Home Blog Page 2

ಜನರ ಆಕ್ರೋಶಕ್ಕೆ ಎಚ್ಚೆತ್ತ ಪಂಚಾಯಿತಿ: 35 ಮಿನಿ ಟ್ಯಾಂಕ್ ಸ್ವಚ್ಛತೆ, ಪೈಪ್‌ಲೈನ್ ದುರಸ್ತಿ ಆರಂಭ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸ್ವಚ್ಛತೆ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಲಕ್ಕುಂಡಿ ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಂಡಿದ್ದು, ಗ್ರಾಮದಲ್ಲಿ ಮಿನಿ ಟ್ಯಾಂಕ್‌ಗಳ ಸ್ವಚ್ಛತೆ, ಪೈಪ್‌ಲೈನ್ ಹಾಗೂ ಕೊಳವೆಬಾವಿ ದುರಸ್ತಿ ಕಾರ್ಯವನ್ನು ಭರದಿಂದ ಆರಂಭಿಸಿದೆ.

ಕಳೆದ ಜೂನ್ 5ರಂದು ನಡೆದ ಗ್ರಾಮ ಸಭೆಯಲ್ಲಿ, ಪೈಪ್‌ಲೈನ್ ಮತ್ತು ಕೊಳವೆಬಾವಿ ದುರಸ್ತಿ ನಿರ್ಲಕ್ಷ್ಯದಿಂದ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಗ್ರಾಮದ ಹೊರವಲಯ ಅಸ್ವಚ್ಛತೆಯಿಂದ ಕೂಡಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಇದರ ಪರಿಣಾಮವಾಗಿ ಗ್ರಾಮ ಪಂಚಾಯಿತಿ ತುರ್ತು ಸಭೆ ನಡೆಸಿ ಕ್ರಮ ಕೈಗೊಂಡಿದೆ.

ಗ್ರಾಮದ ವಾರ್ಡ್‌, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಒಟ್ಟು 35 ಮಿನಿ ಟ್ಯಾಂಕ್‌ಗಳನ್ನು ಪಂಚಾಯಿತಿ ಸಿಬ್ಬಂದಿಯಿಂದ ಸ್ವಚ್ಛಗೊಳಿಸಿ ಸುಣ್ಣ ಹಚ್ಚುವ ಕಾರ್ಯ ಆರಂಭಿಸಲಾಗಿದೆ. ಜಂತ್ಲಿ-ಶಿರೂರು ರಸ್ತೆಯ ಕೊಳವೆಬಾವಿಯಿಂದ ನೀರು ಪೂರೈಕೆಯಾಗುವ ಪೈಪ್‌ಲೈನ್‌ಗಳ ದುರಸ್ತಿ ಕಾರ್ಯವೂ ಪ್ರಗತಿಯಲ್ಲಿದೆ.

ಕುಡಿಯುವ ನೀರಿನ ಟ್ಯಾಂಕ್‌ಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿ, ಸುಣ್ಣ-ಬಣ್ಣ ಬಳಿದು ಸುಂದರಗೊಳಿಸುತ್ತಿರುವ ಪಂಚಾಯಿತಿ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಗ್ರಾಮದಲ್ಲಿ ಒಟ್ಟು 11 ವಾರ್ಡ್‌ಗಳಿದ್ದು, 1ರಿಂದ 5 ಹಾಗೂ 11ನೇ ವಾರ್ಡ್‌ಗಳಿಗೆ ಈಗಾಗಲೇ 2-3 ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ. ಆದರೆ 6ರಿಂದ 10ನೇ ವಾರ್ಡ್‌ಗಳಿಗೆ 8ರಿಂದ 12 ದಿನಕ್ಕೊಮ್ಮೆ ಮಾತ್ರ ನೀರು ಬರುತ್ತಿರುವುದು ಗ್ರಾಮ ಸಭೆಯಲ್ಲಿ ಬೆಳಕಿಗೆ ಬಂದಿತ್ತು.

ಈ ಕುರಿತು ಮಾತನಾಡಿದ ಆಡಳಿತಾಧಿಕಾರಿ ಶರಣು ಗೋಗೇರಿ, ಹೆಚ್ಚು ಕುಟುಂಬಗಳಿರುವ 6ರಿಂದ 10ನೇ ವಾರ್ಡ್‌ನಲ್ಲಿ 35 ವಾಲ್‌ಗಳಿದ್ದು, ಇಲ್ಲಿ ಇಬ್ಬರು ವಾಲ್‌ಮನ್‌ಗಳನ್ನು ನೇಮಕ ಮಾಡಿ ಅವರಿಗೆ ನಿಗದಿತ ಸಮಯ ವಹಿಸಲಾಗಿದೆ. ಇನ್ನು ಮುಂದೆ ಕನಿಷ್ಠ ನಾಲ್ಕು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಗ್ರಾಮಕ್ಕೆ ಪ್ರತಿದಿನ ಸುಮಾರು 9 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು, ಪ್ರಸ್ತುತ ತುಂಗಭದ್ರಾ ನದಿ ಪಾತ್ರದಿಂದ 5 ಲಕ್ಷ ಲೀಟರ್ ನೀರು ಮಾತ್ರ ಲಭ್ಯವಾಗುತ್ತಿದೆ. ಉಳಿದ 4 ಲಕ್ಷ ಲೀಟರ್ ನೀರನ್ನು ಗ್ರಾಮದ ಕೊಳವೆಬಾವಿ ಸಂಪನ್ಮೂಲಗಳಿಂದ ಪೂರೈಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಿಡಿಒ ಡಾ. ಅಮೀರನಾಯಕ ಮಾಹಿತಿ ನೀಡಿದರು.

ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅನೈರ್ಮಲ್ಯ ತಪ್ಪಿಸಲು ಗ್ರಾಮದ ವಿವಿಧ ಭಾಗಗಳ ಮಿನಿ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ ಪರಿಸರ ಸುಂದರವಾಗಿಡುವ ಅಭಿಯಾನವನ್ನು ಆರಂಭಿಸಲಾಗಿದೆ ಎಂದರು.

 “ಒಂದು ವಾರದೊಳಗೆ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.”

ಶರಣು ಗೋಗೇರಿ

 

ವರುಣನ ಅಬ್ಬರಕ್ಕೆ 8 ಮನೆಗಳು ನೆಲಸಮ; ಮುಗಿಲು ಮುಟ್ಟಿದ ಕುಟುಂಬಗಳ ಆಕ್ರಂದನ!

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಭಾರೀ ಹಾನಿ ಉಂಟಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಓಣಿಯಲ್ಲಿ ಸುರಿದ ಧಾರಾಕಾರ ಮಳೆಗೆ ಒಂದೇ ಪ್ರದೇಶದಲ್ಲಿ ಎಂಟು ಮನೆಗಳು ಕುಸಿದು ಬಿದ್ದಿವೆ.

ಮನೆಗಳು ಕುಸಿದ ವೇಳೆ ಒಳಗಿದ್ದ ನಿವಾಸಿಗಳು ಸಮಯಕ್ಕೆ ಹೊರಬಂದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೃಷ್ಟವಶಾತ್ ಎಂಟು ಮನೆಗಳಲ್ಲಿದ್ದ ಕುಟುಂಬಗಳು ಪವಾಡ ಸದೃಶವಾಗಿ ಪಾರಾಗಿವೆ.

ಕುಸಿದ ಮನೆಗಳಲ್ಲಿ ವಾಸಿಸುತ್ತಿದ್ದವರು ಬಹುತೇಕ ಕೂಲಿ ಕಾರ್ಮಿಕರಾಗಿದ್ದು, ಮಳೆಯ ಅವಾಂತರದಿಂದ ಬಟ್ಟೆ, ದವಸ-ಧಾನ್ಯ, ಹಣ, ಪ್ರಮುಖ ದಾಖಲೆಗಳು ಸೇರಿದಂತೆ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಮಣ್ಣಿನಡಿ ಹುದುಗಿವೆ. ಉಟ್ಟ ಬಟ್ಟೆ ಹೊರತುಪಡಿಸಿ ಉಳಿದ ಎಲ್ಲವನ್ನೂ ಕಳೆದುಕೊಂಡಿರುವ ಕುಟುಂಬಗಳು ಇದೀಗ ಸಂಕಷ್ಟಕ್ಕೆ ಸಿಲುಕಿವೆ.

ಮನೆ ಕಳೆದುಕೊಂಡ ಕುಟುಂಬಗಳು ಬೀದಿಗೆ ಬಿದ್ದಿದ್ದು, ತಮ್ಮ ನೋವನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡು ಕಣ್ಣೀರು ಹಾಕಿವೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರವಿಗೆ ಧಾವಿಸಿ ಪರಿಹಾರ ಒದಗಿಸಬೇಕೆಂದು ಸಂತ್ರಸ್ತರು ಮನವಿ ಮಾಡಿದ್ದಾರೆ.

ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಳೆಯ ಹಾಗೂ ಶಿಥಿಲಾವಸ್ಥೆಯ ಮನೆಗಳಲ್ಲಿ ವಾಸಿಸುವವರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಹಸಿವಾದಾಗ ಕೋಪ ಯಾಕೆ ಬರುತ್ತದೆ? ಇದರ ಹಿಂದಿದೆ ವೈಜ್ಞಾನಿಕ ಕಾರಣ

ಆಹಾರವು ಮಾನವನ ದೇಹಕ್ಕೆ ಅತ್ಯಗತ್ಯವಾದ ಮೂಲಭೂತ ಅವಶ್ಯಕತೆಯಾಗಿದೆ.

ದೇಹಕ್ಕೆ ಶಕ್ತಿ ಒದಗಿಸುವ ಆಹಾರ ಸಮಯಕ್ಕೆ ಸಿಗದಿದ್ದರೆ ಅಥವಾ ಹೆಚ್ಚು ಹೊತ್ತು ಹೊಟ್ಟೆ ಖಾಲಿಯಾಗಿದ್ದರೆ ಅನೇಕರು ಕಿರಿಕಿರಿ, ಅಸಹನೆ ಮತ್ತು ಕೋಪವನ್ನು ಅನುಭವಿಸುತ್ತಾರೆ. ಹಸಿವಾದಾಗ ಸಣ್ಣಪುಟ್ಟ ವಿಷಯಗಳಿಗೂ ಕೋಪಗೊಳ್ಳುವ ಈ ಸ್ಥಿತಿಯ ಹಿಂದೆ ವೈಜ್ಞಾನಿಕ ಕಾರಣಗಳಿವೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ನಾವು ಹೆಚ್ಚು ಸಮಯ ಆಹಾರ ಸೇವಿಸದೇ ಇದ್ದಾಗ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಗ್ಲೂಕೋಸ್ ದೇಹ ಮತ್ತು ಮೆದುಳಿಗೆ ಪ್ರಮುಖ ಶಕ್ತಿಯ ಮೂಲವಾಗಿರುವುದರಿಂದ ಅದರ ಪ್ರಮಾಣ ಕಡಿಮೆಯಾದಾಗ ದೇಹವು ಅದನ್ನು ಸಮತೋಲನಕ್ಕೆ ತರಲು ಕಾರ್ಟಿಸೋಲ್ ಮತ್ತು ಅಡ್ರಿನಾಲಿನ್ ಎಂಬ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಈ ಹಾರ್ಮೋನ್‌ಗಳು ಒತ್ತಡ ಮತ್ತು ತುರ್ತು ಪ್ರತಿಕ್ರಿಯೆಗಳಿಗೆ ಕಾರಣವಾಗುವುದರಿಂದ ವ್ಯಕ್ತಿಯಲ್ಲಿ ಕೋಪ, ಅಸಹನೆ ಮತ್ತು ಕಿರಿಕಿರಿ ಹೆಚ್ಚಾಗಬಹುದು.

ಗ್ಲೂಕೋಸ್ ಮಟ್ಟ ಇಳಿದಾಗ ಮೆದುಳಿನ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ವಿಶೇಷವಾಗಿ ಭಾವನೆಗಳು ಮತ್ತು ನಡವಳಿಕೆಯನ್ನು ನಿಯಂತ್ರಿಸುವ ಮೆದುಳಿನ ಭಾಗಗಳು ಒತ್ತಡಕ್ಕೆ ಒಳಗಾಗುತ್ತವೆ. ಪರಿಣಾಮವಾಗಿ ಭಾವನೆಗಳನ್ನು ನಿಯಂತ್ರಿಸುವ ಸಾಮರ್ಥ್ಯ ಕಡಿಮೆಯಾಗಿ, ಸಣ್ಣ ವಿಷಯಗಳಿಗೂ ವ್ಯಕ್ತಿ ಅತಿಯಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಹೆಚ್ಚುತ್ತದೆ.

ಹಸಿವಿನ ಸಮಯದಲ್ಲಿ ಕೋಪದ ಜೊತೆಗೆ ಗಮನ ಕೇಂದ್ರೀಕರಿಸಲು ಕಷ್ಟವಾಗುವುದು, ತಲೆನೋವು, ಆಯಾಸ, ಹೃದಯ ಬಡಿತ ಹೆಚ್ಚಾಗುವುದು ಮತ್ತು ಮನಸ್ಥಿತಿಯಲ್ಲಿ ಬದಲಾವಣೆ ಕಾಣಿಸಿಕೊಳ್ಳಬಹುದು. ಇವುಗಳೆಲ್ಲವೂ ದೇಹಕ್ಕೆ ಆಹಾರದ ಅಗತ್ಯವಿದೆ ಎಂಬ ಎಚ್ಚರಿಕೆಯ ಸಂಕೇತಗಳಾಗಿವೆ.

ತಜ್ಞರ ಪ್ರಕಾರ, ಹಸಿವಿನಿಂದ ಉಂಟಾಗುವ ಕಿರಿಕಿರಿ ಮತ್ತು ಕೋಪವನ್ನು ತಡೆಯಲು ನಿಯಮಿತ ಸಮಯಕ್ಕೆ ಆಹಾರ ಸೇವಿಸುವುದು ಅಗತ್ಯ. ದೀರ್ಘ ಸಮಯ ಹೊಟ್ಟೆ ಖಾಲಿ ಇರಿಸಿಕೊಳ್ಳದೇ ಸಣ್ಣ ಪ್ರಮಾಣದಲ್ಲಿ ಆರೋಗ್ಯಕರ ಆಹಾರ ಸೇವಿಸುವುದು ಉತ್ತಮ. ಹಣ್ಣುಗಳು, ಒಣಹಣ್ಣುಗಳು ಹಾಗೂ ಪೌಷ್ಟಿಕಾಂಶಯುಕ್ತ ತಿಂಡಿಗಳು ಗ್ಲೂಕೋಸ್ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ. ಜೊತೆಗೆ ಸಾಕಷ್ಟು ನೀರು ಕುಡಿಯುವುದರಿಂದ ದೇಹ ಹೈಡ್ರೇಟ್ ಆಗಿ ಉಳಿಯುತ್ತದೆ.

ಆರೋಗ್ಯ ತಜ್ಞರು ಜಂಕ್ ಫುಡ್‌ಗಳ ಸೇವನೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ, ಸಮತೋಲಿತ ಆಹಾರ ಪದ್ಧತಿಯನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಇದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ಥಿತಿಯೂ ಉತ್ತಮವಾಗಿರುತ್ತದೆ.

ದುನಿಯಾ ವಿಜಯ್‌ ಪ್ರತಿಭೆ, ಶಿಸ್ತು ನೋಡಿದರೆ ಗೌರವ ಹೆಚ್ಚಾಗುತ್ತದೆ: ವಿಜಯ್ ಸೇತುಪತಿ

ಕನ್ನಡ ಚಿತ್ರರಂಗದ ಮಾಸ್ ನಟ ದುನಿಯಾ ವಿಜಯ್ ಅವರ ಅಭಿನಯಕ್ಕೆ ಇದೀಗ ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಫಿದಾ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ನಟಿಸಿರುವ ‘ಸ್ಲಂ ಡಾಗ್’ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ವಿಜಯ್ ಸೇತುಪತಿ, ದುನಿಯಾ ವಿಜಯ್ ಬಗ್ಗೆ ಭಾವುಕರಾಗಿ ಮಾತನಾಡಿದ್ದು, ಅವರ ವೃತ್ತಿಪರತೆ ಮತ್ತು ನಟನಾ ಕೌಶಲ್ಯವನ್ನು ಕೊಂಡಾಡಿದ್ದಾರೆ.

“ದುನಿಯಾ ಸಿನಿಮಾ ಬಿಡುಗಡೆಯಾದಾಗಲೇ ವಿಜಯ್ ಅವರ ಹೆಸರು ನನ್ನ ಗಮನಕ್ಕೆ ಬಂದಿತ್ತು. ಆದರೆ ಅವರೊಂದಿಗೆ ಕೆಲಸ ಮಾಡಿದ ನಂತರ ಅವರ ನಿಜವಾದ ಸಾಮರ್ಥ್ಯ ಗೊತ್ತಾಯಿತು. ಪಾತ್ರಕ್ಕಾಗಿ ಅವರು ತೋರಿಸುವ ಸಮರ್ಪಣೆ, ಶ್ರಮ ಮತ್ತು ತಯಾರಿ ಅಸಾಧಾರಣ. ಪ್ರತಿಯೊಂದು ದೃಶ್ಯವನ್ನೂ ಇನ್ನಷ್ಟು ಪರಿಣಾಮಕಾರಿಯಾಗಿಸಲು ಅವರು ಸದಾ ಪ್ರಯತ್ನಿಸುತ್ತಾರೆ” ಎಂದು ವಿಜಯ್ ಸೇತುಪತಿ ಹೇಳಿದರು.

“ನಿರ್ದೇಶಕರು ಹೇಳಿದುದನ್ನು ಮಾತ್ರ ಮಾಡುವ ನಟ ಅವರು ಅಲ್ಲ. ಪಾತ್ರವನ್ನು ಅರ್ಥಮಾಡಿಕೊಂಡು, ಅದಕ್ಕೆ ತಮ್ಮದೇ ಆದ ಹೊಸ ಆಯಾಮ ನೀಡುತ್ತಾರೆ. ಪ್ರತಿ ಶಾಟ್‌ನಲ್ಲಿ ವಿಭಿನ್ನವಾಗಿ ಕಾಣಬೇಕು ಎನ್ನುವ ಹಸಿವು ಅವರಲ್ಲಿದೆ. ಅವರು ಅದ್ಭುತ ನಟ ಮಾತ್ರವಲ್ಲ, ಅತ್ಯುತ್ತಮ ವ್ಯಕ್ತಿಯೂ ಹೌದು. ಅವರ ಜೊತೆ ಕೆಲಸ ಮಾಡಿದ್ದು ನನಗೆ ಗೌರವದ ಸಂಗತಿ” ಎಂದು ಸೇತುಪತಿ ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರದ ನಿರ್ದೇಶಕ ಪುರಿ ಜಗನ್ನಾಥ್ ಕೂಡ ದುನಿಯಾ ವಿಜಯ್ ಅವರ ಅಭಿನಯವನ್ನು ಶ್ಲಾಘಿಸಿದ್ದು, ‘ಸ್ಲಂ ಡಾಗ್’ ಚಿತ್ರದಲ್ಲಿ ಅವರ ಪಾತ್ರ ಪ್ರೇಕ್ಷಕರಿಗೆ ದೊಡ್ಡ ಅಚ್ಚರಿ ನೀಡಲಿದೆ ಎಂದು ಹೇಳಿದ್ದಾರೆ.

ಭಿಕ್ಷುಕ ಮಾಫಿಯಾದ ಸುತ್ತ ಸಾಗುವ ಈ ಆ್ಯಕ್ಷನ್ ಡ್ರಾಮಾದಲ್ಲಿ ವಿಜಯ್ ಸೇತುಪತಿ, ದುನಿಯಾ ವಿಜಯ್, ಟಬು ಸೇರಿದಂತೆ ಹಲವು ಖ್ಯಾತ ಕಲಾವಿದರು ನಟಿಸಿದ್ದು, ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗಿದೆ.

ಬೆಳಗಾವಿ ವಂಚನೆ ಪ್ರಕರಣ: ನಟಿ ಸನ್ನಿ ಲಿಯೋನಿಗೆ ನೊಟೀಸ್ ನೀಡಿದ ಸಿಐಡಿ

ಬೆಂಗಳೂರು: ಬೆಳಗಾವಿ ಮೂಲದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಪ್ರಕರಣ ಇದೀಗ ಸಿನಿಮಾ ಕ್ಷೇತ್ರವನ್ನೂ ತಲುಪಿದೆ. ಸಾವಿರಾರು ಹೂಡಿಕೆದಾರರಿಗೆ ವಂಚನೆ ಎಸಗಿದ ಆರೋಪದಡಿ ಬಂಧಿತನಾಗಿರುವ ಶಿವಾನಂದ ನೀಲಣ್ಣವರ ವಿರುದ್ಧದ ತನಿಖೆಯಲ್ಲಿ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನಟಿ ಸನ್ನಿ ಲಿಯೋನ್ ಸೇರಿದಂತೆ ಹಲವು ನಟ-ನಟಿಯರಿಗೆ ಕರ್ನಾಟಕ ಸಿಐಡಿ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕರಿಂದ ಅಕ್ರಮವಾಗಿ ಸಂಗ್ರಹಿಸಲಾದ ಹಣವನ್ನು ಪ್ರಚಾರ ಕಾರ್ಯಕ್ರಮಗಳು ಹಾಗೂ ಸೆಲೆಬ್ರಿಟಿಗಳ ಪಾವತಿಗೆ ಬಳಸಲಾಗಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ವ್ಯವಹಾರಗಳ ವಿವರ ಪಡೆಯಲು ಚಿತ್ರರಂಗದ ಗಣ್ಯರನ್ನು ವಿಚಾರಣೆಗೆ ಕರೆಯಲು ಸಿಐಡಿ ನಿರ್ಧರಿಸಿದೆ.

ಸಿಐಡಿ ತನಿಖೆಯ ಪ್ರಕಾರ, ಶಿವಂ ಅಸೋಸಿಯೇಟ್ಸ್ ಮೂಲಕ 40,700 ಹೂಡಿಕೆದಾರರಿಂದ ಸುಮಾರು 2,400 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಅದರಲ್ಲಿ 540 ಕೋಟಿ ರೂಪಾಯಿಯನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದು, 170 ಕೋಟಿ ರೂಪಾಯಿ ನಷ್ಟವಾಗಿದೆ. ಈ ಸಂಪೂರ್ಣ ಜಾಲವನ್ನು ನಿರ್ವಹಿಸಲು ಆರೋಪಿ 30ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಬಳಸಿದ್ದಾನೆ.

ಹೊಸ ಹೂಡಿಕೆದಾರರಿಂದ ಬಂದ ಹಣವನ್ನು ಹಳೆಯ ಹೂಡಿಕೆದಾರರಿಗೆ ಲಾಭಾಂಶ ರೂಪದಲ್ಲಿ ನೀಡುವ ಪಾಂಜಿ ಮಾದರಿಯ ವಂಚನೆ ವ್ಯವಸ್ಥೆ ನಡೆಸಲಾಗುತ್ತಿತ್ತು. ಬಂಧನದ ಬಳಿಕವೂ ಕಂಪನಿಯ ಖಾತೆಗೆ ಸಾರ್ವಜನಿಕರು ಹಣ ಜಮಾ ಮಾಡಿರುವುದು ತನಿಖಾಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ. ಬಂಧನದ ನಂತರವೂ 5 ಕೋಟಿಗೂ ಹೆಚ್ಚು ಹಣ ಕಂಪನಿಯ ಖಾತೆಗೆ ವರ್ಗಾವಣೆಯಾಗಿದೆ.

ಪ್ರಕರಣದಲ್ಲಿ ಅಕ್ರಮ ಹಣದಿಂದ ಖರೀದಿಸಲಾದ ಆಸ್ತಿಗಳ ಜಾಡು ಹಿಡಿದಿರುವ ಸಿಐಡಿ, ಸುಮಾರು 55 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ವಾಹನಗಳು ಹಾಗೂ ಇತರೆ ಆಸ್ತಿಗಳ ಜಪ್ತಿಗೆ ಮುಂದಾಗಿದೆ. ವಿವಿಧ ರಾಜ್ಯಗಳಲ್ಲಿ ನೋಂದಾಯಿತ ವಾಹನಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಇದೀಗ ನಟಿ ಸನ್ನಿ ಲಿಯೋನ್ ಸೇರಿದಂತೆ ಹಣ ಪಡೆದಿರುವ ಸಿನಿಮಾ ಕ್ಷೇತ್ರದ ವ್ಯಕ್ತಿಗಳ ಬ್ಯಾಂಕ್ ವ್ಯವಹಾರಗಳ ಪರಿಶೀಲನೆಗೂ ಸಿಐಡಿ ಮುಂದಾಗಿದ್ದು, ಈ ಹೈಪ್ರೊಫೈಲ್ ತನಿಖೆ ಮತ್ತಷ್ಟು ದೊಡ್ಡ ಮಟ್ಟದ ಬಹಿರಂಗಪಡಿಸುವಿಕೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ನಕಲಿ ಸಹಿ ಹಗರಣ: ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ!

ಕೋಲ್ಕತ್ತಾ: ನಕಲಿ ಸಹಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಪಶ್ಚಿಮ ಬಂಗಾಳ ಸಿಐಡಿ ಅಧಿಕಾರಿಗಳು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ಅವರ ಪಕ್ಷದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳು ಮತ್ತು ಶಾಸಕರ ನಕಲಿ ಸಹಿ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು, ಕಾಲಿಘಾಟ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಕೋಲ್ಕತ್ತಾದ 30ಬಿ, ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ನಿವಾಸ ಮತ್ತು ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಮಾನ್ಯತೆಗಾಗಿ ಸ್ಪೀಕರ್‌ಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಕೆಲವು ತೃಣಮೂಲ ಕಾಂಗ್ರೆಸ್ ಶಾಸಕರ ಸಹಿಗಳನ್ನು ನಕಲಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಅಗತ್ಯ ಮಾಹಿತಿ ನೀಡುವಂತೆ ಸಿಐಡಿ ಈಗಾಗಲೇ ನೋಟಿಸ್ ಜಾರಿ ಮಾಡಿತ್ತು.

ಸಿಐಡಿ ನೀಡಿದ್ದ ನೋಟಿಸ್‌ಗೆ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ ಉತ್ತರದ ಆಧಾರದ ಮೇಲೆ ಮುಂದಿನ ತನಿಖಾ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಲ್ಲಿ ಮತ್ತೊಂದು ವೈರಸ್‌ ಆತಂಕ; 443 ಮಂದಿಗೆ ಸೋಂಕು ತಗುಲಿರುವ ಶಂಕೆ, ರಾಜ್ಯಾದ್ಯಂತ ಹೈ ಅಲರ್ಟ್‌ ಘೋಷಣೆ

ಕೇರಳ: ರಾಜ್ಯದಲ್ಲಿ ಶಿಗೆಲ್ಲಾ ಸೋಂಕು ವೇಗವಾಗಿ ಹರಡುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸೋಂಕಿನಿಂದ 4 ವರ್ಷದ ಮಗು ಮೃತಪಟ್ಟಿದ್ದು, 440ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ. ಸೋಂಕಿತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಯನಾಡ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಸೋಂಕು ಹೆಚ್ಚು ವ್ಯಾಪಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ವ್ಯಾಪ್ತಿಯ ನೆನ್ಮೇನಿ ಪಂಚಾಯಿತಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ.

ಕಳೆದ ವಾರ ಸುಲ್ತಾನ್ ಬತ್ತೇರಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಲ್ಲಿ ವಾಂತಿ, ಭೇದಿ ಹಾಗೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರು ಮಕ್ಕಳಿಗೆ ಶಿಗೆಲ್ಲಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಘಟನೆ ಬಳಿಕ ಸೋಂಕಿನ ವ್ಯಾಪ್ತಿಯನ್ನು ಪತ್ತೆಹಚ್ಚಲು ಆರೋಗ್ಯ ಇಲಾಖೆ ವ್ಯಾಪಕ ತಪಾಸಣೆ ಆರಂಭಿಸಿತು.

ಪ್ರಸ್ತುತ 337 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 443 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 68 ಮಂದಿ ಇನ್ನೂ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, 26 ಮಂದಿ ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚೆಗೆ ಮತ್ತಷ್ಟು 14 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ 163 ಮಂದಿಯನ್ನು ವಿಶೇಷ ನಿಗಾದಲ್ಲಿ ಇರಿಸಿದೆ. ಕೆಲವು ಮಕ್ಕಳಲ್ಲಿ ರೋಗಲಕ್ಷಣಗಳು ಮತ್ತೆ ಕಾಣಿಸಿಕೊಳ್ಳುತ್ತಿರುವ ಕಾರಣ ಅವರನ್ನು ಮರುದಾಖಲು ಮಾಡಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸೋಂಕು ಹರಡುವುದನ್ನು ತಡೆಯಲು ಶಾಲೆಗಳು, ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಅಗತ್ಯ ಔಷಧಿಗಳ ಕೊರತೆ ಉಂಟಾಗದಂತೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ದಾಸ್ತಾನು ಇಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಿಮ್ಮಪ್ಪನಿಂದಲೇ RSSಗೆ ಏನೂ ಮಾಡಲು ಆಗಲಿಲ್ಲ, ನಿಮ್ಮಿಂದ ಆಗುತ್ತಾ?: ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರ ಪ್ರತಿಕ್ರಿಯೆ ನೀಡಿದ್ದು, ನಿಮ್ಮ ತಂದೆಯಿಂದಲೇ ಆರ್‌ಎಸ್‌ಎಸ್‌ಗೆ ಏನೂ ಮಾಡಲು ಸಾಧ್ಯವಾಗಿಲ್ಲ, ನಿಮ್ಮಿಂದ ಏನು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಲವು ಸರ್ಕಾರಗಳು ಮತ್ತು ನಾಯಕರು ಆರ್‌ಎಸ್‌ಎಸ್ ವಿರುದ್ಧ ನಿಲುವು ತಳೆದಿದ್ದರೂ ಸಂಘಟನೆ ತನ್ನ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದೆ ಎಂದು ಹೇಳಿದರು.

“ಪಂಡಿತ್ ಜವಾಹರಲಾಲ್ ನೆಹರು ಪ್ರಧಾನಿಯಾಗಿದ್ದಾಗಲೂ ಆರ್‌ಎಸ್‌ಎಸ್ ವಿರುದ್ಧ ಟೀಕೆಗಳು ನಡೆದಿದ್ದವು. ಬಳಿಕ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ವೇಳೆ ಆರ್‌ಎಸ್‌ಎಸ್‌ಗೆ ನಿಷೇಧ ಹೇರಿದ್ದರು. ಆದರೆ ಇಂದು ಆ ನಾಯಕರು ಇಲ್ಲ, ಆರ್‌ಎಸ್‌ಎಸ್ ಮಾತ್ರ ಇನ್ನೂ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು.

ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿದ ಸಿ.ಟಿ. ರವಿ, “ನೀವು ಇತ್ತೀಚೆಗೆ ಗೃಹ ಸಚಿವರಾಗಿದ್ದೀರಿ. ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಕೂಡ ಈ ಹಿಂದೆ ಗೃಹ ಸಚಿವರಾಗಿದ್ದರು. ಅವರಿಂದಲೇ ಆರ್‌ಎಸ್‌ಎಸ್‌ಗೆ ಏನೂ ಮಾಡಲು ಆಗಿಲ್ಲ. ಇನ್ನು ನಿಮ್ಮಿಂದ ಆಗುತ್ತದೆಯೇ?” ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ರಾಷ್ಟ್ರ ಸೇವೆ ಹಾಗೂ ವ್ಯಕ್ತಿತ್ವ ನಿರ್ಮಾಣದ ಕೆಲಸ ಮಾಡುತ್ತಿರುವ ಸಂಘಟನೆ ಎಂದು ಬಣ್ಣಿಸಿದ ಅವರು, “ಆರ್‌ಎಸ್‌ಎಸ್ ಕೇವಲ ನೋಂದಣಿ ಮಾಡಿಸಬೇಕಾದ ಸಂಘವಲ್ಲ. ಅದು ಸಮಾಜವನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿರುವ ಸಂಸ್ಥೆ” ಎಂದು ಹೇಳಿದರು.

ಗೃಹ ಸಚಿವರು ತಮ್ಮ ಜವಾಬ್ದಾರಿಗಳತ್ತ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದ ಅವರು, “ರಾಜ್ಯದಲ್ಲಿ ಅಕ್ರಮ ವಲಸಿಗರು, ಡ್ರಗ್ಸ್ ಜಾಲ, ದರೋಡೆ ಪ್ರಕರಣಗಳು ಹಾಗೂ ಮಹಿಳೆಯರು ಮತ್ತು ಮಕ್ಕಳ ನಾಪತ್ತೆ ಪ್ರಕರಣಗಳಂತಹ ಗಂಭೀರ ಸಮಸ್ಯೆಗಳಿವೆ. ಇವುಗಳ ಬಗ್ಗೆ ಗಮನ ಹರಿಸುವುದು ಮುಖ್ಯ” ಎಂದು ಅಭಿಪ್ರಾಯಪಟ್ಟರು.

“ಆರ್‌ಎಸ್‌ಎಸ್‌ನಿಂದ ಯಾವುದೇ ಅಪಾಯವಿಲ್ಲ. ಬದಲಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದರು.

ಇದೇ ವೇಳೆ, “ಗೃಹ ಸಚಿವರಾಗಿ ಗೃಹ ಸಚಿವರಂತೆ ವರ್ತಿಸಬೇಕು. ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡದೆ, ಸಮಸ್ಯೆಗಳನ್ನು ಶಮನಗೊಳಿಸುವ ಕೆಲಸ ಮಾಡಬೇಕು. ಅಧಿಕಾರ ಶಾಶ್ವತವಲ್ಲ ಎಂಬುದನ್ನು ಎಲ್ಲರೂ ನೆನಪಿಡಬೇಕು” ಎಂದು ಸಿ.ಟಿ. ರವಿ ಹೇಳಿದರು.

ಟೀಂ ಇಂಡಿಯಾಗೆ ಗುಡ್ ನ್ಯೂಸ್: ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿದ ರೋಹಿತ್ – ಪಾಂಡ್ಯ! ಅಫ್ಘಾನ್ ಸರಣಿಯಲ್ಲಿ ಆಡ್ತಾರಾ?

ಮುಂಬೈ: ಭಾರತ ಕ್ರಿಕೆಟ್ ತಂಡಕ್ಕೆ ಮಹತ್ವದ ಉತ್ತೇಜನ ಸಿಕ್ಕಿದ್ದು, ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಬ್ಬರೂ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಮೂಲಗಳ ಪ್ರಕಾರ, ಇಬ್ಬರು ಆಟಗಾರರು ಅಗತ್ಯ ಫಿಟ್ನೆಸ್ ಮಾನದಂಡಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಸರಣಿ ಆರಂಭಕ್ಕೂ ಮುನ್ನ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಲಿದ್ದಾರೆ. ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದಿದ್ದ ಈ ಇಬ್ಬರು ಆಟಗಾರರ ಮರಳುವಿಕೆ ಭಾರತ ತಂಡಕ್ಕೆ ಬಲ ತುಂಬಲಿದೆ.

ರೋಹಿತ್ ಶರ್ಮಾ ದೀರ್ಘಕಾಲದಿಂದ ಮಂಡಿರಜ್ಜು (ಹ್ಯಾಮ್‌ಸ್ಟ್ರಿಂಗ್) ಸಮಸ್ಯೆಯಿಂದ ಬಳಲುತ್ತಿದ್ದು, ಪುನಶ್ಚೇತನ ಪ್ರಕ್ರಿಯೆಯಲ್ಲಿದ್ದರು. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಅವರು ಬೆನ್ನು ಸೆಳೆತದ ಸಮಸ್ಯೆಯಿಂದಾಗಿ ಐಪಿಎಲ್ 2026ರ ಕೊನೆಯ ಹಂತದ ಪಂದ್ಯಗಳಿಂದ ಹೊರಗುಳಿದಿದ್ದರು.

ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ರೋಹಿತ್ ಮತ್ತು ಹಾರ್ದಿಕ್ ಆಡಲಿರುವುದು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನೀಡುವ ಫಿಟ್ನೆಸ್ ಕ್ಲಿಯರೆನ್ಸ್ ಮೇಲೆ ಅವಲಂಬಿತವಾಗಿದೆ ಎಂದು ವರದಿಯಾಗಿತ್ತು. ಇದೀಗ ಇಬ್ಬರೂ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿರುವ ಹಿನ್ನೆಲೆಯಲ್ಲಿ ತಂಡದ ಆಯ್ಕೆಗಾರರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ.

ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಮತ್ತು ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದರೆ, ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಬಲ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ. ತಂಡದ ಅಧಿಕೃತ ಪ್ರಕಟಣೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೈತರು, ಬಡವರು ಮತ್ತು ಮಹಿಳೆಯರಿಗೆ ಬ್ಯಾಂಕುಗಳು ಹೆಚ್ಚು ನೆರವಾಗಲಿ: ಬೊಮ್ಮಾಯಿ

ಗದಗ: ಬ್ಯಾಂಕಿಂಗ್ ಸೇವೆಗಳು ಕೇವಲ ಹಣಕಾಸು ವ್ಯವಹಾರಗಳಿಗೆ ಸೀಮಿತವಾಗದೇ ಸಮಾಜದ ಕಟ್ಟಕಡೆಯ ವ್ಯಕ್ತಿಯ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು. ರೈತರು, ದಲಿತರು, ಹಿಂದುಳಿದ ವರ್ಗದವರು ಹಾಗೂ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬ್ಯಾಂಕುಗಳಿಗೆ ಕರೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ (ಡಿಎಲ್‌ಆರ್‌ಸಿ) ಹಾಗೂ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ (ಡಿಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಯಾಂಕಿಂಗ್ ಜಿಲ್ಲೆಯನ್ನಾಗಿ ರೂಪಿಸುವ ಗುರಿಯೊಂದಿಗೆ ಬ್ಯಾಂಕುಗಳು ಬಡವರು, ರೈತರು, ಮಹಿಳೆಯರು ಹಾಗೂ ಜನಸಾಮಾನ್ಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ರೈತರ ಅಭಿವೃದ್ಧಿಯೇ ದೇಶದ ಆರ್ಥಿಕತೆಯ ಮೂಲಾಧಾರವಾಗಿದ್ದು, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯ ಸರ್ಕಾರ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ನೀಡುತ್ತಿದ್ದರೂ ಎಲ್ಲ ರೈತರಿಗೆ ಅದರ ಸೌಲಭ್ಯ ದೊರೆಯುವುದಿಲ್ಲ. ಹೀಗಾಗಿ ರಾಷ್ಟ್ರೀಕೃತ ಬ್ಯಾಂಕುಗಳು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಸಾಲ ವಿತರಿಸಿ ರೈತರನ್ನು ಬೆಂಬಲಿಸಬೇಕು ಎಂದು ಸೂಚಿಸಿದರು.

ಕೃಷಿ ಕ್ಷೇತ್ರದಲ್ಲಿ ಒಂದು ಶೇಕಡಾ ಅಭಿವೃದ್ಧಿಯಾದರೆ ಉತ್ಪಾದನಾ ಕ್ಷೇತ್ರದಲ್ಲಿ ನಾಲ್ಕು ಶೇಕಡಾ ಮತ್ತು ಸೇವಾ ಕ್ಷೇತ್ರದಲ್ಲಿ ಹತ್ತು ಶೇಕಡಾ ಬೆಳವಣಿಗೆ ಸಾಧ್ಯವಾಗುತ್ತದೆ. ರೈತ ಕೇವಲ ಉತ್ಪಾದಕನಲ್ಲ, ಆತ ದೊಡ್ಡ ಗ್ರಾಹಕನೂ ಆಗಿದ್ದಾನೆ. ರೈತರ ಕೊಳ್ಳುವ ಶಕ್ತಿ ಹೆಚ್ಚಿದಾಗ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ವಿಸ್ತಾರವಾಗುತ್ತವೆ. ಆದ್ದರಿಂದ ಬ್ಯಾಂಕುಗಳು ರೈತರನ್ನು ತಲುಪಿ ಅಗತ್ಯ ಸಾಲ ಸೌಲಭ್ಯ ಒದಗಿಸಬೇಕು ಎಂದು ಹೇಳಿದರು.

ಸರ್ಕಾರದ ದೃಷ್ಟಿಯಿಂದ ರೈತರು, ದಲಿತರು, ಹಿಂದುಳಿದ ವರ್ಗದವರು ಹಾಗೂ ಆರ್ಥಿಕವಾಗಿ ದುರ್ಬಲ ಸಮುದಾಯಗಳು ಆದ್ಯತೆಯ ವಲಯಗಳಾಗಿದ್ದು, ಬ್ಯಾಂಕುಗಳು ಇವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮತ್ತು ಹಣಕಾಸು ನೆರವು ನೀಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದಾಗಿದೆ. ಸ್ವಸಹಾಯ ಸಂಘಗಳು, ಮಹಿಳಾ ಗುಂಪುಗಳು, ಸಣ್ಣ ಕೈಗಾರಿಕೆಗಳು ಹಾಗೂ ಯುವ ಉದ್ಯಮಿಗಳನ್ನು ಗುರುತಿಸಿ ಅವರಿಗೆ ಅಗತ್ಯ ಸಾಲ ಸೌಲಭ್ಯ ಒದಗಿಸಬೇಕು. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳ ವಿಸ್ತರಣೆ ಅಗತ್ಯವಾಗಿದ್ದು, ರಾಷ್ಟ್ರೀಕೃತ ಬ್ಯಾಂಕುಗಳು ಹೊಸ ಶಾಖೆಗಳನ್ನು ಆರಂಭಿಸುವ ಮೂಲಕ ಗ್ರಾಮೀಣ ಜನತೆಗೆ ಸುಲಭವಾಗಿ ಸೇವೆ ಒದಗಿಸಬೇಕು. ಜೊತೆಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮುದ್ರಾ ಯೋಜನೆಯಡಿ ಹೆಚ್ಚಿನ ಸಾಲ ವಿತರಣೆ ಮಾಡಿ ಯುವ ಉದ್ಯಮಿಗಳಿಗೆ ಉತ್ತೇಜನ ನೀಡಬೇಕು ಎಂದು ಸಂಸದರು ಸೂಚಿಸಿದರು.

ಬ್ಯಾಂಕುಗಳು ದೇಶದ ಆರ್ಥಿಕತೆ ಬಲವರ್ದನೆ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಬ್ಯಾಂಕಿಂಗ್ ವ್ಯವಸ್ಥೆ ಸಮರ್ಥವಾಗಿ ಕಾರ್ಯನಿರ್ವಹಿಸಿದರೆ ಪ್ರಸ್ತುತ ಶೇಕಡಾ ಆರರಿಂದ ಏಳುರಷ್ಟಿರುವ ಬಂಡವಾಳ ಹೂಡಿಕೆಯನ್ನು ಶೇಕಡಾ ಹತ್ತರ ಮಟ್ಟಕ್ಕೆ ಏರಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಬ್ಯಾಂಕುಗಳಿಗೆ ಹಲವು ನಿರ್ದೇಶನಗಳನ್ನು ನೀಡಿದ ಸಂಸದ ಬೊಮ್ಮಾಯಿ, ಅರ್ಹ ರೈತರಿಗೆ ಬೆಳೆಹಾನಿ ಪರಿಹಾರ ಹಾಗೂ ಸಾಲ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ವಿಶ್ವಕರ್ಮ ಸಮುದಾಯದ ಯುವಕರಿಗೆ ತರಬೇತಿ ಒದಗಿಸಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.

ಬೀದಿಬದಿ ವ್ಯಾಪಾರಸ್ಥರು ಮತ್ತು ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕಿಂಗ್ ಸೇವೆಗಳು ಹಾಗೂ ಸಾಲ ಸೌಲಭ್ಯಗಳು ಸುಲಭವಾಗಿ ದೊರೆಯಬೇಕು. ಅವರಿಗೆ ಕ್ರೆಡಿಟ್ ಕಾರ್ಡ್ ಸೇರಿದಂತೆ ವಿವಿಧ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಮೂಲಕ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಎಲ್ಲಾ ಬ್ಯಾಂಕುಗಳು ಪ್ರಾದೇಶಿಕ ಅಸಮತೋಲನ ನಿವಾರಣೆಯತ್ತ ಗಮನ ಹರಿಸಿ ಬಡವರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಪ್ರತಿದಿನ ದುಡಿದು ಬದುಕುವ ಸಾಮಾನ್ಯ ಜನರು ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯ ವ್ಯಾಪ್ತಿಗೆ ಬರಬೇಕು. ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯೊಂದಿಗೆ ಹೊಂದಾಣಿಕೆ ಸಾಧಿಸಿ ಬ್ಯಾಂಕುಗಳು ಅಭಿವೃದ್ಧಿಯತ್ತ ಸಾಗಬೇಕು. ಸಮಗ್ರ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಿದರೆ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಬ್ಯಾಂಕಿಂಗ್ ಕ್ಷೇತ್ರ ಮಹತ್ತರ ಕೊಡುಗೆ ನೀಡಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕೃಷಿ ಕ್ಷೇತ್ರದ ಬೆಳವಣಿಗೆಯೇ ದೇಶದ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಅಡಿಪಾಯವಾಗಿದ್ದು, ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಸಾಲ ವಿತರಿಸುವ ಮೂಲಕ ಅವರ ಕೊಳ್ಳುವ ಶಕ್ತಿ ಹೆಚ್ಚಿಸಲು ಬ್ಯಾಂಕುಗಳು ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬ್ಯಾಂಕುಗಳಿಗೆ ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಂತೋಷ್ ಎಂ.ವಿ. ಅವರು 2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕದ (31-03-2026ರ ಅಂತ್ಯದವರೆಗೆ) ಬ್ಯಾಂಕಿಂಗ್ ಪ್ರಗತಿ ವರದಿಯನ್ನು ಮಂಡಿಸಿದರು.

ಮಾರ್ಚ್ 2026ರ ತ್ರೈಮಾಸಿಕ ಅಂತ್ಯದ ವೇಳೆಗೆ ಒಟ್ಟಾರೆ ಆದ್ಯತಾ ವಲಯದ ಸಾಲ ವಿತರಣೆಯಲ್ಲಿ ಜಿಲ್ಲೆ ಶೇ. 98.73ರಷ್ಟು ಗುರಿ ಸಾಧನೆ ಮಾಡಿದೆ. ಕೃಷಿ ವಲಯದಲ್ಲಿ ಶೇ. 99.54, ಎಂಎಸ್‌ಎಂಇ ವಲಯದಲ್ಲಿ ಶೇ. 93.72, ಶಿಕ್ಷಣ ವಲಯದಲ್ಲಿ ಶೇ. 100.03, ವಸತಿ ವಲಯದಲ್ಲಿ ಶೇ. 89.22 ಹಾಗೂ ಇತರೆ ವಲಯಗಳಲ್ಲಿ ಶೇ. 105.67ರಷ್ಟು ಪ್ರಗತಿ ದಾಖಲಾಗಿದೆ ಎಂದು ವಿವರಿಸಿದರು.

ಗದಗ ಜಿಲ್ಲೆಯ ತಾಲೂಕುವಾರು ಆದ್ಯತಾ ವಲಯದ ಗುರಿ ಸಾಧನೆ ಕುರಿತು ಮಾಹಿತಿ ನೀಡಿದ ಅವರು, ಗದಗ ತಾಲೂಕಿನಲ್ಲಿ ಶೇ. 93.93, ಗಜೇಂದ್ರಗಡದಲ್ಲಿ ಶೇ. 107.54, ಲಕ್ಷ್ಮೇಶ್ವರದಲ್ಲಿ ಶೇ. 156.32, ಮುಂಡರಗಿಯಲ್ಲಿ ಶೇ. 96.67, ನರಗುಂದದಲ್ಲಿ ಶೇ. 110.26, ರೋಣದಲ್ಲಿ ಶೇ. 95.39 ಹಾಗೂ ಶಿರಹಟ್ಟಿಯಲ್ಲಿ ಶೇ. 78.12ರಷ್ಟು ಗುರಿ ಸಾಧನೆಯಾಗಿದೆ ಎಂದು ತಿಳಿಸಿದರು.

ಮಾರ್ಚ್ 2026ರ ತ್ರೈಮಾಸಿಕ ಅಂತ್ಯದ ವೇಳೆಗೆ ಆದ್ಯತಾ ವಲಯದ ಸಾಲ ವಿತರಣೆಯಲ್ಲಿ ಇತರೆ ವಾಣಿಜ್ಯ ಬ್ಯಾಂಕುಗಳು ಶೇ. 86.96, ಪ್ರಮುಖ ಬ್ಯಾಂಕುಗಳಾದ ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬ್ಯಾಂಕ್ ಆಫ್ ಬರೋಡಾ ಒಟ್ಟಾಗಿ ಶೇ. 105.03, ಇತರೆ ರಾಷ್ಟ್ರೀಕೃತ ಬ್ಯಾಂಕುಗಳು ಶೇ. 131.20, ಕರ್ನಾಟಕ ಗ್ರಾಮೀಣ ಬ್ಯಾಂಕ್ ಶೇ. 88.61 ಹಾಗೂ ಸ್ಮಾಲ್ ಫೈನಾನ್ಸ್ ಬ್ಯಾಂಕುಗಳು ಶೇ. 129.28ರಷ್ಟು ಸಾಧನೆ ಮಾಡಿವೆ ಎಂದು ಸಭೆಗೆ ವಿವರಿಸಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಈರವರೆಗೆ ಒಟ್ಟು 7,093 ಅರ್ಜಿಗಳು ಮಂಜೂರಾಗಿದ್ದು, ಅವುಗಳಲ್ಲಿ 6,944 ಫಲಾನುಭವಿಗಳಿಗೆ ಸಾಲ ವಿತರಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆ, PMFME, PMEGP, ಅಟಲ್ ಪಿಂಚಣಿ ಯೋಜನೆ (APY), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಹಾಗೂ ಪ್ರಧಾನಮಂತ್ರಿ ಜನಧನ್ ಯೋಜನೆ (PMJDY) ಸೇರಿದಂತೆ ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಅಲ್ಲದೇ ಸಭೆಯಲ್ಲಿ ಜಿಲ್ಲೆಯ ಬ್ಯಾಂಕಿಂಗ್ ಪ್ರಗತಿ, ಸಾಲ ವಿತರಣೆ, ಸ್ವಸಹಾಯ ಸಂಘಗಳ ಹಣಕಾಸು ಸ್ಥಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ನರಗುಂದ‌ ಶಾಸಕ ಸಿ ಸಿ ಪಾಟೀಲ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಿ ಎನ್ ಶ್ರೀಧರ್, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಸಿ ಆರ್ ಮುಂಡರಗಿ, ಆರ್, ಆರ್.ಬಿ.ಐ ಅಧಿಕಾರಿ ವಿಜಯಶ್ರೀ, ನಬಾರ್ಡನ ಎ ಜಿ ಎಂ ಹನುಮಂತರಾಜು, ಎಸ್.ಬಿ.ಐನ ರಿಜಿನಲ್ ಮ್ಯಾನೇಜರ ರಾಘವೇಂದ್ರ ರಾವ್, ಲೀಡ್ ಬ್ಯಾಂಕಿನ ಮ್ಯಾನೇಜರ ಸಂತೋಷಕುಮಾರ ಸೇರಿದಂತೆ ಬ್ಯಾಂಕಿನ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

error: Content is protected !!