Home Blog Page 213

BJP ಕಾರ್ಯಕರ್ತೆಯ ಮೇಲಿನ ಹಲ್ಲೆ ಪ್ರಕರಣ: ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕ್ರಮಕ್ಕೆ ಸಿಟಿ ರವಿ ಆಗ್ರಹ

0

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸಿಟಿ ರವಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಆಧಾರದಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಪೊಲೀಸರು ಬಂಧಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು. ಇದು ಮಾನವ ಹಕ್ಕುಗಳ ಉಲ್ಲಂಘನೆ ಮಾತ್ರವಲ್ಲ, ಗಂಭೀರ ಮಹಿಳಾ ದೌರ್ಜನ್ಯವಾಗಿದೆ ಎಂದು ಕಿಡಿಕಾರಿದರು.

ರಾಜಕೀಯ ಪ್ರಭಾವ ಬಳಸಿ ಈ ಕೃತ್ಯ ನಡೆಸಲಾಗಿದೆ. ಮಾನವೀಯ ಜಗತ್ತು ತಲೆತಗ್ಗಿಸುವಂತಹ ವರ್ತನೆ ಇದಾಗಿದೆ ಎಂದು ಅವರು ಹೇಳಿದರು. ಮಹಿಳಾ ಆಯೋಗವು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಈ ಘಟನೆಯ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಈ ಕೃತ್ಯಕ್ಕೆ ಯಾವುದೇ ಪ್ರಾಯಶ್ಚಿತ್ತವಿಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಪೊರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ ಎಂದು ಸಿಟಿ ರವಿ ಗಂಭೀರ ಆರೋಪ ಮಾಡಿದರು.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

0

ಬೆಂಗಳೂರು:  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ.

ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ,

ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ.

ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಬ್ಯಾನರ್ ಗಲಾಟೆ ಪ್ರಕರಣ: ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಶಿಕ್ಷೆ

0

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ್ದ ಬೆನ್ನಲ್ಲೇ, ಬಳ್ಳಾರಿ ವಲಯ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದೇ ವೇಳೆ ಬಳ್ಳಾರಿ ವಲಯದ ನೂತನ ಐಜಿ ಆಗಿ ಹರ್ಷ ಗುಪ್ತಾ ಅವರನ್ನು ಹಾಗೂ ನೂತನ ಎಸ್ಪಿ ಆಗಿ ಡಾ. ಸುಮನ ಡಿ. ಪೆನ್ನೇಕರ್ ಅವರನ್ನು ನೇಮಕ ಮಾಡಲಾಗಿದೆ.

ಜನವರಿ 1ರಂದು ಬಳ್ಳಾರಿ ಎಸ್ಪಿಯಾಗಿ ಪವನ್ ನೆಜ್ಜೂರು ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಆದರೆ ಬ್ಯಾನರ್ ಗಲಾಟೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ ಎಂಬ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿತ್ತು.

ಅಲ್ಲದೇ, ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್ ವಿರುದ್ಧ ಡಿಜಿ–ಐಜಿಪಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಅದರ ಆಧಾರದ ಮೇಲೆ ಇದೀಗ ರಾಜ್ಯ ಸರ್ಕಾರ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿದೆ.

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಗಾತ್ರದ ಹುಲಿ ಸಾವು

0

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವನ್ಯಜೀವಿ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಗಾತ್ರದ ಹುಲಿ ಒಂದು ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಅರಣ್ಯ ಇಲಾಖೆ ಹಾಗೂ ಹುಲಿ ಗಣತಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ, ಗಂಗೆಗಿರಿ ಮೀಸಲು ಅರಣ್ಯ ಪ್ರದೇಶದ ಶಿರಗೋಳ ಗ್ರಾಮದ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಎನ್‌ಟಿಸಿಎ ಮಾರ್ಗಸೂಚಿಯಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಚಿಕ್ಕಮಗಳೂರು ಕ್ಷೇತ್ರ ನಿರ್ದೇಶಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಮೃತಪಟ್ಟಿರುವ ಹುಲಿ ಎಂಟರಿಂದ ಹತ್ತು ವರ್ಷದ ವಯಸ್ಸಿನದಾಗಿದೆ ಎಂದು ತಿಳಿದುಬಂದಿದೆ.

ಮೇಲ್ನೋಟಕ್ಕೆ ಎರಡು ಹುಲಿಗಳು ಪರಸ್ಪರ ಕಾದಾಟ ನಡೆಸಿದ ಪರಿಣಾಮ ಈ ಹುಲಿ ಸಾವನ್ನಪ್ಪಿರುವ ಸಾಧ್ಯತೆ ಕಂಡುಬಂದಿದೆ. ಹುಲಿ ಕಳೇಬರದ ಮೇಲೆ ಎನ್‌ಟಿಸಿಎ ಸದಸ್ಯರ ಸಮ್ಮುಖದಲ್ಲಿ ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಅಗತ್ಯ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಹೆಚ್ಚಿನ ತನಿಖೆಗಾಗಿ ಈ ಮಾದರಿಗಳನ್ನು ಪ್ರಯೋಗಾಲಯಗಳಿಗೆ ಕಳುಹಿಸಲು ನಿರ್ಧರಿಸಲಾಗಿದ್ದು, ನಂತರ ನಿಯಮಾನುಸಾರ ಹುಲಿ ಕಳೇಬರವನ್ನು ಸುಟ್ಟು ಹಾಕಲಾಗಿದೆ.

ಹೆಬ್ಬೆ ವಲಯದ ಗಂಗೆಗಿರಿ–ಶಿರಗುಳ ಮೀಸಲು ಅರಣ್ಯ ಪ್ರದೇಶದಲ್ಲಿ ತನ್ನ ಪ್ರದೇಶಕ್ಕಾಗಿ ಎರಡು ಹುಲಿಗಳು ದೊಡ್ಡ ಮಟ್ಟದಲ್ಲಿ ಕಾದಾಟ ನಡೆಸಿದ್ದು, ಈ ಸಂದರ್ಭದಲ್ಲಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನಾ ಭೇಟಿ ನೀಡಿ, ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಾನುಸಾರ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಿದರು.

ದೇವರಾಜ ಅರಸು–ಸಿದ್ದರಾಮಯ್ಯ ಆಡಳಿತ ಹೋಲಿಕೆ ಬೇಡ: ಯಡಿಯೂರಪ್ಪ ವಾಗ್ದಾಳಿ

0

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ ಎಂಬ ಹೇಳಿಕೆಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ದೇವರಾಜ ಅರಸು ಅವರ ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಅವರ ಆಡಳಿತ ವೈಖರಿ ಬೇರೆ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸುವ ಪ್ರಯತ್ನವನ್ನು ಜನರು ಮೆಚ್ಚುವುದಿಲ್ಲ ಎಂದು ಕಿಡಿಕಾರಿದರು.

ಇನ್ನೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಜಯಭೇರಿ ಬಾರಿಸುತ್ತಿದೆ ಎಂದು ತಿಳಿಸಿದ ಅವರು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ನಿಶ್ಚಿತವಾಗಿ ದೊಡ್ಡ ಬಹುಮತದೊಂದಿಗೆ ಸರ್ಕಾರ ರಚಿಸುವ ದೃಷ್ಟಿಯಿಂದ ಕೆಲಸ ಮಾಡುತ್ತಿದೆ ಎಂದರು. ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಮುಂದೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಕುಟುಂಬದಲ್ಲಿ ಸಂಭ್ರಮ

0

ಹರಿಯಾಣ: ಹರಿಯಾಣದಲ್ಲಿ ಮಹಿಳೆಯೊಬ್ಬಳು ಹತ್ತು ಹೆಣ್ಣುಮಕ್ಕಳ ಬಳಿಕ ಇದೀಗ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಸಾಮಾಜಿಕ ಹಾಗೂ ಆರೋಗ್ಯ ಸಂಬಂಧಿ ಚರ್ಚೆಗೆ ಕಾರಣವಾಗಿದೆ. ತಾಯಿ ಮತ್ತು ಶಿಶುವಿನ ಆರೋಗ್ಯದ ಜೊತೆಗೆ, ಗಂಡು ಮಗು ಬೇಕೇ ಬೇಕು ಎನ್ನುವ ಮನಸ್ಥಿತಿಯ ಬಗ್ಗೆ ಕಳವಳವೂ ವ್ಯಕ್ತವಾಗುತ್ತಿದೆ.

ಜಿಂದ್ ಜಿಲ್ಲೆಯ ಉಚಾನಾ ಪಟ್ಟಣದ ಓಜಾಸ್ ಆಸ್ಪತ್ರೆಯಲ್ಲಿ ಮಹಿಳೆ ತನ್ನ 11ನೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಹೆರಿಗೆ ಅತ್ಯಂತ ಅಪಾಯಕರವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯ ವೈದ್ಯ ಡಾ. ನರವೀರ್ ಶಿಯೋರನ್ ಮಾತನಾಡಿ, ಹೆರಿಗೆ ಸಂದರ್ಭದಲ್ಲಿ ತಾಯಿಗೆ ಮೂರು ಯುನಿಟ್ ರಕ್ತ ನೀಡಬೇಕಾಯಿತು. ಪ್ರಸ್ತುತ ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಜನವರಿ 3ರಂದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅವರು ಈಗ ಫತೇಹಾಬಾದ್ ಜಿಲ್ಲೆಯ ತಮ್ಮ ಹಳ್ಳಿಗೆ ಮರಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ದಿನಗೂಲಿ ಕಾರ್ಮಿಕರಾಗಿರುವ ತಂದೆ ಸಂಜಯ್ ಕುಮಾರ್, “ನಮಗೂ ಹಾಗೂ ನನ್ನ ಹೆಣ್ಣುಮಕ್ಕಳಿಗೂ ತಮ್ಮನೊಬ್ಬ ಬೇಕೆಂಬ ಆಸೆ ಇತ್ತು” ಎಂದು ಹೇಳಿದ್ದಾರೆ.

2007ರಲ್ಲಿ ವಿವಾಹವಾದ ದಂಪತಿಗೆ ಹಿರಿಯ ಮಗಳು 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಉಳಿದ ಮಕ್ಕಳು ಕೂಡ ಶಾಲೆಗೆ ಹೋಗುತ್ತಿದ್ದಾರೆ. “ನಮ್ಮ ಆದಾಯ ಕಡಿಮೆ ಇದ್ದರೂ ಮಕ್ಕಳಿಗೆ ಶಿಕ್ಷಣ ನೀಡುವುದು ನಮ್ಮ ಮೊದಲ ಆದ್ಯತೆ. ಏನೇ ನಡೆದರೂ ಅದು ದೇವರ ಇಚ್ಛೆ. ಇದರಲ್ಲಿ ನಾನು ಸಂತೋಷವಾಗಿದ್ದೇನೆ” ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ.

ಹಣದಾಸೆಗೆ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ತಂದೆ: 12 ಮಂದಿ ಬಂಧನ

0

ಚಿಕ್ಕಮಗಳೂರು, ಜನವರಿ 07: ತಂದೆ ಎಂದರೆ ರಕ್ಷಕ, ಆದರೆ ಇಲ್ಲಿ ತಂದೆಯೇ ಮಗಳ ಪಾಲಿಗೆ ಅತಿ ದೊಡ್ಡ ಭಕ್ಷಕನಾಗಿ ಪರಿಣಮಿಸಿರುವ ಭೀಕರ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಪತ್ತೆಯಾಗಿದೆ. ಹಣದಾಸೆಗೆ ಅಂಧನಾದ ತಂದೆ, ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿ, ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರಕ್ಕೆ ಕಾರಣನಾಗಿದ್ದಾನೆ.

ತಾಯಿಯನ್ನು ಕಳೆದುಕೊಂಡಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, PUC ಮುಗಿಸಿದ ಬಳಿಕ ತಂದೆಯ ಬಳಿ ವಾಪಸ್ಸಾಗಿದ್ದಳು. ಡಿಸೆಂಬರ್‌ನಲ್ಲಿ ಅಜ್ಜಿಯ ಮನೆಗೆ ಹೋಗಿ ಬಂದಿದ್ದ ಬಾಲಕಿಗೆ, ಮತ್ತೊಮ್ಮೆ ಅಜ್ಜಿಯಿಂದ ಕರೆ ಬಂದಿದೆ ಎಂದು ನಂಬಿಸಿ ಕರೆದುಕೊಂಡು ಹೋಗಲಾಗಿದೆ. ಆದರೆ ಅದು ದಂಧೆಯ ಮೊದಲ ಹೆಜ್ಜೆಯಾಗಿತ್ತು.

ಅಜ್ಜಿಯ ಮನೆಯಲ್ಲಿ ಪರಿಚಯವಾದ ಭರತ್ ಶೆಟ್ಟಿ ಎಂಬಾತ ತಂದೆ-ಮಗಳೊಂದಿಗೆ ಆತ್ಮೀಯತೆ ಬೆಳೆಸಿ, ತನ್ನ ಮನೆಗೆ ಬಂದು ತಂಗುವಂತೆ ಸೂಚಿಸಿದ್ದಾನೆ. ತಂದೆಯ ಒಪ್ಪಿಗೆಯೊಂದಿಗೆ ಇಬ್ಬರೂ ಭರತ್ ಶೆಟ್ಟಿಯೊಂದಿಗೆ ಮಂಗಳೂರಿಗೆ ತೆರಳಿದ್ದಾರೆ.

ಮಾರ್ಗ ಮಧ್ಯೆ ತಾನು ಮುಟ್ಟಾಗಿರುವುದಾಗಿ ಬಾಲಕಿ ತಂದೆಗೆ ತಿಳಿಸಿದರೂ, ಇದನ್ನೂ ಲೆಕ್ಕಿಸದೆ ಮರುದಿನ ಭರತ್ ಶೆಟ್ಟಿ ಆಕೆಯನ್ನು 4–5 ಜನರೊಂದಿಗೆ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. 20 ರಿಂದ 45 ವರ್ಷದ ನಾಲ್ವರು ಪುರುಷರು ಒಬ್ಬರ ನಂತರ ಒಬ್ಬರಂತೆ ಆಕೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಮರುದಿನವೂ ಇದೇ ದೌರ್ಜನ್ಯ ಪುನರಾವರ್ತನೆಯಾಗಿದೆ.

ಬಾಲಕಿ ಅಪ್ರಾಪ್ತೆ ಎಂದು ಬೇಡಿಕೊಂಡರೂ, “ನಾವು ಭರತ್ ಶೆಟ್ಟಿಗೆ ಹಣ ಕೊಟ್ಟಿದ್ದೇವೆ” ಎಂದು ಹೇಳಿ ಕಾಮುಕರು ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ FIR ದಾಖಲಾಗಿದ್ದು, ಬಾಲಕಿಯ ತಂದೆ, ಅಜ್ಜಿ ಹಾಗೂ ಭರತ್ ಶೆಟ್ಟಿ ಸೇರಿ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭರತ್ ಶೆಟ್ಟಿಯ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ವೇಶ್ಯಾವಾಟಿಕೆ ಸಂಬಂಧ ಈಗಾಗಲೇ 8ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಹೊನ್ನಾವರದಲ್ಲಿ ಕಾರು ಕಂದಕಕ್ಕೆ ಬಿದ್ದು ಬೆಂಕಿಗಾಹುತಿ – ಇಬ್ಬರ ದುರ್ಮರಣ

0

ಕಾರವಾರ/ಚಾಮರಾಜನಗರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೆಂಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ಕರಕಲಾಗಿದ್ದು, ನಂಬರ್ಪ್ಲೇಟ್ ಸಹ ಪತ್ತೆಯಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾರು ಮತ್ತು ಮೃತರ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಮೃತರು ಸಿದ್ದಾಪುರ ಮೂಲದವರು ಎಂದು ತಿಳಿದುಬಂದಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿದ್ದಾರೆ.

ಇದಕ್ಕೆ ಸಮಾನವಾಗಿ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. KSRTC ಅಶ್ವಮೇಧ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ವಿಶೇಷವಾಗಿ ಎರಡು ವಾಹನಗಳ ಚಾಲಕರ ಸ್ಥಿತಿ ಚಿಂತಾಜನಕವಾಗಿದೆ.

ಗ್ರಾಮದ ಶಾಲೆ ಸಮೀಪದ ತಿರುವಿನಲ್ಲಿ ನಂಜನಗೂಡು ಕಡೆಯಿಂದ ಬರುತ್ತಿದ್ದ ಬಸ್, ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ತಕ್ಷಣ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.

ಹುಬ್ಬಳ್ಳಿ| ಬಟ್ಟೆ ಬಿಚ್ಚಿ ಬಿಜೆಪಿ ಕಾರ್ಯಕರ್ತೆಯನ್ನು ಥಳಿಸಿದ್ರಾ ಕೇಶ್ವಾಪುರ ಠಾಣೆ ಪೊಲೀಸರು!?

0

ಹುಬ್ಬಳ್ಳಿ:- ನಗರದ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ.

ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿ ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ ಅಲಿಯಾಸ್​​ ವಿಜಯಲಕ್ಷ್ಮೀ ಈ ಗಂಭೀರ ಆರೋಪ ಮಾಡಿದ್ದಾರೆ. ಸುಜಾತಾ ಹಂಡಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಾಂಗ್ರೆಸ್ ಕಾರ್ಪೊರೇಟರ್​ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರು. ಅದೇ ದೂರಿನ ವಿಚಾರವಾಗಿ ಪೊಲೀಸರು ದರ್ಪ ನಡೆಸಿದ್ದಾರೆ ಎಂದು ದೂರಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭ ಅಧಿಕಾರಿಗಳ ಜೊತೆ ಸುಜಾತಾ ಹಂಡಿ ತೆರಳಿದ್ದು, ಈ ವೇಳೆ ಸುವರ್ಣ ಕಲ್ಲಕುಂಟ್ಲಾ ಮತ್ತು ಅವರ ಬೆಂಬಲಿಗರು ಗಲಾಟೆ ನಡೆಸಿದ್ದರು. ಘಟನೆ ಸಂಬಂಧ ಕೇಶ್ವಾಪುರ ಠಾಣೆಗೆ ದೂರು, ಪ್ರತಿದೂರು ದಾಖಲಾಗಿತ್ತು. ಕಾರ್ಪೊರೇಟರ್​ ದೂರು ಆಧರಿಸಿ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಬಂಧನ ವಿರೋಧಿಸಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಕೂಗಾಡಿದ್ದರು.

ಈ ವೇಳೆ ವಿವಸ್ತ್ರಗೊಳಿಸಿ ಕೇಶ್ವಾಪುರ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಸುಜಾತಾ ಹಂಡಿ‌ ಕೆಲ ವರ್ಷಗಳ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಇವರ ಮೇಲೆ ಖಾಕಿ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.

ವೋಟ್ ಡಿಲೀಟ್ ಗಲಾಟೆ ಬಳಿಕ ಪೊಲೀಸರ ದರ್ಪ? ಬಿಜೆಪಿ ಕಾರ್ಯಕರ್ತೆಯ ಮೇಲೆ ಕ್ರೌರ್ಯದ ಆರೋಪ

0

ಹುಬ್ಬಳ್ಳಿ: ನಗರದಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತೆಯ ಬಂಧನ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೇಶ್ವಾಪುರ ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯರೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಮಹಿಳೆಯನ್ನು ಬಂಧಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಅತಿರೇಕವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯ ಮೇಲೆ ಕ್ರೌರ್ಯ ತೋರಲಾಗಿದೆ ಎಂದು ಬಿಜೆಪಿ ವಲಯ ಆರೋಪಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ನಡೆದ ಗಲಾಟೆಯೇ ಈ ಪ್ರಕರಣದ ಹಿನ್ನೆಲೆ ಎನ್ನಲಾಗುತ್ತಿದೆ. ಬೂತ್ ಅಧಿಕಾರಿಗಳೊಂದಿಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತೆ, ತಮ್ಮ ಮತಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಈ ವಿಚಾರದಲ್ಲಿ ಬಿಜೆಪಿ–ಕಾಂಗ್ರೆಸ್ ನಡುವೆ ನಿರಂತರ ತಿಕ್ಕಾಟ ನಡೆಯುತ್ತಲೇ ಇತ್ತು.

ಈ ಗಲಾಟೆಯನ್ನು ಆಧಾರ ಮಾಡಿಕೊಂಡು ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರು. ಪೊಲೀಸರು ಆ ದೂರಿನ ಮೇರೆಗೆ ಬಿಎನ್‌ಎಸ್ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದೇ ಪ್ರಕರಣದಲ್ಲಿ ಮಹಿಳೆಯನ್ನು ಬಂಧಿಸಲು ಮುಂದಾದಾಗ ಆಕೆ ಪ್ರತಿರೋಧ ತೋರಿದ್ದಾಳೆ.

ಆ ಸಂದರ್ಭದಲ್ಲಿ ಪೊಲೀಸರು ಮಹಿಳೆಯನ್ನು ಥಳಿಸಿದ್ದು ಮಾತ್ರವಲ್ಲದೆ, ಬಂಧನ ವೇಳೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ಮತ್ತೊಂದು ದೂರು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ.

ಘಟನೆ ಇದೀಗ ಮಹಿಳಾ ಸುರಕ್ಷತೆ, ಪೊಲೀಸ್ ದೌರ್ಜನ್ಯ ಮತ್ತು ರಾಜಕೀಯ ಹಸ್ತಕ್ಷೇಪ ಕುರಿತಾಗಿ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

error: Content is protected !!