ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಯೋಜನೆಗೆ ಇಂದು ಅಧಿಕೃತ ಚಾಲನೆ ನೀಡಿದೆ. ಸಚಿವ ಎಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಲಕ್ಕುಂಡಿಯ ಪಂಚ ದೇವಾಲಯ ಹಾಗೂ ಪಂಚ ಬಾವಿಗಳ ಜೀರ್ಣೋದ್ಧಾರ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುವ ಈ ಯೋಜನೆಯಡಿ ಛಬ್ಬೆರ ಬಾವಿ, ಸಿದ್ದರ ಬಾವಿ, ವಿದ್ಯಾಶಂಕರ ಲಿಂಗ ದೇವಸ್ಥಾನ, ಸೋಮನಕಟ್ಟಿ ಈಶ್ವರ ದೇವಾಲಯ, ಕಪ್ಪಚರ ಮಠ ಮತ್ತು ಫಕ್ಕೀರಸ್ವಾಮಿ ಮಠದ ಬಾವಿಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಈ ಜೀರ್ಣೋದ್ಧಾರ ಕಾರ್ಯ ಲಕ್ಕುಂಡಿಯ ಪುರಾತನ ವೈಭವವನ್ನು ಮರಳಿ ತರುವ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಇದೇ ವೇಳೆ ಇತ್ತೀಚೆಗೆ ಲಕ್ಕುಂಡಿಯಲ್ಲಿ ನಡೆದ ಉತ್ಖನನದ ವೇಳೆ ಪತ್ತೆಯಾಗಿರುವ ಅಪರೂಪದ ಪುರಾತನ ವಸ್ತುಗಳನ್ನು ಸಚಿವರು ಹಾಗೂ ಗಣ್ಯರು ವೀಕ್ಷಿಸಿದರು. ಉತ್ಖನನದಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು, ಇದರಲ್ಲಿ ಪ್ರಾಚೀನ ಕಾಲದ ಬಿಲ್ಲೆಗಳು, ಪ್ರಾಣಿಗಳ ಮೂಳೆಗಳು, ಕವಡೆಗಳು, ಮಡಿಕೆ ಚೂರುಗಳು, ಗಂಟೆಗಳು, ಲಿಂಗಗಳು, ಮುಕುಟ ಮಣಿಗಳು, ಧೂಪದ ಆಕೃತಿಯ ವಸ್ತುಗಳು ಹಾಗೂ ಅನೇಕ ಲೋಹದ ಅವಶೇಷಗಳು ಸೇರಿವೆ. ಈ ಪತ್ತೆಗಳು ಲಕ್ಕುಂಡಿಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮತ್ತೊಮ್ಮೆ ಜಗತ್ತಿಗೆ ಸಾರಿವೆ.
ಕಾರ್ಯಕ್ರಮದ ವಿಶೇಷತೆ ಎಂದರೆ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ವೈಷಮ್ಯ ಮರೆತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಕ್ಷೇತ್ರದ ಶಾಸಕ ಸಿ.ಸಿ. ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಅವರು ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಸಾಥ್ ನೀಡಿದರು. ಕೋಟೆ ವೀರಭದ್ರೇಶ್ವರ ದೇವಾಲಯದ ಅಂಗಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಕುಂಡಿಯನ್ನು ‘ವಿಶ್ವ ಪರಂಪರೆ ತಾಣ’ಗಳ ಪಟ್ಟಿಗೆ ಸೇರಿಸುವ ಕುರಿತು ಚರ್ಚೆ ನಡೆಯಿತು.
ಈ ವೇಳೆ ಗ್ರಾಮಸ್ಥರು ‘ನವ ಲಕ್ಕುಂಡಿ’ ನಿರ್ಮಾಣಕ್ಕೆ ಸಂಬಂಧಿಸಿದ ಮಹತ್ವದ ಮನವಿಯನ್ನು ಸಲ್ಲಿಸಿದರು. ಲಕ್ಕುಂಡಿಯಲ್ಲಿ ಅಡಗಿರುವ 101 ದೇವಸ್ಥಾನ ಹಾಗೂ 101 ಬಾವಿಗಳ ಸಂಪೂರ್ಣ ಗತವೈಭವ ಹೊರಬರಬೇಕಾದರೆ ಈಗಿರುವ ಗ್ರಾಮವನ್ನು ಸ್ಥಳಾಂತರಿಸುವುದು ಅನಿವಾರ್ಯ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು. ಗ್ರಾಮಸ್ಥರಿಗೆ ಪರ್ಯಾಯವಾಗಿ ಹೊಸ ‘ನವ ಲಕ್ಕುಂಡಿ’ ಗ್ರಾಮವನ್ನು ನಿರ್ಮಿಸಿಕೊಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

