಿ, ದತ್ತು ಬೇವಿನಕಟ್ಟಿ ಹಾಗೂ ರಾಘವೇಂದ್ರ ಕಾಲವಾಡ ಪರಿಚಯಿಸಿದರು. ದಾನಯ್ಯ ಗಣಾಚಾರಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಯದೇವ ಮೆಣಸಗಿ, ಪ್ರಕಾಶ ಉಗಲಾಟದ, ಸಿದ್ರಾಮಪ್ಪ ಉಮಚಗಿ, ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಅರವಿಂದ ಕಾಮತ, ಚಂದ್ರು ಬಾಳಿಹಳ್ಳಿಮಠ ಸೇರಿದಂತೆ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ಕ್ರೀಡಾಪಟುಗಳು, ಸಮಾಜಸೇವಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

“ಜೀವನದ ನಿಜವಾದ ಸಂಪತ್ತು ಹುದ್ದೆ ಅಥವಾ ಹಣವಲ್ಲ; ಆತ್ಮತೃಪ್ತಿ, ಸಮಾಜಸೇವೆ ಮತ್ತು ಚೈತನ್ಯವೇ ಮನುಷ್ಯನ ಶ್ರೇಷ್ಠ ಆಸ್ತಿ.”

— ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ

‘ಕುಡುಕ ನನ್ಮಕ್ಳು’ ಮೊದಲ ಹಂತದ ಚಿತ್ರೀಕರಣ ಪೂರ್ಣ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕಲಾಭೂಮಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಕುಡುಕ ನನ್ಮಕ್ಳು’ ಚಿತ್ರದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.

‘ತುಂಬಾ ಒಳ್ಳೆಯವರು’ ಎಂಬ ಅಡಿ ಬರಹ ಹೊಂದಿರುವ ಚಿತ್ರದ ಚಿತ್ರೀಕರಣವು ಬೆಂಗಳೂರು ನಗರ ಹಾಗೂ ಹೊರವಲಯಗಳಲ್ಲಿ ಸುಮಾರು 20 ದಿನಗಳ ಕಾಲ ನಡೆದಿದ್ದು, ಕಾಮಿಡಿ ಕಿಲಾಡಿಗಳಾದ ಚಂದ್ರಪ್ರಭ, ವಿನೋದ್ ಗೊಬ್ರಗಾಲ, ಮಿಮಿಕ್ರಿ ಗೋಪಿ, ಸಚಿನ್ ಪುರೋಹಿತ್, ಚೈತ್ರಾ ಕೊಟ್ಟೂರು ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ನಟಿಸಿದ್ದಾರೆ.

ಚಿತ್ರಕ್ಕೆ ಆಸ್ಕರ್ ಕೃಷ್ಣ ನಿರ್ದೇಶನವಿದ್ದು, ಮಂಜು ಕವಿ ಸಾಹಿತ್ಯ ಮತ್ತು ಸಂಗೀತ ನೀಡಿದ್ದಾರೆ. ವಿನಯ್ ಗೌಡ ಛಾಯಾಗ್ರಹಣ, ಅಯ್ಯೂರ್ ಸಂಕಲನ, ವೆಂಕಟ್ ಸಂಭಾಷಣೆ ಬರೆದಿದ್ದಾರೆ. ಚಂದ್ರಶೇಖರ ಪಿಆರ್‌ಒ ಆಗಿದ್ದು, ಡಾ. ಪ್ರಭು ಗಂಜಿಹಾಳ ಹಾಗೂ ಡಾ. ವೀರೇಶ ಹಂಡಿಗಿ ಸಹಯೋಗ ನೀಡಿದ್ದಾರೆ.

ಅರುಣ ಎಲ್. ಶೆಟ್ಟಿ, ವೈಶಾಲಿ ಮುರಳೀಧರ್, ಪಲ್ಲವಿ ಅಗ್ನಿಹೋತ್ರಿ, ಬಾಬು ಎಸ್.ಎಚ್. (ತುಮಕೂರು), ರವಿ ನಾಯಕ್, ನಿಂಗರಾಜು ಬಿ., ಲೋಕೇಶ್ ಕೆ.ಎಸ್. ಹಾಗೂ ಸಿದ್ದಲಿಂಗಯ್ಯ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

25, 30, 35 ಮತ್ತು 40 ವರ್ಷದ ನಾಲ್ವರು ವ್ಯಕ್ತಿಗಳ ಬದುಕಿನ ಸುತ್ತ ಸಾಗುವ ಈ ಚಿತ್ರವು, ಮದ್ಯಪಾನದ ದುಷ್ಪರಿಣಾಮಗಳು ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಹಾಸ್ಯದ ಮೂಲಕ ಮನಮುಟ್ಟುವ ರೀತಿಯಲ್ಲಿ ಚಿತ್ರಿಸುತ್ತದೆ ಎಂದು ನಿರ್ದೇಶಕ ಆಸ್ಕರ್ ಕೃಷ್ಣ ತಿಳಿಸಿದ್ದಾರೆ.

ಚಿತ್ರವನ್ನು ದಸರಾ ಅಥವಾ ದೀಪಾವಳಿ ವೇಳೆಗೆ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.

ಅಕ್ರಮ ಮಣ್ಣು ಗಣಿಗಾರಿಕೆಗೆ ಕಡಿವಾಣ ಹಾಕಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮಣ್ಣು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ್ರ ಬಣ) ಜಿಲ್ಲಾಧ್ಯಕ್ಷ ಎಂ.ಪಿ. ಪರ್ವತಗೌಡ್ರ ಎಚ್ಚರಿಕೆ ನೀಡಿದರು.

ಈ ಕುರಿತು ಕರವೇ ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಇತರ ಜಿಲ್ಲೆಗಳಿಗಿಂತ ಗದಗ ಜಿಲ್ಲೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದರಿಂದ ಅಕ್ರಮ ದಂಧೆ ನಿರಾತಂಕವಾಗಿ ಸಾಗುತ್ತಿದೆ ಎಂದು ಆರೋಪಿಸಿದರು.

ಕಾನೂನು ಹಾಗೂ ನಿಯಮಾವಳಿಗಳನ್ನು ಸಂಪೂರ್ಣ ಉಲ್ಲಂಘಿಸಿ ಹಗಲಿರುಳು ಅಕ್ರಮ ಮಣ್ಣು ಸಾಗಾಟ ನಡೆಯುತ್ತಿದ್ದು, ಇದರಿಂದ ಸರ್ಕಾರದ ಆದಾಯಕ್ಕೂ ನಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ದಾಳಿ ನಡೆಸಿ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸಯ್ಯ ಗುಡ್ಡಿಮಠ, ಶರಣಪ್ಪ ಹೊನ್ನಪ್ಪನವರ, ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪಾರ್ವತಿ ಪಾಟೀಲ, ಲಕ್ಷ್ಮಿ ಶಿವಸಿಂಪಿಗೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪರಶುರಾಮ ಬನ್ನುರ, ರೈತ ಸಂಘದ ಬಸವರಾಜ ಬಜಂತ್ರಿ, ಮಂಜುನಾಥ ಹೊನ್ನಪ್ಪನವರ, ಮಂಜುನಾಥ ಭಜಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಅಕ್ರಮ ಮಣ್ಣು ಗಣಿಗಾರಿಕೆಗೆ ಜಿಲ್ಲಾಡಳಿತ ತಕ್ಷಣ ಕಡಿವಾಣ ಹಾಕಬೇಕು. ಇಲ್ಲವಾದರೆ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ತೀವ್ರ ಹೋರಾಟ ಆರಂಭಿಸಲಾಗುವುದು.”

– ಎಂ.ಪಿ. ಪರ್ವತಗೌಡ್ರ, ಜಿಲ್ಲಾಧ್ಯಕ್ಷ, ಕರವೇ (ಎಚ್. ಶಿವರಾಮೇಗೌಡ್ರ ಬಣ)

ವಿದ್ಯಾರ್ಥಿಗಳೊಂದಿಗೆ ಪರಿಸರ ಸಂರಕ್ಷಣೆಯ ಅಭಿಯಾನ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆ ಹಾಗೂ ವಸತಿ ಗೃಹದ ಆವರಣದಲ್ಲಿ ಕೆಪಿಜಿ ಶಾಲೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸುಮಾರು 200 ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಮುಂದಿನ ಪೀಳಿಗೆಗೂ ಉತ್ತಮ ಪರಿಸರವನ್ನು ಉಳಿಸಬೇಕಾದರೆ ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಹೇಳಿದರು. “ಪರಿಸರಕ್ಕಾಗಿ ನಾವು, ನಮಗಾಗಿ ಪರಿಸರ” ಎಂಬ ಸಂದೇಶದೊಂದಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪಿಎಸ್‌ಐ ನಾಗರಾಜ ಕೊಟಗಿ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಜಿ. ಗಿರೀಶ್, ವಿಎಸ್‌ಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ್, ಬಣಕಾರ ಕೊಟ್ರೇಶ್, ಪೊಲೀಸ್ ಸಿಬ್ಬಂದಿಗಳಾದ ಪ್ರಸನ್ನ, ಕಿರಣ್, ಚೇತನ್, ಚೌಡಪ್ಪ, ಕೊಟ್ರೇಶ್, ಗಣೇಶ್, ಹೈಸ್ಕೂಲ್‌ನ ಪ್ರಶಾಂತ ಹಾಗೂ ಗಡ್ಡಿ ಚನ್ನಬಸವ ಸೇರಿದಂತೆ ಹಲವರು ಭಾಗವಹಿಸಿದ್ದರು.

ದುಷ್ಕರ್ಮಿಗಳಿಂದ ಸರಸ್ವತಿ ದೇವಿ ಮೂರ್ತಿ ಭಗ್ನ: ಆರೋಪಿಗಳ ಬಂಧನಕ್ಕೆ ಆಗ್ರಹ

0

ಗದಗ: ಜಿಲ್ಲೆಯಲ್ಲಿ ಮತ್ತೆ ದೇವರ ಮೂರ್ತಿ ವಿಕೃತಿಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳು ನಗರದ ಐತಿಹಾಸಿಕ ಶ್ರೀ ಸರಸ್ವತಿ ದೇವಿ ಮೂರ್ತಿಯ ಎದೆಭಾಗವನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ.

ಗದಗ ನಗರದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸರಸ್ವತಿ ದೇವಸ್ಥಾನದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಿನ್ನೆ ರಾತ್ರಿ ನಡೆದಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ.

8ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಈ ದೇವಾಲಯ ಕೇಂದ್ರ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ದೇವಾಲಯದ ಐತಿಹಾಸಿಕ ಮಹತ್ವದ ನಡುವೆಯೇ ಮೂರ್ತಿಗೆ ಹಾನಿ ಉಂಟುಮಾಡಿರುವುದು ಭಕ್ತರು ಹಾಗೂ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಐತಿಹಾಸಿಕ ದಾಖಲೆಗಳ ಪ್ರಕಾರ, 16ನೇ ಶತಮಾನದ ಯುದ್ಧದ ಸಂದರ್ಭದಲ್ಲಿಯೂ ಈ ಮೂರ್ತಿಗೆ ಹಾನಿಯಾಗಿತ್ತು. ಇದೀಗ ಮತ್ತೊಮ್ಮೆ ಮೂರ್ತಿ ವಿಕೃತಿಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಕರಣ ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.