ಬೆಂಗಳೂರು: ಸ್ನೇಹಿತನ ಪತ್ನಿಯೊಂದಿಗೆ ನಡೆದ ವೈಮನಸ್ಸಿನ ಹಿನ್ನೆಲೆಯಲ್ಲಿ ಆಕೆಯ 6 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರುಹಳ್ಳಿಯಲ್ಲಿ ನಡೆದಿದೆ.
ಹತ್ಯೆಯಾದ ಬಾಲಕಿಯನ್ನು ಶನಾದ್ (6) ಎಂದು ಗುರುತಿಸಲಾಗಿದ್ದು, ಆರೋಪಿ ಯೂಸಫ್ ನನ್ನುಪೊಲೀಸರು ಬಂಧಿಸಿದ್ದಾರೆ. ಯೂಸಫ್ ಹಾಗೂ ಬಾಲಕಿಯ ತಂದೆ ಇಜಾಮುಲ್ ಶೇಖ್ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಉದ್ಯೋಗ ನಿಮಿತ್ತ ನಲ್ಲೂರುಹಳ್ಳಿಯ ಸಮೀಪದ ಮನೆಗಳಲ್ಲಿ ವಾಸವಾಗಿದ್ದರು. ಆರೋಪಿ ಆಗಾಗ ಸ್ನೇಹಿತನ ಮನೆಗೆ ಭೇಟಿ ನೀಡುತ್ತಿದ್ದ ವೇಳೆ ಪತ್ನಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ. ಇದೇ ದ್ವೇಷದಿಂದ ಬಾಲಕಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಚರಂಡಿಗೆ ಎಸೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಆರೋಪಿ ಬಾಲಕಿಯನ್ನು ಕರೆದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಗು ಕಾಣೆಯಾಗಿದ್ದ ಬಗ್ಗೆ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಹುಡುಕಾಟ ನಡೆಸಿ ಶವ ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

