Home Blog Page 2

‘ಡಾನ್ 3’ ಗದ್ದಲಕ್ಕೆ ಫುಲ್ ಸ್ಟಾಪ್? 18 ತಿಂಗಳು ಇಂಟರ್ವ್ಯೂ ಇಲ್ಲ: ರಣವೀರ್ ಸಿಂಗ್‌ನಿಂದ ಸೈಲೆಂಟ್ ಸ್ಟ್ರಾಟೆಜಿ

ಮುಂಬೈ: ‘ಡಾನ್ 3’ ಚಿತ್ರದಿಂದ ಹೊರಬಂದಿರುವುದಾಗಿ ಹರಿದಾಡುತ್ತಿರುವ ವರದಿಗಳು ಮತ್ತು ಅದಕ್ಕೆ ಸಂಬಂಧಿಸಿದ ವಿವಾದಗಳ ನಡುವೆ ಬಾಲಿವುಡ್ ನಟ ರಣವೀರ್ ಸಿಂಗ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮುಂದಿನ 18 ತಿಂಗಳ ಕಾಲ ಯಾವುದೇ ಮಾಧ್ಯಮ ಸಂದರ್ಶನ ನೀಡದಿರಲು ಅವರು ನಿರ್ಧರಿಸಿದ್ದು, ಈ ಮೂಲಕ ಸಾರ್ವಜನಿಕ ಚರ್ಚೆಗಳಿಂದ ಸಂಪೂರ್ಣ ದೂರ ಉಳಿಯಲಿದ್ದಾರೆ.

ರಣವೀರ್ ತಂಡದ ಮೂಲಗಳ ಪ್ರಕಾರ, ‘ಡಾನ್ 3’ ವಿವಾದದ ಕುರಿತು ಯಾವುದೇ ವೇದಿಕೆಯಲ್ಲಿ ಮಾತನಾಡದಿರಲು ನಟ ತೀರ್ಮಾನಿಸಿದ್ದಾರೆ. ಈ ಸಂಬಂಧ ಮಾಧ್ಯಮ ಸಂಸ್ಥೆಗಳಿಂದ ಬಂದಿರುವ ಎಲ್ಲಾ ಸಂದರ್ಶನ ಮನವಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇತ್ತೀಚೆಗೆ ರಣವೀರ್ ಸಿಂಗ್ ಅವರ ಆಪ್ತ ವಲಯ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ, ನಟ ಸದ್ಯ ತಮ್ಮ ವೃತ್ತಿಜೀವನದ ಮುಂದಿನ ಯೋಜನೆಗಳ ಮೇಲೆ ಮಾತ್ರ ಗಮನ ಹರಿಸುತ್ತಿದ್ದು, ವಿವಾದಗಳಿಗೆ ಪ್ರತಿಕ್ರಿಯಿಸುವ ಬದಲು ಮೌನದ ಮೂಲಕವೇ ಉತ್ತರ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.

ಸದ್ಯ ಅವರು ಜೈ ಮೆಹ್ತಾ ನಿರ್ದೇಶನದ ‘ಪ್ರಳಯ’ ಸಿನಿಮಾದ ಚಿತ್ರೀಕರಣ ಹಾಗೂ ಸಿದ್ಧತೆಗಳಲ್ಲಿ ನಿರತರಾಗಿದ್ದಾರೆ. ಕೋವಿಡ್ ಕಾಲಘಟ್ಟದ ಹಿನ್ನೆಲೆಯ ಜಾಂಬಿ ಡ್ರಾಮಾ ಶೈಲಿಯ ಈ ಸಿನಿಮಾ ರಣವೀರ್ ವೃತ್ತಿಜೀವನದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ.

‘ಪ್ರಳಯ’ ಚಿತ್ರ ಬಿಡುಗಡೆಯಾಗುವವರೆಗೂ ಯಾವುದೇ ಪ್ರಚಾರಾತ್ಮಕ ಸಂದರ್ಶನ ಅಥವಾ ಮಾಧ್ಯಮ ಸಂವಾದದಲ್ಲಿ ಭಾಗವಹಿಸದಿರಲು ರಣವೀರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ‘ಡಾನ್ 3’ ವಿವಾದದ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವೂ ಇದಾಗಿದೆ ಎಂದು ಬಾಲಿವುಡ್ ವಲಯ ವಿಶ್ಲೇಷಿಸುತ್ತಿದೆ.

ರಾಜ್ಯಸಭೆಗೆ ಬಹಿರಂಗ ಮತ, ಪರಿಷತ್‌ಗೆ ಗೌಪ್ಯ ಮತ ಯಾಕೆ? ಚುನಾವಣಾ ಆಯೋಗಕ್ಕೆ ಸುರೇಶ್ ಕುಮಾರ್ ನೇರ ಪ್ರಶ್ನೆ

ಬೆಂಗಳೂರು: ಇತ್ತೀಚೆಗೆ ನಡೆದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ ಶಾಸಕರ ಮತದಾನದ ನಿಯಮಗಳಲ್ಲಿ ಕಂಡುಬರುವ ವ್ಯತ್ಯಾಸದ ಬಗ್ಗೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಗಂಭೀರ ಪ್ರಶ್ನೆ ಎತ್ತಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿರುವ ಅವರು, ಒಂದೇ ಮತದಾರರಾಗಿರುವ ಶಾಸಕರಿಗೆ ಎರಡು ವಿಭಿನ್ನ ಮತದಾನ ಪದ್ಧತಿಗಳನ್ನು ಅನ್ವಯಿಸುವ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಪತ್ರದಲ್ಲಿ ಉಲ್ಲೇಖಿಸಿರುವಂತೆ, ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ಶಾಸಕರು ತಮ್ಮ ಮತಪತ್ರವನ್ನು ಕಡ್ಡಾಯವಾಗಿ ಪಕ್ಷದ ಅಧಿಕೃತ ಏಜೆಂಟರಿಗೆ ತೋರಿಸಿ ಮತದಾನ ಮಾಡಬೇಕಾಗುತ್ತದೆ. ಆದರೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಅದೇ ಶಾಸಕರಿಗೆ ಸಂಪೂರ್ಣ ಗೌಪ್ಯ ಮತದಾನದ ಹಕ್ಕು ನೀಡಲಾಗಿದೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಎರಡೂ ಚುನಾವಣೆಗಳಲ್ಲಿ ವಿಧಾನಸಭಾ ಸದಸ್ಯರೇ ಮತದಾರರಾಗಿದ್ದರೂ, ಮತದಾನ ವಿಧಾನದಲ್ಲಿ ಇಷ್ಟೊಂದು ವ್ಯತ್ಯಾಸ ಏಕೆ ಎಂಬ ಪ್ರಶ್ನೆಯನ್ನು ಸುರೇಶ್ ಕುಮಾರ್ ಮುಂದಿಟ್ಟಿದ್ದಾರೆ. ಒಂದು ವೇಳೆ ಎರಡೂ ಚುನಾವಣೆಗಳು ಒಂದೇ ದಿನ ನಡೆದರೆ, ಅದೇ ಶಾಸಕ ರಾಜ್ಯಸಭೆಗೆ ಮತ ಹಾಕುವಾಗ ಮತಪತ್ರ ತೋರಿಸಬೇಕಾಗುತ್ತದೆ, ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಬಹುದು. ಈ ದ್ವಂದ್ವ ನಿಯಮಕ್ಕೆ ಕಾನೂನು ಹಾಗೂ ಪ್ರಜಾಪ್ರಭುತ್ವದ ದೃಷ್ಟಿಯಿಂದ ಏನು ಸಮರ್ಥನೆ ಇದೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವುದರಿಂದ ಚುನಾವಣಾ ಆಯೋಗ ಶೀಘ್ರ ಸ್ಪಷ್ಟನೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ಕಾಂಗ್ರೆಸ್‌ಗೆ ಹೋಗ್ಬೇಕಿದ್ರೆ ಈಗಲೇ ಹೋಗಿ; ಈ ರೀತಿ ದ್ರೋಹ ಬೇಡ”: ಹೆಚ್‌ಡಿಕೆ 

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ವಿರುದ್ಧವಾಗಿ ಅಡ್ಡ ಮತದಾನ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ವಪಕ್ಷದ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸೇರುವ ಉದ್ದೇಶವಿದ್ದರೆ ನೇರವಾಗಿ ಹೇಳಿ ಪಕ್ಷ ತೊರೆಯಿರಿ, ಆದರೆ ಪಕ್ಷದೊಳಗಿದ್ದು ಈ ರೀತಿಯ ನಡೆ ಸರಿಯಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಭವಿಷ್ಯ ಇಲ್ಲ ಎಂಬ ಭಾವನೆ ಯಾರಿಗಾದರೂ ಇದ್ದರೆ ತಾವು ಯಾವುದೇ ಅಡ್ಡಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್‌ಗೆ ಹೋಗಲು ಇಚ್ಛಿಸುವವರು ಧೈರ್ಯವಾಗಿ ಹೇಳಿ ಹೋಗಲಿ, ಆದರೆ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕುವ ರೀತಿಯ ರಾಜಕೀಯ ಮಾಡಬಾರದು ಎಂದು ಕಿಡಿಕಾರಿದರು.

ಅಡ್ಡ ಮತದಾನ ಮಾಡಿದವರ ಪತ್ತೆಗೆ ಬಿಜೆಪಿ ಮೂರು ಸದಸ್ಯರ ತನಿಖಾ ತಂಡ ರಚಿಸಿದ್ದು, ಅದರ ನೇತೃತ್ವವನ್ನು ಸಿ.ಟಿ. ರವಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು. ತಾವು ಶೀಘ್ರದಲ್ಲೇ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದರು.

ಪಕ್ಷದ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, 2028ರ ವಿಧಾನಸಭೆ ಚುನಾವಣೆಯೇ ತಮ್ಮ ಪ್ರಮುಖ ಗುರಿ ಎಂದು ಹೇಳಿದರು. ರಾಜ್ಯದಲ್ಲಿ ಜನಪರ ಆಡಳಿತ ನೀಡಬಲ್ಲ ಪರ್ಯಾಯ ಸರ್ಕಾರವನ್ನು ನಿರ್ಮಿಸುವುದು ಮೊದಲ ಆದ್ಯತೆ. ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಉಳಿದ ವಿಚಾರಗಳು ನಂತರದ ವಿಷಯ ಎಂದು ಸ್ಪಷ್ಟಪಡಿಸಿದರು.

ಪರಿಷತ್ ಚುನಾವಣೆಯಲ್ಲಿ ಶಾಸಕರ ಮೇಲೆ ಆರ್ಥಿಕ ಪ್ರಭಾವ ಬೀರುವ ಪ್ರಯತ್ನಗಳು ನಡೆದಿರುವ ಅನುಮಾನ ವ್ಯಕ್ತಪಡಿಸಿದ ಅವರು, ಮತದಾನದ ಸಂದರ್ಭದಲ್ಲಿ ಭಾರೀ ಪ್ರಮಾಣದ ವ್ಯವಹಾರ ನಡೆದಿರಬಹುದು ಎಂದು ಆರೋಪಿಸಿದರು. ಸರ್ಕಾರದ ವತಿಯಿಂದ ಅನುದಾನದ ಆಮಿಷ ಒಡ್ಡಲಾಗಿದೆ ಎಂಬ ಮಾಹಿತಿ ತಮಗೆ ಲಭ್ಯವಾಗಿದೆ ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ ಎಂದು ಪುನರುಚ್ಚರಿಸಿದ ಕುಮಾರಸ್ವಾಮಿ, ಅಭ್ಯರ್ಥಿ ಕಣಕ್ಕಿಳಿಸುವ ಮುನ್ನವೇ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಹಾಗೂ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.

ಬಿಡದಿಯಲ್ಲಿ ಸಸಿ ನೆಡುತ್ತಿದ್ದೇವೆ, ಬಿಜೆಪಿ ಮಾಡಿದಂತೆ ಅಂಡಮಾನ್ ಕಡಿಯುತ್ತಿಲ್ಲ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಟೀಕೆಗಳಿಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಬಿಡದಿ ಟೌನ್‌ಶಿಪ್‌ಗಾಗಿ ನಾವು ಸಸಿ ನೆಡುತ್ತಿದ್ದೇವೆ. ಬಿಜೆಪಿ ಮಾಡಿದಂತೆ ಇಡೀ ಅಂಡಮಾನ್‌ನ್ನೇ ಕಿತ್ತುಹಾಕುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಡದಿ ವಿಚಾರವಾಗಿ ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, “ಅರಾವಳಿ ಪರ್ವತ ಪ್ರದೇಶಗಳನ್ನು ಅದಾನಿ ಮತ್ತು ಅಂಬಾನಿಗೆ ಮಾರಲು ಮುಂದಾದವರು ಯಾರು? ಪರಿಸರದ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಜೆಡಿಎಸ್ ನಾಯಕರು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಪಾದಯಾತ್ರೆ ನಡೆಸಲಿ” ಎಂದು ಸವಾಲು ಹಾಕಿದರು.

“ನೂರು ಸ್ಮಾರ್ಟ್ ಸಿಟಿಗಳ ಭರವಸೆ ನೀಡಿದ್ದ ಬಿಜೆಪಿ ಅದನ್ನು ಎಷ್ಟರ ಮಟ್ಟಿಗೆ ಜಾರಿಗೊಳಿಸಿದೆ? ಪರಿಸರ ಸಂರಕ್ಷಣೆಯನ್ನು ನಮ್ಮ ಸರ್ಕಾರ ಎಂದಿಗೂ ನಿರ್ಲಕ್ಷ್ಯ ಮಾಡುವುದಿಲ್ಲ. ಬೆಂಗಳೂರಿನಲ್ಲಿ ಈಗಾಗಲೇ 15 ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಅಭಿಯಾನ ನಡೆಯುತ್ತಿದೆ. ಸಚಿವರಾದ ಹ್ಯಾರಿಸ್ ಹಾಗೂ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಸಸಿ ನೆಡುವ ಕಾರ್ಯ ನಡೆಯುತ್ತಿದೆ” ಎಂದು ಹೇಳಿದರು.

ಬಿಡದಿ ಮತ್ತು ಅಂಡಮಾನ್‌ಗಳನ್ನು ಹೋಲಿಕೆ ಮಾಡುತ್ತಿರುವವರ ವಿರುದ್ಧವೂ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. “ಅಂಡಮಾನ್ ಜೀವವೈವಿಧ್ಯ ಹಾಗೂ ಪರಿಸರ ವೈವಿಧ್ಯದ ದೃಷ್ಟಿಯಿಂದ ಅತ್ಯಂತ ಶ್ರೀಮಂತ ಪ್ರದೇಶವಾಗಿದೆ. ಅಂಡಮಾನ್ ಹಾಗೂ ಬಿಡದಿಯನ್ನು ಹೋಲಿಸುವುದೇ ಅಸಂಬದ್ಧ. ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ” ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ವಿರುದ್ಧವೂ ಟೀಕಿಸಿದ ಅವರು, “ಬ್ರ್ಯಾಂಡ್ ಬೆಂಗಳೂರು ಬಗ್ಗೆ ಮಾತನಾಡುವ ಜೆಡಿಎಸ್, ಅಧಿಕಾರದಲ್ಲಿದ್ದಾಗ ನಗರದಲ್ಲಿ ಎಷ್ಟು ಮರಗಳನ್ನು ನೆಟ್ಟಿತ್ತು? ಉದ್ಯೋಗ ಸೃಷ್ಟಿಯಲ್ಲೂ ವಿಫಲವಾಗಿದೆ. ಅದಕ್ಕಾಗಿಯೇ ರಾಜ್ಯದ ಜನರು ಅವರ ನಾಯಕತ್ವವನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ಆಶೀರ್ವಾದ ನೀಡಿದ್ದಾರೆ” ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಮಾತನಾಡಿದ ಸಚಿವರು, ಸುಮಾರು 7,500 ಎಕರೆ ಪ್ರದೇಶದಲ್ಲಿ 6 ಸಾವಿರ ಎಕರೆಗೂ ಹೆಚ್ಚು ಭೂಮಿಗೆ ರೈತರ ಒಪ್ಪಿಗೆ ದೊರೆತಿದ್ದು, ಉಳಿದ ಸುಮಾರು 1,500 ಎಕರೆ ಭೂಮಿಗೆ ಮಾತ್ರ ಒಪ್ಪಿಗೆ ಬಾಕಿಯಿದೆ ಎಂದು ತಿಳಿಸಿದರು.

ರೈತರ ಒಪ್ಪಿಗೆ ಇಲ್ಲದೆ ಯಾವುದೇ ಯೋಜನೆಯನ್ನು ಸರ್ಕಾರ ಮುಂದುವರಿಸುವುದಿಲ್ಲ. ನಮ್ಮ ಸರ್ಕಾರ ಯಾವುದೇ ರೀತಿಯ ದಬ್ಬಾಳಿಕೆ ನಡೆಸುವುದಿಲ್ಲ. ಈ ಹಿಂದೆ ಚನ್ನರಾಯಪಟ್ಟಣದಲ್ಲಿ ರೈತರ ಬೇಡಿಕೆಯಂತೆ ಭೂಸ್ವಾಧೀನ ಮಾಡಿಕೊಂಡಿದ್ದ ಜಮೀನನ್ನು ಹಿಂದಿರುಗಿಸಲಾಗಿತ್ತು. ಈಗ ಅದೇ ರೈತರು ಸ್ವಯಂಪ್ರೇರಿತವಾಗಿ ಭೂಸ್ವಾಧೀನಕ್ಕೆ ಒಪ್ಪಿಗೆ ನೀಡುತ್ತಿದ್ದಾರೆ ಎಂದು ಹೇಳಿದರು

ಕದನ ವಿರಾಮದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಮತ್ತೆ ಇಸ್ರೇಲ್ ದಾಳಿ! 5 ಮಂದಿ ಸಾವು

0

ಬೈರುತ್: ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವಿನ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲೇ ಲೆಬನಾನ್ ಮೇಲೆ ಮತ್ತೆ ಇಸ್ರೇಲ್ ದಾಳಿ ನಡೆಸಿದೆ. ದಕ್ಷಿಣ ಲೆಬನಾನ್‌ನ ನಬತಿಯೇಹ್ ಪ್ರದೇಶದಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಐವರು ಮೃತಪಟ್ಟಿದ್ದು, ಹಲವು ಪ್ರದೇಶಗಳಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಲೆಬನಾನ್ ಅಧಿಕಾರಿಗಳ ಮಾಹಿತಿ ಪ್ರಕಾರ, ಶನಿವಾರ ಮುಂಜಾನೆವರೆಗೆ ಇಸ್ರೇಲಿ ಯುದ್ಧ ವಿಮಾನಗಳು ಹಾಗೂ ಡ್ರೋನ್‌ಗಳು ನಬತಿಯೇಹ್ ಪ್ರದೇಶದ ವಸತಿ ಕಟ್ಟಡಗಳು ಮತ್ತು ಮನೆಗಳನ್ನು ಗುರಿಯಾಗಿಸಿಕೊಂಡು ಸರಣಿ ವೈಮಾನಿಕ ದಾಳಿ ನಡೆಸಿವೆ. ದಾಳಿಯಿಂದ ಹಲವು ಕಟ್ಟಡಗಳು ಹಾನಿಗೊಳಗಾಗಿದ್ದು, ನಾಗರಿಕರಲ್ಲಿ ಆತಂಕ ಮನೆ ಮಾಡಿದೆ.

ದಕ್ಷಿಣ ಲೆಬನಾನ್‌ನಲ್ಲಿ ಹಲವು ದಿನಗಳಿಂದ ನಡೆದಿದ್ದ ಭೀಕರ ಸಂಘರ್ಷದ ಬಳಿಕ ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಸಂಘಟನೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದವು. ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ, ಇರಾನ್ ಸಹಕಾರದೊಂದಿಗೆ ಈ ಒಪ್ಪಂದ ಜಾರಿಗೆ ಬಂದಿದೆ ಎಂದು ಅಮೆರಿಕದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದರು.

ಇದಕ್ಕೂ ಮುನ್ನ ಶುಕ್ರವಾರ ನಬತಿಯೇಹ್ ಜಿಲ್ಲೆಯ ವಿವಿಧ ಭಾಗಗಳ ಮೇಲೆ ನಡೆದ ಇಸ್ರೇಲ್ ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಕೆಲವು ಮಂದಿ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಶಂಕೆಯೂ ವ್ಯಕ್ತವಾಗಿತ್ತು. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ಮುಂದುವರಿದಿವೆ.

ಅಮೆರಿಕ ಹಾಗೂ ಇರಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಒಪ್ಪಂದದ ಪ್ರಕಾರ, ಲೆಬನಾನ್ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕು ಹಾಗೂ ಲೆಬನಾನ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಆದರೆ ಕದನ ವಿರಾಮ ಜಾರಿಯಾದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಮತ್ತೆ ದಾಳಿ ನಡೆಸಿರುವುದು ಶಾಂತಿ ಒಪ್ಪಂದದ ಭವಿಷ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ.

ಹೈಸ್ಕೂಲ್ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರದ ಹೊಸ ಕ್ರಮ: 9-10ನೇ ತರಗತಿಗೆ ಪಿಯು ಉಪನ್ಯಾಸಕರಿಂದ ಬೋಧನೆ

ಬೆಂಗಳೂರು: ರಾಜ್ಯದ ಸರ್ಕಾರಿ ಹೈಸ್ಕೂಲ್‌ಗಳಲ್ಲಿ ಶಿಕ್ಷಕರ ಕೊರತೆಯನ್ನು ನಿವಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು–2013ಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಹೊಸ ಕರಡು ನಿಯಮ ಜಾರಿಯಾದರೆ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಇನ್ನು ಮುಂದೆ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೂ ಪಾಠ ಮಾಡಬೇಕಾಗುತ್ತದೆ.

ಈ ಸಂಬಂಧ ಸರ್ಕಾರ ಈಗಾಗಲೇ ತಿದ್ದುಪಡಿಯ ಕರಡು ನಿಯಮವನ್ನು ಪ್ರಕಟಿಸಿದ್ದು, ಸಾರ್ವಜನಿಕರು ಹಾಗೂ ಸಂಬಂಧಿತ ವಲಯಗಳಿಂದ 7 ದಿನಗಳೊಳಗೆ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಅಂತಿಮ ನಿಯಮವನ್ನು ಜಾರಿಗೆ ತರಲಾಗುವ ಸಾಧ್ಯತೆ ಇದೆ.

ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ಮಾತ್ರ ಬೋಧನೆ ಮಾಡುವ ಜವಾಬ್ದಾರಿ ಇದೆ. ಆದರೆ ಹೊಸ ತಿದ್ದುಪಡಿಯಿಂದ ಅವರ ಸೇವಾ ವ್ಯಾಪ್ತಿಯನ್ನು ಹೈಸ್ಕೂಲ್ ಹಂತಕ್ಕೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಇದರಿಂದ 9 ಮತ್ತು 10ನೇ ತರಗತಿಗಳಲ್ಲಿ ಶಿಕ್ಷಕರ ಕೊರತೆಯನ್ನು ತಾತ್ಕಾಲಿಕವಾಗಿ ನಿವಾರಿಸುವ ಉದ್ದೇಶ ಹೊಂದಲಾಗಿದೆ.

ಆದರೆ ಸರ್ಕಾರದ ಈ ನಿರ್ಧಾರಕ್ಕೆ ಪದವಿ ಪೂರ್ವ ಉಪನ್ಯಾಸಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ. ಉಪನ್ಯಾಸಕರ ಕರ್ತವ್ಯದ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ ವಿಸ್ತರಿಸುವ ಬದಲು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಂಘ ಒತ್ತಾಯಿಸಿದೆ. ಅಲ್ಲದೆ, ಕರಡು ನಿಯಮವನ್ನು ಮರುಪರಿಶೀಲಿಸಿ ತಿದ್ದುಪಡಿಯನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ

ತುಮಕೂರು: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ತುಮಕೂರಿನಿಂದ ಬೆಂಗಳೂರಿಗೆ ಪ್ರತಿದಿನ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು-ತುಮಕೂರು ರೈಲು ಮಾರ್ಗವನ್ನು ವಿಸ್ತರಿಸುವ ಮಹತ್ವದ ಯೋಜನೆಗೆ ವೇಗ ಸಿಕ್ಕಿದೆ. ಈ ಮಾರ್ಗದಲ್ಲಿ ಚತುಷ್ಪಥ (ನಾಲ್ಕು ಹಳಿ) ರೈಲು ಮಾರ್ಗ ನಿರ್ಮಾಣದ ಪೂರ್ವ ಸಿದ್ಧತೆಗಳು ಚುರುಕುಗೊಂಡಿವೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಪ್ರಸ್ತುತ ಬೆಂಗಳೂರು-ತುಮಕೂರು ನಡುವೆ ಕೇವಲ ಎರಡು ರೈಲು ಹಳಿಗಳು ಮಾತ್ರ ಇರುವುದರಿಂದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗುತ್ತಿದ್ದು, ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಚತುಷ್ಪಥ ರೈಲು ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ.

ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಅಗತ್ಯವಿರುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ಉನ್ನತ ತಾಂತ್ರಿಕ ಸಮಿತಿಯಿಂದಲೂ ಅನುಮೋದನೆ ದೊರೆತಿದೆ. ಸದ್ಯ ಯೋಜನೆಯು ರೈಲ್ವೆ ಮಂಡಳಿಯ ಅಂತಿಮ ಅನುಮೋದನೆ ಹಂತದಲ್ಲಿದ್ದು, ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಂದಾಜು 6,000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಈ ಬೃಹತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆ ಜಾರಿಯಾದರೆ ಬೆಂಗಳೂರು ಮತ್ತು ತುಮಕೂರು ನಡುವಿನ ರೈಲು ಸಂಚಾರ ಸಾಮರ್ಥ್ಯ ಗಣನೀಯವಾಗಿ ಹೆಚ್ಚಳವಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಐದುರಿಂದ ಆರು ತಿಂಗಳ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ ಎಂದು ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

ನಟಿ ರುಕ್ಮಿಣಿ ವಸಂತ ಡೀಪ್ ಫೇಕ್ ಪ್ರಕರಣ: ಹೈಟೆಕ್ ಕಿಲಾಡಿಗಳ ಹಿನ್ನೆಲೆ ತಿಳಿದು ಪೊಲೀಸರೇ ಶಾಕ್!

0

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಸೈಬರ್ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಬಂಧಿತರೆಲ್ಲರೂ ಸುಶಿಕ್ಷಿತರಾಗಿದ್ದು, ಉತ್ತಮ ವೃತ್ತಿಜೀವನ ಹೊಂದಿದ್ದವರಾಗಿದ್ದಾರೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಮೂಲದ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ರಂಜಿತ್ ಕುಮಾರ್ (25) ಹಾಗೂ ತೀರ್ಥಹಳ್ಳಿ ಮೂಲದ ಚಂದ್ರಕಾಂತ್ (33) ಅವರನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ಪದವಿ ಪೂರ್ಣಗೊಳಿಸಿದ್ದು, ತನ್ನದೇ ಆದ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಇತ್ತೀಚೆಗೆ ಯೂಟ್ಯೂಬ್ ಮೂಲಕ ಆದಾಯ ಗಳಿಸಲು ಆರಂಭಿಸಿದ್ದ ಆತ, ಹೆಚ್ಚಿನ ವೀಕ್ಷಣೆ ಹಾಗೂ ಆದಾಯದ ಆಸೆಯಿಂದ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡಲು ಆರಂಭಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮತ್ತೊಬ್ಬ ಆರೋಪಿ ರಂಜಿತ್ ಕುಮಾರ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ವಾರ್ಷಿಕ ಸುಮಾರು ₹20 ಲಕ್ಷ ವೇತನ ಪಡೆಯುತ್ತಿದ್ದ. ತಾಂತ್ರಿಕ ಜ್ಞಾನವನ್ನು ದುರುಪಯೋಗಪಡಿಸಿಕೊಂಡು ಹಲವು ನಟಿಯರ ಎಐ ಆಧಾರಿತ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದ ಆತ, ಕೇವಲ ಮನರಂಜನೆ ಮತ್ತು ಮೋಜಿಗಾಗಿ ಈ ಕೃತ್ಯ ನಡೆಸಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಮೂರನೇ ಆರೋಪಿ ಚಂದ್ರಕಾಂತ್ ಬೆಂಗಳೂರಿನ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ. ಉತ್ತಮ ಸಂಬಳ ಪಡೆಯುತ್ತಿದ್ದ ಆತ ಕೂಡ ನಟಿಯರ ಫೋಟೋಗಳನ್ನು ಡೀಪ್‌ಫೇಕ್ ಮಾಡಿ ವಿಕೃತ ಸಂತೋಷ ಪಡೆಯುತ್ತಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ಹೈ-ಎಂಡ್ ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ವಿವಿಧ ಎಐ ಆ್ಯಪ್‌ಗಳು ಮತ್ತು ಸಾಫ್ಟ್‌ವೇರ್‌ಗಳ ನೆರವಿನಿಂದ ನಟಿಯರ ಮುಖಗಳನ್ನು ಅಶ್ಲೀಲ ವಿಡಿಯೋಗಳಿಗೆ ಜೋಡಿಸಿ ಡೀಪ್‌ಫೇಕ್ ಕಂಟೆಂಟ್ ಸೃಷ್ಟಿಸುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಸದ್ಯ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಸೈಬರ್ ಕಮಾಂಡ್ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಡೀಪ್‌ಫೇಕ್ ಕಂಟೆಂಟ್ ಸೃಷ್ಟಿ ಮತ್ತು ಪ್ರಸಾರದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹20 ಲಕ್ಷ ದರೋಡೆ; ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ

0

ಬೆಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಕೇರಳ ಮೂಲದ ಯುವಕರನ್ನು ಬೆಂಗಳೂರಿಗೆ ಕರೆಸಿ, ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 20 ಲಕ್ಷ ರೂಪಾಯಿಗೂ ಅಧಿಕ ಹಣ ದೋಚಿದ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಕುಪೇಂದ್ರ ರೆಡ್ಡಿ ಹಾಗೂ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್‌ಲೈನ್ ಟ್ರೇಡಿಂಗ್‌ನಲ್ಲಿ 25 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ 50 ಲಕ್ಷ ರೂಪಾಯಿ ಲಾಭ ಸಿಗುತ್ತದೆ ಎಂದು ಕೇರಳದ ಕೆಲ ಯುವಕರಿಗೆ ಆಮಿಷ ಒಡ್ಡಲಾಗಿತ್ತು. ಈ ಆಮಿಷಕ್ಕೆ ಒಳಗಾದ ಯುವಕರು ಹಣದೊಂದಿಗೆ ಬೆಂಗಳೂರಿನ ಮಡಿವಾಳದಲ್ಲಿರುವ ಖಾಸಗಿ ಹೋಟೆಲ್‌ಗೆ ಆಗಮಿಸಿದ್ದರು.

ಯುವಕರು ಹೋಟೆಲ್‌ಗೆ ಬಂದಿರುವ ಮಾಹಿತಿ ಪಡೆದ ಆರೋಪಿಗಳು ಬಳಿಕ ಪೊಲೀಸ್ ಅಧಿಕಾರಿಗಳಂತೆ ನಟಿಸಿ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸ್ ವಾಹನದಲ್ಲಿ ಬಂದ ಆರೋಪಿಗಳು ತಮ್ಮನ್ನು ಅಧಿಕಾರಿಗಳೆಂದು ಪರಿಚಯಿಸಿಕೊಂಡು ಗುರುತಿನ ಚೀಟಿಗಳನ್ನು ತೋರಿಸಿ ಯುವಕರನ್ನು ಬೆದರಿಸಿದ್ದಾರೆ ಎನ್ನಲಾಗಿದೆ.

ಬಳಿಕ ಯುವಕರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ 20 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಕಸಿದುಕೊಂಡು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಪ್ರಮುಖ ಆರೋಪಿ ಹಣದೊಂದಿಗೆ ಪೊಲೀಸ್ ವಾಹನದಲ್ಲಿ ಸ್ಥಳದಿಂದ ತೆರಳಿದ್ದರೆ, ಉಳಿದವರು ಬೈಕ್‌ಗಳಲ್ಲಿ ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕೇರಳ ಮೂಲದ ಯುವಕರು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳ ವಿರುದ್ಧ ದರೋಡೆ, ಬೆದರಿಕೆ, ಹಲ್ಲೆ, ವಂಚನೆ ಹಾಗೂ ಒಳಸಂಚು ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಮಡಿವಾಳ ಉಪವಿಭಾಗದ ಎಸಿಪಿ ವಾಸುದೇವ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಈ ಹಿಂದೆ ಇದೇ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಸ್ನೇಹಿತರು ಶವವಾಗಿ ಪತ್ತೆ: ಹಿಟ್‌ ಆ್ಯಂಡ್‌ ರನ್‌ಗೆ ಇಬ್ಬರು ಯುವಕರ ಬಲಿ

ಚಿಕ್ಕಬಳ್ಳಾಪುರ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರ ಜೀವವನ್ನು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಹಿಟ್‌ ಆ್ಯಂಡ್‌ ರನ್‌ ಅಪಘಾತ ಕಸಿದುಕೊಂಡಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟ್‌ ಸಮೀಪ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಕುಣಿಗಲ್ ಮೂಲದ ಜೀವನ್ (22) ಎಂದು ಗುರುತಿಸಲಾಗಿದೆ. ಇಬ್ಬರೂ ಸೇಟ್‌ ದಿನ್ನೆ ಬಳಿಯ ಲಾಜಿಸ್ಟಿಕ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು, ರಾತ್ರಿ ಪಾಳಿ ಮುಗಿಸಿ ವಾಪಸ್‌ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ಗಾಯಗಳಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸುದ್ದಿ ತಿಳಿದ ಕೂಡಲೇ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ವಾಹನದ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಕೈಗೊಂಡಿದ್ದಾರೆ.

error: Content is protected !!