Home Blog Page 204

ಅಧಿಕಾರಿಗಳಲ್ಲಿ ಪರಸ್ಪರ ಸಮನ್ವಯತೆ ಇರಲಿ: ಶಾಸಕ ಡಾ. ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕ್ಷೇತ್ರದಲ್ಲಿ ಸರ್ಕಾರದಿಂದ ಮಂಜೂರಾದ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಗುತ್ತಿಗೆದಾರರು ಹಾಗೂ ಆಯಾ ಇಲಾಖೆಯ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚನೆ ನೀಡಿದರು.

ಅವರು ಗುರುವಾರ ತಾ.ಪಂ ಸಾಮರ್ಥ್ಯ ಸೌಧದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಸಲಹೆ–ಸೂಚನೆ ಹಾಗೂ ಸಹಕಾರ ನೀಡುವ ಕಾರ್ಯವಾಗಬೇಕು. ವಿನಾಕಾರಣ ಹಾಗೂ ದುರುದ್ದೇಶದಿಂದ ಕಾಮಗಾರಿಗಳಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು. ಪಂಚಾಯತ್‌ರಾಜ್ ಇಲಾಖೆಯ ಅಂಗನವಾಡಿಗಳಿಗೆ ಜೆಜೆಎಂ ಮುಖಾಂತರ ನೀರು ಸರಬರಾಜು ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಸಿಡಿಪಿಓ ಹಾಗೂ ಆರ್‌ಡಿಪಿಆರ್ ಇಂಜಿನಿಯರ್‌ಗಳ ವಿಭಿನ್ನ ಹೇಳಿಕೆಗಳನ್ನು ಕೇಳಿದ ಶಾಸಕರು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸದಿದ್ದರೆ ಕಾಮಗಾರಿಗಳು ಅಪೂರ್ಣವಾಗಬಹುದು ಅಥವಾ ಸ್ಥಗಿತಗೊಳ್ಳಬಹುದು. ಆದ್ದರಿಂದ ಅಧಿಕಾರಿಗಳಲ್ಲಿ ಪರಸ್ಪರ ಸಮನ್ವಯತೆ ಇರಲಿ ಎಂದು ಸೂಚಿಸಿದರು.

ನಿರ್ಮಿತಿ ಕೇಂದ್ರದವರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಂದಾಜು ಪಟ್ಟಿ ತಯಾರಿಸಿ ಹೈಟೆಕ್ ಶೌಚಾಲಯ ನಿರ್ಮಾಣದ ಯೋಜನೆ ರೂಪಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಹಾಕಿಸಿಕೊಂಡವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗೆ ಸರ್ಕಾರದಿಂದ ಮೌಲಾನಾ ಅಬ್ದುಲ್ ಕಲಾಂ ಶಾಲೆಗೆ ಅನುದಾನ ಲಭ್ಯವಾಗಲಿದ್ದು, ಒಂದು ಎಕರೆ ನಿವೇಶನ ಗುರುತಿಸುವಂತೆ ಸೂಚಿಸಿದರು. ಆದರ್ಶ ಗ್ರಾಮ ಯೋಜನೆಗೆ ರಾಜ್ಯ ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮತಮ್ಮ ಇಲಾಖೆಗಳ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಾ.ಪಂ ಆಡಳಿತಾಧಿಕಾರಿ ಎಂ.ವಿ. ಚಳಗೇರಿ ಮಾತನಾಡಿ, ಅಧಿಕಾರಿಗಳು ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಹಾಗೂ ಸಭೆಯ ಗಂಭೀರತೆಯನ್ನು ಅರಿತು ನಡೆದುಕೊಳ್ಳಬೇಕು ಎಂದರು.

ತಾ.ಪಂ ಇಒ ಕೃಷ್ಣಪ್ಪ ಧರ್ಮರ ಉಪಸ್ಥಿತರಿದ್ದರು. ಸಭೆಯಲ್ಲಿ ಶಿಕ್ಷಣ, ಸಮಾಜ ಕಲ್ಯಾಣ, ಆರೋಗ್ಯ, ಹೆಸ್ಕಾಂ, ಆಹಾರ, ತೋಟಗಾರಿಕೆ, ಕೃಷಿ, ಅಲ್ಪಸಂಖ್ಯಾತರ, ನಿರ್ಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ಮಾಹಿತಿ ನೀಡಿದರು.

ಶಿಕ್ಷಣ ಇಲಾಖೆಯ ಚರ್ಚೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿ, ಕೆಲವು ಶಾಲೆಗಳ ಶೌಚಾಲಯಗಳು ಅಪೂರ್ಣಗೊಂಡಿವೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಶಾಲೆಗಳಲ್ಲಿ ಶೌಚಾಲಯ ನಿರ್ಮಾಣದ ಕ್ರಿಯಾ ಯೋಜನೆ ರೂಪಿಸುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೇಂದ್ರ ಸರ್ಕಾರ ಕೂಲಿಕಾರರ ಹಿತ ಕಾಪಾಡಿಲ್ಲ: ಸಚಿವ ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ವಿಬಿಜಿ, ರಾಮ್ ಜಿ ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು, ಪ್ರವಾಸೋದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ ತಿಳಿಸಿದರು.

ಅವರು ಗುರುವಾರ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯದ ಕುರಿತು ತಿಳಿಸಿದರು.

ಜನರ ನ್ಯಾಯಾಲಯಕ್ಕೂ ವಿಬಿಜಿ, ರಾಮ್ ಜಿ ಯೋಜನೆ ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ. ಸಂವಿಧಾನದ 73ನೇ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ. ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ಎಂ.ಜಿ.ಎನ್.ಆರ್.ಇ.ಜಿ.ಎ ವಾಪಸ್ಸು ಪಡೆಯುವ ಮೂಲಕ ಮಾಡಲಾಗಿದೆ ಎಂದರು.

ಎಂ.ಜಿ.ಎನ್.ಆರ್.ಇ.ಜಿ.ಎ ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು, ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ. ಕೂಲಿಕಾರರ ಹಿತ ಕಾಪಾಡುವ ಆಸಕ್ತಿಯನ್ನು ಕೇಂದ್ರ ಸರ್ಕಾರ ತೋರಿಸಿಲ್ಲ. ಬದಲಿಗೆ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ. ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.

ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದಿದ್ದರೂ, ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣವೆಲ್ಲಿದೆ? ಶೇ. 40ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಭಾರೀ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಹಾಗೆ ಆಗಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದರು.

ಪಂಚಾಯತಿ ಚುನಾವಣೆಯನ್ನು ಆದಷ್ಟು ಶೀಘ್ರವಾಗಿ ನಡೆಸಲು ತೀರ್ಮಾನಿಸಿದೆ. ಹಲವಾರು ಪಂಚಾಯಿತಿಗಳು ಸುಪ್ರೀಂ ಕೋರ್ಟಿಗೆ ಹೋಗುವಂತೆ ರಾಜ್ಯ ಸರ್ಕಾರವನ್ನು ಕೋರಿವೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪೈಕಿ ಇಬ್ಬರು ಶಿಕ್ಷಾ ಬಂಧಿಗಳನ್ನು ಕೇಂದ್ರ ಗೃಹ ಮಂತ್ರಾಲಯದ ಸಹಮತಿ ದೊರಕಿದ ನಂತರ ಬಿಡುಗಡೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

ಮಹಾಯೋಗಿ ವೇಮನ ಜಯಂತಿ ಅರ್ಥಪೂರ್ಣವಾಗಿರಲಿ: ಡಾ. ದುರಗೇಶ್ ಕೆ.ಆರ್

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಾಯೋಗಿ ವೇಮನರ ಜಯಂತಿಯನ್ನು ಜನವರಿ 19ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಾಯೋಗಿ ವೇಮನರ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಹ ವೇಮನರ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ. ವೇಮನರ ಕುರಿತು ಆಳವಾಗಿ ಅಧ್ಯಯನ ಮಾಡಿದವರನ್ನು ಉಪನ್ಯಾಸಕರನ್ನಾಗಿ ಆಹ್ವಾನಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಮಹಾಯೋಗಿ ವೇಮನರ ಜಯಂತಿಯನ್ನು ಜ. 19ರಂದು ಜಿಲ್ಲಾಡಳಿತ ಹಾಗೂ ಸಮುದಾಯದ ಸಹಯೋಗದೊಂದಿಗೆ ಆಚರಿಸಲಾಗುತ್ತಿದ್ದು, ಸಮುದಾಯದವರು ಹಾಗೂ ಇಲಾಖೆಯವರು ಸಮಾಲೋಚನೆ ನಡೆಸಿದ ನಂತರ ಕಾರ್ಯಕ್ರಮದ ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯರು, ಗಣ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆ ಜಾರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದೆ. ಈ ಕಾರಣದಿಂದಾಗಿ ಡಿಜಿಟಲ್ ಇ-ಸ್ಟಾಂಪ್ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಸ್ತರಿಸಲು ನಿರ್ಧರಿಸಲಾಗಿದೆ.

ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಲಿದೆ. ನೋಂದಣಿಯೇತರ ದಸ್ತಾವೇಜಿನಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಡಿಜಿಟಲ್ ಇ-ಸ್ಟಾಂಪ್ ವಿಳಂಬವನ್ನು ತಡೆಗಟ್ಟುತ್ತದೆ. ಸ್ಥಳೀಯ ನಾಗರಿಕರು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ಸ್ವತಃ ಆನ್‌ಲೈನ್‌ನಲ್ಲಿ ಕರಡು ತಯಾರಿಸಿ ಇ-ಸ್ಟಾಂಪ್ ಸೃಜಿಸಿಕೊಳ್ಳಬಹುದು. ಈ ಸೇವೆ 24 7 ಲಭ್ಯ. ಸಂಪೂರ್ಣ ಪ್ರಕ್ರಿಯೆಯು ಡಿಜಿಟಲ್ ಆಗಿದ್ದು ಸುರಕ್ಷತೆ, ವೇಗದ ಎಲೆಕ್ಟ್ರಾನಿಕ್ ಪಾವತಿಗಳನ್ನು 247 ಮಾಡಬಹುದು. ಸ್ಟಾಂಪ್ ವಿಷಯವು ದಸ್ತಾವೇಜಿನ ಅವಿಭಾಜ್ಯವಾಗುತ್ತದೆ. ಇದು ದುರುಪಯೋಗವನ್ನು ತಡೆಯುತ್ತದೆ. ಆಧಾರ್ ಆಧಾರಿತ ಇ-ಸೈನ್ ಅಥವಾ ಡಿಎಸ್‌ಸಿ ಬಳಸಿ ದಸ್ತಾವೇಜುಗಳಿಗೆ ಡಿಜಿಟಲ್ ಸಹಿ ಮಾಡಬಹುದು. ಈ ವ್ಯವಸ್ಥೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ನಿರಂತರವಾಗಿ 24*7 ಲಭ್ಯವಿದೆ.

ಸಾರ್ವಜನಿಕರು ಡಿಜಿಟಲ್ ಇ-ಸ್ಟಾಂಪ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ನೋಂದಣಿಯೇತರ ದಸ್ತಾವೇಜುಗಳಿಗೆ ಉಪಯೋಗಿಸಲು ತಿಳಿಸಿದೆ. hಣಣಠis://ಞಚಿveಡಿi.ಞಚಿಡಿಟಿಚಿಣಚಿಞಚಿ.gov.iಟಿ ಈ ಲಿಂಕನ್ನು ಬಳಸಿ ಡಿಜಿಟಲ್ ಇ-ಸ್ಟಾಂಪ್‌ನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಿಥುನ್ ಜಿ.ಪಾಟೀಲರ 48ನೇ ಜನ್ಮದಿನದಂದು ವಿಶೇಷ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಜಿ.ಪಾಟೀಲ (ಮಿಥುನ್)ರವರ 48ನೇ ಜನ್ಮದಿನದ ನಿಮಿತ್ತ ಪಟ್ಟಣದ ಜಕ್ಕಲಿ ರಸ್ತೆಯಲ್ಲಿರುವ ಸೇಲ್ಸ್ ಸೊಸೈಟಿ ಆವರಣದಲ್ಲಿ ಜ.10ರಿಂದ 13ರವರೆಗೆ ಪ್ರೋ ಕಬಡ್ಡಿ ವೈಭವ ನಡೆಯಲಿದೆ ಎಂದು ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷ ಮುತ್ತು ನವಲಗುಂದ ಹೇಳಿದರು.

ಅವರು ಗುರುವಾರ ಪಿಡಬ್ಲುಡಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,
ಜ. 10ರಿಂದ 13ರವರೆಗೆ ನಡೆಯಲಿರುವ ಕಬಡ್ಡಿ ಪಂದ್ಯಗಳನ್ನು ವೀಕ್ಷಿಸಲು 4 ಸಾವಿರ ಜನರಿಗೆ ಗ್ಯಾಲರಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಂದ್ಯ ಆರಂಭಗೊಳ್ಳುವ ದಿನದಂದು ಬೆಂಗಳೂರು ಬುಲ್ಸ್ ತಂಡದ ಆಟಗಾರ ಗಣೇಶ ಹನ್ಮಂತಗೌಡ ಆಗಮಿಸಲಿದ್ದು, ಅಂದು ಬೆಳಿಗ್ಗೆ 10ಕ್ಕೆ ಪಟ್ಟಣದ ಸಿದ್ಧಾರೂಡ ಮಠದಿಂದ ಟ್ರೋಫಿಗಳ ಮೆರವಣಿಗೆ ನಡೆಯಲಿದೆ. ಸಂಜೆ 4ಕ್ಕೆ ಪಂದ್ಯಗಳ ಉದ್ಘಾಟನೆ ನಡೆಯಲಿದೆ ಎಂದರು.

ಯುವ ಮುಖಂಡ ಅಭಿಷೇಕ ನವಲಗುಂದ ಮಾತನಾಡಿ, ಕಬಡ್ಡಿ ಪಂದ್ಯಾವಳಿಗಳು ಅತ್ಯಂತ ವಿಶೇಷವಾಗಿದ್ದು, ಆಹ್ವಾನಿತ ನಾಲ್ಕು ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ. ಅಲ್ಲದೆ ಜ. 12ರಂದು ಸಂಜೆ ಇದೇ ಸ್ಥಳದಲ್ಲಿ ಮಹಿಳಾ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಜ. 9ರಂದು ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಮಾರ ಗಡಗಿ, ಗೋಪಿ ರಾಯನಗೌಡ್ರ, ಬಸವರಾಜ ಹೊಸಳ್ಳಿ, ರಿಯಾಜ ಮುಲ್ಲಾ, ಅಬ್ಬು ಮುಲ್ಲಾ, ಸತೀಶ ಮುಂತಾದವರು ಉಪಸ್ಥಿತರಿದ್ದರು.

ಸೋಮು ನಾಗರಾಜ ಮಾತನಾಡಿ, ಜ. 13ರಂದು ಸಮಾರೋಪ ಸಮಾರಂಭ ಜರುಗಲಿದೆ. ಅಂದು ಬೆಂಗಳೂರು ಬುಲ್ಸ್ ತಂಡದ ಇನ್ನೋರ್ವ ಆಟಗಾರ ಸತ್ಯಪ್ಪ ಮಟ್ಟಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಭಾಗವಹಿಸಲಿದ್ದಾರೆ. ಕೆಎಸ್‌ಆರ್‌ಟಿಸಿಯಲ್ಲಿ ಸೇವೆ ಸಲ್ಲಿಸಿ ಬಂಗಾರದ ಪದಕ ಪಡೆದಿರುವ ಸಿಬ್ಬಂದಿಗಳಿಗೆ, 108 ಅಂಬ್ಯುಲೆನ್ಸ್ ವಾಹನ ಚಾಲಕರಿಗೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ತಾಲೂಕಿನ ಜನತೆ ಸೇರಿದಂತೆ ಮತಕ್ಷೇತ್ರದ ಜನರು ಕಬಡ್ಡಿ ವೈಭವದಲ್ಲಿ ಪಾಲ್ಗೊಳ್ಳಬೇಕು ಎಂದರು.

ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

0

ವಿಜಯಸಾಕ್ಷಿ ಸುದ್ದಿ, ರೋಣ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕಾ ಘಟಕದ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಿದರು.

ಪಟ್ಟಣದ ಎಪಿಎಂಸಿ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಟ್ಟಣದ ಜಕ್ಕಲಿ ರಸ್ತೆ, ಮುಲ್ಲಾನ ಭಾವಿ ವೃತ್ತ ಹಾಗೂ ಪೋತರಾಜನ ಕಟ್ಟೆಯ ಬಳಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಹಾಗೂ ಕೇಂದ್ರ ಸರಕಾರಗಳ ವಿರುದ್ಧ ಧಿಕ್ಕಾರ ಕೂಗುತ್ತಾ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಸಂಗಪ್ಪ ಪವಾಡಶೆಟ್ಟರ ಮಾತನಾಡಿ, ಅತಿಯಾದ ಮಳೆಯಿಂದ ಮುಂಗಾರು ಬೆಳೆಗಳನ್ನು ಕಳೆದುಕೊಂಡಿರುವುದು ನಾಡಿಗೆ ತಿಳಿದಿರುವ ಸಂಗತಿ. ಮುಂಗಾರು ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಇದರಿಂದ ರೈತರ ಸಂಕಷ್ಟ ಹೆಚ್ಚಾಗಿದೆ. ಸರಕಾರ ಪರಿಹಾರ ವಿತರಣೆಯಲ್ಲಿಯೂ ಸಹ ಲೋಪದೋಷಗಳನ್ನು ಮಾಡಿದೆ. ಎಲ್ಲ ರೈತರಿಗೂ ಸಮರ್ಪಕವಾಗಿ ಪರಿಹಾರ ಸಿಕ್ಕಿಲ್ಲ. ಕೂಡಲೇ ಸರಕಾರ ಲೋಪವನ್ನು ಸರಿಪಡಿಸಿ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ಮೇಘರಾಜ ಭಾವಿ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿದ್ದರೆ ರೈತರು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಲಿದೆ. ಇದನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಅರಿಯಬೇಕು. ಜೊತೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ಅಂದಾಗ ಮಾತ್ರ ರೈತರು ಕೃಷಿ ಮಾಡಲು ಸಾಧ್ಯ ಎಂದರು.

ಪ್ರತಿಭಟನೆಯಲ್ಲಿ ಮುತ್ತಣ್ಣ ಚೌಡರೆಡ್ಡಿ, ಸಂಗಪ್ಪ ದಂಡಿನ, ಧರ್ಮಣ್ಣ ಭೂಸಗೌಡ್ರ, ಅಶೋಕ ಹಿರೇಮಠ, ರುದ್ರಯ್ಯ ಸಾಲಿಮಠ, ಗಂಗಣ್ಣ ಕೊಟಗಿ, ರಾಮಣ್ಣ ಸೂಡಿ, ಬೂದಪ್ಪ ಕಂಬಳಿ, ಹನಮಂತ ಅಬ್ಬಿಗೇರಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

ಮಾಡಲಗೇರಿ ಗ್ರಾಮಸ್ಥರಿಂದ ಅಬಕಾರಿ ಕಚೇರಿಗೆ ಮುತ್ತಿಗೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು

0

ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗಿದ್ದು, ಅಕ್ರಮ ಸಾರಾಯಿ ಸೇವನೆಯಿಂದ ಗ್ರಾಮದ 7ರಿಂದ 9 ವ್ಯಸನಿಗಳು ಸಾವನ್ನಪ್ಪಿದ್ದಾರೆ. ಈ ಕುರಿತು ಹಲವಾರು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಸಹ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಮಾಡಲಗೇರಿ ಗ್ರಾಮಸ್ಥರು ಗುರುವಾರ ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಸುಮಾರು 9 ಜನ ಅಕ್ರಮ ಸಾರಾಯಿ ಮಾರಾಟದಲ್ಲಿ ತೊಡಗಿಕೊಂಡಿದ್ದಾರೆ. ಗ್ರಾಮದ ಯುವಕರು ದುಡಿದು ಬಂದ ಹಣವನ್ನು ಸಾರಾಯಿ ಕುಡಿತಕ್ಕೆ ಸುರಿಯುತ್ತಿದ್ದಾರೆ. ಇದರಿಂದ ಅನೇಕ ಸಂಸಾರಗಳು ಬೀದಿಗೆ ಬಂದಿದ್ದು, ಗ್ರಾಮದಲ್ಲಿಯೇ ಸಿಗುತ್ತಿರುವ ಮದ್ಯವನ್ನು ಸೇವಿಸಿ ಇಲ್ಲಿಯವರೆಗೆ 7ರಿಂದ 9 ಜನರು ಮೃತಪಟ್ಟಿದ್ದಾರೆ. ಇದಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದರು.

ಸಾರಾಯಿ ಸೇವನೆಯಿಂದ ಮಕ್ಕಳನ್ನು ಕಳೆದುಕೊಂಡಿರುವ ತಾಯಂದಿರು ಅಬಕಾರಿ ನಿರೀಕ್ಷಕರಾದ ಶ್ರೀದೇವಿ ಕೊಳ್ಳಿಯವರನ್ನು ತರಾಟೆಗೆ ತೆಗೆದುಕೊಂಡು ಕಣ್ಣೀರು ಹಾಕಿದರು. ಇಲಾಖೆಯ ಸಿಬ್ಬಂದಿಗಳೇ ಅಕ್ರಮ ಸಾರಾಯಿ ಮಾರಾಟದಲ್ಲಿ ನೇರವಾಗಿ ತೊಡಗಿಕೊಂಡಿದ್ದಾರೆ. ಅಲ್ಲದೆ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಸಾರಾಯಿ ಮಾರಾಟ ಅಧಿಕವಾಗುತ್ತಿದ್ದು, ಇದಕ್ಕೆಲ್ಲ ನೀವೇ ಕಾರಣ ಎಂದು ಹರಿಹಾಯ್ದರು. ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟ ನಿಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮಸ್ಥರ ಸಿಟ್ಟು ಅರಿತ ಪಿಎಸ್‌ಐ ಪ್ರಕಾಶ ಬಣಕಾರ ಮಧ್ಯ ಪ್ರವೇಶಿಸಿ, ಗ್ರಾಮದಲ್ಲಿ ಈ ರೀತಿ ನಡೆಯುತ್ತಿದೆ ಎಂದು ನಮ್ಮ ಗಮನಕ್ಕೆ ತಂದಿದೀರಿ, ಇನ್ನು ನಿಮಗೆ ಚಿಂತೆ ಬೇಡ. ಗ್ರಾಮದಲ್ಲಿ ನಡೆಯುವ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಲಾಗುವುದು ಎನ್ನುತ್ತಿದ್ದಂತೆ ಪುನಃ ಆಕ್ರೋಶಗೊಂಡ ಮಹಿಳೆಯರು, ಈಗಾಗಲೇ ಹತ್ತಾರು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಗ್ರಾಮಸ್ಥರನ್ನು ಕುರಿತು ಪಿಎಸ್‌ಐ ಪ್ರಕಾಶ ಬಣಕಾರ, ನಿಮ್ಮ ಆಕ್ರೋಶ ನಮಗೆ ಅರ್ಥವಾಗುತ್ತದೆ. ಅಕ್ರಮ ಸಾರಾಯಿ ಮಾರಾಟವಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಮಾಧಾನಪಡಿಸಿದಾಗ, ಇದಕ್ಕೆ ಒಪ್ಪಿದ ಗ್ರಾಮಸ್ಥರು ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನೆಯಲ್ಲಿ ರತ್ವವ್ವ ಮಂಡಸೊಪ್ಪಿ, ಯಲ್ಲಮ್ಮ ರಾಯನಗೌಡ್ರ, ಭೀಮವ್ವ ಭಾವಿ, ಶೇಖವ್ವ ಪಾಟೀಲ, ಶಿವಗಂಗವ್ವ ಭೀಮನಗೌಡ್ರ ಮುಂತಾದವರಿದ್ದರು.

“ಅಕ್ರಮ ಸಾರಾಯಿ ಮಾರಾಟದಿಂದ ಗ್ರಾಮದಲ್ಲಿ ನೆಮ್ಮದಿಯಿಲ್ಲ. ಸಂಜೆಯಾದರೆ ಮಹಿಳೆಯರು ಹೊರಗಡೆ ಬರುವಂತಿಲ್ಲ, ಮನೆಯ ಜವಾಬ್ದಾರಿಗಳನ್ನು ಹೊರಬೇಕಾದ ಮಕ್ಕಳು ಸಾರಾಯಿ ಚಟಕ್ಕೆ ಬಲಿಯಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸ್ವತಃ ನಾನೇ ಮಗನನ್ನು ಕಳೆದುಕೊಂಡಿದ್ದೇನೆ. ಬೇರೆಯವರ ಮಕ್ಕಳೂ ಬಲಿಯಾಗಬಾರದೆಂದು ನನ್ನ ಹೋರಾಟ ಸಾಗಿದೆ. ಇನ್ನಾದರೂ ಅಧಿಕಾರಿಗಳು ಅಕ್ರಮ ಸಾರಾಯಿ ಮಾರಾಟವನ್ನು ನಿಲ್ಲಿಸಲಿ”

  • ಹನಮವ್ವ ಭೀಮನಗೌಡ್ರ.
    ಮಾಡಲಗೇರಿ.

“ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟದಿಂದ ಈಗಾಗಲೇ 7ರಿಂದ 9 ಜನ ಸಾವನ್ನಪ್ಪಿದ್ದಾರೆ. ಈ ಕುರಿತು ಹಲವಾರು ಬಾರಿ ಇಲಾಖೆಯವರಿಗೆ ತಿಳಿಸಿದರು ಸಹ ಪ್ರಯೋಜನವಾಗುತ್ತಿಲ್ಲ. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ”

  • ಶಂಕರಗೌಡ ಭೀಮನಗೌಡ್ರ.
    ಮಾಡಲಗೇರಿ.

ಮಂಡ್ಯ| ಮೈ- ಬೆಂ ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

0

ಮಂಡ್ಯ:- ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಮೈ–ಬೆಂ ದಶಪಥ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ.

ಬೆಂಗಳೂರಿಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಕಾರಿನಲ್ಲಿದ್ದ ದಂಪತಿ ತಕ್ಷಣ ಇಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಪಿ. ಹೊಸಹಳ್ಳಿ ಗ್ರಾಮದ ಕಿರಣ್ ಮತ್ತು ರಂಜಿತ ಎಂಬುವವರೇ ಅಪಾಯದಿಂದ ಪಾರಾದವರು.

ಮಾಹಿತಿ ಪಡೆದ ಮದ್ದೂರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಟಿ.ಎಲ್. ರಾಜಕುಮಾರರಿಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೃಹರಕ್ಷಕ ದಳ ಗದಗ ಜಿಲ್ಲಾ ಕಚೇರಿಯ ಸಿಬ್ಬಂದಿ ಟಿ.ಎಲ್. ರಾಜಕುಮಾರ ಅವರು ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಮತ್ತು ಡಬಲ್ಸ್‌ನಲ್ಲಿ ಪ್ರಥಮ ಸ್ಥಾನ (45 ವರ್ಷ ಮೇಲ್ಪಟ್ಟು ವಿಭಾಗದಲ್ಲಿ) ಹಾಗೂ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ದ್ವಿತೀಯ ಸ್ಥಾನ (45 ವರ್ಷ ಒಳಪಟ್ಟು ವಿಭಾಗದಲ್ಲಿ) ಪಡೆದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ಗೃಹರಕ್ಷಕ ದಳ ಇಲಾಖೆಯ ಜಿಲ್ಲಾ ಸಮಾದೇಶ್ಠ ಚನ್ನಾರಡ್ಡಿ ಬಸವರಾಜ ಗೊಳರಡ್ಡಿರವರು, ಅಡ್ಜುಟೆಂಟ್ ಕೆ.ಸಿ. ವಕ್ಕಳದ, ಜಿಲ್ಲಾ ಬೋಧಕ ಕಿರಣಕುಮಾರ ಕಟಗಿ, ಘಟಕಾಧಿಕಾರಿಗಳಾದ ಎಸ್.ಎಫ್. ದೊಡ್ಡಮನಿ, ಸಿ.ಜಿ. ಮುದಿಯಪ್ಪನವರ, ಆರ್.ಎಂ. ಹುಡೇದ, ಸಿಬ್ಬಂದಿಗಳಾದ ಬಿ.ಡಿ. ನಾಯಕ, ಬಿ.ಎಸ್. ಬಸವರಡ್ಡಿ ಮುಂತಾದವರಿದ್ದರು.

ಸಾಮೂಹಿಕ ಸತ್ಯನಾರಾಯಣ ಪೂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದಗ ತಾಲೂಕು, ಗದಗ ಸಿಟಿ ವಲಯದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮವನ್ನು ನಗರದ ಸಂಸ್ಕೃತ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಓಂಕಾರೇಶ್ವರ ಹಿರೇಮಠದ ಪಟ್ಟಾಧ್ಯಕ್ಷರಾದ ಷ. ಬ್ರ. ಶ್ರೀ ಫಕೀರೇಶ್ವರ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಕೀರ್ತಿ ಜಕನೂರು ವಹಿಸಿದ್ದರು.

ಕ್ರಾಂತಿಸೇನಾ ಗದಗ ಜಿಲ್ಲಾಧ್ಯಕ್ಷ ಬಾಬು ಬಾಕಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್ಥಿಕವಾಗಿ ಮಹಿಳೆಯರು ಸಬಲರಾಗಲು ಧರ್ಮಸ್ಥಳ ಸಂಸ್ಥೆ ಸಹಾಯ ಮಾಡುತ್ತದೆ. ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಪಾಲ್ಗೊಂಡಿದ್ದರು. ಯೋಜನಾಧಿಕಾರಿ ಉಮಾ ಎನ್.ಜಿ ಸಂಸ್ಥೆಯ ಚಟುವಟಿಕೆಗಳನ್ನು ತಿಳಿಸಿದರು.

ಸುಧೀರ ಕಾಟಿಗಾರ, ಡಾ. ಗಣೇಶ ಸುಲ್ತಾನಪುರ ಮಾತನಾಡಿದರು. ಪದ್ಮಾವತಿ ಪರಶುರಾಮ ಕಟಿಗಿ, ನಾಗರೆಡ್ಡಿ ತಿಮ್ಮಣ್ಣ ನಿಡಗುಂದಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಿರಣ ಎಂ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

error: Content is protected !!