ವಿಜಯಸಾಕ್ಷಿ ಸುದ್ದಿ, ಗದಗ: ತಾಯಿ ಹಾಗೂ ಹಿರಿಯರು ತಮ್ಮನ್ನು ಮತ್ತು ಸಹೋದರರನ್ನು ಪ್ರೀತಿ ಹಾಗೂ ಸಂಸ್ಕಾರದಿಂದ ಬೆಳೆಸಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದೇವೆ. ಲಿಂಗೈಕ್ಯ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಹಾಳಕೇರಿಯ ಅಭಿನವ ಅನ್ನದಾನ ಮಹಾಸ್ವಾಮಿಗಳು, ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ತಮ್ಮೆಲ್ಲರ ಶುಭ ಹಾರೈಕೆಗಳು ತಾವು ಈ ಉನ್ನತ ಸ್ಥಾನಕ್ಕೇರಲು ಕಾರಣವಾಗಿವೆ ಎಂದು ನೂತನ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.
ಲಿಂಗಾಯತ ಪ್ರಗತಿಶೀಲ ಸಂಘದ 2814ನೇ ಶಿವಾನುಭವದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು. ದೇಶದ ಭದ್ರಬುನಾದಿ, ಏಳಿಗೆ ಹಾಗೂ ಭವಿಷ್ಯಕ್ಕೆ ಉತ್ತಮ ಮಕ್ಕಳೇ ಆಧಾರ. ಮಕ್ಕಳಲ್ಲಿ ಸದ್ಗುಣಗಳು ಬೆಳೆಯುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಶಿವಾನುಭವದ ಸಾನ್ನಿಧ್ಯ ವಹಿಸಿ ಹೇಳಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರು ಈ ನಾಡು ಕಂಡ ಶ್ರೇಷ್ಠ ಶಿಕ್ಷಕರು. ಮಕ್ಕಳಿಗೆ ತಾಯಿಯೇ ಮೊದಲ ಗುರು. ಮಕ್ಕಳಲ್ಲಿ ಉತ್ತಮ ಸಂಸ್ಕಾರ, ನಡೆ-ನುಡಿ ಹಾಗೂ ಆದರ್ಶಗಳನ್ನು ತುಂಬಬೇಕು. ಇಂದಿನ ಮಕ್ಕಳೇ ದೇಶದ ಮುಂದಿನ ಪ್ರಜೆಗಳು. ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ಜಿ.ಎಸ್. ಪಾಟೀಲ ಅವರನ್ನು ಶ್ರೀಗಳು ಸನ್ಮಾನಿಸಿ ಶುಭ ಹಾರೈಸಿದರು.
ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮುಖ್ಯ ಅತಿಥಿಗಳಾಗಿ ಮಾತನಾಡಿ, ಜಿ.ಎಸ್. ಪಾಟೀಲ ಅವರು ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ಅವರ ಅವಧಿಯಲ್ಲಿ ವಿಧಾನಸಭೆಯ ಕಾರ್ಯಕಲಾಪಗಳು ಅರ್ಥಪೂರ್ಣವಾಗಿ ನಡೆಯಲಿ ಎಂದು ಹಾರೈಸಿದರು.
ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಹೆಚ್ಚಿನ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ. ಮಕ್ಕಳ ಮೇಲೆ ಪಾಲಕರು ಹೆಚ್ಚಿನ ಗಮನ ಹರಿಸಬೇಕು ಎಂದರು.
ಶಿವಾನುಭವದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಜಿ.ಎಸ್. ಪಾಟೀಲ ಅವರು ತಮ್ಮ ತಾಯಿಯ ಆಶೀರ್ವಾದದ ಬಲದಿಂದ ವಿಧಾನಸಭಾಧ್ಯಕ್ಷ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅವರಿಗೆ ಬಸವಾದಿ ಶಿವಶರಣರ ಆಶೀರ್ವಾದ ಸದಾಕಾಲ ಇರಲಿ ಎಂದು ಹಾರೈಸಿದರು.
ಶಿಕ್ಷಕರ ದಿನಾಚರಣೆ ಅಂಗವಾಗಿ ನಾಡೋಜ ಡಾ. ಚನ್ನವೀರ ಕಣವಿ ಅವರ ತಂದೆ ಲಿಂಗೈಕ್ಯ ಸಕ್ರಪ್ಪ ಕಣವಿ ಹಾಗೂ ಶಿಕ್ಷಣ ತಜ್ಞ ಡಾ. ಬಿ. ಮಲ್ಲಿಕಾರ್ಜುನ ಅವರ ತಂದೆ ಲಿಂಗೈಕ್ಯ ಬಳ್ಳಾರಿ ಚಿತ್ರಕಿ ಕೊಟ್ರಪ್ಪ ಅವರ ಸ್ಮರಣಾರ್ಥ ನೀಡಲಾಗುವ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಆಲಮಟ್ಟಿಯ ಹಳಕಟ್ಟಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಜಿ.ಎಂ. ಕೋಟ್ಯಾಳ ಹಾಗೂ ಬೆಳ್ಳಟ್ಟಿಯ ಎಸ್.ಜೆ.ಎಫ್. ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಮಹೇಶ್ವರಿ ಸಿದ್ದರಾಮಪ್ಪ ಸವಡಿ ಅವರಿಗೆ ಪರಮಪೂಜ್ಯರು ಪ್ರಧಾನ ಮಾಡಿದರು.
ಗಿರಿಜಕ್ಕ ಧರ್ಮರಡ್ಡಿ ಅವರು ಶ್ರಾವಣ ಮಾಸದಲ್ಲಿ ‘ಶರಣರು ಕಂಡ ಅನಾದಿ ಬಸವಣ್ಣ’ ವಿಷಯದ ಕುರಿತು ನೀಡಿದ ಪ್ರವಚನದ ಮಂಗಲೋತ್ಸವ ನಡೆಯಿತು. ಡಿ.ಸಿ. ಪಾವಟೆ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕಾವೇರಿ ಬಡಿಗೇರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಲಿಂಗೈಕ್ಯರಾದ ಶರಣೆ ರತ್ನಕ್ಕ ಬಸನಗೌಡ ಪಾಟೀಲ ಹಾಗೂ ಬಸವದಳದ ಮಾಜಿ ಅಧ್ಯಕ್ಷ ಹೂಗಾರ ಅವರ ಅಗಲಿಕೆಗೆ ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು.
ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ, ಧರ್ಮಗ್ರಂಥ ಪಠಣವನ್ನು ಸಂಜನಾ ಎಂ. ಹದ್ಲಿ ಹಾಗೂ ವಚನ ಚಿಂತನವನ್ನು ಸನ್ನಿಧಿ ಎಂ. ಹದ್ಲಿ ನಡೆಸಿಕೊಟ್ಟರು. ಕಾರಟಗಿಯ ಎಲ್.ವಿ.ಟಿ. ಮಾಲೀಕ ಸಣ್ಣಸೂಗಪ್ಪ, ಹುಬ್ಬಳ್ಳಿಯ ಡಾ. ಎಸ್.ಎಸ್. ಅಕ್ಕಮಹಾದೇವಿ, ವೀರಣ್ಣ ಬೇವಿನಮರದ ಹಾಗೂ 2026ನೇ ಸಾಲಿನ ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ದಾಸೋಹ ಸೇವೆ ವಹಿಸಿಕೊಂಡಿದ್ದರು.
ಶಿವಾನುಭವ ಸಮಿತಿಯ ಚೇರ್ಮನ್ ಡಾ. ರಮೇಶ ಕಲ್ಲನಗೌಡರ ನಿರೂಪಿಸಿದರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಸ್ವಾಗತಿಸಿದರು.
ಉಪಾಧ್ಯಕ್ಷ ಪ್ರಭು ಗಂಜಿಹಾಳ, ಸುರೇಖಾ ಪಿಳ್ಳಿ, ಕಾರ್ಯದರ್ಶಿ ಸಿದ್ಧರಾಮ ಪಟ್ಟೇದ, ಸಹಕಾರ್ಯದರ್ಶಿ ಪ್ರತಿಭಾ ಬಡ್ನಿ, ಕೋಶಾಧ್ಯಕ್ಷ ವೀರಣ್ಣ ಗೋಟಡಕಿ, ಕೆ.ಎಸ್. ಕೋರಿಮಠ, ಸೋಮಶೇಖರ ಪುರಾಣಿಮಠ, ಆದೇಶ ಅಂಗಡಿ ಸೇರಿದಂತೆ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.
ತಾಯಿಯ ಆಶೀರ್ವಾದದ ಬಲದಿಂದ ಜಿ.ಎಸ್. ಪಾಟೀಲ ಅವರು ವಿಧಾನಸಭಾಧ್ಯಕ್ಷ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅವರಿಗೆ ಬಸವಾದಿ ಶಿವಶರಣರ ಆಶೀರ್ವಾದ ಸದಾಕಾಲ ಇರಲಿ.
— ಎಸ್.ಎಸ್. ಪಾಟೀಲ, ಮಾಜಿ ಸಚಿವ