Home Blog Page 22

‘ಸಮಯವು ನಿನ್ನ ಬದುಕಿನ ಮಾಲಿಕ’ ಹಾಡಿಗೆ ಜನಮೆಚ್ಚುಗೆ

0

ವಿಜಯಸಾಕ್ಷಿ ಸುದ್ದಿ, ಗದಗ: ದಿಕ್ಷೀತಾ ಎಂಟರ್‌ಪ್ರೈಸಸ್ ಬೆಂಗಳೂರು ನಿರ್ಮಾಣದ ಬಹುನಿರೀಕ್ಷಿತ ಕನ್ನಡ ಚಿತ್ರ ‘ಕಾಲಘಟ್ಟ’ದ ಎರಡನೇ ಲಿರಿಕಲ್ ವೀಡಿಯೊ ಸಾಂಗ್ “ಸಮಯವು ನಿನ್ನ ಬದುಕಿನ ಮಾಲಿಕ, ಕಾಲಕ್ಕೆ ಗೌರವ ಕೊಡಬೇಕು ಜನಕ” ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.

ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರ ಹೊಂದಿರುವ ಈ ಚಿತ್ರದ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸುಮಾರು 1.80 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು ಸಿನಿಪ್ರಿಯರ ಗಮನ ಸೆಳೆದಿದೆ. ಸಮಯದ ಮಹತ್ವವನ್ನು ಅರ್ಥಪೂರ್ಣ ಸಾಹಿತ್ಯದ ಮೂಲಕ ಮನಮುಟ್ಟುವಂತೆ ಹೇಳುವ ಈ ಹಾಡು ಯುವಜನತೆ ಸೇರಿದಂತೆ ಎಲ್ಲ ವಯೋಮಾನದವರ ಮೆಚ್ಚುಗೆಗೆ ಪಾತ್ರವಾಗಿದೆ.

ಹಾಡಿಗೆ ಋಷಿ ಸಾಹಿತ್ಯ ರಚಿಸಿದ್ದು, ಗಾಯಕ ಮಹೇಶ್ ತಮ್ಮ ಸುಮಧುರ ಕಂಠದ ಮೂಲಕ ಜೀವ ತುಂಬಿದ್ದಾರೆ. ಸಂಗೀತ ನಿರ್ದೇಶಕ ಎ.ಎಂ. ನೀಲ್ ಅವರ ಸಂಗೀತ ಸಂಯೋಜನೆ ಹಾಡಿನ ಪ್ರಮುಖ ಆಕರ್ಷಣೆಯಾಗಿದೆ.

ಚಿತ್ರದಲ್ಲಿ ಅಭಿದಾಸ್ ಹಾಗೂ ನಿತಿಲ್ ನಾಯಕ ಪಾತ್ರಗಳಲ್ಲಿ ಅಭಿನಯಿಸಿದ್ದು, ಖುಷಿ ಮತ್ತು ಮೇಘಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ಕಲಾವಿದರಾದ ಶೋಭರಾಜ್, ಭವ್ಯ, ರಮೇಶ್ ಭಟ್, ಪ್ರಶಾಂತ್ ರವಿ ಹಾಗೂ ಮಂಡ್ಯ ಸೀತಾರಾಮ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ಹಲವಾರು ರಂಗಭೂಮಿ ಹಾಗೂ ಹಾಸ್ಯ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರದ ಛಾಯಾಗ್ರಹಣವನ್ನು ಸದಾಶಿವ ಹಿರೇಮಠ ಹಾಗೂ ರಾಜ್ ಕಡೂರ್, ಸಂಕಲನವನ್ನು ವೆಂಕಿ ಯುಡಿವಿ, ಸಾಹಸ ನಿರ್ದೇಶನವನ್ನು ಮಾಸ್ ಮಾದ ನಿರ್ವಹಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಹೊಣೆಯನ್ನು ಕೆ. ಪ್ರಕಾಶ್ ಅಂಬಳೆ ವಹಿಸಿಕೊಂಡಿದ್ದಾರೆ. ಲಯನ್ ಚಿಕ್ಕೇಗೌಡ ಹಾಗೂ ಟಿ.ಸಿ. ತಳಗವಾಡಿ ಚಿತ್ರ ನಿರ್ಮಾಪಕರಾಗಿದ್ದಾರೆ.

ಜೂನ್ 19ರಂದು ರಾಜ್ಯಾದ್ಯಂತ ‘ಕಾಲಘಟ್ಟ’ ಚಿತ್ರ ಬಿಡುಗಡೆಯಾಗಲಿದ್ದು, ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ನಿರ್ಮಾಪಕರು ಮನವಿ ಮಾಡಿದ್ದಾರೆ.

“ಕಾಲದ ಮಹತ್ವವನ್ನು ಪ್ರತಿಯೊಬ್ಬರಿಗೂ ನೆನಪಿಸುವ ಉದ್ದೇಶದಿಂದ ಈ ಹಾಡನ್ನು ರೂಪಿಸಿದ್ದೇವೆ. ಯುವಜನತೆಗೆ ಹಾಗೂ ಕುಟುಂಬದ ಎಲ್ಲರಿಗೂ ಇದು ಉತ್ತಮ ಸಂದೇಶ ನೀಡಲಿದೆ.”

– ಕೆ. ಪ್ರಕಾಶ್ ಅಂಬಳೆ, ನಿರ್ದೇಶಕರು

ಮಹಿಳೆಯರಿಗೆ ಕಾನೂನು ಅರಿವು ಅವಶ್ಯಕ: ದಾವಲಸಾಬ ತಾಳಿಕೋಟಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕಾನೂನಿನ ಜ್ಞಾನದಿಂದ ಅನ್ಯಾಯಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ ದೌರ್ಜನ್ಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ನ್ಯಾಯವಾದಿ ದಾವಲಸಾಬ ತಾಳಿಕೋಟಿ ಹೇಳಿದರು.

ಪಟ್ಟಣದ ಶಿವಾಜಿಪೇಟೆಯಲ್ಲಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಆಯೋಜಿಸಿದ್ದ ಮಹಿಳಾ ಕಾನೂನುಗಳ ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಗೌರವ, ಸುರಕ್ಷತೆ ಹಾಗೂ ಸಮಾನತೆಯನ್ನು ಕಾಪಾಡುವಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸುತ್ತಿದ್ದು, ಶಿಕ್ಷಣ, ಉದ್ಯೋಗ, ಆಸ್ತಿ, ಮದುವೆ ಹಾಗೂ ವಿಚ್ಛೇದನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಕಾನೂನು ಸ್ಪಷ್ಟವಾಗಿ ಗುರುತಿಸಿದೆ ಎಂದು ಹೇಳಿದರು.

ಗೃಹಹಿಂಸೆ ತಡೆ ಕಾಯ್ದೆ-2005, ಲೈಂಗಿಕ ಕಿರುಕುಳ ತಡೆ ಕಾಯ್ದೆ-2013, ಸಮಾನ ವೇತನ ಕಾಯ್ದೆ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳ ಕುರಿತು ಸವಿಸ್ತಾರ ಮಾಹಿತಿ ನೀಡಿದರು. ಅನ್ಯಾಯ ಸಂಭವಿಸಿದಾಗ ಪೊಲೀಸ್ ಠಾಣೆ, ನ್ಯಾಯಾಲಯ, ಮಹಿಳಾ ಆಯೋಗ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ ನ್ಯಾಯ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ರೇಣುಕಾ ಗೌಡರ, ಸೇವಾ ಪ್ರತಿನಿಧಿ ಕವಿತಾ ಕೋಟಗಿ, ಸಮನ್ವಯಾಧಿಕಾರಿ ಲಕ್ಷ್ಮೀ, ಸದಸ್ಯರಾದ ರೇಖಾ ಎಲಿಗಾರ, ಅನ್ನಪೂರ್ಣ ಕಂಬಳಿ, ಗಂಗಮ್ಮ, ಲಾಲಬಿ ತಾಳಿಕೋಟಿ, ವಿಜಯಲಕ್ಷ್ಮಿ, ಜಯಶ್ರೀ, ಪಾರಮ್ಮ ಬೊಯಿಟೆ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಣ್ಣು ಉಳಿದರೆ ಕೃಷಿ ಉಳಿಯುತ್ತದೆ: ಚೇತನಾ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ರೋಣ: ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದ್ದು, ರೈತರು ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಹೆಚ್ಚಿನ ಒಲವು ತೋರಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಹೇಳಿದರು.

ಸಮೀಪದ ಮಾರನಬಸರಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಕೃಷಿ ಇಲಾಖೆ ಗದಗ, ರೋಣ ಹಾಗೂ ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಖೇತ್ ಬಚಾವೋ ಅಭಿಯಾನ’ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗುತ್ತಿದ್ದು, ಇದು ಮಣ್ಣಿನ ಫಲವತ್ತತೆ ಮಾತ್ರವಲ್ಲದೆ ಮಾನವ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಉತ್ತಮ ಇಳುವರಿ ಪಡೆಯಲು ಮಣ್ಣಿನ ಗುಣಮಟ್ಟ ಕಾಪಾಡುವುದು ಅತ್ಯಗತ್ಯ ಎಂದು ಹೇಳಿದರು.

ರೈತರು ಬಿತ್ತನೆಗೂ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದರಿಂದ ಜಮೀನಿಗೆ ಸೂಕ್ತವಾದ ಬೆಳೆಗಳ ಆಯ್ಕೆ ಸಾಧ್ಯವಾಗುವುದರ ಜೊತೆಗೆ ಅನಗತ್ಯ ನಷ್ಟವನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಮುಂಗಾರು ಹಂಗಾಮಿನ ಬೆಳೆಗಳ ಬಿತ್ತನೆ ಈಗಾಗಲೇ ನಡೆದಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಎಚ್ಚರಿಕೆಯಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಹೆಸರು ಬೆಳೆಗಳಲ್ಲಿ ಸದ್ಯಕ್ಕೆ ಎಡೆ ಹೊಡೆಯುವುದರಿಂದ ಮಣ್ಣಿನ ತೇವಾಂಶ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ಅದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು.

ಬಿತ್ತನೆಗೂ ಮುನ್ನ ಬೀಜೋಪಚಾರ ಕಡ್ಡಾಯವಾಗಿ ಮಾಡಬೇಕು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಉತ್ತಮ ಮೊಳಕೆ ಮತ್ತು ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಯಪ್ರಕಾಶ ಪಾಟೀಲ, ರೈತರು ಆರಂಭದಲ್ಲಿ ಕನಿಷ್ಠ ಒಂದು ಎಕರೆ ಜಮೀನಿನಲ್ಲಿ ಸಾವಯವ ಗೊಬ್ಬರ ಬಳಸಿ ಅದರ ಪರಿಣಾಮವನ್ನು ಗಮನಿಸಬೇಕು. ಕೃಷಿ ಹೊಂಡಗಳ ನಿರ್ಮಾಣದ ಮೂಲಕ ಮಳೆನೀರನ್ನು ಸಂಗ್ರಹಿಸಿ, ನೀರಿನ ಸಮರ್ಪಕ ಬಳಕೆ ಹಾಗೂ ಬೆಳೆ ಆಯ್ಕೆಯಲ್ಲಿ ಕೃಷಿ ಇಲಾಖೆಯ ಸಲಹೆ ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂದಾನಗೌಡ ಪಾಟೀಲ ವಹಿಸಿದ್ದರು. ವಿವಿಧ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈತರು ಉಪಸ್ಥಿತರಿದ್ದರು.

“ಮಣ್ಣಿನ ಫಲವತ್ತತೆ ಉಳಿಸಿಕೊಳ್ಳುವುದು ರೈತರ ಮೊದಲ ಕರ್ತವ್ಯ. ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡಿ, ಸದ್ಯಕ್ಕೆ ಎಡೆ ಹೊಡೆಯುವುದನ್ನು ತಪ್ಪಿಸಿ. ಸಾವಯವ ಗೊಬ್ಬರ ಬಳಕೆಯಿಂದಲೇ ಭೂಮಿಯ ಆರೋಗ್ಯ ಕಾಪಾಡಲು ಸಾಧ್ಯ.”

– ಚೇತನಾ ಪಾಟೀಲ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ

ಜಿ.ಎಸ್. ಪಾಟೀಲ ಸಚಿವರಾಗ್ತಾರಾ?

0

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ದೊರೆಯಬಹುದೇ? ಎಂಬ ಪ್ರಶ್ನೆ ಇದೀಗ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರೋಣ ಕ್ಷೇತ್ರಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ ನಡೆದ ಹೋರಾಟಗಳು ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ಚರ್ಚೆಗೆ ಮತ್ತಷ್ಟು ಬಲ ತುಂಬಿವೆ.

ಬಲ್ಲ ಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಸಲ್ಲಿಸಿರುವ ಮನವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿಷಯವನ್ನು ಪಕ್ಷದ ಉನ್ನತ ಮಟ್ಟದ ನಾಯಕರ ಗಮನಕ್ಕೆ ತರುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ರೋಣ ಕ್ಷೇತ್ರಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿ ತಮ್ಮ ಬೇಡಿಕೆಯನ್ನು ಪಕ್ಷದ ನಾಯಕರ ಮುಂದಿಟ್ಟಿದ್ದರು. ಇದಕ್ಕೂ ಮುನ್ನ ಕ್ಷೇತ್ರದಲ್ಲಿ ಉರುಳು ಸೇವೆ, ದೀಡ ನಮಸ್ಕಾರ, ಪ್ರತಿಭಟನೆ, ದೇವಸ್ಥಾನ ಹಾಗೂ ಮಸೀದಿಗಳಲ್ಲಿ ವಿಶೇಷ ಪೂಜೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳು ನಡೆದಿದ್ದವು.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದು ಕಾರ್ಯಕರ್ತರ ಪ್ರಮುಖ ಆಗ್ರಹವಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ನಂತರದಿಂದಲೇ ಈ ಬೇಡಿಕೆ ನಿರಂತರವಾಗಿ ಕೇಳಿಬರುತ್ತಿದೆ.

ಬಲ್ಲ ಮೂಲಗಳ ಪ್ರಕಾರ, ಕೆಪಿಸಿಸಿ ಕಚೇರಿಯಲ್ಲಿ ನಡೆದ ಭೇಟಿಯ ವೇಳೆ ಕಾರ್ಯಕರ್ತರ ಮನವಿಯನ್ನು ಆಲಿಸಿದ ನಾಯಕರು, ಜಿ.ಎಸ್. ಪಾಟೀಲರ ಸಂಘಟನಾ ಅನುಭವ ಹಾಗೂ ಪಕ್ಷದ ಮೇಲಿನ ನಿಷ್ಠೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನ ಹಂಚಿಕೆ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಬೇಕಿರುವುದರಿಂದ ಅಧಿಕೃತ ಘೋಷಣೆ ಹೊರಬೀಳುವವರೆಗೂ ಕಾದು ನೋಡಬೇಕಾಗಿದೆ.

ಈ ಬೆಳವಣಿಗೆಯಿಂದ ಜಿ.ಎಸ್. ಪಾಟೀಲ ಬೆಂಬಲಿಗರಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ರೋಣ ಕ್ಷೇತ್ರಕ್ಕೆ ಪ್ರಾತಿನಿಧ್ಯ ದೊರೆಯುವ ನಿರೀಕ್ಷೆ ಹೆಚ್ಚಾಗಿದೆ. ರಾಜಕೀಯ ವಲಯದಲ್ಲೂ ಈ ಕುರಿತು ಚರ್ಚೆಗಳು ಜೋರಾಗಿವೆ.

ಹೈಕಮಾಂಡ್ ಅಂಗಳದಲ್ಲಿ ಚರ್ಚೆ?

“ರೋಣ ಕ್ಷೇತ್ರಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂಬುದು ಕಾರ್ಯಕರ್ತರ ಒಕ್ಕೊರಲಿನ ಆಗ್ರಹ. ಈ ಬೇಡಿಕೆಗೆ ಕಾಂಗ್ರೆಸ್ ವರಿಷ್ಠರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.”

ಪರಿಷತ್ ಚುನಾವಣೆ| ಅಡ್ಡಮತದಾನ ಮಾಡಿದವರ ವಿರದ್ಧ ಶಿಸ್ತು ಕ್ರಮ ಗ್ಯಾರಂಟಿ: ಆರ್. ಅಶೋಕ್!

ಬೆಂಗಳೂರು:- ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಮೂವರು ಶಾಸಕರು ಅಡ್ಡಮತದಾನ ಮಾಡಿರುವ ಮಾಹಿತಿ ಲಭ್ಯವಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳಾದ ಲಿಂಗರಾಜು ಪಾಟೀಲ್ ಹಾಗೂ ರಘು ಕೌಟಿಲ್ಯ ಗೆಲುವು ಸಾಧಿಸಿದ್ದಾರೆ. ಆದರೆ ಪಕ್ಷದ ಮೂರು ಮತಗಳು ಅಡ್ಡಮತದಾನವಾಗಿರುವುದು ಖಚಿತವಾಗಿದೆ ಎಂದು ಹೇಳಿದರು.

ಯಾವ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬುದು ಶೀಘ್ರದಲ್ಲೇ ತಿಳಿಯಲಿದ್ದು, ಪಕ್ಷದ ವೇದಿಕೆಯಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿಯ ಒಂದು ಮತ ಅಸಿಂಧುವಾಗಿದ್ದು, ಜನತಾದಳ ಅಭ್ಯರ್ಥಿಗೆ ನಾಲ್ಕು ಮತಗಳನ್ನು ನೀಡುವಂತೆ ಪಕ್ಷದಿಂದ ಸೂಚನೆ ನೀಡಲಾಗಿತ್ತು. ಆ ಮತಗಳು ಅವರಿಗೆ ಹೋಗಿವೆ ಎಂದು ಭಾವಿಸಲಾಗಿದೆ ಎಂದು ಅಶೋಕ್ ಹೇಳಿದರು.

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಗೆಲುವು ಸಾಧಿಸಿದ ಲಿಂಗರಾಜು ಪಾಟೀಲ್ ಮತ್ತು ರಘು ಕೌಟಿಲ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು. ಲಿಂಗರಾಜು ಪಾಟೀಲ್ ಅವರಿಗೆ 30 ಮತಗಳನ್ನು ನಿಗದಿಪಡಿಸಲಾಗಿದ್ದರೂ, ಮೂರು ಮತಗಳು ಅಡ್ಡಮತದಾನವಾಗಿವೆ. ರಘು ಕೌಟಿಲ್ಯ ಅವರಿಗೆ ನೀಡಿದ್ದ 30 ಮತಗಳಲ್ಲಿ ಒಂದು ಮತ ಅಸಿಂಧುವಾಗಿದೆ. ಅಡ್ಡಮತದಾನ ಮಾಡಿದವರು ಯಾರು ಹಾಗೂ ಅದರ ಹಿಂದಿನ ಕಾರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಳಿಕ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ವಿಜಯೇಂದ್ರ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯ ಬಳಿಕ ಬಿಜೆಪಿಯಲ್ಲಿ ಅಡ್ಡಮತದಾನ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ; 5 ಸ್ಥಾನಗಳ ಗೆಲುವು, ಜೆಡಿಎಸ್ ಗೆ ನಿರಾಸೆ!

ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದೆ.

ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದು, ಜೆಡಿಎಸ್‌ನ ಏಕೈಕ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಬಿ.ಎಸ್. ಶಿವಣ್ಣ ಹಾಗೂ ವಿನಯ್ ಕಾರ್ತಿಕ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಆರ್. ರಘು ಮತ್ತು ಲಿಂಗರಾಜು ಪಾಟೀಲ್ ಆಯ್ಕೆಯಾಗಿದ್ದಾರೆ.

ಮತ ಎಣಿಕೆ ಫಲಿತಾಂಶದ ಪ್ರಕಾರ, ಬಿ.ಕೆ. ಹರಿಪ್ರಸಾದ್ 30, ತಿಪ್ಪಣ್ಣಪ್ಪ ಕಮಕನೂರು 30, ಪಿ.ವಿ. ಮೋಹನ್ 29, ಬಿ.ಎಸ್. ಶಿವಣ್ಣ 30 ಹಾಗೂ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಆರ್. ರಘು 29 ಮತ್ತು ಲಿಂಗರಾಜು ಪಾಟೀಲ್ 27 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು 14 ಮತಗಳಿಗೆ ಸೀಮಿತರಾದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 11 ಹೆಚ್ಚುವರಿ ಮತಗಳು ದೊರೆತಿರುವುದು ಗಮನಾರ್ಹವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ನ ಕೆಲ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಕ್ರಾಸ್‌ ವೋಟಿಂಗ್ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ಗೆಲುವಿಗೆ ಅಗತ್ಯವಿದ್ದ ಮತಗಳ ಕೋಟಾವನ್ನು ಲಿಂಗರಾಜು ಪಾಟೀಲ್ ನೇರವಾಗಿ ತಲುಪದಿದ್ದರೂ, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಎಲಿಮಿನೇಟ್ ಆದ ಬಳಿಕ ಅವರ ಮತಗಳ ವರ್ಗಾವಣೆಯಿಂದ ಲಿಂಗರಾಜು ಪಾಟೀಲ್ ಗೆಲುವು ಸಾಧಿಸಿದರು.

ಒಟ್ಟು 222 ಮತಗಳು ಚಲಾವಣೆಯಾಗಿದ್ದು, ಅವುಗಳಲ್ಲಿ ಒಂದು ಮತ ಅಸಿಂಧುವಾಗಿದೆ. ಮತದಾನ ವೇಳೆ ಸಂಖ್ಯೆ ಸರಿಯಾಗಿ ನಮೂದಿಸದ ಕಾರಣ ಆ ಮತವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದೊಂದಿಗೆ ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು ಮತ್ತಷ್ಟು ಬಲಪಡಿಸಿಕೊಂಡಿದ್ದು, ಜೆಡಿಎಸ್‌ಗೆ ಹಿನ್ನಡೆಯಾಗಿದೆ.

ಗದಗದಲ್ಲಿ ಸ್ಪಾ-ಸಲೂನ್‌ಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಹಲವು ಕೇಂದ್ರಗಳ ಕಾರ್ಯಾಚರಣೆ ಸ್ಥಗಿತ!

0

ಗದಗ: ನಗರದಲ್ಲಿನ ವಿವಿಧ ಸ್ಪಾ ಹಾಗೂ ಸಲೂನ್‌ಗಳಲ್ಲಿ ಇಂದು ಪೊಲೀಸರು ದಿಢೀರ್ ತಪಾಸಣೆ ನಡೆಸಿ, ಅಗತ್ಯ ಪರವಾನಗಿ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿದರು.

ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಂಸ್ಥೆಗಳು ನಿಯಮಾನುಸಾರ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ತಪಾಸಣೆ ವೇಳೆ ಹಲವು ಸಂಸ್ಥೆಗಳಲ್ಲಿ ಅಗತ್ಯ ದಾಖಲೆಗಳು, ಪರವಾನಗಿಗಳು ಹಾಗೂ ಕಾನೂನುಬದ್ಧ ಅನುಮತಿಗಳ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿತ ಸಂಸ್ಥೆಗಳಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಎಲ್ಲಾ ಕಡ್ಡಾಯ ಅನುಮತಿಗಳು ಮತ್ತು ಅಗತ್ಯ ದಾಖಲೆಗಳನ್ನು ಒದಗಿಸುವವರೆಗೆ ಕೆಲವು ಸಂಸ್ಥೆಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸ್ಥೆಗಳ ಕುರಿತು ನಗರಸಭೆ, ಹೆಸ್ಕಾಂ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಪತ್ರ ಬರೆದು ವ್ಯಾಪಾರ ಪರವಾನಗಿ, ವಿದ್ಯುತ್ ಸಂಪರ್ಕ, ಅಗ್ನಿ ಸುರಕ್ಷತೆ ಹಾಗೂ ಆರೋಗ್ಯ ಮಾನದಂಡಗಳ ಕುರಿತು ಪರಿಶೀಲನೆ ನಡೆಸುವಂತೆ ಕೋರಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.

ಇದಲ್ಲದೆ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (ಕೆಪಿಎಂಇ) ಅಡಿಯಲ್ಲಿ ಅಗತ್ಯ ಪರವಾನಗಿ ಮತ್ತು ನೋಂದಣಿಗಳನ್ನು ಹೊಂದಿರುವ ಬಗ್ಗೆ ಕೂಡ ಪರಿಶೀಲನೆ ನಡೆಸಲಾಗುತ್ತಿದೆ. ಸಂಬಂಧಿತ ಇಲಾಖೆಗಳ ವರದಿ ಹಾಗೂ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ನಗರದಲ್ಲಿನ ಎಲ್ಲಾ ಸ್ಪಾ ಹಾಗೂ ಸಲೂನ್‌ಗಳು ಕಾನೂನುಬದ್ಧ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಮುರ್ತುಜಾ ಖಾದ್ರಿ, ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಎಲ್.ಕೆ.ಜೂಲಕಟ್ಟಿ, ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಸೇರಿದಂತೆ ವಿವಿಧ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಶಂಕೆ; 67 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!

ಮಂಡ್ಯ: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 67 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದಲ್ಲಿ ನಡೆದಿದೆ.

ರಾವಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನದ ಬಿಸಿಯೂಟ ಸೇವಿಸುವ ವೇಳೆ ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿ ಹಲ್ಲಿ ಬಾಲದಂತಿರುವ ವಸ್ತು ಕಂಡುಬಂದಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಆತಂಕ ಉಂಟಾಗಿದೆ.

ತಕ್ಷಣ ಎಚ್ಚೆತ್ತ ಶಾಲಾ ಸಿಬ್ಬಂದಿ, ಊಟ ಸೇವಿಸಿದ್ದ 67 ವಿದ್ಯಾರ್ಥಿಗಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ವೈದ್ಯರು ಎಲ್ಲಾ ಮಕ್ಕಳ ಆರೋಗ್ಯ ಪರೀಕ್ಷೆ ನಡೆಸಿದ್ದು, ಯಾವುದೇ ವಿದ್ಯಾರ್ಥಿಯಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಮಕ್ಕಳಿಗಿಂತ ಮೊದಲು ಊಟ ಸೇವಿಸಿದ್ದ ಅಡುಗೆ ಸಿಬ್ಬಂದಿಗೂ ಯಾವುದೇ ತೊಂದರೆ ಉಂಟಾಗಿಲ್ಲ ಎನ್ನಲಾಗಿದೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳನ್ನು ಆಸ್ಪತ್ರೆಯಲ್ಲೇ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಪ್ರತಿದಿನ ಬೆಳ್ಳುಳ್ಳಿ ಸೇವಿಸಿದರೆ ಕೊಲೆಸ್ಟ್ರಾಲ್ ನಿಯಂತ್ರಣ ಸಾಧ್ಯವೇ? ಸಂಪೂರ್ಣ ಮಾಹಿತಿ ತಿಳಿಯಿರಿ!

0

ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಜೀವನಶೈಲಿಯಿಂದಾಗಿ ಹೈ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾಗುತ್ತಿದೆ.

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದಾಗ ಅದು ರಕ್ತನಾಳಗಳಲ್ಲಿ ಪ್ಲೇಕ್ ರೂಪದಲ್ಲಿ ಸಂಗ್ರಹವಾಗಿ ರಕ್ತ ಪರಿಚಲನೆಗೆ ಅಡ್ಡಿಯಾಗುತ್ತದೆ. ಇದು ಮುಂದಿನ ದಿನಗಳಲ್ಲಿ ಹೃದಯಾಘಾತ ಸೇರಿದಂತೆ ಗಂಭೀರ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುವ ಸಾಧ್ಯತೆಯಿದೆ.

ಆಯುರ್ವೇದ ತಜ್ಞರ ಪ್ರಕಾರ, ಬೆಳ್ಳುಳ್ಳಿ ಕೇವಲ ಅಡುಗೆ ಪದಾರ್ಥವಲ್ಲದೆ ಹೃದಯದ ಆರೋಗ್ಯ ಕಾಪಾಡುವ ಔಷಧೀಯ ಗುಣಗಳನ್ನು ಹೊಂದಿದೆ. ಹಸಿ ಬೆಳ್ಳುಳ್ಳಿಯಲ್ಲಿ ಇರುವ ‘ಆಲಿಸಿನ್’ ಎಂಬ ಸಕ್ರಿಯ ಸಂಯುಕ್ತವು ಉತ್ಕರ್ಷಣ ನಿರೋಧಕ ಹಾಗೂ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ರಕ್ತನಾಳಗಳನ್ನು ಸಡಿಲಗೊಳಿಸಲು ಮತ್ತು ರಕ್ತ ಸಂಚಾರ ಸುಧಾರಿಸಲು ಸಹಕಾರಿಯಾಗಿದೆ.

ನಿಯಮಿತ ಪ್ರಮಾಣದಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ನೆರವಾಗುತ್ತದೆ. ಜೊತೆಗೆ ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿ ಎಂದು ತಜ್ಞರು ತಿಳಿಸಿದ್ದಾರೆ.

ಆದರೆ ಬೆಳ್ಳುಳ್ಳಿಯ ಮೇಲೆ ಮಾತ್ರ ಅವಲಂಬಿತರಾಗದೆ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಹಾಗೂ ಒತ್ತಡರಹಿತ ಜೀವನಶೈಲಿಯನ್ನು ಅನುಸರಿಸುವುದು ಅಗತ್ಯವಾಗಿದೆ. ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದವರು ಅಥವಾ ರಕ್ತ ತೆಳುಗೊಳಿಸುವ ಔಷಧಿಗಳನ್ನು ಸೇವಿಸುತ್ತಿರುವವರು ಬೆಳ್ಳುಳ್ಳಿಯನ್ನು ಔಷಧೀಯ ಉದ್ದೇಶಕ್ಕಾಗಿ ಬಳಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಳ್ಳುಳ್ಳಿಯನ್ನು ಹಸಿ ರೂಪದಲ್ಲಿ ಜೇನುತುಪ್ಪ ಅಥವಾ ಬೆಚ್ಚಗಿನ ನೀರಿನೊಂದಿಗೆ ಸೇವಿಸಬಹುದು. ಗ್ಯಾಸ್ಟ್ರಿಕ್ ಅಥವಾ ಶಾಖದ ಸಮಸ್ಯೆ ಇರುವವರು ಹಾಲಿನೊಂದಿಗೆ ಕುದಿಸಿ ‘ಬೆಳ್ಳುಳ್ಳಿ ಹಾಲು’ ರೂಪದಲ್ಲಿ ಸೇವಿಸಿದರೆ ಉತ್ತಮ ಎಂದು ಸಲಹೆ ನೀಡಲಾಗಿದೆ.

‘ರೈತರ ವಾಹನಗಳಿಗೆ ಟೋಲ್ ಬೇಡ’: ರಾಜ್ಯಾದ್ಯಂತ ಹೋರಾಟಕ್ಕೆ ರೈತ ಸಂಘಗಳ ಕರೆ

0

ಮಂಡ್ಯ: ರೈತರ ವಾಹನಗಳಿಂದ ಟೋಲ್ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಹಾಗೂ ರಾಜ್ಯದ ಟೋಲ್ ವ್ಯವಸ್ಥೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಜೂನ್ 23ರಂದು ರಾಜ್ಯಾದ್ಯಂತ ಟೋಲ್ ಬೂತ್‌ಗಳ ಮುಂದೆ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿವೆ.

ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕೃಷಿ ಉತ್ಪನ್ನ ಸಾಗಿಸುವ ವಾಹನಗಳ ಮೇಲೆ ಟೋಲ್ ವಿಧಿಸುವುದು ರೈತರ ಬದುಕಿನ ಮೇಲೆ ಹೆಚ್ಚುವರಿ ಹೊರೆ ಹಾಕಿದಂತಾಗಿದೆ ಎಂದು ಆರೋಪಿಸಿದರು. ರೈತರು ಈಗಾಗಲೇ ಇಂಧನ, ರಸಗೊಬ್ಬರ, ಕಾರ್ಮಿಕ ವೆಚ್ಚಗಳ ಒತ್ತಡ ಎದುರಿಸುತ್ತಿದ್ದು, ಟೋಲ್ ಸುಂಕ ಮತ್ತೊಂದು ಹೊರೆ ಆಗಿದೆ ಎಂದು ಹೇಳಿದರು.

ವಾಹನ ಮಾಲೀಕರು ರಸ್ತೆ ತೆರಿಗೆಯನ್ನು ಪಾವತಿಸಿದ ನಂತರ ಮತ್ತೆ ಟೋಲ್ ಹೆಸರಿನಲ್ಲಿ ಹಣ ಸಂಗ್ರಹಿಸುವುದು ನ್ಯಾಯಸಮ್ಮತವಲ್ಲ. ಆದ್ದರಿಂದ ರೈತರ ವಾಹನಗಳಿಗೆ ಸಂಪೂರ್ಣ ವಿನಾಯಿತಿ ಘೋಷಿಸಬೇಕು ಹಾಗೂ ರಾಜ್ಯದ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ಪಂಜಾಬ್‌ನಲ್ಲಿ ಜಾರಿಯಲ್ಲಿರುವ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸಬೇಕು. ಅಲ್ಲದೆ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಿರುವ ಕಬ್ಬಿನ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ರೈತ ಸಂಘಟನೆಗಳು ನೀಡಿವೆ.

error: Content is protected !!