ನವದೆಹಲಿ: ಯಾವುದೇ ನ್ಯಾಯಾಲಯವೂ ಮಹಿಳೆಯನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಕಳನ್ನು, ಆಕೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸಲು ಬಲವಂತಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಹದಿನೈದು ವರ್ಷದ ಬಾಲಕಿಯ ಏಳು ತಿಂಗಳ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ಅನುಮತಿ ನೀಡುವ ವೇಳೆ ನ್ಯಾಯಾಲಯ ಈ ತೀರ್ಪನ್ನು ಪ್ರಕಟಿಸಿತು. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ನೇತೃತ್ವದ ಪೀಠವು, ಗರ್ಭಿಣಿಯ ಆಯ್ಕೆಗೆ ಆದ್ಯತೆ ನೀಡಬೇಕು ಹಾಗೂ ಮಹಿಳೆಯ ಸಂತಾನೋತ್ಪತ್ತಿ ಸ್ವಾಯತ್ತತೆಗೆ ಸಂವಿಧಾನಾತ್ಮಕವಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದೆ ಎಂದು ತಿಳಿಸಿದೆ.
ಈ ಪ್ರಕರಣದಲ್ಲಿ 15 ವರ್ಷದ ಅಪ್ರಾಪ್ತೆಗೆ ಗರ್ಭಧಾರಣೆಯನ್ನು ಮುಂದುವರಿಸಲು ಇಚ್ಛೆ ಇಲ್ಲದಿರುವುದನ್ನು ಗಮನಿಸಿ, ಆಕೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿರುವ ಹಿನ್ನೆಲೆಯಲ್ಲಿ, ಗರ್ಭಧಾರಣೆಯನ್ನು ಮುಂದುವರಿಸುವುದು ಅವಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಸಾಂವಿಧಾನಿಕ ನ್ಯಾಯಾಲಯಗಳು ಹುಟ್ಟಲಿರುವ ಮಗುವಿನ ಹಿತಾಸಕ್ತಿಗಿಂತ ಗರ್ಭಿಣಿಯ ದೈಹಿಕ ಮತ್ತು ಮಾನಸಿಕ ಕ್ಷೇಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪೀಠ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು, ಅಪ್ರಾಪ್ತ ವಯಸ್ಕೆಯ ಗರ್ಭಧಾರಣೆಯನ್ನು ಮುಂದುವರಿಸುವುದು ಆಕೆಯ ಮಾನಸಿಕ ಆರೋಗ್ಯ, ಶಿಕ್ಷಣದ ಅವಕಾಶಗಳು, ಸಾಮಾಜಿಕ ಸ್ಥಾನಮಾನ ಹಾಗೂ ಒಟ್ಟಾರೆ ಬೆಳವಣಿಗೆ ಮೇಲೆ ದೀರ್ಘಕಾಲೀನ ಹಾನಿಕಾರಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ದೇಹದ ಮೇಲೆ, ವಿಶೇಷವಾಗಿ ಸಂತಾನೋತ್ಪತ್ತಿ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಗೌಪ್ಯತೆಯ ಅವಿಭಾಜ್ಯ ಭಾಗವಾಗಿದೆ ಎಂದು ಪೀಠ ಸ್ಪಷ್ಟಪಡಿಸಿದೆ.
ಅನಗತ್ಯ ಗರ್ಭಧಾರಣೆಯ ಸಂದರ್ಭಗಳಲ್ಲಿ ಮಹಿಳೆಯ ನಿರ್ಧಾರ ಸ್ವಾತಂತ್ರ್ಯವನ್ನು ನಿರ್ಬಂಧಿಸುವುದು ಅವಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಹೀಗಾಗಿ ಯಾವುದೇ ನ್ಯಾಯಾಲಯವೂ ಮಹಿಳೆಯನ್ನು, ವಿಶೇಷವಾಗಿ ಅಪ್ರಾಪ್ತೆಯನ್ನು, ಅವಳ ಸ್ಪಷ್ಟ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಪೂರ್ಣಾವಧಿಗೆ ಮುಂದುವರಿಸಲು ಬಲವಂತಪಡಿಸಬಾರದು. ಅಂತಹ ಕ್ರಮವು ಆಕೆಯ ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ಆರೋಗ್ಯಕ್ಕೆ ಗಂಭೀರ ಆಘಾತ ಉಂಟುಮಾಡುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.