Home Blog Page 200

ಕಾಲೇಜಿನಲ್ಲಿ ಅವಮಾನ, ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ!

0

ಆನೇಕಲ್: ಕಣ್ಣು ನೋವಿನ ಕಾರಣ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕರು ತರಗತಿಯಲ್ಲಿ ಅವಮಾನಿಸಿ ಕಿರುಕುಳ ನೀಡಿದ್ದಾರೆ ಎಂದು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಮೃತಳನ್ನು ಪರಿಮಳ–ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ (23) ಎಂದು ಗುರುತಿಸಲಾಗಿದೆ. ಯಶಸ್ವಿನಿ ಬೊಮ್ಮನಹಳ್ಳಿ ಖಾಸಗಿ ಕಾಲೇಜಿನಲ್ಲಿ Oral Medicine and Radiology ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದರು ಎಂದು ತಿಳಿದು ಬಂದಿದೆ.

ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಯಶಸ್ವಿನಿ ಕಾಲೇಜಿಗೆ ರಜೆ ಪಡೆದಿದ್ದರು. ಮಾರನೇ ದಿನ ಕಾಲೇಜಿಗೆ ಹಾಜರಾದಾಗ, “ಯಾವ ಕಣ್ಣಿನ ಡ್ರಾಪ್ಸ್ ಬಳಸಿದ್ದೀಯಾ? ಎಷ್ಟು ಹನಿ ಹಾಕಿಕೊಂಡೆ? ಇಡೀ ಬಾಟಲ್ ಸುರಿದುಕೊಂಡಿದ್ದೀಯಾ?” ಎಂದು ಉಪನ್ಯಾಸಕರು ಸಹಪಾಠಿಗಳ ಮುಂದೆ ಅವಮಾನಿಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಆಕೆಗೆ ಸೆಮಿನಾರ್‌ಗೆ ಅವಕಾಶ ನೀಡದೇ, ರೆಡಿಯಾಲಜಿ ಕೇಸ್ ನೀಡದೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಮೃತ ವಿದ್ಯಾರ್ಥಿನಿಯ ತಾಯಿ ಮಾತನಾಡಿ, “ನನ್ನ ಮಗಳಿಗೆ ಕಣ್ಣಿಗೆ ಗಾಯವಾಗಿದ್ದರಿಂದ ನನಗೆ ತಿಳಿಸಿ ರಜೆ ತೆಗೆದುಕೊಂಡಿದ್ದಳು. ಆದರೂ ಉಪನ್ಯಾಸಕರು ವಿದ್ಯಾರ್ಥಿಗಳ ಮುಂದೆ ಅವಮಾನಿಸಿದ್ದಾರೆ. ಉಪನ್ಯಾಸಕರಷ್ಟೇ ಅಲ್ಲ, ಕಾಲೇಜು ಆಡಳಿತ ಮಂಡಳಿಯಿಂದಲೂ ಕಿರುಕುಳ ನೀಡಲಾಗಿದೆ. ಇದನ್ನೆಲ್ಲ ಸಹಿಸಿಕೊಳ್ಳಲಾಗದೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಆರೋಪಿಸಿದರು.

ಘಟನೆಗೆ ಕಾರಣರಾದ ಪ್ರಾಂಶುಪಾಲರು ಹಾಗೂ ಅವಮಾನ ಮಾಡಿದ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಯಶಸ್ವಿನಿಯ ಸಹಪಾಠಿಗಳು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದರು.ಘಟನೆ ಸಂಬಂಧ ಚಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

umakuru-Bengaluru Metro: ಬೆಂಗಳೂರು-ತುಮಕೂರು ಮೆಟ್ರೋ ಕಾಮಗಾರಿ ಆರಂಭದ ಬಗ್ಗೆ ಬಿಗ್ ಅಪ್ಡೇಟ್!

0

ಬೆಂಗಳೂರು: ಬಹುಕಾಲದ ಬೇಡಿಕೆಯಾಗಿದ್ದ ಬೆಂಗಳೂರು–ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ದೊರೆತಿದ್ದು, ಇದೀಗ ಅಡಿಪಾಯ ಹಂತಕ್ಕೆ ಸಿದ್ಧತೆ ಆರಂಭವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ (BMRCL) ಮಹತ್ವಾಕಾಂಕ್ಷೆಯ ಈ ಅಂತರ್‌ಜಿಲ್ಲಾ ಕಾರಿಡಾರ್‌ಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಗೊಂಡಿದೆ.

ಈ ಯೋಜನೆಗೆ ಡಿಪಿಆರ್ ಸಲಹಾ ಕಾರ್ಯವನ್ನು ಆರ್ವೀ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್‌ಗೆ ನೀಡಲಾಗಿದ್ದು, 59.60 ಕಿ.ಮೀ ಉದ್ದದ ಮೆಟ್ರೋ ಮಾರ್ಗಕ್ಕಾಗಿ 1.2 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್ ತಯಾರಿಸಲಾಗಿದೆ. ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಟೆಂಡರ್‌ಗಳನ್ನು ನವೆಂಬರ್ 2025ರಲ್ಲಿ ಕರೆಯಲಾಗಿತ್ತು. ಯೋಜನೆಯ ಒಟ್ಟು ಅಂದಾಜು ವೆಚ್ಚ ಸುಮಾರು 20,649 ಕೋಟಿ ರೂ. ಆಗಿದೆ.

ಪ್ರಸ್ತುತ ಯೋಜನೆಗೆ ಸಂಬಂಧಿಸಿದಂತೆ ಸಂಚಾರ ಮತ್ತು ಪ್ರಯಾಣ ಮಾದರಿಗಳ ಅಧ್ಯಯನ, ದತ್ತಾಂಶ ಸಂಗ್ರಹಣೆ, ಪ್ರಾಥಮಿಕ ಜೋಡಣೆ ಪರಿಶೀಲನೆಗಳು, ವಿವಿಧ ಮೌಲ್ಯಮಾಪನಗಳು ಹಾಗೂ ಭೂತಾಂತ್ರಿಕ ತನಿಖೆಗಳು ನಡೆಯುತ್ತಿವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೆಟ್ರೋ ಮಾರ್ಗವು ನಮ್ಮ ಮೆಟ್ರೋದ 4ನೇ ಹಂತದ ವಿಸ್ತರಣೆಯ ಭಾಗವಾಗಿದ್ದು, ರಾಜ್ಯದ ಅತ್ಯಂತ ದುಬಾರಿ ಸಾರಿಗೆ ಯೋಜನೆಗಳಲ್ಲಿ ಒಂದಾಗಿದೆ.

ಬೆಂಗಳೂರು–ತುಮಕೂರು ಮೆಟ್ರೋ ಮಾರ್ಗವು ಬೆಂಗಳೂರಿನ ಮಾದವರದಿಂದ ಆರಂಭವಾಗಿ ತುಮಕೂರಿನ ನಾಗಣ್ಣನಪಾಳ್ಯವರೆಗೆ ಸಾಗಲಿದೆ. ಒಟ್ಟು 26 ನಿಲ್ದಾಣಗಳನ್ನು ಒಳಗೊಂಡಿರುವ ಈ ಕಾರಿಡಾರ್ ಪೂರ್ಣಗೊಂಡ ಬಳಿಕ, ಬೆಂಗಳೂರಿನ ವಾಯುವ್ಯ ಹೊರವಲಯ ಮತ್ತು ತುಮಕೂರು ನಡುವಿನ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಂಚಾರ ಸೌಲಭ್ಯ ಒದಗಿಸುವ ನಿರೀಕ್ಷೆಯಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಬಿಎಂಆರ್‌ಸಿಎಲ್ ಸಲ್ಲಿಸಿದ್ದ ಕಾರ್ಯಸಾಧ್ಯತಾ ವರದಿಯನ್ನು ರಾಜ್ಯ ಸರ್ಕಾರ ಅನುಮೋದಿಸಿದ್ದು, ಅದರ ನಂತರ ಡಿಪಿಆರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಯೋಜನೆ ಪೂರ್ಣಗೊಂಡ ಬಳಿಕ ಮುಂದಿನ ಹಂತದಲ್ಲಿ ವಿಸ್ತರಣೆಯ ಸಾಧ್ಯತೆಯನ್ನೂ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು–ತುಮಕೂರು ಮೆಟ್ರೋ ಯೋಜನೆಯ ಪ್ರಮುಖ ನಿಲ್ದಾಣಗಳು

ಮಕಾಲಿ, ದಾಸನಪುರ, ನೆಲಮಂಗಲ, ನೆಲಮಂಗಲ ಟೋಲ್‌ಗೇಟ್, ಟಿ. ಬೇಗೂರ್, ತಿಪ್ಪಗೊಂಡನಹಳ್ಳಿ, ಸೋಂಪುರ ಕೈಗಾರಿಕಾ ಪ್ರದೇಶ, ಡಾಬ್ಸ್‌ಪೇಟೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಕ್ಯಾತ್ಸಂದ್ರ, ತುಮಕೂರು ಬಸ್ ನಿಲ್ದಾಣ, ತುಡಾ ಲೇಔಟ್ ಮತ್ತು ನಾಗಣ್ಣನಪಾಳ್ಯ.

ಸುಜಾತಾ ಹಂಡಿ ಬಂಧನದ ಬಳಿಕ ಕುಟುಂಬಸ್ಥರಿಗೂ ಸಂಕಷ್ಟ: ಕೇಶ್ವಾಪುರ ಠಾಣೆಯಿಂದ ನೋಟಿಸ್ ಜಾರಿ

0

ಹುಬ್ಬಳ್ಳಿ: ನಗರದಲ್ಲಿ ವಿವಾದಕ್ಕೆ ಕಾರಣವಾಗಿರುವ ಸುಜಾತಾ ಹಂಡಿ ಪ್ರಕರಣದಲ್ಲಿ ಪೊಲೀಸ್ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಕೇಶ್ವಾಪುರ ಪೊಲೀಸ್ ಠಾಣೆ ಪೊಲೀಸರು ಸುಜಾತಾ ಹಂಡಿಯ ಕುಟುಂಬಸ್ಥರಾದ ಸಹೋದರ ಮರಿಯಾದಾಸ್ ಹಾಗೂ ತಾಯಿ ಕಮಲಮ್ಮ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪೊಲೀಸರು ಮನೆಗೆ ತೆರಳಿ ನೋಟಿಸ್ ನೀಡಿ ಸಹಿ ಪಡೆದುಕೊಂಡಿದ್ದಾರೆ. ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಈ ಪ್ರಕರಣವು ಜನವರಿ 2 ರಂದು ಪ್ರಶಾಂತ್ ಬೊಮ್ಮಾಜಿ ನೀಡಿದ ದೂರಿನ ಆಧಾರದಲ್ಲಿ ದಾಖಲಾಗಿದ್ದು, ಸುಜಾತಾ ಹಂಡಿ ಸೇರಿ ಏಳು ಜನರ ವಿರುದ್ಧ ಕೇಸ್ ದಾಖಲಾಗಿತ್ತು.

ಇದೇ ಪ್ರಕರಣದಲ್ಲಿ ಈಗಾಗಲೇ ಸುಜಾತಾ ಹಂಡಿಯನ್ನು ಬಂಧಿಸಿರುವ ಪೊಲೀಸರು, ತನಿಖೆಯ ಭಾಗವಾಗಿ ಉಳಿದ ಆರೋಪಿಗಳು ಮತ್ತು ಸಂಬಂಧಪಟ್ಟವರ ವಿಚಾರಣೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ತನಿಖೆ ಮುಂದುವರಿಸಿದ್ದಾರೆ.

ವಿನಯ್ ಕುಲಕರ್ಣಿ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

0

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿದೆ. ವಿನಯ್ ಕುಲಕರ್ಣಿ ಅವರು ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರು ನಡೆಸಿದರು.

ಅರ್ಜಿದಾರರ ಪರ ವಕೀಲರು ವಾದ ಮುಂದುವರೆಸಿ, ಕೊಲೆ ಪ್ರಕರಣದಲ್ಲಿ ಕುಲಕರ್ಣಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದರು. ಅಲ್ಲದೆ, ಕೊಲೆ ನಡೆದ ಸ್ಥಳದಲ್ಲೂ ಅವರು ಹಾಜರಿರಲಿಲ್ಲ. ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿರುವುದನ್ನೂ ನ್ಯಾಯಾಲಯದ ಗಮನಕ್ಕೆ ತಂದರು.

ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸುವ ಷರತ್ತುಗಳನ್ನು ಉಲ್ಲಂಘಿಸುವುದು ಮತ್ತು ಜಾಮೀನು ರದ್ದುಪಡಿಸುವುದು ಎರಡು ವಿಭಿನ್ನ ಅಂಶಗಳಾಗಿವೆ ಎಂದು ವಾದಿಸಿದ ವಕೀಲರು, ಅರ್ಜಿದಾರರಿಗೆ ಜಾಮೀನು ನೀಡಿರುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಷರತ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಮಾತ್ರ ಜಾಮೀನು ರದ್ದುಪಡಿಸಲಾಗಿದ್ದು, ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ ಎಂದು ಹೇಳಿದರು.

ಇನ್ನು ಅರ್ಜಿದಾರರ ವಿರುದ್ಧ ಇಬ್ಬರು ಅಧಿಕಾರಿಗಳ ಪಾಟಿ ಸವಾಲು (ಕ್ರಾಸ್ ಎಕ್ಸಾಮಿನೇಶನ್) ಬಾಕಿ ಇರುವುದರಿಂದ, ಜಾಮೀನು ಮಂಜೂರು ಮಾಡಬೇಕೆಂದು ಕುಲಕರ್ಣಿ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಪ್ರಕರಣದಲ್ಲಿ ತನಿಖಾಧಿಕಾರಿಗಳಲ್ಲದೆ ಇನ್ನೂ ಇಬ್ಬರು ಪ್ರಮುಖ ಸಾಕ್ಷಿಗಳ ವಿಚಾರಣೆ ಬಾಕಿ ಇರುವುದರಿಂದ, ಈ ಹಂತದಲ್ಲಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದಿಸಿದರು.

ಇದಕ್ಕೂ ಮುನ್ನದ ವಿಚಾರಣೆಯಲ್ಲಿ ಸಿಬಿಐ ಪರ ವಕೀಲರು, ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ವಿಧಿಸಿದ್ದ ಷರತ್ತುಗಳನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದ ಅರ್ಜಿದಾರರು, ಬಳಿಕ ಅದನ್ನು ಉಲ್ಲಂಘಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಷರತ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸಿದ ನಂತರ ಮತ್ತೆ ಜಾಮೀನು ನೀಡುವ ಬಗ್ಗೆ ಯಾವುದೇ ನಿರ್ದಿಷ್ಟ ತೀರ್ಪುಗಳಿಲ್ಲ ಎಂದು ವಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ ಪರ ವಕೀಲರು, ಪ್ರಾಸಿಕ್ಯೂಷನ್ ಸಾಕ್ಷಿಯೊಬ್ಬರು ತಮ್ಮ ಕಕ್ಷಿದಾರರಿಗೆ ನಮಸ್ಕರಿಸಿದ್ದಕ್ಕೆ ಪ್ರತಿಯಾಗಿ ಆಶೀರ್ವಾದ ನೀಡಿದ ಕಾರಣಕ್ಕೆ ಜಾಮೀನು ರದ್ದುಪಡಿಸಲಾಗಿದೆ ಎಂದು ಹೇಳಿದರು. ಆದರೆ, ಇದೇ ಸಾಕ್ಷಿಯೊಂದಿಗೆ ಹಸ್ತಲಾಘವ ನಡೆಸಿದ ಇತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಎಂದು ವಾದಿಸಿದರು.

ಅಲ್ಲದೆ, ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಘಟನೆ ನಡೆದ ನಾಲ್ಕು ವರ್ಷಗಳ ಬಳಿಕ ಸಿಬಿಐ ತನಿಖೆಗೆ ವಹಿಸಲಾಗಿದೆ ಎಂಬ ಅಂಶವನ್ನೂ ಉಲ್ಲೇಖಿಸಿ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಅರ್ಜಿದಾರ ಹಾಗೂ ಸಿಬಿಐ ಪರ ವಾದಗಳನ್ನು ಆಲಿಸಿದ ನ್ಯಾಯಪೀಠ, ಅಂತಿಮ ಆದೇಶವನ್ನು ಕಾಯ್ದಿರಿಸಿದೆ.

Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಬೈಕ್​​ ಸವಾರಿಗೆ ಬಿತ್ತು ಗೂಸಾ

0

ಬೆಂಗಳೂರು: ನಗರದ ಮಹದೇವಪುರ ಪ್ರದೇಶದಲ್ಲಿ ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ, ಹೆಲ್ಮೆಟ್ ಧರಿಸಿದ್ದ ಡೆಲಿವರಿ ಬಾಯ್ ಮೇಲೆ ಇಬ್ಬರು ವ್ಯಕ್ತಿಗಳು ಹಿಂಸಾತ್ಮಕವಾಗಿ ಹಲ್ಲೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ರಸ್ತೆಯ ಒಂದು ಬದಿಯಿಂದ ಮುಖ್ಯ ರಸ್ತೆಗೆ ಡೆಲಿವರಿ ಎಕ್ಸಿಕ್ಯೂಟಿವ್ ಬರುತ್ತಿದ್ದ ವೇಳೆ, ದಿಢೀರ್ ಆಗಿ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಅಚಾನಕ್ ಸಂಭವಿಸಿದ ಈ ಘಟನೆಗೆ ಡೆಲಿವರಿ ಬಾಯ್ ಕ್ಷಮೆಯಾಚಿಸಿದ್ದಾನೆ.

ಆದರೆ ಬೈಕ್‌ನಲ್ಲಿ ಇದ್ದ ಇಬ್ಬರು ವ್ಯಕ್ತಿಗಳು ಕೋಪದ ನಿಯಂತ್ರಣ ತಪ್ಪಿ, ಡೆಲಿವರಿ ಬಾಯ್‌ನನ್ನು ತಮ್ಮ ಹೆಲ್ಮೆಟ್‌ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಇದಷ್ಟೇ ಅಲ್ಲದೆ, ಡೆಲಿವರಿ ಬಾಯ್ ಬೈಕ್‌ನಿಂದ ಕೆಳಗೆ ಬಿದ್ದರೂ ಬಿಡದೆ ಕಾಲಿನಿಂದಲೂ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧಾನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ.

ಈ ಅಮಾನವೀಯ ಹಲ್ಲೆಯ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಮಹದೇವಪುರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ತನಿಖೆ ಕೈಗೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಜನನಾಯಗನ್’ಗೆ ಯುಎ ಸರ್ಟಿಫಿಕೇಟ್ ನೀಡಲು ಆದೇಶ: ಸೆನ್ಸಾರ್ ಮಂಡಳಿಗೆ ಮದ್ರಾಸ್ ಹೈಕೋರ್ಟ್ ತರಾಟೆ

ದಳಪತಿ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾದ ಬಿಡುಗಡೆಗೆ ಸಂಬಂಧಿಸಿದ ಸೆನ್ಸಾರ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಅಂತ್ಯ ಹಾಡಿದೆ. ಚಿತ್ರಕ್ಕೆ ಅಗತ್ಯ ಬದಲಾವಣೆಗಳ ಬಳಿಕ ಯುಎ ಪ್ರಮಾಣ ಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಚಿತ್ರದ ವಿರುದ್ಧ ಸಲ್ಲಿಸಲಾಗಿದ್ದ ದೂರುಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, “ಮೊದಲು ದೂರು ನೀಡಿ, ನಂತರ ಅದರ ಪರಿಣಾಮಗಳ ಬಗ್ಗೆ ಯೋಚಿಸುವುದು ಅಪಾಯಕಾರಿ ಪ್ರವೃತ್ತಿ. ಇಂತಹ ದೂರುಗಳಿಗೆ ಉತ್ತೇಜನ ನೀಡಬಾರದು” ಎಂದು ಸ್ಪಷ್ಟವಾಗಿ ಹೇಳಿದೆ. ಈ ಆದೇಶದಿಂದ ಸೆನ್ಸಾರ್ ಸಮಸ್ಯೆಯಿಂದ ತೊಂದರೆಗೀಡಾಗಿದ್ದ ಚಿತ್ರತಂಡಕ್ಕೆ ಮಹತ್ವದ ರಿಲೀಫ್ ಸಿಕ್ಕಂತಾಗಿದೆ.

ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ಜನವರಿ 9ರಂದು ‘ಜನನಾಯಗನ್’ ಸಿನಿಮಾ ಜಾಗತಿಕವಾಗಿ ಬಿಡುಗಡೆಯಾಗಬೇಕಿತ್ತು. ತಮಿಳು ಚಿತ್ರಗಳಿಗೆ ದೊಡ್ಡ ಮಾರುಕಟ್ಟೆಯಾಗಿರುವ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ವಿಜಯ್ ಕಟೌಟ್‌ಗಳು ಪ್ರದರ್ಶಿತವಾಗಿದ್ದರೂ, ಸೆನ್ಸಾರ್ ಮಂಡಳಿಯ ವಿಳಂಬದಿಂದ ಬಿಡುಗಡೆ ಮುಂದೂಡಲಾಗಿತ್ತು.

‘ಜನನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ವಿಜಯ್ ಈಗಾಗಲೇ ಮಲೇಷ್ಯಾದ ಕಾರ್ಯಕ್ರಮದಲ್ಲಿ ಘೋಷಿಸಿದ್ದರು. ಇದರಿಂದ ಅಭಿಮಾನಿಗಳು ಈ ಸಿನಿಮಾದ ಮೇಲೆ ವಿಶೇಷ ನಿರೀಕ್ಷೆ ಇಟ್ಟುಕೊಂಡಿದ್ದರು. ಸೆನ್ಸಾರ್ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧವೂ ಅಭಿಮಾನಿಗಳಿಂದ ಅಸಮಾಧಾನ ವ್ಯಕ್ತವಾಗಿದೆ.

ವಿದೇಶಿ ಮಾರುಕಟ್ಟೆಯಲ್ಲಿಯೂ ‘ಜನನಾಯಗನ್’ ಭರ್ಜರಿ ಪ್ರತಿಕ್ರಿಯೆ ಪಡೆದಿದೆ. ಬ್ರಿಟನ್‌ನಲ್ಲಿ 260ಕ್ಕೂ ಹೆಚ್ಚು ಶೋಗಳು ಫಿಕ್ಸ್ ಆಗಿದ್ದು, ಇದುವರೆಗೆ 65 ಸಾವಿರಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿರುವುದು ಸಿನಿಮಾದ ಮೇಲಿನ ಕ್ರೇಜ್‌ಗೆ ಸಾಕ್ಷಿಯಾಗಿದೆ.

ಹುಬ್ಬಳ್ಳಿ ಮಹಿಳೆ ವಿವಸ್ತ್ರಗೊಳಿಸಿದ ಘಟನೆ ಖಂಡನೀಯ: ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಯಡಿಯೂರಪ್ಪ ಆಗ್ರಹ

0

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ ಘಟನೆಯಿಂದ ರಾಜ್ಯದ ಮಹಿಳೆಯರಲ್ಲಿ ಭಯ ಮತ್ತು ಆತಂಕ ಉಂಟಾಗಿದೆ. ಇಂತಹ ದುರ್ಘಟನೆಗಳ ಬಳಿಕ ಮುಂದೇನು ಎಂಬ ಚಿಂತೆ ಮಹಿಳೆಯರಲ್ಲಿ ಮೂಡಿರುವುದು ಆತಂಕಕಾರಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿದ ಘಟನೆ ತೀವ್ರ ಖಂಡನೀಯ ಎಂದು ಹೇಳಿದರು.

ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಘಟನೆಗೆ ಕಾರಣಕರ್ತರ ವಿರುದ್ಧ ಕಾನೂನಿನಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಕ್ರಮ ವಹಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವುದರ ಮೂಲಕ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಯಡಿಯೂರಪ್ಪ ತಿಳಿಸಿದರು.

ವಿವಸ್ತ್ರ ಕೇಸ್ ಬೆನ್ನಲ್ಲೇ ವಿಡಿಯೋ ವೈರಲ್.. ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅಸಲಿ ಮುಖ ಬಯಲು!

0

ಹುಬ್ಬಳ್ಳಿ: ಇತ್ತೀಚೆಗೆ ವಿವಸ್ತ್ರ ಪ್ರಕರಣದ ಮೂಲಕ ಸುದ್ದಿಯಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಗೆ ಸಂಬಂಧಿಸಿದ ಹಳೆಯ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ವ್ಯಕ್ತಿಯನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿವೆ.

ಕಳೆದ ನವೆಂಬರ್ 12, 2023ರಂದು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಸುಜಾತಾ ಹಂಡಿ ಹಾಗೂ ಆಕೆಯ ಸಹಚರರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿತ್ತು. ಧಾರವಾಡ ತಾಲ್ಲೂಕಿನ ತುಕಾರಾಮ್ ಎಂಬ ವ್ಯಕ್ತಿಯನ್ನು ಹನಿಟ್ರ್ಯಾಪ್ ಮೂಲಕ ಕರೆಸಿಕೊಂಡು, ನಾಲ್ಕು ದಿನಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ವೇಳೆ ನೈಲಾನ್ ಹಗ್ಗ ಹಾಗೂ ಲಾಂಗ್ ಬಳಸಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈಗ ವೈರಲ್ ಆಗಿರುವ ವಿಡಿಯೋವನ್ನು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಬಿಡುಗಡೆ ಮಾಡಿದ್ದು, ಅದರಲ್ಲಿ ಹಲ್ಲೆಯ ದೃಶ್ಯಗಳು ಕಾಣಿಸಿಕೊಳ್ಳುತ್ತವೆ. ಹಲ್ಲೆಗೊಳಗಾದ ವ್ಯಕ್ತಿ ಕರುಣೆಗೆ ಮೊರೆಯಿಟ್ಟರೂ ಹಲ್ಲೆ ಮುಂದುವರೆದಿದೆ ಎನ್ನಲಾಗಿದೆ. ತನಿಖೆಯ ವೇಳೆ ಈ ಪ್ರಕರಣದಲ್ಲಿ ಬರೋಬ್ಬರಿ 1.84 ಲಕ್ಷ ರೂಪಾಯಿ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ಸುಜಾತಾ ಹಂಡಿ ಹಾಗೂ ಆಕೆಯ ಸಹಚರರನ್ನು ಬಂಧಿಸಿದ್ದರು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ಹಿನ್ನೆಲೆ ಹೊಂದಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಒಬ್ಬರಿಗೆ ಮಾತ್ರ ಪರಿಹಾರ, ಎಂಟು ಜೀವಗಳಿಗೆ ಬೆಲೆಯೇ ಇಲ್ಲವೇ? ಬೆಳಗಾವಿ ಸಕ್ಕರೆ ಕಾರ್ಖಾನೆ ವಿರುದ್ಧ ಆಕ್ರೋಶ

0

ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಎಂಟು ಕಾರ್ಮಿಕರು ಮೃತಪಟ್ಟಿರುವ ಪ್ರಕರಣದಲ್ಲಿ ಕಾರ್ಖಾನೆ ಆಡಳಿತ ಮಂಡಳಿಯ ನಡೆ ಅನುಮಾನಕ್ಕೆ ಕಾರಣವಾಗಿದೆ. ಈ ದುರಂತದ ಬಳಿಕವೂ ಕಾರ್ಖಾನೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ವರ್ತಿಸುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಮೃತಪಟ್ಟ ಎಂಟು ಕಾರ್ಮಿಕರ ಪೈಕಿ ಕೇವಲ ಒಬ್ಬ ಕಾರ್ಮಿಕನ ಕುಟುಂಬಕ್ಕೆ ಮಾತ್ರ ಪರಿಹಾರ ಘೋಷಿಸಿರುವ ಕಾರ್ಖಾನೆ, ಉಳಿದ ಕುಟುಂಬಗಳ ಬಗ್ಗೆ ಮೌನ ವಹಿಸಿದೆ. ಮೃತ ಮಂಜುನಾಥ ಕಾಜಗಾರ್ ಕುಟುಂಬದ ನಿರಂತರ ಒತ್ತಾಯದ ಹಿನ್ನೆಲೆ ಅವರಿಗೆ 18 ಲಕ್ಷ ರೂಪಾಯಿ ಪರಿಹಾರ ನೀಡುವ ಮೌಖಿಕ ಭರವಸೆ ನೀಡಲಾಗಿದೆ. ಆದರೆ ಇದು ಅಧಿಕೃತವಾಗಿ ಘೋಷಣೆ ಆಗಿಲ್ಲ.

ಈ ಅನ್ಯಾಯದ ವಿರುದ್ಧ ಬೈಲಹೊಂಗಲದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರೂ, ಕಾರ್ಖಾನೆ ಆಡಳಿತ ಮಂಡಳಿ ಇದುವರೆಗೆ ಸ್ಪಷ್ಟ ನಿಲುವು ಪ್ರಕಟಿಸಿಲ್ಲ. ಮಾಜಿ ಸಂಸದ ಪ್ರಭಾಕರ್ ಕೋರೆ, ಉದ್ಯಮಿ ವಿಜಯ ಮೆಟಗುಡ್ಡ ಹಾಗೂ ವಿಕ್ರಂ ಇನಾಮ್‌ದಾರ್ ಪಾಲುದಾರಿಕೆಯಲ್ಲಿರುವ ಈ ಕಾರ್ಖಾನೆ, ಮೃತರ ಕುಟುಂಬಸ್ಥರಿಗೆ ಸಾಂತ್ವನವನ್ನೂ ತಿಳಿಸದೇ ಮೌನಕ್ಕೆ ಜಾರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ಕೊರತೆ: ಎಂ.ಎಲ್. ಮೂರ್ತಿ ರಾಜೀನಾಮೆ

0

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ಘಟಕದಲ್ಲಿ ಆಂತರಿಕ ಅಸಮಾಧಾನ ತೀವ್ರಗೊಂಡಿರುವ ಸೂಚನೆ ದೊರೆತಿದ್ದು, ಪಕ್ಷದ ಹಿರಿಯ ನಾಯಕ ಎಂ.ಎಲ್. ಮೂರ್ತಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಮೂರ್ತಿ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹುದ್ದೆ ಸೇರಿದಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.

ಸುಮಾರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಎಂ.ಎಲ್. ಮೂರ್ತಿ, ಜಿಲ್ಲಾ ಅಧ್ಯಕ್ಷ ಹಾಗೂ ಸಿಡಿಎ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರವೂ ತಮ್ಮನ್ನು ಯಾವುದೇ ಹುದ್ದೆಗೆ ಪರಿಗಣಿಸದಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದಕ್ಕೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದ್ದರೂ, ನಾಯಕರ ನಡುವೆ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಮೂರ್ತಿಯವರ ರಾಜೀನಾಮೆ, ಪಕ್ಷದ ಒಳಗಿನ ಭಿನ್ನಮತ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಬಹುದೆಂಬ ಸೂಚನೆ ನೀಡಿದೆ. ಇದು ಕಾಫಿನಾಡ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಂತೆ ಪರಿಣಮಿಸಿದೆ.

error: Content is protected !!