Home Blog Page 2

ರಾಮನಗರ ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ

ರಾಮನಗರ, ಜುಲೈ 02: ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತ ಏಳು ಕಾರ್ಮಿಕರ ಜೀವ ಕಸಿದುಕೊಂಡಿದ್ದರೆ, ಮತ್ತೊಂದು ಕಳವಳಕಾರಿ ಬೆಳವಣಿಗೆಯಲ್ಲಿ ಗಂಭೀರವಾಗಿ ಗಾಯಗೊಂಡ ಐವರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಂಡೆ ಕುಸಿತದ ಭಾರೀ ಹೊಡೆತಕ್ಕೆ ಕೈ, ಕಾಲು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ರಕ್ತಸ್ರಾವದಿಂದ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ.

ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿದ್ದು, ಗಾಯಾಳುಗಳ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಈ ದುರಂತದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿಯೂ ವ್ಯಕ್ತವಾಗಿದ್ದು, ಆಸ್ಪತ್ರೆಯಲ್ಲಿ ಕಟ್ಟೆಚ್ಚರದ ವೈದ್ಯಕೀಯ ನಿಗಾ ಮುಂದುವರಿದಿದೆ.

ಬೆಂಗಳೂರಿನಲ್ಲಿ ಎರಡನೇ ದಿನವೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ವಿವಿಧೆಡೆ ಜೆಸಿಬಿ ಘರ್ಜನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ.

GBA ಅಧಿಕಾರಿಗಳು ಬೆಳಗ್ಗೆಯಿಂದಲೇ ನಗರದ ವಿವಿಧ ಭಾಗಗಳಲ್ಲಿ ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿ ತೆರವುಗೊಳಿಸಿದರು.

ನಗರಾಭಿವೃದ್ಧಿ ಸಚಿವರ ಸೂಚನೆಯಂತೆ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಉತ್ತರ ವಲಯದ ಹಲವು ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡಿದ್ದ ಶೆಡ್‌ಗಳು, ತಾತ್ಕಾಲಿಕ ನಿರ್ಮಾಣಗಳು ಹಾಗೂ ಇತರೆ ಅಡೆತಡೆಗಳನ್ನು ತೆರವುಗೊಳಿಸಲಾಯಿತು.

ಸಹಕಾರನಗರ ಮುಖ್ಯರಸ್ತೆ, ಕೊಡಿಗೇನಹಳ್ಳಿ, ವಿದ್ಯಾರಣ್ಯಪುರ ಮುಖ್ಯರಸ್ತೆ, ನಂಜಪ್ಪ ಸರ್ಕಲ್, ಪುಲಿಕೇಶಿನಗರ, ದಿನ್ನೂರು ಮುಖ್ಯರಸ್ತೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜು ಸಮೀಪದ ಫುಟ್‌ಪಾತ್‌ಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ನಿನ್ನೆ ಸರ್ಕಾರ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಇಂದು ಕೂಡ ನಗರದ ವಿವಿಧ ಪ್ರದೇಶಗಳಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಪಾದಚಾರಿಗಳಿಗೆ ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಫುಟ್‌ಪಾತ್‌ಗಳನ್ನು ಅತಿಕ್ರಮಣ ಮುಕ್ತಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕೊನೆಗೂ ಬಯಲಾಯ್ತು ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ದುರಂತದ ಕಾರಣ: ತನಿಖೆಯಲ್ಲಿ ಗೊತ್ತಾಯ್ತು ಅಸಲಿ ಸತ್ಯ

ದಾವಣಗೆರೆ: ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಮಾನವ ನಿರ್ಲಕ್ಷ್ಯವೇ ಕಾರಣವೇ ಎಂಬ ಅನುಮಾನಕ್ಕೆ ಇದೀಗ ತನಿಖೆಯೇ ಬಲ ತುಂಬಿದೆ. ಬಳಸಲು ಯೋಗ್ಯವಲ್ಲದ ವೈದ್ಯಕೀಯ ಯಂತ್ರೋಪಕರಣಗಳನ್ನು ಕಾರ್ಯಾಚರಣೆಗೆ ಬಳಸಿದ್ದೇ ಅವಘಡಕ್ಕೆ ಕಾರಣ ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆಯಂತೆ ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ನೇತೃತ್ವದ ತನಿಖಾ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಕಾಣಿಸಿಕೊಂಡ ಆಪರೇಷನ್ ಥಿಯೇಟರ್‌ನಲ್ಲಿದ್ದ ಅರಿವಳಿಕೆ ವರ್ಕ್ ಸ್ಟೇಷನ್ ಸೇರಿದಂತೆ ಹಲವು ಪ್ರಮುಖ ಸಾಧನಗಳು ತಾಂತ್ರಿಕ ದೋಷದಿಂದ ಬಳಲುತ್ತಿದ್ದವು ಎಂದು ಪತ್ತೆಯಾಗಿದೆ.

ಯಂತ್ರಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಸಂಪೂರ್ಣ ಹಾಳಾಗಿದ್ದರೂ ಅವುಗಳನ್ನು ಬದಲಾಯಿಸದಿರುವುದು ತನಿಖೆಯ ಪ್ರಮುಖ ಅಂಶವಾಗಿದೆ. ನಿರ್ವಹಣೆ ಹೊತ್ತಿದ್ದ ಖಾಸಗಿ ಏಜೆನ್ಸಿ ಈ ಬಗ್ಗೆ ಮೊದಲೇ ಆಸ್ಪತ್ರೆ ಆಡಳಿತಕ್ಕೆ ಲಿಖಿತ ಎಚ್ಚರಿಕೆ ನೀಡಿದ್ದರೂ, ಅದನ್ನು ಗಂಭೀರವಾಗಿ ಪರಿಗಣಿಸದೇ ಅದೇ ಯಂತ್ರಗಳನ್ನು ಬಳಸಲಾಗಿದೆ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ. ಈ ನಿರ್ಲಕ್ಷ್ಯವೇ ಜೂನ್ 30ರಂದು ಸಂಭವಿಸಿದ ಅಗ್ನಿ ಅವಘಡಕ್ಕೆ ಕಾರಣವಾಗಿರಬಹುದು ಎಂದು ತನಿಖಾ ತಂಡ ಶಂಕಿಸಿದೆ.

ಪ್ರಕರಣವನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸಚಿವ ಯುಟಿ ಖಾದರ್ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಸಚಿವರ ಸೂಚನೆಯಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಮುಖ್ಯ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹಿಸಿದೆ.

ಉಪ ವಿಭಾಗಾಧಿಕಾರಿಗಳ ಅಂತಿಮ ವರದಿ ಜಿಲ್ಲಾಧಿಕಾರಿಗಳ ಕೈ ಸೇರಿದ ಬಳಿಕ ತಪ್ಪಿತಸ್ಥ ಅಧಿಕಾರಿಗಳು, ವೈದ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರಿನ ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ! FIR ದಾಖಲು

ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದಲ್ಲಿರುವ ಸೊಸೈಟಿ ಜನರಲ್ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ HAL ಪೊಲೀಸ್ ಠಾಣೆಯಲ್ಲಿ ಐವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಕ್ಕಳ ಸಹಾಯವಾಣಿಗೆ ವಿಡಿಯೋ ಸಹಿತ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ದೂರು ಆಧಾರವಾಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ  ಹಾಗೂ ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪದ ಪ್ರಕಾರ, ಬೇಬಿ ಕೇರ್‌ನಲ್ಲಿ ಮಕ್ಕಳು ಅಳುವುದು ಅಥವಾ ಗಲಾಟೆ ಮಾಡುವ ಸಂದರ್ಭಗಳಲ್ಲಿ ಸಿಬ್ಬಂದಿ ಹಿಂಸೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಮಕ್ಕಳನ್ನು ವಾಶಿಂಗ್ ಮಷಿನ್ ಒಳಗೆ ಕೂರಿಸುವುದು, ವೆಸ್ಟರ್ನ್ ಕಮೋಡ್‌ನಲ್ಲಿ ಕೂರಿಸಿ ಪೈಪ್ ಮೂಲಕ ನೀರು ಬಿಡುವುದು ಹಾಗೂ ವಾಶ್ ರೂಮ್‌ನಲ್ಲಿ ಕೂಡಿ ಹಾಕುವುದು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ವಿಡಿಯೋಗಳ ಸಹಿತ ದೂರು ಬಂದ ನಂತರ ಮಕ್ಕಳ ಸಹಾಯವಾಣಿ ಪ್ರತಿನಿಧಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ HAL ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಹೇಳಿಕೆ ನೀಡಿದ್ದು, ವಿಡಿಯೋಗಳ ಸತ್ಯಾಸತ್ಯತೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವೈರಲ್ ಆಗಿರುವ ವಿಡಿಯೋ ಹಳೆಯದು ಎಂಬ ಮಾಹಿತಿ ಹೊರಬಂದಿದೆ. ಈ ಬೇಬಿ ಕೇರ್ ಅನ್ನು CAPGEMINI TECHNOLOGY SERVICES ಕಂಪನಿ ಉದ್ಯೋಗಿಗಳ ಮಕ್ಕಳ ಆರೈಕೆಗೆ ನಡೆಸಲಾಗುತ್ತಿತ್ತು ಎಂಬುದೂ ತಿಳಿದುಬಂದಿದೆ.

ಸದ್ಯ ಸುಮಾರು 18 ಮಕ್ಕಳು ಈ ಕೇಂದ್ರದಲ್ಲಿ ಇರುತ್ತಿದ್ದು, ಘಟನೆ ನಂತರ ಅಲ್ಲಿಗೆ ಹೊಸ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ರೋಟರಿ ಕ್ಲಬ್‌ನಲ್ಲಿ ಯಶಸ್ವಿ ರಕ್ತದಾನ ಶಿಬಿರ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ರೋಟರಿ ಕ್ಲಬ್, ಬಸವೇಶ್ವರ ಬ್ಲಡ್ ಸೆಂಟರ್ ಹಾಗೂ ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ರೋಟರಿ ಐಕೇರ್ ಸೆಂಟರ್‌ನಲ್ಲಿ ಬುಧವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ರೋಟರಿ ಕ್ಲಬ್‌ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವೈದ್ಯರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 10ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.

ರೋಟರಿ 3170ರ ಸಹಾಯಕ ಜಿಲ್ಲಾ ಗವರ್ನರ್ ಶ್ರೀಧರಗೌಡ ಎ. ಧರ್ಮಾಯತ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ, ಕಾರ್ಯದರ್ಶಿ ಅಕ್ಷಯ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಡಾ. ಆರ್.ಜಿ. ಗಚ್ಚಿನಮಠ, ನಿಕಟಪೂರ್ವ ಕಾರ್ಯದರ್ಶಿ ಸುರೇಶ ಕುಂಬಾರ, ಶ್ರೀಧರ ಸುಲ್ತಾನಪೂರ, ಡಾ. ಆರ್.ಬಿ. ಉಪ್ಪಿನ, ವಿಶ್ವನಾಥ ಯಳಮಲಿ, ಇನ್ನರ್‌ವ್ಹೀಲ್ ಕ್ಲಬ್‌ನ ಮಂಜುಳಾ ಅಕ್ಕಿ, ಅಶ್ವಿನಿ ಜಗತಾಪ, ಶಿವಲೀಲಾ ಅಕ್ಕಿ, ಸುಶೀಲಾ ಕೋಟಿ, ನೀಲಾಂಭಿಕಾ ಉಗಲಾಟ, ಸವಿತಾ ಧರ್ಮಾಯತ, ಸಂಧ್ಯಾ ಕೋಟಿ, ಶಿಲ್ಪಾ ಅಕ್ಕಿ, ಪುಷ್ಪಾ ಭಂಡಾರಿ, ಮೀನಾಕ್ಷಿ ಕೊರವನವರ, ಸುವರ್ಣಾ ವಸ್ತ್ರದ, ವೀಣಾ ಕಾವೇರಿ ಹಾಗೂ ರೋಟ್ರಾಕ್ಟ್ ಕ್ಲಬ್‌ನ ಸನ್ಮತಿ, ಸುಮಾ, ಭಾನುಪ್ರಕಾಶ, ಶ್ರುಜನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮಳೆ ಕೊರತೆಗೆ ಮೆಕ್ಕೆಜೋಳ ಬೆಳೆ ಬಲಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ, ಸೂರಣಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಮೆಕ್ಕೆಜೋಳದ ಬೆಳೆ ಒಣಗುತ್ತಿದ್ದು, ರೈತರು ಅನಿವಾರ್ಯವಾಗಿ ಬೆಳೆ ಹರಗುತ್ತಿದ್ದಾರೆ.

ಮೇ ಕೊನೆ ಹಾಗೂ ಜೂನ್ ಮೊದಲ ವಾರದಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಕೃಷಿ ಔಷಧ ಖರೀದಿಸಿ ಬಿತ್ತನೆ ಮಾಡಿದ್ದರು. ಆರಂಭದಲ್ಲಿ ಸುರಿದ ಅಲ್ಪ ಮಳೆಯ ಬಳಿಕ ಮಳೆ ಸಂಪೂರ್ಣ ನಿಂತಿದ್ದರಿಂದ ತೇವಾಂಶದ ಕೊರತೆಯಿಂದ ಬೆಳೆ ಬಾಡಿ ಒಣಗಿದೆ. ಈಗ ಮಳೆ ಬಂದರೂ ಬೆಳೆ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲದ ಕಾರಣ ರೈತರು ಹೊಲಗಳನ್ನು ಮತ್ತೆ ಉಳುಮೆ ಮಾಡುತ್ತಿದ್ದಾರೆ.

ಒಂದು ಎಕರೆಗೆ 15ರಿಂದ 20 ಸಾವಿರ ರೂ.ವರೆಗೆ ವೆಚ್ಚ ಮಾಡಿರುವ ರೈತರು ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ಮರುಪಾವತಿ, ಜಾನುವಾರುಗಳಿಗೆ ಮೇವು ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಮಳೆಗಾಗಿ ಕೆಲ ಗ್ರಾಮಗಳಲ್ಲಿ ವಿಶೇಷ ಪೂಜೆಗಳನ್ನೂ ನಡೆಸಲಾಗುತ್ತಿದೆ.

ರೈತ ಮುಖಂಡ ಗಂಗಾಧರ ಗಾಣಿಗೇರ ಮಾತನಾಡಿ, “ಈ ಭಾಗದಲ್ಲಿ ಮೆಕ್ಕೆಜೋಳದ ಬೆಳೆ ಸಂಪೂರ್ಣ ಹಾಳಾಗುತ್ತಿದೆ. ಸರ್ಕಾರ ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ, ಬರಪೀಡಿತ ಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ, ಬೆಳೆ ವಿಮೆ ಹಾಗೂ ಕೃಷಿ ಸಾಲ ಮರುಪಾವತಿಗೆ ವಿನಾಯಿತಿ ನೀಡಬೇಕು. ಮುಂದಿನ ಬಿತ್ತನೆಗೆ ವಿಶೇಷ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು,” ಎಂದು ಆಗ್ರಹಿಸಿದರು.

ರೈತರು ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕು: ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ.

ಜಲಾಶಯಕ್ಕೆ ಸದ್ಯ 858 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಮಳೆಯ ಪ್ರಮಾಣದಲ್ಲಿ ಆಗಿರುವ ಹೆಚ್ಚಳದಿಂದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀರಿನ ಮಟ್ಟ ಮತ್ತು ಸಂಗ್ರಹ ಸಾಮರ್ಥ್ಯವನ್ನು ನಿರಂತರವಾಗಿ ಗಮನದಲ್ಲಿಟ್ಟುಕೊಂಡಿರುವ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ 180 ಕ್ಯೂಸೆಕ್ ನೀರನ್ನು ನದಿಗೆ ಹೊರಹರಿಸುತ್ತಿದ್ದಾರೆ.

ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನಿರಂತರ ಮೇಲ್ವಿಚಾರಣೆ ನಡೆಯುತ್ತಿದ್ದು, ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಲ್ಲೂ ಮಳೆ ಮುಂದುವರಿದರೆ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ರಿಕೋದ್ಯಮಕ್ಕೆ ಕೃತಕ ಬುದ್ಧಿಮತ್ತೆಯ ಸವಾಲು: ಹಿರಿಯ ಪತ್ರಕರ್ತ ಅನಂತ ಎಸ್. ಕಾರ್ಕಳ

ವಿಜಯಸಾಕ್ಷಿ ಸುದ್ದಿ, ಗದಗ: ಪತ್ರಿಕೋದ್ಯಮವು ಸಾಂಪ್ರದಾಯಿಕ ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣಗಳತ್ತ ವೇಗವಾಗಿ ಸಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯಿಂದ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದೇ ಮಾಧ್ಯಮಗಳಿಗೆ ಅತಿ ದೊಡ್ಡ ಸವಾಲಾಗಿದೆ ಎಂದು ಹಿರಿಯ ಪತ್ರಕರ್ತ ಅನಂತ ಎಸ್. ಕಾರ್ಕಳ ಅಭಿಪ್ರಾಯಪಟ್ಟರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಹಿರಿಯ ಪತ್ರಕರ್ತ ಎಚ್.ಎಂ. ಶರೀಫನವರ ಜನ್ಮದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಅವರ ಆಪ್ತ ಬಳಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಹಾಗೂ ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಜನರನ್ನು ಹೆಚ್ಚು ಸೆಳೆಯುತ್ತಿರುವ ಪರಿಣಾಮ ಮುಖ್ಯವಾಹಿನಿ ಮಾಧ್ಯಮಗಳು ಓದುಗರಿಂದ ದೂರವಾಗುತ್ತಿರುವುದು ಮಾಧ್ಯಮ ಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ಆನಂದ ಸಾಲಿಗ್ರಾಮ ಮಾತನಾಡಿ, ಬಹುತೇಕ ಸುದ್ದಿ ಸಂಸ್ಥೆಗಳು ಡಿಜಿಟಲ್ ವೇದಿಕೆಗಳಿಗೆ ಆದ್ಯತೆ ನೀಡುತ್ತಿರುವುದರಿಂದ ಓದುಗರು ಪತ್ರಿಕೆಗಳಿಗಿಂತ ಮೊಬೈಲ್ ಆ್ಯಪ್‌ಗಳು ಹಾಗೂ ವೆಬ್‌ಸೈಟ್‌ಗಳ ಮೂಲಕ ಸುದ್ದಿಯನ್ನು ಪಡೆಯುತ್ತಿದ್ದಾರೆ. ರೀಲ್ಸ್ ಹಾಗೂ ಕಿರಿದಾದ ವಿಡಿಯೊಗಳ ಮೂಲಕ ಸುದ್ದಿ ನೀಡುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಸಾಂಪ್ರದಾಯಿಕ ಮಾಧ್ಯಮಗಳಿಗೆ ಸವಾಲಾಗಿದೆ ಎಂದು ಹೇಳಿದರು.

ಟಿವಿ9 ಜಿಲ್ಲಾ ವರದಿಗಾರ ಸಂಜಯ್ ಪಾಂಡ್ರೆ ಮಾತನಾಡಿ, ವರದಿಗಳನ್ನು ಸಿದ್ಧಪಡಿಸುವುದು ಹಾಗೂ ಮಾಹಿತಿಯನ್ನು ವಿಶ್ಲೇಷಿಸುವಲ್ಲಿ ಎಐ ಬಳಕೆ ಹೆಚ್ಚುತ್ತಿರುವುದರಿಂದ ಸತ್ಯಾಸತ್ಯತೆ ಪರಿಶೀಲಿಸುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದರು.

ಜನಶ್ರೀ ಟೈಮ್ಸ್ ಸಂಪಾದಕ ಆನಂದಯ್ಯ ವಿರಕ್ತಿಮಠ ಮಾತನಾಡಿ, ಎಐ ತಂತ್ರಜ್ಞಾನ ನಕಲಿ ಸುದ್ದಿಗಳ (ಫೇಕ್ ನ್ಯೂಸ್) ಹಾವಳಿಯನ್ನು ಹೆಚ್ಚಿಸುವುದರ ಜೊತೆಗೆ ಪತ್ರಕರ್ತರ ಉದ್ಯೋಗಕ್ಕೂ ಆತಂಕ ತಂದೊಡ್ಡಿದೆ ಎಂದರು.

ಗದಗ ಜಿಲ್ಲೆಯ ಬಹುತೇಕ ಪತ್ರಿಕೆಗಳ ಕಾನೂನು ಸಲಹೆಗಾರ ಹಾಗೂ ನ್ಯಾಯವಾದಿ ಟಿ.ಎನ್. ಭಾಂಡಗೆ ಮಾತನಾಡಿ, ಡಿಜಿಟಲ್ ಜಾಹೀರಾತುಗಳ ಆದಾಯ ಗೂಗಲ್ ಹಾಗೂ ಮೆಟಾದಂತಹ ತಂತ್ರಜ್ಞಾನ ಕಂಪನಿಗಳ ಪಾಲಾಗುತ್ತಿರುವುದರಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಪತ್ರಕರ್ತ ಎಚ್.ಎಂ. ಶರೀಫನವರ, ಡಿಜಿಟಲ್ ಯುಗದಲ್ಲಿ ಸುದ್ದಿ ಸಂಸ್ಥೆಗಳು ಪೇವಾಲ್ (Paywall) ಹಾಗೂ ಚಂದಾದಾರಿಕೆ ಮಾದರಿಗಳತ್ತ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಪತ್ರಿಕೋದ್ಯಮ ಮತ್ತು ಮಾಧ್ಯಮಗಳ ಇಂದಿನ ಸವಾಲುಗಳ ಕುರಿತು ಸರ್ಕಾರ ಹಾಗೂ ಸಮಾಜದಲ್ಲಿ ಗಂಭೀರ ಚರ್ಚೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿ ಗೌರವಿಸಿದ ಎಲ್ಲ ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಸ್ವಾಗತಿಸಿದರು. ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಸುರೇಶ ಕಡ್ಲಿಮಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ ಪೈ ಕಾರ್ಯಕ್ರಮ ನಿರೂಪಿಸಿದರು. ನ್ಯೂಸ್ 18 ಜಿಲ್ಲಾ ವರದಿಗಾರ ಸಂತೋಷ ಕೊಣ್ಣೂರ ವಂದಿಸಿದರು.

ಕಾರ್ಯಕ್ರಮದಲ್ಲಿ ಸುವರ್ಣ ಟಿವಿ ಜಿಲ್ಲಾ ವರದಿಗಾರ ಗಿರೀಶ ಕಮ್ಮಾರ, ರಿಪಬ್ಲಿಕ್ ಟಿವಿ ವರದಿಗಾರ ಮಂಜು ಪತ್ತಾರ, ಕ್ಯಾಮೆರಾಮೆನ್ ಮಂಜು ಸಾಳೇರ, ಶಂಭುಲಿಂಗಯ್ಯ, ವಿಜಯಸಾಕ್ಷಿ ವರದಿಗಾರ ಗೌಸ್ ಬೆಟಗೇರಿ, ಸ್ನೇಹ ಸುದ್ದಿ ಸಂಪಾದಕ ಗಣೇಶ ದೊಡ್ಡಮನಿ, ಪರಶುರಾಮ ಸೇರಿದಂತೆ ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸೇವಾ ನಿಷ್ಠೆಯೇ ಜನರ ವಿಶ್ವಾಸದ ಅಡಿಪಾಯ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಂದಾಯ ಇಲಾಖೆಯ ಸಿಬ್ಬಂದಿ ಪ್ರಾಮಾಣಿಕತೆ, ವಿಶ್ವಾಸಾರ್ಹತೆ ಹಾಗೂ ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಜನರ ವಿಶ್ವಾಸ ಗಳಿಸಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.

ಬುಧವಾರ ಶಿರಹಟ್ಟಿಯ ತಹಸೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆ, ವೈದ್ಯರ ಹಾಗೂ ಪತ್ರಕರ್ತರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ಬಳಿಕ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನದ ಅಳವಡಿಕೆ, ಆನ್‌ಲೈನ್ ಸೇವೆಗಳ ವಿಸ್ತರಣೆ, ಭೂ ದಾಖಲೆಗಳ ಡಿಜಿಟಲೀಕರಣ, ಸೇವೆಗಳ ಸರಳೀಕರಣ ಹಾಗೂ ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತ ಹಾಗೂ ಸುಲಭ ಸೇವೆ ಒದಗಿಸಲು ಸಾಧ್ಯವಾಗುತ್ತಿದ್ದು, ಇಲಾಖೆ ಇನ್ನಷ್ಟು ಜನಸ್ನೇಹಿಯಾಗಲಿದೆ ಎಂದು ತಿಳಿಸಿದರು.

ವೈದ್ಯರ ಸೇವೆ ದೇವರ ಸೇವೆಗೆ ಸಮಾನವಾಗಿದ್ದು, ರೋಗಿಗಳ ನೋವು ನಿವಾರಿಸಿ ಜೀವ ಉಳಿಸುವ ಪವಿತ್ರ ಕಾರ್ಯವನ್ನು ಅವರು ಹಗಲು-ರಾತ್ರಿ ಎನ್ನದೆ ನಿರ್ವಹಿಸುತ್ತಿದ್ದಾರೆ. ಅವರ ತ್ಯಾಗ, ಸೇವಾ ಮನೋಭಾವ ಮತ್ತು ಕರ್ತವ್ಯನಿಷ್ಠೆಯನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.

ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಸ್ತುನಿಷ್ಠ ಹಾಗೂ ಸಮಾಜದ ಹಿತ ಕಾಪಾಡುವ ವರದಿಗಳನ್ನು ಪ್ರಕಟಿಸುವ ಮೂಲಕ ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಡಾ. ಸುನೀಲ ಬುರಬುರೆ, ಡಾ. ಗೋಪಾಲರಾಜ, ಗ್ರೇಡ್-2 ತಹಸೀಲ್ದಾರ್ ವಿ.ಎ. ಮುಳಗುಂದಮಠ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ಸಂತೋಷ ಅಸ್ಕಿ, ಎಚ್.ಜೆ. ಭಾವಿಕಟ್ಟಿ, ಶಂಕರ ಮರಾಠೆ, ಸಂತೋಷ ಢೋಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವೈದ್ಯರ ದಿನಾಚರಣೆಗೆ ಮಕ್ಕಳಿಂದ ವಿಶಿಷ್ಟ ಗೌರವ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಪಟ್ಟಣದ ಎಂಜಿಎಂ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ದೀಪಾಲಿ ಪಾಟೀಲ ಅವರ ನೇತೃತ್ವದಲ್ಲಿ ಅಗಡಿ ಸನ್ ರೈಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಗೆ ಶುಭಾಶಯ ಕೋರಿದರು.

ಈ ವೇಳೆ ವಿದ್ಯಾರ್ಥಿಗಳು ವೈದ್ಯರೊಂದಿಗೆ ಕೇಕ್ ಕತ್ತರಿಸಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅಮೂಲ್ಯವಾಗಿದೆ ಎಂದು ಅಭಿನಂದಿಸಿದರು.

ಆಸ್ಪತ್ರೆಯ ವೈದ್ಯರು ಮಕ್ಕಳ ಶುಭಾಶಯವನ್ನು ಸ್ವೀಕರಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು, ಸ್ವಚ್ಛತೆ ಪಾಲಿಸುವುದು ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಗಡಿ ಸನ್ ರೈಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಎಂಜಿಎಂ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ದೀಪಾಲಿ ಪಾಟೀಲ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.