ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಮಂಗಳವಾರ ದಿ 30 ರಂದು 115 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
115 ಜನರಿಗೆ ಸೋಂಕು ತಗುಲುವ ಮೂಲಕ ಸೋಂಕಿತರ ಸಂಖ್ಯೆ 9038 ಕ್ಕೇರಿದೆ. ಮಂಗಳವಾರ 95 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಇದುವರೆಗೂ 8291 ಜನ ಗುಣಮುಖರಾಗಿದ್ದಾರೆ. 617 ಜನ ಸಕ್ರಿಯ ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ಜಿಲ್ಲಾಡಳಿತ ನೀಡಿದ ಮಾಹಿತಿಯಂತೆ ಇದುವರೆಗೂ ಜಿಲ್ಲೆಯಲ್ಲಿ 130 ಜನ ಕೊವಿಡ್ ಗೆ ಮೃತಪಟ್ಟಿದ್ದಾರೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಎತ್ತಿನ ಮೈ ತೊಳೆಯಲು ಹೊಲಕ್ಕೆ ಹೋದ ಬಾಲಕ ಆಯತಪ್ಪಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಘಟನೆ, ಕುಷ್ಟಗಿ ತಾಲೂಕಿನ ಮೆಣಸಗೇರಾದಲ್ಲಿ ನಡೆದಿದೆ.
ದೇವೇಂದ್ರಪ್ಪ (ಮುತ್ತಪ್ಪ) ಯಲಗುದರಪ್ಪ ದಾಸಬಾಳ (14) ಮೃತ ಬಾಲಕ. ಸೋಮವಾರದ ಹಿನ್ನೆಲೆ ತಮ್ಮ ಜಮೀನಿನ ಕೃಷಿ ಹೊಂಡದಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.
ಹೊಲಕ್ಕೆ ಹೋದ ಬಾಲಕ ಮರಳಿ ಮನೆಗೆ ಬಾರದ ಹಿನ್ನೆಲೆ ಮನೆಯವರು ಹುಡುಕಾಟ ನಡೆಸಿದ್ದರು. ಕೃಷಿ ಹೊಂಡದ ಬಳಿ ಎತ್ತು ಮಾತ್ರ ನಿಂತಿತ್ತು. ಅನುಮಾನಗೊಂಡು ಕೃಷಿ ಹೊಂಡದಲ್ಲಿ ಬಾಲಕನ ತಂದೆ ಹುಡುಕಿದಾಗ ಶವ ಪತ್ತೆಯಾಗಿದೆ.
ಬಾಲಕ ದೇವೇಂದ್ರಪ್ಪ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಗನ ಅಕಾಲಿಕ ಮರಣದಿಂದ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಕುಷ್ಟಗಿ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪಾರ್ಥಿವ ಶರೀರವನ್ನು ಕುಟುಂದವರಿಗೆ ಹಸ್ತಾಂತರಿಸಲಾಯಿತು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ: ಇಟ್ಟಿಗೆಯಲ್ಲಿ ಅವಿತು ಕೂತಿದ್ದ ಉರಗವೊಂದನ್ನು ಸೆರೆ ಹಿಡಿದ ಘಟನೆ ತಾಲೂಕಿನ ಕಣವಿ ಹೊಸೂರಿನ ನಡೆದಿದೆ.
ಗ್ರಾಮದ ಮಂಜುನಾಥ್ ಮಡಿವಾಳರ ಎಂಬುವರ ತೋಟದಲ್ಲಿ ಈ ನಾಗರ ಹಾವು ಮನೆಮಾಡಿ, ತೋಟದಲ್ಲಿ ಸಾಕಿದ್ದ ಕೋಳಿಗಳನ್ನು ತಿನ್ನುತ್ತಿತ್ತು.
ಇದನ್ನು ಸೂಕ್ಷ್ಮವಾಗಿ ಗಮನಿಸಿದ ಮನೆಯವರು ಇಟ್ಟಿಗೆಯಲ್ಲಿ ಮನೆ ಮಾಡಿ ಅವಿತು ಕೂತಿದ್ದ ನಾಗರ ಹಾವನ್ನು ಪತ್ತೆ ಹಚ್ಚಿ ಗದಗನ ಉರಗ ಪ್ರೇಮಿ ವಿಜಯ್ ಎಂಬುವರಿಗೆ ತಿಳಿಸಿದ್ದಾರೆ.
ವಿಜಯ್ ಮಂಗಳವಾರ ಮಂಜುನಾಥ್ ಅವರ ತೋಟಕ್ಕೆ ಬಂದು ಇಟ್ಟಿಗೆಯಲ್ಲಿ ಕೂತಿದ್ದ ನಾಗರ ಹಾವನ್ನು ಸುಮಾರು ಒಂದೂವರೆ ಕಾಲ ಕಾರ್ಯಾಚರಣೆ ನಡೆಸಿ ನೀರಿನ ಡಬ್ಬಿಯಲ್ಲಿ ಹಿಡಿದಿದ್ದಾರೆ.
ಸುಮಾರು 6 ಅಡಿಯಷ್ಟು ಉದ್ದ ಇದ್ದ ನಾಗರ ಹಾವನ್ನು ಕಂಡು ಮನೆ ಮಂದಿಯಲ್ಲಾ ಗಾಬರಿಗೊಂಡಿದ್ದಾರೆ.
ಇನ್ನು ಹಿಡಿದ ಬಳಿಕ ಹಾವನ್ನು ತೆಗೆದುಕೊಂಡು ಕಪ್ಪತಗುಡ್ಡದಲ್ಲಿ ಬಿಟ್ಟಿದ್ದಾರೆ. ಇಷ್ಟುದಿನ ಹಾವಿನ ಭಯದಲ್ಲಿದ್ದ ಕೋಳಿ ಮತ್ತು ಕೋಳಿ ಮರಿಗಳು ಸದ್ಯ ಭಯಮುಕ್ತವಾಗಿದ್ದು, ಮನೆಯ ಮಾಲೀಕರು ಸಹ ನಿಟ್ಟುಸಿರು ಬಿಟ್ಟಿದ್ದಾರೆ.
-ರಸ್ತೆ ಮಾಡಿ ಕೊಡಿ, ಆಮೇಲೆ ಓಟ್ ಕೇಳೋಕೆ ಬನ್ನಿ.. -ರಸ್ತೆ ಇಲ್ಲದ ಕಾರಣಕ್ಕೆ ಅನೇಕರು ಅಸು ನೀಗಿದ್ದಾರೆ -ಬಿಯಸ್ಕೆ
ವಿನಯಸಾಕ್ಷಿ ಸುದ್ದಿ ಕೊಪ್ಪಳ
2020-21ನೇ ಸಾಲಿನಲ್ಲಿ ನಡೆಯಲಿರುವ ರಾಜ್ಯದ ಗ್ರಾಪಂ ಚುನಾವಣೆಗಳಿಗೆ ಈಗಾಗಲೇ ಆಕಾಂಕ್ಷಿಗಳು ತಯಾರಿ ನಡೆಸಿದ್ದಾರೆ. ಮತದಾರರ ಮನಸೆಳೆಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದ್ದಾರೆ. ಆದರೆ ಹಣವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳಧಾಳ ಗ್ರಾಮಸ್ಥರು ಗ್ರಾಪಂ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವ ನಿರ್ಧಾರ ಮಾಡಿದ್ದಾರೆ.
ಗುಳಧಾಳ (ಮಸಾರಿ ಕ್ಯಾಂಪ್), ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿ. ಸುಮಾರು 150 ವರ್ಷಗಳಿಂದಲೂ 200 ಕುಟುಂಬಗಳು ಅಂದರೆ ಸುಮಾರು 800 ಜನರು ವಾಸವಾಗಿದ್ದಾರೆ. ಇಷ್ಟು ವರ್ಷಗಳಿಂದಲೂ ಗ್ರಾಮಕ್ಕೆ ರಸ್ತೆ ಮಾಡಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ. ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿ ಸುಸ್ತಾಗಿದೆ ಎನ್ನುತ್ತಾರೆ ಗ್ರಾಮಸ್ಥರು.
ಗುಳಧಾಳ (ಮಸಾರಿ ಕ್ಯಾಂಪ್) ಗ್ರಾಮಕ್ಕೆ ಮುಖ್ಯವಾಗಿ ರಸ್ತೆ ನಿರ್ಮಿಸಬೇಕು. ಹತ್ತಾರು ವರ್ಷಗಳಿಂದ ನಡೆಯುತ್ತಿರುವ ವಿವಿಧ ಚುನಾವಣೆಗಳಲ್ಲಿ ಗ್ರಾಮಸ್ಥರು ಈ ಬೇಡಿಕೆಯನ್ನು ಹೇಳುತ್ತಲೇ ಬಂದಿದ್ದಾರೆ. ಮತ ಕೇಳಲು ಬಂದವರೆಲ್ಲ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತಾರೆಯೇ ಹೊರತು ಗೆದ್ದವರು ತಿರುಗಿ ಗ್ರಾಮದ ಕಡೆ ಸುಳಿಯುವುದೇ ಇಲ್ಲ.
ಗ್ರಾಮಕ್ಕೆ ರಸ್ತೆ ಇಲ್ಲದ್ದರಿಂದ ಅನಾರೋಗ್ಯ ಉಂಟಾದರೆ ಪಟ್ಟಣಕ್ಕೆ ತೆರಳಲು ಕಷ್ಟವಾಗುತ್ತದೆ. ರಸ್ತೆಯೇ ಇಲ್ಲ ಎಂದ ಮೇಲೆ ವಾಹನ ಸಂಚಾರ ಎಲ್ಲಿಯದು? ಕಾಲುವೆ ಪಕ್ಕದ ಅಡ್ಡಾದಿಡ್ಡಿ ಹಾದಿಯಲ್ಲಿ ಬೈಕ್ಗಳು ಓಡಾಡುತ್ತವೆ. ರಾತ್ರಿಯಾದರೆ ಸಾಕು ವಿದ್ಯುತ್ ದೀಪಗಳಿಲ್ಲದೇ ಅನೇಕ ಅಪಘಾತಗಳು ಸಂಭವಿಸಿ ಸಾವು-ನೋವಿನ ಪ್ರಕರಣಗಳು ಉಂಟಾಗಿವೆ. ಅನಾರೋಗ್ಯಪೀಡಿತರು ಆಸ್ಪತ್ರೆ ಸೇರುವ ಮೊದಲೇ ಈ ಹಾದಿಯ ಕಾರಣದಿಂದ ಮಸಣದ ದಾರಿ ಹಿಡಿದಿರುವ ಅನೇಕ ಪ್ರಸಂಗಗಳು ನಡೆದಿವೆ.
ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಎಂದರೆ ರಸ್ತೆ. ಗ್ರಾಮಕ್ಕೆ ರಸ್ತೆ ಆಗುವವರೆಗೆ ಯಾವುದೇ ಚುನಾವಣೆ ಬರಲಿ. ಮತದಾನ ಮಾಡದಿರಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆ ಗ್ರಾಮಸ್ಥರ ಮೊದಲ ಹೆಜ್ಜೆ.
ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ಬಹಿಷ್ಕಾರದ ಪತ್ರವನ್ನು ಈಗಾಗಲೇ ಹಣವಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ. ಈ ಸಲ ಹುಸಿ ಭರವಸೆಗಳಿಗೆ ಮರಳಾಗುವುದಿಲ್ಲ ಎಂಬುದು ಗ್ರಾಮಸ್ಥರ ನಿಲುವು.
ನಮ್ಮೂರಿಗೆ ರಸ್ತೆ ಇಲ್ಲದ್ದರಿಂದ ಇಲ್ಲಿನ ವಿದ್ಯಾರ್ಥಿಗಳು ಸುಮಾರು 5 ಕಿಮೀ ನಡೆದುಕೊಂಡೇ ಶಾಲಾ-ಕಾಲೇಜುಗಳಿಗೆ ತೆರಳಬೇಕು. ಸಂಜೆ 6ರೊಳಗೆ ಗ್ರಾಮಸ್ಥರು ಮನೆ ಸೇರಬೇಕು. ಯಾಕೆಂದರೆ ವಿದ್ಯುತ್ ದೀಪ ಇಲ್ಲದ್ದರಿಂದ ಕತ್ತಲಿನಲ್ಲಿ ಕಾಲುವೆಗೆ ಜಾರುವ ಸ್ಥಿತಿ ಇದೆ. ಗ್ರಾಮದ ಯುವಕರಿಗೆ ಇದೇ ಕಾರಣಕ್ಕಾಗಿ ಕನ್ಯೆ ಸಿಗುತ್ತಿಲ್ಲ. ಹೆಣ್ಣು ನೋಡಲು ವರ ಬರುತ್ತಿಲ್ಲ. ರಸ್ತೆ ನಿರ್ಮಾಣದ ನಂತರವೇ ಮತದಾನ ಮಾಡಲು ನಿರ್ಧರಿಸಿದ್ದೇವೆ.
-ಮಂಜುನಾಥ್, ಗುಳಧಾಳ ಗ್ರಾಮಸ್ಥ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕು ಮಂಗಳೂರು ಗ್ರಾಮದ 1 ನೇ ವಾರ್ಡನಲ್ಲಿರುವ ಬಿ ರಾಚಯ್ಯ ನಗರ ಅಕ್ಷರಶಃ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.
ವಾರ್ಡ್ನಲ್ಲಿ ಕಸದ ರಾಶಿ ಬಿದ್ದರೂ ಗ್ರಾಪಂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಬೀದಿ ದೀಪದ ಕಂಬಗಳಲ್ಲಿ ಬಲ್ಬ್ಗಳು ಬೆಳಕು ನೀಡದೇ, ಕತ್ತಲು ಆವರಿಸಿದೆ. ನೀರಿನ ಸೌಕರ್ಯವಿಲ್ಲ . ಚರಂಡಿಯ ಕಸವನ್ನು ತೆಗೆದರೂ ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡದೇ ತೆಗೆದ ಸ್ಥಳದಲ್ಲೇ ಹಾಕುತ್ತಾರೆ.
ಇದರಿಂದಾಗಿ ರೋಗ ರುಜಿನಗಳು ಉಂಟಾಗುವ ಭಯ ಸುತ್ತಮುತ್ತಲಿನ ನಾಗರಿಕರಲ್ಲಿದೆ. ಸಂಬಂಧಪಟ್ಟ ಅಧಿಕಾರಿಗಳು ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಿಕೊಡಬೇಕು.
ಜನರು ಅನೇಕ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಿದರೂ ಇದುವರೆಗೂ ಒಂದು ಸಮಸ್ಯೆಯನ್ನು ಕೂಡ ಬಗೆಹರಿಸಿಲ್ಲ. ಇನ್ನು ಮುಂದೆ ಉದಾಸೀನ ಧೋರಣೆ ತಾಳಿದರೆ ಗ್ರಾಪಂಗೆ ಬೀಗ ಹಾಕುವುದು ಅನಿವಾರ್ಯವಾಗುತ್ತದೆ ಎಂದು ನಿವಾಸಿಗಳು ಎಚ್ಚರಿಸಿದ್ದಾರೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಹಾಗೂ ಕನ್ನಡಪರ ಸಂಘಟನೆಗಳು ನೀಡಿದ ಕರ್ನಾಟಕ ಬಂದ್ಗೆ ಕೊಪ್ಪಳ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಿನಿಂದ ಎಂದಿನಂತೆ ಜಿಲ್ಲೆ ಸಹಜ ಸ್ಥಿತಿಯಲ್ಲಿ ಇತ್ತು.
ಸುಮಾರು 30 ಸಂಘಟನೆಗಳು ಬಂದ್ಗೆ ಬೆಂಬಲ ನೀಡಿದ್ದರೂ ಪ್ರತಿಭಟನೆಯಲ್ಲಿ ಅಷ್ಟು ಸಂಖ್ಯೆಯ ಜನರು ಕಾಣದಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಬಂದ್ ಬಿಸಿ ತಟ್ಟಲಿಲ್ಲ. ಅಶೋಕ ವೃತ್ತದಿಂದ ಕೇಂದ್ರೀಯ ಬಸ್ ನಿಲ್ದಾಣದವರೆಗೂ ಸರಕಾರದ ರೈತ ವಿರೋಧಿ ನೀತಿಯನ್ನು ವಿವರಿಸುತ್ತಲೇ ರಸ್ತೆಯ ಅಕ್ಕಪಕ್ಕದ ಅಂಗಡಿಕಾರರಿಗೆ ಬಂದ್ ಮಾಡುವಂತೆ ಮನವಿ ಮಾಡುತ್ತಿರುವುದು ಕಂಡು ಬಂತು.
ಬಸ್ ನಿಲ್ದಾಣದ ವ್ಯವಸ್ಥಾಪಕರಿಗೂ ಬಸ್ ಸಂಚಾರ ಸ್ಥಗಿತಗೊಳಿಸಲು ರೈತ ಸಂಘಟನೆಯ ಮುಖಂಡರು ಮನವಿ ಮಾಡಿದರು. ನಂತರ ಬಸ್ ನಿಲ್ದಾಣದ ಎದುರು ಟೈರ್ಗೆ ಬೆಂಕಿ ಹಚ್ಚಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಯಲಬುರ್ಗಾದಲ್ಲಿ ಕಿತ್ತೂರು ಚನ್ನಮ್ಮ ಸರ್ಕಲ್ನಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಯಿತು. ಬಳಿಕ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾಥಾ ಮುನ್ನಡೆಯುತ್ತಿದ್ದಂತೆ ಅಂಗಡಿ ಮುಂಗಟ್ಟುಗಳು ಆರಂಭಗೊಂಡವು. ವಾಹನ ಸಂಚಾರ ಎಂದಿನಂತಿತ್ತು.
ಕುಷ್ಟಗಿಯಲ್ಲಿ ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಿನಿಂದ ಮಧ್ಯಾಹ್ನದವರೆಗೆ ಜನ ಹಾಗೂ ವಾಹನ ಸಂಚಾರ ವಿರಳವಾಗಿತ್ತು. ಕ್ರಮೇಣ ವ್ಯಾಪಾರ ವಹೀವಾಟು ಸಹಜ ಸ್ಥಿತಿಗೆ ಬಂತು. ಕಾರ್ಗಿಲ್ ವೃತ್ತದಿಂದ ಬಸವೇಶ್ವರ ವೃತ್ತ ಮಾರ್ಗವಾಗಿ ಜಾಥಾ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ ಕಚೇರಿ ತಲುಪಿ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ಭಾಗದಲ್ಲಿ ಕರ್ನಾಟಕ ಬಂದ್ ಬಹುತೇಕ ಯಶಸ್ವಿಯಾಗಿದೆ ಎನ್ನಬಹುದು. ಗಂಗಾವತಿಯ ಕೃಷ್ಣದೇವರಾಯ ವೃತ್ತದಲ್ಲಿ ಜಮಾವಣೆಗೊಂಡ ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸರಕಾರದ ಧೋರಣೆ ಖಂಡಿಸಿ, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ಗದಗನ ಶಾಸಕ ಎಚ್ ಕೆ ಪಾಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.
ಈ ಬಗ್ಗೆ ತಮ್ಮ ಟ್ವಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಸಕ ಎಚ್ ಕೆ ಪಾಟೀಲ್, ನನಗೆ ಪಾಸಿಟಿವ್ ದೃಢವಾಗಿದ್ದು, ಮನೆಯಲ್ಲೇ 10 ದಿನಗಳ ಕಾಲ ಚಿಕಿತ್ಸೆಯೊಂದಿಗೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕದಲ್ಲಿ ಇರುವವರು ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ಸೂಚನೆ ನೀಡಿದ್ದಾರೆ.
ಕೊರೋನಾ ಲಕ್ಷಣಗಳು ಇದ್ದರೂ ಯಾವುದೇ ತೊಂದರೆ ಇಲ್ಲ. ಬೇಗ ಗುಣಮುಖವಾಗುವ ಭರವಸೆ ಇದೆ ಅಂತ ಎಚ್ ಕೆ ಪಾಟೀಲ್ ಆಶಾ ಭಾವನೆ ವ್ಯಕ್ತಪಡಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಎಚ್ ಕೆ ಪಾಟೀಲ್ ನೇಮಕ ಗೊಂಡಿದ್ದರು. ಕಳೆದ ವಾರ ಅಲ್ಲಿನ ಕಾಂಗ್ರೆಸ್ ನಾಯಕರ ಜೊತೆ ಸಭೆಯಲ್ಲಿಯೂ ಭಾಗಿಯಾಗಿದ್ದರು.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಆಚರಿಸಲಾಗುತ್ತಿರುವ ಕರ್ನಾಟಕ ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಕ್ಯಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರ ಸ್ಥಬ್ದವಾಗಿದ್ದ ಪರಿಣಾಮ,ಪಟ್ಟಣದ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.
ಜನರಿಂದ ಗಿಜಿಗುಡುತ್ತಿದ್ದ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸ್ಥಬ್ದವಾಗಿತ್ತು, ಮಾರುವವರು ಕೊಳ್ಳುವವರು ಇಲ್ಲದೆ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಖಾಲಿಯಾಗಿತ್ತು.
ಇನ್ನುಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಪ್ರತಿಭಟನಾಕಾರರು ಮನವಿ ಮಾಡಿದರು. ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಮುದ್ರಣ ಕಾಶಿ ಗದಗನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಮುಳಗುಂದ ನಾಕಾದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಸದಸ್ಯರು, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.
ಇನ್ನು ಅರೆಬೆತ್ತಲೆ ಪ್ರತಿಭಟನೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಹಿತಕರ ಘಟನೆಗಳು ನಡೆಯದಂತೆ, ಮುಂಜಾಗ್ರತಾ ಕ್ರಮವಾಗಿ, ಮುಳಗುಂದ ನಾಕಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕರ್ನಾಟಕ ಬಂದ್ ಹಿನ್ನೆಲೆ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ.
ಪ್ರತಿಭಟನಾನಿರತ ಕರವೇ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಪೊಲೀಸರು ಅವಕಾಶ ನೀಡದ್ದಕ್ಕೆ, ಪೊಲೀಸರು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ನಗರದ ಮುಳಗುಂದ ನಾಕಾದಲ್ಲಿ ಈ ಘಟನೆ ನಡೆದಿದ್ದು, ಟೈರ್ ಗೆ ಬೆಂಕಿ ಹಚ್ಚಿದ್ರೆ ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದರು. ಪೊಲೀಸರ ಈ ನಡೆಗೆ ಕುಪಿತಗೊಂದ ಕರವೇ ಕಾರ್ಯಕರ್ತರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.
ನಿಮ್ಮ ಕೆಲಸ ನೀವು ಮಾಡಿ ನಮ್ಮ ಕೆಲಸ ನಾವು ಮಾಡ್ತೀವಿ ಎಂದ ಕಾರ್ಯಕರ್ತರು, ಸರ್ಕಾರದ ಕೈಗೊಂಬೆ ಆಗಿ ಕೆಲಸ ಬೇಡ ಅಂತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.