Home Blog Page 22

80 ಶಾಸಕರ ಬೆಂಬಲ ಪ್ರಶ್ನೆಯಲ್ಲ, ಸಮರ್ಥರಿಗೆ ಅವಕಾಶ ಸಿಗುತ್ತದೆ: ಸತೀಶ್ ಜಾರಕಿಹೊಳಿ

0

ದಾವಣಗೆರೆ: ಮುಖ್ಯಮಂತ್ರಿ ಸ್ಥಾನಕ್ಕೆ 80–90 ಶಾಸಕರ ಬೆಂಬಲವಿದೆ ಎನ್ನುವ ವಿಚಾರವೇ ಪ್ರಶ್ನೆಯಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ಸಮರ್ಥರಿಗೆ ಅವಕಾಶ ಸಿಗುವುದು ಸಹಜ, ಆದರೆ ಅಂತಹ ಸಂದರ್ಭ ಇನ್ನೂ ಬಂದಿಲ್ಲ. ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ ಎಂದು ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅಧಿಕಾರ ಹಂಚಿಕೆ ವಿಚಾರವಾಗಿ ನಿರ್ಮಾಣವಾಗಿರುವ ಗೊಂದಲ ಶೀಘ್ರದಲ್ಲೇ ಬಗೆಹರಿಯುವ ನಿರೀಕ್ಷೆ ಇತ್ತು. ಆದರೆ ಈ ವಿಚಾರದಲ್ಲಿ ಏಕೆ ವಿಳಂಬವಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ.

ಈ ಸಂಬಂಧ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಿದ್ದು, ಅಲ್ಲಿಯವರೆಗೆ ಕಾಯುವುದು ಅನಿವಾರ್ಯವಾಗಿದೆ. ಗೊಂದಲ ಬೇಗ ಬಗೆಹರಿಯಲಿದೆ ಎಂಬ ಆಶಾವಾದ ನಮ್ಮದು ಎಂದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ 80–90 ಶಾಸಕರ ಬೆಂಬಲವಿದ್ದು, ಅವರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ ಎಂಬ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶಾಸಕರ ಸಂಖ್ಯೆಯ ಆಧಾರದ ಮೇಲೆ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದರು.

ದಿ.ಕೆಂಗಲ್ ಹನುಮಂತಯ್ಯ ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿ ಗೆ ಸಲ್ಲುತ್ತದೆ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು.

ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ದಾಂತಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತವೆ ಎಂದರು.

ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆಯೇ 4.35 ಕೋಟಿ ಲಂಚ ಆರೋಪ

0

ಮೈಸೂರು: ಮುಡಾ ಹಗರಣ ಇದೀಗ ಭೂ ಹಂಚಿಕೆ ಆರೋಪದ ಮಟ್ಟವನ್ನು ಮೀರಿ, ತನಿಖಾ ಸಂಸ್ಥೆಯ ನೈಜತೆ ಮತ್ತು ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವ ಹಂತಕ್ಕೆ ತಲುಪಿದೆ. ಲೋಕಾಯುಕ್ತ ಅಧಿಕಾರಿಗಳಿಗೆ ಲಂಚ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಸ್ನೇಹಮಯಿ ಕೃಷ್ಣ ತಮ್ಮ ಬಳಿ ಸ್ಪಷ್ಟ ದಾಖಲೆಗಳಿವೆ ಎಂದು ಬಹಿರಂಗವಾಗಿ ಹೇಳಿದ್ದಾರೆ.

ಅವರ ಕೈಗೆ ಸಿಕ್ಕ ದಾಖಲೆಗಳಲ್ಲಿ “DCM” ಎಂಬ ಉಲ್ಲೇಖದ ಮುಂದೆ 12 ಕೋಟಿ 50 ಲಕ್ಷ ರೂಪಾಯಿ ಹಣ ನೀಡಿರುವ ಮಾಹಿತಿ ಇರುವುದಾಗಿ ತಿಳಿಸಿದ್ದಾರೆ. “DCM” ಎಂದರೆ ಕಂಪನಿಯ ಹೆಸರೋ? ಅಥವಾ ವ್ಯಕ್ತಿಯೋ? ಯಾರ ಸೂಚನೆಯಂತೆ ಈ ಹಣ ನೀಡಲಾಗಿದೆ? ಯಾರಿಗೆ ಹಣ ತಲುಪಿದೆ? ಎಂಬ ಹಲವು ಗಂಭೀರ ಪ್ರಶ್ನೆಗಳು ಉದ್ಭವವಾಗಿವೆ.

ಈ ಎಲ್ಲಾ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ನ್ಯಾಯಾಲಯ ಈ ಅರ್ಜಿಯನ್ನು ಸ್ವೀಕರಿಸಿದೆ. ಈ ಪ್ರಕರಣದ ವಿಚಾರಣೆ ಫೆಬ್ರವರಿ 20ರಂದು ನಡೆಯಲಿದೆ.

ಮುಡಾ ಹಗರಣ ಈಗ ಕೇವಲ ಭ್ರಷ್ಟಾಚಾರ ತನಿಖೆಯಲ್ಲ, ತನಿಖೆ ನಡೆಸಿದ ಸಂಸ್ಥೆಯ ಮೇಲೆಯೇ ಸಂಶಯದ ನೆರಳು ಬೀಳುವಂತಹ ಪರಿಸ್ಥಿತಿಗೆ ತಲುಪಿದೆ. ಫೆಬ್ರವರಿ 20ರ ನ್ಯಾಯಾಲಯದ ವಿಚಾರಣೆ ಈ ಆರೋಪಗಳಿಗೆ ಸ್ಪಷ್ಟ ಉತ್ತರ ನೀಡುತ್ತದೆಯೇ? ಅಥವಾ ಮತ್ತಷ್ಟು ಸ್ಫೋಟಕ ಸಂಗತಿಗಳು ಹೊರಬೀಳುತ್ತವೆಯೇ? ಎಂಬುದರ ಮೇಲೆ ಇಡೀ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

 

ಶಬರಿಮಲೆ ಚಿನ್ನ ಕಳವು ಪ್ರಕರಣ: ನಟ ಜಯರಾಮ್ʼಗೆ ಇ.ಡಿ ನೋಟಿಸ್

0

ಕೇರಳ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಗಾಗಿರುವ ಹಿರಿಯ ನಟ ಹಾಗೂ ‘ಕಾಂತಾರ’ ಸಿನಿಮಾದಲ್ಲಿ ನಟಿಸಿರುವ ಜಯರಾಮ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ಜಾರಿ ಮಾಡಿದೆ. ಮುಂದಿನ ಮಂಗಳವಾರ ಕೊಚ್ಚಿಯಲ್ಲಿರುವ ಇ.ಡಿ ವಲಯ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜತೆ ಜಯರಾಮ್ ಅವರ ಸಂಬಂಧದ ಕುರಿತು ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಇ.ಡಿ ಈ ನೋಟಿಸ್ ಜಾರಿ ಮಾಡಿದೆ. ಈಗಾಗಲೇ ಉನ್ನಿಕೃಷ್ಣನ್ ಪೊಟ್ಟಿಯನ್ನು ವಿಚಾರಣೆ ನಡೆಸುತ್ತಿರುವ ತನಿಖಾ ಸಂಸ್ಥೆ, ಈ ಹಿನ್ನೆಲೆಯಲ್ಲಿ ಜಯರಾಮ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮುಂದಾಗಿದೆ.

ಈ ಹಿಂದೆ ಎಸ್ಐಟಿ ನಡೆಸಿದ ವಿಚಾರಣೆಯಲ್ಲಿ, ಉನ್ನಿಕೃಷ್ಣನ್ ಪೊಟ್ಟಿ ಜತೆ ಯಾವುದೇ ಹಣಕಾಸಿನ ವ್ಯವಹಾರ ಹೊಂದಿಲ್ಲ ಎಂದು ಜಯರಾಮ್ ಸ್ಪಷ್ಟಪಡಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿ ಜಯರಾಮ್ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ವಿಚಾರಣೆಯ ವೇಳೆ, ಉನ್ನಿಕೃಷ್ಣನ್ ಪೊಟ್ಟಿ ಅವರೊಂದಿಗೆ ಶಬರಿಮಲೆ ದೇಗುಲದಲ್ಲಿ ಹಾಗೂ ಅವರ ಮನೆಯಲ್ಲಿ ನಡೆದ ಹಲವು ಪೂಜಾಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕುರಿತು ಪ್ರಶ್ನಿಸಲಾಗಿತ್ತು. ಜೊತೆಗೆ, ಕೊಟ್ಟಾಯಂ ಜಿಲ್ಲೆಯ ಎಳಂಪಲ್ಲಿ ದೇವಸ್ಥಾನದಲ್ಲಿ ಬಾಗಿಲಿನ ಚೌಕಟ್ಟು (ಕಟ್ಟಿಲಪ್ಪಲಿ) ಪ್ರತಿಷ್ಠಾಪನೆ ಹಾಗೂ ಬಾಗಿಲಿನ ಫಲಕಗಳ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗಿ ಜಯರಾಮ್ ತಿಳಿಸಿದ್ದರು.

ಆದರೆ, ಪೊಟ್ಟಿ ಜತೆ ಯಾವುದೇ ರೀತಿಯ ಹಣಕಾಸು ವ್ಯವಹಾರ ನಡೆಸಿಲ್ಲ ಎಂದು ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಎಸ್ಐಟಿ ತನಿಖಾ ತಂಡ ಜಯರಾಮ್ ಅವರನ್ನು ಪ್ರಕರಣದಲ್ಲಿ ಸಾಕ್ಷಿಯಾಗಿ ಪರಿಗಣಿಸಿತ್ತು.

ಸಿದ್ದರಾಮಯ್ಯರೊಂದಿಗೆ ನಡೆದ ಮಾತುಕತೆ ಬಗ್ಗೆ ನನಗೆ ಸ್ಪಷ್ಟತೆ ಇದೆ: ಡಿಸಿಎಂ ಡಿಕೆ ಶಿವಕುಮಾರ್

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಾವು ಏನು ಮಾತನಾಡಿದ್ದೇವೆ ಎಂಬುದು ನನಗೆ ಸ್ಪಷ್ಟವಾಗಿದೆ. ನಾವು ಯಾವ ಮಾತನ್ನೂ ಕದ್ದುಮುಚ್ಚಿ ಮಾತನಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು, ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು ನಮ್ಮ ವರಿಷ್ಠರೊಂದಿಗೆ ಚರ್ಚೆ ಮಾಡಿಕೊಂಡಿದ್ದೇವೆ. ಅನಾವಶ್ಯಕವಾಗಿ ಟೆನ್ಶನ್ ತೆಗೆದುಕೊಳ್ಳುವುದರಿಂದಾಗಲಿ, ಹೇಳಿಕೆ ನೀಡುವುದರಿಂದಾಗಲಿ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದರು.

ನನ್ನ ಪರ ಅಥವಾ ವಿರುದ್ಧವಾಗಿ ಶಾಸಕರು ಹಾಗೂ ಸಚಿವರು ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಮೌನ ಪಾಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ. ಅದನ್ನು ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಡಿಕೆಶಿ ಹೇಳಿದರು.

ಇನ್ನು ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆ ಎಐಸಿಸಿ ನಾಯಕರು ನನ್ನನ್ನು ಚರ್ಚೆಗೆ ಕರೆದಿದ್ದಾರೆ. ಕೇರಳ ಪ್ರವಾಸ ಮುಗಿಸಿಕೊಂಡು ಇದೀಗ ಅಸ್ಸಾಂಗೆ ತೆರಳಲಿದ್ದೇನೆ ಎಂದು ತಿಳಿಸಿದರು.

ಗಂಡು ಮಗು ಬೇಕು ಎಂದು ಜಾತ್ರೆಯಲ್ಲಿ ಬಾಲಕನ ಕಿಡ್ಯ್ನಾಪ್:‌ ಇಬ್ಬರ ಬಂಧನ

0

ತುಮಕೂರು: ಜಾತ್ರೆಯ ಸಂಭ್ರಮದ ನಡುವೆ ನಡೆದಿದ್ದ ಮಗು ಅಪಹರಣ ಪ್ರಕರಣದಲ್ಲಿ ಶಿರಾ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಶಿರಾ ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ ಜಾತ್ರಾ ಮಹೋತ್ಸವದ ವೇಳೆ ಅಪಹರಣಗೊಂಡಿದ್ದ ಎರಡುವರೆ ವರ್ಷದ ಗಂಡು ಮಗು, ಬೆಂಗಳೂರಿನ ಕೊರಮಂಗಲದಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್ ಸಿಕ್ಕಿದೆ.

ಪೊಲೀಸರ ತನಿಖೆಯ ಪ್ರಕಾರ, ಆರೋಪಿ ಶಾಂತಮೇರಿ ಎಂಬ ಮಹಿಳೆಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳು ಇದ್ದರೂ, ಗಂಡು ಮಗು ಬೇಕೆಂಬ ದುರಾಸೆಯಿಂದ ಸಂಬಂಧಿ ನರಸಯ್ಯನೊಂದಿಗೆ ಸೇರಿ ಈ ಅಪಹರಣಕ್ಕೆ ಸಂಚು ರೂಪಿಸಿದ್ದಾಳೆ. ಜಾತ್ರೆಗೆ ಎರಡು ದಿನಗಳ ಮುಂಚಿತವಾಗಿಯೇ ತುಮಕೂರಿಗೆ ಬಂದಿದ್ದ ಆರೋಪಿಗಳು, ಪೂರ್ವ ಯೋಜನೆಯೊಂದಿಗೆ ಜಾತ್ರೆಯಲ್ಲಿ ಮಗುವನ್ನು ಅಪಹರಿಸಿದ್ದಾರೆ ಎನ್ನಲಾಗಿದೆ.

ಜಾತ್ರಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಚಲನವಲನ ಪತ್ತೆ ಹಚ್ಚಿದ ಪೊಲೀಸರು, ಆಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆ ಶೋಧ ನಡೆಸಿದರು. ಕೊನೆಗೆ ಬೆಂಗಳೂರು ಕೊರಮಂಗಲದಲ್ಲಿರುವ ಶಾಂತಮೇರಿ ನಿವಾಸದಲ್ಲಿ ಮಗುವನ್ನು ಪತ್ತೆ ಮಾಡಿ ರಕ್ಷಿಸಿದ್ದಾರೆ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಈ ಘಟನೆ 21ನೇ ಶತಮಾನದಲ್ಲೂ ಸಮಾಜದಲ್ಲಿ ಜೀವಂತವಾಗಿರುವ ಲಿಂಗಭೇದ ಮನೋಭಾವದ ಮೇಲೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ರಾಜ್ಯಾದ್ಯಂತ ಒಣಹವೆ ಮುಂದುವರಿಕೆ: ಕರಾವಳಿ-ಉತ್ತರ ಒಳನಾಡಿನಲ್ಲಿ ತೀವ್ರ ಚಳಿ, ಬೆಂಗಳೂರಿನಲ್ಲಿ 17 ಡಿಗ್ರಿಗೆ ಇಳಿದ ತಾಪಮಾನ

0

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆವರಿಸಿಕೊಂಡಿದ್ದು, ಈ ವಾತಾವರಣ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ತೀವ್ರ ಚಳಿಯೊಂದಿಗೆ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿದಿದ್ದು, ಇಂದು ಕೂಡ ಇದೇ ಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಕಂಡುಬರಲಿದೆ. ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.

ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಳಿಯ ವಾತಾವರಣ ಹೆಚ್ಚಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಚಳಿಯಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ಬೆಚ್ಚಗಿನ ಹೊದಿಕೆ ಬಳಸುವುದು, ಬಿಸಿ ಆಹಾರ ಸೇವನೆ ಹಾಗೂ ಸಮತೋಲನ ಆಹಾರಕ್ಕೆ ಆದ್ಯತೆ ನೀಡುವಂತೆ ವೈದ್ಯರು ಹಾಗೂ ಹವಾಮಾನ ಇಲಾಖೆ ಸೂಚನೆ ನೀಡಿವೆ.

ವಿಧಾನಸೌಧದಲ್ಲೇ ಬಂಗಾರದ ಕಳ್ಳತನ: ಪ್ರಭಾವಿ ಸಚಿವರ ಕಚೇರಿಯಲ್ಲಿ ಲಕ್ಷಾಂತರ ರೂ. ನಗದು–ಚಿನ್ನ ಲೂಟಿ

0

ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರವಾದ ವಿಧಾನಸೌಧದ ಭದ್ರತಾ ವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಸದಾ ಬಿಗಿ ಪೊಲೀಸ್ ಬಂದೋಬಸ್ತ್ ಇರುವ ವಿಧಾನಸೌಧದಲ್ಲೇ, ಪ್ರಭಾವಿ ಸಚಿವರೊಬ್ಬರ ಕಚೇರಿಯಲ್ಲಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ನಗದು ಹಾಗೂ ನೂರಾರು ಗ್ರಾಂ ಚಿನ್ನಾಭರಣ ಕಳ್ಳರ ಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ವಿಧಾನಸೌಧದ ಕಚೇರಿಯಲ್ಲಿ ಈ ಕಳ್ಳತನ ನಡೆದಿದ್ದು, ಸಚಿವರನ್ನು ಭೇಟಿ ಮಾಡಲು ಬಂದಿದ್ದ ನವೀನ್ ಎಂಬುವರು ತಮ್ಮ ಬ್ಯಾಗ್ ಅನ್ನು ಕಚೇರಿಯಲ್ಲೇ ಮರೆತು ಹೋಗಿದ್ದರು. ಆ ಬ್ಯಾಗ್‌ನಲ್ಲಿ ಸುಮಾರು 300 ಗ್ರಾಂ ಚಿನ್ನಾಭರಣ ಹಾಗೂ 1.5 ಲಕ್ಷ ರೂಪಾಯಿ ನಗದು ಇತ್ತು ಎನ್ನಲಾಗಿದೆ.

ಮಾರನೇ ದಿನ ಬ್ಯಾಗ್ ನಾಪತ್ತೆಯಾಗಿರುವುದನ್ನು ಗಮನಿಸಿದ ನವೀನ್, ತಕ್ಷಣವೇ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಡಿಪಿಎಆರ್ ವಿಭಾಗದ ಡಿ–ಗ್ರೂಪ್ ನೌಕರನೊಬ್ಬ ಬ್ಯಾಗ್ ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ. ಇದರ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ಬೀದರ್ ಜಿಲ್ಲೆಯಲ್ಲಿ 12ನೇ ಶತಮಾನದ ಶಿಲಾಶಾಸನ–ಶಿಲ್ಪ ಪತ್ತೆ: ವೈಜ್ಞಾನಿಕ ಸಂಶೋಧನೆಗೆ ಆಗ್ರಹ

0

ಬೀದರ್: ಐತಿಹಾಸಿಕ ಲಕ್ಕುಂಡಿ ಹಾಗೂ ಬಳ್ಳಾರಿಯಲ್ಲಿ ನಿಧಿ ಮತ್ತು ಶಿಲಾಶಾಸನಗಳು ಪತ್ತೆಯಾಗಿ ರಾಜ್ಯದ ಗಮನ ಸೆಳೆದ ಬೆನ್ನಲ್ಲೇ, ಇದೀಗ ಬೀದರ್ ಜಿಲ್ಲೆಯಲ್ಲೂ ಅಪರೂಪದ ಐತಿಹಾಸಿಕ ಪತ್ತೆಗಳು ಬೆಳಕಿಗೆ ಬಂದಿವೆ. ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಪ್ರಾಚೀನ ಶಿಲಾಶಾಸನಗಳು, ಶಿವಲಿಂಗಗಳು ಹಾಗೂ ಸರ್ಪ ರೂಪದ ಶಿಲ್ಪಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಕುತೂಹಲ ಮೂಡಿಸಿದೆ.

ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾವೇಶದ ಅಡುಗೆ ತಯಾರಿಗಾಗಿ ಭವಾನಿ ದೇವಸ್ಥಾನದ ಹಿಂಭಾಗದ ಜಾಗವನ್ನು ಸ್ವಚ್ಛಗೊಳಿಸುವ ವೇಳೆ ಈ ಪುರಾತನ ಅವಶೇಷಗಳು ಪತ್ತೆಯಾಗಿವೆ. ಐದು ಹೆಡೆಯ ಅಪರೂಪದ ನಾಗಮೂರ್ತಿ, ನಾಗ ಸರ್ಪದ ವಿಗ್ರಹಗಳು ಹಾಗೂ ಶಿಲಾಶಾಸನಗಳು ಭೂಗರ್ಭದಿಂದ ಹೊರಬಂದಿವೆ.

ಗ್ರಾಮಸ್ಥರ ಪ್ರಕಾರ, 12ನೇ ಶತಮಾನದ ಚಾಲುಕ್ಯರ ಕಾಲದಲ್ಲಿ ಇಲ್ಲಿ ಸುಮಾರು 108 ದೇವಸ್ಥಾನಗಳು ಒಂದೇ ಪ್ರದೇಶದಲ್ಲಿ ಇದ್ದವು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ತಕ್ಷಣ ಪುರಾತತ್ವ ಇಲಾಖೆಯಿಂದ ವೈಜ್ಞಾನಿಕ ಸಂಶೋಧನೆ ನಡೆಸಬೇಕು ಎಂದು ಸರ್ಕಾರವನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ದಾಳಿ ಸಂಚು ಕೇಸ್‌ಗೆ ಶಾಕಿಂಗ್ ಟ್ವಿಸ್ಟ್: ಬಂಧಿತ ಆರೋಪಿ ಅಬ್ದುಲ್ ರೆಹಮಾನ್ ಜೈಲಿನಲ್ಲಿ ಹತ್ಯೆ

0

ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಫರಿದಾಬಾದ್ ಜೈಲಿನಲ್ಲೇ ಹತ್ಯೆಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ರೆಹಮಾನ್ ಎಂಬ 20 ವರ್ಷದ ಆರೋಪಿಯನ್ನು ಜೈಲಿನಲ್ಲಿದ್ದ ಸಹ ಕೈದಿ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.

ಭಾನುವಾರ ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ನಡುವೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ರಾತ್ರಿ 8 ಗಂಟೆ ಸುಮಾರಿಗೆ ಅರುಣ್ ಚೌಧರಿ ರೆಹಮಾನ್‌ನ ತಲೆಗೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಘಟನೆ ಸಂಬಂಧ ಜೈಲು ಆಡಳಿತ ಹಾಗೂ ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದ್ದು, ಜೈಲಿನ ಭದ್ರತಾ ವ್ಯವಸ್ಥೆಗಳ ಮೇಲೂ ಪರಿಶೀಲನೆ ನಡೆಸಲಾಗುತ್ತಿದೆ.

error: Content is protected !!