ದಾವಣಗೆರೆ: ಪ್ರೀತಿಗೆ ಕುಟುಂಬಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ–ಮುಸ್ಲಿಂ ಜೋಡಿಯೊಂದು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಇಬ್ಬರೂ ಜೀವಾಪಾಯದಿಂದ ಪಾರಾಗಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಸಮೀಪದ ಆಂಜನೇಯ ಕಾಟನ್ ಮಿಲ್ ಪ್ರದೇಶದ ನಿವಾಸಿಗಳಾದ ಸಿಂಚನ ಮತ್ತು ಸಮೀರ್ ಎಂದು ಗುರುತಿಸಲಾಗಿದೆ. ನದಿಗೆ ಹಾರಿದ ನಂತರ ಈ ಜೋಡಿ ಈಜುತ್ತಾ ನದಿಯ ಮಧ್ಯದ ನಡುಗಡ್ಡೆಯಲ್ಲಿ ಆಶ್ರಯ ಪಡೆದಿದ್ದು ಸ್ಥಳೀಯರ ಗಮನ ಸೆಳೆದಿದೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ನಡುಗಡ್ಡೆಯಲ್ಲಿ ಸಿಲುಕಿದ್ದ ಪ್ರೇಮಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.
ಸಮೀರ್ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಸಿಂಚನ ಹಿಂದೂ ಧರ್ಮಕ್ಕೆ ಸೇರಿದ್ದಾಳೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಬೇರೆ ಬೇರೆ ಸಮುದಾಯಕ್ಕೆ ಸೇರಿದ ಕಾರಣಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಜೋಡಿ ಆತ್ಮಹತ್ಯೆಗೆ ಯತ್ನಿಸಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಇಬ್ಬರೂ ಮನೆ ಬಿಟ್ಟು ಮೈಸೂರು ಮತ್ತು ಶಿವಮೊಗ್ಗ ಭಾಗಗಳಲ್ಲಿ ಸುತ್ತಾಡಿ ಬಳಿಕ ಹೊನ್ನಾಳಿಗೆ ಬಂದಿದ್ದರು. ನಂತರ ತುಂಗಭದ್ರ ಸೇತುವೆ ಮೇಲಿಂದ ನದಿಗೆ ಹಾರಿದ್ದಾರೆ. ನದಿಯಲ್ಲಿ ನೀರು ಕಡಿಮೆ ಇದ್ದ ಕಾರಣ ಈಜಿ ನಡುಗಡ್ಡೆಯಲ್ಲಿ ಆಶ್ರಯ ಪಡೆದಿದ್ದಾರೆ.

