Home Blog Page 2

ಮಂಡ್ಯ| ರಾಸಾಯನಿಕ ಸಂಗ್ರಹ ಟ್ಯಾಂಕ್ ಸ್ಫೋಟ: ಇಬ್ಬರು ಸಾವು, ಮೂವರು ಗಂಭೀರ; ಓರ್ವನ ಕೈ ಕಟ್!

0

ಮಂಡ್ಯ:– ತಾಲೂಕಿನ ಬಸರಾಳು ಸಮೀಪದ ಕಾರೆಕಟ್ಟೆ ಗ್ರಾಮದಲ್ಲಿ ಭಾರೀ ದುರಂತ ಸಂಭವಿಸಿದೆ.

ಕಾರಕಟ್ಟೆ ಬಳಿಯ ಕೀರ್ತಿ ಕೆಮಿಕಲ್ಸ್ ಇಂಡಸ್ಟ್ರೀಸ್‌ನಲ್ಲಿ ರಾಸಾಯನಿಕ ಸಂಗ್ರಹಕ್ಕಾಗಿ ಬಳಸುತ್ತಿದ್ದ ಬೃಹತ್ ಟ್ಯಾಂಕ್ ಸ್ಫೋಟಗೊಂಡಿದೆ.

ಘಟನೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರ ಛಿದ್ರಗೊಂಡಿರುವುದಾಗಿ ತಿಳಿದುಬಂದಿದೆ. ಸ್ಥಳದಲ್ಲಿದ್ದ ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಕೈ ಸಂಪೂರ್ಣ ಕಟ್ ಆಗಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ದುರ್ಘಟನೆ ಬಳಿಕ ಕಾರ್ಖಾನೆ ಮಾಲೀಕ ಸ್ಥಳದಿಂದ ನಾಪತ್ತೆಯಾಗಿರುವ ಮಾಹಿತಿ ದೊರೆತಿದೆ. ಸ್ಥಳಕ್ಕೆ ಬಸರಾಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಹಾಗೂ ಗಾಯಾಳುಗಳ ಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.

ಈ ಸಂಬಂಧ ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಕೊನೆಗೂ ಪ್ರತ್ಯಕ್ಷ; ಗಂಡನ ಸ್ನೇಹಿತನ ಮನೆಯಲ್ಲಿ ಸಿಕ್ಕಿಬಿದ್ದ ಐನಾತಿ ಲೇಡಿ!

0

ಹಾಸನ: ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದು, ಪ್ರಕರಣದಲ್ಲಿ ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ನಡೆಸಿದ ತನಿಖೆಯಲ್ಲಿ, ಕುಣಿಗಲ್‌ನ ಗೊಟ್ಟಿಕೆರೆ ಪ್ರದೇಶದಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಪ್ರಿಯಾಂಕಾ ಇದ್ದುದು ಪತ್ತೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೇಲೂರು ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.

ಡೇವಿಡ್ ಮನೆಯಲ್ಲೇ ಪ್ರಿಯಾಂಕಾ ಕಳೆದ ಎರಡು ದಿನಗಳಿಂದ ವಾಸವಿದ್ದಳು ಎನ್ನಲಾಗಿದೆ.
ಈ ಪ್ರಕರಣವು ಬೇಲೂರು ಪೊಲೀಸರಿಗೆ ತೀವ್ರ ತಲೆನೋವಾಗಿ ಪರಿಣಮಿಸಿತ್ತು. ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಂತೆ ಸೀನ್ ಕ್ರಿಯೇಟ್ ಮಾಡಿ ಪ್ರಿಯಾಂಕಾ ನಾಪತ್ತೆಯಾಗಿದ್ದ ಹಿನ್ನೆಲೆ ತನಿಖೆ ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಪೊಲೀಸರ ಸತತ ಪ್ರಯತ್ನದ ಫಲವಾಗಿ, ಪತಿಯ ಸ್ನೇಹಿತನಾಗಿರುವ ಡೇವಿಡ್ ಮನೆಯಲ್ಲಿ ಕೊನೆಗೂ ಮಹಿಳೆ ಪತ್ತೆಯಾಗಿದ್ದಾರೆ.

ತನಿಖೆಯ ವೇಳೆ ಡೇವಿಡ್ ಕುಣಿಗಲ್ ಪಟ್ಟಣದ ಗೊಟ್ಟಿಕೆರೆ ಪ್ರದೇಶದಲ್ಲಿ ವಾಸವಾಗಿದ್ದು, ಪಟ್ಟಣದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ, ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆಂದು ಬಂದಿದ್ದಳು. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದ ಬಳಿ ಈಕೆ ನಿಗೂಢವಾಗಿ ನಾಪತ್ತೆಯಾಗಿದ್ದಳು. ನಾಪತ್ತೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬದವರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆ ಇದ್ದೇನೆ’ ಎಂದು ಹೇಳಿ ಕರೆ ಕಟ್ ಮಾಡಿದ್ದಳು. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ಬೇಲೂರು ತಾಲೂಕಿನ ಕಲ್ಕೆರೆ ಸಮೀಪ ಮಹಿಳೆಯ ಒಳಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಪ್ರಕರಣದ ಮೇಲೆ ಮತ್ತಷ್ಟು ಅನುಮಾನ ಮೂಡಿಸಿತ್ತು.

ಪ್ರಸ್ತುತ ಪೊಲೀಸರು ಪ್ರಿಯಾಂಕಾಳನ್ನು ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದೆ.

ಗೋಲ್ಡ್ ಪ್ರಿಯರ ಗಮನಕ್ಕೆ| ಇಂದು ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ!

0

ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಆಭರಣಗಳ ಹಾವು ಏಣಿ ಆಟ ಮುಂದುವರಿದಿದೆ.

ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 15ಕ್ಕೆ):-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,775 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ.

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,831 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,775 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ.

ಶಿವಮೊಗ್ಗ| 40 ಸಾವಿರ ಲಂಚ ಸ್ವೀಕರಿಸುವಾಗ ‘ಲೋಕಾ’ ದಾಳಿ; ವಿಶೇಷ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಅರೆಸ್ಟ್

0

ಶಿವಮೊಗ್ಗ:- ಶಿವಮೊಗ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ–206ರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಹಾಗೂ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಓತಿಘಟ್ಟ ಗ್ರಾಮದ ಕೇಶವಮೂರ್ತಿ ಅವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ಬಾಡಿಗೆಗೆ ನೀಡಿದ್ದು, 2025ರ ನವೆಂಬರ್ ತಿಂಗಳ ಬಾಡಿಗೆ ಚೆಕ್ ನೀಡಲು ₹40,000 ಲಂಚ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಲಾಗಿದೆ.

ಈ ಕುರಿತು ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಫೆಬ್ರವರಿ 14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡಕಚೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ ₹40,000 ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಚಂದ್ರಶೇಖರ್ ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪೊಲೀಸ್ ನಿರೀಕ್ಷಕರು ಕೆ.ಪಿ. ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್. ಕುಸಲಾಪುರ ಸೇರಿದಂತೆ ಸಿಬ್ಬಂದಿ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು| ಸಿಲಿಂಡರ್ ಸ್ಫೋಟಗೊಂಡು ದಂಪತಿಗಳಿಬ್ಬರು ಗಂಭೀರ; ಮನೆ ಗೋಡೆ ಛಿದ್ರ

0

ಬೆಂಗಳೂರು:- ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಜರುಗಿದೆ.

ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ. ಕೃಷ್ಣಮ್ಮ-ರಾಜು ಗಾಯಗೊಂಡ ಪತಿ ಪತ್ನಿ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿದೆ. ಸ್ಫೋಟ ಹೇಗಾಯಿತು ಅನ್ನೋದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಆದ್ರೆ ಬೆಳಗ್ಗೆ ಗ್ಯಾಸ್‌ ಹಚ್ಚುವಾಗ ಅಥವಾ ಲೈಟ್‌ ಆನ್‌ ಮಾಡಿದಾಗ ಗ್ಯಾಸ್‌ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಗೇಪಲ್ಲಿ ಕೃಷ್ಣಮ್ಮ-ರಾಜು ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಎಂದು ತಿಳಿದು ಬಂದಿದೆ.

ಇನ್ನೂ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಲವರ್ಸ್ ಡೇ ದಿನದಂದೇ ದುರಂತ; ಶೂಟ್ ಮಾಡಿಕೊಂಡು ಕಾರಿನಲ್ಲೇ ಯುವ ಪ್ರೇಮಿಗಳು ಸೂಸೈಡ್

0

ಲಕ್ನೋ:- ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರೇಮಿಗಳ ದಿನದಂದೇ ದುರಂತವೊಂದು ನಡೆದಿದ್ದು, ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹಗಳನ್ನು ಕಂಡು ತಕ್ಷಣ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಪರಿಶೀಲನೆ ವೇಳೆ, ಇಬ್ಬರೂ ಗುಂಡೇಟಿಗೆ ಬಲಿಯಾದರೆಂದು ದೃಢಪಟ್ಟಿದ್ದು, ಯುವಕ ಮೊದಲು ಯುವತಿಗೆ ಗುಂಡು ಹಾರಿಸಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವಕನ ಕೈಯಿಂದ ಪಿಸ್ತೂಲ್ ವಶಪಡಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೀದರ್| ಸ್ಪಾ ಅಡ್ಡೆ ಮೇಲೆ ಖಾಕಿ ದಾಳಿ; ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್!

0

ಬೀದರ್: ಬೀದರ್ ನಗರದ ಶಿವನಗರದಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೀದರ್ ಪೊಲೀಸರು ಭರ್ಜರಿ ದಾಳಿ ನಡೆಸಿ, ಹೊರರಾಜ್ಯದ ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಮಹಾರಾಷ್ಟ್ರ, ಅಸ್ಸಾಂ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಬಂದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ .ಸ್ಪಾ ಅಡ್ಡೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗದ ಹಸ್ತಾಂತರಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಬೀದರ್ ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ನೂತನ ಠಾಣೆಯ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಯಶಸ್ವಿಯಾಗಿ ನಡೆಸಿದರು.

ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಪ್ರೋತ್ಸಾಹಿಸಿ: ಡಾ. ವೇದಾ ವಿಕ್ರಮ ಬಿದರೂರ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಶೇಷ ಅಗತ್ಯವುಳ್ಳ ಮಕ್ಕಳ ಬಗ್ಗೆ ಅನುಕಂಪ ಬೇಡ. ಅವರಿಗೂ ಎಲ್ಲ ರೀತಿಯ ಅವಕಾಶ ನೀಡಿದರೆ ಅವರೂ ಸಹ ಸಾಮಾನ್ಯ ಮಕ್ಕಳಂತೆ ಪ್ರತಿಭಾನ್ವಿತರಾಗಿ ಹೊರಹೊಮ್ಮುವರು ಎಂದು ಜನಚೇತನ ಶಿಕ್ಷಣ ಸಮಿತಿಯ ವ್ಯವಸ್ಥಾಪಕ ನಿರ್ದೇಶಕಿ ಡಾ. ವೇದಾ ವಿಕ್ರಮ ಬಿದರೂರ ಹೇಳಿದರು.

ಅವರು ಶನಿವಾರ ನಗರದ ಅರುಣೋದಯ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅಗತ್ಯವುಳ್ಳ ಮಕ್ಕಳ ಬಗ್ಗೆ ಪಾಲಕರು ಹೆಚ್ಚಿನ ಹಾಗೂ ವಿಶೇಷ ಕಾಳಜಿ ವಹಿಸುವುದು ಅವಶ್ಯ. ಇಂತಹ ಮಕ್ಕಳನ್ನು ಪಾಲಕರಿಗಿಂತ ಅರುಣೋದಯ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕಿಯರು ಬಹಳಷ್ಟು ಪ್ರೀತಿಯಿಂದ ಸಂಬಾಳಿಸುವ ಮೂಲಕ ಅವರನ್ನು ಶಿಸ್ತಿಗೆ ಒಳಪಡಿಸುವಲ್ಲಿ, ನಿಯಂತ್ರಿಸುವಲ್ಲಿ ನಿಪುಣರಾಗಿದ್ದಾರೆ. ಒಂದರ್ಥದಲ್ಲಿ ಇವರುಗಳೇ ‘ರಿಯಲ್ ಹೀರೋ’ ಎಂದು ಬಣ್ಣಿಸಿದರು.

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಶ್ಯಕವಿರುವ ಎಲ್ಲ ರೀತಿಯ ಸಹಾಯಕ ಸೌಲಭ್ಯಗಳು, ಸಲಕರಣೆಗಳು, ಆರೋಗ್ಯ ತಪಾಸಣೆ, ಫಿಜಿಯೋಥೆರಪಿ ಸೇರಿದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾದ ಕ್ರಮಗಳನ್ನು ಈ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದು ಅಭಿನಂದನೀಯ ಎಂದರು.

ಇನ್ನೋರ್ವ ಮುಖ್ಯ ಅತಿಥಿ ಕಂಚನ್‌ದೇವಿ ಓಸ್ವಾಲ್ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳ ಸೇವೆ ಎಂದರೆ ಅದು ದೇವರ ಸೇವೆಯೇ ಸರಿ. ಇಂತಹ ಮಕ್ಕಳು ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ಹೊಂದುವವರಾಗುತ್ತಾರೆ ಎಂದರು.

ವೇದಿಕೆ ಮೇಲೆ ಉಪಸ್ಥಿತರಿದ್ದ ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್‌ನ ವಿಶ್ವಸ್ಥರಾದ ಶ್ರೀಕೃಷ್ಣ ಕುಲಕರ್ಣಿ ಅವರು ಮಾತನಾಡಿ, ಸಮಾಜಮುಖಿ ಹಾಗೂ ಜನಮುಖಿ ಕಾರ್ಯಗಳನ್ನು ಮಾಡಲು ಸ್ಥಾಪನೆಗೊಂಡಿರುವ ಸೇವಾ ಭಾರತಿ ಸಂಸ್ಥೆ ಬೇರೆ ಬೇರೆ ರೀತಿಯಲ್ಲಿ ಮಾನವೀಯ ಕಾರ್ಯಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡಿದೆ. ಹಿರಿಯ ಸಾಧಕರು ಹಾಗೂ ಅನುಭಾವಿಗಳು ಈ ಸಂಸ್ಥೆಯ ಮೂಲಕ ವಿಧಾಯಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಈ ಕ್ಷೇತ್ರದಲ್ಲಿ ಆಸಕ್ತಿಯುಳ್ಳವರನ್ನು ಸೇರಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಶೇಷ ಅಗತ್ಯವುಳ್ಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ. ಉಮೇಶ್ ಹಾದಿ ಸ್ವಾಗತಿಸಿದರು. ಕಾರ್ಯದರ್ಶಿ ಜಯರಾಜ ಮುಳಗುಂದ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾರಂಭದಲ್ಲಿ ಜಿತೇಂದ್ರ ಶಹಾ, ಬಸವರಾಜ ನಾಗಲಾಪೂರ, ಬಸವರಾಜ ಪಟ್ಟಣಶೆಟ್ಟಿ, ಮಂಜುನಾಥ ಚನ್ನಪ್ಪನವರ, ಮಲ್ಲಿಕಾರ್ಜುನ ಬೆಲ್ಲದ, ಮಲ್ಲಿಕಾರ್ಜುನ ನಾಗಲಾಪೂರ ಸೇರಿದಂತೆ ಪಾಲಕರು, ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅರುಣೋದಯ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯ ಉಪಾಧ್ಯಕ್ಷ ಲುಕ್ಕಣಸಾ ರಾಜೋಳಿ ಮಾತನಾಡಿ, ಗದಗ ಪರಿಸರದಲ್ಲಿ ಪ್ರತಿಷ್ಠಿತ ಶಾಲೆಯಾಗಿ ಹೊರಹೊಮ್ಮಿದ್ದು, ವಿಶೇಷ ಮತ್ತು ವಿಶಿಷ್ಟ ರೀತಿಯ ಕಾರ್ಯ ಮಾಡುತ್ತಿದೆ. ಈ ಶಾಲೆಗೆ ಹಲವಾರು ಸಂಘ-ಸಂಸ್ಥೆಗಳು ಹಾಗೂ ಗಣ್ಯರು ಸಹಾಯ-ಸಹಕಾರ ನೀಡುತ್ತಿರುವುದು ಅಭಿನಂದನೀಯ. ಈ ಸಹಕಾರ ಮುಂದುವರಿಯಲಿ ಎಂದು ಹೇಳಿದರು.

ಲಕ್ಷ್ಮೇಶ್ವರ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಯಳವತ್ತಿಯಲ್ಲಿ ಶನಿವಾರ ಲಕ್ಷ್ಮೇಶ್ವರ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳಿಗ್ಗೆ ತಾಯಿ ಭುವನೇಶ್ವರಿ ಅವರ ಭಾವಚಿತ್ರ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು.

ಗ್ರಾಮದ ಹಿರಿಯರಾದ ಮೃತ್ಯುಂಜಯ ಶಿದ್ರಾಮಯ್ಯ ಹಿರೇಮಠ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ಮೆರವಣಿಗೆಗೆ ಚಾಲನೆ ನೀಡಿದರು.

ಅಲಂಕೃತ ಸಾರೋಟದಲ್ಲಿ ಸಮ್ಮೇಳನಾಧ್ಯಕ್ಷರಾದ ಲಲಿತ ಸಿ. ಕೆರಿಮನಿ ಅವರ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ವಾದ್ಯಮೇಳದೊಂದಿಗೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪ್ರಾರಂಭಗೊಂಡ ಮೆರವಣಿಗೆ ಬಸ್ ನಿಲ್ದಾಣ, ಪೇಟೆ ಆವರಣ, ಗುಡ್ಡಳ್ಳಿ ಓಣಿ, ಗೋಣಿಸ್ವಾಮಿ ಓಣಿ, ವಾಲ್ಮೀಕಿ ಓಣಿ, ಅಂಬೇಡ್ಕರ್ ನಗರ, ಉಡಚಮ್ಮ ದೇವಸ್ಥಾನ, ಮೈಲಾರಲಿಂಗೇಶ್ವರ ದೇವಸ್ಥಾನ, ಕನ್ನಡ ಗಂಡು ಮಕ್ಕಳ ಶಾಲೆ ಮೂಲಕ ಕೋಟೆ ಆವರಣದಲ್ಲಿನ ಗುಂಡೇಶ್ವರ ಮಹಾವೇದಿಕೆ ತಲುಪಿ ಸಂಪನ್ನಗೊಂಡಿತು.

ಮೆರವಣಿಗೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಕಸಾಪ ತಾಲೂಕು ಅಧ್ಯಕ್ಷ ಈಶ್ವರ ಮೆಡ್ಲೇರಿ, ತಾ.ಪಂ. ಇಒ ಧರ್ಮರಾಜ ಕೃಷ್ಣಪ್ಪ, ಬಿಇಒ ನಾಣಕಿ ನಾಯ್ಕ, ವಿರೂಪಾಕ್ಷಪ್ಪ ಮೇಟಿ, ಡಾ. ಎಸ್.ಕೆ. ಪಾಟೀಲ, ಅಶೋಕಗೌಡ ಪಾಟೀಲ, ಶಿವಣ್ಣ ಗಾಣಗೇರ, ಬಾಪುಗೌಡ ಭರಮಗೌಡ್ರ, ಫಕ್ಕೀರಗೌಡ ಪಾಟೀಲ, ವಸಂತ ಬಾಗೇವಾಡಿ, ಮುತ್ತಣ್ಣ ನವಲಗುಂದ, ಶಿವಯೋಗಿ ಹೊಸಕೇರಿ, ಗೀತಾ ಸುರೇಶ್ ಬೀರಣ್ಣವರ, ಮೈನು ಗಮ್ಮಣ್ಣವರ, ಗಿರೀಶ ಸಜ್ಜನ, ಬಿ.ಕೆ. ಗಡೆಪ್ಪನವರ, ಅಶೋಕ ಬಿಸೆರೊಟ್ಟಿ, ಹೆಚ್.ಎಸ್. ರಾಮನಗೌಡ್ರ, ಮಂಜುನಾಥ ಕರೆಗೌಡ್ರ, ಸತೀಶ ಪತ್ತಾರ, ಜಿ.ಎಫ್. ಡೊಂಬರ, ಶಂಕರ ಮಿಸ್ಕಿನ್, ಡಿ.ಎನ್. ಶಿರುಂಜ, ಯಳವತ್ತಿಯ ಅರವಿಂದೋ ವಿದ್ಯಾಮಂದಿರ ಶಾಲೆ, ಜನನಿ ಶಾಲೆ, ಸರ್ಕಾರಿ ಹಿರಿಯ ಕನ್ನಡ ಹೆಣ್ಣುಮಕ್ಕಳ ಶಾಲೆ, ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ, ಜಗದ್ಗುರು ಪಕ್ಕೀರ ಚನ್ನವೀರೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ರಾಜರಾಜೇಶ್ವರಿ ಮಹಿಳಾ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆ, ಕದಳಿ ವೇದಿಕೆ, ಅಕ್ಕನ ಬಳಗದ ಸದಸ್ಯರು, ಗ್ರಾಮದ ಹಿರಿಯರು ಮತ್ತು ಯುವಕರು ಪಾಲ್ಗೊಂಡಿದ್ದರು.

ಮೆರವಣಿಗೆಯಲ್ಲಿ ಗ್ರಾಮದ ಎಲ್ಲ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಕನ್ನಡದ ಸಾಹಿತಿಗಳು, ಕವಿಗಳು, ವಚನಕಾರರು, ದಾಸಶ್ರೇಷ್ಠರು, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣಗಳನ್ನು ಧರಿಸಿ ಮೆರವಣಿಗೆಯ ರಂಗು ಹೆಚ್ಚಿಸಿದರು. ಪೂರ್ಣಕುಂಭ, ಡೊಳ್ಳು, ಜಾಂಜ್ ಹಾಗೂ ವಾದ್ಯಮೇಳದೊಂದಿಗೆ ಕನ್ನಡ ಸಾಹಿತ್ಯಾಭಿಮಾನಿಗಳು ಹೆಜ್ಜೆ ಹಾಕಿದರು.

ಮೆರವಣಿಗೆ ಮಾರ್ಗದಲ್ಲಿ ರಂಗೋಲಿ ಹಾಕಿ ಬ್ಯಾನರ್‌ಗಳು ಹಾಗೂ ತಳಿರು-ತೋರಣಗಳನ್ನು ಕಟ್ಟಿ ಸ್ವಾಗತಿಸಲಾಗಿತ್ತು. ಲಕ್ಷ್ಮೇಶ್ವರ ಸ್ಕೂಲ್ ಚಂದನ ಬ್ಯಾಂಡ್ ವಿದ್ಯಾರ್ಥಿಗಳು ಮೆರವಣಿಗೆಗೆ ಕಳೆ ತಂದಿದ್ದರು. ಮೆರವಣಿಗೆಯುದ್ದಕ್ಕೂ ಕನ್ನಡದ ಘೋಷಣೆಗಳು ಮೊಳಗಿದವು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಲಿ: ಸರ್ವಾಧ್ಯಕ್ಷೆ ಲಲಿತಕ್ಕ ಅಭಿಮತ

0

ಲಕ್ಷ್ಮೇಶ್ವರ: ಕರ್ನಾಟಕ ನೆಲದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಬೇಕು ಎಂಬುದು ಕೇವಲ ಘೋಷವಾಕ್ಯವಲ್ಲ, ನಾಡಿನ ನಿಜಸ್ವರೂಪವಾಗಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಲಲಿತಕ್ಕ ಕೆರಿಮನಿ ಅಭಿಪ್ರಾಯಪಟ್ಟರು.

ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಕನ್ನಡವು ಕೇವಲ ಒಂದು ಭಾಷೆಯಲ್ಲ; ಅದು ಈ ನೆಲದ ಸಂಸ್ಕೃತಿ, ಸಂಸ್ಕಾರ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಶಕ್ತಿ ಎಂದು ಹೇಳಿದರು.

ಪ್ರತಿಯೊಬ್ಬ ಕನ್ನಡಿಗನಲ್ಲೂ ಭಾಷೆಯ ಬಗ್ಗೆ ಅಭಿಮಾನ ಮತ್ತು ಸ್ವಾಭಿಮಾನ ಅಂತರ್ಗತವಾಗಿರಬೇಕು ಎಂದರು. ಪ್ರಾಂತೀಯ ಹೆಸರಿನಲ್ಲಿ ವಿಭಜನೆಯಾಗಿದ್ದ ನಾಡು ಹಾಗೂ ಕನ್ನಡಿಗರನ್ನು ಒಂದೇ ಸೂರಿನಡಿ ಸೇರಿಸಲು ಹೋರಾಡಿದ ಮಹನೀಯರನ್ನು ಆದರ್ಶವಾಗಿಟ್ಟುಕೊಂಡು ನಾಡು-ನುಡಿಯ ರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಕರೆ ನೀಡಿದರು.

ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡು-ನುಡಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಕನ್ನಡದ ಬಗ್ಗೆ ಗೌರವಾಭಿಮಾನ ಬೆಳೆಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಕರು, ಶಿಕ್ಷಕರು, ಕಸಾಪ ಹಾಗೂ ಕನ್ನಡ ಸಂಘಟನೆಗಳ ಜವಾಬ್ದಾರಿ ಹೆಚ್ಚಾಗಿದೆ ಎಂದರು.

“ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡಿಗವಾಗಿರು” ಎಂಬ ಕುವೆಂಪು ಅವರ ಕವಿವಾಣಿಯಂತೆ ಪ್ರತಿಯೊಬ್ಬ ಕನ್ನಡಿಗನ ಮನದಾಳದಲ್ಲಿ ಕನ್ನಡ ಮಿಡಿಯಬೇಕು. ಕನ್ನಡ ಪ್ರೀತಿಸುವುದು, ಬೆಳೆಸುವುದು ಮತ್ತು ಗೌರವಿಸುವುದೇ ನಿಜವಾದ ನಾಡಭಕ್ತಿ ಎಂದು ಅಭಿಪ್ರಾಯಪಟ್ಟರು.

ಮಕ್ಕಳಲ್ಲಿ ಕನ್ನಡ ಪುಸ್ತಕ ಓದುವ ಹವ್ಯಾಸ ಬೆಳೆಸಲು ಶಾಲೆಗಳಲ್ಲಿ ಕಡ್ಡಾಯವಾಗಿ ಗ್ರಂಥಾಲಯಗಳನ್ನು ತೆರೆಯಬೇಕು. ಉತ್ತಮ ಪುಸ್ತಕಗಳ ಓದು ಮಕ್ಕಳ ಜ್ಞಾನವಿಕಾಸಕ್ಕೆ ಕಾರಣವಾಗುತ್ತದೆ. ಆಡಳಿತ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕನ್ನಡ ಬಳಕೆ ಹೆಚ್ಚಾಗಬೇಕು. ಭಾಷೆಯನ್ನು ಉಳಿಸುವುದು ಎಂದರೆ ನಮ್ಮ ಗುರುತು, ಆತ್ಮಗೌರವ ಮತ್ತು ಭವಿಷ್ಯವನ್ನು ಉಳಿಸುವುದಾಗಿದೆ ಎಂದರು.

ಐತಿಹಾಸಿಕ ಹಿನ್ನೆಲೆಯ ಯಳವತ್ತಿ ಗ್ರಾಮದಲ್ಲಿ ನಡೆದ ಸಮ್ಮೇಳನಕ್ಕೆ ಮಹಿಳೆಗೆ ಸರ್ವಾಧ್ಯಕ್ಷ ಸ್ಥಾನ ನೀಡಿರುವುದು ಶ್ಲಾಘನೀಯ ಕಾರ್ಯ. ಈ ಗೌರವ ನೀಡಿದ ಯಳವತ್ತಿ ಮಹಾಜನತೆ ಹಾಗೂ ಕಸಾಪ ಘಟಕಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ಕನ್ನಡ ಸಾರಸ್ವತ ಲೋಕಕ್ಕೆ ಪುಲಿಗೆರೆ ಪ್ರದೇಶದ ಕೊಡುಗೆ ಅಪಾರವಾಗಿದೆ. ಸಾಹಿತ್ಯ ಚಟುವಟಿಕೆಗಳಿಗೆ ಪೂರಕ ವಾತಾವರಣವಿರುವ ತಾಲೂಕಿನಲ್ಲಿ ಕನ್ನಡ ಮನಸ್ಸುಗಳು ಒಂದಾಗಿ ತಾಯಿ ಭಾಷೆ, ನೆಲ-ಜಲ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಸಜ್ಜಾಗಬೇಕು. ಕನ್ನಡಿಗರ ಪ್ರತಿನಿಧಿಕ ಸಂಸ್ಥೆಯಾದ ಕಸಾಪ ಈ ದಿಸೆಯಲ್ಲಿ ಅವಿರತ ಶ್ರಮಿಸುತ್ತಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಮೆರೆಯಬೇಕು. ಕನ್ನಡಕ್ಕೆ ಆ ತಾಕತ್ತು ಮತ್ತು ಸಾಮರ್ಥ್ಯವಿದೆ.

ಲಲಿತಕ್ಕ ಕೆರಿಮನಿ, ಸರ್ವಾಧ್ಯಕ್ಷೆ,
ಕನ್ನಡ ಸಾಹಿತ್ಯ ಸಮ್ಮೇಳನ, ಯಳವತ್ತಿ.

ಕನ್ನಡ ಮಾಧ್ಯಮ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ
ಅರ್ಹ ಶಿಕ್ಷಕರನ್ನು ನೇಮಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕು. ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲೇ ಇರಬೇಕು. ಸಾಹಿತ್ಯ ಭವನ, ರಂಗಮಂದಿರ, ಕ್ರೀಡಾಂಗಣ, ಪ್ರವಾಸಿ ತಾಣಗಳ ಅಭಿವೃದ್ಧಿ, ನೀರಾವರಿ ಯೋಜನೆಗಳ ಜೊತೆಗೆ ಹಳ್ಳಿಯ ಸಂಸ್ಕೃತಿ ಉಳಿವಿಗಾಗಿ ಭಜನಾ ಮಂಡಳಿ ಹಾಗೂ ಕಲಾತಂಡಗಳಿಗೆ ಸರ್ಕಾರ ಧನಸಹಾಯ ನೀಡಿ ಪ್ರೋತ್ಸಾಹಿಸಬೇಕು ಎಂದು ಲಲಿತಕ್ಕ ಕೆರಿಮನಿ ಒತ್ತಾಯಿಸಿದರು.

error: Content is protected !!