Home Blog Page 213

ಜನರ ಮೂಗಿಗೆ ತುಪ್ಪ ಒರೆಸದಿರಿ: ಬಸವರಾಜ ಬೊಮ್ಮಾಯಿ 

0

ವಿಜಯಸಾಕ್ಷಿ ಸುದ್ದಿ, ಗದಗ: ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಜನಪರ ವಿಚಾರಗಳಲ್ಲಿ ಅಧಿಕಾರಿಗಳು ಜನರ ಮೂಗಿಗೆ ತುಪ್ಪ ಒರೆಸುವ ಕ್ರಮವಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ಎಚ್ಚರಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರೀತಿಯ ತಾರತಮ್ಯ ಸಲ್ಲದು ಎಂದು ಸ್ಪಷ್ಟಪಡಿಸಿದರು.

ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮನೆ-ಮನೆಗೆ ನೀರು ತಲುಪುವಂತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಧಿಕಾರಿಗಳು ಸಭೆಗೆ ತಪ್ಪು ಮಾಹಿತಿ ನೀಡದೇ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಸದರು ಸೂಚಿಸಿದರು.

ಕೇಂದ್ರ ಸರ್ಕಾರವು ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ರಸ್ತೆ, ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜನಹಿತದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ಯಾವುದೇ ವಿಳಂಬ, ಅಸಡ್ಡೆಗೆ ಅವಕಾಶ ನೀಡಬಾರದು ಎಂದು ಸಂಸದರು ತಿಳಿಸಿದರು.

ಶಾಲೆ ಎಂಬುದು ಪವಿತ್ರ ಸ್ಥಳ. ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಿ ಅಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಬೇಕು. ಈ ಕಾರ್ಯಕ್ಕೆ ಗ್ರಾ.ಪಂ ಹಾಗೂ ಪೊಲೀಸ್ ಇಲಾಖೆಗಳ ಸಹಯೋಗ ಪಡೆಯುವಂತೆ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕಳ್ಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಪಟ್ಟಿ ಒದಗಿಸಬೇಕು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸಂಬಂಧಿತ ಮಾಹಿತಿಯನ್ನು ಸಭೆಗೆ ತರಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಜಿಲ್ಲೆಯ ಕೆಲವೊಂದು ಶಾಲಾ ಆವರಣಗಳಲ್ಲಿ ಸಾರಾಯಿ ಬಾಟಲಿಗಳು ಬಿದ್ದಿರುವುದು ಕಂಡುಬರುತ್ತಿವೆ. ಎಲ್ಲ ಶಾಲೆಗಳಲ್ಲಿ ಸಿಸಿ ಟಿವಿ ಅಳವಡಿಸಲು ಕ್ರಮ ವಹಿಸಬೇಕು ಎಂದರು.

ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಜೆಜೆಎಂ ಅಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಳ್ಳಬೇಕಾದರೆ ಗ್ರಾಮದ ಪ್ರತಿ ಮನೆಗೂ ನೀರು ತಲುಪಬೇಕು. ಆದರೆ ಈವರೆಗೂ ಕೇವಲ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಇತರೆ ಕಾರ್ಯಗಳನ್ನಷ್ಟೇ ಮಾಡಿದ್ದು, ಜೆಜೆಎಂ ಯೋಜನೆ ಸಂಪೂರ್ಣ ಯಶಸ್ವಿಯಾಗಿಲ್ಲ. ನೀರು ಮನೆ ಬಾಗಿಲಿಗೆ ತಲುಪಿದಾಗಷ್ಟೇ ಯೋಜನೆಯ ಸದ್ಬಳಕೆಯಾದಂತಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

ಅವಳಿ ನಗರದ ನೀರು ಪೂರೈಕೆ ಸಂಬಂಧಿ ವ್ಯವಸ್ಥಿತವಾಗಿ ಯೋಜನೆಯನ್ನು ಕೊಲ್ಲುವ ಪಿತೂರಿ ನಡೆಯುತ್ತಿದೆ. ಅಮೃತ ಯೋಜನೆಯ ಅನುದಾನ ಕೇಂದ್ರ ಸರ್ಕಾರದ್ದು. ಅದನ್ನು ಸದ್ಬಳಕೆ ಮಾಡಬೇಕು. ಬಡವರು ಮತ್ತು ಅರ್ಹರಿಗೆ ಮನೆ ಮಂಜೂರು ಮಾಡುವ ಮನಸ್ಸು ಅಧಿಕಾರಿಗಳಲ್ಲಿ ಇರಬೇಕು. ಮನೆ ಮಂಜೂರು ಮಾಡದಿರುವುದಕ್ಕೆ ನಿಮ್ಮಲ್ಲಿ 101 ಕಾರಣಗಳಿರುತ್ತವೆ, ಆ ಮನೋಭಾವ ಬಿಡಿ. ಜೊತೆಗೆ ಪರಿಹಾರ ವಿತರಣೆಯಲ್ಲೂ ತಾರತಮ್ಯ ನಡೆದಿದೆ ಎಂಬ ದೂರುಗಳು ಕೇಳಿಬರುತ್ತಿವೆ.
– ಬಸವರಾಜ ಬೊಮ್ಮಾಯಿ, ಸಂಸದರು, ಹಾವೇರಿ–ಗದಗ.

ಗದಗ ಜಿಲ್ಲಾ ಕ್ಲಾಥ್ ಮರ್ಚಂಟ್ಸ್ ಅಸೋಸಿಯೇಶನ್‌ದಿಂದ: ಸಂಸದ ಬೊಮ್ಮಾಯಿ ಅವರಿಗೆ ಮನವಿ ಅರ್ಪಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗಿನ ಹೊರವಲಯದಲ್ಲಿರುವ ರೇಲ್ವೆ ಬೈಪಾಸ್ ನಿಲ್ದಾಣದಲ್ಲಿ ಸಕಲ ಮೂಲಭೂತ ಸೌಲಭ್ಯ ಆದ ನಂತರ ರೈಲು ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಗದಗ ಜಿಲ್ಲಾ ಕ್ಲಾಥ್ ಮರ್ಚಂಟ್ಸ್ ಅಸೋಸಿಯೇಶನ್ ವತಿಯಿಂದ ಸಂಸದ ಬಸವರಾಜ ಬೊಮ್ಮಾಯಿ ಅವರ ಮೂಲಕ ಕೇಂದ್ರ ರೇಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಗದಗಿಗೆ ಆಗಮಿಸಿದ್ದ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಅಸೋಸಿಯೇಶನ್‌ನ ಅಧ್ಯಕ್ಷ ಸುರೇಶ ಬನಸಾಲಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ವ್ಯಾಪಾರಸ್ಥರು, ವೃದ್ಧರು, ಮಹಿಳೆಯರು, ಮಕ್ಕಳು ರೇಲ್ವೆ ಪ್ರವಾಸ ಕೈಗೊಂಡು ಗದಗಿನ ಈ ರೇಲ್ವೆ ಬೈಪಾಸ್ ಸ್ಟೇಷನ್‌ನಲ್ಲಿ ಇಳಿಯುವುದು, ಹತ್ತುವುದನ್ನು ಮಾಡಲು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಬೈಪಾಸ್ ನಿಲ್ದಾಣದಲ್ಲಿ ಭದ್ರತೆ ಇಲ್ಲ, ಪೊಲೀಸ್ ಉಸ್ತುವಾರಿ ಇಲ್ಲ, ಬೈಪಾಸ್ ನಿಲ್ದಾಣದಿಂದ ಮಧ್ಯರಾತ್ರಿ ಗದಗ ಸಿಟಿಗೆ ಸಂಚರಿಸಲು ಬಸ್, ಅಟೋ ವ್ಯವಸ್ಥೆ ಇಲ್ಲ. ಆದ್ದರಿಂದ ಈ ಎಲ್ಲ ವ್ಯವಸ್ಥೆಯ ಬಳಿಕವೇ ಇಲ್ಲಿ ರೈಲು ನಿಲುಗಡೆ ಆಗಬೇಕು ಎಂದು ಮನವಿಯಲ್ಲಿ ವಿವರಿಸಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದ ಬಸವರಾಜ ಬೊಮ್ಮಾಯಿ, ಮನವಿಯ ಗಂಭೀರತೆಯನ್ನು ಅರಿತು ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರ ಗಮನಕ್ಕೆ ತರುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಸೋಸಿಯೇಶನ್ ಕಾರ್ಯದರ್ಶಿ ಹೀರಾಚಂದ್ರ ಸೆಮ್ಲಾನಿ, ಖಜಾಂಚಿ ಮಹಾವೀರ ಸೋಳಂಕಿ, ಸುರೇಶ ಓಸ್ವಾಲ, ಹರೀಶ್ ಶಹಾ, ಸುರೇಶ ಕೋಠಾರಿ, ಪೃಥ್ವಿರಾಜ ಬನಸಾಲಿ, ಮದನಲಾಲ ಲುಂಕಡ, ಪ್ರವೀಣ ಸಂಕಲೇಚಾ, ಸ್ವರೂಪ ದೂಖಾ, ಧೀರಜ್ ಭಾಪಣಾ, ರಾಜೇಂದ್ರ ಸಂಘವಿ, ಮೋಹನ ಪವಾರ, ಮಹಾವೀರ ಸಂಕಲೇಚಾ, ರಾಜೇಂದ್ರ ಪಾಲರೇಚಾ, ಚೇಂಬರ್ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ರಾಜು ಕುರಡಗಿ ಮುಂತಾದವರಿದ್ದರು.

ಬ್ಯಾಂಕುಗಳು ಜನಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಲಿ: ಸಂಸದ ಬಸವರಾಜ ಬೊಮ್ಮಾಯಿ

0
  • ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ ಸಭೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ: ಬ್ಯಾಂಕುಗಳು ಕೇವಲ ಹಣಕಾಸು ಸಂಸ್ಥೆಗಳಲ್ಲ, ಸಮಾಜದ ಆರ್ಥಿಕ ಚಲನೆಗೆ ದಿಕ್ಕು ತೋರಿಸುವ ಪ್ರಮುಖ ಸಂಸ್ಥೆಗಳಾಗಿವೆ. ಬ್ಯಾಂಕುಗಳಲ್ಲಿ ಇರುವ ಹಣ ಸಂಪೂರ್ಣವಾಗಿ ಸಾರ್ವಜನಿಕರದ್ದೇ ಆಗಿದ್ದು, ಆ ಹಣವನ್ನು ಸ್ಥಳೀಯವಾಗಿ ಸದ್ಬಳಕೆ ಮಾಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಹಕಾರ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಂಗ್ರಹವಾಗುವ ಬ್ಯಾಂಕ್ ಹಣವನ್ನು ಇದೇ ಪ್ರದೇಶದ ಅಭಿವೃದ್ಧಿಗೆ ಬಳಸಬೇಕು. ಇದರಿಂದ ಉದ್ಯೋಗ ಸೃಷ್ಟಿ, ವ್ಯಾಪಾರ ವೃದ್ಧಿ ಹಾಗೂ ಗ್ರಾಮೀಣ ಆರ್ಥಿಕ ಬಲವರ್ಧನೆ ಸಾಧ್ಯವಾಗುತ್ತದೆ. ಈ ಮೂಲಕ ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಬಹುದು ಎಂದು ಸಂಸದರು ಅಭಿಪ್ರಾಯಪಟ್ಟರು.

ರೈತರು, ಮಹಿಳೆಯರು, ಯುವ ಉದ್ಯಮಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕ್ ಸಾಲ ಸುಲಭವಾಗಿ ದೊರಕುವಂತೆ ಬೃಹತ್ ಮಟ್ಟದಲ್ಲಿ ಲೋನ್ ಮೇಳಗಳನ್ನು ಆಯೋಜಿಸಬೇಕು. ಸಾಲ ಅರ್ಜಿಗಳ ಪ್ರಕ್ರಿಯೆ ಸರಳವಾಗಿರಬೇಕು. ಅರ್ಹ ಫಲಾನುಭವಿಗಳಿಗೆ ಯಾವುದೇ ಅನಗತ್ಯ ಅಡೆತಡೆ ಆಗಬಾರದು ಎಂದು ಹೇಳಿದರು.

ಬಡತನ ನಿವಾರಣೆಯಲ್ಲಿ ಹೌಸಿಂಗ್ ಲೋನ್ ಮಹತ್ವದ ಪಾತ್ರ ವಹಿಸುತ್ತದೆ. ಸ್ವಂತ ಮನೆ ಹೊಂದುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನಮಟ್ಟ ಸುಧಾರಿಸುತ್ತದೆ. ಈ ಹಿನ್ನೆಲೆಯಲ್ಲಿ ಗೃಹ ಸಾಲ ವಿತರಣೆಗೆ ಬ್ಯಾಂಕುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಸದರು ಸಲಹೆ ನೀಡಿದರು.

ಬ್ಯಾಂಕುಗಳು ಕಚೇರಿಗಳಿಗೆ ಸೀಮಿತವಾಗದೆ ಜನರ ಬಳಿಗೆ ಹೋಗಬೇಕು. ಸಾಲ ಮಂಜೂರಾತಿಯಲ್ಲಿ ವಿಳಂಬವಾಗಬಾರದು. ಅರ್ಹರಿಗೆ ಯಾವುದೇ ಅಡಚಣೆ ಇಲ್ಲದೆ ಸಾಲ ಸೌಲಭ್ಯ ದೊರೆಯಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ ಎಂ.ವಿ ಮಾತನಾಡಿ, ಜಿಲ್ಲೆಯಲ್ಲಿ 31-12-2025ರವರೆಗೆ ಲೀಡ್ ಬ್ಯಾಂಕ್‌ನ 183 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸೆಪ್ಟೆಂಬರ್ 2025ರವರೆಗೆ ಜಿಲ್ಲೆಯ ಸಾಲ ಠೇವಣಿ ಅನುಪಾತ ಶೇ. 102.18ರಷ್ಟಾಗಿರುತ್ತದೆ. ಎಲ್ಲ ಬ್ಯಾಂಕ್‌ನ ನಿಯಂತ್ರಣಾಧಿಕಾರಿಗಳು ಸಾಲ ಠೇವಣಿ ಅನುಪಾತವನ್ನು ಸುಧಾರಿಸಲು ಶಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಲ ಯೋಜನೆಗಳಾದ ಪ್ರಧಾನಮಂತ್ರಿ ಮುದ್ರಾ ಯೋಜನೆ, ಉದ್ಯೋಗಿನಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದೇವರಾಜ ಅರಸ ಹಿಂದುಳಿದ ಅಭಿವೃದ್ಧಿ ನಿಗಮ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿ.ಪಂನ ಎನ್‌ಆರ್‌ಎಲ್‌ಎಂ (ಸ್ವ-ಸಹಾಯ ಗುಂಪು), ಪಿಎಂಎವೈ, ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ, ಪಿಎಂಎಫ್‌ಬಿವೈ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ನಬಾರ್ಡ್‌ನ ಎಜಿಎಂ ಮಯೂರ ಕಾಂಬ್ಳೆ, ಆರ್‌ಬಿಐ ಎಜಿಎಂ ಸೂರಜ ಎಸ್, ಎಸ್‌ಬಿಐ ರೀಜನಲ್ ಮ್ಯಾನೇಜರ್ ನಾಗಸುಬ್ಬಾರೆಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು, ಬ್ಯಾಂಕ್‌ನ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕುಗಳು ಪ್ರಮುಖ ಪಾತ್ರ ವಹಿಸಬೇಕು. ಸರ್ಕಾರದ ಜನಪರ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ತಲುಪುವಂತೆ ಬ್ಯಾಂಕುಗಳು ಕಾರ್ಯನಿರ್ವಹಿಸಬೇಕು. ಬ್ಯಾಂಕುಗಳು ಮಾನವೀಯತೆ, ಸಾಮಾಜಿಕ ಹೊಣೆಗಾರಿಕೆ ಹಾಗೂ ಜನಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಬೇಕು. ಲಾಭವೇ ಮುಖ್ಯ ಎಂಬ ಮನೋಭಾವವನ್ನು ಬಿಟ್ಟು, ಬ್ಯಾಂಕುಗಳು ಸ್ಥಾಪನೆಯಾದ ಮೂಲ ಉದ್ದೇಶವನ್ನು ಮೊದಲು ಈಡೇರಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಾಳೆ ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಸಿಎಂ ಸಿದ್ದರಾಮಯ್ಯ!

0

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಾವೇರಿಯ ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಿಎಂ ಹಾಗೂ ಡಿಸಿಎಂ ಅವರು ಹಾವೇರಿಯ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ ಸದಾಶಿವ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.

ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಶೀಘ್ರದಲ್ಲಿ ಉದ್ಘಾಟನೆ ಆಗಬೇಕೆಂಬ ಆಸೆ ಇತ್ತು. ಲೋಕಸಭೆ ಚುನಾವಣೆಗೆ ಮುಂಚೆಯೇ ಕಟ್ಟಡ ಉದ್ಘಾಟನೆ ಮಾಡುವ ಉದ್ದೇಶ ಇದ್ದರೂ, ಕೇಂದ್ರದ ನಾಯಕರು ಬರಲಿದ್ದಾರೆ ಎಂಬ ಕಾರಣದಿಂದ ಉದ್ಘಾಟನೆ ಸ್ವಲ್ಪ ತಡವಾಯಿತು. ಕೇಂದ್ರ ನಾಯಕರನ್ನು ಕರೆದುಕೊಂಡು ಬರುವ ಜವಾಬ್ದಾರಿಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತೆಗೆದುಕೊಂಡಿದ್ದರು ಎಂದರು.

ಈ ಮೆಡಿಕಲ್ ಕಾಲೇಜು ಆರಂಭವಾದರೆ ಹಾವೇರಿ ಜಿಲ್ಲೆಯ ಜನರು ಚಿಕಿತ್ಸೆಗಾಗಿ ದಾವಣಗೆರೆ ಹಾಗೂ ಹುಬ್ಬಳ್ಳಿಗೆ ಹೋಗುವ ಅಗತ್ಯ ಕಡಿಮೆಯಾಗಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಿದರು. ಅವರ ಅಧಿಕಾರದ ಅವಧಿಯಲ್ಲಿ ಮೆಡಿಕಲ್ ಕಾಲೇಜು ಉದ್ಘಾಟನೆ ಆಗುತ್ತಿರುವುದು ಇದೇ ಮೊದಲ ಬಾರಿಗೆ. ತಾನು ಉಸ್ತುವಾರಿ ವಹಿಸಿರುವ ಜಿಲ್ಲೆಗೆ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಸಿಎಂ ಹಾಗೂ ಡಿಸಿಎಂ ಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು| ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್!

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಾಲೆ–ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಖಾಸಗಿ ಕಂಪನಿಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬರುತ್ತಿದ್ದು, ಇದೀಗ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೂ ಬಾಂಬ್ ಬೆದರಿಕೆ ಬಂದಿರುವ ಘಟನೆ ನಡೆದಿದೆ.

ಜನವರಿ 6ರ ಮಂಗಳವಾರ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಈ ಮೇಲ್‌ನಲ್ಲಿ ಕಚೇರಿಯನ್ನು ಸ್ಫೋಟಗೊಳಿಸುವುದಾಗಿ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಪಾಸ್‌ಪೋರ್ಟ್ ಕಚೇರಿ ಅಧಿಕಾರಿಗಳು ಕೋರಮಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.

ಮಾಹಿತಿ ಪಡೆದ ಕೋರಮಂಗಲ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪಾಸ್‌ಪೋರ್ಟ್ ಕಚೇರಿಯ ಒಳಭಾಗ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸುದೀರ್ಘ ಶೋಧ ಕಾರ್ಯ ನಡೆಸಿದರು. ಪರಿಶೀಲನೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಪೋಟಕಗಳು ಪತ್ತೆಯಾಗಿಲ್ಲ.

ಪರಿಶೀಲನೆಯ ನಂತರ ಇದೊಂದು ಸುಳ್ಳು ಬೆದರಿಕೆ ಮೇಲ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈ ಸಂಬಂಧ ಪಾಸ್‌ಪೋರ್ಟ್ ಕಚೇರಿ ಅಧಿಕಾರಿಗಳು ಕೋರಮಂಗಲ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿಯ ಮೂಲ ಪತ್ತೆ ಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ಭೀಕರ ಅಪಘಾತ| ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು!

0

ಚಿತ್ರದುರ್ಗ:- ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನತ್ತ ಸಾಗುತ್ತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ತೆಲಂಗಾಣಕ್ಕೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಅನಿತಾ ಎಂಬ ಮಹಿಳೆ ಇದ್ದು, ಅಪಘಾತದ ತೀವ್ರತೆಯಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಅವರ ಪತಿ ಬಾಲಾಜಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಸತ್ಯವನ್ನು ಮರೆಮಾಚಲು ಯಾರಿಗೂ ಸಾಧ್ಯವಿಲ್ಲ: ಡಿಕೆಶಿ ಎಚ್ಚರಿಕೆ

0

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆ ಆಗಬಾರದು ಇತ್ತು, ನನಗೆ ತುಂಬಾ ನೋವಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಕೆಲಸ ಮಾಡಿದ ಅನುಭವ ನನಗಿದೆ. ಆಗ ಜನ ಉದ್ಯೋಗ ಕಳೆದುಕೊಂಡರೂ ಜಿಲ್ಲೆಯಲ್ಲಿ ಶಾಂತಿ ಇತ್ತು. ಇವತ್ತು ನಡೆದ ಘಟನೆ ಆ ಶಾಂತಿಯನ್ನು ಭಂಗಗೊಳಿಸಿದೆ ಎಂದು ಹೇಳಿದರು.

ಘಟನೆಯ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ನನ್ನ ತಂಡದಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಸತ್ಯವನ್ನು ಮರೆಮಾಚಲು ಯಾರಿಗೂ ಸಾಧ್ಯವಿಲ್ಲ ಎಂದು ಡಿಕೆಶಿ ಎಚ್ಚರಿಸಿದರು. ಬಳ್ಳಾರಿಯಲ್ಲಿ ಉದ್ಯೋಗ ನಷ್ಟ, ಆರ್ಥಿಕ ಸಂಕಷ್ಟದ ಬಳಿಕ ಪರಿಸ್ಥಿತಿ ಚೇತರಿಸುತ್ತಿತ್ತು. ಹಿಂದಿನ ಕಹಿ ಘಟನೆಗಳಿಂದ ಜನ ಹೊರಬರುತ್ತಿದ್ದರು. ಈ ವೇಳೆ ಬ್ಯಾನರ್ ವಿಚಾರವಾಗಿ ಗಲಾಟೆ ಉಂಟಾಗಿರುವುದು ವಿಷಾದಕರ ಎಂದರು.

ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ಕಾನೂನಾತ್ಮಕವಾಗಿ ಪರವಾನಿಗೆ ನೀಡಲಾಗಿತ್ತು. ಈ ಕಾರ್ಯಕ್ರಮ ಪಕ್ಷಾತೀತವಾಗಿರಬೇಕು ಎಂದು ಮೊದಲೇ ಸೂಚನೆ ನೀಡಲಾಗಿತ್ತು. ಸಂಸದರು ಮತ್ತು ಶಾಸಕರ ಬೆಂಬಲದೊಂದಿಗೆ ಕಾರ್ಯಕ್ರಮ ಆಯೋಜನೆಯಾಗಿತ್ತು ಎಂದು ಹೇಳಿದರು.

ಶಿಲ್ಪಿ ಯೋಗರಾಜ್ ನಿರ್ಮಿಸಿದ ವಾಲ್ಮೀಕಿ ಪುತ್ಥಳಿಯನ್ನು ಜನರು ಗೌರವದಿಂದ ಸ್ವಾಗತಿಸಿದ್ದರು. ಸೂಪ್ರೀಂ ಕೋರ್ಟ್ ಆದೇಶ ಏನೇ ಇದ್ದರೂ ಜನರ ಭಾವನೆಗೆ ಸ್ಪಂದಿಸಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಬ್ಯಾನರ್ ಖಾಸಗಿ ಜಾಗದಲ್ಲಿಲ್ಲ. ಸರ್ಕಾರದ ಜಾಗದಲ್ಲೇ ಹಾಕಲಾಗಿದೆ. ತೆಗೆಯಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ನಾನು ಯಾರನ್ನೂ ದೂಷಣೆ ಮಾಡಲು ಬಂದಿಲ್ಲ. ನಡೆದ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆ ಎಂದರು. ಎಂಎಲ್ಎಗಳು ಹಾಗೂ ಬಿಜೆಪಿ ನಾಯಕ ಜನಾರ್ದನ ರೆಡ್ಡಿ, ಅವರ ಪತ್ನಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಎಲ್ಲರಿಗೂ ಗನ್‌ಮ್ಯಾನ್‌ಗಳಿದ್ದಾರೆ ಎಂದು ಹೇಳಿದ ಡಿಕೆಶಿ, ಇದರಲ್ಲಿ ಅಚ್ಚರಿಯೇನಿಲ್ಲ ಎಂದರು.

ಪೋಸ್ಟ್‌ಮಾರ್ಟಂ ವಿಚಾರವಾಗಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಒಂದೇ ಬಾರಿ ಮರಣೋತ್ತರ ಪರೀಕ್ಷೆ ನಡೆದಿದೆ. ಎರಡು ಬಾರಿ ಎಂದಿರುವ ಕುಮಾರಸ್ವಾಮಿಯವರ ಬಳಿ ಯಾವ ಆಧಾರವಿದೆ ಎಂದು ಪ್ರಶ್ನಿಸಿದರು.

ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ. ಅದು ರಾಜಕೀಯ ಘನತೆಗೆ ಧಕ್ಕೆಯಾಗಿದೆ ಎಂದು ಕಿಡಿಕಾರಿದರು. ರೆಡ್ಡಿ ಹಾಗೂ ಶ್ರೀರಾಮುಲು ಅವರನ್ನು ಕೊಲ್ಲಲು ಯತ್ನವಾಗಿದೆ ಎಂಬ ಆರೋಪಗಳು ಸುಳ್ಳು. ಅವರ ತಪ್ಪು ಮುಚ್ಚಿಕೊಳ್ಳಲು ಈ ಆರೋಪ ಮಾಡಲಾಗುತ್ತಿದೆ ಎಂದು ಡಿಕೆಶಿ ಹೇಳಿದರು.

ಭರತ್ ರೆಡ್ಡಿ ವಿರುದ್ಧ ದ್ವೇಷ ರಾಜಕಾರಣ ನಡೆಯುತ್ತಿದೆ. ಈ ಬಗ್ಗೆ ಸತ್ಯಶೋಧನಾ ಸಮಿತಿ ಸ್ಪಷ್ಟ ವರದಿ ನೀಡಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

ತಿಳಿದು ಮಾತನಾಡಬೇಕು, ತಿಳಿಯದೇ ಹೇಳಿಕೆಗಳು ಸಮಾಜಕ್ಕೆ ಪರಿಣಾಮ ಬೀರುತ್ತವೆ: ಸಚಿವ ಜಿ.ಪರಮೇಶ್ವರ್

0

ಬೆಂಗಳೂರು: ಯಾವುದನ್ನೇ ಆಗಲಿ ತಿಳಿದು ಮಾತನಾಡಬೇಕು. ತಿಳಿಯದೇ ಮಾತನಾಡಿದರೆ ಅದರ ಇಂಪ್ಯಾಕ್ಟ್ ಸಮಾಜದಲ್ಲಿ ಹೆಚ್ಚಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಅರಿತು ಹೇಳಿಕೆ ನೀಡಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದರು.

ಬಳ್ಳಾರಿ ಘರ್ಷಣೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ನಡೆಸಲಾಗಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಯಾವುದನ್ನೇ ಆಗಲಿ ತಿಳಿದು ಮಾತನಾಡಬೇಕು.

ತಿಳಿಯದೇ ಮಾತನಾಡಿದರೆ ಅದರ ಪರಿಣಾಮ ಸಮಾಜದ ಮೇಲೆ ಬೀರುತ್ತದೆ. ಈಗಾಗಲೇ ವೈದ್ಯರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಎರಡು ಬಾರಿ ಪೋಸ್ಟ್‌ಮಾರ್ಟಂ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನು ನಾಯಕರು ಗಮನಿಸಿದ್ದಾರಾ? ನಾನು ವೈದ್ಯರ ಹೇಳಿಕೆಯನ್ನು ಒಪ್ಪುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಅವರು, “ನಾನು ಗೃಹ ಸಚಿವನಾಗಿ ಯಾವ ಸಂದರ್ಭದಲ್ಲಿ ಏನು ಮಾಡಬೇಕು, ಯಾವ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ನಾನು 38 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೂ ಸಾಕಷ್ಟು ಅನುಭವವಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ತೀರ್ಮಾನಗಳನ್ನು ತೆಗೆದುಕೊಂಡಿದ್ದೇನೆ. ಕೇವಲ ಒಂದೇ ಒಂದು ಘಟನೆ ಆಧರಿಸಿ ಸರ್ಟಿಫಿಕೇಟ್ ನೀಡುವುದು ಸರಿಯಲ್ಲ” ಎಂದು ಕಿಡಿಕಾರಿದರು.

ನಾಳೆ ಹಾವೇರಿ ಜಿಲ್ಲಾ ಪ್ರವಾಸ: ಸಿಎಂ–ಡಿಸಿಎಂರಿಂದ ಮೆಡಿಕಲ್ ಕಾಲೇಜು ಹಾಗೂ ಐಬಿ ಉದ್ಘಾಟನೆ

0

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಜಿಲ್ಲಾ ಪ್ರವಾಸದ ವೇಳೆ ಸಿಎಂ ಮತ್ತು ಡಿಸಿಎಂ ಅವರು ಹಾವೇರಿಯ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ ಸದಾಶಿವ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಉದ್ಘಾಟನೆ όσο ಬೇಗ ನಡೆಯಬೇಕು ಎಂಬ ಉದ್ದೇಶ ಸರ್ಕಾರದದ್ದಾಗಿತ್ತು. ಲೋಕಸಭೆ ಚುನಾವಣೆಗೆ ಮುನ್ನವೇ ಕಟ್ಟಡ ಉದ್ಘಾಟನೆ ಮಾಡುವ ಇಚ್ಛೆಯೂ ಇದ್ದಿತು. ಆದರೆ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಆಗಮಿಸುವ ಕಾರಣ ಉದ್ಘಾಟನೆ ಸ್ವಲ್ಪ ವಿಳಂಬವಾಗಿದ್ದು, ಕೇಂದ್ರ ನಾಯಕರನ್ನು ಆಹ್ವಾನಿಸುವ ಜವಾಬ್ದಾರಿಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಹಿಸಿಕೊಂಡಿದ್ದರು ಎಂದು ಶಿವಾನಂದ ಪಾಟೀಲ್ ಮಾಹಿತಿ ನೀಡಿದರು.

ಈ ಮೆಡಿಕಲ್ ಕಾಲೇಜು ಉದ್ಘಾಟನೆಯಿಂದ ಹಾವೇರಿ ಸೇರಿದಂತೆ ಸುತ್ತಮುತ್ತಲಿನ ಜನರಿಗೆ ದಾವಣಗೆರೆ ಹಾಗೂ ಹುಬ್ಬಳ್ಳಿಗೆ ಚಿಕಿತ್ಸೆಗಾಗಿ ತೆರಳುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಅವರು ಹೇಳಿದರು. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ಮೊದಲ ಮೆಡಿಕಲ್ ಕಾಲೇಜು ಇದೇ ಆಗಿದ್ದು, ತಮ್ಮ ಉಸ್ತುವಾರಿಯಲ್ಲಿರುವ ಜಿಲ್ಲೆಗೆ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಲಭಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಗುಂಡು ಹಾರಿಸಿದವನ ಬಂಧನದಿಂದ ಶಡ್ಯಂತ್ರ ಬಯಲು: ಪೊಲೀಸ್ ತನಿಖೆ ಮೇಲೆ ಬೊಮ್ಮಾಯಿ ಅನುಮಾನ

0

ಗದಗ: ಬಳ್ಳಾರಿಯಲ್ಲಿ ನಡೆದ ಗುಂಡಿನ ಪ್ರಕರಣವನ್ನು ಕ್ರಿಮಿನಲ್ ಚಟುವಟಿಕೆ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕೆಲಸವೂ ಕಾನೂನಿನ ಚೌಕಟ್ಟಿನೊಳಗೆ ನಡೆಯಬೇಕು. ಆದರೆ ಬಳ್ಳಾರಿಯಲ್ಲಿ ನಡೆದ ಘಟನೆ ಇದಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು. ಈ ಗುಂಡು ಯಾರಿಂದ ಬಂದಿದೆ ಎಂಬುದು ಪೊಲೀಸರಿಗೆ ಗೊತ್ತಾಗಿದೆ ಎಂದು ಹೇಳಿದ ಅವರು, ಗುಂಡು ಹಾರಿಸಿದ ವ್ಯಕ್ತಿಯನ್ನು ಪ್ರೇರೇಪಿಸಿದವರನ್ನು ಕೂಡ ಬಂಧಿಸಬೇಕು ಎಂದು ಆಗ್ರಹಿಸಿದರು.

ಆ ವ್ಯಕ್ತಿಯನ್ನು ಬಂಧಿಸಿದರೆ ಈ ಪ್ರಕರಣದ ಹಿಂದಿರುವ ನಿಜವಾದ ಶಡ್ಯಂತ್ರ ಬಯಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಒಬ್ಬರ ಮನೆ ಮುಂದೆ ಹೋಗಿ ಗುಂಡು ಹಾರಿಸುವಂತಹ ಘಟನೆಗಳು ನಡೆಯುತ್ತಿದ್ದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಪೊಲೀಸರ ಬಗ್ಗೆ ಅಪರಾಧಿಗಳಿಗೆ ಯಾವುದೇ ಭಯವಿಲ್ಲ. ಇದಕ್ಕೆ ಕಾರಣ ಕೆಲವರು ಪೊಲೀಸರೇ ಅಪರಾಧಗಳಲ್ಲಿ ತೊಡಗಿಕೊಂಡಿರುವುದು. ಇತ್ತೀಚೆಗೆ ಕೆಲವು ಪೊಲೀಸರು ಸಸ್ಪೆಂಡ್ ಆಗಿರುವುದು ಪೊಲೀಸ್ ಇಲಾಖೆಯ ನೈತಿಕ ಕುಸಿತಕ್ಕೆ ಸಾಕ್ಷಿಯಾಗಿದೆ ಎಂದು ಬೊಮ್ಮಾಯಿ ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತವನ್ನು ದಾಖಲೆ ಮಟ್ಟದ ಆಡಳಿತ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ಆಡಳಿತದ ಹಿನ್ನಲೆಯಲ್ಲಿ ಹಲವು ಕಪ್ಪು ಚುಕ್ಕೆಗಳು ಸೇರುತ್ತಿವೆ. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವ ಸಂಗತಿ ಅಲ್ಲ ಎಂದು ಅವರು ಟಾಂಗ್ ನೀಡಿದರು.

ಪೊಲೀಸರು ನಡೆಸುತ್ತಿರುವ ತನಿಖೆಯನ್ನು ಗಮನಿಸಿದರೆ, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿರುವ ಅನುಮಾನ ಉಂಟಾಗುತ್ತಿದೆ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿರುವುದು ಈ ಪ್ರಕರಣದ ಮೇಲೆ ಮತ್ತಷ್ಟು ಸಂಶಯ ಮೂಡಿಸಿದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

error: Content is protected !!