Home Blog Page 2

ಕಾಂಗ್ರೆಸ್ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಶಾಸಕ ಸಿ.ಸಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ನಲ್ಲಿ ದಿನದಿಂದ ದಿನಕ್ಕೆ ಒಳಬೇಗುದಿ ಹೆಚ್ಚಾಗುತ್ತಿದ್ದು, ಸಂಪುಟ ವಿಸ್ತರಣೆಯ ಬಳಿಕ ಅಸಮಾಧಾನ ತಾರಕಕ್ಕೇರಿದೆ. ಸರ್ಕಾರ ಯಾವಾಗ ಬೇಕಾದರೂ ಪತನಗೊಂಡು ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಭವಿಷ್ಯ ನುಡಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಪ್ರಮಾಣವಚನ ಸಮಾರಂಭಕ್ಕೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿರುವುದು ಕಾಂಗ್ರೆಸ್‌ನ ಒಳಜಗಳಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್‌ನಲ್ಲಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಾಲ್ಕು ಬಣಗಳು ಸೃಷ್ಟಿಯಾಗಿದ್ದು, ಸರ್ಕಾರವೇ ಸಮ್ಮಿಶ್ರ ಸರ್ಕಾರದಂತೆ ಕಾಣುತ್ತಿದೆ ಎಂದು ಟೀಕಿಸಿದರು.

ಸಚಿವ ಸಂಪುಟದ ಪಟ್ಟಿಯಲ್ಲಿ ಪ್ರಕಟವಾಗಿದ್ದ ಇಬ್ಬರ ಹೆಸರನ್ನು ಕೈಬಿಟ್ಟು ಮತ್ತೊಬ್ಬರಿಗೆ ಅವಕಾಶ ನೀಡಲಾಗಿದೆ. ಈ ಬದಲಾವಣೆ ಯಾರ ಒತ್ತಡಕ್ಕೆ ನಡೆದಿದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಪ್ರಾತಿನಿಧ್ಯದ ಕುರಿತು ಕಾಂಗ್ರೆಸ್ ಮಾತು ಮತ್ತು ಕೃತ್ಯದಲ್ಲಿ ವ್ಯತ್ಯಾಸವಿದೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದ ಕಾಂಗ್ರೆಸ್, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಂಪುಟದಲ್ಲೂ ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿಲ್ಲ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗಳನ್ನು ವ್ಯಂಗ್ಯವಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಎದುರಿಸದವರಿಗೆ ಪಕ್ಷದ ಉನ್ನತ ಹುದ್ದೆ ನೀಡಲಾಗಿದೆ. ತಮ್ಮ ಜವಾಬ್ದಾರಿಯ ಅರಿವಿನಿಂದ ಮಾತನಾಡಬೇಕು ಎಂದು ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ವಾಗ್ದಾಳಿ ನಡೆಸಿದ ಸಿ.ಸಿ. ಪಾಟೀಲ, ತಮ್ಮ ಇಲಾಖೆಯ ಕೆಲಸ ಬಿಟ್ಟು ಅನಗತ್ಯ ರಾಜಕಾರಣದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇಸ್ಪೀಟ್, ಮರಳು ಹಾಗೂ ಡ್ರಗ್ಸ್ ದಂಧೆ ಹೆಚ್ಚಾಗಿರುವುದನ್ನು ತಡೆಯುವತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಯಾವುದೇ ಇರಲಿ, ಗದಗ ಜಿಲ್ಲೆಗೆ ಒಬ್ಬ ಸಚಿವ ಇರಬೇಕು. ಸಚಿವರಿಲ್ಲದಿದ್ದರೆ ಅಧಿಕಾರಿಗಳ ಮೇಲೆ ನಿಯಂತ್ರಣ ಕಡಿಮೆಯಾಗಿ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ರಾಜು ಕುರಡಗಿ, ಎಂ.ಎಸ್. ಕರಿಗೌಡ್ರ, ಉಷಾ ದಾಸರ, ಎಂ.ಎಂ. ಹಿರೇಮಠ, ಲಿಂಗಾರಾಜ ಪಾಟೀಲ, ಮಂಜುನಾಥ ಮುಳಗುಂದ, ಅನಿಲ ಅಬ್ಬಿಗೇರಿ ಹಾಗೂ ಗೂಳಪ್ಪ ಮುಷಿಗೇರಿ ಉಪಸ್ಥಿತರಿದ್ದರು.

“ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ದಟ್ಟವಾಗಿದೆ. ಸರ್ಕಾರ ಯಾವಾಗ ಬೇಕಾದರೂ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.”

ಸಿ.ಸಿ. ಪಾಟೀಲ, ನರಗುಂದ ಶಾಸಕ

ಹೈಕಮಾಂಡ್ ವಿರುದ್ಧ ಗದಗ ಕಾಂಗ್ರೆಸ್‌ನ ಬಹಿರಂಗ ಬಂಡಾಯ!

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಕ್ಷೇತ್ರದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಡಾ. ಎಚ್.ಕೆ. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಗದಗದಲ್ಲಿ ಕಾಂಗ್ರೆಸ್‌ನೊಳಗಿನ ಅಸಮಾಧಾನ ಭುಗಿಲೆದ್ದಿದೆ. ಗದಗ-ಬೆಟಗೇರಿ ನಗರಸಭೆಯ 17 ಚುನಾಯಿತ ಕಾಂಗ್ರೆಸ್ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 22 ಸದಸ್ಯರು ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಸಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜೀನಾಮೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಹಿರಿಯ ನಾಯಕ ಡಾ. ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.

ಕೆಲ ನಗರಸಭೆ ಸದಸ್ಯರು ಮಾತನಾಡಿ, ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ರಾಜ್ಯ ರಾಜಕಾರಣದಲ್ಲಿ ಅನುಭವಿ ನಾಯಕರಾಗಿ ಸೇವೆ ಸಲ್ಲಿಸಿರುವ ಎಚ್.ಕೆ. ಪಾಟೀಲ ಅವರ ಅನುಭವವನ್ನು ಸಂಪುಟದಲ್ಲಿ ಬಳಸಿಕೊಳ್ಳದೇ ಇರುವುದು ಗದಗ ಜಿಲ್ಲೆಗೆ ಮಾತ್ರವಲ್ಲ, ಉತ್ತರ ಕರ್ನಾಟಕಕ್ಕೂ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ

ಪ್ರತಿ ಬಾರಿ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗುತ್ತಿದೆ. ಉತ್ತರ ಕರ್ನಾಟಕದ ಪ್ರಭಾವಿ ಹಾಗೂ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನಿರಾಕರಿಸುವ ಮೂಲಕ ಈ ಭಾಗದ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಕೃಷ್ಣಾ ಪರಾಪೂರ, ಸುರೇಶ ಕಟ್ಟಿಮನಿ, ಬರಕತ್ ಅಲಿ ಮುಲ್ಲಾ, ರವಿ ಕಮತರ, ಚಂದ್ರು ಕರಿಸೋಮನಗೌಡ್ರ, ಇಮ್ತಿಯಾಜ ಶಿರಹಟ್ಟಿ, ಪದ್ಮಾ ಕಟಗಿ, ಪರವೀನಬಾನು ಮುಲ್ಲಾ, ಶಕುಂತಲಾ ಅಕ್ಕಿ, ಜೈನುದ್ದೀನ್ ನಮಾಜಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಳೇ ಡಿಸಿ ಕಚೇರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ

ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮಾನವ ಸರಪಳಿ ನಿರ್ಮಿಸಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಿದ ಪ್ರತಿಭಟನಾಕಾರರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಮುಪ್ಪಿನ ಬಸವಲಿಂಗ ಶ್ರೀಗಳಿಗೆ ಅದ್ಧೂರಿ ಪುರ ಪ್ರವೇಶ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ದೇವಪ್ರಯಾಗದಲ್ಲಿ ಮೌನಾನುಷ್ಠಾನ ಪೂರ್ಣಗೊಳಿಸಿ ಹಾಲಕೆರೆ ಗ್ರಾಮಕ್ಕೆ ಆಗಮಿಸಿದ ಶ್ರೀ ಅನ್ನದಾನೇಶ್ವರ ಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರಿಗೆ ಭಕ್ತರು ಅದ್ಧೂರಿ ಪುರ ಪ್ರವೇಶದ ಮೂಲಕ ಆತ್ಮೀಯ ಸ್ವಾಗತ ಕೋರಿದರು.

ಅಲಂಕೃತ ಸಾರೋಟಿನಲ್ಲಿ ಶ್ರೀಗಳನ್ನು ಕೂರಿಸಿ, ವಾದ್ಯಮೇಳ ಹಾಗೂ ಜಯಘೋಷಗಳ ನಡುವೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಶ್ರೀಗಳು ಭಕ್ತರಿಗೆ ಆಶೀರ್ವಾದ ನೀಡಿದರೆ, ಭಕ್ತರು ಪುಷ್ಪಾರ್ಚನೆ ಮಾಡಿ ಭಕ್ತಿಭಾವದಿಂದ ಸ್ವಾಗತಿಸಿದರು.

ಬಳಿಕ ಶ್ರೀಗಳನ್ನು ಅನ್ನದಾನೇಶ್ವರ ಮಠಕ್ಕೆ ಕರೆದೊಯ್ದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಮೆರವಣಿಗೆಯಲ್ಲಿ ನಾಡಿನ ವಿವಿಧ ಮಠಾಧೀಶರು, ಗಿರೀಶಗೌಡ ಮುಲ್ಕಿಪಾಟೀಲ, ರಾಜಶೇಖರಗೌಡ ಪಾಟೀಲ, ರವೀಂದ್ರನಾಥ ದೊಡ್ಡಮೇಟಿ, ಡಾ. ಜಿ.ಕೆ. ಕಾಳೆ, ಉಮೇಶ ಪಾಟೀಲ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು, ಶ್ರೀಮಠದ ಭಕ್ತರು, ಅನ್ನದಾನೇಶ್ವರ ವಿದ್ಯಾಸಂಸ್ಥೆಗಳ ಸಿಬ್ಬಂದಿ ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಗೆ ಅಧಿಕಾರಿಗಳ ಗೈರು; ನೋಟಿಸ್ ನೀಡಲು ಶಾಸಕ ನೇಮಿರಾಜ್ ನಾಯ್ಕ ಸೂಚನೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ 80ನೇ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಕೆಲವು ಅಧಿಕಾರಿಗಳು ಗೈರುಹಾಜರಾಗಿದ್ದಕ್ಕೆ ಶಾಸಕ ಕೆ. ನೇಮಿರಾಜ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿ, ಗೈರಾದ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್‌ಗೆ ಸೂಚಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾವು ಕೊಟ್ಟೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ಆಗಮಿಸುವುದರಿಂದ ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸ್ವಾತಂತ್ರ್ಯೋತ್ಸವವನ್ನು ಶಿಸ್ತುಬದ್ಧವಾಗಿ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಗಣ್ಯರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.

ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸೊನ್ನದ್ ಗುರು ಬಸವರಾಜ್, ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಪುಸ್ತಕದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡುವಂತೆ ಸಲಹೆ ನೀಡಿದರು.

ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್, ರಾಷ್ಟ್ರೀಯ ಹಬ್ಬವನ್ನು ಸಾರ್ವಜನಿಕರು, ರೈತರು ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂಭ್ರಮದಿಂದ ಆಚರಿಸಬೇಕೆಂದರು.

ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷೆ ಹಾಗೂ ತಹಶೀಲ್ದಾರ್ ಆರ್. ಕವಿತಾ, ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ತಾಪಂ ಇಒ ಪಾಲಯ್ಯ, ಉಪ ತಹಶೀಲ್ದಾರ್ ಶಿವಕುಮಾರ್ ಗೌಡ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ. ಮುಗಳಿ, ಬಿಇಒ ಎಸ್. ಜಗದೀಶ್, ಪಿಎಸ್‌ಐ ಉಮಾಪತಿ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಪಟ್ಟಣದ ಎಲ್ಲ ಬ್ಯಾಂಕ್‌ಗಳ ಕಟ್ಟಡಗಳ ಮೇಲೂ ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣ ನಡೆಯಬೇಕು.”

ಕೆ. ನೇಮಿರಾಜ್ ನಾಯ್ಕ, ಶಾಸಕ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಇನ್ನೂ ನಿರ್ಧಾರ ಇಲ್ಲ; ಪಕ್ಷದ ನಾಯಕರ ಜೊತೆ ಚರ್ಚಿಸಿ ತೀರ್ಮಾನ – ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹೊರಟ್ಟಿ, “ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ. ಈ ರೀತಿಯ ಬೆಳವಣಿಗೆ ಈ ಹಿಂದೆ ನಡೆದಿರುವ ಉದಾಹರಣೆ ಇಲ್ಲ. ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಹೇಳಿದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಮಾಡಿ ರಾಜೀನಾಮೆ ನೀಡುವಂತೆ ತಿಳಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ವರಿಷ್ಠರು ಸಭಾಪತಿ ಮತ್ತು ಉಪಸಭಾಪತಿ ಸ್ಥಾನಗಳಿಗೆ ಹೊಸ ಹೆಸರುಗಳನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ನೀವು ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ” ಎಂದರು.

“ಮೊದಲು ಅಧಿಕೃತ ನೋಟಿಸ್ ನೀಡಲಿ. ಅದರ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಸದನ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಸಂಪೂರ್ಣ ಗೌರವ ನೀಡುತ್ತೇನೆ. ಆದರೆ ಈ ಬೆಳವಣಿಗೆ ನನಗೆ ವೈಯಕ್ತಿಕವಾಗಿ ನೋವು ತಂದಿದೆ” ಎಂದು ಹೊರಟ್ಟಿ ಹೇಳಿದರು.

‘ನೀವೇ ನಿರ್ಮಾಪಕರಾಗಿ’… ಜಯಣ್ಣ-ಭೋಗೇಂದ್ರ ಬದುಕು ಬದಲಿಸಿದ ವಿಜಯಲಕ್ಷ್ಮಿ ದರ್ಶನ್ ಸಲಹೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಜಯಣ್ಣ-ಭೋಗೇಂದ್ರ ಅವರ ಸಿನಿ ಪಯಣದ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಪ್ರೇರಣೆ ಅಡಗಿದೆ. ಈ ಅಚ್ಚರಿಯ ಸಂಗತಿಯನ್ನು ಅವರು ಇತ್ತೀಚಿನ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ದರ್ಶನ್ ನಟನೆಯ ‘ಸ್ನೇಹನಾ ಪ್ರೀತಿನಾ’ ಹಾಗೂ ‘ಭೂಪತಿ’ ಸಿನಿಮಾಗಳ ವಿದೇಶಿ ಚಿತ್ರೀಕರಣದ ವೇಳೆ ಆಸ್ಟ್ರೇಲಿಯಾದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು, ‘ಇತರರ ಸಿನಿಮಾಗಳನ್ನು ವಿತರಣೆ ಮಾಡುವ ಬದಲು ನೀವೇ ನಿರ್ಮಾಪಕರಾಗಿ. ಹಣ ಹೂಡಿ ಸಿನಿಮಾ ಮಾಡಿ. ಕಾಲ್‌ಶೀಟ್ ನಮ್ಮದು’ ಎಂದು ಸಲಹೆ ನೀಡಿದ್ದರು ಎಂದು ಜಯಣ್ಣ ಹೇಳಿದ್ದಾರೆ.

ಆ ವೇಳೆ ನಿರ್ಮಾಪಕರಾಗುವ ಉದ್ದೇಶವೇ ಇರಲಿಲ್ಲ. ಸಿನಿಮಾ ನಿರ್ಮಾಣದಲ್ಲಿ ದೊಡ್ಡ ರಿಸ್ಕ್ ಇರುವುದರಿಂದ ವಿತರಣೆ ವ್ಯವಹಾರದಲ್ಲೇ ಮುಂದುವರಿಯಲು ನಿರ್ಧರಿಸಿದ್ದೆವು. ಆದರೆ ವಿಜಯಲಕ್ಷ್ಮಿ ಅವರ ವಿಶ್ವಾಸ ಮತ್ತು ಪ್ರೋತ್ಸಾಹವೇ ನಮ್ಮ ನಿರ್ಧಾರವನ್ನು ಬದಲಿಸಿತು. ಅದರ ಫಲವಾಗಿ ‘ಅರ್ಜುನ್’ ಚಿತ್ರದ ಮೂಲಕ ನಿರ್ಮಾಪಕರಾಗಿ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಆ ಸಹಾಯವನ್ನು ಎಂದಿಗೂ ಮರೆಯದ ಜಯಣ್ಣ-ಭೋಗೇಂದ್ರ, ‘ಅರ್ಜುನ್’ ಚಿತ್ರದ ಟೈಟಲ್‌ನಲ್ಲಿ ‘ವಿಜಯಲಕ್ಷ್ಮಿ ದರ್ಶನ್ ಪ್ರೆಸೆಂಟ್ಸ್’ ಎಂದು ವಿಶೇಷ ಕ್ರೆಡಿಟ್ ನೀಡಿ ಕೃತಜ್ಞತೆ ಸಲ್ಲಿಸಿದ್ದರು. ಆ ದಿನದಿಂದ ಇಂದಿನವರೆಗೆ ನಿರ್ಮಾಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಾಗುತ್ತಿರುವುದಾಗಿ ಭೋಗೇಂದ್ರ ಹೇಳಿದ್ದಾರೆ.

ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಸಿಗದ ಕೋಪ: ನಾಳೆ ಬಾಗೇಪಲ್ಲಿ ಬಂದ್‌, ಕಾಂಗ್ರೆಸ್ ಪದಾಧಿಕಾರಿಗಳ ರಾಜೀನಾಮೆ ಎಚ್ಚರಿಕೆ

ಚಿಕ್ಕಬಳ್ಳಾಪುರ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಬೆನ್ನಲ್ಲೇ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕಹಳೆ ಮೊಳಗಿದೆ. ಬೆಂಬಲಿಗರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಕರೆ ನೀಡಿದ್ದು, ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸುವ ಎಚ್ಚರಿಕೆ ನೀಡಿದ್ದಾರೆ.

ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳಲ್ಲಿ ಬುಧವಾರ ಸಂಪೂರ್ಣ ಬಂದ್ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು.

ಈ ವೇಳೆ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನರೇಂದ್ರ, “ಬಿಜೆಪಿಯ ಆಪರೇಷನ್ ಕಮಲದ ಆಮಿಷವನ್ನೂ ತಿರಸ್ಕರಿಸಿ ಕಾಂಗ್ರೆಸ್‌ಗೆ ನಿಷ್ಠೆಯಿಂದ ಉಳಿದ ಸುಬ್ಬಾರೆಡ್ಡಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಸಚಿವ ಸ್ಥಾನ ನೀಡದೇ ಪಕ್ಷ ಅವಮಾನ ಮಾಡಿದೆ” ಎಂದು ಕಿಡಿಕಾರಿದರು.

“ಈ ನಿರ್ಧಾರದಿಂದ ಕಾರ್ಯಕರ್ತರ ಭಾವನೆಗೆ ಧಕ್ಕೆಯಾಗಿದೆ. ಅದರ ವಿರುದ್ಧ ಪ್ರತಿಭಟನೆಯ ಭಾಗವಾಗಿ ಕಾಂಗ್ರೆಸ್‌ನ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತೇವೆ. ಕ್ಷೇತ್ರ ಬಂದ್ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸುತ್ತೇವೆ” ಎಂದು ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

‘ಮಂತ್ರಿಗಿರಿ ಹಣದ ಆಟ’: ಕಾಂಗ್ರೆಸ್-ಬಿಜೆಪಿ ಎರಡರ ಮೇಲೂ ಯತ್ನಾಳ್ ವಾಗ್ದಾಳಿ

0

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ವಿರುದ್ಧ ಸ್ಫೋಟಕ ಆರೋಪಗಳ ಸುರಿಮಳೆಗೈದಿದ್ದಾರೆ. “ರಾಜ್ಯದ ಸಚಿವ ಸಂಪುಟ ಗುಂಡಾಗಳ ಗೂಡಾಗಿದೆ. ಕ್ರಿಮಿನಲ್ ಹಿನ್ನೆಲೆಯವರಿಗೆ ಮಂತ್ರಿಗಿರಿ ನೀಡಿ ಕಾಂಗ್ರೆಸ್ ಸರ್ಕಾರ ತಪ್ಪು ಸಂದೇಶ ನೀಡಿದೆ” ಎಂದು ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರೂಪಿಸಿರುವ ಇದು ಅತ್ಯಂತ ಕೆಟ್ಟ ಸಚಿವ ಸಂಪುಟ. ಪ್ರಮುಖ ನಾಯಕರನ್ನು ಬದಿಗಿಟ್ಟು, ಕ್ರಿಮಿನಲ್ ಹಿನ್ನೆಲೆಯವರಿಗೆ ಅವಕಾಶ ನೀಡಿದ್ದಾರೆ. ಭ್ರಷ್ಟಾಚಾರ ಮತ್ತು ಗುಂಡಾಗಿರಿ ಆರೋಪ ಎದುರಿಸುತ್ತಿರುವವರೇ ಸರ್ಕಾರದಲ್ಲಿದ್ದಾರೆ” ಎಂದು ಟೀಕಿಸಿದರು.

ಕಾಂಗ್ರೆಸ್ ಶಾಸಕರ ರಾಜೀನಾಮೆ ಬೆದರಿಕೆಯನ್ನು ಲೇವಡಿ ಮಾಡಿದ ಯತ್ನಾಳ್, “ಇದು ಕೇವಲ ಒತ್ತಡ ತಂತ್ರ. ಯಾರೂ ರಾಜೀನಾಮೆ ಕೊಡುವುದಿಲ್ಲ. ಹೈಕಮಾಂಡ್ ಒಂದು ಕರೆ ಮಾಡಿದರೆ ಎಲ್ಲರೂ ಶಿಸ್ತಿನ ಸಿಪಾಯಿಗಳಾಗಿಬಿಡುತ್ತಾರೆ” ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಸಚಿವ ಸ್ಥಾನ ಹಂಚಿಕೆ ಕುರಿತು ಮಾತನಾಡಿದ ಅವರು, “ಎಂ.ಬಿ. ಪಾಟೀಲ್ ಕಾಂಗ್ರೆಸ್‌ನಲ್ಲಿ ಅತ್ಯಂತ ಪ್ರಭಾವಿ ನಾಯಕ. ಹೈಕಮಾಂಡ್ ಜೊತೆಗಿನ ಅವರ ಪ್ರಭಾವವೇ ಅವರನ್ನು ಸಚಿವರನ್ನಾಗಿಸಿದೆ” ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಅವಧಿಯನ್ನೂ ಉಲ್ಲೇಖಿಸಿದ ಯತ್ನಾಳ್, “ಹಣದ ರಾಜಕಾರಣ ಕಾಂಗ್ರೆಸ್‌ಗೆ ಮಾತ್ರ ಸೀಮಿತವಲ್ಲ. ಬಿಜೆಪಿ ಅವಧಿಯಲ್ಲೂ ಹೈಕಮಾಂಡ್ ಪಟ್ಟಿ ಬದಲಾಗುತ್ತಿತ್ತು. ಹಣದ ವ್ಯವಹಾರಗಳ ಮೂಲಕ ಸಚಿವ ಸ್ಥಾನ ಸಿಕ್ಕ ಉದಾಹರಣೆಗಳಿವೆ” ಎಂದು ಆರೋಪಿಸಿದರು.

ಸಿದ್ದರಾಮಯ್ಯ ಕುರಿತು ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಹೈಕಮಾಂಡ್ ಈಗಲೂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುತ್ತಿದೆ. ಅವರಿಗೆ ಸ್ವಾಭಿಮಾನ ಇದ್ದರೆ ಮುಂದಿನ ರಾಜಕೀಯ ನಿರ್ಧಾರದಲ್ಲಿ ಅದಕ್ಕೆ ಉತ್ತರ ನೀಡಬೇಕು” ಎಂದು ಹೇಳಿದರು.

ಜೆನ್-ಝೀ ವಿವಾದಕ್ಕೆ ಹೊಸ ಟ್ವಿಸ್ಟ್: ಕಂಗನಾ ವಿರುದ್ಧ ರಮ್ಯಾ ಕಿಡಿ

ನವದೆಹಲಿ: ಬಾಲಿವುಡ್‌ನಲ್ಲಿ ಕಂಗನಾ ರಣಾವತ್ ವಿರುದ್ಧ ಮತ್ತೊಂದು ವಾಗ್ವಾದ ಭುಗಿಲೆದ್ದಿದೆ. ಜೆನ್-ಝೀ ಪ್ರತಿಭಟನಾಕಾರರ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸಾಮಾಜಿಕ ಜಾಲತಾಣದಲ್ಲಿ ಕಂಗನಾ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.

“ಗೌರವದ ಬಗ್ಗೆ ಇತರರಿಗೆ ಪಾಠ ಮಾಡುವ ಮೊದಲು ನಿಮ್ಮ ಹಳೆಯ ಹೇಳಿಕೆಗಳನ್ನು ಒಮ್ಮೆ ನೆನಪಿಸಿಕೊಳ್ಳಿ. 2026ರ ಅತಿ ದೊಡ್ಡ ವ್ಯಂಗ್ಯವೆಂದರೆ ಕಂಗನಾ ರಣಾವತ್ ಜೆನ್-ಝೀಗೆ ಗೌರವದ ಉಪದೇಶ ನೀಡುತ್ತಿರುವುದು” ಎಂದು ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೆ, “ರಾಮ ನನ್ನ ಪಾಲಿಗೆ ದೇವರು. ರಾಮಮಂದಿರದ ವಿಚಾರದಲ್ಲಿ ನನ್ನ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ. ಆಗ ನಿಮ್ಮ ಆಕ್ರೋಶ ಎಲ್ಲಿತ್ತು?” ಎಂದು ಪ್ರಶ್ನಿಸುವ ಮೂಲಕ ಕಂಗನಾ ಅವರ ನಿಲುವಿನಲ್ಲಿರುವ ದ್ವಂದ್ವವನ್ನು ರಮ್ಯಾ ಪ್ರಶ್ನಿಸಿದ್ದಾರೆ.

ಈ ಬೆಳವಣಿಗೆಯ ನಡುವೆ ಕಂಗನಾ ರಣಾವತ್ ಎಕ್ಸ್‌ನಲ್ಲಿ “ನಾನು ಜಾಗೃತ ಹಿಂದೂ ಆಗಲು ಬಯಸುತ್ತೇನೆ. ಮುಸ್ಲಿಮರನ್ನು ಭೇಟಿಯಾಗುವ ಹಿಂದೂಗಳು ಎಡಪಂಥೀಯರಾಗುತ್ತಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ. ಈ ಹೇಳಿಕೆ ಜೆನ್-ಝೀ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡದ್ದೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ತ್ರಿಷಾ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ʼಗೆ ಮದ್ರಾಸ್ ಹೈಕೋರ್ಟ್ʼನಿಂದ ಸ್ಟೇಷನ್ ಬೇಲ್ ಆದೇಶ

0

ಚೆನ್ನೈ: ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಮದ್ರಾಸ್ ಹೈಕೋರ್ಟ್‌ ಪರಿಹಾರ ನೀಡಿದ್ದು, ಮಂಗಳವಾರವೇ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ನಟಿ ತ್ರಿಷಾ ಕೃಷ್ಣನ್ ಅವರನ್ನು ಉದ್ದೇಶಿಸಿ ಮಾಡಿದ ಪರೋಕ್ಷ ದ್ವಂದ್ವಾರ್ಥದ ಹೇಳಿಕೆ ಎಂದು ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಈ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಉದಯನಿಧಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಸೇರಿದಂತೆ ಹಲವು ಸಂಘಟನೆಗಳು ದೂರು ದಾಖಲಿಸಿದ್ದವು.

ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ತಂಜಾವೂರಿಗೆ ಕರೆದೊಯ್ದಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಆದರೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಉದ್ದೇಶ ಪೊಲೀಸರಿಗೆ ಇಲ್ಲ. ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವೂ ನ್ಯಾಯಾಲಯಕ್ಕೆ ಇದೇ ವಿಚಾರವನ್ನು ಸ್ಪಷ್ಟಪಡಿಸಿದ್ದು, ಕೇವಲ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿತ್ತು.

ಏನಿದು ವಿವಾದ?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು.

ಈ ವೇಳೆ ಅವರು ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಮೌನವಾಗಿದೆ ಎಂದು ಆರೋಪಿಸಿದ್ದರು. ಇದೇ ಸಂದರ್ಭದಲ್ಲಿ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂಬ ಅರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ದ್ವಂದ್ವಾರ್ಥ ಹೊಂದಿದ್ದು, ನಟಿ ತ್ರಿಷಾ ಅವರನ್ನು ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಹೇಳಿಕೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಮುಂದುವರಿದಿದೆ.